ಅಥವಾ

ಒಟ್ಟು 67 ಕಡೆಗಳಲ್ಲಿ , 29 ವಚನಕಾರರು , 59 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನಾ ಭೇದಂಗಳಲ್ಲಿ ಷಡ್ದರುಶನವ ಹೊಕ್ಕು ತಿಳಿದಡೂ ಶ್ರುತಿ ವೇದ ಶಾಸ್ತ್ರ ಪುರಾಣ ಆಗಮಂಗಳ ಕಲಿತಡೂ ಮೂರುಮಲದ ಭೇದವನರಿತು ಬಿಡುಮುಡಿಯಲ್ಲಿ ಕಳೆದುಳಿಯಬೇಕು. ಇದು ಪ್ರಸಿದ್ಧವಪ್ಪ ತೆರ. ಇದು ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವ ಕೂಡಬೇಕು.
--------------
ಬಾಹೂರ ಬೊಮ್ಮಣ್ಣ
ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.
--------------
ಪ್ರಸಾದಿ ಲೆಂಕಬಂಕಣ್ಣ
ರಸ ಉಂಬಲ್ಲಿ, ಗಂಧ ವಾಸಿಸುವಲ್ಲಿ, ರೂಪು ನಿರೀಕ್ಷಣೆಯಲ್ಲಿ, ಶಬ್ದ ಗೋಚರದಲ್ಲಿ, ಸ್ಪರ್ಶ ತ್ವಕ್ಕಿನಲ್ಲಿ, ಪಂಚಪುಟ ಭೇದಂಗಳಲ್ಲಿ, ಅಷ್ಟಗುಣ ಮದಂಗಳ ಪಟ್ಟಣದ, ಷೋಡಶದ ರೂಡ್ಥಿಯ ಷಡ್ಚಕ್ರದ ಆಧಾರದ, ಪಂಚವಿಂಶತಿಯ ನಿಳೆಯದ ಸಂಚಾರದ, ನವಕವಾಟದ, ತ್ರಿಶಕ್ತಿ ಸಂಪದದ, ತ್ರಿಗುಣಾತ್ಮನ ತ್ರಿಗುಣ ಓಹರಿಯಲ್ಲಿ ಬಳಸಿಪ್ಪ ಬಂಧದಲ್ಲಿ ಮಗ್ನವಾಗದೆ, ಜಾಗ್ರ [ಸ್ವಪ್ನ] ಸುಷುಪ್ತಿ ತ್ರಿವಿಧ ಘಟಪಟಲ ತತ್ವನಿರಸನ ನಿರ್ವಿಕಾರನಾಗಿ, ಇಂತಿವರಲ್ಲಿ ಅವಘಾನವಾಗಿ ಮುಳುಗದೆ, ನೀರನಿರಿದ ಕೈದಿನಂತೆ ಕಲೆದೋರದೆ, ಆವ ಸುಖಂಗಳಲ್ಲಿ ಅಬ್ಥಿನ್ನವಾಗಿ, ಜಲದೊಳಗಣ ಶಿಲೆ, ಶಿಲೆಯೊಳಗಣ ವಹ್ನಿ ಸುಳುಹುದೋರದ ತೆರ, ಮಥನಕ್ಕೆ ಕಂಡು, ಕಾಣದಡಗಿಪ್ಪ ತೆರ, ಲಿಂಗಾಂಗಿಯ ಇರವು. ಇದು ಸಿದ್ಧವಾಗಬೇಕು, ಶರೀರದ ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ. ಇದೇ ಅಂಜನಸಿದ್ಧಿ.
--------------
ಮನುಮುನಿ ಗುಮ್ಮಟದೇವ
ಬ್ರಹ್ಮ ಸೋರೆಯಾಗಿ, ವಿಷ್ಣು ದಂಡವಾಗಿ, ಸಕಲದೇವತಾಕುಲ ದಾರವಾಗಿ, ಶ್ರುತಿನಾದ ವಸ್ತುವಾಗಿ ತೋರುತ್ತಿರೆ, ತನ್ನ ಲೀಲೆಯಿಂದ, ಜಗಕ್ರೀಡಾಭಾವದಿಂದ ಒಂದಕ್ಕೊಂದು ಸೇರಿಸಿ, ಉತ್ತಮ ಕನಿಷ್ಠ ಮಧ್ಯಮವೆಂಬ ತ್ರಿವಿಧಮೂರ್ತಿಯಾಗಿ, ಕಲ್ಪಿಸಿದ ಜಗ ಹಾಹೆಯಿಂದ ಎಂಬುದನರಿಯದೆ, ಮಲಕ್ಕೂ ನಿರ್ಮಲಕ್ಕೂ ಸರಿಯೆನಬಹುದೆ? ವಾದಕ್ಕೆ ಈ ತೆರ ಅರಿದಡೆ ಆ ತೆರ. ಸದಾಶಿವಮೂರ್ತಿಲಿಂಗವು ಅತ್ಯತಿಷ್ಠದ್ದಶಾಂಗುಲವು.
--------------
ಅರಿವಿನ ಮಾರಿತಂದೆ
ಸ್ಥಾಣುನಿನ ರಜ್ಜು, ಮೀರಿ ಎಯ್ದದೆ ಆಡಿ, ತನ್ನಯ ಸ್ಥಾನಕ್ಕೆ ಬಹಂತೆ, ವಸ್ತುವಿನ ಗೊತ್ತಿನಿಂದ ಕಟ್ಟು ಮೀರಲಿಲ್ಲವಾಗಿ, ಐಘಟದೂರ ರಾಮೇಶ್ವರಲಿಂಗದಲ್ಲಿಗೆ ಎಯ್ದುವ ತೆರ.
--------------
ಮೆರೆಮಿಂಡಯ್ಯ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತರುಗಿಡು ಗುಣನಾಮವಾದಡೇನು, ಸ್ಥಾಣುವಿನ ಒಲವರದ ತೆರ ಬೇರೆ. ದರ್ಶನ ಸುಖಸಂಪತ್ತಾದಡೇನು, ಅರಿವಿನ ಒಲವರದ ತೆರ ಬೇರೆ. ಎಲೆಯ ಹಾಕಿ ತನ್ನಲ್ಲಿಗೆ ಕರೆವವನ ಗುಣ ಲೇಸೆ ? ಶಬರನ ವೇಷ, ಮೃಗದ ಹರಣದ ಕೇಡು. ಹಿರಿಯತನವ ತೋರಿ, ತ್ರಿವಿಧವ ಬೇಡುವ ಅಡಿಗರಿಗೇಕೆ, ಬಂಕೇಶ್ವರಲಿಂಗವ ಅರಿದ ಅರಿವು ?
--------------
ಸುಂಕದ ಬಂಕಣ್ಣ
ಆ ನಿಜದರಿವು ತಾನೊಂದು ಬಂಧನದಿಂದ ಮರೆಯಾದುದ ತಾನರಿಯದೆ, ಮರವೆಯ ಗುಣ ಇದಿರಿಗೆ ಅದೆಯೆಂದು ಸಂಪಾದಿಸುವಾಗ, ಆ ತೆರ ಶಿಲೆಯ ನೆಳಲಿನ ಮರೆಯಲ್ಲಿ ತನ್ನಂಗ ಬಿಂಬಿಸಲಿಂತಾಗಿ, ಅರಿ ಇದಿರಾಯಿತ್ತೆಂದು, ಶಿಲೆಯ ಕೊಂಡು, ತಾನೊಂದು ಚೇತರಿಸಿಕೊಂಡು ನಿಂದ ಗಜದಂತೆ, ನಿಜದರಿವು ತ್ರಿಗುಣಾತ್ಮಕದಲ್ಲಿ ಬೆರಸಿ, ತ್ರಿದೋಷದ ದೆಸೆಯಿಂದ ನಾನಾದರುಶನ ಪಕ್ಷಪಾತಂಗಳಲ್ಲಿ ಹೊತ್ತು ಹೋರಿ, ಅಧ್ಯಾತ್ಮ, ಆದಿಭೌತಿಕ, ಆದಿದೈವಿಕಂಗಳ ತಿಳಿಯಬೇಕೆಂದು, ಭೂತಭವಿಷ್ಯದ್ವರ್ತಮಾನವ ವಿಚಾರಿಸಿಹೆನೆಂದು, ಷಡುದರುಶನವ ಸಂಪಾದಿಸಿಹೆನೆಂದು, ಪಂಚಭೌತಿಕ ಭೇದ, ಪಂಚವಿಂಶತಿತತ್ವ ಮೂವತ್ತಾರು ಕ್ರಮ, ಐವತ್ತೊಂದು ಮೆಟ್ಟು, ನೂರೊಂದರ ಲಕ್ಷ. ಇಂತಿವ ಪ್ರಮಾಣಿಸಿ ತಿಳಿದಲ್ಲಿ, ಅದಕ್ಕೆ ಬೇರೆ ಬೇರೆ ಸೂರ್ಯ ಚಂದ್ರ ಆಕಾಶ ವಾಯು ಆಗ್ನಿ ಉದಕ ಪೃಥ್ವಿ ಬೇರೊಂದು ನೆಲಹೊಲಬುಂಟೆ ? ಇಂತಿವೆಲ್ಲವು ವಸ್ತುಮಯದೊಳಗಿದ್ದ ಲಕ್ಷ. ಊರೊಳಗಣ ಹಲವು ಕುಲವೆಲ್ಲವೂ ಅರಸಿನ ದೆಸೆ ಕುಲದಲ್ಲಿ ಎಸಕವ ತಿಳಿದಡಗಿದ ತೆರದಂತೆ, ಅರಿದು ನಡೆವ ಪರಮವಿರಕ್ತಂಗೆ ಹಲವುಮಾತಿನ ಬಲೆಯ ಭ್ರಮೆಯಿಲ್ಲ. ಗೆಲ್ಲಸೋಲದ ಕಲ್ಲೆದೆಯವನಲ್ಲ. ಅಲ್ಲಿಗಲ್ಲಿಗೆ ಬಲ್ಲರಿಯರೆಂದು ಕೋಲಾಟಿಗರಂತೆ ಥೆಕಾವ್ಯವೆಲ್ಲವ ಹೇಳುವನಲ್ಲ. ತ್ರಿವಿಧಮಲವಿಲ್ಲದಡೆ ಒಲ್ಲೆನೆಂದು ತನ್ನಲ್ಲಿಗೆ ಬಂದಡೆ, ಕೂಡಿ ಕದಂಬನಾಗಿ, ಮಧು ಮಕ್ಷಿಕನಂತೆ ಸಂಸಾರದಲ್ಲಿಯೆ ಸಾವನಲ್ಲ. ಕಲ್ಲಿಯೊಳಗಣ ಮಕರದ ಜೀವದಂತೆ, ಸಂಸಾರದಲ್ಲಿಯೆ ಹೋದ ಕುಳಿಗೊಂಬನಲ್ಲ. ಆತನ ಇರವು ದಗ್ಧಪಟದಂತೆ, ರತ್ನದೀಪ್ತಿಯ ಹೊದ್ದಿಗೆಯ ತೆರದಂತೆ, ಸ್ಫಟಿಕದ ನಿರ್ದೇಹದ ವರ್ಣದ ಹೊದ್ದಿಗೆಯಂತೆ, ಇಂತು ಚಿದ್ರೂಪನ ಇರವು. ಊಧ್ರ್ವರೇತೋಮೂರ್ತಿ ಶ್ವೇತಸ್ವಯಂಭು ಕಪಿಲೇಶ್ವರಲಿಂಗದೊಳಗಾದವನ ಇರವು
--------------
ಮಹಾಲಿಂಗ ಶಶಿಮೌಳಿ ಸದಾಶಿವ
ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ. ಈ ತ್ರಿವಿಧಭೇದವ ವಿವರಿಸಿ ಹೇಳೆಹೆ ಕೇಳಿರಣ್ಣಾ. ಗುರುಸ್ಥಲ ವೇದಾಂತ, ಲಿಂಗಸ್ಥಲ ಸಿದ್ಧಾಂತ, ಜಂಗಮಸ್ಥಲ ಪ್ರಸಿದ್ಧಾಂತ. ಇಂತೀ ತ್ರಿವಿಧಭೇದ ಐಕ್ಯವಹ ತೆರ ಸಮರ್ಪಣವೆಂತಾದುದಣ್ಣಾ ? ಗುರುಸ್ಥಲ ಸಂಗನಬಸವಣ್ಣನಾದ, ಲಿಂಗಸ್ಥಲ ಚೆನ್ನಬಸವಣ್ಣನಾದ. ಜಂಗಮಸ್ಥಲ ಪ್ರಭುವಾಗಿ ಬಂದ. ಬಂದ ಅಂದವ ತಿಳಿದು ನೋಡು. ಗುರುಲಿಂಗಜಂಗಮವೆಂಬ ಸಂದೇಹದಲ್ಲಿ ನಿಂದು, ಆನಂದಿಸುತ್ತಿರ್ಪ ಭಾವದ ಬಳಲಿಕೆಯ ಅಣ್ಣಗಳು ಕೇಳಿರೊ. ಕಾಯ ಬಸವಣ್ಣನಾದ, ಜೀವ [ಚೆನ್ನ]ಬಸವಣ್ಣನಾದ. ಅದರ ಅರಿವು ಕಳೆ ಪರಿಪೂರ್ಣ ಪರಂಜ್ಯೋತಿ ಪ್ರಭುವಾದ. ಇಂತೀ ತ್ರಿವಿಧಭೇದವ ಕೊಟ್ಟು ಬಂದು, ಭಕ್ತಿ ಮುಕ್ತಿ ವಿರಕ್ತಿಯಿಂದ ಮಹಾಮನೆಯಲ್ಲಿ ಮಾಡಿ ಕೆಟ್ಟ ಬಸವಣ್ಣ. ಹೇಳಿ ಕೆಟ್ಟ ಚೆನ್ನಬಸವಣ್ಣ, ಉಂಡೆಹೆನೆಂದು ಗರ್ವದಲ್ಲಿ ಕುಳಿತು ಕೆಟ್ಟ ಪ್ರಭುದೇವರು. ಅಂತುಕದಲ್ಲಿರ್ದ ಸಂಗನಬಸವಣ್ಣ, ಸಂಕಲ್ಪದಲ್ಲಿರ್ದ ಚೆನ್ನಬಸವಣ್ಣ. ಸಂದೇಹದಂಗವ ತಾಳಿರ್ದ ಪ್ರಭುದೇವರು. ಇಂತಿವರಂಗದಲ್ಲಿ ಲಿಂಗವುಂಟೆಂಬೆನೆ, ಜ್ಞಾನಕ್ಕೆ ದೂರ. ಇಲ್ಲವೆಂಬೆನೆ ಸಮಯಕ್ಕೆ ದೂರ. ಇಂತೀ ಉಭಯದ ಸಂದನಳಿದರೆಂಬೆನೆ, ಪ್ರಭು ಸಂದೇಹಿಯಾದ. ಇವರೆಲ್ಲರೂ ಅಡುವ ಲಂದಣಗಿತ್ತಿಯ ಮನೆಯ ಉಂಬಳಿಕಾರರಾದರು. ಇದು ಸಂದೇಹವಿಲ್ಲ. ಗುರುವೆಂದಡೆ ಸರ್ವರಿಗೆ ಬೋಧೆಯ ಹೇಳಿ, ಕರ್ಮಕಾಂಡಿಯಾದ. ಲಿಂಗವೆಂದಡೆ ಯುಗಯುಗಂಗಳಿಗೊಳಗಾದ, ಪ್ರಳಯಕ್ಕರುಹನಾದ. ಪ್ರಭುದೇವರು ಜಂಗಮವೆಂಬೆನೆ ಗೆಲ್ಲ ಸೋಲಕ್ಕೆ ಹೋರಿ, ಕಾಯದೊಳು ನಾನಿಲ್ಲವೆಂದು ಚೌವಟಗೊಳಗಾದ. ಎಲ್ಲಿಯೂ ಕಾಣೆ, ಲೀಲೆಗೆ ಹೊರಗಾದವನ. ಭಕ್ತಿ ಮುಕ್ತಿ ವಿರಕ್ತಿ ಲೇಪವಾಗಿ, ನಾನೆನ್ನದೆ ಇದಿರೆನ್ನದೆ, ಜಗದಲ್ಲಿ ತಾನೇನೂ ಎನ್ನದಿರ್ಪುದೆ ತ್ರಿವಿಧ ಸಮರ್ಪಣ ಆಚಾರ. ಭಾವರಹಿತ ವಿಕಾರ, ನಿರುತ ಪರಿಪೂರ್ಣನಾದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ತೃಣವತಿಶುಷ್ಕವಾದ ಪರ್ಣ ತರುವ ಹಿಡಿದ ಅನಲನ ನಡುವೆ ಎಡಗೈಯ ಬಲ್ಲದೆ ? ನಿರ್ಮಲ ಸುಚಿತ್ತನ ಪರಮವಿರಕ್ತನ ಭಾವ, ವಸ್ತುವ ಮುಟ್ಟಿದಲ್ಲಿ, ತ್ರಿವಿಧಮಲಕ್ಕೆ ಸಿಕ್ಕುವನೆ ? ಅವು ತನ್ನೊಳಗಿರ್ದಡೂ ತಾನವರೊಳಗಿರ್ದಡೂ ಗಾಜಿನ ಕುಪ್ಪಿಗೆಯ ನೀರೆಣ್ಣೆಯಂತೆ, ಸ್ಫಟಿಕದ ಮಧ್ಯದಲ್ಲಿ ಬಹುವರ್ಣವಾದ ಹೊರೆಯ ತೋರಿ ಹಿಡಿವವನಂತೆ, ಅದು ಸ್ವಯವಲ್ಲ, ಇದು ಸ್ವಯವಲ್ಲದಿಪ್ಪ ಬಾಹ್ಯಕ್ರಿಯಾವರ್ತಕನ ಲಕ್ಷಣದ ಬ್ಥಿತ್ತಿಯ ತೆರ ನಿಃಕಳಂಕ ಮಲ್ಲಿಕಾರ್ಜುನನ ಒಡಗೂಡಿದ ಪರಮವಿರಕ್ತನ ಭೇದ.
--------------
ಮೋಳಿಗೆ ಮಾರಯ್ಯ
ಅಸ್ಥಿ ಮಾಂಸ ಶುಕ್ಲ ಶೋಣಿತವುಳ್ಳನ್ನಕ್ಕ ಆರಿಗೂ ಅದಿವ್ಯಾದ್ಥಿಯ ತಾಪತ್ರಯದ ತನುತ್ರಯದ ಕೂಟಸ್ಥ ಬಿಡದು. ರೋಗವನರಿದು ವೈದ್ಯವ ಮಾಡಿಹೆನೆಂದಡೆ, ತನು ಪ್ರಮಾಣು, ಪೈತ್ಯಪ್ರಮಾಣು, ವಾತಪ್ರಮಾಣು, ಶ್ಲೇಷ್ಮಪ್ರಮಾಣು, ಆತ್ಮತತ್ವಪ್ರಮಾಣು, ಚಂದ್ರ ಸೂರ್ಯ ಬಿಂದು ಪ್ರಮಾಣು, ಮಿಕ್ಕಾದ ಸರ್ವಾಂಗ ಪ್ರಮಾಣ ಹೇಳಿಹೆನೆಂದಡೆ, ಮರೀಚಿಕಾಜಲದಂತೆ, ಸುರಚಾಪದಂತೆ, ಆಕಾಶದ ಪರಿಬಣ್ಣದಂತೆ, ಇಂತೀ ಶರೀರದ ತೆರ. ಅಲ್ಪಾಂತರ ತಿರುಗುವನ್ನಕ್ಕರ ಶರೀರ ಸಿಕ್ಕುಹುದಲ್ಲದೆ, ಮತ್ತೆಯೂ ಆತ್ಮನ ಕಟ್ಟಿಕೊಂಡಿಹೆನೆಂದಡೆ ಸತ್ವವುಂಟೆ ? ವ್ಯಾದ್ಥಿಯಲ್ಲಿ ಹೊಂದುವ ತೆರನಾದಡೆ, ಬ್ರಹ್ಮಂಗೆ ಸೃಷ್ಟಿಯಿಲ್ಲ, ವಿಷ್ಣುವಿಂಗೆ ಸ್ಥಿತಿ ಇಲ್ಲ, ರುದ್ರಂಗೆ ಲಯವಿಲ್ಲ. ಇಂತೀ ಕರ್ಮಕಾಂಡದಲ್ಲಿ ಪ್ರಾಪ್ತಿ, ವರ್ಮಕಾಂಡದಲ್ಲಿ ಸರ್ವ, ಜ್ಞಾನಕಾಂಡದಲ್ಲಿ ತ್ರಿವಿಧವಳಿದ ಮಹದೊಡಗೂಟ. ಇಂತೀ ಜಗದಲ್ಲಿ ಒಂದನಹುದು, ಒಂದನಲ್ಲಾ ಎಂದಡೆ, ಅಮೃತಕ್ಕೂ ಸುರಾಪಾನಕ್ಕೂ ಸರಿಯೆಂದು ಮಾರುವನ ತೆರದಂತೆ, ಆರಾರ ತೆರನನು ನೋಡಿ ಸುಖಿಯಾಗಿ, ತನ್ನನರಿವರಲ್ಲಿ ಮನಮುಕ್ತವಾಗಿ ಉಭಯವಳಿದು ಒಡಗೂಡಬೇಕು. ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಕಳುಹಿದಂತೆ ಮಾಡಿ, ಭಕ್ತಿಗೆ ಖೋಡಿ ಇಲ್ಲದೆ ಸತ್ಯವನೊಡಗೂಡಬೇಕು.
--------------
ವೈದ್ಯ ಸಂಗಣ್ಣ
ಚಿನ್ನದೊಳಗಣ ಬಣ್ಣದಂತೆ, ಬಣ್ಣ ನುಂಗಿದ ಬಂಗಾರದಂತೆ, ಅನ್ಯ ಭಿನ್ನವಿಲ್ಲದ ಲಿಂಗೈಕ್ಯವು. ಲಿಂಗಾಂಗವಾದಲ್ಲಿ, ಅಂಗ ಲಿಂಗವಾದಲ್ಲಿ ಹಿಂಗದ ಭಾವ ಚಿನ್ನ ಬಣ್ಣದ ತೆರ. ಇದು ಪ್ರಾಣಲಿಂಗಯೋಗ, ಸ್ವಾನುಭಾವ ಸಮ್ಮತ. ಉಭಯ ನಾಶನ ಐಕ್ಯಲೇಪ ನಾರಾಯಣಪ್ರಿಯ ರಾಮನಾಥಾ
--------------
ಗುಪ್ತ ಮಂಚಣ್ಣ
ಕಾಯದೊಳಗುಂಟೆಂದಡೆ ಕರ್ಮಕಾಂಡಿಯಲ್ಲ. ಜೀವದೊಳಗುಂಟೆಂದಡೆ ನಾನಾ ಯೋನಿಯವನಲ್ಲ. ಭಾವದೊಳಗುಂಟೆಂದಡೆ ನಾನಾ ಪ್ರಕೃತಿಯವನಲ್ಲ. ಅದು ಇದ್ದಿಲು ಶುಭ್ರದ ತೆರ. ಅದು ಹೊದ್ದದಾಗಿ ಬದ್ಧಕತನವಿಲ್ಲೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕರ್ಪುರದ ಹಣತೆಯಲ್ಲಿ ಬತ್ತಿಯ ಹಾಕಿ ಉರುಹಬಹುದೆ? ಕಿಚ್ಚಿನ ಮಧ್ಯದಲ್ಲಿ ನಿಂದು ಕೆಟ್ಟಿತ್ತೆಂದು ಹುಲ್ಲ ಸೊಪ್ಪ ಹಾಕಿ ಹೊತ್ತಿಸಬಹುದೆ? ಅಲಗು ಕ್ರೂರವಾಯಿತ್ತೆಂದು ತನ್ನೊಡಲನಿರಿದು ಅಲಗಿನ ಕ್ರೂರ ಸುಲಲಿತವೆನ್ನಬಹುದೆ? ಆ ಗುಣ ಅಲ್ಲಲ್ಲಿಗೆ ದೃಷ್ಟ. ಇದು ನಿಶ್ಚಯ ನಿಜ ಲಿಂಗಾಂಗಿಗೆ ಅರಿವಿನ ಭೇದ. ಕಾಲಕರ್ಮವಿರಹಿತ ತ್ರಿಪುರಾಂತಕಲಿಂಗದವನ ತೆರ.
--------------
ಶಂಕರದಾಸಿಮಯ್ಯ
ಮರೆಯಲ್ಲಿದ್ದ ಸಂಚ ತೆರ ದರುಶನವಾಗಲಾಗಿ ಆಶ್ಚರಿಯೆಂಬುದು ಬಿಟ್ಟಿತ್ತು. ಅಂಗದ ಮೇಲಣ ಲಿಂಗ ನೆನಹಿಂಗೆ ನಿಲಲಾಗಿ ಕುರುಹೆಂಬಭಾವವಡಗಿತ್ತು. ಸರ್ವೇಂದ್ರಿಯಂಗಳು ಹಿಂಗಿ ಏಕಭಾವ ಸಲೆಸಂದು ಉಭಯದಂಗ ಲೇಪವಾದುದು ಕಾಲಾಂತಕ ಭೀಮೇಶ್ವರಲಿಂಗ ದ್ವಂದ್ವವಳಿದು ನಿಂದಸ್ಥಲ.
--------------
ಡಕ್ಕೆಯ ಬೊಮ್ಮಣ್ಣ
ಇನ್ನಷ್ಟು ... -->