ಅಥವಾ

ಒಟ್ಟು 115 ಕಡೆಗಳಲ್ಲಿ , 15 ವಚನಕಾರರು , 90 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಬಲಿಯ ಭೂಮಿ, ಕರ್ಣನ ಕವಚ, ಖಚರನ ಆಸ್ಥಿ, ಶಿಬಿಯ ಮಾಂಸ ವೃಥಾ ಹೋುತ್ತಲ್ಲಾ, ಶಿವಭಕ್ತಿಮತಿಕ್ರಮ್ಯ ಯದ್ದಾನಂ ಚ ವಿದ್ಥೀಯತೇ ನಿಷ್ಫಲಂ ತು ಭವೇದ್ದಾನಂ ರೌರವಂ ನರಕಂ ವ್ರಜೇತ್ ಇಂತೆಂದುದಾಗಿ, ಕೂಡಲಸಂಗನ ಶರಣರನರಿಯದೆ ಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋುತ್ತಲ್ಲಾ. 224
--------------
ಬಸವಣ್ಣ
ದ್ರವ್ಯರೂಪ ರೂಪಿಸುವೆ ಅರ್ಪಿತಕ್ಕೆಂದು ಅರ್ಪಿತರೂಪ ರೂಪಿಸುವೆ ಪ್ರಸಾದಕ್ಕೆಂದು, ಪ್ರಸಾದರೂಪ ರೂಪಿಸುವೆ ಕಾಯಕ್ಕೆಂದು, ಪ್ರಥಮೇ ಯೋಜಯೇದ್ದ್ರವ್ಯಂ ದ್ವಿತೀಯಂ ಅರ್ಪಿತಂ ತಥಾ ತದರ್ಥಂ ತು ಶರೀರಾರ್ಥಂ ಶರೀರಂ ಪ್ರಾಣಕಾರಣಂ ಎಂದುದಾಗಿ ಕಾಯರೂಪ ರೂಪಿಸುವೆ ಪ್ರಾಣಕ್ಕೆಂದು ಪ್ರಾಣರೂಪ ರೂಪಿಸುವೆ ಕೂಡಲಚೆನ್ನಸಂಗಯ್ಯಗೆಂದು.
--------------
ಚನ್ನಬಸವಣ್ಣ
ಶಿವತಂತ್ರದಿಂದ ಸುಖದುಃಖಗಳು ಬರುತಿಹವೆಂದರಿಯದೆ ನರಗುರಿಗಳಿಗೆ, ರೋಗ ದಾರಿದ್ರ್ಯ ಅಪಜಯಂಗಳು ಬರುತ್ತಿರಲು ವಿಪ್ರಗೆ ಕೈಮುಗಿದು ಕಾಣಿಕೆಯನಿಕ್ಕಿ ತನ್ನ ಹೆಸರ ಹೇಳಿ ಸೂರ್ಯಬಲ ಚಂದ್ರಬಲ ಬೃಹಸ್ಪತಿಬಲ ನವಗ್ರಹಬಲವ ಕೇಳುವವರಿಗೆ ಎಲ್ಲಿಯದೋ ಶಿವಭಕ್ತಿ ? ಸೂರ್ಯನು ಜ್ಞಾನವುಳ್ಳ್ಳವನಾದಡೆ ಗೌತಮಮುನೀಶ್ವರನ ಹೆಂಡತಿ ಅಹಲ್ಯಾದೇವಿಗೆ ಮೋಹಿಸಿ ಮುನಿಯ ಶಾಪದಿಂದ ಕುಷ್ಟದೊಳಗಿಹನೆ ? ಳ ಅಲ್ಲದೆ ದಕ್ಷನ ಯಾಗದಲ್ಲಿ ಹಲ್ಲ ಹೋಗಲಾಡಿಸಿಕೊಂಬನೆ ? ಚಂದ್ರನು ಜ್ಞಾನವುಳ್ಳವನಾದಡೆ ಗುರುವಿನ ಹೆಂಡತಿಗೆ ಅಳುಪಿ ಕೊಂಡೊಯ್ದು ಜಾತಜ್ವರದಲ್ಲಿ ಅಳಲುತಿಹನೆ ? ಬೃಹಸ್ಪತಿ ಜ್ಞಾನವುಳ್ಳವನಾದಡೆ ಸಕಲ ಜ್ಯೋತಿಷ್ಯಗಳ ನೋಡಿ ವಿವಾಹವಾದ ಹೆಂಡತಿ ರೋಹಿಣೀದೇವಿಯ ಚಂದ್ರನೆತ್ತಿಕೊಂಡು ಹೋಹಾಗ ಸುಮ್ಮನಿದ್ದುದು ಏನು ಜ್ಞಾನ ? ಶನಿ ಜ್ಞಾನವಳ್ಳವನಾದಡೆ ಕುಂಟನಾಗಿ ಸಂಕೋಲೆ ಬೀಳ್ವನೆ ? ಅದು ಕಾರಣ_ ತಮಗೆ ಮುಂಬಹ ಸುಖದುಃಖಂಗಳನರಿಯದವರು ಮತ್ತೊಬ್ಬರ ಸುಖದುಃಖಂಗಳ ಮೊದಲೆ ಅರಿಯರು. ಬೃಹಸ್ಪತಿಯ ಮತದಿಂದೆ ದಕ್ಷ, ಯಾಗವನಿಕ್ಕೆ ಕುರಿದಲೆಯಾಯಿತ್ತು. ಬೃಹಸ್ಪತಿಯ ಮತದಿಂದೆ ದ್ವಾರಾವತ ನೀರಲ್ಲಿ ನೆರೆದು ಕೃಷ್ಣನ ಹದಿನಾರುಸಾವಿರ ಸ್ತ್ರೀಯರ ಹೊಲೆಬೇಡರು ಸೆರೆಯನೊಯ್ದರು, ಶ್ರೀರಾಮನ ಹೆಂಡತಿ ಸೀತಾಂಗನೆ ಸೆರೆಯಾದಳು. ಇಂತೀ ತಮತಮಗೆ ಮುಂದೆ ಬಹ ಅಪಜಯಂಗಳನರಿಯದ ಕಾರಣ, ಆ ಬೃಹಸ್ಪತಿ ಜ್ಞಾನಿಯ ಮತದಿಂದೆ, ಅಭಾಷ ಜೋಯಿಸರ ಮಾತ ಕೇಳಿ ಹುಣ್ಣಿಮೆ ಅಮವಾಸೆಯಲ್ಲಿ ಉಪವಾಸವಿದ್ದು, ಗ್ರಹಬಲವುಳ್ಳ ಶುಭಮುಹೂರ್ತದಲ್ಲಿ, ಅರಳಿಯ ಮರಕ್ಕೆ ನೀರ ಹೊಯ್ದು ನೂಲ ಸುತ್ತಿ ವಿಪ್ರಜೋಯಿಸರ್ಗೆ ಹೊನ್ನು ಹಣವ ಕೊಟ್ಟಡೆ, ಹೋದೀತೆಂಬ ಅನಾಚಾರಿಯ ಮಾತ ಕೇಳಲಾಗದು. `ವಸಿಷ್ಠೇನ ಕೃತೇ ಲಗ್ನೇ ವನೇ ರಾಮೇಣ ವಾಸಿತೇ ಕರ್ಮಮೂಲೇ ಪ್ರಧಾನೇ ತು ಕಿಂ ಕರೋತಿ ಶುಭಗ್ರಹಃ ' ಇಂತೆಂದುದಾಗಿ ಬಹ ಕಂಟಕವ ಹೊನ್ನು ಹೆಣ್ಣು ಶುಭ ಲಗ್ನದಿಂದೆ ಪರಿಹರಿಸೇನೆಂದಡೆ ಹೋಗಲರಿಯದು. ಹಸಿವಿಲ್ಲದ ಮದ್ದು ಕೊಟ್ಟೇನು, ಅಶನವ ನೀಡೆಂಬಂತೆ, ಖೇಚರದ ಮದ್ದು ಕೊಟ್ಟೇನು ತೊರೆಯ ದಾಂಟಿಸೆಂಬಂತೆ, ಕುರುಡನ ಕೈಯ ಕುರುಡ ಹಿಡಿದು ಹಾದಿಯ ತೋರುವಂತೆ, ಲಜ್ಜೆ ನಾಚಿಕೆ ಇಲ್ಲದೆ ವಿಪ್ರರ ಕೈಯೆ ಲಗ್ನವ ಕೇಳಲಾಗದು. ಸದ್ಭಕ್ತರಾದವರಿಗೆ ನಿಮ್ಮ ಬಲವೇ ಬಲವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ನವನಾಳ ಬಿಂದು ಪವನ ಹೃದಯಕಮಲ ಮಧ್ಯದ ದಳವ ಮೆಟ್ಟಿ, ಗಳಿಗೆ ಗಳಿಗೆಗೆ ಚರಿಸುವ ಪರಮಹಂಸನ ಆರಿಗೆಯೂ ಅರಿಯಬಾರದು_ಘಮ್ಮುಘಮ್ಮೆನೆ ಸುತ್ತುವನಲ್ಲದೆ ! ಅದೆಂತೆಂದಡೆ: ``ಪೂರ್ವದಲೇ ಭವೇತ್ ಭಕ್ತಿರಾಗ್ನೇಯಾಂ ಚ ಕ್ಷುಧೈವ ಚ ದಕ್ಷಿಣೇ ಕ್ರೋಧಮುತ್ಪನ್ನಂ ನೈರುತ್ಯಾಂ ಸತ್ಯಮೇವ ಚ ಪಶ್ಚಿಮೇ ತು ಭವೇತ್ ನಿದ್ರಾ ವಾಯವ್ಯಾಂ ಗಮನಸ್ತಥಾ ಉತ್ತರಾಯಾಂ ಧರ್ಮಶೀಲಾವೈಶಾನ್ಯಾಂ ವಿಷಯಸ್ತಥಾ ಅಷ್ಟದಲೇಷು ಮಧ್ಯಸ್ಥಮಾನಚಂದಮಚಲಂ ಶಿವಃ_ಎಂದುದಾಗಿ ಇಂದು ಅಷ್ಟದಳವ ಮೆಟ್ಟಿ ಚರಿಸುವ ಆ ಪರಮಹಂಸನ ತಲೆಗಿಂಬ ಮಾಡಿ ನಿಲಿಸಬಲ್ಲ ನಿಮ್ಮ ಶರಣ ಚನ್ನಬಸವಣ್ಣಂಗೆ ನಾನು ನಮೋ ನಮೋ ಎಂಬೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಮುನಿಯದಿರಿ ಮುನಿಯದಿರಿ ನಿಮಗೊಂದು ಯುಕ್ತಿಯ ಹೇಳಿಹೆನು, ಅದೆಂತೆಂದಡೆ: ನೀವೆನ್ನ ವಂಶೀಭೂತರಾದ ಕಾರಣ_ನಿಮ್ಮ ಹೆಚ್ಚು ಕುಂದು ಎನ್ನದಾಗಿ, ನಿಮ್ಮ ಅಸ್ತಿ ನಾಸ್ತಿ ಎನ್ನದಾಗಿ, ನಿಮ್ಮ ಹಾನಿವೃದ್ಧಿ ಎನ್ನದಾಗಿ. ಹಾವ ಹಡದವರು ಬೇಲಿಯ ಹೊಗುವರೆ ಹೋಹುದೆ ಅಯ್ಯಾ ? ವ್ಯಾಧನು ಸೂಸಲ ಚೆಲ್ಲಿ ಜಂತ್ರವ ಹಣ್ಣಿ, ಅಡಿಗಲ್ಲನೊಡ್ಡಿ ಹೋದಬಳಿಕ ಸೂಸಲ ಕಂಪಿಗೆ ಹೆಗ್ಗಣ ಬಂದು ಬಿದ್ದಂತೆ ಬಿದ್ದಿರಲ್ಲಾ ಮಾಯದ ಬಲೆಯಲ್ಲಿ ! ಕೋಪವೆಂಬ ಅಡಗನೊಡ್ಡಿ ತಾಪವೆಂಬ ಅರೆಗಲ್ಲನಿರಿಸಿ ಹುಸಿಯೆಂಬ ಮೀಟುಗವಣೆಯ ಜಂತ್ರಿಸಿ, ಹೊನ್ನು ಹೆಣ್ಣು ಮಣ್ಣೆಂಬ ಅಡಿಗಲ್ಲನೊಡ್ಡಿ ಕೆಡಹಿದನಲ್ಲಾ ನಿಷ್ಕರುಣಿ ಮುಕ್ಕಣ್ಣ ವ್ಯಾಧನು ! ಅದೆಂತೆಂದಡೆ, ಶಿವರಹಸ್ಯದಲ್ಲಿ: ``ನಿಸ್ಸಂಗತ್ವಂ ನಿರಾಭಾರೀ ನಿಸ್ಸೀಮಂ ನಿರುಪಾಧಿಕಂ ನಿರ್ದೇಹಂ ನಿರ್ಮಲಂ ನಿತ್ಯಂ ಸತ್ಯಂ ಜಂಗಮಲಕ್ಷಣಂ ಇಂತೆಂಬ ಶ್ರುತ್ಯರ್ಥವ ಕೇಳದೆ, ಜಂಗಮವಾಗಿ ಸುಳಿವ ಮರುಳುಗಳಿರಾ ಕೇಳಿರೆ, ಇದಕ್ಕೆ ಮತ್ತೆಯೂ ಶ್ರುತಿ: ``ಸುಖಂ ಚ ಬಿಂದುಮಾತ್ರೇಣ ದುಃಖಂ ಪರ್ವತ ಏವ ಚ ಹರಿಣೀಪಾದಮಾತ್ರೇಣ ಬಂಧನಂ ತು ಜಗತ್ರಯಂ ಇಂತೆಂಬ ಶ್ರುತಿಗೊಳಗಾಗದೆ ಹೊನ್ನು ಹೆಣ್ಣು ಮಣ್ಣಿನಾಸೆಯಂ ಬಿಟ್ಟು ಕೋಪ ತಾಪಮಂ ಬಿಟ್ಟು, ಭ್ರಾಂತು ಭ್ರಮೆಯಂ ಬಿಟ್ಟು ಜಂಗಮವಾಗಬೇಕು ಕಾಣಿರೆ ಮರುಳುಗಳಿರಾ. ಇಂತೀ ಷಡುಲೋಭದ ರುಚಿ ಹಿಂಗಿ ಜಂಗಮವಾದಲ್ಲದೆ ಭವ ಹಿಂಗದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅನಾದಿಶಾಶ್ವತಂ ನಿತ್ಯಂ ಚೈತನ್ಯಂ ಚಿತ್‍ಸ್ವರೂಪಕಂ ಚಿದಂಗಂ ವೃಷಭಾಕಾರಂ ಚಿದ್ಭಸ್ಮ ಲಿಂಗಧಾರಣಂ ಪ್ರಥಮಂ ಗೂಢನಿರ್ನಾಮ ದ್ವಿತೀಯಂ ಚಿತ್ಸ್ವರೂಪಕಂ ತೃತೀಯ ಚಿದ್ವಿಲಾಸಂ ಚ ಚತುರ್ಥಂ ಭಸ್ಮಧಾರಣಂ ರೋಮೇ ರೋಮೇ ಚ ಲಿಂಗಂ ತು ವಿಭೂತಿಧೂನಾದ್ಭವೇತ್ ಎಂದುದಾಗಿ, ಬಸವ ಬಸವಾ ಎನುತಿಪ್ಪವರೆಲ್ಲರು ಬಸವನ ಘನವನಾರೂ ಅರಿಯರಲ್ಲಾ. ಅನಾದಿಪರಶಿವನಲ್ಲಿ ಅಂತರ್ಗತಮಾಗಿರ್ದ ಮಹಾಪ್ರಕಾಶವೇ ಬಹಿಷ್ಕರಿಸಿ ಚಿತ್ತು ಎನಿಸಿತ್ತು. ಆ ಚಿತ್ತು ಚಿದಂಗಬಸವ. ಆ ಚಿದಂಗಬಸವನಿಂದುದಯಿಸಿದ ಚಿದ್ವಿಭೂತಿಯನೊಲಿದು ಧರಿಸಿದ ಶರಣರೆಲ್ಲರೂ ಜ್ಯೋತಿರ್ಮಯಲಿಂಗವಪ್ಪದು ತಪ್ಪುದು ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗುರುಲಿಂಗಜಂಗಮವ ನೆರೆ ನಂಬಿಪ್ಪಾತನೆ ಶಿವಭಕ್ತ. ಗುರುಲಿಂಗಜಂಗಮವೆ ಶಿವನೆಂದು ಅರ್ಥ ಪ್ರಾಣ ಅಬ್ಥಿಮಾನವ ಸೇವಿಸುತ್ತಿಪ್ಪಾತನೆ ಶಿವಭಕ್ತ. ಸಾಕ್ಷಿ :`ಅರ್ಥಪ್ರಾಣಬ್ಥಿಮಾನಂ ಚ ಗುರೌ ಲಿಂಗೇ ತು ಜಂಗಮೇ |' ತಲ್ಲಿಂಗ ಜಂಗಮದಲ್ಲಿ ಧನವಂಚಕನಾಗಿ ಮಾಡುವ ಭಕ್ತಿಯ ತೆರನೆಂತೆಂದರೆ : ನರಿಯ ಕೂಗು ಸ್ವರ್ಗಕ್ಕೆ ಮುಟ್ಟುವುದೆ ? ಹರಭಕ್ತಿಯಲ್ಲಿ ನಿಜವನರಿಯದೆ ಮಾಡಿದ ಭಕ್ತಿ ಸಯಿಧಾನದ ಕೇಡು ಕಾಣಾ ಪರಮ[ಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ].
--------------
ಹೇಮಗಲ್ಲ ಹಂಪ
ಜಂಗಮಕ್ಕೆ ನೀಡಿದ ತೃಪ್ತಿ ಜಗಕೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಹರಿ ಸುರ ಬ್ರಹ್ಮಾದಿಗಳಿಗೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸ್ವರ್ಗ ಮತ್ರ್ಯ ಪಾತಾಳ ಸಚರಾಚರಂಗಳಿಗೆಲ್ಲ ತೃಪ್ತಿಯಾಯಿತ್ತು ನೋಡಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸಾಕ್ಷಾತ್ಪರಬ್ರಹ್ಮ ಪರಶಿವಂಗೆ ತೃಪ್ತಿಯಾಯಿತ್ತು ನೋಡಿರೋ ! ಅದೆಂತೆಂದೊಡೆ : ``ಸುರತೃಪ್ತಂ ಬುಧಸ್ತೋಮಂ ಮಮ ತೃಪ್ತಂತು ವೈಷ್ಣವಮ್ | ಜಂಗಮಂತು ಜಗತ್ ತೃಪ್ತಂ ಶಿವತೃಪ್ತಂ ತು ಪದ್ಮಿನಿ ||'' ಎಂದುದಾಗಿ, ಇಂತಪ್ಪ ಜಂಗಮ ತೃಪ್ತಿಯಾದಡೆ ನಮ್ಮ ಅಖಂಡೇಶ್ವರಲಿಂಗ ತೃಪ್ತಿಯಾಯಿತ್ತು ನೋಡಿರೋ !
--------------
ಷಣ್ಮುಖಸ್ವಾಮಿ
ಜಗತ್ರಯದ ಹೊ[ಲೆ]ಯನೆಲ್ಲವನು ಉದಕ ಒಳಕೊಂಬುವುದು. ಉದಕದ ಪೂರ್ವಾಶ್ರಯವ ಕಳೆವಡಾರಳವಲ್ಲ. ಅದೆಂತೆಂದಡೆ; ಯದಾ ಪೃಥ್ವೀಶ್ಮಶಾನಂ ಚ ತದಾ ಜಲಂ ನಿರ್ಮಲಿನಕಂ ಮಹಾಲಿಂಗಂ ತು ಪೂಜಾನಾಂ ವಿಶೇಷಂ ಪಾಕಂ ಭವೇತ್ ಎಂದುದಾಗಿ. ಅದಕ್ಕೆ ಮತ್ತೆಯು; ಪ್ರಥಮಂ ಮಾಂಸತೋಯಾನಾಂ ದ್ವಿತೀಯಂ ಮಾಂಸಗೋರಸಃ ತೃತೀಯಂ ಮಾಂಸನಾರೀಣಾಂ ಕಸ್ಯ ಶೀಲಂ ವಿಧೀಯತೇ ಎಂದುದಾಗಿ, ಯಥಾ ಉದಕದಿಂದಲಿ ಅಗ್ನಿಯಿಂದಲಿ ಪಾಕವಾದ ದ್ರವ್ಯಪದಾರ್ಥಂಗಳೆಲ್ಲವು ಜೀವಮಯವೆಂದು ಹೇಳುತಿರ್ದವಾಗಿ, ಆ ದೋಷದಿಂದಲಾದ ಭೋಜನವನು ಲಿಂಗಕ್ಕೆ ಸಮರ್ಪಿಸಲಾಗದು. ಅದೆಂತೆಂದಡೆ; ಭೂಮಿದ್ರ್ರವ್ಯಂ ಯಥಾ ಮಾಂಸಂ ಪ್ರಾಣಿದ್ರವ್ಯಂ ಯಥಾ ಮಧು ಸರ್ವಭೂತಮಯಂ ಜೀವಂ ಜೀವಂ ಜೀವೇನ ಭಕ್ಷಿತಂ ಎಂದುದಾಗಿ ಇಂಥ ಉದಕದ ಪೂರ್ವಾಶ್ರಯವು, ಬೋನದ ಪೂರ್ವಾಶ್ರಯವು, ಹೇಗೆ ಹೋಹುದಯ್ಯಾ ಎಂದಡೆ: ಉದಕದ ಪೂರ್ವಾಶ್ರಯವು ಜಂಗಮದ ಪಾದತೀರ್ಥ ಮುಖದಿಂದ ಹೋಯಿತ್ತು, ಬೋನದ ಪೂರ್ವಾಶ್ರಯವು ಜಂಗಮದ ಪ್ರಸಾದದ ಮುಖದಿಂದ ಹೊಯಿತ್ತು. ಇದು ಕಾರಣ, ಈ ವರ್ಮ ಸಕೀಲವು ಪ್ರಭುದೇವರ ವಳಿ ಬಸವಣ್ಣನ ವಂಶಕ್ಕಲ್ಲದೆ ಮತ್ತಾರಿಗೂ ಅಳವಡದು ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
``ಪಾಕಾರಂ ಪಾವನಂ ಜ್ಞಾನಂ ದೋಕಾರಂ ದೋಷನಾಶನಂ ದಕಾರಂ ತು ದಯಾಕಾರಂ ಕಕಾರಂ ಕರ್ಮನಾಶನಂ||' ಎಂಬುದು ಪುಸಿಯೇನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಶಿವಸಂಸ್ಕಾರಿಯಾಗಿ ಲಿಂಗವೆ ಪ್ರಾಣವಾಗಿದ್ದ ಬಳಿಕ ಅಲ್ಲಲ್ಲಿಗೆ ಹರಿಯಲಾಗದು. ಪ್ರಾಣಲಿಂಗಸಂಬಂಧಿಗೆ ಅದು ಪಥವಲ್ಲ. ಅಸಂಸ್ಕಾರಿಕೃತಂ ಪಾಕಂ ಶಂಭೋರ್ನೈವೇದ್ಯಮೇವ ನ ಅನರ್ಪಿತಂ ತು ಭುಂಜೀಯಾತ್ ಪ್ರಸಾದೋ ನಿಷ್ಫಲೋ ಭವೇತ್ ಎಂದುದಾಗಿ, ಇದು ಕಾರಣ ಕೂಡಲಚೆನ್ನಸಂಗಯ್ಯ ನಾಯಕನರಕದಲಿಕ್ಕುವನಾಗಿ.
--------------
ಚನ್ನಬಸವಣ್ಣ
ಜಂಗಮವೆ ತನ್ನ ಪ್ರಾಣಲಿಂಗವೆಂದರಿದ ಸದ್ಭಕ್ತಂಗೆ ಜಂಗಮದ ಪ್ರಸಾದವಿಲ್ಲದೆ ಲಿಂಗಪ್ರಸಾದವ ಕೊಳಲಾಗದು, ಜಂಗಮದ ಪ್ರಸಾದವು ಲಿಂಗಕ್ಕೆ ಸಲ್ಲದೆಂದು ಶಂಕಿಸಲಾಗದು. ಅದೆಂತೆಂದಡೆ, ವೀರಾಗಮದಲ್ಲಿ; ಜಂಗಮಾದಿಗುರೂಣಾಂ ಚ ಅನಾದಿ ಸ್ವಯಲಿಂಗವತ್ ಆದಿಪ್ರಸಾದವಿರೋಧೇ ಇಷ್ಟೋಚ್ಛಿಷ್ಟಂ ತು ಕಿಲ್ಬಿಷಂ± ಎಂದುದಾಗಿ ಪ್ರಾಣ ಭಾವದಲ್ಲಿ ಸಂಬಂಧವಾಗಿ ಇಷ್ಟಕ್ಕೂ ಸಂದಿತ್ತು. ಈ ಭೇದವನರಿದು ಜಂಗಮದ ಪ್ರಸಾದವಿಲ್ಲದೆ ಲಿಂಗದ ಪ್ರಸಾದವ ಕೊಳಲಾಗದು ವೀರಮಾಹೇಶ್ವರರು, ಕೂಡಲಸಂಗಮದೇವಾ.
--------------
ಬಸವಣ್ಣ
ವೇದ ಶಾಸ್ತ್ರ ಪುರಾಣಾಗಮಂಗಳಲ್ಲಿ ತಾನೆ ಪ್ರಸಿದ್ಧವಾಗಿ, ಕೊಂಡಾಡಿಸಿಕೊಳ್ಳಲ್ಪಟ್ಟ ಶ್ರೀ ಮಹಾಭಸಿತವ ಧರಿಸಿದಾತನೆ ಸದ್ಬ್ರಾಹ್ಮಣ. ಇಂತಪ್ಪ ಮಹಾಭಸಿತವ ಬಿಟ್ಟು ಅಜ್ಞಾನಮತದಿಂದ ವೇದ ಶಾಸ್ತ್ರಾಗಮಪುರಾಣಂಗಳಲ್ಲಿ ವಿರುದ್ಧವಾದ ಮಟ್ಟಿಮಸಿಗಳ ಹಣೆಯಲ್ಲಿಟ್ಟುಕೊಂಡನಾದಡೆ, ಅವನು ಬ್ರಾಹ್ಮಣನಲ್ಲ, ಅವನು ಪಂಚಮಹಾಪಾತಕ, ಆತ ಶ್ವಪಚನೆಂದು ಪುರಾಣಪ್ರಸಿದ್ಧ. ಅದೆಂತೆಂದಡೆ, ಗರುಡಪುರಾಣದಲ್ಲಿ: ``ಶ್ರುತಯಃ ಸ್ಮೃತಯಸ್ಸರ್ವೇ ಪುರಾಣಾನ್ಯಖಿಲಾನಿ ಚ ವದಂತಿ ಭೂತಿಮಹಾತ್ಮ್ಯಂ ತತಸ್ತಂ ಧಾರಯೇದ್ದ್ವಿಜಃ ತದಭಾವೇ ತಥಾ ವಿಪ್ರೋ ಲೌಕಿಕಾಗ್ನಿಂ ಸಮಾಹರೇತ್ ಭಸ್ಮನೈವ ಪ್ರಕುರ್ವೀತ ನ ಕುರ್ಯಾನ್ಮೃತ್ತಿಕಾದಿಭಿಃ ಗೋಪೀಚಂದನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ಶತೈಕವಿಂಶತಿಕುಲಂ ಸೋ[s]ಕ್ಷಯಂ ನರಕಂ ವ್ರಜೇತ್ ಮತ್ತಂ ಕೂರ್ಮಪುರಾಣದಲ್ಲಿ: ತ್ರಿಪುಂಡ್ರಂ ಬ್ರಾಹ್ಮಣೋ ವಿದ್ವಾನ್ ಮನಸಾ[s]ಪಿ ಲಂಘಯೇತ್ ಶ್ರುತ್ಯಾ ವಿಧೀಯತೇ ತಸ್ಮಾತ್ತ್ಯಾಗೀ ತು ಪತಿತೋ ಭವೇತ್ ಎಂದುದಾಗಿ ನಮ್ಮ ಕೂಡಲಚೆನ್ನಸಂಗಮದೇವರಲ್ಲಿ, ಶ್ರುತಿಸ್ಮೃತಿ ಪ್ರಸಿದ್ಧವಾದ ಶ್ರೀಮಹಾವಿಭೂತಿಯನಿಟ್ಟಾತನೆ ಸದ್ಬ್ರಾಹ್ಮಣ. ಈ ಮಹಾವಿಭೂತಿಯ ಬಿಟ್ಟು ಮಣ್ಣು ಮಸಿ ಮರದ ರಸಂಗಳ ಹಣೆಯಲ್ಲಿ ಬರೆದುಕೊಂಡನಾದಡೆ ಆವ ವಿಪ್ರನಲ್ಲ; ಆವ ಪಾಪಿ, ಶುದ್ಧ ಶ್ವಪಚ ಕಾಣಿಭೋ
--------------
ಚನ್ನಬಸವಣ್ಣ
ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->