ಅಥವಾ

ಒಟ್ಟು 88 ಕಡೆಗಳಲ್ಲಿ , 42 ವಚನಕಾರರು , 77 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡುವವ ಮಾನವನೆಂದು ಒಡಲಾಸೆಯ ತೋರದಿರು, ಕೊಡುವವ ಮಾನವನಲ್ಲ. ಕೊಡುವವ ಕೊಂಬುವವ ಮಾನವರ ನಡುವಿಪ್ಪ ಮಹಾತ್ಮ ಸಂಜೀವಂಗೆ ಒಡಲಾಸೆ ತೋರಿ ಬೇಡಿಕೊ. ಜೀವನ ಬುದ್ಧಿಯಿಂದ ನರನನಾಸೆಗೈಯದಿರು. ಆಸೆಗೈದರೆ ಕಾವವರಲ್ಲ , ಕೊಲ್ಲುವವರೂ ಅಲ್ಲ , ಕೊಡುವವರೂ ಅಲ್ಲ , ಬಿಡುವವರೂ ಅಲ್ಲ . ನಾಯ ಬಾಲವ ನಂಬಿ ಹೊಳೆಯ ಹಾದವರುಂಟೇ ? ವೈಷಭನ ಬಾಲವ ಪಿಡಿದರೆ ನದಿಯ ತಡಿಯ ಸೇರುವರಲ್ಲದೆ. ನಂಬು ನಂಬು ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲನೆಂಬ ಮಹಾಭಾಗ್ಯವ ನಂಬಿದರೆ ನಿನಗೆ ಬಡತನವೆ ಆತ್ಮ ?
--------------
ಹೇಮಗಲ್ಲ ಹಂಪ
ಕಾಯಶೂನ್ಯ, ಜೀವಶೂನ್ಯ, ಪ್ರಾಣಶೂನ್ಯವೆಂದೆಂಬರು, ಅದೆಂತಯ್ಯ ? ಮನ ಮನನ ಮನನೀಯಂಗಳಲ್ಲಿ ಮಂತ್ರಲೀಯವಾದುದೆ ಕಾಯಶೂನ್ಯ. ಆ ಮಂತ್ರ ಪಿಂಡಾಂಡದಲ್ಲಿ, ಪರಿಪೂರ್ಣಭೇದ ತೋರಿದಾಗಲೆ ಜೀವಶೂನ್ಯ. ಆ ಪ್ರಭೆಯ ಪರಿಣಾಮದಲ್ಲಿ ಜೀವನ ಉಪಾದ್ಥಿ ನಷ್ಟವಾಗಿ, ಜೀವ ಪರಮ ಸಂಯೋಗವೆಂಬ ಸಂದೇಹವಳಿದಾಗಲೇ ಪ್ರಾಣಶೂನ್ಯ, ಇದು ತ್ರಿವಿಧಶೂನ್ಯ, ಐಘಟದೂರ ರಾಮೇಶ್ವರಲಿಂಗದಲ್ಲಿ ನಿಲುಕಡೆ.
--------------
ಮೆರೆಮಿಂಡಯ್ಯ
ಅರಿದು ಲಿಂಗಸಂಗವಾದಲ್ಲಿ ಕಾಯವಳಿದರೇನು ? ಕಾಯವುಳಿದು ಕೈಲಾಸಕ್ಕೆ ಹೋಗಬೇಕೆಂಬುದು, ಜೀವನ ಉಪಾದ್ಥಿಕೆ. ಘಟಮಟಪಟನ್ಯಾಯ ಇವೆಲ್ಲವು ಬಯಲೊಳಗು. ಅರ್ಕೇಶ್ವರಲಿಂಗವನರಿದು ಕೂಡಿದ ಮತ್ತೆ, ಅಂಗ ಸಿಕ್ಕುವುದಕ್ಕೆ ಠಾವಿಲ್ಲ.
--------------
ಮಧುವಯ್ಯ
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಕುಲ ಜಾತಿ ವರ್ಗದ ಶಿಶುಗಳಿಗೆ ಹಲವು ಭೇದದ ಹಾಲು. ನಲವಿಂದ ತಮ್ಮ ತಮ್ಮ ಮೊಲೆಗಳ ಉಂಡಲ್ಲದೆ ಬೆಳವಣಿಗೆಯಿಲ್ಲ. ಹಾಲು ದೇಹ ಹಲವಾದಡೆ, ಅಳಿವು ಉಳಿವು ಎರಡೇ ಭೇದ. ಏನನರಿತಡೂ ಜೀವನ ನೋವನರಿಯಬೇಕು. ನುಡಿ ನಡೆ ಎರಡಿಲ್ಲದೆ ದೃಢವಾಗಿ ಇರಬೇಕು. ಬಿರುದು ಹಿರಿಯರೆಂದಡೆ ಬಿಡಬೇಕಲ್ಲದೆ, ಕಡಿಯಬಹುದೆ ಅಯ್ಯಾ ? ಮಾತಿನಲ್ಲಿ ಬಲ್ಲವರಾದಡೆ, ನೀತಿಯಲ್ಲಿ ಮರೆದಡೆ ಕೊಡನೊಡೆದ ಏತದ ಕಣೆಯಂತೆ, ಶರೀರದ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
ದ್ವಂದ್ವವು ಜೀವನ ಕಾಯಕ್ಕೆ ಒಂದಲ್ಲ ಅನಂತ ಆಸ್ಕರ. ಚಂದ್ರಾರ್ಕ ಹುಟ್ಟು ಹೊಂದು ಹೋಹುದು, ಬಪ್ಪುದು ; ಒಂದನೆ ತಿಳಿವುದು ಸದ್ಬಿಂದು ಬೀಜ ಸಹಜವ. ಮುಂದಣ ಸ್ಥಿತಿ ಹಿಂದಣ ಭವ. ಅಂದಿಗಂದಿಗೆ ಕಾಬುದು ಅಗಣಿತಗಣಿತ ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ವ್ರತವೆಂಬುದು ನಾಯಕರತ್ನ; ವ್ರತವೆಂಬುದು ಸುಪ್ಪಾಣಿಯ ಮುತ್ತು; ವ್ರತವೆಂಬುದು ಜೀವನ ಕಳೆದ; ವ್ರತವೆಂಬುದು ಸುಯಿದಾನ. ವ್ರತ ತಪ್ಪಲು, ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಶರೀರವೇ ಹೇಯದಮೊಟ್ಟೆ ದುರ್ಗಂಧವೇ ನೈಜ, ಸುಗಂಧವೆಲ್ಲಾ ಆರೋಪಿತವಲ್ಲದೆ ನಿಜವಲ್ಲವಾಗಿ ಹೇಯವೇ ನೈಜ. ಮನಸ್ಸೇ ದುಃಖದಮೊಟ್ಟೆ, ಆ ದುಃಖವೇ ನೈಜ, ಸುಖವೇ ಆರೋಪಿತ, ಶರೀರದಲ್ಲಿರ್ಪ ಹೇಯವು ಪ್ರಬಲಗಳಾದ ವ್ಯಾದ್ಥಿಪೀಡೆಗಳನನುಭವಿಸುತ್ತಿರಲು, ಅದೇ ಜೀವನಿಗಿಹಲೋಕದಯಾತನೆಯಾಯಿತ್ತು. ದುಃಖದಮೊಟ್ಟೆಯಾಗಿರ್ಪ ಮನಸ್ಸನ್ನು ದುರ್ಗುಣಂಗಳು ಬಂದು ಅನುಭವಿಸುತ್ತಿರಲ್ಲದೇ ಜೀವನಿಗೆ ಪರಲೋಕಮಾಯಿತ್ತು. ಇಂತಪ್ಪ ಶರೀರದಲ್ಲಿ ಬಿಂದುವನ್ನೂ ಮನದಲ್ಲಿ ನಾದವನ್ನೂ ಇಹಪರಕೃತ್ಯಂಗಳಿಗೆ ಸಾಧಕಭೂತಮಾಗಿ ಪರಮಾತ್ಮನಿಟ್ಟಿರ್ಪನು. ಅಂತಪ್ಪ ಬಿಂದುವೇ ಆನಂದಸ್ವರೂಪು, ನಾದವೇ ಜ್ಞಾನಸ್ವರೂಪು, ಆ ಆನಂದಬಿಂದುವು ಶರೀರಕ್ಕೆ ಕಾರಣಮಾಗಿಹುದು, ಈ ನಾದಬಿಂದುಗಳ ಉತ್ತರಮಾರ್ಗವೇ ಮನಶ್ಶರೀರಗಳಿಗೆ ಸುಖ, ನಿಜಪ್ರಕಟವಂ ಮಾಡುತ್ತಿರ್ಪುದು. ದಕ್ಷಿಣಮಾರ್ಗವೇ ದುಃಖ, ಮಿಥ್ಯಾಪ್ರಕಟವಂ ಮಾಡುತ್ತಿಹುದು. ಇವೆರಡರ ಸಂಬಂಧವಿಲ್ಲದ ವಸ್ತುವಿಗೆ ಕೋಟಲೆಗೊಂಡು ಕುದಿವುತ್ತಿರ್ಪ ಜೀವನ ಪರಿಯ ನೋಡಾ! ಜೀವನಿಗೆ ನಿಜವೇ ಭಾವ. ಆ ಭಾವದಲ್ಲಿರ್ಪುದು ಕಳಾಪದಾರ್ಥವು, ಆ ಕಳಾಮಯವಾಗಿರ್ಪುದು ಸತ್ಯವು. ಅಂತಪ್ಪ ಸತ್ಯವಂ ಹಿಡಿದು ಈ ಮಿಥ್ಯಾರೂಪಮಾದ ಸ್ಥೂಲ ಸೂಕ್ಷ್ಮಂಗಳಂ ಬಿಟ್ಟಲ್ಲಿ, ಜೀವನೇ ಪರಮನಪ್ಪನು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಜಲದಲ್ಲಿ ಹುಟ್ಟಿದ ಕೆಸರು ಕ್ಷೀರದಲ್ಲಿ ತೊಳೆದರೆ ಹೋಹುದೆ ? ಜಲದಲ್ಲಿ ತೊಳೆದಡಲ್ಲದೆ. ಜೀವನಲ್ಲಿ ಹುಟ್ಟಿದ ಪ್ರಪಂಚು ಪಾಪಂಗಳು ಬ್ರಹ್ಮದಂಡ ಪ್ರಾಯಶ್ಚಿತ್ತದಲ್ಲಿ ಹೋಹವೆ ? ಶಿವಸಂಸ್ಕಾರಿಯಾಗಿ `ಅಕ್ಷರೋ[s]ಸಿ ಎಂಬ ಮಂತ್ರದಿಂದ ಜೀವನ ಪಾಪವು ಜೀವನಲ್ಲಿಯೇ ಕಳೆವುದು ಜೀವಾತ್ಮಾ ಪರಮಾತ್ಮಾ ಚೇನ್ಮುಕ್ತಾನಾಂ ಪರಮಾ ಗತಿಃ ಅವ್ಯಯಃ ಪುರುಷಃ ಸರ್ವಕ್ಷೇತ್ರಜ್ಞೋ[s]ಕ್ಷಯ ಏವ ಚ ಎಂದುದಾಗಿ,_ ಇದು ಕಾರಣ ಕೂಡಲಚೆನ್ನಸಂಗಯ್ಯಾ. ನಿಮ್ಮ ಶರಣನ ಕಾಯವು ಸುಕ್ಷೇತ್ರವೆಂದೆನಿಸೂದು.
--------------
ಚನ್ನಬಸವಣ್ಣ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು. ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು. ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ? ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ? ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ]ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ
ಅಯ್ಯಾ, ಈ ಮಹಾಘನವ ಕಾಂಬುದಕ್ಕೆ ಹಸಿವು ಕೆಡಬೇಕು; ತೃಷೆಯಡಗಬೇಕು; ವ್ಯಸನ ನಿಲ್ಲಬೇಕು; ನಿದ್ರೆ ಹರಿಯಬೇಕು; ಜೀವನ ಬುದ್ಧಿ ಹಿಂಗಬೇಕು; ಮನ ಪವನ ಬಿಂದು ಒಡಗೂಡಬೇಕು; ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಉತ್ತರವನೇರಿ ಬೆಚ್ಚು ಬೇರಿಲ್ಲದೆ ಲಿಂಗದೊಳಗೆ ಅಚ್ಚೊತ್ತಿದಂತೆ ಬೆರೆದಡೆ, ಕತ್ತಲೆ ಹರಿವುದು, ಮರವೆ ಹಿಂಗುವುದು, ನಿದ್ರೆ ಹರಿವುದು, ಹಸಿವು ಕೆಡುವುದು, ತೃಷೆಯಡಗುವುದು, ವ್ಯಸನ ನಿಲುವುದು. ಇವೆಲ್ಲವನು ಹಿಂಗಿಸಿ ತಾ ಲಿಂಗವ್ಯಸನಿಯಾಗಬಲ್ಲಡೆ, ಮುಂದೆ ಮಹಾಮಂಗಳದ ಬೆಳಗು ಕಾಣಿಪುದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಂಗಕ್ಕೆ ಲಿಂಗವ ಕೊಟ್ಟವ ಆಚಾರ್ಯನಾದ. ಮನಕ್ಕರಿವ ತೋರಿದಾತ ಮೋಕ್ಷ ಆಚಾರ್ಯನಾದ. ಮೋಕ್ಷ ವಿಮೋಕ್ಷವಾಗಿ ಉಭಯದ ಗೊತ್ತ ತೋರಿ, ಕಾಯದ ಕರ್ಮವ ಕೆಡಿಸಿ, ಜೀವನ ಭವವ ಛೇದಿಸಿ, ತದ್ರೂಪ ತೋರಿದ ಜ್ಞಾನಗುರು. ಆತ ಪ್ರಕಾಶ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.
--------------
ಶಿವಲೆಂಕ ಮಂಚಣ್ಣ
ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ, ಸದ್ಗುರುವೆ ಎನ್ನ ಶಿವಾತ್ಮನ ಮಾಡಿದಿರಾಗಿ, ಆತ್ಮಶುದ್ಧಿಯಾಯಿತ್ತೆನಗೆ. ಪಂಚಭೂತಂಗಳಲಿ ಪಂಚಬ್ರಹ್ಮನನಿರಿಸಿದಿರಾಗಿ, ಭೂತಶುದ್ಧಿಯಾಯಿತ್ತೆನಗೆ. ಅಂಡಜ ಜರಾಯುಜಾದಿ ಎಂಬತ್ತುನಾಲ್ಕುಲಕ್ಷ ಯೋನಿಯಲ್ಲಿ ಬಹ ಜೀವನ ಅಯೋನಿಜನ ಮಾಡಿದಿರಾಗಿ ಜೀವಶುದ್ಧಿಯಾಯಿತ್ತೆನಗೆ. ಅಂಗಾಶ್ರಯವ ಕಳೆದು ಲಿಂಗಾಶ್ರಯವ ಮಾಡಿದಿರಾಗಿ ಮನಶ್ಶುದ್ಧಿಯಾಯಿತ್ತೆನಗೆ. ಪಶುವೆಂಬ ಅಜ್ಞಾನದ್ರವ್ಯವ ಕಳೆದು ಪರಮಸುಜ್ಞಾನದ್ರವ್ಯವ ಮಾಡಿದಿರಾಗಿ ದ್ರವ್ಯಶುದ್ಧಿಯಾಯಿತ್ತೆನಗೆ. ಇಂತು ಸರ್ವಶುದ್ಧನಂ ಮಾಡಿ ಪೂರ್ವಾಶ್ರಯವ ಕಳೆದಿರಾಗಿ ಕೂಡಲಚೆನ್ನಸಂಗಾ, ನಿಮ್ಮುವ `ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ : ಎನುತಿರ್ದೆನು.
--------------
ಚನ್ನಬಸವಣ್ಣ
ಪ್ರಥಮದಲ್ಲಿ ವಸ್ತು ಅನಿರ್ವಾಚ್ಯವಾಗಿದ್ದಿತ್ತು. ಆ ಅನಿರ್ವಾಚ್ಯವಾಗಿದ್ದ ಪರವಸ್ತು ತನ್ನ ಲೀಲೆಯಿಂದ ತಾನೇ ಪರಬ್ರಹ್ಮವೆಂಬ ನಾಮವಾಯಿತ್ತು ! ಆ ನಾಮವನೆಯ್ದಿ ಕುಳವಾಯಿತ್ತು, ಆ ಕುಳದಿಂದ ಆತ್ಮನೆಂಬ ಲಿಂಗಸ್ಥಲವಾಯಿತ್ತು. ಆ ಸ್ಥಳ ಕುಳದೊಳಗೆಯ್ದಿ ಸ್ಥಳಕುಳವೆಂಬ ಎರಡಿಲ್ಲದೆ ನಿಂದಿತ್ತು. ಅದೆಂತೆಂದಡೆ: ವಾಙ್ಮನಕ್ಕಗೋಚರವಾದ ಪ್ರರಬ್ರಹ್ಮದಿಂದಾಯಿತ್ತು ಭಾವ, ಭಾವದಿಂದಾಯಿತ್ತು ಜ್ಞಾನ, ಜ್ಞಾನದಿಂದಾಯಿತ್ತು ಮನ, ಮನದಿಂದಾಯಿತ್ತು ಬುದ್ಧಿ, ಬುದ್ಧಿಯಿಂದಾಯಿತ್ತು ಚಿತ್ತ, ಚಿತ್ತದಿಂದಾಯಿತ್ತು ಅಹಂಕಾರ. ಇಂತು_ಅಹಂಕಾರ ಚಿತ್ತ ಬುದ್ಧಿ ಮನ ಜ್ಞಾನ ಭಾವ ಎಂದು ಆರಾದವು. ಈ ಆರೂ ಕೆಟ್ಟಲ್ಲದೆ ವಾಙ್ಮನಕ್ಕಗೋಚರವಾದ ಪರಬ್ರಹ್ಮವಾಗಬಾರದು. ಇದ ಕೆಡಿಸುವುದಕ್ಕೆ ಆರು ಸ್ಥಲವಾದವು. ಅವಾವೆಂದಡೆ: ಅಹಂಕಾರ ಅಡಗಿದಾಗ ಭಕ್ತಸ್ಥಲ, ಚಿತ್ತದ ಗುಣ ಕೆಟ್ಟಾಗ ಮಾಹೇಶ್ವರಸ್ಥಲ ಬುದ್ಧಿಯ ಗುಣ ಕೆಟ್ಟಾಗ ಪ್ರಸಾದಿಸ್ಥಲ, ಮನೋಗುಣ ಅಳಿದಾಗ ಪ್ರಾಣಲಿಂಗಸ್ಥಲ, ಜೀವನ ಗುಣ ಸಂದಾಗ ಶರಣ ಸ್ಥಲ ಭಾವ ನಿರ್ಭಾವವಾದಾಗ ಐಕ್ಯಸ್ಥಲ. ಇಂತು ಷಟ್ಸ್ಥಲವಾಗಿ ವಾಙ್ಮನಕ್ಕೆ ಅಗೋಚರವಾದ ಬ್ರಹ್ಮವೆ ಆತ್ಮನು. ಆ ಆತ್ಮನಿಂದ ಆಕಾಶ ಹುಟ್ಟಿತ್ತು, ಆ ಆಕಾಶದಿಂದ ವಾಯು ಹುಟ್ಟಿತ್ತು. ಆ ವಾಯುವಿನಿಂದ ಅಗ್ನಿ ಹುಟ್ಟಿತ್ತು, ಆ ಅಗ್ನಿಯಿಂದ ಅಪ್ಪು ಹುಟ್ಟಿತ್ತು. ಆ ಅಪ್ಪುವಿನಿಂದ ಪೃಥ್ವಿ ಹುಟ್ಟಿತ್ತು. ಇಂತು_ಕುಳಸ್ಥಳವಾಗಿ ಸ್ಥಳಕುಳವಾದ ವಿವರವೆಂತೆಂದಡೆ: ಪೃಥ್ವಿ ಅಪ್ಪುವಿನೊಳಡಗಿ, ಅಪ್ಪು ಅಗ್ನಿಯೊಳಡಗಿ, ಅಗ್ನಿ ವಾಯುವಿನೊಳಡಗಿ, ವಾಯು ಆಕಾಶದೊಳಡಗಿ, ಆಕಾಶ ಆತ್ಮನೊಳಡಗಿತ್ತು, ಆತ್ಮ ಪರಶಿವನಲ್ಲಿ ಅಡಗಿತ್ತು ! ಇಂತು_ಷಡಂಗವಡಗಿದ ಪರಿ ಎಂತೆಂದಡೆ: ``ಪೃಥ್ವೀ ಭವೇತ್ ಜಲೇ, ಜಲೇ ಮಗ್ನಾಜಲಂ ಗ್ರಸ್ತಂ ಮಹಾಗ್ನಿನಾ ವಾಯೋರಸ್ತಮಿತಂ ತೇಜೋ ವ್ಯೋಮ್ನಿ ವಾತೋ ವಿಲೀಯತೇ ವ್ಯೋಮ್ಯೋತ್ಮನಿ ವಿಲೀನಂ ಸ್ಯಾತ್ ಆತ್ಮಾ ಪರಶಿವೇ ಪದೇ'' _ ಎಂದುದಾಗಿ ಆತ್ಮನು ಪರಬ್ರಹ್ಮದೊಳಡಗಿ ನಿಂದಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->