ಅಥವಾ

ಒಟ್ಟು 102 ಕಡೆಗಳಲ್ಲಿ , 34 ವಚನಕಾರರು , 84 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆಂಬ ವಿಧಾಂತನು ಕಾಯವೆಂಬ ಕಣೆಯ ನೆಟ್ಟು, ನಾನಾ ಬಹುವಿಷಯಂಗಳೆಂಬ ಸುತ್ತ ನೇಣ ಕಟ್ಟಿ, ನೋಡುವ ಕರಣಂಗಳು ಮೆಚ್ಚುವಂತೆ ಕಾಮದ ಕತ್ತಿಯ ತಪ್ಪಿ, ಕ್ರೋಧದ ಇಟ್ಟಿಯ ತಪ್ಪಿ, ಮೋಹದ ಕಠಾರಿಯ ತಪ್ಪಿ, ಮೆಟ್ಟಿದ ಮಿಳಿಗೆ ತಪ್ಪದೆ ಲೆಂಗಿಸಿ, ಸುತ್ತಣ ಕೈದ ತಪ್ಪಿಸಿ, ಚಿತ್ತ ಅವಧಾನವೆಂದು ಹಾಯ್ದುಳಿದು, ಮನವೆಂಬ ವಿಧಾಂತನಾಡಿ, ಗೆದ್ದ ಜಗಲೋಲ ಡೊಂಬರ. ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗದ ಬಹುವಿಷಯ ಹಿಂಗಿದ ಕೂಟ.
--------------
ಸಗರದ ಬೊಮ್ಮಣ್ಣ
ನಾನಾ ರೋಗಂಗಳು ಬಂದು ದೇಹವ ಹಿಡಿದಲ್ಲಿ ಶಿವಾರ್ಚನೆಯ ಬೆರಕೊಳ್ಳಿ, ಸಕಲಪುಷ್ಪಂಗಳಿಂದ ಪೂಜೆಯ ಮಾಡಿಕೊಳ್ಳಿ, ಪಂಚಾಕ್ಷರಿ ಪ್ರಣಮವ ತಪ್ಪದೆ ತ್ರಿಸಂದ್ಥಿಯಲ್ಲಿ ನೆನಹುಗೊಳ್ಳಿ, ಇವರಿಂದ ರುಜೆದರ್ಪಂಗಡಗು, ಮರುಳಶಂಕರಪ್ರಿಯ ಸಿದ್ಧರಾಮೇಶ್ವರ ಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಭರಿತಾರ್ಪಣ ಸಹಭೋಜನ ನೈವೇದ್ಯ ಸಹ ಇಂತೀ ತ್ರಿವಿಧಭೇದಂಗಳ ಅಂಗೀಕರಿಸಿದ ಮತ್ತೆ ಕರುಳಿಲ್ಲದ ಕಲಿಯಂತೆ, ಒಡಲಿಲ್ಲದ ಅಂಗದಂತೆ, ಸಂಗವಿಲ್ಲದ ನಿರಂಗದಂತೆ, ದಗ್ಧಪಟದಂತೆ, ಒಂದನೂ ಹೊದ್ದದ ಬಹುವರ್ಣದಂತೆ, ಅಂಗವಿದ್ದೂ ಅಳಿದು ತೋರುವ ನಿರಂಗಿಗಲ್ಲದೆ ಈ ತ್ರಿವಿಧ ವ್ರತ ಪ್ರಸಾದವಿಲ್ಲ. ನಾನು ಎನಗೆ ಬಂದ ಕುತ್ತಕ್ಕೆ ಹಾಡಿ ಹರಸಿ ಮದ್ದನರೆವುತ್ತಿದ್ದೇನೆ, ಎನ್ನ ಕಾಡಬೇಡ. ಕ್ರೀ ತಪ್ಪದೆ ಎನ್ನ ಕೂಡಿಕೊ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಗುರುಲಿಂಗಜಂಗಮಾರ್ಚನೆಯ ಕ್ರಮವ ದಯೆಯಿಂದ ಕರುಣಿಪುದು ಸ್ವಾಮಿ. ಕೇಳೈ ಮಗನೆ : ತಾನಿದ್ದ ಊರಲ್ಲಿ ಗುರುವು ಇದ್ದಡೆ ನಿತ್ಯ ತಪ್ಪದೆ ದರುಶನವ ಮಾಡುವುದು. ಗುರುಪೂಜೆಯ ಮಾಡುವಾಗ ಆ ಗುರುವಿನೊಳಗೆ ಲಿಂಗ-ಜಂಗಮವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಗುರುಪೂಜೆ. ಲಿಂಗಪೂಜೆಯ ಮಾಡುವಾಗ ಆ ಲಿಂಗದೊಳಗೆ ಜಂಗಮ-ಗುರುವುಂಟೆಂದುಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಲಿಂಗಪೂಜೆ. ಇನ್ನು ಜಂಗಮದ ಪೂಜೆ ಮಾಡುವಾಗ ಆ ಜಂಗಮದೊಳಗೆ ಗುರು-ಲಿಂಗವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಜಂಗಮಪೂಜೆ. ಈ ತ್ರಿವಿಧಮೂರ್ತಿ ಭಕ್ತನ ತ್ರಿವಿಧ ತನುವಿಗೋಸ್ಕರವಾಗಿ ಇಷ್ಟ ಪ್ರಾಣ ಭಾವಲಿಂಗಸ್ವರೂಪವಾಗಿಹರೆಂದು ನಿರೂಪಿಸಿದಿರಿ ಸ್ವಾಮಿ. ಆ ತ್ರಿವಿಧಲಿಂಗದ ಪೂಜೆಯ [ಕ್ರಮವ] ಕರುಣಿಪುದು ಎನ್ನ ಶ್ರೀಗುರುವೇ. ಕೇಳೈ ಮಗನೆ : ಇಷ್ಟಲಿಂಗದ ಪೂಜೆಯ ಮಾಡುವಾಗ ಆ ಇಷ್ಟಲಿಂಗದೊಳಗೆ ಪ್ರಾಣಲಿಂಗ ಭಾವಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಇಷ್ಟಲಿಂಗದಪೂಜೆ. ಪ್ರಾಣಲಿಂಗದ ಪೂಜೆಯ ಮಾಡುವಾಗ ಆ ಪ್ರಾಣಲಿಂಗದೊಳಗೆ ಇಷ್ಟಲಿಂಗ ಭಾವಲಿಂಗವುಂಟೆಂದು ಭಾವಿಸಿ ಭಾವ-ಮನ-ಕರದೊಳಗಿರಿಸಿ ಪೂಜಿಸುವುದು ಪ್ರಾಣಲಿಂಗದಪೂಜೆ. ಭಾವಲಿಂಗದ ಪೂಜೆಯ ಮಾಡುವಾಗ ಆ ಭಾವಲಿಂಗದೊಳಗೆ ಇಷ್ಟಲಿಂಗ ಪ್ರಾಣಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಭಾವಲಿಂಗದಪೂಜೆ. ಸಾಕ್ಷಿ : 'ಏಕಮೂರ್ತಿಸ್ತ್ರಯೋ ಭಾಗಾಃ ಗುರುರ್ಲಿಂಗಂತು ಜಂಗಮಃ | ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ||' ಎಂದುದಾಗಿ, ತ್ರಿವಿಧವು ಒಂದೇ ಎಂದರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅನ್ಯರು ಮಾಡಿದುದ ಮುಟ್ಟದೆ ತನ್ನ ತಾ ಮಾಡಿಕೊಂಡು ನಡೆವುದು ಸೌಕರಿಯವಲ್ಲದೆ, ವ್ರತಕ್ಕೆ ಸಂಬಂಧವಲ್ಲ. ಅದೆಂತೆಂದಡೆ ರಸ ಗಂಧ ರೂಪು ಶಬ್ದ ಸ್ಪರ್ಶವೆಂಬ ಪಂಚೇಂದ್ರಿಯವ ಶುದ್ಧತೆಯ ಮಾಡಿ ಪಂಚಾಚಾರವೆಂಬುದನರಿತು, ರಸವ ರುಚಿಸುವಲ್ಲಿ ಬಹುದಕ್ಕೆ ಮುನ್ನವೆ ಭೇದವನರಿತು, ನಾಸಿಕ ವಾಸನೆಯ ಕೊಂಬಲ್ಲಿ ಸೋಂಕುವುದಕ್ಕೆ ಮುನ್ನವೆ ಸುಗುಣ ದುರ್ಗುಣವನರಿತು, ಕಾಂಬುದಕ್ಕೆ ಮುನ್ನವೆ ರೂಪ ನಿರೂಪೆಂಬುದನರಿತು, ನುಡಿಯುವುದಕ್ಕೆ ಮುನ್ನವೆ ಮೃದು ಕoಣವೆಂಬುದನರಿತು, ಇಂತೀ ಭೇದಂಗಳಲ್ಲಿ ಅರ್ಪಿತದ ಲಕ್ಷಣವ ಕಂಡು, ದೃಷ್ಟದಿಂದ ಕಟ್ಟುಮಾಡುವುದೆ ವ್ರತ ; ಆ ಗುಣ ತಪ್ಪದೆ ನಡೆವುದೆ ಆಚಾರ. ಇಂತೀ ವ್ರತಾಚಾರಂಗಳಲ್ಲಿ ಸರ್ವಶೀಲಸನ್ನದ್ಧನಾಗಿ, ಸರ್ವಮುಖ ಲಿಂಗಾವಧಾನಿಯಾಗಿ ಇಪ್ಪ ಅಂಗವೆ, ಆಚಾರವೆ ಪ್ರಾಣವಾಗಿಪ್ಪ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಅನಲನ ತಾಹಲ್ಲಿ, ಅನಿಲನ ಗಂಧ ಒಡಗೂಡಿ ಸೋಂಕುವಲ್ಲಿ, ಅಲ್ಲಿ ವ್ರತದಾಯತದ ಲಕ್ಷಣವನರಿಯಬೇಕು; ಮಿಕ್ಕಾದ ತಿಲ, ತೈಲ, ಫ್ಸೃತ, ಕ್ಷೀರ, ದದ್ಥಿ, ಮಧುರ, ಇಕ್ಷುದಂಡ, ಕ್ರಮುಕ, ಪರ್ಣ, ಚೂರ್ಣ, ರಸ, ದ್ರವ್ಯ ಮುಂತಾದವಿಂತು ಮಿಕ್ಕಾದ ಫಲ ಕುಸುಮ ವಿದಳ ಬಹುಧಾನ್ಯ ಮುಂತಾದ ಸಕಲಸುಯಿಧಾನಂಗಳಲ್ಲಿ ಲಿಂಗವ್ಯವಧಾನದಲ್ಲಿ ತಂದು ಸತ್ಕ್ರೀ ತಪ್ಪದೆ, ವ್ರತಕ್ಕೆ ಭಂಗವಿಲ್ಲದೆ, ನಾಣ್ಣುಡಿಗೆ ಇದಿರೆಡೆಯಾಗದೆ, ವಿಶ್ವಲಕ್ಷಣ ಶಸ್ತ್ರ ಅಭ್ಯಾಸಿಯಂತೆ, ಆವೆಡೆಯಲ್ಲಿ ಇದಿರಿಂಗೆ ತೆರಪಿಲ್ಲದೆ, ತಾ ಮುಟ್ಟುವಲ್ಲಿ ಒಳಗೆ ಕೊಂಡಂತೆ ಇರಬೇಕು. ಇಷ್ಟನರಿತು ಆಚರಣೆಯಲ್ಲಿ ಆದರಿಸಿ ನುಡಿವುದೆ ಸದ್ಭಕ್ತನ ಸ್ಥಲ. ಆತ ಸರ್ವಶೀಲಸಂಪನ್ನ ಸರ್ವಾಂಗಲಿಂಗ ಸನ್ನದ್ಧ ಆತ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ನಮ್ಮ ಆದಿಪುರಾತನರು ಪ್ರಸಾದಕ್ಕೆ ತಪ್ಪದೆ ನಡೆದರು, ನಡೆ ತಪ್ಪದೆ ನುಡಿದರು. ಇಂತಪ್ಪ ಪುರಾತನರ ವಚನಂಗಳ ಎರಡಿಲ್ಲದೆ ಕೊಂಡಾಡಿ ತನು ಮನ ಧನವ ಎರಡಿಲ್ಲದೆ ಸಮರ್ಪಿಸುವ, ಭಕ್ತರ ಭಕ್ತ ನಾನು, ಆಳಿನಾಳಯ್ಯಾ ನಾನು, ಕೂಡಲಚೆನ್ನಸಂಗನ ಶರಣರು ಸಾಕ್ಷಿಯಾಗಿ
--------------
ಚನ್ನಬಸವಣ್ಣ
ಜಗದ ಕರ್ತನ ಕೈಯಲ್ಲಿ ಹಿಡಿದುಕೊಂಡು ಮನೆಮನೆ ತಪ್ಪದೆ ತಿರುಗುವ ತುಡುಗುಣಿಯಂತೆ ಕಾಡಲಾಗದು ಭಕ್ತನ, ಬೇಡಲಾಗದು ಭವಿಯ. ಕಾಡಿ ಬೇಡಿ ನೀವು ಒಲಿಸಿಕೊಂಡಡೆ, ಬೇಂಟೆಯ ಶ್ವಾನ ಮೊಲಕ್ಕೆ ಬಾಯಿದೆರೆದಂತೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ತನಗೆ ಉಂಟಾಗಿ ಶಿಷ್ಯನ ಮನೆಗೆ ಹೋಗಿ ಕಟ್ಟಳೆಯ ವರುಷಕ್ಕೆ ತಪ್ಪದೆ ಅಂಗವಸ್ತ್ರವೆಂದು ಲಿಂಗವಸ್ತ್ರವೆಂದು ಕನಕ ಪರಿಮಳವೆಂದು ಅಂದಣ ಛತ್ರ ಚಾಮರ ಕರಿ ತುರಗಂಗಳೆಂದು ಇವು ಬಂದುದಿಲ್ಲ ಎಂದು ಸಂದಣಿ ಲಂದಣಗಾರರ ಕೈಯಲ್ಲಿಹೇಳಿಸಿ ಅವು ಬಾರದಿರೆ ತಾ ಸಂದ್ಥಿಸಿ ಸೂಚಿಸುವ ಲಿಂಗ ಲಿಂಗಮಾರಿಗೆ ಗುರುಸ್ಥಲ ಎಂದಿಗೂ ಇಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 39 ||
--------------
ದಾಸೋಹದ ಸಂಗಣ್ಣ
ಕೃತಯುಗದೊಳು ಸುವರ್ಣದ ಲಿಂಗವಾದಲ್ಲಿ ನಿನ್ನ ಹೆಸರೇನು ? ತ್ರೇತಾಯುಗದಲ್ಲಿ ಬೆಳ್ಳಿಯ ಲಿಂಗವಾದಲ್ಲಿ ನಿನ್ನ ತಂದೆ ತಾಯಿ ಯಾರು ? ದ್ವಾಪರದೊಳು ತಾಮ್ರದ ಲಿಂಗವಾದಲ್ಲಿ ಹದಿನೆಂಟು ಜಾತಿಯ ಕೈಲಿ ಕಿಲುಬುಹೊಯಿತ್ತು. ಕಲಿಯುಗದೊಳು ಕಲ್ಲ ಲಿಂಗವಾದಡೆ ಇಕ್ಕಿದ ಓಗರವನುಣ್ಣದೇಕೋ ? ಹಿಂದೊಮ್ಮೆ ನಾಲ್ಕು ಯುಗದೊಳು ಅಳಿದುಹೋದುದನರಿಯಾ ? ಇನ್ನೇಕೆ ದೇವತನಕ್ಕೆ ಬೆರೆವುತ್ತಿಹೆ ? ಸಾಕ್ಷಿ : ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ ಇದು ಕಾರಣ ಕೂಡಲಚೆನ್ನಸಂಗಯ್ಯ ತಪ್ಪದೆ ಸ್ಥಾವರ ದೇವರೆ ಜಂಗಮ ದೇವರ ಪ್ರಸಾದಕ್ಕೆ ಯೋಗ್ಯವಾಯಿತ್ತು. ಅನಂತ ಯುಗಂಗಳೊಳಗೆ ಜಂಗಮ ದೇವರೆ ಪ್ರಾಣವಾದರಾಗಿ
--------------
ಚನ್ನಬಸವಣ್ಣ
ಎಪ್ಪತ್ತೊಂದು ಅರಣ್ಯದಲ್ಲಿಪ್ಪತ್ತೊಂದು ಋಷಿಯರು ತಪ್ಪದೆ ಅಜಪೆಯ ಜಪಿಸುತ್ತ, `ಹವಿಷಾ ಹವಿಷಾ'ಯೆಂಬ ಆನಂದದ ಹಂಸನ ಜಪದಲ್ಲಿ, ತೋರಿಪ್ಪ ಬ್ರಹ್ಮಾಂಡವ ಮೀರಿಪ್ಪ ಜಪದಲ್ಲಿ, ಆರೂಢವಾದಳವ್ವೆ. ಕಪಿಲಸಿದ್ಧಮಲ್ಲಿನಾಥನ ಕೂಡಿ ಕೂಡಿಲೀಯವಾದಳು.
--------------
ಸಿದ್ಧರಾಮೇಶ್ವರ
ತನು ಕಿಂಕರನಾಗದೆ, ಮನಕಿಂಕರನಾಗದೆ, ಇಂದ್ರಿಯ ಕಿಂಕರನಾಗದೆ, ಆತ್ಮ ಕಿಂಕರನಾಗದೆ, ಶ್ರುತಿ ಕಿಂಕರನಾಗದೆ ಇವೆಲ್ಲವ ನೆರೆ ತೊರೆದು ಏನು ಎನ್ನದೆ ಮರ್ಯಾದೆ ತಪ್ಪದೆ ಸದ್ಗುರು ಕಿಂಕರನಾಗಿ ಭವಗೆಟ್ಟು ಹೋದವರನೇನೆಂಬೆ ಹೇಳಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಜಗದೊಳಗೆ ಹುಟ್ಟಿ ಜಗದ ಹಂಗಿಗರಾಗಿ, ನಾವು ಜಂಗಮ, ನಾವು ಭಕ್ತರೆಂಬ ನುಡಿಗೆ ನಾಚರು ನೋಡಾ. ಅಪ್ಪುವಿನ ಘಟನ ಹೊತ್ತುಕೊಂಡು ಅನ್ನಪಾಂಗಳಿಗೆ ಅನುಸರಿಸಿ ನಡೆವುತ್ತ, ಹೊನ್ನು, ಹೆಣ್ಣು, ಮಣ್ಣನೀವವರ ಬಾಗಿಲ ಕಾಯ್ವ ಅಣ್ಣಗಳ ವೇಷಕ್ಕೆ ಶರಣಾರ್ಥಿ. ಅವರ ಆಶಾಪಾಶವ ಕಂಡು, ಹೇಸಿತ್ತೆನ್ನ ಮನವು. ಅದಂತಿರಲಿ, ಅದು ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೊಳಗಾಗಿ ಹೋಯಿತ್ತು ಅಂತಲ್ಲ ಕೇಳಿರಣ್ಣ. ಜಂಗಮವಾದರೆ ಜಗದೊಳಗೆ ಹುಟ್ಟಿ, ಜಗದ ಹಂಗ ಹರಿದು, ಹೊನ್ನು, ಹೆಣ್ಣು, ಮಣ್ಣು ಕಣ್ಣಿಲೆ ನೋಡಿ ಕಾಮಿಸದೆ, ಮನದಲ್ಲಿ ನೆನೆಯದೆ, ಮಾಯವನುಣ್ಣದೆ, ಆಶೆಗೊಳಗಾಗದೆ, ವೇಷವ ಹೊರದೆ, ದೇಶದ ಮನುಜರ ಸುತ್ತಿದ ಪಾಶಕ್ಕೆ ಹೊರಗಾಗಿ ಸುಳಿವ ಜಂಗಮದ ಈಶನೆಂದೆ ಕಾಂಬೆ. ಆ ಜಂಗಮಕ್ಕೆ ಅರ್ಥ, ಪ್ರಾಣ, ಅಬ್ಥಿಮಾನವನೊಪ್ಪಿಸಿ, ತಪ್ಪದೆ ಒಡೆಯನೆಂದರಿದು ಮಾಡುವ ಭಕ್ತನ ಎಂತಿಪ್ಪನೆಂದು ಕಾಂಬೆ. ಇದನೆಂತಾದರೂ ಒಪ್ಪುಗೊಳ್ಳ ಎನ್ನ. ಬಸವಪ್ರಿಯ ಕೂಡಲಚೆನ್ನಸಂಗನ ಬಸವಣ್ಣನಲ್ಲಿ ಶರಣಗಣಂಗಳು.
--------------
ಹಡಪದ ಅಪ್ಪಣ್ಣ
ಎಂಟುಲಕ್ಷದ ಮೇಲೆ ಐನೂರು ದೇವರಿಗೆ ಮಾಡಿದ ಬೋನವ ಒಬ್ಬ ಜಂಗಮನಾರೋಗಣೆಯ ಮಾಡುವನಲ್ಲದೆ, ಹದಿನಾರು ಲಕ್ಷದ ಮೇಲೆ ಐನೂರು ದೇವರು ಕೂಡಿಕೊಂಡು ಒಬ್ಬ ಜಂಗಮಕ್ಕೆ ಮಾಡಿದ ಬೋನವನಾರೋಗಿಸಲರಿಯವು. ಅಂತಪ್ಪ ದೇವರಿಗಿಂತಲೂ ಜಂಗಮವೆ ಘನ. ಕೃತಯುಗದಲ್ಲಿ ಸುವರ್ಣದ ಲಿಂಗಾವಾದಲ್ಲಿ ನಿನ್ನ ಹೆಸರೇನು ? ತ್ರೇತಾಯುಗದಲ್ಲಿ ಬೆಳ್ಳಿಯ ಲಿಂಗವಾದಲ್ಲಿ ನಿನ್ನ ತಾಯಿ-ತಂದೆ ಯಾರು ? ದ್ವಾಪರದಲ್ಲಿ ತಾಮ್ರದಲಿಂಗವಾದಲ್ಲಿ ಹದಿನೆಂಟು ಜಾತಿಯ ಕೈಯ ಕಿಲುಬು ಹೋಯಿತ್ತು. ಕಲಿಯುಗದಲ್ಲಿ ಕಲ್ಲ ದೇವರಾದರೆ ಇಕ್ಕಿದೋಗರವನುಣ್ಣದೇಕೊ ? ಹಿಂದೊಮ್ಮೆ ನಾಲ್ಕುಯುಗದಲ್ಲಿ ಅಳಿದು ಹೋದುದನರಿಯಾ ? ಇನ್ನೇಕೆ ದೇವತನಕ್ಕೆ ಬೆರತಹೆ ? ``ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ _ಇದು ಕಾರಣ ಕೂಡಲಚೆನ್ನಸಂಗಯ್ಯಾ, ತಪ್ಪದೆ ನಾಲ್ಕುಯುಗದಲ್ಲಿ ಜಂಗಮವೆ ಪ್ರಾಣಲಿಂಗವಾದ ಕಾರಣ ಸ್ಥಾವರವೆ ಜಂಗಮಪ್ರಸಾದಕ್ಕೆ ಯೋಗ್ಯವಾಯಿತ್ತು.
--------------
ಚನ್ನಬಸವಣ್ಣ
ಸಂಸಾರವ ಬಿಟ್ಟೆನೆಂದು, ನಿರಾಶಾಪದವ ಮಾಡಿ, ತಲೆಯ ಬೋಳಿಸಿಕೊಂಡು, ಕುದಿದು ಕೋಟಲೆಗೊಂಡು, ಮನೆ ಮನೆ ತಪ್ಪದೆ ಭಿಕ್ಷವ ಬೇಡಿ, ಉಂಡು, ಎದ್ದು ಹೋಗಿ ತತ್ವವ ಬೋಧಿಸಿ, ಉದರವ ಹೊರೆವಂದು ಮುನ್ನವಿಲ್ಲ ಮರುಳಾ ? ಕಾಡಿ ಬೇಡಿ ಹಾಡಿ ಒಡಲ ಹೊರೆವಂಗೆ, ಮುಕ್ತಿಯುಂಟೆ ಮರುಳಾ ? ಜಂಗಮದಂಗವು ನಿರ್ಗಮನಿ, ಭಕ್ತಪ್ರಿಯ ನಮ್ಮ ಗುಹೇಶ್ವರಲಿಂಗದಲ್ಲಿ ಜಂಗಮದ ನಡೆಯಿಲ್ಲ ಕಾಣಾ, ಎಲೆ ಮರುಳಾ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->