ಅಥವಾ

ಒಟ್ಟು 79 ಕಡೆಗಳಲ್ಲಿ , 38 ವಚನಕಾರರು , 76 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ ಪೂಜೆಗೆ ಕಿಂಚಿತ್ತು ಫಲಪದವಿಯ ಕೊಟ್ಟು ಭವಹೇತುಗಳ ಮಾಡುವನಯ್ಯಾ. ಇಷ್ಟಲಿಂಗದಲ್ಲಿ ನೈಷ್ಠೆ ನಟ್ಟು ಬಿಟ್ಟು ತ್ರಿವಿಧವ ಮರಳಿ ಹಿಡಿಯದೆ ವಿರಕ್ತನಾದನಯ್ಯಾ ಗುರು ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಕಾಯವೆಂಬ ಡಕ್ಕೆಯ ಮೇಲೆ ಜೀವವೆಂಬ ಹೊಡೆಚೆಂಡು ಬೀಳೆ ತ್ರಿವಿಧವ ತಾ ತಾಯೆಂಬ ಆಸೆ ಹಿಂಡಿ ಡಿಂಡಿಯೆನುತ್ತಿದೆ. ಇಂತೀ ಉಲುಹಿನ ಭೇದದಲ್ಲಿ ಹೊಲಬುದ್ಧಪ್ಪದೆ ಗೆಲಬೇಕು ಕಾಲವೆಂಬ ಮಾರಿಯ, ಕಾಲಾಂತಕ ಬ್ಥೀಮೇಶ್ವರಲಿಂಗವನರಿಯಬಲ್ಲಡೆ.
--------------
ಡಕ್ಕೆಯ ಬೊಮ್ಮಣ್ಣ
ಬ್ರಹ್ಮಾಂಡದ ಬಯಲ ಪಸರಿಸಿ, ಹಿಡಿವರೆ ಬಯಲಾವುದುಂಟು ಹೇಳಿರಣ್ಣಾ ? ಕಂಗಳ ಮುಂದಣ ಕತ್ತಲೆ ಹರಿವುದಕ್ಕೆ ಜ್ಯೋತಿ ಆವುದುಂಟು ಹೇಳಿರಣ್ಣಾ ? ಇಂಗಿತವನರಿದ ಬಳಿಕ, ತ್ರಿವಿಧಕ್ಕೆ ತ್ರಿವಿಧವನಿತ್ತು ತ್ರಿವಿಧವನರಿದು, ತ್ರಿವಿಧವ ಮರೆದು, ಕಲಿಯುಗದ ಕತ್ತಲೆಯ ದಾಂಟಿ, ತನ್ನ ಭವವ ದಾಂಟಿದವಂಗೆ, ಬ್ರಹ್ಮಾಂಡದ ಬಯಲು ಕೈವಶವಾಯಿತ್ತು. ಕಂಗಳ ಮುಂದಣ ಕತ್ತಲೆ ಹರಿದುಹೋಯಿತ್ತು, ನಿಮ್ಮ ಸಂಗಸುಖದೊಳಗಿಪ್ಪ ಲಿಂಗೈಕ್ಯಂಗೆ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಪಂಕವ ಮೆಟ್ಟಿದ ಅಡಿ, ಉಭಯಕ್ಕೆ ಶಂಕೆದೋರದಿಹುದೆ ? ತ್ರಿವಿಧವ ಕೂಡಿ ಆಡುವ ಮನ, ಅವರೊಳು ಒಡಗೂಡದಿಹುದೆ ? ಅದರ ತೊಡಿಗೆಯನರಿತಡೆ ಗಡಿಗೆಯನೊಡಗೂಡಿದ ಜಲದಂತಿರಬೇಕು. ಕಾರ್ಯ ಕೂಡಿದಲ್ಲಿ ಗಡಿಗೆಯಾಗಿ, ಮತ್ತೆ ವಾರಿಯ ಬೆರಸದಂತಿರಬೇಕು. ಇದು ಕರತಳಾಮಳಕ, ಬಂಕೇಶ್ವರಲಿಂಗವನರಿವುದಕ್ಕೆ.
--------------
ಸುಂಕದ ಬಂಕಣ್ಣ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಿಮ್ಮ ಭಕ್ತಂಗೆ ಮಲತ್ರಯವಿಲ್ಲ; ಅದೇನು ಕಾರಣವೆಂದಡೆ; ತನುವ ಸದಾಚಾರಕ್ಕರ್ಪಿಸಿ, ಮನವ ಮಹಾಲಿಂಗಭಾವದಲಿರಿಸಿ, ಧನವ ನಿಮ್ಮ ಶರಣರ ದಾಸೋಹಕ್ಕೆ ಸವೆಯಬಲ್ಲವನಾಗಿ_ ಇಂತೀ ತ್ರಿವಿಧವ ತ್ರಿವಿಧಕ್ಕೆ ಕೊಟ್ಟಬಳಿಕ ಆ ಭಕ್ತನ ತನು ನಿರ್ಮಲ, ಆ ಭಕ್ತನ ಮನ ನಿಶ್ಚಿಂತ, ಆ ಭಕ್ತನ ಧನ ನಿರ್ವಾಣ. ಇಂತಪ್ಪ ಭಕ್ತ ಪ್ರಸಾದಕಾಯನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹಿರಣ್ಯಚ್ಛೆಯ ಹೆಚ್ಚಿ ನುಡಿವರು ನಿನ್ನಂಗವಪ್ಪರೆ ಅಯ್ಯಾ? ಅಪ್ಪರಪ್ಪರು ಹೊನ್ನು ಹೆಣ್ಣು ಮಣ್ಣು ತ್ರಿವಿಧವ ಬಿಟ್ಟವರು. ಅಪ್ಪರಪ್ಪರು ಸತ್ಪಾತ್ರ-ಅಪಾತ್ರವೆಂದರಿದವರು. ಅಪ್ಪರಪ್ಪರು ಸದಾಚಾರ, ನಿಹಿತಾಚಾರ, ಗುರುಚರಭಕ್ತಿ, ಸ್ವಾನುಭಾವದೀಕ್ಷೆ ಸಮನಿಸಿದವರು. ನಿನ್ನಂಗ ಎಲ್ಲರಂತಲ್ಲ ಹೊಸ ಪರಿ ಎಲೆ ಅಯ್ಯಾ. ಮಸ್ತಕದಲ್ಲಿ ಪೂಜೆಯ ಮಾಡಿ ಅದ ನಿರ್ಮಾಲ್ಯವೆಂದು ತ್ಯಜಿಸಿ, ಮರಳಿ ಪಡೆದು ನಿನಗೆ ಪಾತ್ರವಾದರು. ಅಪ್ಪುದಕ್ಕನುಮಾನವೆ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ವಚನದ ರಚನೆಯ ನುಡಿವ ಬರುಬಾಯ ಭುಂಜಕರೆಲ್ಲ ಭಕ್ತರಪ್ಪರೆ ಅಯ್ಯಾ ? ಮಾಡುವ ದಾಸೋಹದಿಂದ ಭಕ್ತಂಗೆ ಅವಗುಣಂಗಳಿಲ್ಲದಿರಬೇಕು. ಕೋಪದ ಕೆಚ್ಚಂ ಕಡಿದು, ಲೋಭಲಂಪಟಮಂ ಕೆದರಿ, ಮೋಹದ ಮುಳ್ಳುಮೊನೆಯ ತೆಗೆದು, ಮದದಚ್ಚಂ ಮುರಿದು, ಮಚ್ಚರಿಪ ಸರ್ಪನಂ ಸಮತೆಯೆಂಬ ಗಾರುಡದಲ್ಲಿ ಗಾರುಡಿಸಿ, ಕರಣಾದಿ ಗುಣಂಗಳಿಚ್ಛೆಗೆ ಹರಿಯಲೀಯದೆ, ವಿಶ್ರಮಿಸಿಪ್ಪ ಭಕ್ತನ ಕಾಯವೆ ಕೈಲಾಸ. ಅಂತಲ್ಲದೆ ಬರಿಯಮಾತಿಂಗೆ ಮಾತನೆ ಕೊಟ್ಟು, ತಾನಾಡಿದುದೆ ನೆಲೆಯೆಂಬಾತ ಭಕ್ತನೆ ? ಅಲ್ಲ, ಉಪಜೀವಿ. ಹೇಮದಿಚ್ಛೆಗೆ ಹರಿದು ಕಾಮರತಿಗಳುಪವ, ಕೋಪದುರಿಯ ಹೊದ್ದುಕೊಂಬ, ಲೋಭಮೋಹದ ಕೆಚ್ಚ ಕೂಡಿಕೊಂಡು, ನರಕದೊಳಗೋಲಾಡುವಾತ ಭಕ್ತನೆ ? ಅಲ್ಲ. ಆದಿಯಲ್ಲಿ ನಮ್ಮವರು ಹೊನ್ನು ಹೆಮ್ಣು ಮಣ್ಣು, ಈ ತ್ರಿವಿಧವ ಬಿಟ್ಟಿದರೆ ? ಇಲ್ಲ. ಆವ ತಲೆಯೆತ್ತಲೀಯರಾಗಿ, ಅನ್ಯಸಂಗವ ಹೊದ್ದರು. ಭವಿಮಿಶ್ರವ ಮುಟ್ಟರು, ಹಮ್ಮುಬಿಮ್ಮುಯಿಲ್ಲದಿಪ್ಪ ಇಂತಪ್ಪರೆ ನಮ್ಮ ಭಕ್ತರು. ನಮ್ಮ ಭಕ್ತರ ನೆಲೆಯ, ಮಹಾದಾನಿ ಸೊಡ್ಡಳಾ, ನೀನೆ ಬಲ್ಲೆಯಲ್ಲದೆ, ಉಳಿದ ಜಡಜೀವಿಗಳೆತ್ತ ಬಲ್ಲರು ?
--------------
ಸೊಡ್ಡಳ ಬಾಚರಸ
ತರುಗಿಡು ಗುಣನಾಮವಾದಡೇನು, ಸ್ಥಾಣುವಿನ ಒಲವರದ ತೆರ ಬೇರೆ. ದರ್ಶನ ಸುಖಸಂಪತ್ತಾದಡೇನು, ಅರಿವಿನ ಒಲವರದ ತೆರ ಬೇರೆ. ಎಲೆಯ ಹಾಕಿ ತನ್ನಲ್ಲಿಗೆ ಕರೆವವನ ಗುಣ ಲೇಸೆ ? ಶಬರನ ವೇಷ, ಮೃಗದ ಹರಣದ ಕೇಡು. ಹಿರಿಯತನವ ತೋರಿ, ತ್ರಿವಿಧವ ಬೇಡುವ ಅಡಿಗರಿಗೇಕೆ, ಬಂಕೇಶ್ವರಲಿಂಗವ ಅರಿದ ಅರಿವು ?
--------------
ಸುಂಕದ ಬಂಕಣ್ಣ
ಒಂದಂಗಕ್ಕೆ ಮೂರು ಯುಕ್ತಿ ಬ್ಥಿನ್ನವಾದಂತೆ, ಬ್ಥಿನ್ನವೊಂದಂಗದಲ್ಲಿ ಕೂಡಿ ಚಕ್ಷುವಿನಲ್ಲಿ ಕಂಡು ನಡೆವಂತೆ, ಅದೆಂತೆಂದಡೆ: ನಡೆವ ಚರಣ ಗುರುಮಾರ್ಗವಾಗಿ, ಕೊಡುವ ಕರ ಚರಮಾರ್ಗವಾಗಿ, ಕೊಂಬ ಜಿಹ್ವೆ ಲಿಂಗದ ಒಡಲಾಗಿ, ನೋಡುವ ಚಕ್ಷು ತ್ರಿವಿಧವ ಕೂಡಿದ ಪರಮಪ್ರಕಾಶವಾಗಿ, ಇಂತಿವನೊಡಗೂಡಿ ಕಾಬ ಸದ್ಭಕ್ತನಂಗ ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ದೇವರೆಂದು ಅರ್ಚಿಸಿ ಪೂಜಿಸಿ ಭಾವಿಸಿ, ಮತ್ತೆ ತ್ರಿವಿಧವ ಮುಟ್ಟಿದರೆಂದು ಕಷ್ಟಗುಣವ ನುಡಿವ ಭಕ್ತಿಹೀನರ ಕಂಡಡೆ ಅವರನೊಚ್ಚತ ತೊಲಗಬೇಕು ಶಂಭುಜಕ್ಕೇಶ್ವರಾ.
--------------
ಸತ್ಯಕ್ಕ
ಪೃಧ್ವಿಯಗೆಲಿದ ಏಲೇಶ್ವರನ ಕಂಡೆ. ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ಕಂಡೆ. ಸತ್ವ ರಜ ತಮ ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ. ಅಂತರಂಗದ ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ಕಂಡೆ. ಇವರೆಲ್ಲರ ಮಧ್ಯಮಸ್ಥಾನ ಪ್ರಾಣಲಿಂಗ ಜಂಗಮವೆಂದು ಸುಜ್ಞಾನದಲ್ಲಿ ತೋರಿದ ಬಸವಣ್ಣ ; ಆ ಬಸವಣ್ಣನ ಪ್ರಸಾದದಿಂದ ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯಾ
--------------
ಅಕ್ಕಮಹಾದೇವಿ
ನ ಎಂಬಕ್ಷರದ ಭೇದ ಜನನ ನಾಸ್ತಿಯಾದ ವಿವರ. ಮ ಎಂಬಕ್ಷರದ ಭೇದ ಮರಣ ನಾಸ್ತಿಯಾದ ವಿವರ. ಶಿ ಎಂಬಕ್ಷರದ ಭೇದ ಸ್ವೀಕರಣೆ ನಾಸ್ತಿಯಾದ ವಿವರ. ವ ಎಂಬಕ್ಷರದ ಭೇದ ವಕಾರ ನಾಸ್ತಿಯಾಗಿ ಸಾಕಾರವಳಿದ ಭೇದ. ಯ ಎಂಬಕ್ಷರದ ಭೇದ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಉತ್ಪತ್ಯ ಸ್ಥಿತಿ ಲಯವೆಂಬ ತ್ರಿವಿಧವ ಮುಟ್ಟದೆ ಅದು ನಿಶ್ಚಯವಾದಲ್ಲಿ ಪಂಚಾಕ್ಷರಿಯ ಭೇದ. ಇಂತೀ ಭೇದಂಗಳಲ್ಲಿ ಜಪಧ್ಯಾನವ ಧ್ಯಾನಿಸಿ ಇಷ್ಟ ಕಾಮ್ಯ ಮೋಕ್ಷಂಗಳೆಂಬ ಮೂರಂಗುಲವನರಿವುದು. ಸದೃಷ್ಟ ತನ್ನಷ್ಟವೆಂಬ ಉಭಯದ ಅಂಗುಲವ ಕಂಡು ಚತುರ್ವಿಧಫಲಪದಂಗಳಲ್ಲಿ ಭಾವಿಸಿ ಕಲ್ಪಿಸದಿಪ್ಪುದು ಜಪಧ್ಯಾನ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಪ್ರಸಾದವೆಂದು ನುಡಿವಿರಿ, ಪ್ರಸಾದದ ಭೇದವ ಬಲ್ಲವರಾರು, ಈ ಪ್ರಸಾದದ ಭೇದವ ತಿಳಿದವರಾರು. ಪ್ರಸಾದವೆಂಬ ಮೂರಕ್ಷರದ ಭೇದವ ಬಲ್ಲವರಾರು. ಆಕಾರ ನಿರಾಕಾರ ಸಾಕಾರ ಈ ಮೂರು ಪ್ರಕಾರವಾಯಿತ್ತು. ಈ 'ಪ್ರ'ಕಾರದ ಭೇದವ ಬಲ್ಲವರಾರು. ಸಕಲ ನಿಃಕಲ ನಿರಂಜನನಾದ ಭೇದವ ಬಲ್ಲರೆ 'ಸಾ'ಕಾರದ ಭೇದವ ಬಲ್ಲವರೆ, 'ದ'ಕಾರದ ಭೇದವನರಿದವರೆ, ಆದಿ ಆಧಾರ ಅನಾದಿ ಈ ತ್ರಿವಿಧವ ಬಲ್ಲವರು. ಇಂತೀ ಪ್ರಸಾದವೆಂಬ ಸದ್ಭಾವದ ನಿರ್ಣಯವನರಿಯದೆ ಪ್ರಸಾದವ ಕೊಟ್ಟಾತನು ಕೊಂಡಾತನು ಇವರಿಬ್ಬರ ಭೇದವೆಂತೆಂದರೆ: ಹುಟ್ಟುಗುರಡನ ಕೈಯ ತೊಟ್ಟಿಗುರುಡ ಹಿಡದಂತಾಯಿತು. ಈ ಭೇದವೆಂತೆಂದರೆ :ಇಷ್ಟ ಪ್ರಾಣ ಭಾವ 'ಪ್ರ'ಕಾರವಾಯಿತು. 'ಸಾ'ಕಾರವೆ ಜಂಗಮಲಿಂಗ ಪ್ರಸಾದಲಿಂಗ ಸೋಂಕಿ ನವಪೀಠಗಳಾಗಿ ನವಲಿಂಗ ಸೋಂಕಿ ನವಪೀಠ ಪ್ರಸಾದವಾಯಿತು. ನವಪ್ರಸಾದ ನವಪ್ರಣಮವೆ ನವಬೀಜವಾಯಿತು. ನವಹಸ್ತಗಳ ನೆಲೆಗೊಳಿಸಿ ಶಿವಲಿಂಗಧಾರಣಮಂ ಮಾಡಿ ನವಲಿಂಗಮುಖವನರಿದು ನವನೈವೇದ್ಯವಂ ಮಾಡಿ ನವಮುಖಕ್ಕಿತ್ತ ನವಪ್ರಸಾದಿಯಾದ ಶರಣನು ನವಚಕ್ರಗಳೆಲ್ಲ ನವಜಪ ಪ್ರಸಾದವೆ ತಾನೆ ಆಗಿ ನವರತ್ನಪ್ರಭೆ ಏಕರವಿರಶ್ಮಿಯಾದಂತೆ, ನವಕೋಟಿ ಸೋಮಸೂರ್ಯರ ಪ್ರಭೆ ಒಂದಾಗಿ ದಿವ್ಯಜ್ಯೋತಿರ್ಲಿಂಗ ತಾನಾದ ಶರಣನು. ಅರಿವೆ ಶಿವಲಿಂಗ, ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ತಾನೆ ಆಯಿತು. ನವ ಅಸ್ಥಿಗಳಡಗಿ ನವಲಿಂಗ ಒಂದೆ ಅಂಗವಾಗಿ ಬೆಳಗುತಿಹ ಶರಣಂಗೆ ಇಹಲೋಕವೇನು, ಪರಾತ್ಪರಲೋಕವೇನು ? ಸಗುಣವೇನು ನಿರ್ಗುಣವೇನು ? ನಿರಂಜನವೇನು, ನಿಷ್ಕಳವೇನು, ನಿರ್ಮಾಯವೇನು ? ಆತಂಗೆ ಭಕ್ಷವಿಲ್ಲ ಅಭ್ಯಕ್ಷವಿಲ್ಲ ಅರ್ಪಿತವಿಲ್ಲ ಅನರ್ಪಿತವಿಲ್ಲ. ಆತ ರುಚಿಸಿದ್ದೆಲ್ಲ ಪ್ರಸಾದ, ಅತ ಸೋಂಕಿದ್ದೇ ಪಾವನ. ಆತ ಮೆಟ್ಟಿದ ಭೂಮಿಯೆಲ್ಲ ಪುಣ್ಯಕ್ಷೇತ್ರಂಗಳಾದವು. ಆತ ಜಲಮಲವ ಬಿಟ್ಟು ಬಂದ, ಸಂಚಮನವ ಮಾಡಿದ ಸ್ಥಾನಾದಿಗಳೆಲ್ಲ ಪುಣ್ಯತೀರ್ಥಂಗಳಾದವು. ಇಂತೀ ನಿಮ್ಮ ಶರಣನ ಸರ್ವಾಂಗವೆಲ್ಲ ಶಿವಮಂದಿರವು ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ವಮನವ ಮಾಡಿದ ಅಪೇಯವ ಕ್ಷುಧೆಯಾಯಿತೆಂದು ಮುಟ್ಟುದು ಕುನ್ನಿ. ಅಮಲವಸ್ತು ತ್ರಿವಿಧವ ಮಲವೆಂದು ಕಳೆದು, ಮತ್ತಾಗೆ ತಲೆದೋರಿ, ಲಿಂಗ ಮುಂತಾಗಿ ಕೊಟ್ಟುಕೊಳಬಹುದೆಂದು ಸಂದೇಹವನಿಕ್ಕಬಹುದೆ? ಬಿಟ್ಟೆನೆಂಬ ಭ್ರಾಮಕವಿಲ್ಲದೆ, ಹಿಡಿದಲ್ಲಿ ಕಲೆದೋರದೆ, ಸುಖದುಃಖವೆಂಬುದನರಿಯದೆ, ನೆರೆ ಅರಿದು ಹರಿದು, ಆ ಹರಿದರಿವೆ ಕರಿಗೊಂಡು ನಿಂದಲ್ಲಿ ಆತ ಉಂಡು ಉಪವಾಸಿಯಪ್ಪ, ಬಳಸಿ ಬ್ರಹ್ಮಚಾರಿಯಪ್ಪ, ಸದ್ಯೋಜಾತಲಿಂಗದಲ್ಲಿ ಉಭಯವಳಿದ ಶರಣ.
--------------
ಅವಸರದ ರೇಕಣ್ಣ
ಇನ್ನಷ್ಟು ... -->