ನರರು ಸುರರು ನವಕೋಟಿಯುಗಗಳ ಪ್ರಳಯಕ್ಕೆ ಒಳಗಾಗಿ ಹೋದರು,
ಒಳಗಾಗಿ ಹೋಹಲ್ಲಿ ಸುರಪತಿಗೆ ಪರಮಾಯು ನೋಡಿರೆ !
ಅಂಥ ಸುರಪತಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ,
ಚಿಟ್ಟಜನೆಂಬ ಋಷಿಗೆ ಒಂದು ಚಿಟ್ಟು ಸಡಿಲಿತ್ತು ನೋಡಿರೆ !
ಅಂಥ ಚಿಟ್ಟನೆಂಬ ಋಷಿ ನವಕೋಟಿಯುಗ
ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಚಿಪ್ಪಜನೆಂಬ ಋಷಿಗೆ ಒಂದು ಚಿಪ್ಪು ಸಡಿಲಿತ್ತು ನೋಡಿರೆ !
ಅಂಥ ಚಿಪ್ಪಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಡೊಂಕಜನೆಂಬ ಋಷಿಗೆ ಒಂದು ಡೊಂಕು ಸಡಿಲಿತ್ತು ನೋಡಿರೆ !
ಅಂಥ ಡೊಂಕಜನೆಂಬ ಋಷಿ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ರೋಮಜನೆಂಬ ಋಷಿಗೆ ಒಂದು ರೋಮ ಸಡಿಲಿತ್ತು ನೋಡಿರೆ !
ಅಂಥ ರೋಮಜನೆಂಬ ಋಷಿ
ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಆದಿಬ್ರಹ್ಮಂಗೆ ಆಯುಷ್ಯವು ನೂರಾಯಿತ್ತು ನೋಡಿರೆ !
ಅಂಥ ಆದಿಬ್ರಹ್ಮ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಆದಿನಾರಾಯಣಂಗೆ ಒಂದು ದಿನವಾಯಿತ್ತು ನೋಡಿರೆ !
ಅಂಥ ಆದಿ ನಾರಾಯಣ ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ರುದ್ರಂಗೆ ಕಣ್ಣೆವೆ ಹಳಚಿತ್ತು ನೋಡಿರೆ !
ಅಂಥ ರುದ್ರರು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ಫಣಿಮುಖರೊಂದು ಕೋಟಿ, ಪಂಚಮುಖರೊಂದು ಕೋಟಿ,
ಷಣ್ಮಮುಖರೊಂದು ಕೋಟಿ, ಸಪ್ತಮುಖರೊಂದು ಕೋಟಿ
ಅಷ್ಟಮೂಖರೊಂದು ಕೋಟಿ, ನವಮುಖರೊಂದು ಕೋಟಿ
ದಶಮುಖರೊಂದು ಕೋಟಿ_ ಇಂತಿವರೆಲ್ಲರ
ಕೀರೀಟದಾಭರಣಂಗಳು ಬಿದ್ದವು ನೋಡಿರೆ !
ಅಂಥ ಸಪ್ತಕೋಟಿಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ ಹೋಹಲ್ಲಿ
ನಂದಿವಾಹನರೊಂದು ಕೋಟಿ, ಭೃಂಗಿ ಪ್ರಿಯರೊಂದು ಕೋಟಿ
ಚಂದ್ರಪ್ರಿಯರೊಂದು ಕೋಟಿ_ ಇಂತೀ ತ್ರಿಕೋಟಿಗಳ ತಲೆಗಳು
ಬಾಗಿದವು ನೋಡಿರೆ !
ಅಂಥ ತ್ರಿಕೋಟಿಗಳ ತಲೆಗಳು ನವಕೋಟಿಯುಗ ಪ್ರಳಯಕ್ಕೆ ಒಳಗಾಗಿ
ಹೋಹಲ್ಲಿ
ಕೂಡಲಚೆನ್ನಸಂಗಯ್ಯಾ
ನಮ್ಮ ಬಸವಣ್ಣನೀ ಸುದ್ದಿಯನೇನೆಂದುವರಿಯನು