ಧರೆಯ ಮೇಲೆ ಹರಡಿರುವ ಶಿಲೆಯ ತಂದು ಕಲ್ಲುಕುಟಿಕ ಕಟೆದು ಲಿಂಗವ ಮಾಡಿದರೆ ಅದೆಂತು ಲಿಂಗವೆಂಬೆನಯ್ಯ ? ಅದು ಶಿಲೆಯು. ಆ ಲಿಂಗವ ತಂದು, ಗುರುವಿನ ಕೈಯಲ್ಲಿ ಕೊಟ್ಟು ದೀಕ್ಷೆ ಉಪದೇಶವಂ ಮಾಡಿ, ಆ ಲಿಂಗವ ಧರಿಸಿಕೊಂಡು ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ಸ್ವೀಕರಿಸಿ, ಶಿಲಾಲಿಖಿತವ ತೊಡೆದು ಕಲಾಭೇದವನರಿದು ಇಷ್ಟಲಿಂಗ ಪ್ರಾಣಲಿಂಗ ಭಾವಲಿಂಗವೆಂಬ ಲಿಂಗತ್ರಯಗಳನರಿದು ಇರಬಲ್ಲ ಶರಣರ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
ಊರಿಗೆ ಹೋಗುವ ದಾರಿಯಲ್ಲಿ ಉರಗನ ಕಂಡೆನಯ್ಯ. ಆ ಉರಗನು ಮೂರು ಲೋಕವನ್ನೆಲ್ಲಾ ನುಂಗಿ ವಿಷವನುಗುಳುತಿಪ್ಪುದು ನೋಡಾ. ಆ ವಿಷವ ಕೆಡಿಸಿ, ಉರಗನ ಕೊಂದು, ಊರಿಗೆ ಹೋಗುವ ಹಿರಿಯರ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
ಹಲವು ಕಡೆಗೆ ಹರಿದಾಡುವ ಮನವ ನಿಲಿಸಬಲ್ಲ ಶರಣನ ಅಂತರಂಗದಲ್ಲಿ ಪರಬ್ರಹ್ಮಲಿಂಗವಿರ್ಪುದು ನೋಡಾ. ಆ ಲಿಂಗದಲ್ಲಿ ತನ್ನ ಮರೆದು ಇರಬಲ್ಲ ಹಿರಿಯರ ಎನಗೊಮ್ಮೆ ತೋರಿಸಯ್ಯ, ಝೇಂಕಾರ ನಿಜಲಿಂಗಪ್ರಭುವೆ.
ಬೆಟ್ಟದ ತುದಿಯ ಮೇಲೆ ಹುಟ್ಟಿ ಆಡುವ ಹಂಸನ ಕಂಡೆ ನೋಡಾ, ಅದಕೆ ತಲೆ ಒಂದು, ನಾಲಗೆ ಮೂರು, ಹಸ್ತವಾರು, ಮೂವತ್ತಾರು ಪಾದಂಗಳು, ಐವತ್ತೆರಡು ಎಸಳಿನ ಮನೆಯಲ್ಲಿ ಸುಳಿದಾಡುತಿಪ್ಪುದು ನೋಡಾ. ಆ ಸುಳುವಿನ ಭೇದವನರಿವ ಶರಣರ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
ಅಮಲಬ್ರಹ್ಮದಲ್ಲಿ ಸಕಲ ಬ್ರಹ್ಮಾಂಡಂಗಳು ಅಡಗಿಪ್ಪವಯ್ಯ. ಆ ಸಕಲ ಬ್ರಹ್ಮಾಂಡಕೆ ಒಂದೇ ಲಿಂಗ ನೋಡಾ! ಆ ಲಿಂಗವನು ಮಹಾಜ್ಞಾನದಿಂದ ತಿಳಿದು ಪರಿಣಾಮಿಸಬಲ್ಲ ಹಿರಿಯರ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
ಆರು ಬಣ್ಣದ ಪಟ್ಟಣದೊಳಗೆ ಮೂರು ಬಣ್ಣದ ಕೊತ್ತಳವ ಕಂಡೆನಯ್ಯ. ಮೂರು ಬಣ್ಣದ ಕೊತ್ತಳದಿಂದತ್ತತ್ತ ಸಾವಿರಕಂಬದ ಶಿವಾಲಯವ ಕಂಡೆನಯ್ಯ. ಆ ಶಿವಾಲಯದೊಳಗೆ ಪರಮಾನಂದ ಲಿಂಗವು ತೊಳಗಿ ಬೆಳಗುತಿಪ್ಪುದು ನೋಡಾ. ಆ ಬೆಳಗಿನೊಳು ಕೂಡಿ ಪರಿಪೂರ್ಣವಾದ ಶರಣನ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.