ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ಶ್ರೀಗುರು ಕರುಣಿಸಿಕೊಟ್ಟ ಲಿಂಗ ಜಂಗಮವಲ್ಲದೆ, ಅನ್ಯದೈವಂಗಳ ತ್ರೈಕರಣದಲ್ಲಿ ಅರ್ಚಿಸದಿರ್ಪುದೆ ಲಿಂಗಾಚಾರವೆಂಬೆನಯ್ಯಾ. ಭಕ್ತನಾದಡೆ ಸತ್ಯಶುದ್ಧ ಕಾಯಕ [ವ ಮಾಡಿ], ಮಹೇಶನಾದಡೆ ಸತ್ಯಶುದ್ಧ ಭಿಕ್ಷವ ಬೇಡಿ ಸಮಸ್ತ ಪ್ರಾಣಿಗಳಲ್ಲಿ ಪಾತ್ರಾಪಾತ್ರವ ತಿಳಿದು ಹಸಿವು ತೃಷೆ ಶೀತಕ್ಕೆ ಪರಹಿತಾರ್ಥಿಯಾಗಿರ್ಪುದೆ ಸದಾಚಾರವೆಂಬೆನಯ್ಯಾ. ಗುರುಮಾರ್ಗಾಚಾರದಲ್ಲಿ ನಿಂದ ಶಿವಲಾಂಛನಧಾರಿಗಳೆಲ್ಲಾ ಪರಶಿವಲಿಂಗವೆಂದು ಭಾವಿಸಿ, ಅರ್ಥ ಪ್ರಾಣಾಭಿಮಾನವನರ್ಪಿಸುವುದೆ ಶಿವಾಚಾರವೆಂಬೆನಯ್ಯಾ. ಅಷ್ಟಾವರಂಣಗಳ ಮೇಲೆ ಅನ್ಯರಿಂದ ಕುಂದು ನಿಂದೆಗಳು ಬಂದು ತಟ್ಟಿದಲ್ಲಿ ಗಣಸಮೂಹವನೊಡಗೂಡಿ ಆ ಸ್ಥಲವ ತ್ಯಜಿಸುವುದೆ ಗಣಾಚಾರವೆಂಬೆನಯ್ಯಾ. ಜಾತ್ಯಾಶ್ರಮ ಕುಲಗೋತ್ರ ನಾಮರೂಪು ಕ್ರಿಯಾರಹಿತನಾಗಿ, ಗುರೂಪಾವಸ್ಥೆಯಿಂದ ಗುರುವ ಪ್ರತ್ಯಕ್ಷವ ಮಾಡಿ, ಆ ಗುರುವಿನಿಂದ ಚಿದ್ಘನ ಮಹಾಲಿಂಗವ ಪಡೆದು, ಆ ಲಿಂಗಸಹಿತವಾಗಿ ಭಕ್ತಿಜ್ಞಾನವೈರಾಗ್ಯ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಮಂತ್ರ ಮೊದಲಾದ ಷಟ್‍ಸ್ಥಲಮಾರ್ಗದಲ್ಲಿ ನಿಂದ ಭಕ್ತಗಣಂಗಳಲ್ಲಿ ಪಂಚಸೂತಕಂಗಳ ಕಲ್ಪಿಸದೆ ಅವರಿದ್ದ ಸ್ಥಳಕ್ಕೆ ಹೋಗಿ, ತನುಮನಧನಂಗಳ ಸಮರ್ಪಿಸಿ, ಅವರೊಕ್ಕುಮಿಕ್ಕುದ ಹಾರೈಸಿ ಹಸ್ತಾಂಜಲಿತರಾಗಿ ಪ್ರತ್ಯುತ್ತರವ ಕೊಡದಿರ್ಪುದೆ ಭೃತ್ಯಾಚಾರವೆಂಬೆನಯ್ಯಾ. ಮಲ ಮಾಯಾ ಪಾತಕ ಸೂತಕ ರಹಿತವಾದ ದೀಕ್ಷಾಗುರು, ಶಿಕ್ಷಾಗುರು, ಜ್ಞಾನಗುರುವಿನಿಂದ ವೇಧಾಮಂತ್ರ ಕ್ರಿಯಾದೀಕ್ಷೆಯ ಪಡೆದು ದ್ವಾದಶ ಮಲಪಾಶ ಕರ್ಮವ ತ್ಯಜಿಸಿ, ಮನ ಮಾರುತ ಮೊದಲಾದ ದ್ವಾದಶ ಇಂದ್ರಿಯಂಗಳ ಗುರುಪಾದಜಲದಿಂದ ಪ್ರಕ್ಷಾಲಿಸಿ ದಂತಪಙಫ್ತೆಕ್ರಿಯೆಗ? ಮಾಡಿ, ಕಟಿಸ್ನಾನ, ಕಂಠಸ್ನಾನ, ಮಂಡೆಸ್ನಾನ ಸರ್ವಾಂಗಸ್ನಾನವ ಮಾಡಿ ಕ್ರಿಯಾಭಸಿತದಿಂದ ಸ್ನಾನ ಧೂಲನ ಧಾರಣದ ಮರ್ಮವ ತಿಳಿದಾಚರಿಸಿ ಸಾಕಾರ ನಿರಾಕಾರ ಅಷ್ಟವಿಧಾರ್ಚನೆ ಷೋಡಷೋಪಚಾರದಿಂದ ಗುರು-ಲಿಂಗ-ಜಂಗಮವನರ್ಚಿಸಿ ನಿರ್ವಂಚಕತ್ವದಿಂದ ಘನಪಾದತೀರ್ಥಪ್ರಸಾದ ಮಂತ್ರದಲ್ಲಿ ನಿಂದ ನಿಜಾವಸ್ಥೆಯ ಕ್ರಿಯಾಚಾರವೆಂಬೆನಯ್ಯಾ ಅಂತರಂಗದಲ್ಲಿ ಕರಣವಿಷಯ ಕರ್ಕಶದಿಂದ ಅಹಂಕರಿಸಿ ಗುರುಹಿರಿಯರಲ್ಲಿ ಸಂಕಲ್ಪ ವಿಕಲ್ಪಗಳಿಂದ ಕುಂದು-ನಿಂದೆ ಹಾಸ್ಯ-ರೋಷಂಗಳೆಂಬ ಅಜ್ಞಾನವ ಬಳಸದೆ ಪರಮಪಾತಕರ ದರ್ಶನಸ್ಪರ್ಶನಸಂತರ್ಪಣೆ ಪಂಕ್ತಿಪಾಕವ ಕೊಳ್ಳದೆ ಸತ್ಯ ನಡೆನುಡಿಯುಳ್ಳ ಶಿವಶರಣಗಣಂಗಳಲ್ಲಿ ಷಡ್ವಿಧಭಕ್ತಿ ಮುಂದುಗೊಂಡು, ಎರಡೆಂಬತ್ತೆಂಟುಕೋಟಿ ವಚನಾನುಭವದಲ್ಲಿ ನಿಂದ ನಿಲುಕಡೆಯೆ ಜ್ಞಾನಾಚಾರವೆಂಬೆನಯ್ಯಾ. ತನುವಿಕಾರದಿಂದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳ ಬಳಕೆ ಮಾಡದೆ ಲೋಕದಂತೆ ನಡೆನುಡಿಗಳ ಬಳಸದೆ, ತನ್ನ ಗುಣಾವಗುಣಂಗಳ ಸ್ವಾತ್ಮಾನುಭವದಿಂದರಿದು, ದುರ್ಗುಈವ ತ್ಯಜಿಸಿ, ಸದ್ಗುಣವ ಹಿಡಿದು ಬಿಡದಿಪ್ಪುದೆ ಭಾವಾಚಾರವೆಂಬೆನಯ್ಯಾ. ಕೊಡುವಲ್ಲಿ ಕೊಂಬಲ್ಲಿ ಅತಿಯಾಸೆಯಿಂದ ಹುಸಿಯ ನುಡಿಯದೆ, ಕೊಟ್ಟ ಭಾಷೆಗ? ಪ್ರಾಣಾಂತ್ಯ ಬಂದಡೆಯೂ ನುಡಿಯಂತೆ ನಡೆವುದೆ ಸತ್ಯಾಚಾರವೆಂಬೆನಯ್ಯಾ. ಕಾಲ ಕಾಮರ ಬಾಧೆಗೊ?ಗಾಗದ ಹಠಯೋಗ ಫಲಪದಂಗ? ತಟ್ಟುಮುಟ್ಟು ಸೋಂಕುಗಳಿಲ್ಲದೆ ಲಿಂಗಾಣತಿಯಿಂದ ಬಂದೊದಗಿದ ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿರ್ಪುದೆ ನಿತ್ಯಾಚಾರವೆಂಬೆನಯ್ಯಾ. ಸರ್ವಾವಸ್ಥೆಯಲ್ಲಿ ದಶವಿಧಪಾದೋದಕ ಏಕಾದಶಪ್ರಸಾದ ಛತ್ತೀಸ ಪ್ರಣವ ಮೊದಲಾದ ಮಹಾಮಂತ್ರಂಗಳಲ್ಲಿ ಎರಕವನುಳ್ಳುದೆ ಧರ್ಮಾಚಾರವೆಂಬೆನಯ್ಯಾ. ಇಂತೀ ಏಕಾದಶವರ್ಮವ ಗುರುಕೃಪಾಮುಖದಿಂದರಿದು, ಆಚಾರವೆ ಅಂಗ ಮನ ಪ್ರಾಣ ಭಾವಂಗಳಾಗಿ, ಇಹಪರವ ವಿೂರಿ, ಪಿಂಡಾದಿ ಜ್ಞಾನಶೂನ್ಯಾಂತವಾದ ಏಕೋತ್ತರಮಾರ್ಗದಲ್ಲಿ ನಿಂದು, ಬಯಲೊಳಗೆ ಬಚ್ಚಬರಿಯ ನಿರ್ವಯಲ ಸಾಧಿಸುವುದೆ ಸರ್ವಾಚಾರ ಸಂಪತ್ತಿನಾಚಾರದ ನಿಲುಕಡೆ ನೋಡಾ ಇಂತು ಆಚಾರದ ಕುರುಹ ತಿಳಿದು ಪಂಚಾಚಾರವ ಬಹಿಷ್ಕರಿಸಿ ಸಪ್ತಾಚಾರವ ಗೋಪ್ಯವ ಮಾಡಿ, ದರಿದ್ರನಿಗೆ ನಿಧಿನಿಧಾನ ದೊರೆತಂತೆ, ರೋಗಿಗೆ ವೈದ್ಯದ ಲತೆ ದೊರೆತಂತೆ, ಮೂಕ ಫಲರಸವ ಸವಿದಂತೆ, ಕಳ್ಳಗೆ ಚೇಳೂರಿದಂತೆ, ತಮ್ಮ ಚಿದಂಗಸ್ವರೂಪರಾದ ಶರಣಗಣಂಗಳಲ್ಲಿ ಉಸುರಿ, ದುರ್ಜನಾತ್ಮರಲ್ಲಿ ಬಳಸದೆ ನಿಂದ ಪರಮಸುಖಿ ನಿಮ್ಮ ಶರಣನಲ್ಲದೆ ಉಳಿದ ಕಣ್ಗೆಟ್ಟಣ್ಣಗಳೆತ್ತ ಬಲ್ಲರಯ್ಯಾ ಕೂಡಲಚೆನ್ನಸಂಗಮದೇವಾ ?
--------------
ಚನ್ನಬಸವಣ್ಣ
ಆಚಾರಭಕ್ತ ಹನ್ನೆರಡು ಪ್ರಕಾರವನೊಳಕೊಂಡು ಆಚಾರಲಿಂಗವಾಗಿ ಲಿಂಗದ ಪೀಠದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಗೌರವಮಾಹೇಶ್ವರ ಹನ್ನೆರಡು ಪ್ರಕಾರವನೊಳಕೊಂಡು ಗುರುಲಿಂಗವಾಗಿ ಲಿಂಗದ ಮಧ್ಯದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಲೈಂಗಿಪ್ರಸಾದಿ ಹನ್ನೆರಡು ಪ್ರಕಾರವನೊಳಕೊಂಡು ಶಿವಲಿಂಗವಾಗಿ ಲಿಂಗದ ವರ್ತುಳದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಚರಪ್ರಾಣಲಿಂಗಿ ಹನ್ನೆರಡು ಪ್ರಕಾರವನೊಳಕೊಂಡು ಜಂಗಮಲಿಂಗವಾಗಿ ಲಿಂಗದ ಗೋಮುಖದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಪ್ರಸಾದಶರಣ ಹನ್ನೆರಡು ಪ್ರಕಾರವನೊಳಕೊಂಡು ಮಹಾಲಿಂಗವಾಗಿ ಲಿಂಗದ ಗೋಳಕದಲ್ಲಿ ಸಂಯೋಗವಾದನಯ್ಯ ಬಸವಣ್ಣ. ಇಂತಪ್ಪ ಬಸವಣ್ಣನೆ ಸಚ್ಚಿದಾನಂದ ಬ್ರಹ್ಮವು. ಆ ಸಚ್ಚಿದಾನಂದ ಬ್ರಹ್ಮವೆ ತನ್ನ ಲೀಲೆದೋರಿ ಒಂದು ಎರಡು ಮೂರು ಆರು ಒಂಬತ್ತು ಹದಿನೆಂಟು ಮೂವತ್ತಾರು ನೂರೊಂದು ನೂರೆಂಟು ಇನ್ನೂರಹದಿನಾರು ಮಿಗೆ ಮಿಗೆ ತೋರುವ ಬ್ರಹ್ಮವೆ ಬಸವಣ್ಣನು. ಈ ಬಸವಣ್ಣನೆ ಎನಗೆ ಇಷ್ಟಬ್ರಹ್ಮ. ಈ ಇಷ್ಟಬ್ರಹ್ಮದಲ್ಲಿ ಷೋಡಶ ದ್ವಿಶತ ಅಷ್ಟಾಶತ ಏಕಶತ ಛತ್ತೀಸ ಅಷ್ಟಾದಶ ನವ ಇಂತಿವೆಲ್ಲವು ಆರರೊಳಗಡಗಿ ಆರು ಮೂರರೊಳಗಡಗಿ ಆ ಮೂರು ಲಿಂಗದ ಗೋಳಕ ಗೋಮುಖ ವೃತ್ತಾಕಾರದಲ್ಲಿ ಅಡಗಿದ ಭೇದವನು ಸಿದ್ಧೇಶ್ವರನು ಎನಗರುಹಿದ ಕಾರಣ ದ್ವೆ ೈತಾದ್ವೆ ೈತವೆಲ್ಲವು ಸಂಹಾರವಾಗಿ ಹೋದವು. ನಾನು ದ್ವೆ ೈತಾದ್ವೆ ೈತವ ಮೀರಿ ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಸತ್ತು ಪರಂಜ್ಯೋತಿ ಮಹಾಲಿಂಗಗುರು ಸಿದ್ಧ[ಲಿಂಗ] ಪ್ರಭುವಿನಲ್ಲಿ ಕೆಟ್ಟು ಬಟ್ಟಬಯಲಾದೆನಯ್ಯಾ, ಬೋಳಬಸವೇಶ್ವರ ನಿಮ್ಮಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಪೃಥ್ವಿ ಅಪ್ಪು ತೇಜ ವಾಯು ಆಕಾಶದ ಕೊನೆಯ ಮೊನೆಯ ಮೇಲೆ, ಇಪ್ಪತ್ತೈದು ಗ್ರಾಮಂಗಳು, ಚೌಷಷ್ಟಿ ಪಟ್ಟಣ. ಛಪ್ಪನ್ನ ವೀಥಿಗಳ ದಾಂಟಿ, ಛತ್ತೀಸ ಪುರದ ರಚನೆಯ ನೋಡಬಲ್ಲೆವೆಂಬರು, ತ್ರಿಕೋಣದ್ವಾರಮಂಟಪದ ಅಯ್ವೆತ್ತೆರಡಕ್ಷರದ, ಶಾಸನದ ಲಿಪಿಯಂ ತಿಳಿಯಲೋದಿ, ಎಂಬತ್ತುನಾಲ್ಕುಲಕ್ಷ ದ್ವಾರದೊಳಗೆ ಹೊಕ್ಕು ಹೊರವಡುವ ಜೀವನ ತಿಳಿಯಲರಿಯದೆ ದಕ್ಷಿಣದ್ವಾರದಿಂದ ಉತ್ತರದ್ವಾರಕ್ಕೆ ಬಂದು, ಪಶ್ಚಿಮವಾಯುವ ಕೊನೆಯ ಮೊನೆಯ ಮೇಲೆ ಬೆಳಗುವ ಜ್ಯೋತಿಯ ನಿಮ್ಮ ಶರಣರಲ್ಲದೆ, ಲೋಕದ ಅಜ್ಞಾನಿಗಳೆತ್ತ ಬಲ್ಲರು ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಅಯ್ಯಾ, ಒಂದು ಅನಾದಿ ಮೂಲಪ್ರಣಮವೆ ಸಾಕಾರಲೀಲೆಯಧರಿಸಿ, ಚಿದಂಗ-ಚಿದ್ಘನಲಿಂಗವಾಗಿ, ಆ ಒಂದಂಗ-ಲಿಂಗವೆ ತ್ರಿವಿಧಾಂಗ ತ್ರಿವಿಧಲಿಂಗವಾಗಿ, ಆ ತ್ರಿವಿಧಲಿಂಗಾಂಗವೆ ಷಡ್ವಿಧಲಿಂಗಾಂಗವಾಗಿ, ಆ ಷಡ್ವಿಧಲಿಂಗಾಂಗವೆ ಛತ್ತೀಸಲಿಂಗಾಂಗವಾಗಿ, ಆ ಛತ್ತೀಸ ಲಿಂಗಂಗಳನೆ ಶ್ರದ್ಧಾದಿ ಛತ್ತೀಸಭಕ್ತಿಗಳಲ್ಲಿ ಕೂಟವ ಮಾಡಿ, ಇಂತು ಲಿಂಗಾಂಗ ಭಕ್ತಿಗಳನೆ ಸತ್ಕ್ರಿಯಾ, ಸಮ್ಯಜ್ಞಾನ, ಸತ್ಕಾಯಕ, ಸತ್ಪಾತ್ರಭಿಕ್ಷದಲ್ಲಿ ಸಮರಸವ ಮಾಡಿ, ಆ ಮಹಾಜ್ಞಾನವ ಸಾಧಿಸಿ, ಆ ಮಹಾಜ್ಞಾನದ ಬಲದಿಂದ ಪೃಥ್ವೀಸಂಬಂಧವಾದ ಕರ್ಮೇಂದ್ರಿಯಂಗಳು, ಅಪ್ಪುತತ್ವಸಂಬಂಧವಾದ ಜ್ಞಾನೇಂದ್ರಿಯಂಗಳು, ಅಗ್ನಿತತ್ವಸಂಬಂಧವಾದ ವಿಷಯಂಗಳು. ವಾಯುತತ್ವಸಂಬಂಧವಾದ ಪ್ರಾಣವಾಯುಗಳು, ಆಕಾಶತತ್ವಸಂಬಂಧವಾದ ಕರಣಂಗಳು, ಭಾನುತತ್ವÀಸಂಬಂಧವಾದ ಉದರವೆಂಬ ಭುತಂಗಳು, ಶಶಿತತ್ವಸಂಬಂಧವಾದ ಶ್ವೇತವರ್ಣ ಮೊದಲಾದ ವರ್ಣಂಗಳು, ಆತ್ಮತತ್ವಸಂಬಂಧವಾದ ಸಮಸ್ತನಾದಂಗಳು ಇಂತು ಸಮಸ್ತತತ್ವಂಗಳು ಕೂಡಲಾಗಿ ನಾಲ್ವತ್ತುತತ್ವವೆನಿಸುವವು. ಈ ತತ್ವಂಗಳ ಶಿವತತ್ವ, ಅನಾದಿಶಿವತತ್ವ, ಅನಾದಿನಿಷ್ಕಲಪರಶಿವತತ್ವ, ಅನಾದಿ ನಿಷ್ಕಲಪರಾತ್ಪರಶಿವತತ್ವವೆಂಬ, ಚತುರ್ವಿಧ ತತ್ವಸ್ವರೂಪ ಗುರು-ಲಿಂಗ-ಜಂಗಮ-ಪ್ರಸಾದವ ಕೂಡಿಸಿ, ಆ ಮಹಾಜ್ಞಾನದಿಂ ನೋಡಿದಲ್ಲಿ ನಾಲ್ವತ್ತುನಾಲ್ಕು ತತ್ವಸ್ವರೂಪಿನಿಂದ ಒಂದು ಚಿದಂಗವೆನಿಸುವುದಯ್ಯ. ಆ ಚಿದಂಗದ ಷಟ್ಚಕ್ರಂಗಳಲ್ಲಿ ಶ್ರೀಗುರುಲಿಂಗಜಂಗಮ ಕೃಪೆಯಿಂದ ಮೂರ್ತಿಗೊಂಡಿರುವ ಐವತ್ತಾರು ಪ್ರಣಮಂಗಳೆ ಸಾಕಾರಲೀಲೆಯಧರಿಸಿ, ನವಕೃತಿಸಂಬಂಧವಾದ ಅನಾದಿಮೂಲಪ್ರಣಮವ ಕೂಡಿ ಏಕಸ್ವರೂಪಿನಿಂದ ಐವತ್ತೇಳುಲಿಂಗಸ್ವರೂಪಪ್ರಣಮವನೊಳಕೊಂಡು ಒಂದು ಚಿದ್ಘನಲಿಂಗವೆನಿಸುವುದಯ್ಯ. ಇಂತು ಅಂಗಲಿಂಗವೆಂಬ ನೂರೊಂದು ಸ್ಥಲಕುಳಂಗಳ ವಿಚಾರಿಸಿ, ಶರಣರೂಪಿನಿಂದ ತನ್ನಾದಿ ಮಧ್ಯಾವಸಾನವ ತಿಳಿದು, ಕರ್ತುಭೃತ್ಯತ್ವದ ಸದ್ಭಕ್ತಿಯ ವಿಚಾರವನರಿದು, ದ್ವಾದಶಾಚಾರದ ವರ್ಮವನರಿದು, ಕರ್ತುಭೃತ್ಯತ್ವಾಚಾರ ಸದ್ಭಕ್ತಿಯೆಂಬ ನಿಜಸಮಾಧಿಯಲ್ಲಿ ನಿಂದು, ನಿರವಯಲ ಕೂಡುವಂಥಾದೆ ತತ್ತ್ವದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ನಿಜಚೈತನ್ಯಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯಾ ತತ್ವ ವಿತತ್ವ ಶೂನ್ಯ ಮಹಾಶೂನ್ಯವಿಲ್ಲದಂದು, ಬ್ರಹ್ಮ ವಿಷ್ಣು ರುದ್ರ ಇನ ಶಶಿ ವ್ಯೋಮ ಸಮೀರ ಅಗ್ನಿ ಅಂಬು ಪೃಥ್ವಿ ನವಗ್ರಹ ದಶದಿಕ್ಕು ಛತ್ತೀಸ ತತ್ವಂಗಳೇನೂ ಇಲ್ಲದಂದು, ತಾರಜ ತಂಡಜ ಬಿಂದುಜ ಭಿನ್ನಾಯುಕ್ತ ಅವ್ಯ[ಕ್ತ] ಅಮದಾಯುಕ್ತ ಮಣಿರಣ ಮಾನ್ಯರಣ್ವ ವಿಶ್ವರಣ ವಿಶ್ವಾವಸು ಅಲಂಕೃತ ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗ ಇಂತಿವು ಯಾವವೂ ಇಲ್ಲದಂದು, ನಾದ ಬಿಂದು ಕಳೆಗಳಿಲ್ಲದಂದು, ಪಶುಪಾಶ ಪತಿ ಕುಂಡಲಿ ಕಾರಕ ಇವೇನೂ ಇಲ್ಲದಂದು, ವಿಜ್ಞಾನಾಲಕರು ಸಕಲಾಕಲರು ಪ್ರಳಯಾಕಲರು ಇವೇನೂ ಇಲ್ಲದಂದು, ದನುಜ ಮನುಜ ದಿವಿಜ ಮನು ಮುನಿ ನಕ್ಷತ್ರಮಂಡಲ ಇವೇನೂ ಇಲ್ಲದಂದು, ಅಂದು ನೀನು ನಿಷ್ಕಲ ನಿರವಯ ನಿಃಶೂನ್ಯನಾಗಿರ್ದೆಯಯ್ಯ ಬಸವಣ್ಣ. ನೀವೊಂದು ಅನಂತಕಾಲ ಅನಂತಯುಗ ನಿಮ್ಮ ಲೀಲಾ ವಿಚಿಂತನೆ ನೆನೆದ ನೆನಹೇ ಸುನಾದ. ಆ ಸುನಾದದ ಪ್ರಕಾಶ ತೇಜೋಪುಂಜವೇ ಬಿಂದು. ನಾದವೇ ನಿರಂಜನ. ಬಿಂದುವೇ ನಿರಾಲಂಬ..... ಕೂಟವೇ ನಿರಾಮಯ. ಇಂತೀ ನಾದ ಬಿಂದು ಕಳೆ ಮೂರು ಕೂಡೆ ಅಖಂಡ ತೇಜೋಮಯವಾಗಿ ಷಡ್‍ಬ್ರಹ್ಮಸ್ವರೂಪವನೈದಿದೆಯಲ್ಲ ಬಸವಣ್ಣ. ನಿನ್ನ ವಿನೋದದಿಂದ ಆ ಷಡ್‍ಬ್ರಹ್ಮದಿಂದ ಷಡ್ವಿಧ ಭೂತಂಗಳು ಪುಟ್ಟಿ ಆ ಷಡ್ವಿಧಭೂತಂಗಳೇ ಎನಗಂಗವಾದಲ್ಲಿ ಆ ಷಡ್‍ಬ್ರಹ್ಮವೇ ಷಡಕ್ಷರಿಮಯವಾಗಿ ಆ ಷಡ್ವಿಧಭೂತಂಗಳೊಳಗೆ ಸಮೇತವಾಗಿ ಕೂಡಿ ಛತ್ತೀಸತತ್ವ ಮಂತ್ರಸ್ವರೂಪವಾದ ಭೇದ ಹೇಗೆಂದಡೆ ಅದಕ್ಕೆ ವಿವರ: ಓಂಕಾರವೇ ಆತ್ಮನು. ಓಂಕಾರ ಯಕಾರ ಸಂಯೋಗವಾದಲ್ಲಿ ಆಕಾಶ ಪುಟ್ಟಿತ್ತು. ಓಂಕಾರ ವಾಕಾರ ಸಂಯೋಗವಾದಲ್ಲಿ ವಾಯು ಪುಟ್ಟಿತ್ತು. ಓಂಕಾರ ಶಿಕಾರ ಸಂಯೋಗದಲ್ಲಿ ಅಗ್ನಿ ಪುಟ್ಟಿತ್ತು. ಓಂಕಾರ ಮಃಕಾರ ಸಂಯೋಗದಲ್ಲಿ ಅಪ್ಪು ಪುಟ್ಟಿತ್ತು. ಓಂಕಾರ ನಕಾರ ಸಂಯೋಗವಾದಲ್ಲಿ ಪೃಥ್ವಿ ಪುಟ್ಟಿತ್ತು. ಇನ್ನ ಯಕಾರ ಓಂಕಾರ ಸಂಯೋಗವಾದಲ್ಲಿ ಭಾವ ಪುಟ್ಟಿತ್ತು. ಯಕಾರವೇ ಜ್ಞಾನ. ಯಕಾರ ವಾಕಾರ ಸಂಯೋಗವಾದಲ್ಲಿ ಮನ ಪುಟ್ಟಿತ್ತು. ಯಕಾರ ಶಿಕಾರ ಸಂಯೋಗವಾದಲ್ಲಿ ಅಹಂಕಾರ ಪುಟ್ಟಿತ್ತು. ಯಕಾರ ಮಃಕಾರ ಸಂಯೋಗವಾದಲ್ಲಿ ಬುದ್ಧಿ ಪುಟ್ಟಿತ್ತು. ಯಕಾರ ನಕಾರ ಸಂಯೋಗವಾದಲ್ಲಿ ಚಿತ್ತು ಪುಟ್ಟಿತ್ತು. ಇನ್ನು ವಕಾರ ಓಂಕಾರ ಸಂಯೋಗವಾದಲ್ಲಿ ಪಂಚವಾಯು ಪುಟ್ಟಿದವು. ವಕಾರ ಯಕಾರ ಸಂಯೋಗವಾದಲ್ಲಿ ಸಮಾನವಾಯು ಪುಟ್ಟಿತ್ತು. ವಾಕಾರ ತಾನೇ ಉದಾನವಾಯು. ವಕಾರ ಶಿಕಾರ ಸಂಯೋಗವಾದಲ್ಲಿ ವ್ಯಾನವಾಯು ಪುಟ್ಟಿತ್ತು. ವಕಾರ ಮಃಕಾರ ಸಂಯೋಗವಾದಲ್ಲಿ ಅಪಾನವಾಯು ಪುಟ್ಟಿತ್ತು. ವಕಾರ ನಕಾರ ಸಂಯೋಗವಾದಲ್ಲಿ ಪ್ರಾಣವಾಯು ಪುಟ್ಟಿತ್ತು. ಇನ್ನು ಶಿಕಾರ ಓಂಕಾರ ಸಂಯೋಗವಾದಲ್ಲಿ ಹೃದಯ ಪುಟ್ಟಿತ್ತು. ಶಿಕಾರ ಯಕಾರ ಸಂಯೋಗವಾದಲ್ಲಿ ಶ್ರೋತ್ರ ಪುಟ್ಟಿತ್ತು. ಶಿಕಾರಾ ವಾಕಾರ ಸಂಯೋಗವಾದಲ್ಲಿ ತ್ವಕ್ಕು ಪುಟ್ಟಿತ್ತು. ಶಿಕಾರ ತಾನೇ ನೇತ್ರ ಶಿಕಾರ ಮಃಕಾರ ಸಂಯೋಗವಾದಲ್ಲಿ ಜಿಹ್ವೆ ಪುಟ್ಟಿತ್ತು. ಶಿಕಾರ ನಕಾರ ಸಂಯೋಗವಾದಲ್ಲಿ ಘ್ರಾಣ ಪುಟ್ಟಿತ್ತು. ಇನ್ನು ಮಃಕಾರ ಓಂಕಾರ ಸಂಯೋಗವಾದಲ್ಲಿ ತೃಪ್ತಿ ಪುಟ್ಟಿತ್ತು. ಮಕಾರ ಯಕಾರ ಸಂಯೋಗವಾದಲ್ಲಿ ಶಬ್ದ ಪುಟ್ಟಿತ್ತು. ಮಕಾರ ವಾಕಾರ ಸಂಯೋಗವಾದಲ್ಲಿ ಸ್ಪರ್ಶನ ಪುಟ್ಟಿತ್ತು. ಮಕಾರ ಶಿಕಾರ ಸಂಯೋಗವಾದಲ್ಲಿ ರೂಪು ಪುಟ್ಟಿತ್ತು. ಮಃಕಾರ ತಾನೇ ರಸ. ಮಕಾರ ನಕಾರ ಸಂಯೋಗವಾದಲ್ಲಿ ಗಂಧ ಪುಟ್ಟಿತ್ತು. ಇನ್ನು ನಕಾರ ಓಂಕಾರ ಸಂಯೋಗವಾದಲ್ಲಿ ಅಂತರ್ವಾಕ್ಕು ಪುಟ್ಟಿತ್ತು. ನಕಾರ ಯಕಾರ ಸಂಯೋಗವಾದಲ್ಲಿ ವಾಕ್ಕು ಪುಟ್ಟಿತ್ತು. ನಕಾರ ವಾಕಾರ ಸಂಯೋಗವಾದಲ್ಲಿ ಪಾಣಿ ಪುಟ್ಟಿತ್ತು. ನಕಾರ ಶಿಕಾರ ಸಂಯೋಗವಾದಲ್ಲಿ ಪಾದ ಪುಟ್ಟಿತ್ತು. ನಕಾರ ಮಃಕಾರ ಸಂಯೋಗವಾದಲ್ಲಿ ಗುಹ್ಯ ಪುಟ್ಟಿತ್ತು. ನಕಾರ ತಾನೇ ವಾಯು. ಇಂತೀ ಛತ್ತೀಸತತ್ವವೆಲ್ಲ ಮಂತ್ರಸ್ವರೂಪವಾದ ಬಸವಣ್ಣನೇ. ಎನಗೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ ಇಂತಿವೆಲ್ಲವನರಿದು ಅರ್ಪಿಸುವ ಭೇದ ಹೇಗೆಂದಡೆ ಪ್ರಮಥದಲ್ಲಿ ಷಟ್‍ಸ್ಥಲದ ವಿವರ: ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಭಕ್ತನ ಷಡ್ವಿಧಲಿಂಗದ ವಿವರ: ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಭಕ್ತನ ಷಡ್ವಿಧಹಸ್ತದ ವಿವರ: ಸುಚಿತ್ತ ಸುಬುದ್ಧಿ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಭಕ್ತನ ಷಡ್ವಿಧಮುಖದ ವಿವರ: ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಭಕ್ತನ ಷಡ್ವಿಧಶಕ್ತಿಯ ವಿವರ: ಶ್ರದ್ಧೆ ನೈಷೆ* ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಭಕ್ತನ ಷಡ್ವಿಧಪದಾರ್ಥದ ವಿವರ: ಗಂಧ ರಸ ರೂಪು ಸ್ಪರ್ಶನ ಶಬ್ದ ಪರಿಣಾಮ. ಇನ್ನು ಭಕ್ತನ ಷಡ್ವಿಧಪ್ರಸಾದದ ವಿವರ: ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರ್ಶಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ದ್ವಿತೀಯದಲ್ಲಿ ಮಾಹೇಶ್ವರನ ಷಟ್‍ಸ್ಥಲ ವಿವರ: ಮಾಹೇಶ್ವರ ಭಕ್ತ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಮಾಹೇಶ್ವರನ ಷಡ್ವಿಧಲಿಂಗದ ವಿವರ: ಗುರುಲಿಂಗ ಆಚಾರಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಮಾಹೇಶ್ವರನ ಷಡ್ವಿಧಹಸ್ತದ ವಿವರ: ಸುಬುದ್ಧಿ ಸುಚಿತ್ತ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಮಾಹೇಶ್ವರನ ಷಡ್ವಿಧಮುಖದ ವಿವರ: ಜಿಹ್ವೆ ಘ್ರಾಣ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಮಾಹೇಶ್ವರನ ಷಡ್ವಿಧಶಕ್ತಿಯ ವಿವರ: ಜ್ಞಾನಶಕ್ತಿ ಕ್ರಿಯಾಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಯಕ್ತಿ. ಇನ್ನು ಮಾಹೇಶ್ವರನ ಷಡ್ವಿಧಭಕ್ತಿಯ ವಿವರ: ನೈಷೆ* ಶ್ರದ್ಧೆ ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಮಾಹೇಶ್ವರನ ಷಡ್ವಿಧಪದಾರ್ಥದ ವಿವರ: ರಸ ಗಂಧ ರೂಪು ಸ್ಪರುಶನ ಶಬ್ದ ಪರಿಣಾಮ ಇನ್ನು ಮಾಹೇಶ್ವರನ ಷಡ್ವಿಧಪ್ರಸಾದದ ವಿವರ: ರಸಪ್ರಸಾದ ಗಂಧಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ತೃತೀಯದಲ್ಲಿ ಪ್ರಸಾದಿಯ ಷಟ್‍ಸ್ಥಲದ ವಿವರ: ಪ್ರಸಾದಿ ಭಕ್ತ ಮಾಹೇಶ್ವರ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಪ್ರಸಾದಿಯ ಷಡ್ವಿಧಲಿಂಗದ ವಿವರ: ಶಿವಲಿಂಗ ಆಚಾರಲಿಂಗ ಗುರುಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಸಾದಿಯ ಷಡ್ವಿದಹಸ್ತದ ವಿವರ: ನಿರಹಂಕಾರ ಸುಚಿತ್ತ ಸುಬುದ್ಧಿ ಸುಮನ ಸುಜ್ಞಾನ ಸದ್ಭಾವ. ಇನ್ನು ಪ್ರಸಾದಿಯ ಷಡ್ವಿಧಮುಖದ ವಿವರ: ನೇತ್ರ ಘ್ರಾಣ ಜಿಹ್ವೆ ತ್ವಕ್ಕು ಶ್ರೋತ್ರ ಹೃದಯ. ಇನ್ನು ಪ್ರಸಾದಿಯ ಷಡ್ವಿಧಶಕ್ತಿಯ ವಿವರ: ಇಚ್ಛಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಯಕ್ತಿ. ಇನ್ನು ಪ್ರಸಾದಿಯ ಷಡ್ವಿಧಭಕ್ತಿಯ ವಿವರ: ಸಾವಧಾನ ಶ್ರದ್ಧೆ ನೈಷೆ* ಅನುಭಾವ ಆನಂದ ಸಮರಸ. ಇನ್ನು ಪ್ರಸಾದಿಯ ಷಡ್ವಿಧಪದಾರ್ಥದ ವಿವರ: ರೂಪು ಗಂಧ ರಸ ಸ್ಪರುಶನ ಶಬ್ದ ಪರಿಣಾಮ. ಇನ್ನು ಪ್ರಸಾದಿಯ ಷಡ್ವಿಧಪ್ರಸಾದದ ವಿವರ: ರೂಪುಪ್ರಸಾದ ಗಂಧಪ್ರಸಾದ ರಸಪ್ರಸಾದ ಸ್ಪರುಶನ ಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇಂತೀ ಮಾರ್ಗಕ್ರಿ ಅಂಗ ಲಿಂಗವಾದಲ್ಲಿ ಮುಂದೆ ಮೀರಿದ ಕ್ರಿಯೆ ಅಂಗ ಲಿಂಗ ತೃತೀಯಸ್ಥಲ. ಇನ್ನು ಚತುರ್ಥದಲ್ಲಿ ಪ್ರಾಣಲಿಂಗಿಯ ಷಡ್ವಿಧ ವಿವರ: ಪ್ರಾಣಲಿಂಗಿ ಭಕ್ತ ಮಾಹೇಶ್ವರ ಪ್ರಸಾದಿ ಶರಣ ಐಕ್ಯ. ಇನ್ನು ಪ್ರಾಣಲಿಂಗಿಯ ಷಡ್ವಿಧಲಿಂಗದ ವಿವರ: ಜಂಗಮಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಾಣಲಿಂಗಿಯ ಷಡ್ವಿಧಹಸ್ತದ ವಿವರ: ಸುಮನ ಸುಚಿತ್ತ ಸುಬುದ್ಧಿ ನಿರಹಂಕಾರ ಸುಜ್ಞಾನ ಸದ್ಭಾವ. ಇನ್ನು ಪ್ರಾಣಲಿಂಗಿಯ ಷಡ್ವಿಧಶಕ್ತಿಯ ವಿವರ: ಆದಿಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಪರಶಕ್ತಿ ಚಿತ್ಯಕ್ತಿ. ಇನ್ನು ಪ್ರಾಣಲಿಂಗಿಯ ಷಡ್ವಿಧಭಕ್ತಿಯ ವಿವರ: ಅನುಭಾವ ಶ್ರದ್ಧೆ ನೈಷೆ* ಸಾವಧಾನ ಆನಂದ ಸಮರಸ. ಇನ್ನು ಪ್ರಾಣಲಿಂಗಿಯ ಷಡ್ವಿಧಪದಾರ್ಥದ ವಿವರ: ಸ್ಪರುಶನ ಗಂಧ ರಸ ರೂಪು ಶಬ್ದ ಪರಿಣಾಮ. ಇನ್ನು ಪ್ರಾಣಲಿಂಗಿಯ ಷಡ್ವಿಧಪ್ರಸಾದದ ವಿವರ: ಸ್ಫರುಶನಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ಪಂಚಮದಲ್ಲಿ ಶರಣನ ಷಟ್‍ಸ್ಥಲದ ವಿವರ: ಶರಣ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಐಕ್ಯ. ಇನ್ನು ಶರಣನ ಷಡ್ವಿಧಲಿಂಗದ ವಿವರ: ಪ್ರಸಾದಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಮಹಾಲಿಂಗ. ಶರಣನ ಷಡ್ವಿಧಹಸ್ತದ ವಿವರ: ಸುಜ್ಞಾನ ಸುಚಿತ್ತ ಸುಬುದ್ಧಿ ನಿರಂಕಾರ ಸುಮನ ಸದ್ಭಾವ ಇನ್ನು ಶರಣನ ಷಡ್ವಿಧಶಕ್ತಿಯ ವಿವರ: ಪರಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಚಿತ್ಯಕ್ತಿ. ಇನ್ನು ಶರಣನ ಷಡ್ವಿಧಭಕ್ತಿಯ ವಿವರ: ಆನಂದ ಶ್ರದ್ಧೆ ನೈಷೆ* ಸಾವಧಾನ ಅನುಭಾವ ಸಮರಸ. ಇನ್ನು ಶರಣನ ಷಡ್ವಿಧ ಪ್ರಸಾದದ ವಿವರ: ಶಬ್ದಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಪರಿಣಾಮಪ್ರಸಾದ. ಇನ್ನು ಷಷ*ಮದಲ್ಲಿ ಆ ಐಕ್ಯನ ಷಟ್‍ಸ್ಥಲದ ವಿವರ: ಐಕ್ಯ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ. ಇನ್ನು ಐಕ್ಯನ ಷಡ್ವಿಧಲಿಂಗದ ವಿವರ: ಮಹಾಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ. ಇನ್ನು ಐಕ್ಯನ ಷಡ್ವಿಧಹಸ್ತದ ವಿವರ: ಸದ್ಭಾವ ಸುಚಿತ್ತ ಸುಬುದ್ಧಿ ನಿರಹಂಕಾರ ಸುಮನ ಸುಜ್ಞಾನ. ಇನ್ನು ಐಕ್ಯನ ಷಡ್ವಿಧಮುಖದ ವಿವರ: ಹೃದಯ ಪ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ. ಇನ್ನು ಐಕ್ಯನ ಷಡ್ವಿಧಶಕ್ತಿಯ ವಿವರ: ಚಿತ್ಯಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಪರಾಶಕ್ತಿ. ಇನ್ನು ಐಕ್ಯನ ಷಡ್ವಿಧಭಕ್ತಿಯ ವಿವರ: ಸಮರಸ ಶ್ರದ್ಧೆ ನೈಷೆ* ಸಾವಧಾನ ಅನುಭಾವ ಆನಂದ. ಇನ್ನು ಐಕ್ಯನ ಷಡ್ವಿಧಪದಾರ್ಥದ ವಿವರ: ಪರಿಣಾಮ ಗಂಧ ರಸ ರೂಪು ಸ್ಪರುಶನ ಶಬ್ದ. ಇನ್ನು ಐಕ್ಯನ ಷಡ್ವಿಧಪ್ರಸಾದದ ವಿವರ: ಪರಿಣಾಮಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಶಬ್ದಪ್ರಸಾದ. ಇಂತಿವೆಲ್ಲವೂ ಅರ್ಪಿತವಾಗಲೊಡನೆ ಏಕಮೇವ ಪರಬ್ರಹ್ಮ ತಾನೆಯಾಗಿ ಉಳಿದ ಉಳುಮೆಯೇ ಬಸವಣ್ಣ. ಆ ಬಸವಣ್ಣನೇ ಎನಗೆ ಇಷ್ಟಬ್ರಹ್ಮವು. ಆ ಇಷ್ಟಬ್ರಹ್ಮದಲ್ಲಿ ಎನ್ನ ಅಂಗ ಮನ ಪ್ರಾಣ ಇಂದ್ರಿಯ ಕರಣಂಗಳೆಲ್ಲವು ನಿರವಯಲಾದ ಭೇದ ಹೇಗೆಂದಡೆ ವಾರಿ[ಬಲಿ]ದು ವಾರಿಕಲ್ಲಾಗಿ ವಾರಿಯಾದ ಹಾಗೆ ಉಪ್ಪಿನ ಪೊಟ್ಟಣವಪ್ಪುವಿನೊಳು ಬಯಚಿಟ್ಟ ಹಾಗೆ ಉರಿ ಕರ್ಪುರ ಸಂಯೋಗವಾದ ಹಾಗೆ ಎನ್ನ ಅಂಗ ಮನ ಅಂಗ ಏಕರಸವಾದ ಭೇದವನು ಸಿದ್ಧೇಶ್ವರನು ತೋರಿ[ದ ಕಾ]ರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಬಸವೇಶ್ವರನ ಶ್ರೀಪಾದದಲ್ಲಿ ಮನಮಗ್ನ ಯೋಗವೆನಗಾಯಿತಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
-->