ಅಥವಾ

ಒಟ್ಟು 63 ಕಡೆಗಳಲ್ಲಿ , 24 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೇತ್ರಂಗಳ ಮುಚ್ಚಿ ರೂಹಿಲ್ಲದ ನಿಲವ ಕಾಣಬೇಕು. ಶ್ರೋತ್ರಂಗಳ ಮುಚ್ಚಿ ಶಬ್ದವಿಲ್ಲದ ನಾದವ ಕೇಳಬೇಕು. ಜಿಹ್ವೆಯ ಮುಚ್ಚಿ ಸ್ವಾದುವಿಲ್ಲದ ರುಚಿಯನರಿಯಬೇಕು. ನಾಸಿಕವ ಮುಚ್ಚಿ ಉಸುರ ನುಂಗಿದ ಪರಿಮಳವನರಿಯಬೇಕು. ಅಂಗವ ಮುಚ್ಚಿ ಲಿಂಗಸಂಗ ಸಮಸುಖವನರಿಯಬೇಕು. ಸೌರಾಷ್ಟ್ರ ಸೋಮೇಶ್ವರವಿಡಿದು, ಪಂಚೇಂದ್ರಿಯಗಳಳಿದು ಲಿಂಗೇಂದ್ರಿಯಗಳಾಗಬೇಕು.
--------------
ಆದಯ್ಯ
ಭಕ್ತಿಯಾಚಾರದ ಪಥವಿಡಿದು ನಲಿನಲಿದುಲಿದಡೂ ಲಿಂಗಸಾಹಿತ್ಯವಿಲ್ಲ. ಮನವೆ ಲಿಂಗದಲ್ಲಿ ನೆಲೆಗೊಳಿಸುವೆನೆಂದು ಧ್ಯಾನಮೌನದಲ್ಲಿ ನಿಂತಡೂ ಲಿಂಗಸಾಹಿತ್ಯವಿಲ್ಲ. ಸರ್ವಪ್ರಪಂಚುಗಳು ವಾಯುವಿಂದ ತೋರುತ್ತಿರಲು ಆ ಪ್ರಪಂಚನಳಿದು ಲಿಂಗವನೊಡೆವೆರಸುವೆನೆಂದು ಶ್ವಾಸ ನಿಃಶ್ವಾಸಂಗಳ ಪಿಡಿದು ನಿಲಿಸಿದರೂ ಲಿಂಗಸಾಹಿತ್ಯವಿಲ್ಲ. ಸದ್ಭಕ್ತಿವೆತ್ತು ಭಾವಪ್ರಸಂಗದಿಂ ಕಂಗಳಂ ಕಳೆದು ಜಿಹ್ವೆಯಂ ಕೊಯಿದು ಶಿರವನರಿದು, ಹಸ್ತವನುತ್ತರಿಸಿತ್ತಡೂ ಲಿಂಗಸಾಹಿತ್ಯವಿಲ್ಲ. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಎಂಬ ಅಷ್ಟಾಂಗಯೋಗ ಘಟ್ಟಿಗೊಂಡು, ಪ್ರಾಣ ಮನ ಪವನ ಹುರಿಗೂಡಿ, ಆಧಾರ ಸ್ವಾಧಿಷ್ಠಾನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೇಯವೆಂಬ ಷಡಾಧಾರದ ಬಳಿವಿಡಿದು, ನೆತ್ತಿಯಿಂದುತ್ತರಕ್ಕೆ ಉಚ್ಚಳಿಸಿ ಹಾಯಿದು, ನಡುನೆತ್ತಿ ತೂತಾದಡೂ ಲಿಂಗಸಾಹಿತ್ಯವಿಲ್ಲ. ಸತ್ಯ, ಸಮತೆ, ಸಮಾಧಾನ, ಸದ್ಭಾವ, ಸವಿರಕ್ತಿಯಿಂದತ್ಯಾನಂದ ತೋರುತ್ತಿರಲು ಅದು ನೆಲೆಗೊಂಡು ನಿಲ್ಲದಾಗಿ ಹೇಳದೆ ಬಂದು ಕೇಳದೆ ಹೋಯಿತ್ತು. ಸೌರಾಷ್ಟ್ರ ಸೋಮೇಶ್ವರನ ನಿಜವನರಿಯದೆ ಅನುಭವವ ಮಾಡಿ ಫಲವೇನಯ್ಯಾ ?
--------------
ಆದಯ್ಯ
ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು. ನಿರವಯವೆಂದಡೆ ಸಾವಯದಿಂದ ಕುರುಹುದೋರಿತ್ತು. ಸವಿದ ಸವಿಯನುಪಮಿಸಬಾರದೆಂದಡೆ ಜಿಹ್ವೆಯಿಂದ ಕುರುಹುಗೊಂಡಿತ್ತು. ಆ ಜಿಹ್ವೆ ಸಾಕಾರ, ಸವಿದ ಸವಿ ನಿರಾಕಾರವೆಂದಡೆ, ನಾನಾ ಭೇದಂಗಳಿಂದ ರುಚಿಮಯವಾಯಿತ್ತು. ಆ ಜಿಹ್ವೆಯ ಕೊನೆಯ ಮೊನೆಯಲ್ಲಿ ನಿಂದು, ಅಹುದಲ್ಲವೆಂಬುದ ತಾನೆ ಕುರುಹಿಟ್ಟುಕೊಂಡಂತೆ ಜಿಹ್ವೆ ಬಲ್ಲುದೆಂದಡೆ ತನ್ನಡಿಗೆ ಬಾರದುದನರಿಯಿತ್ತೆ ? ಸಾರ ಸ್ವಾದ ಲೇಸೆಂದಡೆ ಜಿಹ್ವೆ ಹೊರತೆಯಾಗಿ ಕುರುಹುಗೊಂಡಿತ್ತೆ ? ಇದು ಕ್ರೀ ಜ್ಞಾನ ಸಂಪುಟಸ್ಥಲ. ಈ ಉಭಯಸ್ಥಲ ಲೇಪವಾದ ಮತ್ತೆ ನಿರುತ ನಿರ್ಯಾಣವೆಂಬುದು ನನ್ನಲ್ಲಿಯೊ ? ನಿನ್ನಲ್ಲಿಯೊ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ ಸದಾತ್ಮದಲ್ಲಿ ನಿನ್ನ ಕುರುಹೇಕೆ ಅಡಗದು ?
--------------
ಮೋಳಿಗೆ ಮಹಾದೇವಿ
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಗುರುವೆನ್ನ ತನುವ ಬೆರಸಿದ ಕಾರಣ, ಗುರುವಿನ ತನುವ ನಾ ಬೆರಸಿದ ಕಾರಣ, ಗುರು ಶುದ್ಧನಾದನಯ್ಯಾ. ಲಿಂಗವೆನ್ನ ಮನವ ಬೆರಸಿದ ಕಾರಣ, ಲಿಂಗದ ಮನವ ನಾ ಬೆರಸಿದ ಕಾರಣ, ಲಿಂಗ ಶುದ್ಧವಾದನಯ್ಯಾ. ಜಂಗಮವೆನ್ನ ಜಿಹ್ವೆಯ ಬೆರಸಿದ ಕಾರಣ, ಜಂಗಮದ ಜಿಹ್ವೆಯ ನಾ ಬೆರಸಿದ ಕಾರಣ ಜಂಗಮ ಶುದ್ಧನಾದನಯ್ಯಾ ಈ ಮೂವರು ತಮ್ಮಿಂದ ತಾವಾಗಲರಿಯದೆ ಎನ್ನ ಮುಟ್ಟಿ ಶುದ್ಧವಾದರು ಕಾಣಾ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಆತನ ದಿವ್ಯರೂಪು ನೋಡಿ ಎನ್ನ ಕಂಗಳು ದಣಿಯವು. ಆತನ ಲಲ್ಲೆವಾತ ಕೇಳಿ ಎನ್ನ ಕಿವಿಗಳು ದಣಿಯವು. ಆತನ ಜಿಹ್ವೆಯ ಚುಂಬಿಸಿ ಎನ್ನ ಬಾಯಿ ದಣಿಯದು. ಆತನ ಸರ್ವಾಂಗವನಪ್ಪಿ ಎನ್ನ ತನು ದಣಿಯದು. ಆ ಅಖಂಡೇಶ್ವರ ಕೂಡಿ ಒಳಪೊಕ್ಕು ಪರಿಣಾಮ ಸೂರೆಗೊಂಡು ಎನ್ನ ಮನ ದಣಿಯದು ನೋಡಿರವ್ವಾ.
--------------
ಷಣ್ಮುಖಸ್ವಾಮಿ
ಕಾಲಜ್ಞಾನಿ, ಕರ್ಮವಿದೂರ, ನಿತ್ಯತೃಪ್ತನೆ, ನಿಮ್ಮಭೇದಿಸುವರಾರು ಹೇಳಾ ಎಲೆ ಅಯ್ಯಾ. ಎನ್ನ ಭವಕರ್ಮವು ಕಳೆಯಲಿಕೆ ಏಕರೂಪವಾಗಿ ಬಂದೆಯಯ್ಯಾ. ನಿಮ್ಮ ಪದಂಗಳೆ ಲಿಂಗವಾಗಿ, ನಿಮ್ಮ ಕರಣಂಗಳೆ ಶ್ರೀಗುರುವಾಗಿ, ನಿಮ್ಮುರುತರಮಪ್ಪ ಜಿಹ್ವೆಯ ಜಂಗಮವಾಗಿ ಬಂದೆಯಯ್ಯಾ. ನೀನು ಶಿಷ್ಯ ಕಾರಣ ಪರಶಿವಮೂರ್ತಿಯಾದುದನು ನಾನಿಂದು ಕಂಡೆ ಕಾಣಾ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಎನ್ನ ಘ್ರಾಣದ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧಗಂಧವೆಂಬ ಭಕ್ತಿಪದಾರ್ಥವ ಕೈಕೊಂಡು ಎನಗೆ ಮುಕ್ತಿಪ್ರಸಾದವ ಕರುಣಿಸುವಾತನು ನೀನೆ ಅಯ್ಯಾ. ಎನ್ನ ಜಿಹ್ವೆಯ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧರಸವೆಂಬ ಭಕ್ತಿಪದಾರ್ಥವ ಕೈಕೊಂಡು ಎನಗೆ ಮುಕ್ತಿಪ್ರಸಾದವ ಕರುಣಿಸುವಾತನು ನೀನೆ ಅಯ್ಯಾ. ಎನ್ನ ನೇತ್ರದ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧರೂಪವೆಂಬ ಭಕ್ತಿಪದಾರ್ಥವ ಕೈಕೊಂಡು ಎನಗೆ ಮುಕ್ತಿಪ್ರಸಾದವ ಕರುಣಿಸುವಾತನು ನೀನೆ ಅಯ್ಯಾ. ಎನ್ನ ತ್ವಕ್ಕಿನ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧಸ್ಪರ್ಶನವೆಂಬ ಭಕ್ತಿಪದಾರ್ಥವ ಕೈಕೊಂಡು ಎನಗೆ ಮುಕ್ತಿಪ್ರಸಾದವ ಕರುಣಿಸುವಾತನು ನೀನೆ ಅಯ್ಯಾ. ಎನ್ನ ಶ್ರೋತ್ರದ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧಶಬ್ದವೆಂಬ ಭಕ್ತಿಪದಾರ್ಥವ ಕೈಕೊಂಡು ಎನಗೆ ಮುಕ್ತಿಪ್ರಸಾದವ ಕುರಣಿಸುವಾತನು ನೀನೆ ಅಯ್ಯಾ. ಎನ್ನ ಹೃದಯದ ಕೊನೆಯಲ್ಲಿ ಕುಳ್ಳಿರ್ದು ಷಡ್ವಿಧ ತೃಪ್ತಿಯೆಂಬ ಭಕ್ತಿಪದಾರ್ಥವ ಕೈಕೊಂಡು, ಎನಗೆ ಮುಕ್ತಿಪ್ರಸಾದವ ಕರುಣಿಸುವಾತನು ನೀನೆ ಅಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆಯತ ಸ್ವಾಯತ ಸನ್ನಹಿತವ ಅನಾಯತಗಳು ಮುಟ್ಟಲಮ್ಮವು ನೋಡಾ. ಕಂಗಳ ಕೈಗಳಲರ್ಪಿಸುವ, ಶ್ರೋತ್ರದ ಕೈಗಳಲರ್ಪಿಸುವ ನಾಸಿಕದ ಕೈಗಳಲರ್ಪಿಸುವ ಜಿಹ್ವೆಯ ಕೈಗಳಲರ್ಪಿಸುವ, ತನುವಿನ ಕೈಗಳಲರ್ಪಿಸುವ, ಮನದ ಕೈಗಳಲರ್ಪಿಸುವ, ಕೈಗಳ ಕೈಯಲರ್ಪಿಸುವ. ಅಲ್ಲಲ್ಲಿ ತಾಗಿದ ಸುಖವನಲ್ಲಲ್ಲಿ ಲಿಂಗಾರ್ಪಿತವ ಮಾಡುವನಾಗಿ ಕೂಡಲಚೆನ್ನಸಂಗಯ್ಯನಲ್ಲಿ ಆತ ಮಹಾಪ್ರಸಾದಿ.
--------------
ಚನ್ನಬಸವಣ್ಣ
ಅರ್ಪಿತದ ಮಹಿಮೆಯ ಅನುವ, ಪ್ರಸಾದದ ಮಹಿಮೆಯ ಆವಂಗಾವಂಗರಿಯಬಾರದು. ವಿಷ್ಣ್ವಾದಿ ದೇವ ದಾನವ ಮಾನವ, ಋಷಿಜನಂಗಳಿಗೆಯೂ ಅರಿಯಬಾರದು. ಕಿಂಚಿತ್ತರಿದಡೆಯೂ ಅರ್ಪಿಸಬಾರದು. ಕಿಂಚಿತ್ ಅರ್ಪಿಸಿದಡೆಯೂ ಪ್ರಸಾದವ ಹಡೆಯಬಾರದು. ಕಿಂಚಿತ್ ಪ್ರಸಾದವ ಹಡೆದಡೆಯೂ, ಪ್ರಸಾದವ ಭೋಗಿಸಿ ಪರಿಣಾಮದಿಂ ಮುಕ್ತರಾಗಿರಲರಿಯರು. ಶಿವ ಶಿವಾ ! ಗುರು ಲಿಂಗ ಜಂಗಮಕ್ಕೆ ತನು ಮನ ಧನವನರ್ಪಿಸಲರಿಯರು. ಗುರು ಲಿಂಗ ಜಂಗಮವನೇಕೀಭವಿಸಿ ಮಹಾಲಿಂಗವನು ನೇತ್ರದಲ್ಲಿ ಧರಿಸಿ, ನೇತ್ರಲಿಂಗಕ್ಕೆ ನೇತ್ರದ ಕೈಯಲೂ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ಶ್ರೋತ್ರದಲ್ಲಿ ಧರಿಸಿ ಶ್ರೋತ್ರಲಿಂಗಕ್ಕೆ ಶ್ರೋತ್ರದ ಕೈಯಲೂ ಮಹಾಶಬ್ದವನರ್ಪಿಸಲರಿಯರು. ಆ ಮಹಾಲಿಂಗವನು ಘ್ರಾಣದಲ್ಲಿ ಧರಿಸಿ ಘ್ರಾಣಲಿಂಗಕ್ಕೆ ಘ್ರಾಣದ ಕೈಯಲೂ ಸುಗಂಧವನರ್ಪಿಸಲರಿಯರು. ಆ ಮಹಾಲಿಂಗವನು ಜಿಹ್ವೆಯಲ್ಲಿ ಧರಿಸಿ ಜಿಹ್ವೆಯಲಿಂಗಕ್ಕೆ ಜಿಹ್ವೆಯ ಕೈಯಲೂ ಮಹಾರಸವನರ್ಪಿಸಲರಿಯರು. [ಆ ಮಹಾಲಿಂಗವನು ತ್ವಕ್ಕಿನಲ್ಲಿ ಧರಿಸಿ ತ್ವಕ್‍ಲಿಂಗಕ್ಕೆ ಘ್ರಾಣದ ಕೈಯಲ್ಲಿ ಮಹಾಸ್ಪರ್ಶವನರ್ಪಿಸಲರಿಯರು] ಆ ಮಹಾಲಿಂಗವನು ಭಾವದಲ್ಲಿ ಧರಿಸಿ ಭಾವಲಿಂಗಕ್ಕೆ ಭಾವದ ಕೈಯಲೂ ಸರ್ವಸುಖಪರಿಣಾಮ ಮೊದಲಾದ ಭಾವಾಭಾವ ನಿಷ್ಕಲವಸ್ತುವನರ್ಪಿಸಲರಿಯರು. ಆ ಮಹಾಲಿಂಗವನು ಮನದಲ್ಲಿ ಧರಿಸಿ ಮನೋಮಯಲಿಂಗಕ್ಕೆ ಮನದ ಕೈಯಲೂ ಸಕಲ ನಿಷ್ಕಲಾದಿ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ವಾಕ್ಕಿನಲ್ಲಿ ಧರಿಸಿ ವಾಕ್‍ಲಿಂಗಕ್ಕೆ ವಾಕ್ಕಿನ ಕೈಯಲ್ಲೂ ಪಡಿಪದಾರ್ಥ ಮೊದಲಾದ ಸಕಲದ್ರವ್ಯಂಗಳ ರುಚಿ ಮೊದಲಾದ ಸುಖವನರ್ಪಿಸಲರಿಯರು. ಆ ಮಹಾಲಿಂಗವನು ಇಂತು ಮನೋವಾಕ್ಕಾಯವೆಂಬ ತ್ರಿವಿಧದಲ್ಲಿ ಏಕಾದಶ ಅರ್ಪಿತ ಸ್ಥಾನವನರಿದು ಅರ್ಪಿತವಾದ ಏಕಾದಶ ಪ್ರಸಾದವನರಿಯರು. ಮಹಾರ್ಪಿತವನು ಮಹಾಪ್ರಸಾದವನು ಎಂತೂ ಅರಿಯರು. ಪರಂಜ್ಯೋತಿಃ ಪರಂ ತತ್ತ್ವಂ ಪರಾತ್ಪರತರಂ ತಥಾ ಪರವಸ್ತು ಪ್ರಸಾದಃ ಸ್ಯಾದಪ್ರಮಾಣಂ ಪ್ರಸಾದಕಃ ಎಂಬುದನರಿಯರು. ಪೂಜಕಾ ಬಹವಸ್ಪಂತಿ ಭಕ್ತಾಶ್ಯತಸಹಸ್ರಶಃ ಮಹಾಪ್ರಸಾದಪಾತ್ರಂ ತು ದ್ವಿತ್ರಾ ವಾ ನೈವ ಪಂಚಷಃ ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಾಃ ವಿಷ್ಣುಪ್ರಮುಖದೇವಾಶ್ಚ ನ ಜಾನಂತಿ ಶಿವಂಕರಂ ಎಂಬ ಪ್ರಸಾದ ಎಲ್ಲರಿಗೆಯೂ ಅಸಾಧ್ಯ. ಅರ್ಪಿತ ಮುನ್ನವೇ ಅಸಾಧ್ಯ. ಅರ್ಪಿತವೂ ಪ್ರಸಾದವೂ ಚನ್ನಬಸವಣ್ಣಂಗಾಯಿತ್ತು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಎನ್ನ ಜನನ ಸೂತಕ ಹೋಯಿತ್ತು ಶ್ರೀಗುರುವಿನ ಪಾಣಿಪದ್ಮದಲ್ಲಿ ಜನಿಸಿದೆನಾಗಿ. ಎನ್ನ ಜಾತಿಸೂತಕ ಹೋಯಿತ್ತು ಅಜಾತ ಲಿಂಗಸಂಗದಿಂದ. ಎನ್ನ ಕುಲಸೂತಕ ಹೋಯಿತ್ತು ಶಿವನಲ್ಲದೆ ಅನ್ಯದೈವವನರಿಯೆನಾಗಿ. ಎನ್ನ ಛಲಸೂತಕ ಹೋಯಿತ್ತು ಜೀವಭಾವವಿಲ್ಲವಾಗಿ. ಎನ್ನ ಮನಸೂತಕ ಹೋಯಿತ್ತು ನಿಮ್ಮ ನಾಮವ ನೆನೆನೆನೆದು. ಎನ್ನ ಕಂಗಳ ಸೂತಕ ಹೋಯಿತ್ತು ನಿಮ್ಮ ಮಂಗಳಸ್ವರೂಪವ ನೋಡಿ ನೋಡಿ. ಎನ್ನ ಕೈಯಸೂತಕ ಹೋಯಿತ್ತು ನಿಮ್ಮ ಮುಟ್ಟಿ ಪೂಜಿಸಿ ಪೂಜಿಸಿ. ಎನ್ನ ಕಿವಿಯ ಸೂತಕ ಹೋಯಿತ್ತು ನಿಮ್ಮ ಕೀರ್ತಿಯ ಕೇಳಿ ಕೇಳಿ. ಎನ್ನ ಜಿಹ್ವೆಯ ಸೂತಕ ಹೋಯಿತ್ತು ನಿಮ್ಮ ಪರಮಪ್ರಸಾದವ ಸವಿಸವಿದು. ಇಂತೀ ಸರ್ವಸೂತಕವ ಹರಿದು, ಪೂರ್ವಕಲ್ಪಿತಂಗಳ ಮೀರಿ. ನಿಮ್ಮೊಳಗೆ ನಿಜನಿಶ್ಚಿಂತನಿವಾಸಿಯಾಗಿರ್ದೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶ್ರೀಗುರು ಮಾಡಿದ ಗುರುತ್ವ ಉಪಮಾತೀತವು. ನೇತ್ರದಲ್ಲಿ ತನ್ನ ರೂಪು ತುಂಬಿ ನೇತ್ರವ ಗುರು ಮಾಡಿದನು. ಶ್ರೋತ್ರದಲ್ಲಿ ಮಹಾಮಂತ್ರವ ತುಂಬಿ ಶ್ರೋತ್ರವ ಗುರು ಮಾಡಿದನು. ಘ್ರಾಣದಲ್ಲಿ ಮಹಾಗಂಧವ ತುಂಬಿ ಘ್ರಾಣವ ಗುರು ಮಾಡಿದನು. ಜಿಹ್ವೆಯಲ್ಲಿ ಕರುಣಪ್ರಸಾದವ ತುಂಬಿ ಜಿಹ್ವೆಯ ಗುರು ಮಾಡಿದನು. ಕಾಯವ ಮಹಾಕಾಯವೆನಿಸಿ, ಪ್ರಸಾದಕಾಯವೆನಿಸಿ, ಕಾಯವ ಗುರು ಮಾಡಿದನು. ಪ್ರಾಣವನೂ ಲಿಂಗಪ್ರಾಣಸಂಬಂಧವ ಮಾಡಿ ಪ್ರಾಣವ ಗುರು ಮಾಡಿದನು. ಇಂತು ಅಂತರಂಗ ಬಹಿರಂಗವನು ಗುರು ಮಾಡಿದನು. ಸರ್ವಾಂಗವನು ಗುರುವ ಮಾಡಿದ ಗುರುವಿಂಗೆ ನಾನಿನ್ನೇನ ಮಾಡುವೆನಯ್ಯಾ? ಗುರುಪೂಜೆಗನುವಾದ ದ್ರವ್ಯಂಗಳನೂ, ಆವಾವ ಪದಾರ್ಥಂಗಳನೂ ಆವಾವ ಪುಷ್ಪಫಲಾದಿಗಳನೂ ವಿಚಾರಿಸಿ ನೋಡಿದಡೆ ಆವುವು ಗುರುತ್ವವಿಲ್ಲ. ಸರ್ವದ್ರವ್ಯಮೂಲವೂ ಸರ್ವಪದಾರ್ಥಮೂಲವೂ ಸರ್ವರಸಪುಷ್ಪಫಲಾದಿಗಳಿಗೆ ಎಲ್ಲದಕ್ಕೂ ಮೂಲಿಗ ಮನವು ಗುರುತ್ವವನ್ನುಳ್ಳದ್ದು. ತನ್ನ ಮನೋವಾಕ್‍ಸಹಿತ ಕಾಯವನೂ ಸದ್ಗುರುವಿಂಗಿತ್ತು ಶ್ರೀಗುರು ದರ್ಶನ ಸ್ಪರ್ಶನ ಮಾಡಿ ಸುಖಿಯಪ್ಪೆ ನಾನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರುವೇ ಪರಶಿವಲಿಂಗ, ಪರಶಿವಲಿಂಗವೇ ಜಂಗಮ, ಜಂಗಮವೇ ಪರಶಿವಲಿಂಗ. ಗುರು ಲಿಂಗ ಜಂಗಮ ತ್ರಿವಿಧವೂ ಪರಶಿವಲಿಂಗವೆಂದರಿದು ಮನೋವಾಕ್ಕಾಯವನೊಂದು ಮಾಡಿ ತನು ಮನ ಧನವನೊಂದು ಮಾಡಿ ಆ ಒಂದುಮಾಡಿದ ಮನವನೂ, ಆ ತ್ರಿವಿಧವನೊಂದುಮಾಡಿದ ಪರಶಿವಲಿಂಗದಲ್ಲಿ ಅರ್ಪಿಸಲು ಆ ಲಿಂಗಪ್ರಸನ್ನವೇ ಪ್ರಸಾದ, ಆ ಪ್ರಸಾದವೇ ಪರಶಿವಲಿಂಗ. ಇಂತು ಬೀಜ-ವೃಕ್ಷ, ಪುಷ್ಪ-ಫಲ ಒಂದೇ. ಪರಶಿವನು ಭಕ್ತಜನಂಗಳ ರಕ್ಷಿಸಲೋಸುಗ[ರ] ದೇವದಾನವ ಮಾನವರಿಗೆ ಕೃಪೆಮಾಡಿ ದೀಕ್ಷೆಯ ಮಾಡಲೋಸುಗರ, ಬಹುವಿಧದಲ್ಲಿ ಶ್ರೀಗುರುರೂಪಾದನು. ಆದರೆ ಶ್ರೀಗುರು ಒಂದೇ ವಸ್ತು, ಪರಶಿವನು. `ಸ್ಥಾವರಂ ಜಂಗಮಾಧಾರಂ' ಎಂದುದಾಗಿ, ಪರಶಿವನು ಶಕ್ತಿವಿನೋದಕಾರಣ ಸದ್ಭಕ್ತಜನಂಗಳಿಗೆ ಪ್ರಸನ್ನವಾಗಲೋಸುಗರ, ದೇವ ದಾನವ ಮಾನವರಲ್ಲಿ ವಿನೋದಿಸಿ ಉತ್ಪತ್ತಿಸ್ಥಿತಿಲಯವ ಮಾಡಲೋಸುಗರ, ಅನೇಕತತ್ತ್ವರೂಪಾದನು ಸರ್ವತತ್ತ್ವರೂಪು ಪರಶಿವನೊಂದೇ ವಸ್ತು, `ತತ್ತ್ವಂ ವಸ್ತುಕಂ' ಎಂದುದಾಗಿ, `ನಾನಾರೂಪಧರಂ ದೇವಂ' ಎಂದುದಾಗಿ, ಪರಶಿವನೊಂದೇ ವಸ್ತು. ಸರ್ವಲೋಕವ ರಕ್ಷಿಸಲೋಸುಗರ, ತನು ಮನ ಧನವನೂ ತನ್ನಲ್ಲಿಗೆ ತೆಗೆದುಕೊಂಡು ಪಾದೋದಕ ಪ್ರಸಾದವನಿತ್ತು ರಕ್ಷಿಸಲೋಸುಗರ, ನಾನಾರೂಪು ಬಹುವಿಧಶೀಲದಿಂ ಜಂಗಮರೂಪಾದನು. `ದಂಡಕ್ಷೀರದ್ವಯಂ ಹಸ್ತೇ' ಎಂದುದಾಗಿ, ಪರಶಿವನೊಂದೇ ವಸ್ತು. `ಯೇ ರುದ್ರಲೋಕಾದವತೀರ್ಯ ರುದ್ರಾ ಎಂದುದಾಗಿ, ಜಂಗಮ ಪರಶಿವನೂ ಒಂದೇ ವಸ್ತು. ಪರಶಿವನ ಪ್ರಸನ್ನವೇ ಪ್ರಸಾದ, ಗುರುಲಿಂಗಜಂಗಮ ತ್ರಿವಿಧಲಿಂಗದಲ್ಲಿ ತನು ಮನ ಧನವನೂ ಸರ್ವಪದಾರ್ಥ ಸರ್ವದ್ರವ್ಯವನೂ ನೇತ್ರದ ಕೈಯಲೂ ಘ್ರಾಣದ ಕೈಯಲೂ ಜಿಹ್ವೆಯ ಕೈಯಲೂ ಪರುಷಭಾವ ಮನವಾಕ್ಕಿನ ಕೈಯಲೂ ಈ ಪ್ರಕರದಿಂದೆಲ್ಲಾ ತೆರದಲ್ಲಿ ಸಕಲನಿಷ್ಕಲವನೆಲ್ಲವನೂ ಅರ್ಪಿಸಿದಲ್ಲಿ ಆ ಪರಶಿವನು ಅನೇಕ ವಿಧದಲ್ಲಿ, ಅನೇಕ ಮುಖದಲ್ಲಿ, ಅರ್ಪಿತವ ಕೈಕೊಂಡು ಪ್ರಸನ್ನವಾಗಲು, ಸದ್ಬಕ್ತಂಗೆ ಬಹುವಿಧ: ಗುರುಮುಖದಲ್ಲಿ ಶುದ್ಧಪ್ರಸಾದ, ಲಿಂಗಮುಖದಲ್ಲಿ ಸಿದ್ಧಪ್ರಸಾದ, ಜಂಗಮಮುಖದಲ್ಲಿ ಪ್ರಸಿದ್ಧಪ್ರಸಾದ. ಗುರುಮುಖದಲ್ಲಿ ನೇತ್ರ ಪ್ರಸಾದ, ಶ್ರೋತ್ರ ಪ್ರಸಾದ, ಘ್ರಾಣ ಪ್ರಸಾದ, ಜಿಹ್ವೆ ಪ್ರಸಾದ, ಪರುಶನ ಪ್ರಸಾದ, ಭಾವ ಪ್ರಸಾದ, ಮನ ಪ್ರಸಾದ ವಾಕ್ ಪ್ರಸಾದ, ಕಾಯ ಪ್ರಸಾದ ಇವುವಿಡಿದು ನಡೆವುವು ತ್ರಿವಿಧಸಂಪತ್ತುಗಳು. ಭಕ್ತ ಮಹೇಶ್ವರ ಪ್ರಸಾದಿ ಮನವಿಡಿದು ನಡೆವುವು ತ್ರಿವಿಧಸಂಪತ್ತುಗಳು. ಪ್ರಾಣಲಿಂಗಿ ಶರಣನೈಕ್ಯವಾಗಿ ನಡೆದರಯ್ಯಾ ಕ್ರಿಯಾನುಭಾವವಿಡಿದು. ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ ಈ ಭೇದವನು ಭೇದಿಸಬಲ್ಲಡೆ ಇಂದೇ ಇಹವಿಲ್ಲ ಪರವಿಲ್ಲ. ಈ ಒಂದೇ ನಾನಾವಿಧಪ್ರಸಾದ ಅನೇಕದಿನದಿಂ ಪ್ರಸನ್ನನಾಗಲು ಪ್ರಸಾದ ಒಂದೇ ವಸ್ತು ಪರಶಿವನು. ಇದು ಕಾರಣ, ಶ್ರೀಗುರು ಪರಶಿವನು ಜಂಗಮವು ಪ್ರಸಾದವು ಒಂದೇ ಕಾಣಿರಣ್ಣಾ. ಚತುಷ್ಟವನು ವೇದ ಶಾಸ್ತ್ರ ಆಗಮ ಪುರಾಣದಿಂ ವಿಚಾರಿಸಲು ಒಂದೇ ವಸ್ತು. ಆ ವಿಚಾರವ ನಂಬದೇ ಕೆಡಬೇಡ. ಜಂಗಮವೆಯಿದು `ಸ ಭಗವಾನ್ ಯಸ್ಯ ಸರ್ವೇ' ಎಂದುದಾಗಿ `ಸರ್ವಕಾರಣಕಾರಣಾತ್' ಎಂದು ಪರಶಿವಲಿಂಗವಲ್ಲದೆ ಇಲ್ಲ. ಆತನ ಪ್ರಸನ್ನವೇ ಪ್ರಸಾದ, ಆ ಪ್ರಸಾದವೇ ಮುಕ್ತಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಹೃದಯದ ಕೊನೆಯ ಮೇಲೆ ಬಂದ ಪರಿಣಾಮದ ತೃಪ್ತಿಯ ಸುಖವ, ಹೃದಯದ ಮನದ ಕೊನೆಯ ಮೊನೆಯ ಮೇಲೆ, ಮಹಾಲಿಂಗಕ್ಕೆ ಸಮರ್ಪಿಸಬೇಕು. ಶ್ರೋತ್ರದ ಕೊನೆಯಲ್ಲಿ ಬಂದ ಸಂಗೀತದ ಪರಿಣಾಮವ, ಅವಧಾನದ ಶ್ರೋತ್ರದ ಕೊನೆಯ ಮೊನೆಯ ಮೇಲೆ, ಪ್ರಸಾದಲಿಂಗಕ್ಕೆ ಅರ್ಪಿಸಬೇಕು. ನೇತ್ರದ ಕೊನೆಯಲ್ಲಿ ಬಂದ ಸುಲಕ್ಷಣ ಸುರೂಪಿನ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಶಿವಲಿಂಗಕ್ಕೆ ಸಮರ್ಪಿಸಬೇಕು. ನಾಸಿಕದ ಕೊನೆಯಲ್ಲಿ ಬಂದ ಸುಗಂಧದ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಆಚಾರಲಿಂಗಕ್ಕೆ ಅರ್ಪಿಸಬೇಕು. ಜಿಹ್ವೆಯ ಕೊನೆಯಲ್ಲಿ ಬಂದ ಸುಸ್ವಾದುವಿನ ಪ್ರಸಾದದ ರುಚಿಯ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಗುರುಲಿಂಗಕ್ಕೆ ಸಮರ್ಪಿಸಬೇಕು. ತ್ವಕ್ಕಿನ ಕೊನೆಯಲ್ಲಿ ಬಂದ ಸುಪರ್ಶನದ ಸುಖದ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಜಂಗಮಲಿಂಗಕ್ಕೆ ಸಮರ್ಪಿಸಬೇಕು. ಮನದಲ್ಲಿ ತಟ್ಟುವ ಮುಟ್ಟುವ ತಾಗುನಿರೋಧವೆಲ್ಲವನೂ ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಮಹಾಘನಲಿಂಗಕ್ಕೆ ಸಮರ್ಪಿಸಬೇಕು. ಈ ಕ್ರಮವನರಿದು ಸರ್ವಾವಧಾನಿಯಾಗಿ, ಗುರುಲಿಂಗಜಂಗಮಮುಖದಲ್ಲಿ ತನುಮನಧನವನರ್ಪಿಸಿ, ಆ ಶುದ್ಧಸಿದ್ಧಪ್ರಸಿದ್ಧಪ್ರಸಾದದ ರೂಪುರುಚಿತೃಪ್ತಿಯ ಆದಿಮಧ್ಯಾಂತವನರಿದು, ಸಾವಧಾನಭಕ್ತಿಯಿಂ ಇಷ್ಟಪ್ರಾಣಭಾವಲಿಂಗಕ್ಕರ್ಪಿಸಿ, ಮಹಾಪ್ರಸಾದಿಯಾಗಿಪ್ಪಾತ, ನಮ್ಮ ಚನ್ನಬಸವಣ್ಣ ಕಾಣಿರಯ್ಯಗಳಿರಾ. ಈ ಪ್ರಕಾರದ ಅವಧಾನ ಮನದ ಕೊನೆಯ ಮೊನೆಯ ಮೇಲೆ, ಸರ್ವಾರ್ಪಿತಕ್ರಮವನರಿದು ಪ್ರಸಾದಭೋಗಿಯಾಗಿಪ್ಪಾತನು, ನಮ್ಮ ಸಂಗನಬಸವಣ್ಣನು ಕೇಳಿರಣ್ಣಗಳಿರಾ. ಈ ಬಸವಣ್ಣನ ಪ್ರಸಾದವ ಕೊಂಡು ನಾನು ಬದುಕಿದೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಮತ್ತೀ ಕ್ರಮವನರಿದು, ಅರ್ಪಿತಮುಖವನರಿದು ಅರ್ಪಿಸಿ, ತೃಪ್ತಿಯನೈದಬಲ್ಲ ಶರಣರ ಮಹಾತ್ಮೆಯ ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಕಣ್ಣು ನೋಡಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ ? ಕಿವಿ ಕೇಳಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ ? ಘ್ರಾಣ ವಾಸಿಸಿ ಅರ್ಪಿಸಿದುದು ಅದಾವ ಲಿಂಗಕ್ಕೆ ? ಜಿಹ್ವೆಯ ಕೊನೆಯಲ್ಲಿ ಸವಿದು ಅರ್ಪಿಸಿದುದು ಅದಾವ ಲಿಂಗಕ್ಕೆ ? ಕರ ಮುಟ್ಟಿದ ಸೋಂಕಿನ ಸುಖ ಅದಾವ ಲಿಂಗಕ್ಕೆ ? ಇಂತೀ ಪಂಚೇಂದ್ರಿಯಂಗಳಲ್ಲಿ ಅರ್ಪಿಸಿಕೊಂಬ ಆತ್ಮನ ತೃಪ್ತಿ ಐದೋ ಮೂರೋ ಬೇರೆರಡೋ ಏಕವೋ ? ಎಂಬುದ ನಿಧಾನಿಸಿ ಬಹುವೆಜ್ಜದ ಕುಂಭದಲ್ಲಿ ಅಗ್ನಿಯನಿರಿಸಿ ಉರುಹಲಿಕೆ ವೆಜ್ಜ ವೆಜ್ಜಕ್ಕೆ ತಪ್ಪದೆ ಕಿಚ್ಚು ಹೊದ್ದಿ ತೋರುವದು ವೆಜ್ಜದ ಗುಣವೋ ? ಒಂದಗ್ನಿಯ ಗುಣವೋ ? ಇಂತೀ ಗುಣವ ನಿಧಾನಿಸಿಕೊಂಡು ನಿಜಪ್ರಸಾದವ ಕೊಂಬ ಸ್ವಯಪ್ರಸಾದಿಗೆ ತ್ರಿವಿಧಪ್ರಸಾದ ಸಾಧ್ಯವಪ್ಪುದಲ್ಲದೆ ವರ್ತಕಪ್ರಸಾದಿಗಳಿತ್ತಲೆ ಉಳಿದರು. ದಹನ ಚಂಡಿಕೇಶ್ವರಲಿಂಗಕ್ಕೆ ಅರ್ಪಿತ ಮುಟ್ಟದೆ ಹೋಯಿತ್ತು.
--------------
ಪ್ರಸಾದಿ ಲೆಂಕಬಂಕಣ್ಣ
ಇನ್ನಷ್ಟು ... -->