ಅಥವಾ

ಒಟ್ಟು 76 ಕಡೆಗಳಲ್ಲಿ , 20 ವಚನಕಾರರು , 64 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಒಳಗೆ ತಿಳಿಯದೆ ಹೊರಗೆ ಮಾಡುವ ಮಾಟವೆಲ್ಲ ಅಜ್ಞಾನದ ಗಡಣದೊಳಗು. ಒಳಗೆ ಗುರುಲಿಂಗಜಂಗಮದ ಪಾದತೀರ್ಥಪ್ರಸಾದವ ಕೊಂಡೆವೆಂದು ಹೊರಗೆ ಮಾಡುವ ಭಕ್ತಿಯ ಬಿಟ್ಟರೆ ಮುಂದೆ ಒದಗುವ ಮುಕ್ತಿಯ ಕೇಡು. ಅದೆಂತೆಂದೊಡೆ : ಅಸಲು ಕಳೆದ ಬಳಿಕ ಲಾಭವುಂಟೇ ? ಇಲ್ಲ ಇಲ್ಲ, ಮಾಣು. ಒಳಗಣ ಕೂಟ, ಹೊರಗಣ ಮಾಟವನರಿಯದೆ ಕೆಟ್ಟರು ನೋಡಾ ಹಿರಿಯರೆಲ್ಲರು ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
`ಸರ್ವಂ ಶಿವಮಯಂ ಜಗತ್' ಎಂಬುದ ತಿಳಿಯದೆ ನುಡಿದವರ ನುಡಿಯಂತೆ ನಡೆಯದಿರಾ ಮನವೆ. `ಸರ್ವಂ ಶಿವಮಯಂ ಜಗತ್' ಎಂದು ತಿಳಿದು ತಿಳಿದು ಸುಖಿಯಾಗು ಮನವೆ. ಪಿಂಡ ಬ್ರಹ್ಮಾಂಡಕ್ಕೆ `ತಿಲಷೋಡಶಭಾಗೇನ ಭೇದೋ ನಾಸ್ತಿ ವರಾನನೇ' ಎಂಬುದು ಪುಸಿಯಲ್ಲ ನೋಡಾ ಮನವೆ. ಈಶ್ವರನ ಪಂಚಮುಖಂದ ಪಂಚತತ್ವಗಳುದಯಿಸಿದವು. ಈ ತತ್ವಂಗಳೊಂದೊಂದು ಕೂಡಿ ತನ್ನ ಚೈತನ್ಯ ಬೆರಸಿದಲ್ಲಿ, ಪಿಂಡ ಬ್ರಹ್ಮಾಂಡವೆನಿಸಿತ್ತು ನೋಡಾ ಮನವೆ. ತನ್ನ ತಾನರಿದು ನೋಡಿದಡೆ, `ಸರ್ವಂ ಶಿವಕಪಿಲಸಿದ್ಧಮಲ್ಲಿಕಾರ್ಜುನಮಯಂ ಜಗತ್' ಎಂದರಿದು ಬಂದಿತ್ತು ನೋಡಾ ಮನವೆ.
--------------
ಸಿದ್ಧರಾಮೇಶ್ವರ
ಶೈವಸಿದ್ಧಾಂತಿಗಳಪ್ಪ ಕರ್ಮಕಾಂಡಿಗಳು ಸ್ಥಾವರಲಿಂಗದೆಡೆಯಲ್ಲಿ, ಹವನ ಹೋಮಾದಿ ಪವಿತ್ರಕಾರ್ಯವ ಕೈಕೊಂಡೆಡೆಯಲ್ಲಿ, ಉಚ್ಛಿಷ್ಟಾದಿ ಪಂಚಸೂತಕಗಳಂಟಿದಡೆ ಅವರು ಆ ಸೂತಕವ ಮಾನಿಸದೆ ಪರಿಶುದ್ಧಭಾವದಿಂದಿರ್ಪರು. ದೇವದೇವನಪ್ಪ ಮಹಾದೇವನನು ಲಿಂಗರೂಪದಿಂದ ಅಂಗದಲ್ಲಿ ಧರಿಸಿ ಪರಿಶುದ್ಧರಾದೆವೆಂದು ತಿಳಿಯದೆ ಸೂತಕವನಾಚರಿಸುವ ವ್ರತಗೇಡಿಗಳ ಎನಗೆ ತೋರದಿರಯ್ಯಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಯ್ಯಾ, ತನ್ನ ತಾನರಿಯದೆ, ತನ್ನ ಇಷ್ಟಲಿಂಗದ ಹೊಲಬು ತಿಳಿಯದೆ, ಕಾಮವ ತೊರೆಯದೆ, ಹೇಮವ ಜರೆಯದೆ, ನಾವು ಹರ ಗುರು ಚರ ಷಟ್‍ಸ್ಥಲದ ವಿರಕ್ತರೆಂದು ಚೆನ್ನಾಗಿ ನುಡಿದುಕೊಂಡು, ಕಾವಿ ಕಾಷಾಯಾಂಬರವ ಹೊದ್ದು, ಶಂಖ ಗಿಳಿಲು ದಂಡಾಗ್ರವ ಹೊತ್ತು, ಕೂಳಿಗಾಗಿ ನಾನಾ ದೇಶವ ತಿರುಗಿ, ಕಾಂಚನಕ್ಕೆ ಕೈಯೊಡ್ಡುವ ಪಂಚಮಹಾಪಾತಕರನು ಕಾಗೆಯ ಗರ್ಭದಲ್ಲಿ ಹುಟ್ಟಿಸಿ ಕಾಕಾ ಎಂದು ಕೂಗಿಸುತಿರ್ಪ[ನು] ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಮೊಟ್ಟೆ ಮೊಟ್ಟೆ ಪತ್ರೆಯ ತಂದು ಒಟ್ಟಿ, ಪೂಜಿಸಿದ[ಡೇ]ನು ಮನಶುದ್ಧವಿಲ್ಲದನ್ನಕ್ಕರ ? ಮನಮಗ್ನವಾಗಿ ಶಿವಧ್ಯಾನದಲ್ಲಿ ಕೂಡಿ, ಒಂದೇ ದಳವ ಧರಿಸಿದರೆ ಶಿವನು ಒಲಿಯನೆ? ಇಂತು ಪೂಜೆಯ ಮಾಡುವುದಕ್ಕಿಂತಲು ಅದೇ ತೊಪ್ಪಲನು ಕುದಿಸಿ ಪಾಕವ ಮಾಡಿದಲ್ಲಿ ಆ ಲಿಂಗವು ತೃಪ್ತಿಯಾಯಿತ್ತು. ಬರಿದೆ ಲಿಂಗವ ಪೂಜಿಸಿ ಜಂಗಮಕ್ಕೆ ಅನ್ನವ ಕೊಡದೆ, ಲಿಂಗದ ಮುಖವು ಜಂಗಮವು ಎಂದು ತಿಳಿಯದೆ, ತನು-ಮನ-ಧನವನು ಗುರು-ಲಿಂಗ-ಜಂಗಮಕ್ಕೆ ಸವೆಸದೆ, ಬಾಗಿಲಿಗೆ ಕಾವಲಿಕ್ಕಿ, ಹೆಂಡಿರು ಮಕ್ಕಳು ಕೂಡಿಕೊಂಡು, ತನ್ನ ತಾನೇ ತಿಂಬುವಂಥ ನೀಚ ಹೊಲೆಯರ ಮೂಗ ಸವರಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ ಉತ್ತಣ್ಣಗಳ ಪಾದುಕೆಯಿಂದ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಗುರು-ಲಿಂಗ-ಜಂಗಮವೆಂದರಿಯದ ಗೊಡ್ಡುಗಳ ಶಿಷ್ಯನ ಮಾಡಿಕೊಂಬುವ ಹೆಡ್ಡಜಡಜೀವಿಗಳನೇನೆಂಬೆನಯ್ಯ ! ಆಚಾರ-ಅನಾಚಾರದ ಭೇದವನರಿಯದ ಹೆಡ್ಡ ಮಾನವರಿಗೆ ಉಪದೇಶವ ಕೊಡುವ ಮತಿಭ್ರಷ್ಟರನೇನೆಂಬೆನಯ್ಯ ! ಅವನ ಅಜ್ಞಾನವನಳಿಯದೆ, ಅವನ ನಡೆನುಡಿಯ ಹಸ ಮಾಡದೆ, ಅವನ ಆದಿ-ಅಂತ್ಯವ ತಿಳಿಯದೆ, ಧನಧಾನ್ಯದ್ರವ್ಯದಾಸೆಗೆ ಶಿವದೀಕ್ಷೆಯ ಮಾಡುವನೊಬ್ಬ ಗುರುವ ಹುಟ್ಟಂಧಕನೆಂಬೆನಯ್ಯ ! ತನ್ನ ಗುರುತ್ವವನರಿಯದ ಗುರುವಿಂದ ಉಪದೇಶವ ಪಡವನೊಬ್ಬ ಶಿಷ್ಯನ ಕೆಟ್ಟಗಣ್ಣವನೆಂಬೆನಯ್ಯ ! ಇಂತಿವರ ಗುರು-ಶಿಷ್ಯರೆಂದಡೆ ನಮ್ಮ ಪ್ರಮಥರು ಮಚ್ಚರಯ್ಯ ! ನಮ್ಮ ಪ್ರಮಥರು ಮಚ್ಚದಲ್ಲಿ ಇಂತಪ್ಪ ಗುರುಶಿಷ್ಯರಿಬ್ಬರಿಗೆಯೂ ಯಮದಂಡಣೆ ತಪ್ಪದೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಎಲೆ ಎಲೆ, ಭಕ್ತ ಭವಿ ಎಂಬೋ ನೀತಿಯಂ ಕೇಳು : ಭಕ್ತ ದಾರು ? ಭವಿ ದಾರು ? ಎಂದಡೆ, ಎಲಾ, ಯಾವ ಕುಲ[ದವ]ನಾದಡೆ ಸರಿಯೋ ? ಯಾವ ದೇವರು ಆದರೆ ಸರಿಯೋ ? ಎಲ್ಲಾ ದೇವರಿಗೂ ಆತ್ಮಲಿಂಗವಾಗಿಪ್ಪನೇ ಮಹಾದೇವನೆಂದು ಹೇಳುವುದು ಶ್ರುತಿವಾಕ್ಯ. ಇದರೊಳಗೆ ಏಕದೈವವನು ಪಿಡಿದು ಪೂಜಿಸಿ, ಧ್ಯಾನಿಸಿ, ನಮಸ್ಕರಿಸಿ, ಕ್ರಿಯಾಚಾರದಿಂ ನಡೆದು, ನೀತಿಗಳನೋದಿ, ನಿರ್ಮಳಚಿತ್ತನಾದಡೆ ಭಕ್ತ. ಇದಂ ಮರೆದು, ಹಲವು ಕಾಲ ಲಿಂಗಧ್ಯಾನ, ಹಲವು ಕಾಲ ಹರಿಧ್ಯಾನ, ಹಲವು ಕಾಲ ಬ್ರಹ್ಮಧ್ಯಾನ, ಹಲವು ಕಾಲ ಎಲ್ಲಮ್ಮ, ಎಕನಾತಿ, ಶಾಕಿನಿ, ಡಾಕಿನಿ ಕಲ್ಲು ಮರದೊಳಗಿಪ್ಪ ದೇವರ ಪೂಜಿಸಿದಡೆ, ಎಲ್ಲಾರ ಎಂಜಲ ತಿಂಬೋರ ಎಂಜಲ [ತಿಂದು], ಭಕ್ತನೆಂದರಿಯದೆ, ಪ್ರಸಾದದ ಮಹಾತ್ಮೆಯ ತಿಳಿವ ತಿಳಿಯದೆ, ಧನದ ಪಿಶಾಚಿ ಎಂದು ಧರ್ಮ ಪರಹಿತಾರ್ಥವನು ಮರೆದು, ನಿತ್ಯ ನಿತ್ಯ ಅನ್ನಕ್ಲೇಶದಲ್ಲಿ ಹೊರಳುವ[ವ] ಲಿಂಗದೇಹಿಕನಾದಡೆಯು ಬ್ರಾಹ್ಮಣನಾದೆಡೆಯು, ಇವನೇ ಭವಿ. ಇಂತಾ ಭಕ್ತ ಭವಿಗಳ ನೆಲೆಯ ತಿಳಿದು ನಮ್ಮ ಶರಣರು ನಿರ್ಲೇಪ ದೇಹಮಂ ಅಂಗೀಕರಿಸಿ ಪೋದರು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ವೀರಮಾಹೇಶ್ವರರು ಸರ್ವಾಂಗದಲ್ಲಿ ವಿಭೂತಿ-ರುದ್ರಾಕ್ಷಿ ಧಾರಣವಾಗಿ, ಶಿವಲಿಂಗವ ಧರಿಸಿ, ಕಾವಿಲಾಂಛನವ ಪೊದ್ದರೆಂದು ಈ ಮತ್ರ್ಯಲೋಕದ ಜಡಮತಿ ಮರುಳಮಾನವರು ತಾವು ಧರಿಸುತ್ತಿರ್ಪರು. ಇಂತಪ್ಪವರ ನಡತೆ ಎಂತಾಯಿತ್ತೆಂದರೆ, ಗುರುವನರಿಯದೆ ವಿಭೂತಿಧರಿಸುವರೆಲ್ಲ ಬೂದಿಯೊಳಗಣ ಕತ್ತೆಗಳೆಂಬೆ. ತಮ್ಮ ನಿಜವ ತಾವರಿಯದೆ ರುದ್ರಾಕ್ಷಿ ಧರಿಸುವರೆಲ್ಲ ಕಳವು ಮಾಡಿ ಕೈಯ ಕಟ್ಟಿಸಿಕೊಂಡ ಕಳ್ಳರೆಂಬೆ. ಲಿಂಗದ ಸ್ವರೂಪವ ತಿಳಿಯದೆ ಕೊರಳಲ್ಲಿ ಲಿಂಗವ ಕಟ್ಟುವರೆಲ್ಲ ವಾಳೆ ಆವಿಗೆ ಯಳಗುದ್ದಿಯ ಕಟ್ಟುವಂತೆ ಕಟ್ಟುವರೆಂಬೆ. ಜಂಗಮದ ನಿಲವ ಅರಿಯದೆ ಕಾವಿಯ ಲಾಂಛನ ಹೊದ್ದವರೆಲ್ಲ ರಕ್ತಮುಳುಗಿದ ಹಸಿಯ ಚರ್ಮವ ಹೊದ್ದವರೆಂಬೆ. ಇಂತಿದರನುಭಾವವ ತಿಳಿಯದೆ ಈಶ್ವರನ ವೇಷವ ಧರಿಸಿ ಉದರಪೋಷಣಕ್ಕೆ ತಿರುಗುವರೆಲ್ಲ ಜಾತಿಹಾಸ್ಯಗಾರರೆಂಬೆ. ಇಂತಪ್ಪ ವೇಷಧಾರಿಗಳ ಶಿವಸ್ವರೂಪರೆಂದು ಭಾವಿಸುವವರ ಶಿವಸ್ವರೂಪರೆಂದು ಹೇಳುವವರ, ಇಂತಪ್ಪ ಉಭಯ ಮೂಢಾತ್ಮರ ಮುಖದ ಮೇಲೆ ಲೊಟ್ಟಲೊಟ್ಟನೆ ಉಗುಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಘಟ್ಟಿಸಿ ಅಟ್ಟೆಂದ ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಬಲ್ಲೆನೆಂಬ ಮದದಲ್ಲಿ ಅರಿದೆನೆಂಬ ಮಹಾಮದವಂ ಕೊಂಡು, ಅಹಂಕಾರವೆಂಬ ಮದ, ಸರ್ವಾಂಗ ವೇದ್ಥಿಸಿ ತಲೆಗೇರಿದಲ್ಲಿ, ಸತ್ತೆಂಬುದನರಿಯದೆ, ಚಿತ್ತೆಂಬುದ ತಿಳಿಯದೆ, ಆನಂದವೆಂಬ ಆಶ್ರಯವ ಭಾವಿಸಿ ನೋಡದೆ, ಸ್ಥೂಲಸೂಕ್ಷ್ಮಕಾರಣವೆಂಬ ತನುತ್ರಯದ ಭೇದವ ಕಾಣಲರಿಯದೆ, ಅಂಡಪಿಂಡವೆಂಬ ಖಂಡಿತವ ತಿಳಿಯಲರಿಯದೆ, ದಿಂಡೆಯತನದಿಂದ ಕಂಡೆನೆಂದಡೆ, ಅದು ತಾ ಕೊಂಡ ಮೂರು ಹೆಂಡದ ಗುಣವೆಂದೆ, ಧರ್ಮೇಶ್ವರಲಿಂಗದ ಸಂಗವಲ್ಲಾಯೆಂದೆ.
--------------
ಹೆಂಡದ ಮಾರಯ್ಯ
ತದ್ದುತತುರಿ ಬಾವು ಬಗದಳ ಶೀತ ವಾತ ಬಹುಜ್ವರ ಹೊಟ್ಟೆಬೇನೆ ಕೆಟ್ಟ ಹುಣ್ಣು ಮೈಕುಷ್ಠ ಮೊದಲಾದ ಮುನ್ನೂರರುವತ್ತು ವ್ಯಾದ್ಥಿಗಳ, ಶಿವನು ಹರಿಯಬಿಟ್ಟು ನೋಡುವ. ಇವೆಲ್ಲ ಶಿವನ ಕರುಣವಾದಲ್ಲದೆ ಹೋಗವು. ಇದನರಿಯದೆ, ನಾರು ಬೇರ ನಚ್ಚಿದ ಅವಿದ್ಯ ಸಾಧಕರೆಲ್ಲ ಹತವಾಗಿ ಹೋದರಂದೆ. ಇಂತಿದ ವಿಚಾರಿಸಿ ತಿಳಿಯದೆ, ಲೋಕದ ಬುದ್ಧಿಗೇಡಿ ಮನುಜರು, ಸಜ್ಜನಶುದ್ಧಶಿವಾಚಾರಸಂಪನ್ನರಾದ ಜಂಗಮಲಿಂಗದ ಮಾತ ಕೇಳದೆ, ಅದ್ದನ ಜೋಳ, ಅರಪಾವು ಎಣ್ಣೆಯ ಕೊಂಡು, ನೋಟಕಾರ್ತಿಯ ಮನೆಗೆ ಹೋಗಿ, ಅವಳು ಹೇಳಿದ ತಾತುಭೂತದ ಕೋಟಲೆಯ ಕೈಕೊಂಡು ಬಂದು, ಅವಕ್ಕೂಟವನಟ್ಟಿಕ್ಕಿ,. ಮಿಕ್ಕಿದ ಕೂಳ ತನ್ನಿಷ್ಟಲಿಂಗಕ್ಕೆ ತೋರಿ ತಿಂಬ, ಲಿಂಗದ್ರೋಹಿಗಳಿಗೆ ಕುಂಬ್ಥೀಪಾತಕ ನಾಯಕನರಕ, ತಪ್ಪದೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಪ್ರಸಾದ ಪ್ರಸಾದವೆಂದು ಒಪ್ಪಕ್ಕೆ ಕೊಂಬ ಬೊಪ್ಪಗಳು ನೀವು ಕೇಳಿರೊ. ಕಾಯಪ್ರಸಾದವನರಿದು, ಕರಣಪ್ರಸಾದವನರಿದು, ಜೀವಪ್ರಸಾದವನರಿದು, ನಿಜಪ್ರಸಾದವನರಿದು ಕೊಳಬಲ್ಲರೆ ಪ್ರಸಾದಿ. ಕೊಂಬವರ ಕಂಡು ಪ್ರಸಾದವ ಕೈಕೊಂಡರೆ ಕಂಡವರ ಕಂಡು ಕೌದಿಯ ಹೊಲಿಯ ಹೋದರೆ ಕುಂಟೆಳೆ ಬಿದ್ದಂತೆ. ನವಿಲು ಕುಣಿಯಿತ್ತೆಂದು ಶಾಬಕ ಕುಣಿದು ಪುಚ್ಚವ ಕಳಕೊಂಡಂತೆ. ಸಿಂಹ ಲೆಂಘಣಿಸಿತ್ತೆಂದು ಸೀಳನಾಯಿ [ಲೆಂಘಣಿಸಿ] ಸೊಂಟವ ಕಳಕೊಂಡಂತೆ. ಸದ್ಭಕ್ತರ ಕಂಡು ನಾನು ಸದ್ಭಕ್ತನೆಂದು ಓಗರವ ನೀಡಿಸಿಕೊಂಡು ಅಯ್ಯಾ, ಹಸಾದ, ಮಹಾಪ್ರಸಾದವ ಪಾಲಿಸಿರೆಂದು ತನ್ನಾದಿ ಕ್ರಿಯಾದೀಕ್ಷೆ, ತನ್ನ ಮಧ್ಯೆ ಜ್ಞಾನದೀಕ್ಷೆ, ತನ್ನವಸಾನ ಮಹಾಜ್ಞಾನ ದೀಕ್ಷೆಯ ತಿಳಿಯದೆ ತನ್ನ ಪೂರ್ವಾಪರ, ತನ್ನ ಉದಯಾಸ್ತಮಾನವರಿಯದೆ, ಅರ್ಪಿತಾವಧಾನಭಕ್ತಿಯನರಿಯದೆ, ಗುರು ಲಿಂಗ ಜಂಗಮದ ನಿಲುಕಡೆಯನರಿಯದೆ, ಕಾಂಚನವ ಕೊಟ್ಟು, ಕೈಯಾಂತು ಪಡಕೊಂಬ ಭಕ್ತನ ಅಂಗವಿಕಾರವು ಮುನ್ನಿನಂತೆ. ಆ ಭಕ್ತನ ಆಚಾರ ವಿಚಾರ ನಡೆ ನುಡಿ ದೀಕ್ಷಾತ್ರಯಂಗಳ ವಿಚಾರಿಸದೆ ಪ್ರಸಾದವ ಕೊಟ್ಟ ಗುರುವಿನ ವಿಚಾರವು ಮುನ್ನಿನಂತೆ. ಈ ಉಭಯತರು, ಬಟ್ಟೆಗುರುಡನ ಕೈಯ ಬಟ್ಟೆಗುರುಡ ಹಿಡಿದು ಹಳ್ಳವ ಬಿದ್ದಂತೆ ಕಾಣಾ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಇಂತಪ್ಪ ತ್ರಿವಿಧಾಚರಣೆಯಲ್ಲಿ ಬ್ಥಿನ್ನಜ್ಞಾನಿಗಳಾಗಿ ಬ್ಥಿನ್ನ ಕ್ರಿಯಗಳಾಚರಿಸಿ, ಬ್ಥಿನ್ನಭಾವ ಮುಂದುಗೊಂಡು ವ್ರತವನಾಚರಿಸುವ ಅಜ್ಞಾನಿಗಳಾದ ಜೀವಾತ್ಮರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ ? ಮತ್ತೆಂತೆಂದೊಡೆ : ಸುಜ್ಞಾನೋದಯವಾಗಿ ಸಕಲಪ್ರಪಂಚ ನಿವೃತ್ತಿಯ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಮರಸವಾಗಿ ಸರ್ವಾಂಗಲಿಂಗಮಯ ತಾನೆಂದು ತಿಳಿದುನೋಡಿ, ಅಂತಪ್ಪ ಘನಮಹಾಲಿಂಗ ಇಷ್ಟಬ್ರಹ್ಮವನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿಯನಳಿದು ಆ ಇಷ್ಟಲಿಂಗದ ಸತ್ಕ್ರಿಯವನಾಚರಿಸುವುದೇ ದಿನಚರಿ ವಾರ ಸೋಮವಾರವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮದ ಚಿತ್ಕಲಾಸ್ವರೂಪವಾದ ನಿಷ್ಕಲಪ್ರಾಣಲಿಂಗವನು ಮನದಲ್ಲಿ ಸ್ವಾಯತವಮಾಡಿ, ಆ ಮನೋಪ್ರಕೃತಿಯನಳಿದು ಆ ನಿಷ್ಕಲ ಪ್ರಾಣಲಿಂಗದ ಸುಜ್ಞಾನಕ್ರಿಯಗಳನಾಚರಿಸುವುದೇ ದ್ವಾದಶಮಾಸದೊಳಗೆ ಶ್ರೇಷ್ಠವಾದ ಶ್ರಾವಣಮಾಸದವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮಾನಂದಸ್ವರೂಪವಾದ ನಿರಂಜನಭಾವಲಿಂಗವನು - ಧನವೆಂದಡೆ ಆತ್ಮ. ಅಂತಪ್ಪ ಆತ್ಮನಲ್ಲಿ ಸ್ವಾಯತವ ಮಾಡಿ, ಆ ಆತ್ಮಪ್ರಕೃತಿಯನಳಿದು, ಆ ನಿರಂಜನ ಭಾವಲಿಂಗದ ಮಹಾಜ್ಞಾನಾಚರಣೆಯನಾಚರಿಸುವುದೇ ದ್ವಾದಶಮಾಸ, ದ್ವಾದಶ ಚತುರ್ದಶಿ, ದ್ವಾದಶ ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ ಶಿವರಾತ್ರಿಅಮವಾಸೆಯ ವ್ರತವೆಂಬೆ. ಇಂತೀ ತ್ರಿವಿಧಲಿಂಗ ಮೊದಲಾದ ಚಿದ್ಘನಲಿಂಗವು ತನ್ನ ಸರ್ವಾಂಗದಲ್ಲಿ ಸ್ವಾಯತವುಂಟೆಂದು ಶ್ರೀಗುರುಮುಖದಿಂ ತಿಳಿಯದೆ ಲಿಂಗವಿರಹಿತರಾಗಿ, ಬಾಹ್ಯದ ಕ್ರಿಯೆಗಳ ಪಿಡಿದು ವ್ರತವನಾಚರಿಸುವುದೆಲ್ಲ ಮಾಯಾವಿಲಾಸ ಭವದ ಬಟ್ಟೆ ಎಂದು ತಿಳಿಯದೆ ಭವಭಾರಿಗಳಾಗಿ, ಭವಕ್ಕೆ ಭಾಜನವಾಗಿ ಕೆಟ್ಟು ಮನು ಮುನಿ ದೇವ ದಾನವರು ಮಾನವರು ಮೊದಲಾದ ಸಕಲ ಲೋಕಾದಿಲೋಕಂಗಳು ತಮ್ಮ ನಿಲುವು ತಾವಾರೆಂಬುದನ್ನರಿಯದೆ ಇದಿರಿಟ್ಟು ಕೆಟ್ಟುಪೋದರು ನೋಡೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞಾ, ಬ್ರಹ್ಮರಂಧ್ರ, ಶಿಖಾ, ಪಶ್ಚಿಮವೆಂಬ ನವಚಕ್ರಸ್ಥಾನವ ಗುದ ಗುಹ್ಯ ನಾಬ್ಥಿ ಹೃದಯ ಕಂಠ ಉತ್ತಮಾಂಗ ಅಳ್ಳನೆತ್ತಿ ನಡುನೆತ್ತಿ ಹಿಂಭಾಗದ ಕಳ್ಳಕುಣಿಕೆಯೆಂದು ಪೇಳುವಿರಿ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗ ಇರ್ಪುದೇ? ಇಲ್ಲ. ಮತ್ತಂ, ಬಲ್ಲಾದರೆ ಪೇಳಿರಿ, ಇಲ್ಲವಾದರೆ ನಮ್ಮ ಶಿವಗಣಂಗಳ ಕೇಳಿರಿ. ಅದೆಂತೆಂದಡೆ : ಆಧಾರಚಕ್ರವೆಂಬುದೇ ಘ್ರಾಣ. ಸ್ವಾದ್ಥಿಷ್ಠಾನಚಕ್ರವೆಂಬುದೇ ಜಿಹ್ವೆಸ್ಥಾನ. ಮಣಿಪೂರಕಚಕ್ರವೆಂಬುದೇ ನೇತ್ರಸ್ಥಾನ. ಅನಾಹತಚಕ್ರವೆಂಬುದೇ ತ್ವಕ್ಕಿನಸ್ಥಾನ. ವಿಶುದ್ಧಿಚಕ್ರವೆಂಬುದೇ ಕರ್ಣಸ್ಥಾನ. ಆಜ್ಞಾಚಕ್ರವೆಂಬುದೇ ಹೃದಯಸ್ಥಾನ. ಬ್ರಹ್ಮಸ್ಥಾನವೆಂಬುದೇ ಕರಸ್ಥಲ. ಶಿಖಾಸ್ಥಾನವೆಂಬುದೇ ಮನಸ್ಥಲ. ಪಶ್ಚಿಮಸ್ಥಾನವೆಂಬುದೇ ಪ್ರಾಣಸ್ಥಲ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗವು ಸಂಬಂಧವಾಗಿರುವುದಲ್ಲದೆ ಅಂತಪ್ಪ ಜಡದೇಹಿ ನವಸ್ಥಾನದ ಮಾಂಸರಕ್ತದಲ್ಲಿ ಪರಶಿವಲಿಂಗವು ಇರ್ಪುದೆ? ಇಲ್ಲ. ಅದೇನು ಕಾರಣವೆಂದಡೆ : ಘ್ರಾಣದಲ್ಲಿ ಆಚಾರಲಿಂಗಸ್ವಾಯತವಿಲ್ಲದೆ ಗಂಧ ದುರ್ಗಂಧ ಮೊದಲಾದ ಆವ ಗಂಧದ ವಾಸನೆಯು ತಿಳಿಯದು. ಜಿಹ್ವೆಯಲ್ಲಿ ಗುರುಲಿಂಗಸ್ವಾಯತವಿಲ್ಲದೆ ಸವಿ ಕಹಿ ಮೊದಲಾದ ಆವ ರುಚಿಸ್ವಾದವು ತಿಳಿಯದು. ನೇತ್ರದಲ್ಲಿ ಶಿವಲಿಂಗಸ್ವಾಯತವಿಲ್ಲದೆ ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ ಮೊದಲಾದ ಷಡ್ವರ್ಗದ ರೂಪು ಲಕ್ಷಣ ತಿಳಿಯದು. ತ್ವಕ್ಕಿನಲ್ಲಿ ಜಂಗಮಲಿಂಗಸ್ವಾಯತವಿಲ್ಲದೆ ಮೃದು ಕಠಿಣ ಮೊದಲಾದ ಆವ ಸುಖವು ತಿಳಿಯದು. ಶ್ರೋತ್ರದಲ್ಲಿ ಪ್ರಸಾದಲಿಂಗಸ್ವಾಯತವಿಲ್ಲದೆ ಸುಸ್ವರ ಅಪಸ್ವರ ಮೊದಲಾದ ಆವ ಸ್ವರಲಕ್ಷಣವು ತಿಳಿಯದು. ಹೃದಯದಲ್ಲಿ ಮಹಾಲಿಂಗಸ್ವಾಯತವಿಲ್ಲದೆ ಷಡಿಂದ್ರಿಸುಖತೃಪ್ತಿ ಮೊದಲಾದ ಸಕಲೇಂದ್ರಿಯ ಸುಖತೃಪ್ತಿ ಸಂತೋಷವು ತಿಳಿಯದು. ಕರಸ್ಥಲದಲ್ಲಿ ನಿರಾಕಾರವಾದ ನಿಷ್ಕಲಲಿಂಗವೆಂಬ ಇಷ್ಟಲಿಂಗ ಸ್ವಾಯತವಿಲ್ಲದೆ ಷಡ್ವಿಧಾಂಗದಲ್ಲಿ ಷಡ್ವಿಧಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಮನದಲ್ಲಿ ಶೂನ್ಯಲಿಂಗವೆಂಬ ಪ್ರಾಣಲಿಂಗಸ್ವಾಯತವಿಲ್ಲದೆ ಸರ್ವೇಂದ್ರಿಯಲ್ಲಿ ಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಪ್ರಾಣವೆಂಬಾತ್ಮನಲ್ಲಿ ಭಾವಲಿಂಗಸ್ವಾಯತವಿಲ್ಲದೆ ಸರ್ವಾಂಗಲಿಂಗಮಯ ಪರವಸ್ತುಸ್ವರೂಪ ತಾನೆಂದು ತಿಳಿಯದು. ಇಂತಪ್ಪ ವಿಚಾರವನು ತಿಳಿಯಬಲ್ಲಾತನೇ ಅನಾದಿಶರಣನು. ಅಂತಪ್ಪ ಪರಶಿವಲಿಂಗದ ಸ್ವಾಯತಸಂಬಂಧವಾದ ಭೇದವ ತಿಳಿಯದೆ ಅಂಗಭಾವ ಮುಂದುಗೊಂಡು ಇರ್ಪಾತನೇ ಭವಭಾರಿಕನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ, ಮತ್ತೊಂದು ಪರಿಯ ಪೇಳ್ವೆ. ಅದೆಂತೆಂದಡೆ: ಈ ಲೋಕದೊಳಗೆ ಗುರುವೆಂಬಾತನು ಭಕ್ತರಿಗೆ ದೀಕ್ಷೆಯ ಮಾಡಿ ಪೂರ್ವಜನ್ಮವಳಿದು ಪುನರ್ಜಾತನ ಮಾಡಿದೆವೆಂಬರು. ಜಂಗಮಲಿಂಗಿಗಳಿಗೆ ಚರಂತಿಹಿರಿಯರು ಗುರುವೆಂಬಾತನು ಉಭಯರು ಕೂಡಿ, ಅಯ್ಯತನ ಮಾಡಿದೆವು ಎಂಬರು. ಅವರೇನು ಪೂರ್ವದಲ್ಲಿ ಕಪ್ಪಾಗಿದ್ದರೆ ? ಈಗೇನು ಕೆಂಪಗಾದರೆ ? ಅವರೇನು ಪೂರ್ವದಲ್ಲಿ ಬಿಳುಪಾಗಿದ್ದರೆ ? ಈಗೇನು ಕಪ್ಪಾದರೆ ? ಎಲಾ ದಡ್ಡಪ್ರಾಣಿಗಳಿರಾ, ಇದೇನು ವೀರಶೈವಮಾರ್ಗವಲ್ಲ; ಇದು ಶೈವಮಾರ್ಗ. ಇನ್ನು ವೀರಶೈವಮಾರ್ಗದಾಚಾರವ ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಆರೂರವರ ಉಲುಹ ಮಾಣಿಸಿ, ಮೂರೂರವರ ಮೂಲಿಗೆ ಹಾಕಿ, ಬೇರೊಂದೂರವರ ತೋರಬಲ್ಲರೆ ವೀರಶೈವರೆಂಬೆ. ಆರು ಮಂದಿಯನಟ್ಟಿ, ಮೂರು ಮಂದಿಯ ಕುಟ್ಟಿ, ಬಟ್ಟಬಯಲಿನ ಘಟ್ಟಿಯ ತೋರಬಲ್ಲರೆ ವೀರಶೈವರೆಂಬೆ. ಆರು ಬಟ್ಟೆಯನೇ ಮೆಟ್ಟಿ, ಮೂರು ಬಟ್ಟೆಯನೇ ದಾಂಟಿ, ಮೇಲುಬಟ್ಟೆಯಲ್ಲಿ ನಿಂದು ನಿಟಿಲಲೋಚನನ ತೋರಬಲ್ಲರೆ ವೀರಶೈವರೆಂಬೆ. ಆರು ಬಾಗಿಲ ಹಾಕಿ, ಮೂರು ಬಾಗಿಲ ಮುಚ್ಚಿ, ಇನ್ನೊಂದು ಕದವ ತೆಗೆದು ತೋರಬಲ್ಲರೆ ವೀರಶೈವರೆಂಬೆ. ಇಂತೀ ಕ್ರಮವನರಿದು ದೀಕ್ಷೆಯ ಮಾಡಬಲ್ಲರೆ ಗುರುವೆಂಬೆ, ಇಲ್ಲದಿದ್ದರೆ ನರಗುರಿಗಳೆಂಬೆ. ಈ ಭೇದವ ತಿಳಿದು ಅಯ್ಯತನ ಮಾಡಬಲ್ಲರೆ ಚರಮೂರ್ತಿಗಳೆಂಬೆ. ಇಲ್ಲದಿದ್ದರೆ ಮತಿಭ್ರಷ್ಟ ಮರುಳಮಾನವರೆಂಬೆ. ಇಂತೀ ವಿಚಾರವನು ಅರಿಯದೆ ದೀಕ್ಷೆಯ ಮಾಡಬೇಕೆಂಬವರ, ಇಂತೀ ಭೇದವ ತಿಳಿಯದೆ ದೀಕ್ಷೆ ಪಡೆಯಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಅಘೋರನರಕದಲ್ಲಿಕ್ಕೆಂದ ಕಾಣಾ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->