ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶುಕ್ಲ ಶೋಣಿತಾತ್ಮಸಂಬಂಧವಾದ ಮಾತಾಪಿತೃಗಳ ಸಂಯೋಗ ಕಾಲಕ್ಕೆ ಜೀವಾತ್ಮರು ಜನಿಸಿದ ಪರಿಯ ಪೇಳುವೆ. ಅದೆಂತೆಂದೊಡೆ : ಜನಿಸಿದ ಮೂರುದಿವಸಕ್ಕೆ ಸ್ತ್ರೀಯರ ನಯನ ಕೆಂಪಾಗಿ ಮೂರಾರುದಿವಸಕ್ಕೆ ಕೈಕಾಲು ಕತ್ತರಿಸಿ ಏಳೆಂಟುದಿವಸಕ್ಕೆ ಅಂಗ ಜಾಡ್ಯವಾಗಿ ಈರ್ಹತ್ತುದಿವಸಕ್ಕೆ ಇಂದ್ರಿಯ ಹೆಪ್ಪುಗೊಂಡು ಒಂದುಮಾಸಕ್ಕೆ ಮಾಂಸಗೊಂಡು ಎರಡುತಿಂಗಳಿಗೆ ಪಿಂಡಗಟ್ಟಿ ಬಯಕೆ ತೋರಿ ಮೂರುತಿಂಗಳಿಗೆ ಅಂಡಗಟ್ಟಿ ಹೇಸಿಕೆ ಹುಟ್ಟಿ ನಾಲ್ಕುತಿಂಗಳಿಗೆ ಅಂಗರೂಪು ಹುಟ್ಟಿ ಐದುತಿಂಗಳಿಗೆ ಅವಯವಂಗಳು ಹುಟ್ಟಿ ಆರುತಿಂಗಳಿಗೆ ಅವಯವಂಗಳು ಬಲಿದು ಏಳುತಿಂಗಳಿಗೆ ರೋಮ ಹುಟ್ಟಿ ಇಂತೀ ಪರಿಯಲ್ಲಿ ಶಿವಕೃಪೆಯಿಂದ ಪಿಂಡವರ್ಧನವಾಗಲು, ಇಂತಪ್ಪ ಪಿಂಡದಲ್ಲಿ ಶಿವಾಜ್ಞೆಯಿಂದ ಆತ್ಮನು ಪ್ರವೇಶವಾದಾಕ್ಷಣವೇ ಗರ್ಭದಲ್ಲಿ ಶಿಶುವು ಉಲುಕುವುದು. ಎಂಟುತಿಂಗಳಿಗೆ ಕುಕ್ಕುಟಾಸನದಿಂದ ಶಿಶುವು ಹುದುಗಿಕೊಂಡಿರ್ಪುದು. ನವಮಾಸಕ್ಕೆ ಮರ್ಕಟಾಸನದಿಂದ ನೆಟ್ಟನೆ ಕುಳ್ಳಿರ್ದು ಶಿಶುವು ಸರ್ಪನುಂಗಿದ ಇಲಿಯ ಹಾಂಗೆ ಗರ್ಭವೆಂಬ ಸರ್ಪ ಶಿಶುವನೊಳಕೊಂಡಿರ್ಪುದು. ಆ ಶಿಶುವಿಗೆ ಕ್ರಿಮಿಕೀಟಕ ಜಂತುಗಳು ಮೊದಲಾದ ಅನೇಕ ಬಾಧೆಗಳುಂಟು. ಆ ಬಾಧೆಗಳಿಂದ ಆ ಶಿಶುವು ತನ್ನ ಕೆನ್ನೆಗೆರಡು ಹಸ್ತವ ಹಚ್ಚಿ ಊಧ್ರ್ವಮುಖವಾಗಿ ಶಿವಧೋ ಶಿವಧೋ ಎಂದು ಶಿವಧ್ಯಾನವ ಮಾಳ್ಪ ಸಮಯದಲ್ಲಿ ಹರಕರುಣದಿಂದ ಆ ಗರ್ಭವೆಂಬ ಮನೆಯ ಬಿಟ್ಟು ಹೊರಡುವ ಸಮಯಕ್ಕೆ ಆ ಶಿಶುವಿನ ದುಃಖವ ಪೇಳ್ವೆ: ಕೋಟಿಸಿಡಿಲು ಹೊಯ್ದಂತೆ, ಸಾವಿರಚೇಳು ಕಡಿದಂತೆ, ಧರ್ಮಿಷ್ಟರಾಜನು ಮೃತವಾದರೆ ಅತಿಬಡವರಿಗೆ ದುಃಖವಾದಹಾಂಗೆ. ಬಳಗುಳ್ಳ ಪುಣ್ಯಪುರುಷನು ಸಾಯಂಕಾಲದಲ್ಲಿ ಮೃತನಾಗಿ ಪ್ರಾತಃಕಾಲದಲ್ಲಿ ಅವನ ಶವ ಎತ್ತುವಕಾಲಕ್ಕೆ ಅವನ ಬಳಗಕ್ಕೆ ದುಃಖವಾದಹಾಂಗೆ. ಆ ಮಾಯಾಯೋನಿಯೆಂಬ ಸೂಕ್ಷ್ಮ ಅಧೋದ್ವಾರದಿಂ ಆತ್ಮನು ಅನೇಕ ದುಃಖ ದಾವತಿಯಿಂದ ಜನಿಸಲು ಅಂತಪ್ಪ ಪಿಂಡಕ್ಕೆ ಯೋನಿ ಕಂಡರೆ ಹೆಣ್ಣೆಂಬರು ಶಿಶ್ನವ ಕಂಡರೆ ಗಂಡೆಂಬರು. ಒಳಗಿರುವ ಆತ್ಮನು ಹೆಣ್ಣು ಅಲ್ಲ, ಗಂಡು ಅಲ್ಲ ನಿರಾಳ ಬ್ರಹ್ಮಾಂಶಿಕವು. ಅದೆಂತೆಂದಡೆ: ಪಾಪದದೆಸೆಯಿಂದ ಹೆಣ್ಣಾಗಿ ಜನಿಸುವುದು; ಪುಣ್ಯದದೆಸೆಯಿಂದ ಪುರುಷನಾಗಿ ಜನಿಸುವುದು. ಇಂತೀ ಪರಿಯಲ್ಲಿ ಇರುವೆ ಮೊದಲು ಆನೆ ಕಡೆ ಎಂಬತ್ತುನಾಲ್ಕುಲಕ್ಷ ಜೀವರಾಶಿಯ ಯೋನಿಚಕ್ರಮಾರ್ಗದಲ್ಲಿ ತಿರುಗಿ ತಿರುಗಿ ಭವರಾಟಾಳಮಾರ್ಗದಲ್ಲಿ ದೇವ ದಾನವ ಮಾನವರು ಮೊದಲಾದ ಸಕಲಜನರು ಬರುವದುಕಂಡು ಥರಥರನೆ ನಡುಗಿ ಮರಳಿ ಈ ಜನನೀಜಠರಕ್ಕೆ ಬರಲಾರೆನೆಂದು ಅಂಜಿ ನಿಮ್ಮ ಮರೆಹೊಕ್ಕನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->