ಶ್ರೀಗುರುವಾದಾತನು ಸಕಲಾಗಮಂಗಳ ಹೃದಯವನರಿತು
ತನ್ನ ತಾನರಿದು ಸರ್ವಾಚಾರ ತನ್ನಲ್ಲಿ ನೆಲೆಗೊಂಡು
ಉಪದೇಶವ ಮಾಡುವ ಕ್ರಮವೆಂತೆಂದಡೆ:
ಬ್ರಾಹ್ಮಣನ ಮೂರು ವರುಷ ನೋಡಬೇಕು,
ಕ್ಷತ್ರಿಯನ ಆರು ವರುಷ ನೋಡಬೇಕು,
ವೈಶ್ಯನ ಒಂಬತ್ತು ವರುಷ ನೋಡಬೇಕು,
ಶೂದ್ರನ ಹನ್ನೆರಡು ವರುಷ ನೋಡಬೇಕು,
ನೋಡಿದಲ್ಲದೆ ದೀಕ್ಷೆ ಕೊಡಬಾರದು _ ವೀರಾಗಮೇ.
``ಬ್ರಾಹ್ಮಣಂ ತ್ರೀಣಿ ವರ್ಷಾಣಿ ಷಡಬ್ದಂ ಕ್ಷತ್ರಿಯಂ ತಥಾ
ವೈಶ್ಯಂ ನವಾಬ್ದಮಾಖ್ಯಾತಂ ಶೂದ್ರಂ ದ್ವಾದಶವರ್ಷಕಂ
ಈ ಕ್ರಮವನರಿಯದೆ,
ಉಪಾಧಿವಿಡಿದು ಉಪದೇಶವ ಮಾಡುವಾತ ಗುರುವಲ್ಲ,
ಉಪಾಧಿವಿಡಿದು ಉಪದೇಶವ ಮಾಡಿಸಿಕೊಂಬಾತ ಶಿಷ್ಯನಲ್ಲ.
ಇವರಿಬ್ಬರ ನಿಲವು ಒಂದೆ ಠಕ್ಕನ ಮನೆಗೆ ಠಕ್ಕ ಬಿದ್ದಿನ ಬಂದಂತೆ
ಈ ಗುರುಶಿಷ್ಯರಿಬ್ಬರನು ರೌರವನರಕದಲ್ಲಿಕ್ಕುವ
ಕೂಡಲಚೆನ್ನಸಂಗಯ್ಯ.