ಅಥವಾ

ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಲವನರಸುವರೆ ಇದರೊಳು ಛಲವನರಸುವರೆ ಹೊಲೆಗೇರಿಯಲೊಂದು ಎಲುವಿನ ಮನೆಗಟ್ಟಿ ತೊಗಲಹೊದಿಕೆ, ನರವಿನ ಹಂಜರ ಕುಲವನರಸುವರೆ ? ಹೊಲತಿ ಹೊಲೆಯ[ನು] ಹೋಗಿ ಹೊಲೆಯಲ್ಲಿ ಮಿಂದಡೆ ಹೊಲೆ ಹೋಯಿ[ತ್ತಿ]ಲ್ಲ, ಕುಲ ಹೋಗಲಿಲ್ಲ. ಕಂಬಳಿಯೊಳಗೆ ಕೂಳಕಟ್ಟಿ ಕೂದಲನರಸುವರೆ ಇಂಥ ಡಂಬಕರ ಕೂಡಲಸಂಗಮದೇವರು ಮೆಚ್ಚರಯ್ಯಾ.
--------------
ಬಸವಣ್ಣ
ಒಲೆಯ ಬೂದಿಯ ಬಿಲಿಯಲು ಬೇಡ, ಒಲಿದಂತೆ ಹೂಸಿಕೊಂಡಿಪ್ಪುದು. ಹೂಸಿ ಏನು ಫಲ, ಮನದಲ್ಲಿ ಲೇಸಿಲ್ಲದನ್ನಕ್ಕ ಒಂದನಾಡಹೋಗಿ ಒಂಬತ್ತನಾಡುವ ಡಂಬಕರ ಮೆಚ್ಚ ಕೂಡಲಸಂಗಯ್ಯ. 114
--------------
ಬಸವಣ್ಣ
ಶಿವಯೋಗಿ ಶಿವಯೋಗಿ ಎಂದ್ಹೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ ! ನಿಮ್ಮ ಅಂಗಕುಳ ಒಳಗೊಂಡು ಕಾಮಿನಿಯರ ಬೆಳೆದ ಹೊಲನ ಹೊಕ್ಕು ಕೂಡಿಸಿ ತಿಂಬುವ ಪಶುವಿನ ನಾಲ್ಕು ಕಾಲನು ಮುರಿದು, ಘಟ್ಟವೆಂಬ ಗವಿಯೊಳಗೆ ಮನದ ದಿಟ್ಟವೆಂಬ ಗೂಟಕ್ಕೆ ಕಟ್ಟಿ, ತನುವೆಂಬ ಗಿರಿಗಹ್ವರದೊಳಗೆ ಬೆಳೆದಿದ್ದ ನಾನಾ ಪರಿಪರಿಯ ಗಿಡ, ಕಸಾದಿಗಳೆಲ್ಲವ ಭಾನುವೊಲು ಮಂತ್ರದಿಂದ್ಹಲ್ಲ ಕಿತ್ತು ಸುಟ್ಟು ಬೂದಿಯನು ಮಾಡಿ ಸರ್ವಕ್ಕೆಲ್ಲ ಪಣಮಾಡಿಕೊಂಡು ಇರಬಲ್ಲರೆ, ಹಲವು ಕಡೆಗೆ ಹರಿದಾಡುವಂತೆ ಮನವನೆಲ್ಲ ನೆಲೆಗೊಳಿಸಿ ನಿಲಿಸಿದಂತಾ ಮಹಿಮನ ಶಿವಯೋಗೀಶ್ವರನೆಂದೆನ್ನಬಹುದು ಕಾಣಿರೊ ! ನಿಮ್ಮ ಅಂಗ ಗುರುಕೊಟ್ಟ ಅರಿವಿನ ಅರಿವೆಯನು ಬಿಟ್ಟು, ಮರವಿನ ಮನೆಯೊಳಗೆ ಮೂರ್ಛೆಗೈದರೆ, ನಿಮ್ಮನ್ನು ಹರಕೊಂಡು ತಿಂದೆನೆಂದು ಬರುವ ಕಾಳೋರಗನೆಂಬ ಸರ್ಪನ ಉತ್ತರದ ಬಾಯ ಮುಚ್ಚಿ ನವದ್ವಾರಂಗಳನ್ನೆಲ್ಲ ಹೊಲಿದು, ಒಂಬತ್ತು ಬಾಗಿಲಿಗೆ ಬೀಗಮುದ್ರೆಯ ಮಾಡಿ, ತುಂಬಿದಾ ಕುಂಭದೊಳಗಿನ ಉದಕದಂತೆ ಇರಬಲ್ಲರೆ ಅಂತಹವನಿಗಾ ಕಾಲನ ಬಾಧೆಯ ಗೆಲಿದಂಥ ಮಹಿಮನೆಂದೆನ್ನಬಹುದು ಕಾಣಿರೊ! ನಿಮ್ಮಂಗ ಆಧಾರವೆಂಬ ಗದ್ದಿಗೆಯ ಮೇಲೆ ಪದ್ಮಾಸನವೆಂಬ ಪವನಗ್ರಂಥಿಯ ಹೊಲಿದು, ನಿರ್ಮಳ ಸುಚಿತ್ತದಲ್ಲಿ ಮೂರ್ತವನು ಮಾಡಿಕೊಂಡು, ಪೂರ್ವದಿಕ್ಕಿನಲ್ಲಿ ಮುಖವನಿಕ್ಕಿ ಪಂಚಮಕ್ಕೆ ದೃಷ್ಟಿಯನ್ನಿಟ್ಟು ನೋಡಲಾಗಿ, ಅಡರೇರಿ ಬರುವ ಸಿಡಿಲು ಮಿಂಚಿನ ಅವಸ್ಥೆ ಶೌರ್ಯವನು ಕಂಡು, ಪಶ್ಚಿಮಕ್ಕೆ ಮುಖವ ತಿರುವಿ ಪೂರ್ವಕ್ಕೆ ದೃಷ್ಟಿಯನ್ನಿಟ್ಟು ನೋಡಲಾಗಿ ಭಾನುವಿನ ಸಮೀಪದಲ್ಲಿ ಇದ್ದ ಬಯಲಿಗೆ ಬಯಲು ಆಕಾರಗೆಟ್ಟ ಪುರುಷನ ನಿಲವು ನಿಧಾನವ ನೋಡಿಕೊಂಡು ಸರ್ವಮುನಿಜನಂಗಳಿಗೆಲ್ಲ ಅರ್ತಿಯನು ಮಾಡಿ ಹೇಳಿ ನಿರ್ಮಾಯವಾಗಿ ಹೋಗಬಲ್ಲರೆ ಆತನಿಗಾ ಮರಣಕ್ಕೆ ವಿಧಿಹಿತನಾದಂಥ ಮಹಾಮಹೇಶ್ವರನೆಂದೆನ್ನಬಹುದು ಕಾಣಿರೊ ! ಇಂತು ಇದನರಿಯದೆ ಯೋಗಿ ಶ್ರವಣ ಸನ್ಯಾಸಿ ಕಾಳಾಮುಖಿ ಪಾಶುಪತಿಗಳೆಂಬ ಹೆಸರಿಟ್ಟುಕೊಂಡು ದೇಶವ ತಿರುಗುವ ಶಿವಯೋಗಿಗಳೆಂಬುವ ಮೋಸ ಡಂಬಕರ ಕುಟಿಲಗಳ ಕಂಡು ನಗುತ್ತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಬಂದು ಬಲ್ಲಹ ಬಿಡಲು ಹೊಲೆಗೇರಿ ಎಂಬ ಹೆಸರೊಳವೆ ಅಯ್ಯಾ ಲಿಂಗವಿದ್ದವರ ಮನೆ ಕೈಲಾಸವೆಂದು ನಂಬಬೇಕು, ಚಾಂಡಾಲವಾಟಿಕಾಯಾಂ ವಾ ಶಿವಭಕ್ತಃ ಸ್ಥಿತೋ ಯದಿ ತತ್‍ಶ್ರೇಣಿಃ ಶಿವಲೋಕಸ್ಯ ತದ್ ಗೃಹಂ ಶಿವಮಂದಿರಮ್ ಎಂದುದಾಗಿ, ಲೋಕದ ಡಂಬಕರ ಮಾತು ಬೇಡ, ಕೂಡಲಸಂಗನಿದ್ದುದೇ ಕೈಲಾಸ.
--------------
ಬಸವಣ್ಣ
-->