ಅಥವಾ

ಒಟ್ಟು 113 ಕಡೆಗಳಲ್ಲಿ , 48 ವಚನಕಾರರು , 106 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗದಗಲದ ಗದ್ಗುಗೆಗಳಿಗೆ ಅಪ್ರಮಾಣದ ಲಿಂಗಪ್ರತಿಷ್ಠೆಯ ಮಾಡಿದರು ನೋಡಾ. ಅದಕ್ಕೆ ತೊಂಬತ್ತಾರಂಗುಲ ಪ್ರಮಾಣಿನ ದೇಗುಲ ನೋಡಾ. ನಾಲ್ಕೈದು ಬಾಗಿಲು ನೋಡಾ. ಬೇರೊಂದು ಬಾಗಿಲು ಮುಚ್ಚಿ ಮುಸುಕಿಹುದು. ದಶಮದ್ವಾರವ ನೆರೆಹೆವೆಂದು ಬಾಗಿಲ ಮುಚ್ಚಹೋದಡೆ ತೆಗೆವವು. ತೆಗೆಯಹೋದಡೆ ಮುಚ್ಚುವವು ನೋಡಾ. ಈ ವರ್ಮಸಕೀಲವನರಿಯದೆ ಅತಿರಥರು ಮಹಾರಥರು ತೊಳಲಿ ಬಳಲುತೈದಾರೆ. ವೀರದ್ಥೀರಸುಭಟರುಗಳೆಲ್ಲಾ ಹೇಡಿಬಳೆಯಂ ತೊಟ್ಟು ಹೆಣ್ಣಾಗಿ ಹೋದರು. ಅರುಹಿರಿಯರೆಲ್ಲಾ ಮರುಳಾಗಿ ಮತಿಗೆಟ್ಟು ಹೋದರು. ಇದನಾರಯ್ಯಾ ಬಲ್ಲವರು ? ನೀವಿಕ್ಕಿದ ಕದವ ತೆಗೆಯಬಲ್ಲವರಾರೊ ಅಯ್ಯಾ ! ತೆಗೆಯದ ಕದವನಿಕ್ಕಬಲ್ಲವರಾರೊ ಅಯ್ಯಾ ! ಪದಪಂಕದಲ್ಲಿನ ದ್ವಾರಮಂ ಕಾಯ್ದಿಪ್ಪ ದಿಟ್ಟಿಯ ಕಡೆಗಣ್ಣಿನ ಬೆಳಗಿನೊಳಗಾಡುವ ಅವ್ಯಯ ಹರಿಬ್ರಹ್ಮಾದಿಗಳು ಮೊದಲಾದ ಸಚರಾಚರದವರನೆಲ್ಲ ನುಂಗಿತ್ತು ನೋಡಾ. ಇದನಾರಿಗೂ ಅರಿಯಬಾರದು ನೋಡಾ. ನೀವಿದ್ದಲ್ಲಿ ಇಲ್ಲದಿಪ್ಪ ಶರಣರಿಗಲ್ಲದೆ ಇದರ ಭೇದವ ಬಲ್ಲವ ಅಲ್ಲಮನು. ಕಾಮನ ಕಣ್ಣಿಗೆ ಮುಳ್ಳಬೆಟ್ಟದೊಡನೆ ಮುಟ್ಟದ ಕದವು ತೆಗೆದವು. ತೆಗೆದಿದ್ದ ಬಾಗಿಲು ತಮತಮಗೆ ಮುಚ್ಚಿದವು ನೋಡಾ. ಹೂಗಲ್ಲಿಗೆ ಕಿಚ್ಚನಿಕ್ಕಿ ಆ ಬಾಗಿಲ ಕಾಯ್ದಿಪ್ಪವಳ ಮೂಗ ಮೊಲೆಯ ಕೊಯ್ದು, ಸಾಗರದ ಕಟ್ಟೆಯ ಒಡೆದು, ದಶಮ ದ್ವಾರದಲ್ಲಿ ನಿಂದು, ನಿಮ್ಮ ಹೊತ್ತಿರ್ಪವಳ ನೆತ್ತಿಗಣ್ಣಿಂದ ತೆಗೆದು ನೋಡಿ, ಏಕಾದಶದ್ವಾರದ ಸೂತ್ರ ಸೂಕ್ಷ್ಮವಿನ್ನು ಮಹಾಬೆಳಗಿನೊಳಗೆ ಸಾಸಿವೆಯ ಛಿದ್ರವ ಮಾಡಿ ಕುಂಬಳದ ಕಾಯ ಕೀಲಕೊಟ್ಟಂತೆಯಿಪ್ಪ ನಿಜಗುರು ಭೋಗೇಶ್ವರ ನಿಮ್ಮ ಇರವು, ಪ್ರಭುವಿನ ಕರುಣವುಳ್ಳ ಲಿಂಗಾಂಗಿಗಳಿಗಲ್ಲದೆ ವಾಗದ್ವೈತದಿಂದ ಒಡಲ ಹೊರೆವ ಬಹುಭಾಷಿಗಳಿಗೆಂತು ಸಾಧ್ಯವಪ್ಪುದೊ ?
--------------
ಭೋಗಣ್ಣ
ಸರ್ವಮಯ ನಿನ್ನ ಬಿಂದುವಾದಲ್ಲಿ ಆವುದನಹುದೆಂಬೆ, ಆವುದನಲ್ಲಾಯೆಂಬೆ? ಸರ್ವಚೇತನ ನಿನ್ನ ತಂತ್ರಗಳಿಂದ ಆಡುವವಾಗಿ ಇನ್ನಾವುದ ಕಾಯುವೆ, ಇನ್ನಾವುದ ಕೊಲುವೆ? ತರುಲತೆ ಸ್ಥಾವರ ಜೀವಂಗಳೆಲ್ಲಾ ನಿನ್ನ ಕಾರುಣ್ಯದಿಂದೊಗೆದವು. ಆರ ಹರಿದು ಇನ್ನಾರಿಗೆ ಅರ್ಪಿಸುವೆ? ತೊಟ್ಟು ಬಿಡುವನ್ನಕ್ಕ ನೀ ತೊಟ್ಟುಬಿಟ್ಟ ಮತ್ತೆ ನೀ ಬಿಟ್ಟರೆಂದು ಎತ್ತಿ ಪೂಜಿಸುತಿರ್ದೆ ದಸರೇಶ್ವರನೆಂದು.
--------------
ದಸರಯ್ಯ
ಬಿಲ್ಲು ಕೋಲವಿಡಿದು ಮನ ಬಂದ ಪರಿಯಲ್ಲಿ ಎಚ್ಚಾಡುವಾತ ಅರ್ತಿಕಾರನಲ್ಲದೆ ಬಿಲ್ಲುಗಾರನಲ್ಲವಯ್ಯ. ಹೊನ್ನು ಹೆಣ್ಣು ಮಣ್ಣ ಬಿಟ್ಟು ಚೆನ್ನಾಗಿ ಮಂಡೆಯ ಬೋಳಿಸಿಕೊಂಡು ಹಾಡಿದ ವಚನಂಗಳೇ ಹಾಡಿಕೊಂಡು ಮುಂದೆ ವಸ್ತುವ ಸಾದ್ಥಿಸಿಕೊಳ್ಳಲರಿಯದೆ ಹಸಿದರೆ ತಿರಿದುಂಡು ಮಾತಿನಮಾಲೆಯ ಕಲಿತಾತ ವಿರಕ್ತನೆಂಬ ನಾಮಕ್ಕರುಹನಲ್ಲದೆ ಸಂಧಾನಕ್ಕರುಹನಲ್ಲ. ಅದೇನು ಕಾರಣವೆಂದೊಡೆ ಭಕ್ತಿಯೆಂಬ ಬಿಲ್ಲ ಹಿಡಿದು ಸಮ್ಯಜ್ಞಾನವೆಂಬ ಹೆದೆಯನೇರಿಸಿ ಲಿಂಗನಿಷ್ಠೆಯೆಂಬ ಬಾಣವ ತೊಟ್ಟು ಆಕಾಶದ ಮೇಲಣ ಮುಪ್ಪುರದ ಮಧ್ಯದ ಮಾಣಿಕ್ಯದ ಕಂಭವ ಮುಳುಗಲೆಚ್ಚು ಮಾಯೆಯ ಬಲುಹ ಗೆಲಿದ ಶರಣನೀಗ ಲಿಂಗಸಂಧಾನಿಯಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಲೋಕದವರನೊಂದು ಭೂತ ಹಿಡಿದಡೆ, ಆ ಭೂತದಿಚ್ಛೆಯಲ್ಲಿ ನುಡಿವುತ್ತಿಪ್ಪರು. ಲಾಂಛನ ಧಾರಿ ವೇಷವ ಧರಿಸಿ, ಆಸೆಯಿಂದ ಘಾಸಿಯಾಗಲೇಕಯ್ಯಾ ? ಆನೆಯ ಚೋಹವ ತೊಟ್ಟು ನಾಯಾಗಿ ಬೊಗಳುವ ಮಾನವರನೇನೆಂಬೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಇದ್ದು ಜೀವನಲ್ಲ, ಸತ್ತು ಹೆಣನಲ್ಲ. ಕತ್ತಲೆ ಮುಟ್ಟಿದ ಬೆಳಗಿನಲ್ಲಿ ಸುಳಿಯದು. ಹಿಂದಾದಡೆ ಏರುವುದು, ಮುಂದಾದಡೆ ತೋರುವುದು. ಹಿಡಿಯಲ್ಲ ಕರಿಯಲ್ಲ. ಇಕ್ಕಿದ ಹೆಜ್ಜೆಯ ತೆಗೆಯದು. ಮೊನೆಗೆ ನಿಲ್ಲದು, ತೆಕ್ಕೆಗೆ ಬಾರದು. ಕಾದಬಂದ ಕಲಿಗಳನೆಲ್ಲರ ಆಗಿದಗಿದು ನುಂಗಿತ್ತು ನೋಡಾ. ಅರಿದೆಹೆನೆಂದಡೆ ಅರಿಯಬಾರದು. ಇದ ಬಲ್ಲವರಾರಯ್ಯಾ ? ಇಹಪರ ನಷ್ಟವಾದ ಮಹಾವೀರದ್ಥೀರರಿಗಲ್ಲದೆ ಮುಕ್ತಿಗೆ ದೂರವಾದ ಲಿಂಗಾಂಗಿಗಳ ನೆನಹೆಂಬ ಜೋಡಂ ತೊಟ್ಟು, ಅವರ ಕರಣಪ್ರಸಾದವೆಂಬ ವಜ್ರ ಘಟಿಕೆಯ ಧರಿಸಿ, ಗುರುಕರುಣವೆಂಬ ಅಲಗಂ ಪಿಡಿದು, ಮುಂಡ ಬಿದ್ದಡೂ ತಲೆಯಲ್ಲಿರಿವೆ. ನಿಜಗುರು ಭೋಗೇಶ್ವರಾ ನಾ ನಿಮ್ಮ ಬೇಡುವನಲ್ಲಾ.
--------------
ಭೋಗಣ್ಣ
ಮೆಟ್ಟಿಲಿಲ್ಲದ ಭೂಮಿಯಲ್ಲಿ ಹುಟ್ಟಿಲಿಲ್ಲದ ಹೆಮ್ಮರ ಹುಟ್ಟಿತ್ತು ನೋಡಾ. ಮೆಟ್ಟಿ ಹತ್ತೆಹೆನೆಂದರೆ ಕೊಂಬಿಲ್ಲ; ಮುಟ್ಟಿ ಹಿಡಿದಿಹೆನೆಂದರೆ ಮೂರ್ತಿಯಲ್ಲ. ಅದರಲ್ಲಿ ಕಟ್ಟಣೆಗೆಯ್ದದ ಹಣ್ಣು ರಸತುಂಬಿ, ತೊಟ್ಟು ಬಿಡದು ನೋಡಾ. ತೊಟ್ಟ ಮುಟ್ಟದೆ ಕಟ್ಟಣೆಗೆಯ್ದದ ಹಣ್ಣು ಮುಟ್ಟಿ ಸವಿಯಬಲ್ಲಾತನ ಹುಟ್ಟರತಾತನೆಂಬೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸುಗಂಧದ ಮೂಲದ ಬೇರಿನ ಗಂಧ ಎಲೆ ಬಳ್ಳಿಯನೇತಕ್ಕೆ ವೇಧಿಸದು ? ಕುಸುಮದ ಸುವಾಸನೆ ತನ್ನಯ ತೊಟ್ಟು ಎಲೆ ಕೊನರು ಬೇರುವನೇಕೆ ವೇಧಿಸದು ? ಇದು ಇಷ್ಟ ಪ್ರಾಣಯೋಗದ ಭೇದ. ಗಿಡುಗಿಡುವಿಗೆ ಕುರುಹಲ್ಲದೆ ಗಂಧ ಗಂಧ ಕೂಡಿದಲ್ಲಿ ದ್ವಂದ್ವವಾಗಿ ಬೆರೆದಲ್ಲಿ, ಕದಂಬಗಂಧವಲ್ಲದೆ ಒಂದರ ಗಂಧವೆಂದು ಸಂಧಿಸಿ ತೆಗೆಯಲಿಲ್ಲ. ಅವರು ನಿಂದ ನಿಂದ ಸ್ಥಲಕ್ಕೆ ಸಂಬಂಧವಾಗಿಪ್ಪರು. ಇದು ದೃಷ್ಟಾನುಭಾವಸಿದ್ಧಿ, ಸರ್ವಸ್ಥಲಭೇದ, ವಿಶ್ವತೋಮುಖರೂಪು. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನು ತತ್ವಭಿತ್ತಿಸ್ವರೂಪನು.
--------------
ಮೋಳಿಗೆ ಮಹಾದೇವಿ
ಮಧ್ಯನಿರಾಳದಲ್ಲಿ ನಿಂದು, ಊಧ್ರ್ವ ನಿರಾಳವನೆಯ್ದಿದಲ್ಲಿ, ಕಾಣಲಾಯಿತ್ತು ಒಂದು ಪುತ್ಥಳಿ. ಮೂರು ಬೆಳಗಿನ ಮಧ್ಯದಲ್ಲಿ ಬೇರೊಂದು ಬೆಳಗು ಮೀರಿ ತೋರುತ್ತಿದೆ ಈ ಪುತ್ಥಳಿ. ವಜ್ರದ ಮೈದೊಡಗೆಯ ತೊಟ್ಟು ಸೌರಾಷ್ಟ್ರ ಸೋಮೇಶ್ವರಲಿಂಗದಲ್ಲಿ ಅವಿರಳವಾಯಿತ್ತು.
--------------
ಆದಯ್ಯ
ಬಯಲಿಂದಲೆ ಹುಟ್ಟಿ, ಬಯಲಿಂದಲೆ ಬೆಳೆದು, ಬಯಲಾಮೃತವನೆ ಉಂಡು, ಬಯಲನೆ ಉಟ್ಟು, ಬಯಲನೆ ತೊಟ್ಟು, ಬಯಲು ಬಯಲೊಳಗೆ ಬೆರೆದ ಭೇದವ, ಈ ಭುವನದೊಳಗೆ ಇಪ್ಪ ಭವಭಾರಿಗಳು ಎತ್ತಬಲ್ಲರು, ಭವವಿರಹಿತ ಶರಣರ ನಿಲವ, ಬಸವಪ್ರಿಯ ಕೂಡಲಚನ್ನಬಸವಣ್ಣಾ ?
--------------
ಹಡಪದ ಅಪ್ಪಣ್ಣ
ಉತ್ತಮತೇಜಿಯಮರಿಗೆ ಸುಪ್ಪತ್ತಿಗೆಯಲ್ಲದೆ ಕತ್ತೆಯ ಮರಿಗೆ ಸುಪ್ಪತ್ತಿಗೆಯ ಹಾಸುವರೆ ? ಅಜ್ಞಾನಿಗಳ ಹೃದಯದಲ್ಲಿ ಪರಮಾಮೃತವ ಸುರಿದಡೆ ಪರರ ಕಾಡಿ ಬೇಡದೆ ಮಾಣ್ಬರೆ ? ಕುಂಜರನ ವೇಷವ ತೊಟ್ಟು ಹಂದಿಯಂತೆ ತಿರುಗುವ ಅಜ್ಞಾನಿಗಳನೇನೆಂಬೆ ಅಮುಗೇಶ್ವರಾ ?
--------------
ಅಮುಗೆ ರಾಯಮ್ಮ
ವೇಷವ ತೊಟ್ಟು ಗ್ರಾಸಕ್ಕೆ ತಿರುಗುವ ವೇಷಧಾರಿಗಳ ಕಂಡಡೆ ನಾಚಿತ್ತೆನ್ನ ಮನ. ಲಿಂಗವನರಿಯದೆ ಲಿಂಗೈಕ್ಯರೆಂಬ ಅಂಗವಿಕಾರಿಗಳ ಕಂಡಡೆ ಹೊದ್ದದು ಎನ್ನ ಮನ, ಅರಿದು ಆಚರಿಸಿದೆನೆಂಬ ಅಜ್ಞಾನಿಗಳ ಕಂಡಡೆ ಮೃಡನ ಶರಣರು ಮೆಚ್ಚುವರೆ ಅಮುಗೇಶ್ವರಾ ? ಲಿಂಗವನರಿಯದಿರ್ದಡೆ ಎಂತು ಲಿಂಗೈಕ್ಯರೆಂಬೆನಯ್ಯಾ ?
--------------
ಅಮುಗೆ ರಾಯಮ್ಮ
ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಪ್ಪಾ ಬೊಪ್ಪಾ ಚಿಕ್ಕ ಚೋಹಮಂ ತೊಟ್ಟು ಮುಖಕ್ಕೆ ಹೊತ್ತಿಗೊಂದು ಪರಿಯ ಬಚ್ಚಣೆಯನಿಕ್ಕಿ ಮತ್ತದನು ತಲೆಯಲ್ಲಿ ಹೊತ್ತು, ತಪ್ಪಿ ಹೆಜ್ಜೆಯನಿಕ್ಕಿ ಆಡುತ್ತಿದ್ದ ರೇಕಣ್ಣಪ್ರಿಯ ನಾಗಿನಾಥನಲ್ಲಿ ಹೊತ್ತುಹೋಗದ ಬಹುರೂಪವ.
--------------
ಬಹುರೂಪಿ ಚೌಡಯ್ಯ
ಬಯಲಬೀಜ ಭೂಮಿಯಲ್ಲಂಕುರಿಸಿ ಎಲೆಯೆರಡಾದುವು, ಎಸಳು ಮೂರಾದವು, ಕುಸುಮ ಆರಾದವು, ಕಾಯಿ ಮೂವತ್ತಾರಾದವು, ಹಣ್ಣು ಇನ್ನೂರಾಹದಿನಾರಾದವು. ತೊಟ್ಟು ತುಂಬಿ ವಿಶ್ವಪರಿಪೂರ್ಣವಾಗಿ ತೊಟ್ಟು ಕಳಚಿ ಇನ್ನೂರಹದಿನಾರರೊಳು ನಿಂದು ಆ ಮೂವತ್ತಾರರಲ್ಲಿ ಅಡಗಿ ಆರರಲ್ಲಿ ಅಳಿದು ಮೂರರಲ್ಲಿ ಮುಳುಗಿ ಎರಡರಲ್ಲಿ ನಿಂದು ಒಂದಾಗಿ ಮರೆದುಳಿದು ಗುರುನಿರಂಜನ ಚನ್ನಬಸವಲಿಂಗದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಮನಕ್ಕೆ ಬಂದಂತೆ ಹಲವುಪರಿಯ ವೇಷವ ತೊಟ್ಟು ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು; ಸದಾಶಿವನು ಸೈರಣೆಯ ಮಾಡನು. ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎನ್ನರು. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ಕಂಡಡೆ ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು.
--------------
ಅಮುಗೆ ರಾಯಮ್ಮ
ಇನ್ನಷ್ಟು ... -->