ಅಥವಾ

ಒಟ್ಟು 109 ಕಡೆಗಳಲ್ಲಿ , 30 ವಚನಕಾರರು , 97 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ದೀಕ್ಷೋಪದೇಶವ ಮಾಡಿ ಗುರುವಿನ ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ. ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು ಕೈ ಮುರಿದು ಮೂರು ಹಣವ ಕೊಂಡೆ. ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ. ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು ಕಾಯಕವ ಮಾಡುತ್ತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮೂಗಿನಲ್ಲಿ ಕಂಡು, ಮೂರ್ತಿಯ ಕಂಗಳಲ್ಲಿ ಮಾಡಿಸಿ, ಕಿವಿಯಲ್ಲಿ ಶೋಭನ, ತಲೆಯಲ್ಲಿ ಕೈಗೂಡಿ, ಕಣ್ಣ ಕಾಡಿನ ತಲೆ ಹೊಲದಲ್ಲಿ ಸತ್ತದೇವರ ಕಂಡು, ಹುಟ್ಟಿದ ಗಿಡುವಿನ ಪತ್ರೆಯ ಕೈ ಮುಟ್ಟದೆ ಕೊಯ್ದು, ಬತ್ತಿದ ಕೆರೆಯ ಜಲವ ತುಂಬಿಕೊಂಡು, ಬಂದು ಮುಟ್ಟಿ ಪೂಜಿಸಹೋದಡೆ ಸತ್ತ ದೇವರೆದ್ದು ಪೂಜಾರಿಯ ನುಂಗಿದರು ನೋಡಾ. ತಲೆಯಲ್ಲಿ ನಡೆದು, ತಲೆಗೆಟ್ಟು ನಿರಾಳವಾದ ನಿಜಗುರು ಭೋಗೇಶ್ವರಾ, ನಿಮ್ಮ ಶರಣರಿಗಲ್ಲದೆ ಸತ್ತದೇವರನು ಸಾಯದವರು ಪೂಜಿಸಿ ನಿತ್ಯವ ಹಡೆದೆಹೆನೆಂಬ ಮಾತೆಲ್ಲಿಯದೊ ?
--------------
ಭೋಗಣ್ಣ
ಏಳು ಕಮಲದ ಮೇಲೆ ಎಲೆಯಿಲ್ಲದ ವೃಕ್ಷದಲ್ಲಿ ಫಲವಿಲ್ಲದ ಹಣ್ಣಿನ ರುಚಿಯ ತಲೆಯೆ ಬಾಯಾಗುಣಬಲ್ಲರೆ, ನೆಲ ಬೆಂದಿತ್ತು, ತಲೆ ಸತ್ತಿತ್ತು. ಇದರ ಹೊಲಬ ಬಲ್ಲಾತನೇ ಪರಶಿವಯೋಗಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗುಡಿಗೊರವ ಗುಡಿಸಿ ಕಣ್ಣು ಕೆಂಪಗಾಗಿ ಜಟ್ಟಿಂಗ ಬೇತಾಳನ ನುಂಗಿ, ಬೇತಾಳ ಜಟ್ಟಿಂಗನ ನುಂಗಿ ತಲೆ ನರೆಗೂದಲ ನುಂಗಿ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಲ್ಲಮರದ ಕೋಡಗದ ತಲೆಯೆಂಟು ಸ್ಥಾನವ ಮೆಟ್ಟಿ ತಿರಗುವ ತಲೆ ಕಾಲು ಪಕ್ಕವಿಲ್ಲದ ವಿಹಂಗನ ನಡುನೆತ್ತಿ ಸುಳಿಯೊಳು ನಿಲ್ಲಿಸಲು, ಹಾಲುಬಿಟ್ಟು ಹಾಲು ಬೇಡುವದು. ಈ ಭೇದವ ತಿಳಿಯಬಲ್ಲಡೆ ಅವರು ಲಿಂಗಸಂಬಂದ್ಥಿ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನೋಡಿರೇ ನೋಡಿರೇ ಪೂರ್ವದತ್ತವ; ವರುಣ ಹೆಳವ, ರವಿ ಕುಷ್ಟ, ಶುಕ್ರನಂಧಕ, ಶನಿಗೆ ಸಂಕಲೆ, ಬಲಿಗೆ ಬಂಧನ, ಸೀತೆಗೆ ಧ್ರೌಪದಿಗೆ ಸೆರೆ, ಹರಿ ಹಂದಿಯಾದ, ಅರುಹಂಗೆ ಲಜ್ಜೆ, ಬ್ರಹ್ಮನ ಶಿರಹೋಯಿತ್ತು, ಬಲ್ಲಿದನೆಂಬವನ ಕೊಡೆವಿಡಿಸದೆ ವಿದ್ಥಿ ಜತ್ತಕನೆಂಬವನ ಕತ್ತೆಯ ಮಾಡಿತ್ತು. ದಶಮುಖನ ನಾಯ ಡೋಣಿಯಲ್ಲಿ ಉಣಿಸಿತ್ತು. ದೇವೇಂದ್ರನ ಮೈಯ್ಯ ನಾಣುಗೆಡಿಸಿತ್ತು. ಶೂದ್ರಕನ ತಲೆ ಕಂಚಿಯಾಲದಲ್ಲಿ ನೇರಿತ್ತು. ಕೂಡಲಸಂಗಮದೇವಯ್ಯಾ, ನೀ ಮಾಡಿದ ಮಾಯೆಯನಂತರನಾಳಿಗೊಂಡಿತ್ತು.
--------------
ಬಸವಣ್ಣ
ಹುಲ್ಲಹೊರೆಯೊಳಗೊಂದು ಕಿಚ್ಚು ಹುಟ್ಟಿ ಸುಡುವುದ ಕಂಡೆ. ಹುಲ್ಲ ಮೇವ ಎರಳೆಯ ಕೋಡು ಮುರಿದು ಅಡವಿಯಲ್ಲಿ ಬಿಟ್ಟುದ ಕಂಡೆ. ಬಲ್ಲಿದ ಬಲೆಗಾರನ ಬಲೆಯ ನೇಣು ಹರಿದು, ಬಲೆಯ ಬಿಟ್ಟುಹೋದುದ ಕಂಡೆ. ಅಟ್ಟೆಯ ಬಿಟ್ಟು ತಲೆ ಆಕಾಶವನಡರಿತ್ತ ಕಂಡೆ. ದೂರ ದಾರಿ ಸಾರೆಯಾದುದ ಕಂಡೆ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ ನಿಮ್ಮ ಶರಣ, ಹುಟ್ಟು ಮುರಿದು ಬಟ್ಟಬಯಲಾದುದ ಕಂಡೆ.
--------------
ಸ್ವತಂತ್ರ ಸಿದ್ಧಲಿಂಗ
ಪಲ್ಲ :ಬಂಧನ ಸಂಸಾರದಂದುಗದ ದಾಳಿಯಲ್ಲಿ ನೊಂದು ಬೆಂದೆನೊ ಎನ್ನ ಹುಯ್ಲು ತಂಬಿಸು ಗುರುವೆ ಭವಹರ ನಿತ್ಯನಿರ್ಮಳಾತ್ಮಕ ಶಂಭುವೆ. ಪದ :ಹಲವು ಜನ್ಮದಿ ಹುಟ್ಟಿ ಹಲವಾಹಾರವನುಂಡು ಹಲವು ಭೂಮಿಯ ಮೆಟ್ಟಿ ಹಲವು ಕರ್ಮವ ಕಂಡು ಹಲವು ಭವಕೀಡಾಗಿ ಹಲವು ಹಂಬಲಿಸುತಿರುವ ಹೊಲೆಜನ್ಮ ಸಂಸಾರ ಮಾಯಾರಕ್ಕಸಿ ತುಡುರೆ ನಿಲ್ಲಲಾರದಲಿ ನಿಮ್ಮ ಮರೆಹೊಕ್ಕೆ ಎನ್ನ ಕೊಡದೆ ಗೆಲಿದುಕೊ ದುರಿತಹರ ಕರುಣಾಳು ಪರಮಗುರುವೆ. | 1 | ಸಟೆ ಠಕ್ಕು ಠೌಳಿ ಅಟಮಟದ ಬಂಧನದ ಕುಟಿಲಸಂಸಾರಸಾಗರದ ತೊರೆನೆರೆಗಳೊಳು ಪುಟನೆಗೆದು ತಲೆ ಮುಣುಗುತಲಿರುವನ ಕಂಡು ನಿಟಿಲಾಕ್ಷ ಕೃಪೆಯೆಂಬ ಹಡಗವನು ತಂದೊಲಿ ತಟಕೆನ್ನನೆಳೆದು ತಗೆದೀಗ ಇನಿತಾತ್ಮ ಘಟದೊಳಗೆ ಜ್ಞಾನಜ್ಯೋತಿಯ ತೀವು ಪರಮಗುರುವೆ. | 2 | ರಸವಿಷಯ ಮೋಹನದ ಕೂಪಜಲದೊಳು ಮುಳುಗಿ ದೆಸೆದೆಸೆಗೆ ಚಾಲಿವರಿವನ ಕಂಡು ಬೇಗದಲಿ ವಿಷಕಂಠ ದುರಿತಸಂಹರ ಕರುಣಾಕರ ತೊಟ್ಟಿಲಿಗೆ ಎಸೆವ ಹಗ್ಗವ ಕಟ್ಟಿ ಎಳೆದು ತಗೆಯೆನ್ನ ರಂ ಬಿಸುತ ಸಂತೈಸಿ ದುಃಖದಲ್ಲಿ ಭೋರ್ಗರೆದಳುವ ಶಿಶುವ ಬೋಳೈಸುವಂದದಲೆನ್ನ ಬೋಳೈಸು ಅಸಮಾಕ್ಷ ಪರಮಗುರುವೆ.| 3 | ತೆರಣಿಯ ಹುಳು ನೂಲು ಸುತ್ತಿಕೊಂಡು ಎಸೆವ ತೆರದಿ ಈ ಸಂಸಾರ ಸುಖದುಃಖ ಎನ್ನನು ಸುತ್ತಿ ಪರಿಭವಕ್ಕೆ ಗುರಿಯಾಗಿ ಯೋನಿಯಂತ್ರದೆ ತಿರುಗಿಯೆ ಬರುತಲಿರ್ದೆನು ಘೋರ ಅರಣ್ಯದೊಳು ಸುತ್ತಿ ಹರಹರ ನಿಮ್ಮ ಸ್ಮರಣೆಯ ಮರೆದ ಕಾರಣದಿ ದುರಿತನ್ಯಾಯದ ಬಂಧನಕೆ ಗುರಿಯಾಗಿದ್ದೆನಯ್ಯಾ ಶಿವನೆ. | 4 | ಮಾಯಾಸಂಸಾರಸರ್ಪನ ವಿಷವು ತಲೆಗೇರಿ ನೋಯುತಿದ್ದೆನು ಹಲವುವಿಧದಾಸೆಪಾಶದಲಿ ಬೇಯುವವನ ಕಂಡು ನೀ ಬೇಗಲೊಯಿದ್ಯವ ಮಾಡಿಯೆ ಶವವನುಳುವಿಕೋ ಭವರೋಗವೈದ್ಯ ನಿತ್ಯ ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭು ನೀವಲ್ಲದೆನಗನ್ಯವಿಲ್ಲ ಕಾಯೋ ಕಾಯೋ ದೇವಾ. | 5 |
--------------
ಹೇಮಗಲ್ಲ ಹಂಪ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಾಲಿದ್ದಂತೆ ತಲೆ ನಡೆದುದುಂಟೆ ಅಯ್ಯಾ ? ಕಣ್ಣಿದ್ದಂತೆ ಕರ್ಣ ನೋಡಿದುದುಂಟೆ ಅಯ್ಯಾ ? ಬಾಯಿದ್ದಂತೆ ನಾಸಿಕ ಉಂಡುದುಂಟೆ ಅಯ್ಯಾ ? ತಾಯಿಲ್ಲದೆ ಮಕ್ಕಳು ಬಂದ ತೆರನ ಹೇಳಯ್ಯಾ ? ನಿಮ್ಮ ಸೇವೆಯ ತೊತ್ತಿನ ಭಾವವ ಕೇಳಲೇತಕ್ಕೆ ? ಪಟದೊಳಗಣ ಬಾಲಸರಕ್ಕೆ ಪ್ರತಿಸೂತ್ರ ನೇಣುಂಟೆ ? ನಿಮ್ಮಲ್ಲಿಯೆ ಎನ್ನ ಭಾವಲೇಪ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿಯೆ.
--------------
ಮೋಳಿಗೆ ಮಹಾದೇವಿ
ಬ್ರಹ್ಮಮೂರ್ತಿಗೂ ಶಿಲೆ ಒಂದೆ, ವಿಷ್ಣು ಮೂರ್ತಿಗೂ ಶಿಲೆ ಒಂದೆ, ರುದ್ರಮೂರ್ತಿಗೂ ಶಿಲೆ ಒಂದೆ, ರೂಪಿನ ಅವತಾರ ಬ್ಥಿನ್ನವಾಯಿತ್ತು, ಸ್ಥೂಲ ಸೂಕ್ಷ್ಮ ಕಾರಣದಂತೆ, ಕುಂಭ ಜಲ ಬಿಂಬದಂತೆ, ಇನ್ನಾರನಹುದೆಂಬೆ, ಇನ್ನಾರನಲ್ಲಾ ಎಂಬೆ ? ಬ್ರಹ್ಮ ಕಾಲು, ವಿಷ್ಣು ಕೈ, ರುದ್ರ ಕಣ್ಣು, ಈಶ್ವರ ತಲೆ, ಸದಾಶಿವ ಪ್ರಾಣವಾದಲ್ಲಿ ಇವು ಸಮಯ. ಈ ಪಂಚಕೋಶಕ್ಕೆ ಆಧಾರ ಪರಮಜ್ಞಾನ. ಅದ ಭೇದಿಸಲರಿಯದೆ ವಾದವ ಮಾಡಿದರೆಲ್ಲರು. ನಾದ ಬಿಂದು ಕಳೆ ಅತೀತನರಿ, ಅಲೇಖನಾದ ಶೂನ್ಯ ಕಲ್ಲಿನೊಳಗಾದವನ.
--------------
ವಚನಭಂಡಾರಿ ಶಾಂತರಸ
ಗಂಡಭೇರುಂಡನೆಂಬ ಪಕ್ಷಿಗೆ ತಲೆ ಎರಡು, ದೇಹವೊಂದು. ಒಂದು ತಲೆಯಲ್ಲಿ ಹಾಲನೆರೆದು, ಒಂದು ತಲೆಯಲ್ಲಿ ವಿಷವನೆರೆದಡೆ, ಆ ಪಕ್ಷಿಗೆ ಮರಣವಲ್ಲದೆ ಜಯವಪ್ಪುದೇ ಅಯ್ಯಾ ? ಲಿಂಗವ ಪೂಜಿಸಿ ಜಂಗಮವ ಮರೆದಡೆ ಕುಂಭಿನೀನರಕ ತಪ್ಪುದು ಕಾಣಾ ಕೂಡಲಚೆನ್ನಸಂಗಮದೇವಯ್ಯಾ
--------------
ಚನ್ನಬಸವಣ್ಣ
ಇನ್ನಷ್ಟು ... -->