ಅಥವಾ

ಒಟ್ಟು 44 ಕಡೆಗಳಲ್ಲಿ , 10 ವಚನಕಾರರು , 27 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶಬ್ದಮಧ್ಯದಲ್ಲಿರ್ಪ ಅರ್ಥವೇ ಜೀವನು, ತಮೋರೂಪಮಾಗಿಹನು. ಜ್ಞಾನಮಧ್ಯದಲ್ಲಿರ್ಪ ಅರ್ಥವೇ ಪರಮನು, ಸತ್ವರೂಪಮಾಗಿಹನು. ಜ್ಞಾನಶರೀರದಲ್ಲಿರ್ಪ ಪರಮಾರ್ಥಭಾವವೆಂಬ ಹಸ್ತದಲ್ಲಿ ಬುದ್ಧಿಯೆಂಬ ತ್ರಿಗುಣಾತ್ಮಕಮಪ್ಪ ಮುನ್ಮೊನೆಯಲಗಂ ಪಿಡಿದು, ಆ ಶಬ್ದಶರೀರಂ ಭೇದಿಸಿ, ತನ್ಮಧ್ಯದಲ್ಲಿರ್ಪ ಅರ್ಥವನ್ನು ಆ ಜ್ಞಾನವು ಗ್ರಹಿಸಿದಲ್ಲಿ, ಜ್ಞಾನಾರ್ಥದೊಳಗೆ ಬೆರೆದು, ಎರಡೂ ಒಂದಾಗಿ, ಆ ಅರ್ಥವೇ ಸತ್ಯವಾಗಿ ಆನಂದಮಯಮಪ್ಪುದು. ಜ್ಞಾನವು ಗ್ರಹಿಸದೇ ಬಿಟ್ಟರೆ ಶಬ್ಧಾರ್ಥವೇ ದುರರ್ಥವಾಗಿ, ಸೃಷ್ಟಿಸ್ಥತಿಸಂಹಾತಂಗಳಲ್ಲಿ ಕೋಟಲೆಗೊಳ್ಳುತ್ತಿರ್ಪುದೇ ಜೀವನು, ಅದೇ ಪರಮನು. ತತ್ಪರಿಗ್ರಹವೇ ಐಕ್ಯಮಾದಲ್ಲಿ ಎರಡೂ ಒಂದೇ ಆಗಿರ್ಪುದೇ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯ - ಇಂತೀ ದಶವಾಯುಗಳು. ಅಲ್ಲಿ ಪ್ರಾಣವಾಯು ಇಂದ್ರನೀಲವರ್ಣ ಕಂಡದ ಅಧೋ ಭಾಗೆಯಲ್ಲಿರ್ದ ಹೃದಯ ಪಾದ ನಾಬ್ಥಿ ನಾಶಿಕವಧರಂಗಳಲ್ಲಿ ಉಚ್ಛಾ ್ವಸ ನಿಶ್ವಾಸಂಗಳಿಂದ ಚರಿಸುತ್ತಿಹುದು. ಅಪಾನವಾಯು ಇಂದ್ರಗೋಪವರ್ಣ, ವಾಯು ಶಿಶ್ನ ಉರ ಜಾನು ಪಾದ ಜಂಘೆ ನಾಬ್ಥಿಮೂಲ ಜಠರದಲ್ಲಿರ್ದು ಮಲ ಮೂತ್ರಂಗಳ ಪೊರಮಡಿಸುತ್ತಿಹುದು. ವ್ಯಾನವಾಯು ಗೋಕ್ಷೀರವರ್ಣ, ಕರ್ಣ ಅಕ್ಷಿ ಘ್ರಾಣ ಗಂಡಾಗ್ರ ಗುಲ್ಫಂಗಳಲ್ಲಿ ವರ್ತಿಸುತ್ತ ಹಿಡಿವುದು ಬಿಡುವುದು ಇವು ಮೊದಲಾದ ವ್ಯಾಪಾರಂಗಳ ಮಾಡುತ್ತಿಹುದು. ಉದಾನವಾಯು ಎಳೆಮಿಂಚಿನವರ್ಣ, ಹಸ್ತಪಾದಾ ಸರ್ವಸಂದುಗಳಲ್ಲಿರ್ದು ಸಂದು ಸಂದುಗಳಿಗೆ ಪಟುತ್ವಮಂ ಪುಟ್ಟಿಸುತ್ತಿಹುದು. ಸಮಾನವಾಯು ಶುದ್ಧ ಸ್ಫಟಿಕವರ್ಣ, ದೇಹ ಮಧ್ಯದಲ್ಲಿರ್ದು ಸರ್ವ ಸಂದುಗಳಲ್ಲಿ ವ್ಯಾಪಿಸಿಕೊಂಡು, ಕೊಂಡಂತಹ ಅನ್ನರಸವ ಸರ್ವಾಂಗಕ್ಕೆ ಸಮಾನವಂ ಮಾಡಿ ಅಷ್ಟಕೋಟಿ ರೋಮನಾಳಂಗಳಿಗೂ ಹಂಚಿಕ್ಕಿ ಅಂಗವಂ ಪೋಷಿಸುತ್ತಿಹುದು. ನಾಗವಾಯು ಬಾಲಸೂರ್ಯನ ವರ್ಣ, ಕಂಠಸ್ಥಾನದ್ಲರ್ದು ವದ್ರ್ಥಿ ನಿರೋಧಂಗಳಿಂದುದ್ಗಾರಮಂ ಮಾಡಿಸುತ್ತಿಹುದು. ಕೂರ್ಮವಾಯು ಕುಂದೇಂದುವಿನ ವರ್ಣ, ನೇತ್ರಮೂಲದಲ್ಲಿರ್ದು ಉನ್ಮೀಲನ ನಿಮೀಲನಾಡಿಗಳನು ಮಾಡುತ್ತಿಹುದು. ಕೃಕರವಾಯು ನೀಲವರ್ಣ ಕಾಯದಲ್ಲಿರ್ದು ಕ್ಷುಧಾ ಧರ್ಮಂಗಳಂ ಮಾಡುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ, ತಾಳಮೂಲದಲ್ಲಿರ್ದು ಅಗುಳಿಕೆಯಾರಡಿಗಳಂ ಪುಟ್ಟಿಸ್ಕ್ತುಹುದು. ಧನಂಜಯವಾಯು ಸಪ್ತ ಜಾಂಬೂನದ ವರ್ಣ, ಶೋಕರಾಗಂಗಳ ಪುಟ್ಟಿಸಿ ಹಾಡಿಸ್ಕ್ತುಹುದು. ಇಂತೀ ದಶವಾಯುಗಳ ದೇಹವನುದ್ಧರಿಸುತ್ತಿಹವು. ಈ ವಾಯುವನೇರಿ ಜೀವನು ಈಡಾಪಿಂಗಳ ಮಾರ್ಗದಲ್ಲಿ ವ್ಯವಹರಿಸುತ್ತಿಹನು. ಈ ವಾಯುಗ್ಕಯನರಿದು ಯೋಗಿಸುವುದೇ ಯೋಗ. ಕಪಿಲಸಿದ್ಧಮಲ್ಲಿಕಾರ್ಜುನನೆಂಬ ನಿಜವನೈದುವದೇ ಮಾರ್ಗವು
--------------
ಸಿದ್ಧರಾಮೇಶ್ವರ
ಸತ್ಯವೇ ಪರಮನು, ಜ್ಞಾನನವೇ ಜೀವನು, ಆನಂದವೇ ಶರೀರವು. ಅದೆಂತೆಂದೊಡೆ: ಶರೀರಾದಿ ಸಕಲಪ್ರಪಂಚಕ್ಕೂ ಜ್ಞಾನವೇ ಮೂಲವಾಗಿರ್ಪುದು. ಆನಂದಮುಖದೊಳ್ ಬಿಂದು ಜನಿಸಿ, ಆ ಬಿಂದುವೇ ಪೃಥ್ವೀರೂಪದಲ್ಲಿ ಘನೀಭವಿಸಿ, ಪಿಂಡಾಕಾರಮಾಗಿ ಶರೀರಮಪ್ಪಂತೆ, ಜ್ಞಾನಮುಖದಲ್ಲಿ ವಾಯುವು ಜನಿಸಿ, ತೇಜೋರೂಪದಲ್ಲಿ ಘನೀಭವಿಸಿ, ಜೀವನಾರ್ಪುದು. ನಿಜದಲ್ಲಾತ್ಮನು ಜನಿಸಿ, ಆಕಾಶರೂಪದಲ್ಲಿ ಘನೀಭವಿಸಿ ಪರಮನಾಗಿರ್ಪನು. ಆನಂದಬಿಂದುಮುಖದಿಂದ ಅಹಂಕಾರವು ಜನಿಸಿ, ಜ್ಞಾನವಾಯುಗಳ ಸಂಗದಿಂ ಮನವು ಪುಟ್ಟಿತ್ತು. ನಿಜಾತ್ಮಗಳ ಸಂಗದಿಂ ಭಾವವು ಹುಟ್ಟಿತ್ತು. ತತ್ಸಾಧ್ಯಕ್ಕವೇ ಸಾಧನಗಳಾಗಿರ್ಪುದರಿಂ ಇವೇ ಕರಣಂಗಳಾಗಿ, ಅವೇ ಕರಣಂಗಳಾಗಿರ್ಪವು. ಪೃಥ್ವವೀಬೀಜಗಳಸಂಗದಿಂದ ಬೀಜಮಧ್ಯದಲ್ಲಿ ವೃಕ್ಷವು ಜನಿಸಿತ್ತು. ವೃಕ್ಷವು ಬಲಿದಲ್ಲಿ ಬೀಜವು ನಷ್ಟಮಾಗಿ, ತದಗ್ರದಲ್ಲಿರ್ಪ ಫಲಮಧ್ಯದಲ್ಲಿ ಅನೇಕಮುಖಮಾಗಿ ತೋರುತ್ತರ್ಪಂತೆ, ಜ್ಞಾನವಾಯುಗಳಸಂಗದಿಂ ಜ್ಞಾನಮಧ್ಯದಲ್ಲಿ ಮನಸ್ಸು ಹುಟ್ಟಿ, ಅದು ಬಲಿದಲ್ಲಿ. ಆ ಮೂಲಜ್ಞಾನವಳಿದು, ತತ್ಫಲರೂಪಮಾದ ಇಂದ್ರಿಯಮಧ್ಯದಲ್ಲಿ ತೋರುತ್ತಿರ್ಪುದು. ಜಲವು ಆ ಬೀಜವಂ ಭೇದಿಸಿ, ತನ್ಮಧ್ಯದಲ್ಲಿ ವೃಕ್ಷವಂ ನಿರ್ಮಿಸುವಂತೆ, ಮನಸ್ಸೇ ಜಾಗ್ರತ್ಸ್ವರೂಪದಲ್ಲಿ ಜ್ಞಾನಬ್ಥಿನ್ನವಂ ಮಾಡಿ, ತನ್ಮಧ್ಯದಲ್ಲಾನಂದವಂ ನಿರ್ಮಿಸುತ್ತಿರ್ಪುದು. ಆನಂದವೂ ನಿರಾಕಾರವೂ ಬಿಂದುವು ಸಾಕಾರವೂ ಆದುದರಿಂದ ಆನಂದವಂ ಬಿಂದುವು ಬಂದ್ಥಿಸಿರ್ಪಂತೆ, ವಾಯುವು ಜ್ಞಾನವಂ ಬಂದ್ಥಿಸಿರ್ಪುದು. ಆನಂದವು ಜ್ಞಾನದೊಳ್ಬೆರೆದಲ್ಲಿ ಶರೀರವು ಜೀವನಳೈಕ್ಯಮಾಯಿತ್ತು. ಆ ಜ್ಞಾನವು ನಿಜದೊಳ್ಬೆರೆದಲ್ಲಿಜೀವನು ಪರಮನೊಳೈಕ್ಯಮಾಯಿತ್ತು. ನಿಜಾನಂದ ಶಿವಶಕ್ತಿಗಳೇಕಮಾದಲ್ಲಿ ಜ್ಞಾನವದೊರಲಗೆ ಬೆರೆದು, ಭೇದವಡಗಿ ಅವರೆಡರ ಸಂಯೋಗ ವಿಯೋಗಕ್ಕೆ ತಾನೇ ಕಾರಣಮಾಗಿ, ನಿಜಾನಂದವೇ ತೋರುತ್ತಾ, ತಾನೊಪ್ಪುತ್ತಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಘ್ರಾಣಜಿಹ್ವಾತ್ವಕ್ಫ್ರೋತ್ರಮಾನಸಾದಿ ವಿಷಯೇಂದ್ರಿಗಳಲ್ಲಿ ಪೃಥ್ವಿವ್ಯಪ್ತೇಜೋವಾಯ್ವಾಕಾಶಾತ್ಮಾದಿ ಷಡ್ಭೂತಂಗಳು ವಿಪರೀತಸಂಬಂಧಂಗಳಾಗಿ ತೋರುತ್ತಿರ್ಪವೆಂತೆಂದೊಡೆ: ಮನಸ್ಸಿನ ವಿಷಯದಲ್ಲಿ ಪೃಥ್ವಿಯು ಸೃಷ್ಟಿಕಾರಣಮಾಗಿಹುದು. ಶ್ರೋತ್ರವಿಷಯದಲ್ಲಿ ಜಲವು ಸಂರಕ್ಷಣಕಾರಣಮಾಗಿ ಶುಚಿಯಾಗಿಹುದು. ತ್ವಗ್ವಿಷಯದಲ್ಲಗ್ನಿಯು ಸಂಹಾರಕಾರಣಮಾಗಿಹುದು. ನೇತ್ರವಿಷಯದಲ್ಲಿ ವಾಯುವು ಚಂಚಲಕಾರಣಮಾಗಿಹುದು. ಜಿಹ್ವಾವಿಷಯದಲ್ಲಾಕಾಶವು ಶಬ್ದಕಾರಣಮಾಗಿಹುದು. ನಾಸಿಕ ವಿಷಯದಲ್ಲಾತ್ಮನು ಚೈತನ್ಯಕಾರಣಮಾಗಿಹನು. ವಾಯುವಿನೊಳಗೆ ಬೆರೆದ ಆತ್ಮನೇ ಜೀವನು ; ಆತ್ಮನೊಳಗೆ ಬೆರೆದ ವಾಯುವೆ ಮನಸ್ಸು. ಪಂಚಭೂತರೂಪಮಾದ ಶರೀರಕ್ಕೆ ಜೀವನು ಕರ್ತನಾದಂದದಿ ಪಂಚಭೂತಗುಣಗ್ರಾಹಿಗಳಾದ ಇಂದ್ರಿಯಂಗಳಿಗೆ ಮನಸ್ಸೇ ಕರ್ತೃವಾಗಿ, ಆ ಇಂದ್ರಿಯಂಗಳು ಹೋದಲ್ಲಿಗೆ ಶರೀರವು ಹೋಗುವಂದದಿ, ಆ ಮನಸ್ಸೇ ಜೀವನಾಗಿ, ಆ ಮನಸ್ಸು ಹೋದಲ್ಲಿಗೆ ಜೀವನು ಹೋಗುತ್ತಿಹನು. ಅಂತಪ್ಪ ನಿಜಸ್ವರೂಪಮಾದ ಪರಮಾತ್ಮನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆದಿ-ಅನಾದಿ, ಸಾಕಾರ-ನಿರಾಕಾರ ಎಂಬುವೇನುವಿಲ್ಲದ ವಾಗತೀತವಾದ ನಿರ್ನಾಮವಸ್ತು ತಾನೆ ! ತನ್ನ ಲೀಲಾವಿಲಾಸದಿಂದಾದ ಪ್ರಭಾವದ ಸ್ಫುರಣವೆ ಮಹಾಪ್ರಕಾಶ. ಆ ಮಹಾಪ್ರಕಾಶದ ಆವರಣವೆ ನಿಜಾತ್ಮನು. ಆ ನಿಜಾತ್ಮನೆ ತನ್ನಿಂದಾದ ಸಮಸ್ತವಸ್ತುಗಳೆನಿಪ ತತ್ವಂಗಳಿಗೆ ತಾನೇ ಕಾರಣವಾದ. ಇದನರಿಯದೆ ಆತ್ಮಂಗೆ ಅನಾದಿಮಲತನುತ್ವ ಪಾಶಬಂಧ ಉಂಟೆಂಬರು, ಅದು ಹುಸಿ. ಆ ಆತ್ಮನು ತನ್ನಿಂದ ಪ್ರವರ್ತಿಸುವ ಮಹದಾದಿ ತತ್ತ್ವಂಗಳಿಗೆ ತಾನೇ ಮೂಲಾಧಾರವಾದ ಕಾರಣ ಮೂಲಪ್ರಕೃತಿಸ್ವರೂಪವೆನಿಸಿಕೊಂಬನು. ಆ ನಿಜಾತ್ಮನಲ್ಲಿ ಅನಾದಿಮಲಪಾಶಂಗಳು ಸತ್ಯವಲ್ಲ. ಇದು ಕಾರಣ ಆ ಆತ್ಮನು ಮೇಲಣ ಘನಲಿಂಗವಾದುದು ತಾನೆ, ಲಯಿಸುವುದಕ್ಕೂ ಗಮಿಸುವುದಕ್ಕೂ ತಾನೆ. ತಾನಾ ಕಾರಣನಾದನಾಗಿ ಪ್ರತಿಪದಾರ್ಥವಿಲ್ಲ. ಅದೆಂತೆಂದಡೆ: ಪರಾತ್ಪರತರವಪ್ಪ ಪರಬ್ರಹ್ಮಕ್ಕೆ ಬೆಚ್ಚಿ ಬೇರಾಗದ ಕಾರಣ. ಅದು ದೀಪ ದೀಪದ ಪ್ರಭೆಯಂತೆ, ರತ್ನ ರತ್ನದ ಕಾಂತಿಯಂತೆ ಆತ್ಮಲಿಂಗೈಕ್ಯ. ಇಂತೀ ಸಹಜಸೃಷ್ಟಿಯನರಿಯದೆ ``ಅನಾದಿ ಆತ್ಮಂಗೆ ಪಾಶಂಗಳುಂಟು, ಆತ್ಮ ಪಶು ಪಾಶ ಮಾಯೆ ಪತಿ ಶಿವ`` ಎಂಬರು ! ಇಂತೀ ತೆರದಲ್ಲಿ ತ್ರಿಪಾದರ್ಥಗಳ ಹೇಳುವರು ! ಅದು ಹುಸಿ. ಸೃಷ್ಟಿ ಮೊದಲು ಐಕ್ಯ ಕಡೆಯಾಗಿ ಅಭೇದವಲ್ಲದೆ ಭೇದವಿಲ್ಲ. ಇನ್ನು ಅದ್ವೈತಮತದಲ್ಲಿ ವೇದಾಂತಿಯೆಂಬಾತ ನಿಜ ಸೃಷ್ಟಿಯರಿಯ. ಅದೆಂತೆಂದಡೆ: `ಶಕ್ತ್ಯಧೀನಂ ಪ್ರಪಂಚಶ್ಚ' ಎಂಬ ಶ್ರುತಿಯನರಿದು ! ಆ ಶಕ್ತಿಯ ಆಧಾರದಲ್ಲಿ ತೋರುವ ತತ್ತ್ವಂಗಳ ಪ್ರವರ್ತನೆ ವಿಶ್ವವೆನಿಸುವದು. ಅದನರಿಯದೆ ವೇದಾಂತಿ ದಗ್ದೈಶ್ಯವೆಂಬ, ದೃಕ್ಕೆ ವಸ್ತುವೆನಿಪಾತ್ಮನೆಂಬ, ದೃಶ್ಯವೆ ಮಾಯೆಯೆಂಬ ! ಅದು ಹುಸಿ; ಆ ಶಕ್ತಿಯ ಆಧಾರದಲ್ಲಿ ತೋರುವ ವಿಶ್ವಪ್ರಪಂಚವು. ಆ ಪ್ರಪಂಚದ ಮಧ್ಯದಲ್ಲಿ ತೋರುವ ಶಕ್ತಿಯ ಕ್ರಮವೆಂತೆಂದಡೆ: ಜಲಮಧ್ಯದಲ್ಲಿ ತೋರುವ ಇನಬಿಂಬದಂತೆ ಬಿಂಬಿಸುವುದಾಗಿ ! ಆ ಬಿಂಬವೇ ಜೀವನು, ಆ ಜೀವನೆ ದೃಕ್ಕು, ಅವನ ಕೈಯಲ್ಲಿ ಕಾಣಿಸಿಕೊಂಬ ವಿಷಯವೆ ಮಾಯೆ. ಈ ಎರಡರ ವ್ಯವಹಾರ ಆ ಶಕ್ತಿಗೆ ಇಲ್ಲವಾಗಿ, ದೃಕ್ಕುದೃಶ್ಯವೆಂಬ ವೇದಾಂತಿಯ ಮತವಂತಿರಲಿ. ಇಂತೀ ದ್ವೈತಾದ್ವೈತದಲ್ಲಿ ಪ್ರವರ್ತಿಸರು ಶಿವಶರಣರು. ಈ ದ್ವೈತಾದ್ವೈತದಲ್ಲಿ ಪ್ರವರ್ತಿಸುವ ಪ್ರವರ್ತನಕ್ಕೆ ತಾವೆ ಕಾರಣವೆನಿಪ್ಪರು. ಇಂತೀ ಕಾರಣವೆನಿಸಿರ್ಪ ಶರಣರ ನಿಲವೆಂತುಂಟೆಂದಡೆ: ಸಕಲವಿಶ್ವವೆ ಸತಿಯರೆನಿಸಿ ತಾನು ತನ್ನ ನಿಜಕ್ಕೆ ಅಂಗನಾಗಿ, ಆ ನಿಜವೆ ಆತ್ಮಂಗೆ ಅಂಗವಾಗಿ ನಿಂದ ನಿಲವೆ ಪರವಸ್ತುವಿನ ಪ್ರಭಾವ. ಆ ಪ್ರಭಾವಾದ ಶರಣನ ನಿಲುವೆ ಉರಿಲಿಂಗದೇವನೆಂಬ ಗಂಡನಾಗಿ ಬಂಧ ತೆಗೆದ.
--------------
ಉರಿಲಿಂಗದೇವ
ಆಧಾರದಲ್ಲಿ ಆಚಾರಲಿಂಗಕ್ಕೆ ಗೃಹಸ್ಥದಳವೇ ಸ್ಥಾನವು, ಸ್ವಾಧಿಷಾ*ನದಲ್ಲಿ ಗುರುಲಿಂಗಕ್ಕೆ ಅಧ್ಯಾಪನದಳವೇ ಸ್ಥಾನವು, ಮಣಿಪೂರಕದಲ್ಲಿ ಶಿವಲಿಂಗಕ್ಕೆ ನೇತ್ರದಳವೇ ಸ್ಥಾನವು. ಇದು ರೂಪನಿಷ*ಮಾಗಿರ್ಪುದರಿಂ ಅಂತಪ್ಪ ರೂಪವೇ ಸದ್ರೂಪಮಾದ ಶಕ್ತಿಯು, ಅಂತಪ್ಪ ಸದ್ರೂಪಸಂಸರ್ಗದಿಂ ತಮೋಮಧ್ಯದಲ್ಲಿದ್ದು ಗ್ರಹಿಸುವುದರಿಂ ನೇತ್ರಮಧ್ಯದಲ್ಲಿರ್ಪ ನೀಲಿಮಕ್ಕೆ ತಾರಕವೆಂದು ಹೆಸರು, ಅದೇ ಶಿವನಿರುವ ಸ್ಥಾನಮಾದುದರಿಂ ನೇತ್ರೇಂದ್ರಿಯವೇ ಪ್ರಧಾನಮಾಯಿತ್ತು. ಆ ಈಶ್ವರನ ನಿಜಸ್ಥಾನವೇ ತಾರಕವು. ಅನಾಹತದಲ್ಲಿ ಜಂಗಮಲಿಂಗಕ್ಕೆ ತನುದಳವೇ ಸ್ಥಾನವು, ವಿಶುದ್ಧದಲ್ಲಿ ಪ್ರಸಾದಲಿಂಗಕ್ಕೆ ಪ್ರಮಾಣದಳವೇ ಸ್ಥಾನವು, ಆಜ್ಞೇಯದಲ್ಲಿ ಮಹಾಲಿಂಗಕ್ಕೆ ಪ್ರಾಣದಳವೇ ಸ್ಥಾನವು. ಪ್ರಾಣದಲ್ಲಿ ಹಂಕಾರವೇ ಬೀಜವು, ಪ್ರಮಾಣದಲ್ಲಿ ಅಕಾರವೇ ಬೀಜವು, ತನುವಿನಲ್ಲಿ ಕಕಾರವೇ ಬೀಜವು, ನೇತ್ರದಲ್ಲಿ `ಣ'ಕಾರವೇ ಬೀಜವು, ಅಧ್ಯಾಪನದಲ್ಲಿ ಯಕಾರವೇ ಬೀಜವು, ಗೃಹಸ್ಥದಲ್ಲಿ ವಕಾರವೇ ಬೀಜವು. ವಿಶುದ್ಧಾಜ್ಞೇಯಗಳಲ್ಲಿರ್ಪ `ಅಹಂ'ಕಾರಗಳೇ ಕಾರಣ, ಅದು ವಿಪರೀತಿಸಿ ಅನಾಹತಮಣಿಪೂರಕಗಳಲ್ಲಿರ್ಪ `ಕಣ'ವೇ ಸೂಕ್ಷ್ಮ, ಸ್ವಾಧಿಷಾ*ನಾಧಾರಗಳಲ್ಲಿರ್ಪ `ಯಶ'ವೇ ಸ್ಥೂಲ. ಕಾರಣರೂಪಮಾದ `ಅಹಂ'ಕಾರವೇ ಜೀವನು, ಶೋಭನರೂಪಮಾಗಿ ಅವಧಿಯಿಲ್ಲದೆ ಗಮಿಸುತ್ತಿರ್ಪ `ಕಣ'ವೇ ಬಿಂದು, ಗೃಹಸ್ಥಸ್ಥಾನದಲ್ಲಿ ಆಚಾರಮುಖದಲ್ಲಿ ದೊಡ್ಡಿತ್ತಾಗಿಹುದೇ ಯಶ, ಮಹದ್ಬೀಜವೇ ಪ್ರಾಣ, ಅದಕ್ಕೆ ಪ್ರಾಣವೇ ತನು, ಆ ತನುವಿಗೆ ನೇತ್ರವೇ ಪ್ರಧಾನ, ಅದಕ್ಕುಪದೇಶವೇ ಪರಿಶುದ್ಧಿ, ಗೃಹಸ್ಥಧರ್ಮವೇ ಆ ಶರೀರಕ್ಕೆ ಪ್ರಕಾಶವು. ಅಹಂಕಾರರೂಪಮಾದ ಜೀವನಿಗೆ ಇಷ್ಟರೂಪಮಾದ `ಕ್ಷ' ಕಾರವೇ ಸಂಹಾರ, ಆ `ಹ'ಕಾರರೂಪಮಾದ ಪ್ರಾಣಕ್ಕೆ ವಿಸರ್ಗರೂಪಮಾದ ನಿಗ್ರಹಸ್ಥಾನವೇ ಸಂಹಾರ, `ಶ'ಕಾರರೂಪಮಾದ ತನುವಿಗೆ `ಠ'ಕಾರರೂಪಮಾದ ವ್ಯಯವೇ ಸಂಹಾರ, `ಣ'ಕಾರರೂಪಮಾದ ನೇತ್ರಕ್ಕೆ `ಪ'ಕಾರರೂಪಮಾದ ಗೋಪ್ಯವೇ ಸಂಹಾರ, `ಯ'ಕಾರರೂಪಮಾದ ಅಧ್ಯಾಪನೆಗೆ `ಲ'ಕಾರರೂಪಮಾದ ಪರಿಗ್ರಹವೇ ಸಂಹಾರ, `ಶ'ಕಾರರೂಪಮಾದ ಗೃಹಸ್ಥಕ್ಕೆ `ಸ'ಕಾರರೂಪಮಾದ ಸಂನ್ಯಾಸವೇ ಸಂಹಾರ. ಅಂತಪ್ಪ ಸಂನ್ಯಾಸವೇ ತೂರ್ಯ, ಅಂತಪ್ಪ ತೂರ್ಯದಲ್ಲಿ ಜೀವನ್ಮುಕ್ತಿಯಪ್ಪ ಸುಖವನೆನಗಿತ್ತು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ವಾಚಾತೀತವೂ ಮನೋತೀತವೂ ಭಾವಾತೀತವೂ ಆದ ಮಹಾಲಿಂಗವು ಸತ್ಯಜ್ಞಾನಾನಂದ ಸ್ವರೂಪಮಾದಲ್ಲಿ, ಸತ್ಯವೇ ಭಕ್ತ, ಜ್ಞಾನವೇ ಗುರು, ಆನಂದವೇ ಜಂಗಮಸ್ವರೂಪವಾಗಿ ನಟಿಸುತಿರ್ಪ ಮಹಾಲಿಂಗವು ತನ್ನ ಲೀಲೆಗೋಸುಗ ಆನಂದವನ್ನು ಮರೆವಿಡಿದು, ಅದರಲ್ಲಿಯೇ ದುಃಖಸ್ವರೂಪಮಾಗಿ ಮಹಾರುದ್ರನಂ ಸೃಜಿಸಿ, ಜ್ಞಾನಮಂ ಮರೆವಿಡಿದು, ಅದರಲ್ಲಿಯೇ ಅಜ್ಞಾನವೆಂಬ ವಿಷ್ಣುವಂ ಕಲ್ಪಸಿ, ಸತ್ಯವಂ ಮರೆವಿಡಿದು, ಅದರಲ್ಲಿ ಮಿಥ್ಯೆಯೆಂಬ ಬ್ರಹ್ಮನು ಕಲ್ಪಿಸಲು, ಸರ್ಗಸ್ಥಿತಿ ಸಂಹಾರಂಗಳಿಗಿದೇ ಕಾರಣಮಾಗಿ, ಆ ರುದ್ರನಲ್ಲಿ ಜಾಗ್ರವೂ, ವಿಷ್ಣುವಿನಲ್ಲಿ ಸುಷುಪ್ತಿಯೂ, ಬ್ರಹ್ಮನಲ್ಲಿ ಸ್ವಪ್ನವೂ ಉತ್ಪನ್ನವಾಗಿ, ಆ ಜಾಗ್ರದಲ್ಲಿ ತೇಜವೂ, ಸುಷುಪ್ತಿಯಲ್ಲಿ ವಾಯ್ವಾಕಾಶಂಗಳೂ, ಸ್ವಪ್ನದಲ್ಲಿ ಪೃಥ್ವಿಯಪ್ಪುಗಳೂ ಆಗಿ, ಅವುಗಳೇ ಒಂದಕ್ಕೊಂದಾವರಣಂಗಳಾಗಿರ್ಪ ಈ ಪ್ರಪಂಚದಲ್ಲಿ ಕ್ರೀಡಾನಿಮಿತ್ತವಾಗಿ ಜೀವಪರಮರೂಪುಗಳಂ ಧರಿಸಿ, ಇದಕ್ಕೆ ಹೊರಗಾಗಿ, ತಾನು ಪರಮರೂಪದಲ್ಲಿ ನಿಂದು, ತನ್ನೊಳ್ತಾನೆ ಕಲ್ಪಿಸಿದ ಜೀವಕೋಟಿಗಳನ್ನು ಇದಕ್ಕೊಳಗುಮಾಡಲು, ಅವೆಲ್ಲವೂ ಒಂದಕ್ಕೊಂದು ಸುತ್ತಿಮುತ್ತಿ ಮಿಥ್ಯೆಯೇ ಸ್ಥೂಲಮಾಗಿ, ಅಜ್ಞಾನವೇ ಸೂಕ್ಷ್ಮವಾಗಿ, ದುಃಖವೇ ಕಾರಣಮಾಗಿ, ಜಾಗ್ರತ್ಸ್ವಪ್ನಸುಷುಪ್ತ್ಯವಸ್ಥೆಗಳನನುಭವಿಸುತ್ತಾ. ನಿಜವಂ ಮರತು ನಿಜಾವಸ್ಥೆಯಂ ತೊರೆದು, ತ್ರಿಮೂರ್ತಿಗಳ ಬಲೆಗೆ ಸಿಕ್ಕಿ ದಾಂಟಲಾರದೆ, ಕೋಟಲೆಗೊಳುತತಿಪ್ರ್ಮದಂ ನೋಡಿ ನೋಡಿ, ಆನಂದಿಸುತ್ತಿರ್ಪನೆಂತೆಂದೊಡೆ: ಮದ್ದಂ ಮೆಲುವಾತಂಗದೇ ಸಾಧಕಮಾಗಿ, ಆ ಲಹರಿಯೊಳಗೆ ಕೂಡಿ, ನಿಜಾವಸ್ಥೆಯಂ ತೊರೆದು, ತದವಸ್ಥೆಯೊಳು ಬದ್ಧನಾಗಿ, ಆ ಲಹರಿಯಳಿದಲ್ಲಿ ಮರಣವೇ ಕಾರಣಮಾಗಿ, ತಿರಿಗಿ ಶರೀರಮಂಪೊಂದಿ, ಅವಸ್ಥಾತ್ರಯಂಗಳನನುಭವಿಸುತ್ತಿಪ್ರ್ಮದಂ ನೋಡಿ, ಪರಮಾನಂದಿಸುತ್ತಿಪುನು. ಇಂತಪ್ಪ ಭ್ರಮೆಯಂ ಕಳೆದು, ತನ್ನ ನಿಜಸ್ವರೂಪಮಪ್ಪ ತೂರ್ಯಾವಸ್ಥೆಯಂ ಹೊಂದುವನೆಂದೊಡೆ, ಹೊಂದತೀರದೆ ಸ್ವಲ್ಪಕಾಲವೇ ಮಹಾತ್ಕಾಲಮಾಗಿ, ಪೃಥ್ವಿವ್ಯಪ್ತೇಜೋವಾಯ್ವಾಕಾಶಾದಿ ಪಂಚಭೂತಂಗಳು ದಾಂಟಲಾರದೆ, ಆ ಪಂಚಭೂತಗುಣಗಂಗಳಂ ಪಂಚೇಂದ್ರಿಯಮುಖಗಳಿಂದ ತನ್ನತಃಕರಣದಿಂ ಕೊಂಡುಂಡು, ಭಾವವಂ ಮುಟ್ಟಲೊಲ್ಲದೆ, ಪಂಚೇದ್ರಿಯಂಗಳಲ್ಲಿರ್ಪ ಬ್ರಹ್ಮನ, ಅಂತಃಕರಣದಲ್ಲಿರ್ಪ ವಿಷ್ಣುವಿನ, ಭಾವದಲ್ಲಿರ್ಪ ರುದ್ರನ ಕಾಟದಲ್ಲಿ ಕೋಟಲೆಗೊಳುತ್ತಿರ್ಪುದಂ ತಪ್ಪಿಸುವುದಕ್ಕುಪಾಯಮಂ ಕಾಣದಿರ್ಪ ಜೀವನಿಗೆ ತಾನೇ ದಯೆಯಿಂ ಗುರುರೂಪನಾಗಿ ಬಂದು, ತನ್ನ ನಿಜವನ್ನೇ ಇದಿರಿಟ್ಟು ತೋರಿದಲ್ಲಿ, ಆ ವಸ್ತುವಂ ನೋಡಿ ನೋಡಿ, ತನ್ನ ಅಂತರಂಗದಲ್ಲಿರ್ಪ ಅಜ್ಞಾನವು ಹರಿದು, ಅಲ್ಲೊಂದು ಸೂಕ್ಷ್ಮದ್ವಾರವು ಕಾಣಿಸಲಲ್ಲಿ ಪ್ರವೇಶಿಸಲೆಸದಿರ್ಪ ಅನೇಕ ದುರ್ಗುಣಗಳಿಗಂಜದೆ ಆತ್ಮಾನಮಾತ್ಮನಾವೇತ್ತಿ ಎಂಬ ಶ್ರುತಿವಚನದಿಂ ತನ್ನಿಂದುತ್ಪನ್ನಮಾದ ಪಂಚಭೂತಗಳಲ್ಲಿ ತಾನೇ ಕಾರಣಭೂತಮಾಗಿ ಕೂಡಲು, ಆ ಗುಣಂಗಳು ಆತ್ಮಸ್ವರೂಪಮಾಗಿ, ಆತ್ಮನಿಂದಲೇ ಉಧ್ಭವಿಸಿ, ಆತ್ಮನಿಗೆ ಸುಖವನ್ನೂ ವಾಯುರೂಪಮಾದ ಜೀವನಿಗೆ ದುಃಖವನ್ನೂ ಉಂಟುಮಾಡುತ್ತಿರ್ಪವೆಂತೆಂದೊಡೆ: ಅರಸಿನಲ್ಲಿ ಹುಟ್ಟಿದ ಗ್ರಹವು ಅರಸಿಂಗೆ ಸುಖಮಂ ಪರರಿಗೆ ದುಃಖಮಂ ಮಾಡುವಂದದಿ, ಆಧಿಯಲ್ಲಾಕಾಶಾತ್ಮಸಂಗದಿಂ ಜ್ಞಾನವು ಹುಟ್ಟಿ, ಅದು ಅಭೇದಮಾಗಿರ್ಪ ಆಕಾಶಾತ್ಮಂಗಳಲ್ಲಿ ಇದಾಕಾಶವಿದಾತ್ಮವೆಂಬ ಭೇದಮಂ ಪುಟ್ಟಿಸಿ, ಜೀವರ ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಯಿತ್ತು. ಉಳಿದ ನಾಲ್ಕು ಭೂತಂಗಳಲ್ಲಂತಃಕರಣಚತುಷ್ಟಯಂಗಳು ಹುಟ್ಟಿ, ಅವೇ ನಾಲ್ಕುಮುಖಂಗಳಾಗಿ, ಜ್ಞಾನವು ಮಧ್ಯಮುಖಮಾಗಿ, ತದ್ಬಲದಿಂ ಅಹಂ ಬ್ರಹ್ಮವೆಂದಹಂಕರಿಸುತ್ತಿರ್ಪ ಬ್ರಹ್ಮನಂ ನೋಡಿ, ಆತ್ಮರೂಪಮಾದ ಶಿವನು ಭಾವಹಸ್ತದಲ್ಲಿ ಅಂತಃಕರಣಮಧ್ಯದಲ್ಲಿರ್ಪ ಜ್ಞಾನವೆಂಬ ಬ್ರಹ್ಮಕಪಾಲವಂ ಪರಿಗ್ರಹಿಸಲು, ಉಳಿದ ನಾಲ್ಕು ಶಿರಸ್ಸುಗಳಿಂ ಸೃಷ್ಟಿಕರ್ತನಾದ ಬ್ರಹ್ಮನು ಸಂಹಾರರೂಪಮಾದ ಜ್ಞಾನಮುಖದಲ್ಲಿ ಸಕಲ ಪದಾರ್ಥಗಳನ್ನು ಪರಿಗ್ರಹಿಸುತ್ತಿರ್ಪನು. ಅಂತಪ್ಪ ಆತ್ಮರೂಪಮಾದ ಶಿವನೊಳಗೆ ಆಕಾಶಮೆಂತೈಕ್ಯಮಪ್ಪುದೆಂದೊಂಡೆ : ಆಕಾಶವೂ ವಾಯುರೂಪು. ಭಸ್ತ್ರಿಯಲ್ಲಿ ಪ್ರವೇಶಿಸಿರ್ಪ ವಾಯುವಿನಿಂದ ಆಕಾಶಮಧಿಕಮಾಗಲು. ವಾಯುವಡಗಲಾಕಾಶವೂ ಕೂಡ ಅಡಗುವಂದದಿ, ಅಂತಪ್ಪ ವಾಯುವೇ ಜೀವನು, ಆ ಜೀವನಿಗವಸಾನಸ್ಥಾನವೇ ಆತ್ಮನು, ಆ ಆತ್ಮನಲ್ಲಿ ಕೂಡಿ ತನ್ನ ಮುನ್ನಿನ ವಾಯುರೂಪಮಳಿದಲ್ಲಿ ಅದಕಿಂತ ಮೊದಲೇ ಆಕಾಶವಳಿವುತ್ತಿರ್ಪುದು. ಅಂತಪ್ಪ ಆತ್ಮಸ್ವರೂಪವೆಂತೆಂದೊಂಡೆ : ಆತ್ಮವಂ ವಿಚಾರಿಸಿ ಆತ್ಮಸ್ವರೂಪವನರಿಸಿದ ಜೀವನು ತಾನಾತ್ಮನಾಗುತ್ತಿರಲು ಆತ್ಮಸ್ವರೂಪಮಿತೆಂದು ಮರಳಿಯೋರ್ವರೊಳುಸುರುವುದೆಂತಯ್ಯಾ! ಸತ್ತವನು ಬಂದು ತನ್ನ ವೃತ್ತಾಂತವಂ ಹೇಳಬಲ್ಲನೆ? ಉರಿಯೊಳ್ಕೂಡಿದ ಕರ್ಪುರವು ಉರಿಯಪ್ಪುದಲ್ಲದೆ ಕರ್ಪುರವಪ್ಪುದೆ? ಅಂತಪ್ಪ ಅಭೇದಾನಂದ ಪರಮಾತ್ಮಸಂಗದೊಳೇಕಮಾಗಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇಂದ್ರಿಯಸ್ವರೂಪಮಾದ ತನುವೇ ಜಾಗ್ರವು, ವಿಷಯಸ್ವರೂಪಮಾದ ಮನವೇ ಸ್ವಪ್ನವು, ಅನುಭವಸ್ವರೂಪಮಾದ ಜೀವನಲ್ಲಿ ಸುಷುಪ್ತಿಯು. ಪಾಪವೆಂಬ ಪಂಕದಲ್ಲಿ ಹುಟ್ಟಿ ಆಸೆಯೆಂಬ ಬಿಸದೊಳಗೆ ಕೂಡಿ ಅಷ್ಟಭೂತಂಗಳೆಂಬಷ್ಟದಳಂಗಳಿಂ ಚಿತ್ತವೆಂಬ ಮೇರುವಿನಿಂ ಯುಕುತಮಾಗಿರ್ಪ ಹೃತ್ಕಮಲದಲ್ಲಿ ಜೀವನು ಸುಷುಪ್ತಿಯಂ ಹೊಂದಿ, ತನುವಿನ ಜಾಗ್ರವು ಮನದ ಸ್ವಪ್ನವಲ್ಲದೆ, ತನ್ನ ನಿಜವೆಲ್ಲವೂ ಸುಷುಪ್ತಿಯಂ ಹೊಂದಿ ತನು ಸೋಂಕಿದಲ್ಲಿ ತಿಳುವುತ್ತಂ, ಮರಳಿ ನಿದ್ರಾರೂಪದಿಂ ಮರವುತ್ತಲಿರ್ಪ ಜೀವನ ಪರಿಯ ನೋಡಾ. ಇಂತು ಭವಭವಂಗಳಲ್ಲಿ ತೊಳಲುವ ಜೀವಂಗೆ ಗುರುಸಂಸ್ಕಾರದಿ ಲಿಂಗವೆಂಬ ಪೂರ್ವಾಚಲದಲ್ಲಿ ಜ್ಞಾನಾರ್ಕೋದಯಮಾಗಿ, ಭಾವವೆಂಬ ಮೋಹ ಬಯಲಲ್ಲಿ ಗಮಿಸುತ್ತಿರಲು, ಹೃತ್ಕಮಲಂ ವಿಕಸಿತಮಾಗಿ ಆನಂದಮಕರಂದದೊಡನೆ ಕೂಡಿ, ಗುರುಮಂತ್ರಮಲಯಾನಿಲನು ನಿಜವಾಸನೆವಿಡಿದು ಬೀಸುತ್ತಿರಲು, ಜೀವ ಸುಷುಪ್ತಿಭ್ರಾಂತಿಯಳಿದು, ಪರಮಜಾಗ್ರತ್ಸ್ವರೂಪನಪ್ಪ ಪರಮಾತ್ಮನಾಗಿ, ತನುವಿನ ಜಾಗ್ರ, ಮನದ ಸ್ವಪ್ನಗಳಳಿದು, ಪರಮನ ಮಧ್ಯಾವಸ್ಥೆಯಲ್ಲಿ ಲೀನಮಾಗಲು, ಅಷ್ಟಭೂತಂಗಳುಂ ಅಷ್ಟಾವರಣಂಗಳಾದವದೆಂತೆಂದೊಡೆ : ಪೃಥ್ವಿಯೇ ಭಸ್ಮವು, ಜಲವೇ ಪಾದೋದಕವು, ಅಗ್ನಿಯೇ ರುದ್ರಾಕ್ಷವು, ವಾಯುವೇ ಪ್ರಸಾದವು, ಆಕಾಶವೇ ಮಂತ್ರವು, ಅಹಂಕಾರವೇ ಲಿಂಗವು, ಮಹವೇ ಗುರುವು, ಚಿತ್ತವೇ ಜಂಗಮವು, ನಿಜವು ಪ್ರಸನ್ನಮಾಗಿ ಮನವೇ ವೃಷಭೇಶ್ವರನಾಗಿ ತನುವೇ ಕೈಲಾಸಪರ್ವತಮಾಗಿ ಸಕಲ ಗುಣಂಗಳೇ ಶಿವಗಣಂಗಳಾಗಿ; ಸಕಲಜನ್ಮಕರ್ಮಪ್ರಪಂಚಪರದೊಳಡಗಿತ್ತೆಂತೆಂದೊಡೆ ಕಾಲದಲ್ಲಿ ಬ್ರಹ್ಮಾಂಡಂಗಳಡಗಿ ರೂಪುದೋರದಿರ್ಪಂತೆ, ಚಿದಾಕಾಶದಲ್ಲಿ ಲೀನಮಾಗೆ, ತಾನೇ ಶಿವನಾಗಿ, ಅಭೇದ ಬ್ರಹ್ಮವಾಯಿತ್ತೆಂತೆಂದೊಡೆ : ವಸ್ತುಸ್ವರೂಪಮಾದ ಸುವರ್ಣವ ಕಾಸಿ, ಕರಗಿಸಿ ; ಉಳಿದ ನಿಜಮಂ ತೆಗೆದು, ಬೆಳುಗಾರ ಮಿಕ್ಕಿ, ಮಹದೊಳಗೆ ಬೆರಸಿ, ಎರಡನ್ನೂ ಒಂದುಮಾಡಿ, ತಾನದರೊಳಗೆ ಬೆರೆದು ಭೇದದೋರದಿರ್ಪಂತೆ, ಮನಸ್ಸು ಜೀವ ಪರಮರನೊಂದುಮಾಡಿ, ತಾನದರೊಳಗೆ ಬೆರೆದು, ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ. ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪರಮಾತ್ಮನ ಪ್ರತಿಲಹರಿಯಿಂದ ಅಂತರಾತ್ಮನುತ್ಪತ್ಯ. ಅಂತರಾತ್ಮನ ಪ್ರತಿಲಹರಿಯಿಂದ ಜೀವಾತ್ಮನುತ್ಪತ್ತ. ಅಂತಪ್ಪ ಜೀವಾಂತರಾತ್ಮಾದಿಗಳು ಅಂಗ ಪ್ರಾಣವಾದಲ್ಲಿಒಂದೆಯೆನಿಸಿದರು. ಆ ಒಂದೆಯೆಂಬ ತಾಮಸ ಜೀವನು ಅಂಗನೆಯರ ಸಂಗ ಮೊದಲಾದ ನಾನಾ ದುಃಖಗಳಲ್ಲಿ ನೋವುತ್ತ, ನಾನಾಯೋನಿಗಳಲ್ಲಿ ಜನಿಸುತ್ತ, ರೌರವ ನರಕ ಆಳುತ್ತಮುಳುಗುತ್ತಲಿಹನು. ಆ ಪರಮಾತ್ಮನು ಜೀವಾತ್ಮನ ಶಿರೋಮಧ್ಯದಲ್ಲಿರ್ದು ನಾಹಂಎನ್ನದೆಸೋಹಂಎನ್ನುತ್ತ ಸಿಮ್ಮಲಿಗೆಯಚನ್ನರಾಮನೆಂಬ ಅಖಂಡ ಲಿಂಗದೊಳಗೆ ನಿತ್ಯತ್ವವನೆಯ್ದಿ ಎಡೆಬಿಡುವಿಲ್ಲದೆ ಪರಮಸಂತೋಷದೊಳಿದ್ದಿತ್ತು.
--------------
ಚಂದಿಮರಸ
ಅಧೋಮುಖದಷ್ಟದಳಕಮಲದಲ್ಲಿ ಹಂಸಗತಿ ಮನದ ನಡೆವಳಿಯಿಂದ ದಿಗ್ವಳಯದ ಅಷ್ಟಗುಣಯುಕ್ತವಾಗಿಹನು. ಇದಲ್ಲದೆ ಮತ್ತೆಯು ನಿಧನ ನಿದ್ರೆ ಚಿಂತೆ ಲಜ್ಜೆ ಕ್ಷುಧೆ ತೃಷೆ ವಿಷಯ ಆಧಿವ್ಯಾsಧಿದ್ಯೂತೋದ್ಯೋಗ ದಾಹ ಶೋಷ ರತಿ ಸ್ವೇದ ಕೋಪ ಶೋಕ ಉದ್ಬ್ರಮೆ ಭಯ ಎಂಬ ಹದಿನೆಂಟು ದೋಷಾವರಣನಾಗಿ ಅಜ್ಞಾನದಿಂ ತಿರುಗುವ ಜೀವನು ಶ್ರುತಗುರು ಸ್ವಾನುಭಾವದಿಂ ಪರಮನ ಗತಿಯನರಿತು ತನ್ನ ಗತಿಯ ಮರದು, ದಶವಾಯುವ ದೆಸೆಗೆ ಹರಿಯದೆ, ಮಧ್ಯನಾಳದಲ್ಲಿ ನಿಂದ ಮರುವಾಳ ಮರದು ಸೌರಾಷ್ಟ್ರ ಸೋಮೇಶ್ವರಲಿಂಗದ ಬೆಳಗಿನೊಳಗೆ ಬೆರಸಿ ಬೇರಿಲ್ಲದ ಶಿಖಿಕರ್ಪುರದಂತಾಯಿತ್ತು.
--------------
ಆದಯ್ಯ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳೈದು ಶರೀರಮಹದಹಂಕಾರ ಪ್ರಕೃತಿಗಳೊಳಗೆ ಸೇರಲು, ಮಹತ್ತೇ ಜೀವ ಪರಮರಾಗಿ, ಪ್ರಕೃತಿಯೇ ಮನ ಬುದ್ಧಿಗಳಾಗಿ, ಅಹಂಕಾರವೇ ಚಿದÀಹಂಕಾರವಾಗಲು, ಮನ ಬುದ್ಧಿ ಚಿತ್ತಹಂಕಾರಂಗಳೇ ಅಂತಃಕರಣಗಳು, ತದನುಭವಕರ್ತನೇ ಜೀವನು, ತತ್ಸಾಕ್ಷಿಕಾರಣಮಾಗಿರ್ಪನೇ ಪರಮನು. ಮನ ಬುದ್ಧಿಗಳು ಉತ್ಕøಷ್ಟ ಕಾರ್ಯವನೆಸಗುತ್ತಿರ್ಪುದರಿಂ ಅಹಂಕಾರಮೆನಿಸಿತ್ತು. ಜೀವಪರಮರೆಲ್ಲಕ್ಕೂ ತಾವೇ ಕಾರಣರಾಗಿ, ತಮಗಿಂತಲೂ ದೊಡ್ಡಿತ್ತಾದ ವಸ್ತುಮತ್ತೊಂದಿಲ್ಲದಿರ್ಪುದರಿಂ ಮಹತ್ತಾಗಿತ್ತು. ಆ ಮಹತ್ತೇ ಆತ್ಮನು, ಆದುದರಿಂ ಜೀವಾತ್ಮನೇ ಶಿವನು, ಮನ ಬುದ್ಧಿಗಳೇ ವಿಷ್ಣುವು, ಚಿದಹಂಕಾರಗಳೇ ಬ್ರಹ್ಮನು. ಆ ಚಿದಹಂಕಾರಗಳೆರಡೂ ಮನ ಬುದ್ಧಿಗಳಿಗೆ ಶಕ್ತಿಯಾಗಿಹವು, ಆ ಮನಬುದ್ಧಿಗಳೆರಡೂ ಜೀವಪರಮರಿಗೆ ಶಕ್ತಿಯಾಗಿಹವು, ಆ ಜೀವಪರಮರೇ ಚಿದಹಂಕರಾಗಳಿಗೆ ಶಕ್ತಿಯಾಗಿಹವು, ಜೀವನೇ ಸಗುಣ, ಪರಮನೇ ನಿರ್ಗುಣ, ಬುದ್ಧಿಯೇ ಸುಗುಣ, ಮನವೇ ನಿರ್ಗುಣ, ಜ್ಞಾನವೇ ಸಗುಣ, ಅಹಂಕಾರವೇ ನಿರ್ಗುಣ, ನಿರ್ಗುಣಂಗಳಲ್ಲಿ ಸಗುಣಂಗಳು ಸೃಷ್ಟಿ ಸ್ಥಿತಿ ಸಂಹಾರಗಳಂ ಹೊಂದುತ್ತಿರ್ಪವು, ಸಗುಣ ನಿರ್ಗುಣಗಳಿಂ ಸತ್ಕøತ್ಯ ದುಷ್ಕøತ್ಯರೂಪಂಗಳಾಗಿಹವು. ಆ ದುಷ್ಕøತ್ಯವು ನಿಜವಂ ಹೊಂದದೇ ಇಹುದು. ಸತ್ಕøತ್ಯವು ನಿಜವಂ ಹೊಂದಿ ಹೊಂದದೇ ಇಹುದು. ದುಷ್ಕøತ್ಯದಿಂ ನಿಜ ಸಾಧ್ಯಮಲ್ಲ. ಸತ್ಕøತ್ಯದಿಂ ನಿಜವು ಸಾಧ್ಯಮಪ್ಪದು, ಸಾಧ್ಯಮಾದಲ್ಲಿ ನಿಜವೇ ತಾನಾಗಿಹುದು. ಅಂತಃಕರಣಂಗಳು ಜೀವಪರಮರ ಭೇದಾಭೇದಂಗಳಿಗೆ ತಾವು ಸಾಧನಭೂತಂಗಳಾಗಿಹವು; ಸಾಧ್ಯವಾದಲ್ಲಿ ಸಾಧನದ್ರವ್ಯಂಗಳು ಅಪ್ರಯೋಜಕವಾಗಿರ್ಪಂದದಿ ಜೀವಪರಮರೇಕಮಾದಲ್ಲಿ ಅಂತಃಕರಣದೋಷಂಗಳು ಅಪ್ರಯೋಜಕಂಗಳಾಗಿ ಮಿಥ್ಯಾಭೂತಂಗಳಾಗಿಹವು. ಅಂತಪ್ಪ ಜೀವಪರಮರಸಂಗವೇ ಮೋಕ್ಷವು. ಅಂತಪ್ಪ ನಿಜಾನಂದ ನಿರ್ವಾಣಸುಖವೆನಗೆ ಸಾಧ್ಯಮಪ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಸೃಷ್ಟಿಹೇತುವಾದ ಸಂಸಾರವೇ ಪೃಥ್ವಿಯು, ತದ್ರಕ್ಷಣಹೇತುವಾದುದೇ ಜಲವು, ಇವೆರಡನ್ನೂ ಸಂಬಂಧಿಸಿ, ಏಕಮಾಗಿ ಘನೀಭವಿಸುವಂತೆ ಮಾಡಿ, ತತ್ಸಂಹಾರಕ್ಕೆ ತಾನೇ ಕಾರಣಮಾಗಿರ್ಪ ಮನಸ್ಸೇ ಅಗ್ನಿಯು. ಆ ಮನಸ್ಸನ್ನು ಪ್ರಕಾಶಗೊಳಿಸಿ ಅದರೊಳಗೆ ಕೂಡಿ ಅಭೇದಮಾಗಿರ್ಪ ಜೀವನೇ ವಾಯುವು, ಅಗ್ನಿಯು ಪೃಥ್ವಿಯೊಳಗೆ ಬದ್ಧಮಾಗಿರ್ಪಂತೆ, ಮನವು ಸಂಸಾರಬದ್ಧಮಾಗಿರ್ಪುದು. ವಾಯುವು ಜಲದೊಳಗೆ ಬದ್ಧಮಾಗಿರ್ಪಂತೆ, ಜೀವನು ಶರೀರದಲ್ಲಿ ಬದ್ಧಮಾಗಿರ್ಪನು. ಜೀವನು ತಾನು ಸಂಸಾರದೊಳ್ಕೂಡಿ ಸ್ಥೂಲವಾಗಿಯೂ ಮನದೊಳ್ಕೊಡಿ ಸೂಕ್ಷ್ಮವಾಗಿಯೂ ಇರ್ಪನು. ಸಂಸಾರ ಶರೀರ ಮನೋಜೀವಗಳಿಗಾಧಾರಮಾಗಿರ್ಪ ಕರ್ಮವೇ ಆಕಾಶವು, ಆ ಕರ್ಮವನಾವರಿಸಿರ್ಪ ಮಹಾಮೋಹವೆಂಬ ಸುಷುಪ್ತಿಯ ಒಳಹೊರಗೆ ಪ್ರಕಾಶಿಸುತ್ತಿರ್ಪ ಜಾಗ್ರತ್ಸ್ವಪ್ನಜ್ಞಾನಂಗಳೇ ಚಂದ್ರಸೂರ್ಯರು. ಮನಸ್ಸೆಂಬ ಅಗ್ನಿಯು ಜೀವಾನಿಲನಿಂ ಪಟುವಾಗಿ ಸಂಸಾರಶರೀರಂಗಳಂ ಕೆಡಿಸಿ, ಕರ್ಮವೆಂಬಾಕಾಶದೊಳಗೆ ಜೀವಾನಿಲನಿಂ ಕೂಡಿ ಧೂಮರೂಪಮಾಗಿ ಶರೀರಸಂಸಾರಗಳೆಂಬ ಮೇಘÀಜಲವರ್ಷವಂ ನಿರ್ಮಿಸಿ, ಜೀವನಿಗವಕಾಶವಂ ಮಾಡಿಕೊಟ್ಟು, ತಾನಲ್ಲಿಯೇ ಬದ್ಧನಾಗಿ, ಜೀವನಿಂದ ಪ್ರಕಾಶಮಾಗುತ್ತಿರ್ಪುದು. ಇಂತಪ್ಪ ಕರ್ಮವೆಂಬಾಕಾಶಕ್ಕೆ ಜೀವನೆಂಬ ವಾಯುವೇ ಕಾರಣವು. ಇವು ಒಂದಕ್ಕೊಂದು ಕಾರಣಮಾಗಿ, ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ ತೋರುತ್ತಾ ಅಡಗುತ್ತಾ ಬಳಲುತ್ತಾ ತೊಳಲುತ್ತಿರ್ಪ ಭವರೋಗದಲ್ಲಿ ಜೂಗುತ್ತಿರ್ಪ ಬಂಧನದ ಈ ದಂದುಗವಿನ್ನೆಂದಿಗೆ ಪೋಪುದು ಎಂದು ಮುಂದುಗಾಣದೆ ಇರ್ಪೆನ್ನ ತಾಪವಂ ನೀಂ ದಯೆಯಿಂ ತಣ್ಣನೆ ಮಾಳ್ಪೊಡೆ, ಸತ್ಯಜ್ಞಾನಾನಂದಮೂರ್ತಿಯಾದ ಪರಮಾತ್ಮನೇ ಗುರು ಲಿಂಗ ಜಂಗಮ ಸ್ವರೂಪಿಯಾಗಿ, ಜ್ಞಾನದಿಂದ ನಿಜವೂ ನಿಜದಿಂದಾನಂದವೂ ಪ್ರಕಾಶಮಾಗಿರ್ಪಂತೆ, ಗುರುವಿನಿಂದ ಲಿಂಗವಂ ಲಿಂಗದಿಂದ ಜಂಗಮವಂ ಕಂಡೆನು. ಅಂತಪ್ಪಾ ನಿಜಾತ್ಮಲಿಂಗವನು ಕರ್ಮವೆಂಬ ಆಕಾಶದಲ್ಲಿ ಬೆರೆಸಲು, ಅದೇ ಕಾರಣಮಾಯಿತ್ತು. ಆ ಕರ್ಮವೆಂಬ ಶಕ್ತಿಯು ಲಿಂಗವೆಂಬ ಶಿವನೊಳಗೆ ಕೂಡಲು, ಲಿಂಗತೇಜಸ್ಸಿನಿಂ ಕರ್ಮಗರ್ಭದಲ್ಲಿ ಜೀವನಿಗೆ ಪುನರ್ಭವಮಾದುದರಿಂದ ಪ್ರಾಣಲಿಂಗಮಾಯಿತ್ತು. ಅದೆಂತೆಂದೊಡೆ : ಲಿಂಗವೆಂಬ ಮಹಾಲಿಂಗದಿಂ ಜನಿಸಿದ ಕರ್ಮವೇ ಪ್ರಸಾದಲಿಂಗವು, ಆ ಕರ್ಮದಿಂ ಜನಿಸಿದ ಜೀವನೇ ಜಂಗಮಲಿಂಗವು, ಅಂತಪ್ಪ ಲಿಂಗದಿಂದುಸಿದ ಮನಸ್ಸೇ ಶಿವಲಿಂಗವು, ಅಂತಪ್ಪ ಮನಸ್ಸಿನಿಂದ ಪರಿಶುದ್ಧಮಾಗಿರ್ಪ ಶರೀರವೇ ಗುರುಲಿಂಗವು. ಅಂತಪ್ಪ ಗುರುಲಿಂಗಮಾಗಿರ್ಪ ಶರೀರದಿಂದನುಭವಿಸುತ್ತಿರ್ಪ ಸಂಸಾರವೇ ಆಚಾರಲಿಂಗವು. ಇಂತು ಸಂಸಾರಶರೀರಂಗಳಿಗೆ ಇಷ್ಟಲಿಂಗವೇ ಕಾರಣವೂ ಮನೋಜೀವರಿಗೆ ಪ್ರಾಣಲಿಂಗವೇ ಕಾರಣವೂ ಆಗಿ, ಕರ್ಮಲಿಂಗಂಗಳಿಗೆ ಭಾವಲಿಂಗಂಗಳೇ ಕಾರಣಮಾಗಿ, ಕಾರಣವೇ ಐಕ್ಯಸ್ಥಾನವಾದುದರಿಂ ಸಂಸಾರ ಶರೀರಂಗಳು ಇಷ್ಟಲಿಂಗದೊಳಗೂ ಮನೋಜೀವಂಗಳು ಪ್ರಾಣಲಿಂಗದೊಳಗೂ ಐಕ್ಯವಂ ಹೊಂದಿದವು. ಕರ್ಮಲಿಂಗಗಳು ಭವಲಿಂಗದೊಳಗೈಕ್ಯಮಾಗಿ, ಪ್ರಾಣವು ಭಾವದೊಳಗೆ ಬೆರೆದು, ಭೇದವಡಗಿ ತಾನು ತಾನಾಗಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಮುನ್ನಿನವರು ನಡೆದ ಪರಿಯಲ್ಲಿ ಇನ್ನು ನಡೆದರಾಗದೆಂಬ ಭಿನ್ನ ನುಡಿಯ ಕೇಳಲಾಗದು, ಹೇಳಲಾಗದು. ಅದೆಂತೆಂದಡೆ: ಶ್ರೀಗುರು ಕಾರುಣ್ಯವಂ ಪಡೆದು ಜ್ಞಾನಪ್ರತಿಷೆ*ಯಂ ತೋರಿದನಾಗಿ ಅನ್ಯಾಯದ ಗೊಡವೆಯಂ ಬಿಟ್ಟು ಚೆನ್ನಾಗಿ ಶಿವಭಕ್ತರಭಾವವ ಲಾಲಿಸಿ ಕೇಳಿಹೆನೆಂದಡೆ ಹೇಳುವೆ ಕೇಳಿರಣ್ಣಾ: ಶಿವಕಾರುಣ್ಯೇನ ಸಾಧ್ಯಾಹಿ ಗಾರುಡಂ ಚಾಷ್ಟಸಿದ್ಧಯಃ ಸ್ವರ್ಗಪಾತಾಳಸಾಧ್ಯಾಸ್ತು ಅಂಜನಂ ಘಟಿಕಾಸ್ತಥಾ ಎಂದುದಾಗಿ ಮಲಗಿದ್ದಲ್ಲಿ ಕನಸ ಕಂಡೆಹೆನೆಂಬರು, ಆ ಜೀವನು ಈ ಕಾಯ ನಾಶವ ಮಾಡಿ, ಆ ದ್ವೀಪಕ್ಕೆ ಹೋಗಿ ಕಂಡುಬಂದಿತ್ತೆ ? ಆ ದ್ವೀಪಕ್ಕೆ ಹೋದವು ಈ ಕಾಲೆ ? ಆ ದ್ವೀಪಕ್ಕೆ ಹೋದವು ಈ ಕಣ್ಣೆ ? ಅದು ಹುಸಿ, ದಿಟವೆಂದಡೆ : ಆ ದ್ವೀಪ ತನ್ನ ಹೃದಯಕಮಲ ಮಧ್ಯದಲುಂಟು, ಮತ್ತು ಸರ್ವಜಗವುಂಟು. ಅದೆಂತೆಂದಡೆ : ನಿದ್ರೆಗೈದಲ್ಲಿ ಕಣ್ಣಿನ ಜ್ಯೋತಿ ಹೃದಯಕಮಲ ಮಧ್ಯಕ್ಕಿಳಿದಲ್ಲಿ ಜ್ಯೋತಿ ಮನ ಒಂದಾಯಿತ್ತು; ಒಂದಾದಲ್ಲಿ ಶಿವನುಂಟು. ಆ ಶಿವನ ಹೃದಯದಲ್ಲಿ ಸಕಲ ಭುವನಾದಿ ಭುವನಂಗಳೆಲ್ಲ ಉಂಟು, ಅಲ್ಲಿ ಈ ವಾಯು ತಿರುಗುತ್ತಿದ್ದುದು, ಅಲ್ಲಿ ಕಂಡುದ ಕನಸೆಂದೆಂಬರು ತಲೆಯೊಳಗಣ ಸಹಸ್ರದಳಕಮಲ ಮಧ್ಯದಲ್ಲಿ ಸಕಲಾತ್ಮನು ಸುಖದಿಂದಿರುತ್ತಿಹನು ಅದೆಂತೆಂದಡೆ: ಅಂತಹ ಆತ್ಮನಿಲ್ಲದಿರ್ದಡೆ ನೀರಬೊಬ್ಬುಳಿಕೆಯ ಕಣ್ಣು ಕಾಣಬಲ್ಲುದೆ ? ಅಂತಹ ಆತ್ಮನಿಲ್ಲದಿರ್ದಡೆ ತೊಗಲ ಛಿದ್ರದ ಕಿವಿಗಳು ಕೇಳಬಲ್ಲುವೆ ? ಅಂತಹ ಆತ್ಮನಿಲ್ಲದಿರ್ದಡೆ ಹಡಿಕೆ ಮಲಿನ ಮೂಗು ಪರಿಮಳಂಗಳ ಕೊಳಬಲ್ಲುದೆ ? ಅಂತಹ ಆತ್ಮನಿಲ್ಲದಿರ್ದಡೆ ಮತಿಯು ಮನದೊಳಗಿರಬಲ್ಲುದೆ ? ಅದು ಹುಸಿ ಎಂದಡೆ, ಅಂಗುಷ್ಟದೊಳಗೆ ವಿಷವುಂಟು; ನಾಭಿಯಲ್ಲಿ ಅಗ್ನಿಯುಂಟು, ಕಂಕುಳಲ್ಲಿ ನಗೆಯುಂಟು, ಕಂಗಳಲ್ಲಿ ದುಃಖವುಂಟು; ಹುಬ್ಬಿನಲ್ಲಿ ಅಮೃತವುಂಟು, ಕೋಪವೆಂಬಾ ಕಿಚ್ಚು ಕೆದರಿ ಅಂಗುಷ್ಟದ ಮೇಲೆ ಬೀಳಲಿಕೆ, ಆ ವಿಷವು ಭುಗಿಲೆಂದೆದ್ದು ಸರ್ವಾಂಗಮಂ ಸುಡುತ್ತ ಬಪ್ಪಲ್ಲಿ ಜ್ಞಾನವೆಂಬ ಜ್ಯೋತಿ ಹೋಗಿ ತಲೆಯೊಳಡಗಿತ್ತು. ಅಂತಹ ಕೋಪವೆಂಬ ಹೊಲೆಯು ಶತಸಹಸ್ರ ಹೊನ್ನ ಕೊಟ್ಟಡೆ ತಿದ್ದುವುದೆ ? ತಿದ್ದದು. ಹಣೆಯ ಅಮೃತ ಬಂದು ಅಂಗುಷ್ಟದ ವಿಷದ ಮೇಲೆ ಬೀಳಲಿಕೆ ಪರುಷ ಬಂದು ಲೋಹಮಂ ಮುಟ್ಟಿದಂತಾಯಿತ್ತು. ಸರ್ವಮಂ ಕೊಂದ ಹಗೆಯಾದಡೆಯೂ ಹೋಹುದು. ಇಂತಪ್ಪ ಸರ್ವಾಂಗಲಿಂಗಾಂಗಿಗಳು ನಿಮ್ಮ ಶರಣರು. ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಪೃಥ್ವೀಚಕ್ರಕ್ಕೆ ಶರೀರವೇ ಪೂರ್ವ, ಶರೀರದೊಳಗಣ ಪೃಥ್ವಿಯೇ ಪಶ್ಚಿಮ, ಜಿಹ್ವೆಯಲ್ಲಿ ಕೊಂಬ ಆಹಾರಾದಿಪೃಥ್ವಿಯೇ ಉತ್ತರ, ಅಧೋಮುಖದಲ್ಲಿ ವಿಸರ್ಜನರೂಪಮಾದ ಪುತ್ರಾದಿಪೃಥ್ವಿಯೇ ದಕ್ಷಿಣ, ಪೂರ್ವರೂಪವಾದ ಶರೀರಕ್ಕೂ ದಕ್ಷಿಣರೂಪವಾದ ಪುತ್ರಾದಿಗಳಿಗೂ ಸಂಧಿಕಾಲಮಾಗಿರ್ಪ ಅರ್ಥಾದಿಪೃಥ್ವಿಯೇ ಆಗ್ನೇಯ, ಪುತ್ರಾದಿ ದಕ್ಷಿಣಪೃಥ್ವಿಗೂ ಧಾತುರೂಪಮಾದ ಅಂತಃಪಶ್ಚಿಮಪೃಥ್ವಿಗೂ ಸಂಧಿಕಾಲಮಾಗಿರ್ಪ ಮಲವಿಸರ್ಜನರೂಪಮಾದ ಪೃಥ್ವಿಯೇ ನೈರುತ್ಯ, ಆ ಶರೀರದೊಳಗಣ ಪೃಥ್ವಿಗೂ ಆಹಾರರೂಪವಾದ ಜಿಹ್ವೆಯಲ್ಲಿರ್ಪ ಉತ್ತರಪೃಥ್ವಿಗೂ ಸಂಧಿಕಾಲದಲ್ಲಿ ಪರಮಪವಿತ್ರಮಾಗಿ ಪರಿಪಕ್ವಮಯವಾಗಿ ಪ್ರಸಾದರೂಪವಾದ ಅನ್ನಾದಿ ಭೋಜನಕ್ರಿಯೆಯೆಂಬ ಪೃಥ್ವಿಯೇ ಈಶಾನ್ಯ. ಜಲಚಕ್ರಕ್ಕೆ ಗುಹ್ಯಜಲವೇ ಪೂರ್ವ, ಶರೀರಜಲವೇ ದಕ್ಷಿಣ, ಜಿಹ್ವಾಜಲವೇ ಪಶ್ಚಿಮ, ನೇತ್ರಜಲವೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಸಂಧಿಕಾಲದಲ್ಲಿರ್ಪ ಬಿಂದುಜಲವೇ ಆಗ್ನೇಯ, ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ಸಂಧಿಯಲ್ಲಿರ್ಪ ವಾತ ಪಿತ್ತ ಶ್ಲೇಷ್ಮಜಲವೇ ನೈರುತ್ಯ, ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ನೇತ್ರದಲ್ಲಿರ್ಪ ಉತ್ತರಜಲಕ್ಕೂ ಸಂಧಿಯಲ್ಲಿರ್ಪ ಉಚ್ಛ್ವಾಸವಾಯುಮುಖದಲ್ಲಿ ದ್ರವಿಸುತ್ತಿರ್ಪ ಜಲವೇ ವಾಯವ್ಯಜಲ, ನೇತ್ರದಲ್ಲಿರ್ಪ ಜಲಕ್ಕೂ ಗುಹ್ಯದಲ್ಲಿರ್ಪ ಜಲಕ್ಕೂ ಸಂಧಿಯಲ್ಲಿ ಮನೋಮುಖದಲ್ಲಿ ದ್ರವಿಸುತ್ತಿರ್ಪ ಮೋಹಜಲವೇ ಈಶಾನ್ಯಜಲ. ಅಗ್ನಿಚಕ್ರಕ್ಕೆ ಗುಹ್ಯದಲಿರ್ಪ ತೇಜೊರೂಪಮಾದ ಆಗ್ನಿಯೇ ಪೂರ್ವ, ಉದರದಲ್ಲಿರ್ಪ ಅಗ್ನಿಯೇ ದಕ್ಷಿಣ, ನೇತ್ರದಲ್ಲಿರ್ಪ ಆಗ್ನಿಯೇ ಪಶ್ಚಿಮ, ಹಸ್ತದಲ್ಪಿರ್ಪ ಸಂಹಾರಾಗ್ನಿಯೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಾಗ್ನಿಗೂ ಉದರದಲ್ಲಿರ್ಪ ದಕ್ಷಿಣಾಗ್ನಿಗೂ ಸಂಧಿಯಲ್ಲಿ ಬೀಜಸ್ಥಾನದಲ್ಲಿರ್ಪ ಕಾಮಾಗ್ನಿಯೇ ಆಗ್ನೇಯಾಗ್ನಿ, ಉದರದಲ್ಲಿರ್ಪ ಅಗ್ನಿಗೂ ನೇತ್ರದಲ್ಲಿರ್ಪ ಪಶ್ಚಿಮಾಗ್ನಿಗೂ ಸಂಧಿಯಲ್ಲಿರ್ಪ ಕ್ರೋಧ ಮತ್ಸರ ರೂಪವಾಗಿರ್ಪ ತಾಮಸಾಗ್ನಿಯೇ ನೈರುತ್ಯಾಗ್ನಿ, ನೇತ್ರದಲ್ಲಿರ್ಪ ಅಗ್ನಿಗೂ ಹಸ್ತದಲ್ಲಿರ್ಪ ಉತ್ತರಾಗ್ನಿಗೂ ಸಂಧಿಯಲ್ಲಿ ವಸ್ತುಗ್ರಹಣಚಲನೋದ್ರೇಕಾಗ್ನಿಯೇ ವಾಯವ್ಯಾಗ್ನಿ, ಆ ಹಸ್ತಕ್ಕೂ ಗುಹ್ಯಕ್ಕೂ ಸಂಧಿಯಲ್ಲಿ ಧರ್ಮಪ್ರಜಾಸೃಷ್ಟಿನಿಮಿತ್ತ ಪಾಣಿಗ್ರಹಣಮಪ್ಪಲ್ಲಿ ಸಾಕ್ಷಿರೂಪಮಾದ ಹೋಮಾಗ್ನಿಯೇ ಈಶಾನ್ಯಾಗ್ನಿ. ವಾಯುಚಕ್ರಕ್ಕೆ ನಾಸಿಕಚಕ್ರದಲ್ಲಿರ್ಪ ಪ್ರಾಣವಾಯುವೇ ಪೂರ್ವವಾಯು, ಹೃದಯವೇ ಪಶ್ಚಿಮ, ಚಲನಾತ್ಮಕವಾದ ಚೈತನ್ಯವಾಯುಮುಖವಿಕಸನವೇ ಉತ್ತರವಾಯು, ಗಂಧವಿಸರ್ಜನೆಯೇ ದಕ್ಷಿಣವಾಯು, ನಾಸಿಕದಲ್ಲಿರ್ಪ ಪೂರ್ವವಾಯುವಿಗೂ ಗಂಧದಲ್ಲಿರ್ಪ ದಕ್ಷಿಣವಾಯುವಿಗೂ ಸಂಧಿಯಲ್ಲಿರ್ಪ ಗಂಧವಾಯುವೇ ಆಗ್ನೇಯವಾಯು, ಗುದದಲ್ಲಿರ್ಪ ವಾಯುವಿಗೂ ಹೃದಯದಲ್ಲಿರ್ಪ ಪಶ್ಚಿಮವಾಯುವಿಗೂ ಸಂಧಿಯಲ್ಲಿ ಆದ್ಯನಾದಿವ್ಯಾಧಿಗಳಂ ಕಲ್ಪಿಸಿ ದೀಪನಾಗ್ನಿಯಲ್ಲಿ ಕೂಡಿಸಿ ಅನಂತಮಲವಂ ಮಾಡಿ ಅಧೋಮುಖದಲ್ಲಿ ಕೆಡವುತ್ತಿರ್ಪ ತಾಮಸವಾಯುವೇ ನೈರುತ್ಯವಾಯು, ಹೃದಯವಾಯುವಿಗೂ ವದನದಲ್ಲಿರ್ಪ ಉತ್ತರವಾಯುವಿಗೂ ಸಂಧಿಯಲ್ಲಿರ್ಪ ಕಂಠದಲ್ಲಿ ಹಸನ ರೋದನ ಗರ್ಜನಾದಿಗಳಂ ಮಾಡುತ್ತಿರ್ಪ ವಾಯುವೇ ವಾಯವ್ಯವಾಯು, ವದನದಲ್ಲಿರ್ಪ ವಾಯುವಿಗೂ ನಾಸಿಕದಲ್ಲಿರ್ಪ ವಾಯುವಿಗೂ ಸಂಧಿಯಲ್ಲಿರ್ಪ ಅಕ್ಷರಾತ್ಮಕವಾಯುವೇ ಈಶಾನ್ಯ. ಆಕಾಶಚಕ್ರಕ್ಕೆ ಶ್ರೋತ್ರದಲ್ಲಿರ್ಪ ಆಕಾಶವೇ ಪೂರ್ವ, ಶರೀರದಲ್ಲಿರ್ಪ ಆಕಾಶವೇ ಪಶ್ಚಿಮ, ಪಾದದಲ್ಲಿರ್ಪ ಆಕಾಶವೇ ದಕ್ಷಿಣ, ಜಿಹ್ವೆಯಲ್ಲಿರ್ಪ ಆಕಾಶವೇ ಉತ್ತರ, ಶ್ರೋತ್ರದಲ್ಲಿರ್ಪ ಪೂರ್ವಾಕಾಶಕ್ಕೂ ಪಾದದಲ್ಲಿರ್ಪ ದಕ್ಷಿಣಾಕಾಶಕ್ಕೂ ಕಿವಿಯಲ್ಲಿ ಪಾದದಲ್ಲಿ ಗಮಿಸುತ್ತಿರ್ಪಲ್ಲಿ ಮುಂದೆ ಗಮಿಸುತ್ತಿರ್ಪಾಕಾಶವೇ ಆಗ್ನೇಯಾಕಾಶ, ಪಾದದಲ್ಲಿರ್ಪ ಆಕಾಶಕ್ಕೂ ಶರೀರದಲ್ಲಿರ್ಪ ಪಶ್ಚಿಮಾಕಾಶಕ್ಕೂ ಸಂಧಿಯಲ್ಲಿ ಮಲಮೂತ್ರ ವಿಸರ್ಜನಾಕಾಶವೇ ನೈರುತ್ಯಾಕಾಶ, ಆ ಶರೀರದೊಳಗಿರ್ಪ ಆಕಾಶಕ್ಕೂ ಜಿಹ್ವೆಯಲ್ಲಿರ್ಪ ಉತ್ತರಾಕಾಶಕ್ಕೂ ಸಂಧಿಯಲ್ಲಿ ಗುಣಗ್ರಹಣವಂ ಮಾಡುತ್ತಿರ್ಪ ಹೃದಯವೇ ವಾಯವ್ಯಾಕಾಶ, ಜಿಹ್ವೆಯಲ್ಲಿರ್ಪ ಆಕಾಶಕ್ಕೂ ಶ್ರೋತ್ರದಲ್ಲಿರ್ಪ ಆಕಾಶಕ್ಕೂ ಸಂಧಿಯಲ್ಲಿ ಗುರುವು ಮುಖದಿಂದುಪದೇಶಿಸಲು, ಶಿಷ್ಯನು ಕರ್ಣಮುಖದಲ್ಲಿ ಗ್ರಹಿಸಲು, ತನ್ಮಂತ್ರಮಧ್ಯದಲ್ಲಿ ಪ್ರಕಾಶಿಸುತ್ತಿರ್ಪ ಆಕಾಶವೇ ಈಶಾನ್ಯಾಕಾಶ, ಆತ್ಮಚಕ್ರಕ್ಕೆ ವಾಸನಾಜ್ಞಾನವೇ ಪಶ್ಚಿಮ, ರುಚಿಜ್ಞಾನವೇ ಉತ್ತರ, ಸ್ಪರ್ಶಜ್ಞಾನವೇ ಪೂರ್ವ, ರೂಪಜ್ಞಾನವೇ ದಕ್ಷಿಣ. ಸ್ಪರ್ಶನರೂಪಮಾದ ಪೂರ್ವಜ್ಞಾನವೇ ಜೀವನು, ರೂಪಜ್ಞತ್ವಮುಳ್ಳ ದಕ್ಷಿಣಜ್ಞಾನವೇ ಶರೀರ. ಸ್ಪರ್ಶನದಲ್ಲಿ ಜೀವನು ವ್ಯಾಪ್ತನಾದಂತೆ ರೂಪಜ್ಞಾನದಲ್ಲಿ ಶರೀರವು ವ್ಯಾಪ್ತಮಾಗಿರ್ಪುದರಿಂ ರೂಪಜ್ಞಾನತ್ವವೇ ಶರೀರ, ಸ್ಪರ್ಶನಜ್ಞಾನತ್ವವೇ ಜೀವ. ತತ್ಸಂಧಿಯಲ್ಲಿ ತೇಜೋವಾಯುರೂಪಮಾಗಿರ್ಪ ಮನೋಜ್ಞಾನತ್ವವೇ ಆಗ್ನೇಯಾತ್ಮನು. ಮನೋಜ್ಞಾನಕ್ಕೂ ಪಶ್ಚಿಮದಲ್ಲಿರ್ಪ ವಾಸನಾಜ್ಞಾನಕ್ಕೂ ಸಂಧಿಯಲ್ಲಿ ಜನ್ಮಾಂತರವಾಸನಾಜ್ಞಾನವೇ ಪರೋಕ್ಷಜ್ಞಾನ, ರೂಪಜ್ಞಾನವೇ ಪ್ರತ್ಯಕ್ಷಜ್ಞಾನ. ಈ ಎರಡರ ಮಧ್ಯದಲ್ಲಿ ಭಾವಜ್ಞತ್ವಮಿರ್ಪುದು. ಜಾಗ್ರತ್ಸ್ವಪ್ನಗಳ ಮಧ್ಯದಲ್ಲಿ ಸುಷುಪ್ತಿಯು ಇರ್ಪಂತೆ ಸುಷುಪ್ತಿಗೆ ತನ್ನಲ್ಲಿರ್ಪ ಸ್ವಪ್ನವೇ ಪ್ರತ್ಯಕ್ಷಮಾಗಿ ತನಗೆ ಬಾಹ್ಯಮಾಗಿರ್ಪ ಜಾಗ್ರವು ಪ್ರತ್ಯಕ್ಷಮಾಗಿಹುದು. ಅಂತು ಭಾವಜ್ಞತ್ವಕ್ಕೆ ರೂಪಜ್ಞಾನಪ್ರತ್ಯಕ್ಷಮಾಗಿ ವಾಸನಾಜ್ಞಾನಕ್ಕೆ ತಾನೇ ಮರೆಯಾಗಿರ್ಪುದರಿಂ ಆ ಭಾವಜ್ಞಾನವೇ ನೈರುತ್ಯಾತ್ಮನು. ಆ ವಾಸನಾಜ್ಞಾನಕ್ಕೂ ಉತ್ತರದಲ್ಲಿರ್ಪ ರುಚಿಜ್ಞಾನಕ್ಕೂ ಸಂಧಿಯಲ್ಲಿ ರುಚಿಯೆಂದರೆ ಅನುಭವಪದಾರ್ಥ, ತಜ್ಞಾನವೇ ರುಚಿಜ್ಞಾನ. ವಾಸನಾಜ್ಞಾನವೇ ಪರೋಕ್ಷಜ್ಞಾನ, ಅದೇ ಭೂತಜ್ಞಾನ, ಆ ರುಚಿಜ್ಞಾನವೇ ಭವಿಷ್ಯಜ್ಞಾನ. ಅಂತಪ್ಪ ಭೂತಭವಿಷ್ಯತ್ತುಗಳ ಮಧ್ಯದಲ್ಲಿ ವಾಯುರೂಪಮಾದ ಶಬ್ದಮುಖದಲ್ಲಿ ತಿಳಿವುತ್ತಿರ್ಪ ಶಬ್ದಜ್ಞಾನವೇ ವಾಯವ್ಯಾತ್ಮನು. ರುಚಿಜ್ಞಾನಕ್ಕೂ ಸ್ಪರ್ಶನಜ್ಞಾನಕ್ಕೂ ಮಧ್ಯದಲ್ಲಿ ಜೀವನು ರುಚಿಗಳನನುಭವಿಸುವ ಸಂಧಿಯಲ್ಲಿರ್ಪ ಶಿವಜ್ಞಾನಮಧ್ಯದಲ್ಲಿರುವನೇ ಈಶಾನ್ಯಾತ್ಮನು. ಜ್ಞಾನಾನಂದಮೂರ್ತಿಯೇ ಕರಕಮಲದಲ್ಲಿ ಇಷ್ಟಲಿಂಗಮಾಗಿ, ಆ ಶಿವಜ್ಞಾನವೇ ಹೃತ್ಕಮಲಮಧ್ಯದಲ್ಲಿ ರುಚ್ಯನುಭವಸಂಧಿಯಲ್ಲಿ ಪ್ರಾಣಲಿಂಗಮಾಗಿ, ಪ್ರತ್ಯಕ್ಷ ಪರೋಕ್ಷಂಗಳಿಗೆ ತಾನೇ ಕಾರಣವಾಗಿ, ಆ ಶಿವಜ್ಞಾನಂಗಳು ಭಾವದಲ್ಲೊಂದೇ ಆಗಿ ಪ್ರಕಾಶಿಸಿದಲ್ಲಿ ಭಾವದಲ್ಲಿರ್ಪ ತಾಮಸವಳಿದು, ಪ್ರತ್ಯಕ್ಷ ಪರೋಕ್ಷಂಗಳೊಂದೇ ಆಗಿ, ಪರೋಕ್ಷಜ್ಞಾನದಲ್ಲಿ ಪ್ರತ್ಯಕ್ಷಭಾವಂಗಳಳಿದು, ಭೂತಭವಿಷ್ಯಂಗಳೊಂದೇ ಆಗಿ ಅಖಂಡಮಯಮಾಗಿ ಎಲ್ಲವೂ ಒಂದೆಯಾಗಿರ್ಪುದೇ ಆಗ್ನೇಯ. ಅದಕ್ಕೆ ಇಷ್ಟಪ್ರಾಣಂಗಳೆಂಬೆರಡು ದಳಂಗಳು. ವಿಶುದ್ಧದಲ್ಲಿ ಪ್ರಮಾಣಕ್ಕೆ ಪೂರ್ವಾತ್ಮನಾದ ಜೀವನೇ ಸ್ಥಾನ, ಸಂಶಯಕ್ಕೆ ಆಗ್ನೇಯಾತ್ಮವಾದ ಮನವೇ ಸ್ಥಾನ, ದೃಷ್ಟಾಂತಕ್ಕೆ ದಕ್ಷಿಣಾತ್ಮಕವಾದ ಶರೀರವೇ ಸ್ಥಾನ, ಅವಯವಕ್ಕೆ ನೈರುತ್ಯವಾದ ಭಾವವೇ ಸ್ಥಾನ, ನಿರ್ಣಯಕ್ಕೆ ಪಶ್ಚಿಮಾತ್ಮಕವಾದ ಶಬ್ದಜ್ಞಾನವೇ ಸ್ಥಾನ, ಜಲ್ಪಕ್ಕೆ ವಾಯುವ್ಯಾತ್ಮವಾದ ಶಬ್ದಜ್ಞಾನವೇ ಸ್ಥಾನ, ಹೇತ್ವಭಾವಕ್ಕೆ ರುಚಿಜ್ಞತ್ವವೇ ಸ್ಥಾನ. ಜಾತಿಯೆಂದರೆ ಪದಾರ್ಥನಿಷ*ಧರ್ಮ. ಆ ಧರ್ಮಕ್ಕೆ ಈಶಾನ್ಯಾತ್ಮನಾದ ಶಿವನೇ ಸ್ಥಾನ, ಪ್ರಮೇಯಕ್ಕೆ ಶ್ರೋತ್ರದಲ್ಲಿರ್ಪ ವಿಶುದ್ಧರೂಪಮಾದ ಪೂರ್ವಾಕಾಶವೇ ಸ್ಥಾನ, ಪ್ರಯೋಜನಕ್ಕೆ ಧಾವತೀರೂಪಮಾದ ಆಗ್ನೇಯಾಕಾಶವೇ ಸ್ಥಾನ, ಸಿದ್ಧಾಂತಕ್ಕೆ ಪದದಲ್ಲಿರ್ಪ ದಕ್ಷಿಣಾಕಾಶವೇ ಸ್ಥಾನ, ತರ್ಕಕ್ಕೆ ಮಲವಿಸರ್ಜನರೂಪವಾದ ನೈರುತ್ಯಾಕಾಶವೇ ಸ್ಥಾನ, ಛಲಕ್ಕೆ ಜಿಹ್ವೆಯಲ್ಲಿ ವಾಗ್ರೂಪಮಾಗಿರ್ಪ ಉತ್ತರಾಕಾಶವೇ ಸ್ಥಾನ, ನಿಗ್ರಹಕ್ಕೆ ಉಪದೇಶಮಧ್ಯದಲ್ಲಿರ್ಪ ಈಶಾನ್ಯಾಕಾಶವೇ ಸ್ಥಾನ. ಇಂತು ಆತ್ಮಾಕಾಶಮಾಗಿರ್ಪ ಷೋಡಶದಳಂಗಳಿಂ ಪ್ರಕಾಶಿಸುತ್ತಿರ್ಪುದೇ ವಿಶುದ್ಧಿಚಕ್ರವು. ತದ್ಬೀಜಮಾಗಿರ್ಪ ಷೋಡಶಸ್ವರಂಗಳಲ್ಲಿ ಹ್ರಸ್ವಸ್ವರಂಗಳೆಲ್ಲವೂ ಆತ್ಮಚಕ್ರಬೀಜ ದೀರ್ಘಸ್ವರಂಗಳೆಲ್ಲವೂ ಆಕಾಶಚಕ್ರಬೀಜ, ಮುಕುಳನವೇ ಹ್ರಸ್ವ ; ಅದು ಆತ್ಮರೂಪಮಾದ ಸಂಹಾರಮಯಮಾಗಿಹುದು. ವಿಕಸನವೇ ದೀರ್ಘ; ಅದು ಮಿಥ್ಯಾರೂಪಮಾದ ಸೃಷ್ಟಿಮಯಮಾಗಿಹುದು. ಇಂತಪ್ಪ ಆತ್ಮಾಕಾಶಚಕ್ರಗಳೆರಡೂ ಏಕಾಕಾರಮಾಗಿರ್ಪುದೇ ವಿಶುದ್ಧಿಚಕ್ರವು. ಅನಾಹತದಲ್ಲಿ ತನುವಿಗೆ ಪೂರ್ವರೂಪಮಾದ ವಾಯುವೇ ಸ್ಥಾನ, ನಿಧನಕ್ಕೆ ವಾಸನಾಗ್ರಹಣರೂಪಮಾದ ಆಗ್ನೇಯವಾಯುವೇ ಸ್ಥಾನ, ಸಹಜವೆಂದರೆ ಪ್ರಕೃತಿ, ಆ ಸಹಜಕ್ಕೆ ದಕ್ಷಿಣರೂಪಮಾದ ವಿಸರ್ಜನವಾಯುವೇ ಸ್ಥಾನ, ಸೂಹೃತಿಗೆ ನೈರುತ್ಯರೂಪಮಾದ ಗರ್ಭವಾಯುವೇ ಸ್ಥಾನ, ಸುತಕ್ಕೆ ಪಶ್ಚಿಮದಲ್ಲಿರ್ಪ ಹೃದಯವಾಯುವೇ ಸ್ಥಾನ, ರಿಪುವಿಗೆ ಕಂಠದಲ್ಲಿ ವಾಯವ್ಯರೂಪಮಾಗಿರ್ಪ ಉತ್ಕøಷ್ಟಘೋಷವಾಯುವೇ ಸ್ಥಾನ, ಜಾಯಕ್ಕೆ ಉತ್ತರದಲ್ಲಿರ್ಪ ಜಿಹ್ವಾಚಲನವಾಯುವೇ ಸ್ಥಾನವಾಯಿತ್ತು. ನಾದವಿಸರ್ಜನಸ್ಥಾನವೇ ಜಿಹ್ವಾಚಲನ, ಬಿಂದುವಿಸರ್ಜನಸ್ಥಾನವೇ ಜಾಯೆ, ಜಾಯೆಯಿಂದಾದ ಸುತಾದಿ ರೂಪಗಳಿಗೆ ಜಿಹ್ವಾವಾಯುವಿನಿಂದಾದ ನಾಮವೇ ಕ್ರಿಯಾಸಂಬಂಧಮಾದುದರಿಂದಲೂ ಪತಿವಾಕ್ಯವನನುಸರಿಸುವುದೇ ಸತಿಗೆ ಧರ್ಮವಾದುದರಿಂದಲೂ ಜಾಯಿಗೆ ಜಿಹ್ವಾವಾಯುವೇ ಸ್ಥಾನವಾಯಿತ್ತು . ನಿಧನಕ್ಕೆ ಜಿಹ್ವಾವಾಯುವಿಗೂ ನಾಸಿಕಾವಾಯುವಿಗೂ ಸಂಧಿಯಲ್ಲಿ ಕ್ಷಯರಹಿತಮಾದ ಅಕ್ಷರವಾಯುವೇ ಸ್ಥಾನವಾಯಿತ್ತು. ಪೂರ್ವದಲ್ಲಿರ್ಪ ಅನಾಹತಚಕ್ರದಲ್ಲಿ ಪಶ್ಚಿಮದಲ್ಲಿರ್ಪ ಪೃಥ್ವೀಚಕ್ರದ ನಾಲ್ಕುದಳಂಗಳು ಕೂಡಿರ್ಪುದರಿಂ ಅನಾಹತನಲ್ಲಿ ಹನ್ನೆರಡು ದಶಗಳಾದವು. ಅನಾಹತದಲ್ಲಿ ಬೆರೆದ ನಾಲ್ಕು ದಳಂಗಳಾವುವೆಂದರೆ : ಶರೀರರೂಪಮಾದ ಪೂರ್ವಪೃಥ್ವಿಗೂ ಪುತ್ರಾದಿರೂಪಮಾದ ದಕ್ಷಿಣಪೃಥ್ವಿಗೂ ಮಧ್ಯದಲ್ಲಿರ್ಪ ಧನರೂಪಮಾದ ಆಗ್ನೇಯಪೃಥ್ವಿಯೇ ಧರ್ಮಸ್ಥಾನಮಾಯಿತ್ತು. ಪುತ್ರಾದಿದಕ್ಷಿಣಪೃಥ್ವಿಗೂ ಧಾತುರೂಪಮಾದ ಅಂತಃಪಶ್ಚಿಮಪೃಥ್ವಿಗೂ ಸಂಧಿಕಾಲಮಾಗಿರ್ಪ ನೈರುತ್ಯಪೃಥ್ವಿಯೇ ಕರ್ಮಸ್ಥಾನಮಾಯಿತ್ತು. ಶೌಚವೇ ಕರ್ಮಕ್ಕೆ ಆದಿಯಾದುದರಿಂದ ಆ ಶರೀರದೊಳಗಿರ್ಪ ಪೃಥ್ವಿಗೂ ಜಿಹ್ವೆಯಲ್ಲಿರ್ಪ ಆಹಾರೋತ್ತರಪೃಥ್ವಿಗೂ ಸಂಧಿಯಲ್ಲಿರ್ಪ ವಾಯವ್ಯಪೃಥ್ವಿಯೇ ಲಯಸ್ಥಾನಮಾಯಿತ್ತು. ಆ ಜಿಹ್ವೆಯಲ್ಲಿರ್ಪ ಪೃಥ್ವಿಗೂ ಶರೀರದಲ್ಲಿರ್ಪ ಪೃಥ್ವಿಗೂ ಸಂಧಿಯಲ್ಲಿರ್ಪ ಅನ್ನರೂಪಮಾದ ಈಶಾನ್ಯಪೃಥ್ವಿಯೇ ವ್ಯಯಸ್ಥಾನಮಾಯಿತ್ತು. ಇಂತು ಭಾವರೂಪಮಾದ ದ್ವಾದಶದಳಗಳುಳ್ಳುದೇ ಅನಾಹತಚಕ್ರವು. ಮಣಿಪೂರಕಚಕ್ರದಲ್ಲಿ ಪೂರ್ವರೂಪಮಾದ ಅಗ್ನಿಯೇ ಸ್ಥಾನವು, ಅದು ಆದಿಯಲ್ಲಿ ಶ್ರೋತ್ರವಿಷಯದಿಂದುತ್ಪನ್ನಮಾಗುತ್ತಿರ್ಪುದರಿಂ ಅದಕ್ಕೆ ಶ್ರೋತ್ರವೇ ಸ್ಥಾನಮಾಯಿತ್ತು. ಗುಹ್ಯೆಯಲ್ಲಿರ್ಪ ಅಗ್ನಿಗೂ ಉದರದಲ್ಲಿರ್ಪ ದಕ್ಷಿಣಾಗ್ನಿಗೂ ಸಂಧಿಯಲ್ಲಿ ಬೀಜಸ್ಥಾನವಾಗಿ ಪ್ರಕಾಶಿಸುತ್ತಿರ್ಪ ಕಾಮರೂಪಮಾದ ಆಗ್ನೇಯಾಗ್ನಿಗೆ ತ್ವಕ್ಕೇ ಸ್ಥಾನಮಾಯಿತ್ತು , ಉದರದಲ್ಲಿರ್ಪ ದಕ್ಷಿಣಾಗ್ನಿಯು ರೂಪಮಾಗಿಹುದು. ದೀಪನವೆಂದರೆ ವಾಂಛೆ, ಅಂತಪ್ಪ ವಾಂಛೆಯು ನೇತ್ರಮೂಲಕಮಾದುದರಿಂದಲೂ ರೂಪಕ್ಕೆ ನೇತ್ರವೇ ಕಾರಣಮಾದುದರಿಂದಲೂ ರೂಪಮಾಗಿರ್ಪ ಆಹಾರದಿಂದಾ ದೀಪನವೇ ನೇತ್ರದಲ್ಲಿರ್ಪ ಪಶ್ಚಿಮಾಗ್ನಿಯಾಗಿ ನಾಸಿಕಾಗ್ರದಲ್ಲೇಕಮಾಗಿ ಕೂಡುತ್ತಿರ್ಪುದರಿಂದ ನಾಸಿಕಾಗ್ರದಲ್ಲಿರ್ಪ ಸಮದೃಷ್ಟಿಯು ಸಕಲಯೋಗಕ್ಕೂ ಕಾರಣಮಾಗಿರ್ಪುದರಿಂ ನೇತ್ರಾಗ್ನಿಗೆ ನಾಸಿಕವೇ ಸ್ಥಾನಮಾಯಿತ್ತು. ಪಾಣಿಗೂ ಗುಹ್ಯಕ್ಕೂ ಸಂಧಿಕಾಲಮಾಗಿರ್ಪ ಸ್ವಸ್ತ್ರೀ ವಿವಾಹಸಾಕ್ಷಿಕವಾದ ಈಶಾನ್ಯಹೋಮಾಗ್ನಿಗೂ ಜಾಯಾಪಾದವೇ ಸ್ಥಾನಮಾಯಿತ್ತು. ಲಾಜಾಹೋಮಕಾಲದಲ್ಲಿ ಜಾಯಾಪಾದದಿಂದಗ್ನಿ ಸಿದ್ಧವಾಗುತ್ತಿರ್ಪುದರಿಂ ಆ ಹೋಮಾಗ್ನಿಯನ್ನು ಪಾದದಲ್ಲಿ ತಂದು ಶಿಲೆಯಲ್ಲಿ ಆವಾಹನೆಯಂ ಮಾಡುತ್ತಿರ್ಪುದರಿಂ ಈಶ್ವರರೂಪಮಾದ ಅಗ್ನಿಗೂ ಗಿರಿಜಾರೂಪಮಾದ ಶಿಲೆಗೂ ಆ ಪಾದವೇ ಕಾರಣಮಾಗಿರ್ಪುದರಿಂ ಈಶಾನ್ಯಾಗ್ನಿಗೆ ಪಾದವೇ ಸ್ಥಾನಮಾಯಿತ್ತು . ಈ ಮಣಿಪೂರಕದಶದಳಗಳಲ್ಲಿ ಅಗ್ನಿದಳಗಳೆಂಟು, ಜಲದಳಗಳೆರಡು, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಗುಹ್ಯದಳವೇ ಸ್ಥಾನಮಾಯಿತ್ತು, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಸಂಧಿಯಲ್ಲಿರ್ಪ ಆಗ್ನೇಯಬಿಂದುಜಲಕ್ಕೂ ಗುದವೇ ಸ್ಥಾನಮಾಯಿತ್ತು, ಆ ಬಿಂದುವು ಗುದಸ್ಥಾನದಲ್ಲಿ ನಿಂತು ಗುಹ್ಯಮುಖದಲ್ಲಿ ನಿವೃತ್ತಿಯಾಗುತ್ತಿರ್ಪುದರಿಂ ಆ ಬಿಂದುವಿಗೆ ಗುದವೇ ಸ್ಥಾನಮಾಯಿತ್ತು. ಇಂತಪ್ಪ ದಶದಳಂಗಳುಳ್ಳುದೇ ಮಣಿಪೂರಕ. ಸ್ವಾಧಿಷಾ*ನದಲ್ಲಿ ಯಜನಕ್ಕೆ ಕರ್ಮಾಯಾಸದಿಂದುತ್ಪನ್ನಮಾಗುವ ಪೂರ್ವಜಲವೇ ಸ್ಥಾನಮಾಯಿತ್ತು. ಯಾಜನಕ್ಕೆ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ಮಧ್ಯದಲ್ಲಿರ್ಪ ಜಲವೇ ಸ್ಥಾನಮಾಯಿತ್ತು, ಜಿಹ್ವೆಯಲ್ಲಿರ್ಪ ಪಶ್ಚಿಮಜಲವೇ ಅಧ್ಯಯನಸ್ಥಾನಮಾಯಿತ್ತು, ಜಿಹ್ವೆಯಲ್ಲಿರ್ಪ ಜಲಕ್ಕೂ ನೇತ್ರದಲ್ಲಿರ್ಪ ಉತ್ತರಜಲಕ್ಕೂ ಮಧ್ಯದಲ್ಲಿ ನಾಸಿಕದಲ್ಲಿ ವಾಸನಾಮುಖದಿಂ ದ್ರವಿಸುತ್ತಿರ್ಪ ವಾಯವ್ಯಜಲವೇ ಅಧ್ಯಾಪನಸ್ಥಾನಮಾಯಿತ್ತು, ನೇತ್ರದಲ್ಲಿರ್ಪ ಆನಂದಜಲವೇ ದಾನಕ್ಕೆ ಸ್ಥಾನಮಾಯಿತ್ತು, ನೇತ್ರದಲ್ಲಿರ್ಪ ಜಲಕ್ಕೂ ಗುಹ್ಯೆಯಲ್ಲಿರ್ಪ ಜಲಕ್ಕೂ ಮಧ್ಯದಲ್ಲಿ ಮನೋಮುಖದಲ್ಲಿ ದ್ರವಿಸುತ್ತಿರ್ಪ ಮೋಹಜಲವೇ ಪ್ರತಿಗ್ರಹಸ್ಥಾನಮಾಯಿತ್ತು. ಇಂತಪ್ಪ ಆರುದಳಂಗಳುಳ್ಳುದೇ ಸ್ವಾಧಿಷಾ*ನಚಕ್ರವು, ಆಧಾರದಲ್ಲಿ ಬ್ರಹ್ಮಚರ್ಯಕ್ಕೆ ತನುವೇ ಸ್ಥಾನಮಾಯಿತ್ತು. ಬ್ರಹ್ಮಚರ್ಯವೆಂದರೆ ಕರ್ಮ. ``ಶರೀರಮಾಧ್ಯಂ ಖಲು ಧರ್ಮಸಾಧನಂ'' ಎಂದಿರುವುದರಿಂದ ಆ ಕರ್ಮಮೂಲವೇ ಶರೀರಮಾದುದರಿಂದದಕ್ಕೆ ದೇಹವೇ ಸ್ಥಾನಮಾಯಿತ್ತು. ಪುತ್ರಾದಿ ದಕ್ಷಿಣಪೃಥ್ವಿಯೇ ಗೃಹಸ್ಥಸ್ಥಾನಮಾಯಿತ್ತು. ಶರೀರದೊಳಗೆ ಮಾಂಸಾದಿಧಾತುರೂಪಮಾಗಿರ್ಪ ಪಶ್ಚಿಮಪೃಥ್ವಿಯೇ ವಾನಪ್ರಸ್ಥಮಾಯಿತ್ತು. ಜಿಹ್ವೆಯಲ್ಲಿರ್ಪ ಉತ್ತರಪೃಥ್ವಿಯೇ ಪರಿಶುದ್ಧಮಾಗಿ ಶಿವಪ್ರಸಾದಕಾರಣಮಾಗಿರ್ಪುದು. ಜಿಹ್ವೆಯಲ್ಲಿರ್ಪ ಅನ್ನವೇ ದೀಪನಹರಣವೂ ತೃಪ್ತಿಕಾರಣವೂ ಜ್ಞಾನಾನಂದಕಾರಣವೂ ಆಗಿರ್ಪುದು. ಅಂತಪ್ಪ ಅನ್ನವೇ ಕೇವಲ ಸತ್ವಸ್ವರೂಪಮಾಗಿ ರಕ್ಷಣರೂಪಮಾದುದರಿಂದಾ ಸತ್ವವು ಸ್ಥಾನಮಾಗಿರ್ಪುದೇ ಸಂನ್ಯಾಸವು, ಇಂತಪ್ಪ ಚತುರ್ದಳಂಗಳಿಂದೊಪ್ಪುತ್ತಿರ್ಪುದೇ ಆಧಾರಚಕ್ರವು. ಪೃಥ್ವಿಗೆ ಈಶಾನ್ಯರೂಪಮಾಗಿರ್ಪ ಅನ್ನವೇ ಆಧಾರಚಕ್ರದಲ್ಲಿ ಆಚಾರಲಿಂಗಮಾಯಿತ್ತು. ಆ ಅನ್ನವೇ ಪ್ರಾಣಮಾಗಿರ್ಪುದರಿಂ ನಾಸಿಕವನನುಸರಿಸುತ್ತಿರ್ಪುದು. ಜಲಕ್ಕೆ ಈಶಾನ್ಯಮಾಗಿರ್ಪ ದಯಾರಸವೇ ಸ್ವಾಧಿಷಾ*ನದಲ್ಲಿ ಗುರುಲಿಂಗಮಾಯಿತ್ತು. ಅದು ಜಿಹ್ವಾಮುಖದಿಂ ರಕ್ಷಿಸುತ್ತಿರ್ಪುದರಿಂ ಜಿಹ್ವೆಯನನುಸರಿಸುತ್ತಿರ್ಪುದು. ಅಗ್ನಿಗೆ ಈಶಾನ್ಯವಾದ ಹೋಮಾಗ್ನಿಯೇ ಮಣಿಪೂರಕದಲ್ಲಿ ಶಿವಲಿಂಗಮಾಯಿತ್ತು. ಅದು ಯಾವಜ್ಜೀವವೂ ಅಗ್ನಿಗಿಂತಲೂ ಭಿನ್ನಮಾಗದೆ ಪ್ರಕಾಶಿಸುತ್ತಿರುವುದರಿಂ ತೇಜೋಮಯವಾದ ನೇತ್ರವನನುಸರಿಸುತ್ತಿರ್ಪುದು. ವಾಯುವಿಗೆ ಈಶಾನ್ಯರೂಪಮಾದ ಅಕ್ಷರಮಯಮಾದ ಮಂತ್ರವಾಯುವೇ ಅನಾಹತದಲ್ಲಿ ಜಂಗಮಲಿಂಗಮಾಯಿತ್ತು. ಅದು ಕ್ಷಯವಿಲ್ಲದ್ದು ; ಆ ಮಂತ್ರವು ಶರೀರವನ್ನು ಪವಿತ್ರವಂ ಮಾಡಲು, ಶರೀರ ಪೂರ್ವವಾಸನೆಯಳಿದು ಮಂತ್ರಮಯಮಾಗಿರ್ಪುದರಿಂ ತ್ವಕ್ಕನ್ನನುಸರಿಸಿರ್ಪುದು. ಆಕಾಶಕ್ಕೆ ಈಶಾನ್ಯಮಾದ ಉಪದೇಶಾಕಾಶವೇ ವಿಶುದ್ಧದಲ್ಲಿ ಪ್ರಸಾದಲಿಂಗಮಾಯಿತ್ತು. ಅದು ಪರತತ್ವಮಯಮಾಗಿರ್ಪುದರಿಂ ಶ್ರೋತ್ರವನನುಸರಿಸಿರ್ಪುದು. ಆತ್ಮನಿಗೆ ಈಶಾನ್ಯದಲ್ಲಿರ್ಪ ಶಿವಜ್ಞಾನವೇ ಆಗ್ನೇಯದಲ್ಲಿ ಮಹಾಲಿಂಗಮಾಯಿತ್ತು . ಅದು ಮನದೊಳ್ಕೂಡಿ ಪಂಚೇಂದ್ರಿಯಂಗಳಿಗೂ ಮನಸ್ಸೇ ಚೈತನ್ಯಮಾಗಿರ್ಪಂತೆ, ಪಂಚಲಿಂಗಂಗಳಿಗೆ ತಾನೇ ಚೈತನ್ಯಮಾಗಿ ದೃಷ್ಟವಶದಿಂದುದಿಸಿದ ಕಾರಣ ಆ ದೃಷ್ಟಕಾರಣಮಾದ ಲಲಾಟವನನುಸರಿಸಿರ್ಪುದು. ಆ ಶಿವಜ್ಞಾನದಿಂ ಗುರುಮುಖದಿಂದುದಿಸಿದ ಕರ್ಮಯೋಗ್ಯಮಾದುದೇ ಇಷ್ಟಲಿಂಗವು. ಆತ್ಮತೇಜಸ್ಸನ್ನೇ ಬಹಿಷ್ಕರಿಸಿ ಹೋಮಾಗ್ನಿಯಂ ಪ್ರಬಲವಂ ಮಾಡಿ ಇಷ್ಟಲಿಂಗಪ್ರಸಾದಸಾಮಗ್ರಿಯನಾಹುತಿಗೊಟ್ಟು, ಆ ತೇಜಸ್ಸನ್ನಾತ್ಮಸಮಾರೋಪಣೆಯಂ ಮಾಡಿ, ತದ್ಯಜನಶೇಷಮಾಗಿರ್ಪ ರುಚಿಮಯದಿವ್ಯತೇಜಸ್ಸೇ ಶಿವಧ್ಯಾನರೂಪಮಾದ ಪ್ರಾಣಲಿಂಗಾನುಭವವು. ಆ ಶಿವಧ್ಯಾನದಿಂದ ಗುರೂಪದೇಶಸಿದ್ಧಮಾಗಿರ್ಪ ಮಹಪ್ರಕಾಶವೇ ಪ್ರಾಣಲಿಂಗವು. ತೃಪ್ತಿರೂಪಮಾದ ತತ್ವಾನುಭಾವವೇ ನಿಜಾನುಭವಮಾಗಿರ್ಪುದೇ ಭಾವಲಿಂಗವು. ಗುರುದತ್ತವಾದಿಷ್ಟಲಿಂಗದಿಂ ಶರೀರವು ಪೂತಮಾಗಿ, ಜಂಗಮದತ್ತ ಶಿವಧ್ಯಾನತೇಜಸ್ಸಿನಿಂ ಪ್ರಾಣವು ಪವಿತ್ರಮಾಗಿ ಮಹಾಚಿದ್ರೂಪಮಾದ ಶಿವಜ್ಞಾನನಿಮಿತ್ತಸಿದ್ಧಿಯಿಂ ಭಾವವು ಪರಿಶುದ್ಧಮಾಗಿ, ಆ ಶರೀರವೇ ಇಷ್ಟಲಿಂಗಕರಣಮಾಗಿಯೂ ಪ್ರಾಣವೇ ಧ್ಯಾನಕರಣಮಾಗಿಯೂ ಭಾವವೇ ಸಿದ್ಧೀಕರಣಮಾಗಿಯೂ ಆ ಕರಣಂಗಳ್ಗೆ ಶಕ್ತಿಯಾಗಿಯೂ ಇರ್ಪುದರಿಂದಾ ಲಿಂಗವೇ ಪತಿ ತಾನೇ ಸತಿಯಾಗಿರ್ಪುದರಿಂದೆರಡರಸಂಗವೇ ಪರಮಾನಂದಮಯಮಾಗಿರ್ಪುದೇ ಪರಿಣಾಮವು. ಅಂತಪ್ಪ ಲಿಂಗಸಂಗಪರಮಾನಂದರಸದಿಂ ಪರವಶನಾಗುವಂತೆನ್ನಂ ಮಾಡಿ ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇನ್ನಷ್ಟು ... -->