ಅಥವಾ

ಒಟ್ಟು 82 ಕಡೆಗಳಲ್ಲಿ , 17 ವಚನಕಾರರು , 46 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದಪೂಜೆಯ ಮಾಡಿ, ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು, ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ ? ಹುಸಿದು ತಂದು ಮಾಡುವಾತ ಭಕ್ತನೆ ? ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ ? ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ | ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||' ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು. ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಗುರು ಮೂರು ಕೂಡಿ ಗುರುವಾದಲ್ಲಿ, ಬಿಂದು ಅಯಿದು ಕೂಡಿ ಲಿಂಗವಾದಲ್ಲಿ, ವಿಂಶತಿ ಆರು ಕೂಡಿ ವಿಸರ್ಜನವಾದಲ್ಲಿ, ಜಂಗಮವಾಯಿತ್ತು. ಆ ಜಂಗಮ, ಜಾಯತೇ ಭಾವವಳಿದು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾಯಿತ್ತು.
--------------
ಶಿವಲೆಂಕ ಮಂಚಣ್ಣ
ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ, ಸಂಸಾರದೊಳಗಿರ್ದ ಭಕ್ತನು, ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ '' ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ ''_ ಇಂತೆಂಬ ಶಿವನವಾಕ್ಯವನರಿಯದೆ, ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ, ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?
--------------
ಚನ್ನಬಸವಣ್ಣ
ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು, ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ, ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು, ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು, ಕೇಳೈ ಮೀಮಾಂಸಕಾ, ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ, ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು, ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ, ಆತನೆ ಮಾಹೇಶ್ವರ, ಆತನೆ ಪ್ರಸಾದಿ, ಆತನೆ ಪ್ರಾಣಲಿಂಗಿ, ಆತನೆ ಶರಣ, ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು, ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನು ನಿರಂಜನಾತೀತಪ್ರಣವ ಮೊದಲಾಗಿ ಬ್ರಹ್ಮ ಕಡೆಯಾಗಿ ಸೃಷ್ಟಿಮಾರ್ಗವ ಹೇಳುತ್ತಿದ್ದೆನು. ಅದೆಂತೆಂದೊಡೆ : ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯ ನೆನಹುಮಾತ್ರದಲ್ಲಿಯೇ ನಿರಂಜನಾತೀತಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಾತೀತಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಪ್ರಣವದ ನೆನಹುಮಾತ್ರದಲ್ಲಿಯೇ ಅವಾಚ್ಯಪ್ರಣವ ಉತ್ಪತ್ತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ಕಲಾಪ್ರಣವ ಉತ್ಪತ್ತ್ಯವಾಯಿತ್ತು. ಆ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಆದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಆದಿಪ್ರಣವದ ನೆನಹುಮಾತ್ರದಲ್ಲಿಯೇ ಆದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ನಿರಂಜನಾತೀತಚಿಂತಾಯಾಂ ಅನಾದ್ಯೋಂಕಾರ ಸಂಭವಃ | ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯೋಂಕಾರ ಚಿಂತಾಯಾಂ ಕಲಾ ನಾಮ ಸಮುದ್ಭವಃ | ಕಲಾಪ್ರಣವಚಿಂತಾಯಾಂ ಅನಾದಿಪ್ರಣವೋ ಭವೇತ್ || ಅನಾದಿಪ್ರಣವ ಚಿಂತಾಯಾಂ ಆದಿ ಮಾತ್ರಸ್ಯ ಸಂಭವಃ | ಆದಿ ಮಾತ್ರಸ್ಯ ಚಿಂತಾಯಾಂ ಆದಿ ಪ್ರಣವಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದ : ``ಓಂ ನಿರಂಜನಾತೀತಪ್ರಣವಾಖ್ಯಾ ನಿರಂಜನ ಪ್ರಣವ ಜಾಯತೇ | ನಿರಂಜನಪ್ರಣವ ತದಸ್ಯ ಅವಾಚ್ಯೋಂಕಾರ ಜಾಯತೇ | ಅವಾಚ್ಯೋಂಕಾರ ಚಿಂತಾಖ್ಯಾಂ ಕಲಾಪ್ರಣವಸ್ಯ ಜಾಯತೇ | ಕಲಾಪ್ರಣವಸ್ಯ ತದಸ್ಯ ಅನಾದ್ಯೋಂಕಾರ ಜಾಯತೇ | ಅನಾದ್ಯೋಂಕಾರಚಿಂತಾಯಾಂ ಅನಾದಿತ್ರ್ಯಕ್ಷರೋ ಜಾಯತೇ | ಅನಾದ್ಯರಕ್ಷರ ಚಿಂತಾಯಾಂ ಆದಿಪ್ರಣವ ಜಾಯತೇ | ಆದಿ ಪ್ರಣವಚಿಂತಾಯಾಂ ಅಕ್ಷರತ್ರಯಂ ಜಾಯತೇ ||'' ಇಂತೆಂದು ಶ್ರುತಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಂಗಮವ ಕಾಣುತ ಅಹಂಕಾರದೊಳಗಿಪ್ಪ ಅನಿತ್ಯದೇಹಿಯನೇನೆಂಬೆ ಶಿವನೇ ! ಲಿಂಗಸ್ಥಲಕ್ಕೆ ಸಲ್ಲರು, ಗುರು ಹೇಳಿತ್ತ ಮರೆದರು. ಭಸ್ಮಾಂಗಮಾಗತಂ ದೃಷ್ಟಾ ಆಸನಂ ಚ ಪರಿತ್ಯಜೇತ್ ಸ್ವಧರ್ಮಃ ಪಿತೃಧರ್ಮಶ್ಚ ಸರ್ವಧರ್ಮೋ ವಿನಶ್ಯತಿ ಕುಲೀನಮಕುಲಿನಂ ವಾ ಭೂತಿರುದ್ರಾಕ್ಷಧಾರಿಣಂ ದೃಷ್ಟ್ವೋನ್ನತಾಸನೇ ತಿಷ್ಠನ್ ಶ್ವಾನಯೋ ನಿಷು ಜಾಯತೇ ಇದು ಕಾರಣ ಕೂಡಲಚೆನ್ನಸಂಗಾ ಭಸ್ಮಾಂಗಿಯ ಕಂಡರೆ, ನಮೋ ನಮೋ ಎಂಬೆನು.
--------------
ಚನ್ನಬಸವಣ್ಣ
ಆದಿಮೂಲ ಅನಾದಿಮೂಲಂಗಳಿಗತ್ತತ್ತವಾಗಿಹ ಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡಮಹಾಮೂಲಸ್ವಾಮಿ ಅನಂತಕೋಟಿಬ್ರಹ್ಮಾಂಡಂಗಳ ಅನಂತಕೋಟಿಮಹಾಭುವನಂಗಳ ಅನಂತಕೋಟಿಲೋಕಾದಿಲೋಕಂಗಳ ಸೃಜಿಸಬೇಕೆಂಬ ನೆನಹುಮಾತ್ರದಲ್ಲಿ ಈ ನಿರಂಜನಾತೀತ ಪ್ರಣವದುತ್ಪತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನ ಕಲಾಪ್ರಣವವು ಉತ್ಪತ್ಯವಾಯಿತ್ತು. ಆ ನಿರಂಜನಾತೀತ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವದುತ್ಪತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಅದಿಪ್ರಣವ ಉತ್ಪತ್ಯವಾಯಿತ್ತು. ಆ ಆದಿಪ್ರಣವದ ನೆನಹು ಮಾತ್ರದಲ್ಲಿಯೇ. ಆದಿ ಅಕಾರ ಉಕಾರ ಮಕಾರ ಉತ್ಪತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ಅಖಂಡಮೂಲ ಚಿಂತಾಯಾಂ ನಿರಂಜನಾತೀತೋದ್ಭವಃ | ನಿರಂಜನಾತೀತ ಚಿಂತಾಯಾಂ ನಿರಂಜನೋಂಕಾರಸಂಭವಃ || ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯಸ್ಯ ಚ ಚಿಂತಾಯಾಂ ಕಲಾನಾಮ ಸಮುದ್ಗತಃ || ಕಲಾಪ್ರಣವಚಿಂತಾಯಾಂ ಅನಾದಿಪ್ರಣವ್ದೋಭವತ್ | ಅನಾದಿಪ್ರಣವ ಚಿಂತಾಯಾಂ ಅನಾದಿಮಂತ್ರ ಸಂಭವಃ || ಅನಾದಿಮಂತ್ರಚಿಂತಾಯಾಂ ಆದಿಪ್ರಣವ ಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ. ಇದಕ್ಕೆ ಮಹಾವೇದದ ಪ್ರಣವ ಪುರುಷಸೂಕ್ತೆ ೀ : ``ಓಂ ಅಖಂಡಮೂಲಚಿಂತಾಯಾಂ ನಿರಂಜನಾತೀತಮಜಾಯತ | ಕಲಾಪ್ರಣವ ತದಸ್ಯಾ ಅನಾದಿ ಓಂಕಾರ್ದೋಜಾಯತ || ಅನಾದ್ಯೋಂಕಾರಚಿಂತಾಯಾಮನಾದಿ ತ್ರಿಯಕ್ಷರಮಜಾಯತ | ಅನಾದಿ ತ್ರಿಯಕ್ಷರ ಚಿಂತಾಯಾಂ ಆದಿಪ್ರಣವ್ದೋಜಾಯತ | ನಿರಂಜನಾತೀತ ಪ್ರಣವಾಭ್ಯಾಂ ನಿರಂಜನಪ್ರಣವ್ದೋಜಾಯತ | ನಿರಂಜನಪ್ರಣವಾದಸ್ಯ ಅವಾಚ್ಯೋಂಕಾರ್ದೋಜಾಯತ | ಅವಾಚ್ಯೋಂಕಾರಚಿಂತಾಭ್ಯಾಂ ಕಲಾಪ್ರಣವ್ದೋಜಾಯತ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮಜಾಯತ ||'' ಇಂತೆಂದುದು ಶ್ರುತಿ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಮಹಾಸದಾಶಿವತತ್ವದಲ್ಲಿ ಸದಾಶಿವನುತ್ಪತ್ಯವಾಗಿ ಆಕಾಶಕ್ಕೆ ಅದ್ಥಿದೇವತೆಯಾಗಿಹನು. ಆಕಾಶತತ್ವದಲ್ಲಿ ಏಕಶಿರ ದ್ವಿಭುಜ ತ್ರಿನೇತ್ರವನುಳ್ಳ ಈಶ್ವರತತ್ವ ಉತ್ಪತ್ಯವಾಗಿ ವಾಯುವಿಂಗೆ ಅದ್ಥಿದೇವತೆಯಾಗಿಹನು. ಆ ಈಶ್ವರತತ್ವದಲ್ಲಿ ಪಂಚಮುಖರುದ್ರನುತ್ಪತ್ಯವಾಗಿ ಅಗ್ನಿಗೆ ಅದ್ಥಿದೇವತೆಯಾಗಿಹನು. ಆ ಪಂಚಮುಖರುದ್ರನಲ್ಲಿ ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್‍ಪುರುಷನುತ್ಪತ್ಯವಾದನು. ಆ ವಿರಾಟ್ಪುರುಷನಲ್ಲಿ ಏಕಶಿರ ದ್ವಿಭುಜವನುಳ್ಳ ವಿಷ್ಣು ಉತ್ಪತ್ಯವಾಗಿ ಅಪ್ಪುವಿಗೆ ಅದ್ಥಿದೇವತೆಯಾಗಿಹನು. ಆ ವಿಷ್ಣುವಿನಲ್ಲಿ ಚತುರ್ಮುಖಬ್ರಹ್ಮ ಉತ್ಪತ್ಯವಾಗಿ ಪೃಥ್ವಿಗೆ ಅದ್ಥಿದೇವತೆಯಾಗಿಹನು. ಆ ಬ್ರಹ್ಮನಲ್ಲಿ ಸರ್ವಜೀವಂಗಳುತ್ಪತ್ಯ ನೋಡಾ. ಇದಕ್ಕೆ ಕಾಲಾಗ್ನಿರುದ್ರಸಂಹಿತಾಯಾಂ : ಶ್ರೀ ಮಹಾದೇವ ಉವಾಚ- ``ಪಂಚವಕ್ತ್ರಸದಾಖ್ಯಾನಾಂ ಈಶ್ವರಶ್ಚ ಸಜಾಯತೇ | ತಥಾ ಈಶ್ವರತತ್ವೇ ಚ ಕಾಲರುದ್ರ ಸಮುದ್ಭವಃ | ಪಂಚವಕ್ತ್ರಃ ಮಹಾರುದ್ರ ವಿರಾಟ್ಪುರುಷ ಜಾಯತೇ | ವಿರಾಟ್ಪುರುಷ ಮಹಾತತ್ವೇ ಆದಿ ವಿಷ್ಣುಸಮುದ್ಭವಃ | ವಿಷ್ಣುತತ್ವಾತ್‍ಮಹಾದೇವಿ ವಿರಿಂಚಿತತ್ವಃ ಜಾಯತೇ | ಚತುರ್ಮುಖಬ್ರಹ್ಮತತ್ವೇ ಸರ್ವಜೀವಸ್ತವೋಸ್ತಥಾ | ಇತಿ ತತ್ವೋದ್ಭವಂ ಜ್ಞಾನಂ ದುರ್ಲಭಂ ಚ ವರಾನನೇ ||'' ಇಂತೆಂದುದಾಗಿ, ಇದಕ್ಕೆ ಆನಂದಭೈರವಿ : ``ಪೃಥ್ವೀ ಬ್ರಹ್ಮಾ ಜಲಂ ವಿಷ್ಣು ಸ್ತಥಾ ರುದ್ರೋ ಹುತಾಶನಃ | ಈಶ್ವರೋ ಪವನೋ ದೇವಾಃ ಆಕಾಶಶ್ಚ ಸದಾಶಿವಃ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ | ಭೂಮ್ಯಾದಿ ದೈವಮಿತ್ಯುಕ್ತಂ ಇತಿ ಭೇದಂ ವರಾನನೇ ||'' ಇತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಖಂಡಜ್ಯೋತಿರ್ಮಯವಾಗಿ ಪರಮೋಂಕಾರಪ್ರಣವದ ಜ್ಯೋತಿಸ್ವರೂಪದಲ್ಲಿ ಭಾವಹಸ್ತ ಹುಟ್ಟಿತ್ತು. ಆ ಪ್ರಣವದ ದರ್ಪಣಾಕಾರದಲ್ಲಿ ಜ್ಞಾನಹಸ್ತ ಹುಟ್ಟಿತ್ತು. ಆ ಪ್ರಣವದ ಅರ್ಧಚಂದ್ರಕದಲ್ಲಿ ಸುಮನಹಸ್ತ ಹುಟ್ಟಿತ್ತು. ಆ ಪ್ರಣವದ ಕುಂಡಲಾಕಾರದಲ್ಲಿ ನಿರಹಂಕಾರಹಸ್ತ ಹುಟ್ಟಿತ್ತು. ಆ ಪ್ರಣವದ ದಂಡಕಸ್ವರೂಪದಲ್ಲಿ ಸುಬುದ್ಧಿಹಸ್ತ ಹುಟ್ಟಿತ್ತು. ಆ ಪ್ರಣವದ ತಾರಕಸ್ವರೂಪದಲ್ಲಿ ಸುಚಿತ್ತಹಸ್ತ ಹುಟ್ಟಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ಓಂಕಾರಜ್ಯೋತಿರೂಪೇ ಚ ಭಾವಹಸ್ತಶ್ಚ ಜಾಯತೇ | ಓಂಕಾರದರ್ಪಣಾಕಾರೇ ಜ್ಞಾನಹಸ್ತಶ್ಚ ಜಾಯತೇ | ಓಂಕಾರ ಅರ್ಧಚಂದ್ರಂ ಚ ಮನೋಹಸ್ತಶ್ಚ ಜಾಯತೇ | ಓಂಕಾರ ಕುಂಡಲಾಕಾರೇ ನಿರಹಂಕಾರಶ್ಚ ಜಾಯತೇ || ಓಂಕಾರದಂಡರೂಪೋ ಚ ಬುದ್ಧಿಹಸ್ತಶ್ಚ ಜಾಯತೇ | ಓಂಕಾರ ತಾರಕರೂಪೋ ಚಿತ್ತಹಸ್ತಶ್ಚ ಜಾಯತೇ | ಇತಿ ಷಷ* ಹಸ್ತ ದೇವಿ ಸ್ಥಾನಸ್ಥಾನೇಷು ಜಾಯತೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆಸ್ತಿ ಜಾಯತೇ ವಿಪರಿಣಮತೇ ವಿವರ್ಧತೇ ಅಪಕ್ಷೀಯತೇ ವಿನಶೃತಿ ಎಂಬ ಷಡ್ಭಾವವಿಕಾರಂಗಳು ಕೆಡುವುದಕ್ಕೆ ವಿವರವೆಂತೆಂದಡೆ; ಶ್ರೀಗುರುವಿನ ಕೃಪಾಗರ್ಭದ ಮಧ್ಯದಲ್ಲಿರ್ದವ ನಾನಹುದೆಂದರಿದಾಗವೆ ಅಸ್ತಿ ಎಂಬ ವಿಕಾರ ಕೆಟ್ಟಿತ್ತು. ಗುರುಕರದಲ್ಲಿ ಜನಿಸಿದೆನಾಗಿ ನಾ ಮಾಯಾಯೋನಿಜನವಲ್ಲವೆಂದು ಅರಿದಾಗವೆ ಜಾಯತೇ ಎಂಬ ವಿಕಾರ ಕೆಟ್ಟಿತ್ತು. ಗುರುವಿನ ಸದ್ಭಾವಜಾತಲಿಂಗವನಂಗದಲ್ಲಿ ಧರಿಸಿ ಪರಮಪರಿಣಾಮದಲ್ಲಿ ಪರಿಣಮಿಸುತ್ತಿರ್ದ ಕಾರಣ ವಿಪರಿಣಮತೇ ಎಂಬ ವಿಕಾರ ಕೆಟ್ಟಿತ್ತು. ಗುರುವಿನ ಆಚಾರ ಜ್ಞಾನಮಾರ್ಗದಲ್ಲಿ ಆಚರಿಸಿ ಬೆಳೆವುತ್ತಿದ್ದ ಕಾರಣ ವಿವರ್ಧತೇ ಎಂಬ ವಿಕಾರ ಕೆಟ್ಟಿತ್ತು. ದೇಹೇಂದ್ರಿಯಾದಿಗಳೆಲ್ಲ ಲಿಂಗದಲ್ಲಿ ಅಡಗಿ ಶಿಥಿಲವಾಗಲು ಅಪಕ್ಷೀಯತೇ ಎಂಬ ವಿಕಾರ ಕೆಟ್ಟಿತ್ತು. ಲಿಂಗಾಂಗದ ಐಕ್ಯವನರಿದು ಲಿಂಗದಲ್ಲಿ ಲೀಯವಾಗಲು ವಿನಶ್ಯತಿ ಎಂಬ ವಿಕಾರ ಕೆಟ್ಟಿತ್ತು. ಇಂತೀ `ಲಿಂಗಸಂಗದಿಂದ ಷಡ್ಭಾವವಿಕಾರಂಗಳಳಿದು ನಿಮ್ಮವಿಕಾರವೆಡೆಗೊಂಡಿತ್ತು' ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮಭಕ್ತಂಗೆ.
--------------
ಸ್ವತಂತ್ರ ಸಿದ್ಧಲಿಂಗ
ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ, ಮಾಣಿ ಭೋ ! ಶಿವಭಕ್ತನೇ ಕುಲಜ, ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ಜಾತನಲ್ಲ ಅಜಾತನಲ್ಲ, ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.
--------------
ಬಸವಣ್ಣ
ವಿತ್ತಂ ಚ ರಾಜವಿತ್ತಂ ಚ ಕಾಮಿನೀ ಕಾಮಕಾವಶಾ ಪೃಥಿವೀ ವೀರಭೋಜ್ಯಾ ಚ ಸ್ವಧನಂ ಧರ್ಮ ಏವ ಚ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಅಧರ್ಮಾತ್ ಜಾಯತೇ ಕಾಮಃ ಕ್ರೋಧೋ[s] ಧರ್ಮಾಚ್ಚ ಜಾಯತೇ ಧರ್ಮಾತ್ ಸಂಜಾಯತೇ ಮೋಕ್ಷಃ ತಸ್ಮಾದ್ಧರ್ಮಂ ಸಮಾಚರೇತ್ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಕ್ಷಣಂ ಚಿತ್ತಂ ಕ್ಷಣಂ ವಿತ್ತಂ ಕ್ಷಣಂ ಜೀವನಮೇವ ಚ ಯಮಸ್ಯ ಕರುಣೋ ನಾಸ್ತಿ ಧರ್ಮಸ್ಯ ತ್ವರಿತಾ ಗತಿಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು, ನಾನಾ ವೇದ ಶಾಸಸ್ತ್ರ ಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿದರೆ ಸತ್ಪಾತ್ರಕ್ಕೆ ಮಾಡಿ ಧನ ಕೆಡದ ಹಾಂಗೆ. ಪಾತ್ರಪರೀಕ್ಷೆಗಳಲ್ಲಿ ಸತ್ಪಾತ್ರರು ಮಾಹೇಶ್ವರರು. ಅಲ್ಲಿ ಪ್ರೇಮ ಪ್ರೀತಿ ಕಿಂಕರತೆಯಿಂದ ದಾಸೋಹವ ಮಾಡಿ ಬದುಕಿರೆ. ನ ಮೇ ಪ್ರಿಯಶ್ಚತುರ್ವೆದೀ ಮದ್ಭಕ್ತ ಶ್ವಪಚೋಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಯಥಾ ಪೂಜ್ಯಸ್ತಧಾಹಿ ಸಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ನಿಕೃಷ್ಟಚಾರಜನ್ಮಾನೋ ವಿರುದ್ಧಾ ಲೋಕವೃತ್ತಿಷು ಕೋಟಿಭ್ಯೋ ವೇದವಿದುಷಾಂ ಶ್ರೇಷಾ* ಮದ್ಭಾವಭಾವಿತಾಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಚತುರ್ವೇದಧರೋ ವಿಪ್ರಃ ಶಿವಭಕ್ತಿವಿವರ್ಜಿತಃ ದುಷ್ಟಚಾಂಡಾಲಭಾಂಡಸ್ಥಂ ಯಥಾ ಭಾಗೀರಥೀಜಲಂ ಚುರ್ವೇದಧರೋ ವಿಪ್ರಃ ಶಿವದೀಕ್ಷಾವಿವರ್ಜಿತಃ ತಸ್ಯ ಭೋಜನದಾನೇನ ದಾತಾ ಚ ನರಕಂ ವ್ರಜೇತ್ ಚದುರ್ವೇದಧರೋ ವಿಪ್ರಃ ಸರ್ವಶಾಸ್ತ್ರವಿಶಾರದಃ ಶಿವಜ್ಞಾನಂ [ನ]ಜಾನಾತಿ ದರ್ವೀ ಪಾಕರಸಂ ಯಥಾ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು ನಾನಾವೇದಶಾಸ್ತ್ರಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿ, ಮಾಡಿ ಮಾಡಿ, ಮಾಹೇಶ್ವರರಿಗೆ. ಫಲವ ಬಯಸಲು ಫಲವಹುದು. ಮುಕ್ತಿಯ ಬಯಸಲು ಮುಕ್ತಿಯಹುದು. ಅನಿಮಿತ್ತಂ ನಿಮಿತ್ತಂ ಚ ಉಪಾಧಿರ್ನಿರುಪಾಧಿಕಂ ದಾಸೋಹಯುಕ್ತ ಕರ್ಮಾ ಚ ಯಥಾ ಕರ್ಮ ತಥಾ ಫಲಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಅನಾದರಾದಹಂಕಾರಾತ್ ಮೋಹಾದ್ಭೀತಿರುಪಾಧಿಕಾ ಕೀರ್ತಿಶ್ಚ ಷಡ್ಗುಣೋ ನಾಸ್ತಿ ದಾಸೋಹಶ್ಚ ಸ್ವಯಂ ಶಿವಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಕೆಡಬೇಡ ಕೆಡಬೇಡ. ಸಾಲೋಕ್ಯಾದಪಿ ಸಾಮೀಪ್ಯಾತ್ ಸಾರೂಪ್ಯಾಚ್ಚ ಸಯುಜ್ಯಕಾತ್ ಶಿವತತ್ತ್ವಾದಿಶೇಷಶ್ಚ ಸ್ವಯಂ ದಾಸೋಹ ಉತ್ತಮಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಕೃಲ್ಲಿಂಗಾರ್ಚಕೇ ದತ್ವಾ ವಸ್ತ್ರಮಾತ್ರಂ ಯಥೇಪ್ಸಿತಂ ಏಕತಂತ್ರಂ ಲಭೇದ್ರಾಜ್ಯಂ ಶಿವಸಾಯುಜ್ಯಮಾಪ್ನುಯಾತ್ ಸಕೃಲ್ಲಿಂಗಾರ್ಚಕೇ ದತ್ವಾ ಗೋಷ್ಟದಂ ಭೂಮಿಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವೇನ ಸಹ ಮೋದತೇ ಸಕೃಲ್ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವೈಶ್ಚ ಪೂಜ್ಯಮಾನಸ್ತು ಗಣಮುಖ್ಯೋ ಗಣೇಶ್ವರಃ ಸಕೃಲ್ಲಿಂಗಾರ್ಚಕೇ ದತ್ವಾ ಭಿಕ್ಷಾಮಾತ್ರಂ ಚ ಸಾದರಂ ಪದ್ಮಾನಿ ದಶಸಾಹಸ್ರಂ ಪಿತ್ರೂಣಾಂ ದತ್ತಮಕ್ಷಯಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಾವು, ದಿಟ ದಿಟ. ದಾಸೋಹವ ಮಾಡಲು ತನು ಕೆಡದ ಹಾಂಗೆ ಸತ್ಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಅಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಎಂಬುದನರಿದುದಕ್ಕೆ ಸತ್ಪಾತ್ರವಾವುದೆಂದಡೆ: ಕಿಂಚಿದ್ವೇದಮಯಂ ಪಾತ್ರಂ ಕಿಂಚಿತ್ಪಾತ್ರಂ ತಪೋಮಯಂ ಆಗಮಿಷ್ಯತಿ ಯತ್ಪಾತ್ರಂ ತತ್ಪಾತ್ರಂ ತಾರಯಿಷ್ಯತಿ ಸರ್ವೇಷಾಮೇವ ಪಾತ್ರಾಣಮತಿಪಾತ್ರಂ ಮಹೇಶ್ವರಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ, ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ಸಂಶಯಃ ಇಂತೆಂದುದಾಗಿ, ಅರಿದು ಇದು ಕಾರಣ, ಅರಿವನೇ ಅರಿದು, ಮರವೆಯನೇ ಮರದು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ[ನ]ರಿದು, ಪೂಜಿಸಲು ಇಹಪರಸಿದ್ಧಿ ಸದ್ಯೋನ್ಮುಕ್ತಿ ಕೇಳಿರಣ್ಣಾ.
--------------
ಉರಿಲಿಂಗಪೆದ್ದಿ
ಅಖಂಡ ಜ್ಯೋತಿರ್ಮಯವಾಗಿಹ ಪರಮೋಂಕಾರ ಪ್ರಣವದ ಜ್ಯೋತಿಸ್ವರೂಪದಲ್ಲಿ ಪರಿಣಾಮ ಹುಟ್ಟಿತ್ತು. ಆ ಪ್ರಣವದ ದರ್ಪಣಾಕಾರದಲ್ಲಿ ಶಬ್ದ ಹುಟ್ಟಿತ್ತು. ಆ ಪ್ರಣವದ ಅರ್ಧಚಂದ್ರಾಕಾರದಲ್ಲಿ ಸ್ಪರ್ಶನ ಹುಟ್ಟಿತ್ತು. ಆ ಪ್ರಣವದ ಕುಂಡಲಾಕಾರದಲ್ಲಿ ರೂಪು ಹುಟ್ಟಿತ್ತು. ಆ ಪ್ರಣವದ ದಂಡಕಸ್ವರೂಪದಲ್ಲಿ ರಸ ಹುಟ್ಟಿತ್ತು. ಆ ಪ್ರಣವದ ತಾರಕಸ್ವರೂಪದಲ್ಲಿ ಗಂಧ ಹುಟ್ಟಿತ್ತು ನೋಡಾ. ಇದಕ್ಕೆ ಶಿವಲಿಂಗಾಗಮೇ : ``ಓಂಕಾರ ಜ್ಯೋತಿರೂಪೇ ಚ ಪರಿಣಾಮಂ ಚ ಜಾಯತೇ | ಓಂಕಾರ ದರ್ಪಣಾಕಾರೇ ಶಬ್ದಶ್ಚೈವ ಸಜಾಯತೇ || ಓಂಕಾರೇಚಾರ್ಧಚಂದ್ರೇ ಚ ಸ್ಪರ್ಶನಂ ಚ ಸಜಾಯತೇ | ಓಂಕಾರಕುಂಡಲಾಕಾರೇ ರೂಪಂ ಚೈವ ಸಜಾಯತೇ | ಓಂಕಾರದಂಡಕರೂಪೇ ಚ ರಸಂ ಚೈವ ಸಜಾಯತೇ | ಓಂಕಾರತಾರಕಾರೂಪೇ ಗಂಧಂ ಚೈವ ಸಜಾಯತೇ | ಇತಿ ಷಡ್ಗುಣದ್ರವ್ಯಂ ಸ್ಥಾನೇ ಸ್ಥಾನೇ ಸಮುದ್ಭವಂ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->