ಅಥವಾ

ಒಟ್ಟು 130 ಕಡೆಗಳಲ್ಲಿ , 41 ವಚನಕಾರರು , 110 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರ್ಮೇಂದ್ರಿಯಂಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ವಿಷಯಂಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಜ್ಞಾನೇಂದ್ರಿಯಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ವಾಯುಪಂಚಕಂಗಳ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಕರಣ ನಾಲ್ಕೊಂದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಇಂತಲ್ಲದೆ ಇವರ ತಿರುಳಿನೊಳು ಮರುಳುಗೊಂಡುರುಳುವ ಮಾನವರು ತಾವು ಶರಣರೆಂದು ನುಡಿದು ನಡೆವ ಸಡಗರವ ಕಂಡು ನಾಚಿತ್ತೆನ್ನ ಮನವು ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾರಿಯ (ಕಾರ್ಯ?)ವನರಿಯರು ಕೊರತೆಯನರಿಯರು. ವಾಯಕ್ಕೆ ಬಳಲುವರು ತಾವು ಜ್ಞಾನಿಗಳೆಂದು. ತಾಯಿಯಿಲ್ಲದ ಮೂಲನ ತಲೆವಿಡಿಯಲರಿಯದೆ ದೇವರಾದೆವೆಂದಡೆ ನಾಚಿದೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಾವು ಭಕ್ತರೆಂದು ಪುರಾತರ ವಚನವ ಕೇಳಿ, ಆಹಾ ಇನ್ನು ಸರಿಯುಂಟೆಯೆಂದು ಕೈವಾರಿಸುವರು ನೋಡಾ. ಆ ಪುರಾತರ ವಚನವನೊತ್ತಿ ಹೇಳಹೋದಡೆ, ನಮಗೆ ಅಳವಡುವುದೆ ಗೃಹಸ್ಥರಿಗೆ ಎಂಬರು. ಕೇಳಿ ಕೇಳಿ ಸತ್ಯವ ನಂಬದ ಮೂಳರನೇನೆಂಬೆನಯ್ಯಾ, ಕಲಿದೇವಯ್ಯ?
--------------
ಮಡಿವಾಳ ಮಾಚಿದೇವ
ಗುರುಕಾರುಣ್ಯವಂ ಪಡೆದು ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಭಕ್ತನಾಗಲಿ ಜಂಗಮನಾಗಲಿ ಭಕ್ತಿ ಭೃತ್ಯಾಚಾರ ಸಂಪನ್ನರಾಗಿ ಗುರುಲಿಂಗ ಜಂಗಮವನಾರಾಧಿಸಿ, ಪ್ರಸಾದವಕೊಂಡು ನಿಜಮುಕ್ತರಾಗಲರಿಯದೆ ಪರಮಪಾವನಪ್ಪ ಗುರುರೂಪ ಹೊತ್ತು ಮತ್ತೆ ತಾವು ಪರಸಮಯದಂತೆ ದೂಷಕ ನಿಂದಕ ಪರವಾದಿಗಳಾಗಿ ಭಕ್ತ ಜಂಗಮ ಪ್ರಸಾದವನೆಂಜಲೆಂದು ಅತಿಗಳೆದು ತೊತ್ತು ಸೂಳೆಯರೆಂಜಲ ತಿಂದು ಮತ್ತೆ ನಾ ಘನ ತಾ ಘನವೆಂದು ಸತ್ಯ ಸದ್ಭಕ್ತಯಕ್ತರಾದ ಭಕ್ತಜಂಗಮವ ಜರೆದು, ಅವರ ಕುಲವೆತ್ತಿ ಕೆಡೆನುಡಿದು ಹೊಲತಿ ಮಾದಿಗಿತ್ತಿಯರಿಗುರುಳಿ ಹಲವು ದೈವದೆಂಜಲತಿಂದು ಮತ್ತೆ ತಾವು ಕುಲಜರೆಂದು ಬಗುಳುವ ಹೊಲೆ ಜಂಗುಳಿಗಳೆಲ್ಲರು ಈ ಗುರು ಕೊಟ್ಟಲಿಂಗವಿರಲು ಅದನರಿಯದೆ ಶ್ರೀಶೈಲ, ಹಂಪಿ, ಕಾಶಿ, ಕೇತಾರ ಗಯಾ ಪ್ರಯಾಗ ರಾಮೇಶ್ವರ ಆದಿಯಾದ ಹೊಲೆಕ್ಷೇತ್ರಂಗಳಲ್ಲಿ ಆಸಕ್ತರಾಗಿ ಹೋಗಿ ಅಲ್ಲಲ್ಲಿಯ ಭವಿಶೈವದೈವಂಗಳ ದರ್ಶನ ಸ್ಪರುಶನ ಆರಾಧನೆಗಳ ಮಾಡಿ ಅವಕ್ಕೆ ಶರಣೆಂದು ಅವರೆಂಜಲ ತಿಂದು ಆ ಕ್ಷೇತ್ರಂಗಳಲ್ಲಿ ಆಶ್ರಮಸ್ಥರಾಗಿರ್ದು ಗತಿಪದ ಮುಕ್ತಿಯ ಪಡೆವೆನೆಂಬ ವೇಷಧಾರಿಗಳೆಲ್ಲರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರವೇಳೆ ಬಪ್ಪುದು ತಪ್ಪುದು. ಅದೆಂತೆಂದೊಡೆ ; ಇದಂ ತೀರ್ಥಮಿದಂ ತೀರ್ಥಂ ಭ್ರಮಂತಿ ತಾಮಸಾ ನರಾಃ ಶಿವಜ್ಞಾನೇನ ಜಾನಂತಿ ಸರ್ವತೀರ್ಥನಿರರ್ಥಕಂ ಪ್ರಾಣಲಿಂಗಮವಿಶ್ವಾಸ್ಯ ತೀರ್ಥಲಿಂಗಂತು ವಿಶೇಷತಃ ಶ್ವಾನಯೋನಿಶತಂ ಗತ್ವಾಶ್ಚಾಂಡಾಲಂ ಗೃಹಮಾಚರೇತ್ ಚರಶೇಷ ಪರಿತ್ಯಾಗಾದ್ಯೋಜನಾದ್ಭಕ್ತ ನಿಂದಕಾಃ ಅನ್ಯಪಣ್ಯಾಂಗನೋಚ್ಚಿಷ್ಟಂ ಭುಂಜಯಂತಿರೌರವಂ-ಇಂತೆಂದುದಾಗಿ, ಇದು ಕಾರಣ, ಇಂತಪ್ಪ ಅನಾಚಾರಿಗಳು ಭಕ್ತ ಜಂಗಮ ಸ್ಥಲಕ್ಕೆ ಸಲ್ಲರು. ಅವರಿರ್ವನು ಕೂಡಲಚೆನ್ನಸಂಗಯ್ಯ ಸೂರ್ಯ-ಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಧೂಳುಪಾವಡವಾದಲ್ಲಿ ಆವ ನೀರನು ಹಾಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹಾಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು. ಅದೆಂತೆಂದಡೆ ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ. ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.
--------------
ಅಕ್ಕಮ್ಮ
ಲಿಂಗವಂತ ಲಿಂಗಭಕ್ತ ಲಿಂಗಾಚಾರಿಯೆನಿಸಿಕೊಂಡ ಬಳಿಕ, ಲಿಂಗದ ನಚ್ಚು, ಲಿಂಗದ ಮಚ್ಚು, ಲಿಂಗವೇ ಪ್ರಾಣವಾಗಿರಬೇಕಲ್ಲದೆ, ಮತ್ತೆ ತಪ್ಪಿ ನಡೆದು, ತಪ್ಪಿ ನುಡಿದು, ಪರಧನ ಪರಸ್ತ್ರೀಯರ ಸಂಗವ ಮಾಡಿ, ದುರ್ಗುಣ ದುರಾಚಾರದಲ್ಲಿ ನಡೆದು, ಮತ್ತೆ ತಾವು ಲಿಂಗವಂತರೆನಿಸಿಕೊಂಬ ಪರಿಯ ನೋಡಾ. ಇದು ಲಿಂಗದ ನಡೆಯಲ್ಲ, ಲಿಂಗದ ನುಡಿಯಲ್ಲ. ಇದ ನಮ್ಮ ಶಿವಶರಣರು ಮೆಚ್ಚರು. ಲಿಂಗವಂತನ ಪರಿ ಬೇರೆ ಕಾಣಿರೆ. ಲಿಂಗಕ್ಕೆ ಲಿಂಗವೆ ಪ್ರಾಣವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಭೋಗವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಸಂಗವಾಗಿ[ರಲು]ಬಲ್ಲ, ಇಂತಪ್ಪ ಲಿಂಗವಂತನ ಸದಾಚಾರಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಾಂಗಲಿಂಗಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಕರಣ ನಿರ್ಮುಕ್ತನ ಸರ್ವನಿರ್ವಾಣಿಕಾಯೆಂಬೆನು. ಇಂತಪ್ಪ ಮಹಾಮಹಿಮನ ನಿಲವು ಎಲಗಳೆದ ವೃಕ್ಷದಂತೆ, ಉಲುಹಡಗಿಪ್ಪ ಶರಣನ ಪರಿಯ ನೀವೇ ಬಲ್ಲಿರಲ್ಲದೆ, ಮತ್ತೆ ಉಳಿದಾದ ಅಜ್ಞಾನ ಸಂದೇಹಿಮಾನವರೆತ್ತ ಬಲ್ಲರಯ್ಯಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಲಿಂಗಾವಧಾನಿಯ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೆ ಒಳಗಾದ ಮನುಜರೆಲ್ಲ ತಾವು ಪ್ರಸಾದಿ, ಪ್ರಾಣಲಿಂಗಿಗಳೆಂದು ನುಡಿದುಕೊಂಬಿರಿ. ಪ್ರಸಾದಿಸ್ಥಲ ಎಲ್ಲರಿಗೆಂತಾದುದಣ್ಣಾ ? ಪ್ರಸಾದಿಸ್ಥಲ ಪರಮಸುಖ ಪರಿಣಾಮ. ಮನ ಮೇರೆದಪ್ಪಿ ತನುವನೆ ಪ್ರಸಾದವ ಮಾಡುವದೀಗ ಪ್ರಸಾದ. ಇದನರಿಯದೆ ಸದಮದವಾಗಿ ಮುಡಿ ನೋಡಿ ಒಡಲ ಕೆಡಿಸಿಕೊಂಬ ಜಡಮನುಜರ ನುಡಿಯ ಕೇಳಲಾಗದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ವೀರಮಾಹೇಶ್ವರರು ಸರ್ವಾಂಗದಲ್ಲಿ ವಿಭೂತಿ-ರುದ್ರಾಕ್ಷಿ ಧಾರಣವಾಗಿ, ಶಿವಲಿಂಗವ ಧರಿಸಿ, ಕಾವಿಲಾಂಛನವ ಪೊದ್ದರೆಂದು ಈ ಮತ್ರ್ಯಲೋಕದ ಜಡಮತಿ ಮರುಳಮಾನವರು ತಾವು ಧರಿಸುತ್ತಿರ್ಪರು. ಇಂತಪ್ಪವರ ನಡತೆ ಎಂತಾಯಿತ್ತೆಂದರೆ, ಗುರುವನರಿಯದೆ ವಿಭೂತಿಧರಿಸುವರೆಲ್ಲ ಬೂದಿಯೊಳಗಣ ಕತ್ತೆಗಳೆಂಬೆ. ತಮ್ಮ ನಿಜವ ತಾವರಿಯದೆ ರುದ್ರಾಕ್ಷಿ ಧರಿಸುವರೆಲ್ಲ ಕಳವು ಮಾಡಿ ಕೈಯ ಕಟ್ಟಿಸಿಕೊಂಡ ಕಳ್ಳರೆಂಬೆ. ಲಿಂಗದ ಸ್ವರೂಪವ ತಿಳಿಯದೆ ಕೊರಳಲ್ಲಿ ಲಿಂಗವ ಕಟ್ಟುವರೆಲ್ಲ ವಾಳೆ ಆವಿಗೆ ಯಳಗುದ್ದಿಯ ಕಟ್ಟುವಂತೆ ಕಟ್ಟುವರೆಂಬೆ. ಜಂಗಮದ ನಿಲವ ಅರಿಯದೆ ಕಾವಿಯ ಲಾಂಛನ ಹೊದ್ದವರೆಲ್ಲ ರಕ್ತಮುಳುಗಿದ ಹಸಿಯ ಚರ್ಮವ ಹೊದ್ದವರೆಂಬೆ. ಇಂತಿದರನುಭಾವವ ತಿಳಿಯದೆ ಈಶ್ವರನ ವೇಷವ ಧರಿಸಿ ಉದರಪೋಷಣಕ್ಕೆ ತಿರುಗುವರೆಲ್ಲ ಜಾತಿಹಾಸ್ಯಗಾರರೆಂಬೆ. ಇಂತಪ್ಪ ವೇಷಧಾರಿಗಳ ಶಿವಸ್ವರೂಪರೆಂದು ಭಾವಿಸುವವರ ಶಿವಸ್ವರೂಪರೆಂದು ಹೇಳುವವರ, ಇಂತಪ್ಪ ಉಭಯ ಮೂಢಾತ್ಮರ ಮುಖದ ಮೇಲೆ ಲೊಟ್ಟಲೊಟ್ಟನೆ ಉಗುಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಘಟ್ಟಿಸಿ ಅಟ್ಟೆಂದ ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತಾವು ಬಲ್ಲವರಾದೆವೆಂದು ಗೆಲ್ಲಸೋಲಕ್ಕೆ ಹೋರುತಿಪ್ಪರು. ಇದೆಲ್ಲವನತಿಗಳೆದ ಮತ್ತೆ ಗೆಲ್ಲಸೋಲಕ್ಕೆ ಹೋರಲೇಕೋ ? ಗೆಲ್ಲುವಂಗೆ ಸೋಲುವದೆ ಧರ್ಮ, ಸೋತ ಮತ್ತೆ ಒಲವರವಿಲ್ಲವಾಗಿ. ಜಲನದಿಯಲ್ಲಿ ಹೋಹ ಬಲುಮರನಂತೆ, ಇವರ ನೆಲೆ ಇಲ್ಲವೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ತಾವು ಗುರುವೆಂದು ಮುಂದಣವರಿಗನುಗ್ರಹವ ಮಾಡುವರಯ್ಯಾ, ತಾವು ಗುರುವೆಂತಾದರೊ ! ಎಲ್ಲರಿಗೆಯೂ ಒಂದೇ ದೇಹ. ``ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ ಆತ್ಮಾಕಾಯಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಯಂ' ಎಂದುದಾಗಿ, ಗುರುವೆಂಬುದು ತಾನು ಪರುಷವು ಆ ಪರುಷವು ಮುಟ್ಟಲೊಡನೆ ಉಳಿದ ಲೋಹಂಗಳು ಸುವರ್ಣವಾದುವಲ್ಲದೆ, ಆ ಪರುಷವೆ ಆಗಲರಿಯವು_ ಅದು ಗುರುಸ್ಥಲವಲ್ಲ ನಿಲ್ಲು ಮಾಣು. ಗುರುವೆಂಬುದು ತಾನು ಸ್ವಯಂ ಜ್ಯೋತಿಪ್ರಕಾಶವು, ಅಂತಪ್ಪ ಸ್ವಯಂಜ್ಯೋತಿ ಪ್ರಕಾಶವ ತಂದು ಪರಂಜ್ಯೋತಿಯ ಹೊತ್ತಿಸಿದಡೆ, ಆ ಜ್ಯೋತಿ ತನ್ನಂತೆ ಮಾಡಿತ್ತು. ಅದಾವ ಜ್ಯೋತಿಯೆಂದಡೆ ಪಶ್ಚಿಮಜ್ಯೋತಿ. ಆ ಪಶ್ಚಿಮಜ್ಯೋತಿಯ ಬೆಳಗಿನಿಂದ ಪ್ರಾಣಲಿಂಗವ ಕಂಡು ಸುಖಿಯಾದೆನು. ನಾಲ್ಕು ವೇದಾರ್ಥ:ಅಜಪಗಾಯತ್ರಿ. ಅಜಪಗಾಯತ್ರಿಯರ್ಥ:ಪ್ರಾಣಾಯಾಮ. ಪ್ರಾಣಾಯಾಮದಿಂದ ಪ್ರಾಣಲಿಂಗ ಸಂಬಂಧವ ಮಾಡೂದು. ಇಷ್ಟರಲ್ಲಿ ತಾನು ಸ್ವತಂತ್ರನಾದಡೆ, ಇಷ್ಟಲಿಂಗವನಾರಿಗಾದರೂ ಕೊಡುವುದು. ಇಲ್ಲದಿದ್ದರೆ ಅಂಧಕನ ಕೈಯ ಹೆಳವ ಹಿಡಿದಂತೆ ಕಾಣಾ ಕೂಡಲಚೆನ್ನಸಂಗಮದೇವಯ್ಯಾ
--------------
ಚನ್ನಬಸವಣ್ಣ
ಅದ್ವೈತವ ಹೇಳುವ ಹಿರಿಯರೆಲ್ಲರೂ ದ್ವೈತಕ್ಕೊಳಗಾದರು. ನಿಸ್ಸಂಸಾರವ ಹೇಳುವ ಹಿರಿಯರೆಲ್ಲರೂ ಸಂಸಾರದ ಸಾರವ ಚಪ್ಪಿರಿದು ಕೆಟ್ಟರು. ಭಕ್ತರಿಗೆ ನಿತ್ಯವಲ್ಲೆಂದು ಹೇಳಿ, ತಾವು ಅನಿತ್ಯವ ಹಿಡಿದು, ಪಾಶಕ್ಕೆ ಸಿಕ್ಕಿ ಸತ್ತುದನರಿಯದೆ, ನಾವು ಮುಕ್ತರಾದೆವೆಂಬ ಭ್ರಷ್ಟರ ನೋಡಾ. ನನಗಿನ್ನೆತ್ತಣ ಮುಕ್ತಿ ಎಂದಂಜಿದೆ, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಗುರುಚರಮೂರ್ತಿ ಪೂಜಿಸಿಕೊಂಬಲ್ಲಿ ತಮ್ಮ ವಿವರವ ತಾವರಿಯಬೇಕು. ಹೆಣ್ಣು ಹೊನ್ನು ಮಣ್ಣು ಹೊರಗೆಂದು ಕೆಲವರಿಗೆ ಹೇಳಿ ಗನ್ನದಿಂದ ತಾವು ಗಳಿಸಿ ಕೂಡುವುದು, ಅದು ತಾನೆ ಅನ್ಯಾಯವಲ್ಲವೆ? ಬಿರಿದ ಕಟ್ಟಿದ ಬಂಟ ಭಾಷೆಗೆ ತಪ್ಪಿದಡೆ, ರಾಜನ ಮುಖಕ್ಕೆ ಏರಿದಡೆ, ಅದೆ ಭಂಗ. ಇಂತಿವನರಿಯದೆ ಮೂಗ ಕೊಯಿದು ಮಾರಿ, ಹಣ್ಣ ಮೆಲುವ ಅಣ್ಣಗಳಿಗೇಕೆ ಗುರುಚರಸ್ಥಲ? ಇಂತಿವರೆಲ್ಲರು ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಶರಣರಿಗೆ ಭವವುಂಟೆಂದು ಮತ್ರ್ಯದಲ್ಲಿ ಹುಟ್ಟಿದ ಭವಭಾರಿಗಳು ನುಡಿದಾಡುವರು. ತಮ್ಮ ಹುಟ್ಟ ತಾವರಿಯರು, ತಾವು ಮುಂದೆ ಹೊಂದುವದನರಿಯರು. ಇವರು ಬಂದ ಬಂದ ಭವಕ್ಕೆ ಕಡೆಮೊದಲಿಲ್ಲ . ಇಂತಪ್ಪ ಸಂದೇಹಿಗಳು ನಮ್ಮ ಶರಣರ ಹುಟ್ಟ ಬಲ್ಲೆನೆನಬಹುದೆ ? ತನ್ನ ನರಿದವನಲ್ಲದೆ ಇದಿರನರಿಯರು. ಈ ಉದರಪೋಷಕರೆಲ್ಲರೂ ಇದ ಬಲ್ಲೆನೆಂಬುದು ಹುಸಿ. ಇದ ಬಲ್ಲವರು ಬಲ್ಲರಲ್ಲದೆ, ಸೊಲ್ಲಿಗಭೇದ್ಯನ ನಾನೆತ್ತ ಬಲ್ಲೆ ? ಎನ್ನ ಗುರು ಚೆನ್ನಮಲ್ಲೇಶ್ವರನೇ ಬಲ್ಲ . ಇನ್ನು ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣನೆ ಬಲ್ಲ .
--------------
ಹಡಪದ ಅಪ್ಪಣ್ಣ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಲಿಂಗಪೂಜೆಯುಳ್ಳನ್ನಕ್ಕ ಲಿಂಗವಿಲ್ಲ. ಲಿಂಗದ ನೆನವು ಉಳ್ಳನ್ನಕ್ಕ ಲಿಂಗವಿಲ್ಲ. ಲಿಂಗವ ಕೂಡಬೇಕು, ಲಿಂಗವನರಿಯಬೇಕೆಂಬನ್ನಕ್ಕ ಲಿಂಗವಿಲ್ಲ. ಲಿಂಗವನರಿಯದಿರ್ದು, ಲಿಂಗವನರಿದು, ಲಿಂಗದಲ್ಲಿ ಬೆರೆದು, ಸುಖಿಯಾದೆನೆಂಬನ್ನಕ್ಕ ಲಿಂಗವಿಲ್ಲ. ನಾ ನನ್ನ ನಿಜವನರಿದು ಪರಿಣಾಮಿಯಾದೆನೆಂಬನ್ನಕ್ಕ ಲಿಂಗವಿಲ್ಲ. ಲಿಂಗೈಕ್ಯನಾದೆನೆಂದು ಪರರ ಮುಂದೆ ಬೀರುವನ್ನಕ್ಕ ಎಂದೆಂದಿಗೂ ಮುನ್ನವೆ ಲಿಂಗವಿಲ್ಲ. ಮತ್ತಂ, ಲಿಂಗವನರಿಯಬೇಕು, ಲಿಂಗವ ಕೊಡಬೇಕು, ಭವಬಂಧವ ಕಡಿಯಬೇಕೆಂದು ದೇಶದೇಶವ ತಿರುಗಿದರಿಲ್ಲ. ಊರಬಿಟ್ಟು ಅರಣ್ಯವ ಸೇರಿದರಿಲ್ಲ, ಹೊನ್ನು ಹೆಣ್ಣು ಮಣ್ಣು ಮೊದಲಾದ ಮನೆಮಾರು ತೊರೆದು ಸನ್ಯಾಸಿಯಾಗಿ ವೈರಾಗ್ಯತೊಟ್ಟು ವನವಾಸಗೈದರಿಲ್ಲ. ಅಶನ ವ್ಯಸನವ ಬಿಟ್ಟು, ಹಸಿವು ತೃಷೆಗಳ ತೊರೆದು, ಪರ್ಣಾಹಾರ ಕಂದಮೂಲ ತಿಂದು, ತನುಮನಧನವನೊಣಗಿಸಿದರಿಲ್ಲ. ಮಾತನಾಡಿದರಿಲ್ಲ, ಮಾತುಬಿಟ್ಟು ಮೌನದಿಂದಿದ್ದರೂ ಇಲ್ಲ. ಕ್ರೀಯ ಬಿಟ್ಟರಿಲ್ಲ, ಕ್ರೀಯ ಮಾಡಿದರಿಲ್ಲ. ಏನು ಮಾಡಿದರೇನು ವ್ಯರ್ಥವಲ್ಲದೆ ಸ್ವಾರ್ಥವಲ್ಲ. ಅದೇನುಕಾರಣವೆಂದರೆ, ತಮ್ಮ ನಿಲವು ತಾವು ಅರಿಯದ ಕಾರಣ. ನಮ್ಮ ಗುಹೇಶ್ವರಲಿಂಗವ ಬೆರೆಸಬೇಕಾದರೆ ಸಕಲಸಂಶಯ ಬಿಟ್ಟು, ಉಪಾದ್ಥಿರಹಿತನಾಗಿ, ಎರಡಳಿದು ಕರಕಮಲದಲ್ಲಿ ಅಡಗಬಲ್ಲರೆ ಪರಶಿವಲಿಂಗದಲ್ಲಿ ಅಚ್ಚಶರಣ ತಾನೇ ಎಂದನಯ್ಯ ನಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->