ಅಥವಾ

ಒಟ್ಟು 49 ಕಡೆಗಳಲ್ಲಿ , 23 ವಚನಕಾರರು , 43 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೋಹಂ ಎಂದಡೆ ಅಂತರಂಗದ ಗರ್ವ; ಶಿವೋಹಂ ಎಂದಡೆ ಬಹಿರಂಗದ ಅಹಂಕಾರ ; ಈ ಉಭಯವನಳಿದು ದಾಸೋಹಂ ಎಂದಡೆ ಪರಮಪದವು. ಇದು ಕಾರಣ, ಎನಗೆ ದಾಸೋಹಂ ಭಾವವನೆ ಕರುಣಿಸಿ ಬದುಕಿಸಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ತನು ತನ್ನದಾದಡೆ, ದಾಸೋಹಕ್ಕೆ ಕೊರತೆಯಿಲ್ಲ, ದಾಸೋಹ ಸಂಪೂರ್ಣ, ದಾಸೋಹವೇ ಮುಕ್ತಿ. ಮನ ತನ್ನದಾದಡೆ, ಜ್ಞಾನಕ್ಕೆ ಕೊರತೆಯಿಲ್ಲ ಜ್ಞಾನ ಸಂಪೂರ್ಣ, ಆ ಜ್ಞಾನವೇ ಮುಕ್ತಿ. ಧನ ತನ್ನದಾದಡೆ, ಭಕ್ತಿಗೆ ಕೊರತೆಯಿಲ್ಲ. ಭಕ್ತಿ ಸಂಪೂರ್ಣ, ಭಕ್ತಿಯಲ್ಲಿ ಮುಕ್ತಿ. ತನುಮನಧನವೊಂದಾಗಿ ತನ್ನದಾದಡೆ ಗುರುಲಿಂಗಜಂಗಮವೊಂದೆಯಾಗಿ ತಾನಿಪ್ಪನು ಬೇರೆ ಮುಕ್ತಿ ಎಂತಪ್ಪುದಯ್ಯಾ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಪರಸ್ಥಾನದಲ್ಲಿ ಆನಂದಬ್ರಹ್ಮವ ಭೇದ್ಥಿಸುವ ಪರಿಯೆಂತೋ? ಪೂರ್ವದಕ್ಷಿಣವೆಂಬ ದಿಕ್ಕುಗಳಲ್ಲಿ ಸಮನಿಸುವ ಆತ್ಮ ಅಂತರ್ಯಾತ್ಮ ಭೂತಾತ್ಮ ಸರ್ವಾತ್ಮ ಪರಮಾತ್ಮವೆಂಬ ಆತ್ಮ ಪಂಚಕಗಳೆಂಬವನು ಹಿಂದು ಮುಂದರಿಯದೆ, ಮುಂದು ಹಿಂದೆಂದರಿಯದೆ ಸಂಯೋಗದಲಿಕ್ಕಿ ಪ್ರಯೋಗಿಸಿಹೆನೆಂಬ ಯೋಗಿ ಕೇಳಾ; ಪೂರ್ವವಾವುದು? ದಕ್ಷಿಣವಾವುದು? ಪೂರ್ವದಲ್ಲಿ ದಿವಾಕರರು ಹನ್ನೆರಡರ ಆನಂದ ಪ್ರಭೆಯಲ್ಲಿ ಭವಿಸಲ್ಪಟ್ಟ ನಯನದ ಕಿರಣದ ಕೊನೆಯ ಮೊನೆಯ ಮೇಲೆ ದಿವ್ಯಾಂಗಯೋಗ ಸಮನಿಸುವ ಪರಿಯೆಂತು ಹೇಳಾ? ದಕ್ಷಿಣದಲ್ಲಿ ದಿಗ್ವಳಯ ಹದಿನಾಲ್ಕರ ವ್ಯಾಪ್ತಿಯ ಸಂಚರಿಸದೆ ಸಮನಿಸುವ ಕೋಹಂ ತತ್ವಾರ್ಥದಿಂದತ್ತ ನಾಹಂ ಪರಮಾರ್ಥದಿಂದತ್ತ ಸೋಹಂ ಸದ್ಭಕ್ತಿಯ ಮುಟ್ಟಿದ ದಾಸೋಹ ನಿನ್ನಲ್ಲಿ ಸಂಯೋಗವ ಎಂತು ಮಾಡುವೆ ಹೇಳಾ? ಯೋಗಿ ನೀನು ಯೋಗಕ್ಕೆ ಹರಿವಾವುದು? ಯೋಗಕ್ಕೆ ನೆಲೆ ಯಾವುದು? ಮತ್ತೆ ಪೆರತನರಿಯದೆ ಶಾಶ್ವತವು ನೀನೆ ನೀನೆ ಎಂದೆನ್ನು, ಸಕಲನಿಷ್ಕಲದೊಳಗೆ ನೀನೆ ನೀನೆಯೆನ್ನಾ ತಾತ್ಪರ್ಯವರ್ಮ ಕಳೆಗಳೊಳಗೆ ನೀನೆ ನೀನೆಯೆಂದೆನ್ನಾ. ಓಂ ಗ್ರಾಂ ಘ್ರೀಂ ಘ್ರೂಂ ಎಂಬಕ್ಷರ ಚತುಷ್ಟಯದ ಮೇಲೆ ಶುದ್ಧ ಸಂಯೋಗವೆಂಬ ಗದ್ದುಗೆಯಿಕ್ಕಿ ಅಕ್ಷರದ್ವಯದ ಆನಂದರಾಜ ಕುಳ್ಳಿದ್ದೆ ೈದಾನೆ ಜಪಿಸುತ. ಆ ಜಪವು ನಿತ್ಯ, ಅದು ಮುಕ್ತಿ, ಅದು ಸತ್ಯ. ಅದು ಪದಕ್ಕೆ ಫಲಕ್ಕೆ ಭವಕ್ಕೆ ದೂರ, ವರ್ಣಾಶ್ರಯವ ಮೀರಿತ್ತು ತತ್ವ ಪ್ರಾಪಂಚಿಕವ ಜರಿಯಿತ್ತು. ಮಂತ್ರಂಗಳ ಕೈಯಿಂದ ವಂದಿಸಿಕೊಂಡಿತ್ತು. ಮೂರರಲ್ಲಿ ಭವಿಸಿತ್ತು, ಆರರಲ್ಲಿ ಫಲವಾಯಿತ್ತು. ಮೂವತ್ತಾರರಲ್ಲಿ ಹಣಿತಿತ್ತು ಯೋಗಿಗಳ ನಡೆಸಿತ್ತು ತತ್ವಮಸಿ ಸಂಗಮವಾಯಿತ್ತು. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯದಲ್ಲಿ ನಿತ್ಯವಾಯಿತ್ತು.
--------------
ಸಿದ್ಧರಾಮೇಶ್ವರ
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಭಕ್ತರಾಗಿದ್ದವರು ಭಕ್ತರ ವಿರಕ್ತರ ಮಿಥ್ಯದಿಂದ ನುಡಿವುದು ಸತ್ಯವಲ್ಲ. ಮಿಥ್ಯವನಳಿದು ಸತ್ಯವ ಕುರಿತು ಭಕ್ತ ಜಂಗಮಕ್ಕೆ ತತ್ತ್ವದ ಬಟ್ಟೆಯ ಹೇಳಿದಲ್ಲಿ ನಿತ್ಯ ಅನಿತ್ಯವ ತಿಳಿಯಬೇಕು. ಇದು ಸುಚಿತ್ತದ ಭಾವ. ತನ್ನ ವಂಶ ಕೆಟ್ಟಡೆ ತನಗಲ್ಲದೆ ಅನ್ಯರಿಗಿಲ್ಲ. ಇದು ಕಾರಣದಲ್ಲಿ ತನ್ನಂಗದ ಗಾಯದ ನೋವು ತನಗೆ ಅನ್ಯ ಬ್ಥಿನ್ನವಿಲ್ಲದೆ ತೋರುವವೊಲು ಇದು ನನ್ನಿಯ ನುಡಿದೆ ನೈಸಲ್ಲದೆ ಸಮರಸದ ಸನ್ನರ್ಧನಲ್ಲ. ನೀವಾಡಿಸುವ ಯಂತ್ರದ ತಂತ್ರವಲ್ಲದೆ ಸ್ವತಂತ್ರಿಯಲ್ಲ. ಎನಗೆ ಇದಿರನಾಡೆ ನಾ ಮಾಡುವ ಭಕ್ತಿ ಸತ್ಯ ಸುಚಿತ್ತದ ನಿತ್ಯವಲ್ಲ. ಮೊತ್ತದ ಕರಣಂಗಳ ನಡುವೆ ಸಿಕ್ಕಿ ಮತ್ತನಾಗಿ ಬಿದ್ದವಂಗೆ ವಸ್ತುವಿನ ಬಟ್ಟೆಯ ತೋರಿ ಮುಕ್ತಿಪಥದಲ್ಲಿ ನಿಲುವ ನಿಚ್ಚಣಿಕೆಯನಿಕ್ಕಿ ತೋರಿದ ಭಕ್ತ ದೇಹಿಕ ನಿಜಪದ ತತ್ವ ಸ್ವರೂಪ. ಸಕಲ ಜೀವದ ಆಧಾರ, ಸಕಲಮಯ ಅಖಿಳ ಬ್ರಹ್ಮಾಂಡ ಕರಂಡ ತಮರಿಪು ಕೋದಂಡ, ಶಕ್ತಿಮಯ ಚಂಡಿಕಾ ಕಿರಣದಶ ಉದಕಭರಿತ, ಭಕ್ತಿಭಂಡಾರಿ ಬಸವೇಶ್ವರನ ನಿಜತತ್ವದ್ವಯ ಪಾದಂಗಳಿಗೆ ಮಂಡಿತಮಯನಾಗೆರಗಿದೆ ಸಂದೇಹವೆಂಬ ಕರಂಡವ ಬಂದ ಪ್ರಮಥರ ಸತಿ ಸಂದ ಪ್ರಮಥರ ಡಿಂಗರಿಗ ಗುಪ್ತಮಂಚನ ನಿತ್ಯನೇಮ ಸಂದಿತ್ತು. ವೀರದಾಸನ ದಾಸೋಹ ಸೋಹಂ ಎನುತಿದ್ದಿತ್ತು. ನಾರಾಯಣ ನಯನ ಪೂಜಿತಪದಾಂಬುಜ ವಿಮಲ ಕಮಲ ಸುಲಲಿತ ರಾಮೇಶ್ವರಲಿಂಗ ಎನ್ನೊಳಗಾದಾ.
--------------
ಗುಪ್ತ ಮಂಚಣ್ಣ
ನಿಮ್ಮ ಶರಣನು ಲಿಂಗಭರಿತನು, ವಿಚಾರಿಸಿ, ಅರಿದು, ಧ್ಯಾನದಿಂದ ಜಪಿಸಿ, ಆ ಮಹಾವಸ್ತುವನು ಕಂಡು ಒಲಿದೊಲಿಸಿ, ಕೂಡಿ ಸುಖಿಸಿಹೆನೆಂಬನ್ನೆವರ ಶ್ರೀಗುರುಸ್ವಾಮಿಯ ಕರುಣಾಮೃತಸಾಗರ ಮೇರೆವರಿದು ವಿಚಾರಿಸಿ ಶಿವನಾಯಿತ್ತು, ಅರಿವು ಶಿವನಾಯಿತ್ತು; ಜ್ಞಾತೈ ಜ್ಞಾನ ಜ್ಞೇಯ ಶಿವನಾಯಿತ್ತು, ಜಪಮಂತ್ರ ಶಿವನಾಯಿತ್ತು, ಜಪಿಸುವ ಜಿಹ್ವೆ ಶಿವನಾಯಿತ್ತು, ಕಂಡೆಹೆನೆಂಬ ಕಣ್ಣು ಶಿವನಾಯಿತ್ತು. ಈ ಪರಿ ನೋಡ ನೋಡಲು ಮತ್ತೆ ಚೋದ್ಯ ಪ್ರಾಣಲಿಂಗವಾಗಿ ಸದ್ಗುರು ತಾನೆ ಕೃಪೆಮಾಡಿ ಕರಸ್ಥಲಕ್ಕೆ ಬಿಜಯಂಗೈದು ಪ್ರಾಣಲಿಂಗವಾದನು, ಕಾಯಲಿಂಗವಾದನು. ಮನ ಬುದ್ಧಿ ಚಿತ್ತ ಅಹಂಕಾರ ಜ್ಞಾನ ಭಾವವೆಲ್ಲ ಲಿಂಗವಾಯಿತ್ತು. ಸರ್ವಾಂಗಲಿಂಗವಾಗಿ ಸಲಹಿದನು. ಶ್ರೀಗುರುಲಿಂಗವು ಒಲಿದೊಲಿಸಿ ಕೂಡುವ ಪರಿ ಎಂತಯ್ಯಾ? ಒಲಿಸುವ ಪರಿ ದಾಸೋಹ, ಒಲಿದ ಪರಿ ಪ್ರಸಾದ, ಕೂಟದ ಪರಿ ನಿರ್ವಂಚಕತ್ವ, ಒಲಿದೊಲಿಸಿ ಕೂಡಿದ ಪರಿ ಪರಿಣಾಮವಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಜಂಗಮವ ಕೂಡಿಕೊಂಡು ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಭಕ್ತಂಗೆ. ಆ ಭಕ್ತನ ಕೂಡಿಕೊಂಡು ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಜಂಗಮಕ್ಕೆ. ಆ ಜಂಗಮದ ಕರ್ತೃತ್ವವೆ ಭಕ್ತಂಗೆ ದಾಸೋಹ, ಆ ಭಕ್ತನ ಕಿಂಕಲವೆ ಆ ಜಂಗಮಕ್ಕೆ ದಾಸೋಹ. ಆ ಭಕ್ತರೊಳಗೆ ಆ ಜಂಗಮವಡಗಿ, ಆ ಜಂಗಮದೊಳಗೆ ಆ ಭಕ್ತನಡಗಿ, ಇದನೇನೆಂದು ಹವಣಿಸುವೆನಯ್ಯಾ, ಎರಡೊಂದಾದ ಘನವ ? ಇದನೇನೆಂದುಪಮಿಸುವೆನಯ್ಯಾ, ತೆರಹಿಲ್ಲದ ಘನವ ? ಈ ಎರಡಕ್ಕೆ ಭವವಿಲ್ಲೆಂದು ಕೂಡಲಸಂಗಯ್ಯಾ, ನಿಮ್ಮ ಶ್ರುತಿಗಳು ಹೇಳಿದವಾಗಿ, ನಿಮ್ಮ ಕರುಣವೆನಗೆ ಆುತ್ತು. 523
--------------
ಬಸವಣ್ಣ
ನಿತ್ಯ ಅನಿತ್ಯವೆಂಬುದ ತೋರಿದಿರಿ, ಸತ್ಯ ಅಸತ್ಯವೆಂಬುದ ತೋರಿದಿರಿ. ಆಚಾರ ವಿಚಾರವೆಂಬುದ ತೋರಿದಿರಿ. ಅಯ್ಯಾ ಸೋಹಂ ದಾಸೋಹಂ ಎಂಬುದ ತೋರಿದಿರಿ. ಇದು ಎಂಬುದ ತೋರಿದಿರಿ. ಅಯ್ಯಾ ಮುಕ್ತಿ ಎಂಬುದ ತೋರಿದಿರಿ. ಅಂಗ ಲಿಂಗವೆಂಬುದ ತೋರಿದಿರಿ, ಪ್ರಾಣವೇ ಜಂಗಮವೆಂಬುದ ತೋರಿದಿರಿ. ಪ್ರಸಾದವೇ ಪರವೆಂದು ತೋರಿದಿರಿ. ಇಂತಿವರ ಭೇದಾದಿ ಭೇದವನೆಲ್ಲ ತೋರಿದಿರಿ. ನಿಮ್ಮ ಹಾದಿಯ ಹತ್ತಿಸಿದಿರಿ. ಮೂದೇವರೊಡೆಯ ಚೆನ್ನಮಲ್ಲೇಶ್ವರಾ, ನಿಮ್ಮ ಹಾದಿಗೊಂಡು ಹೋಗುತ್ತಿರ್ದು, ನಾನೆತ್ತ ಹೋದೆನೆಂದರಿಯನಯ್ಯಾ. ಬಸವಪ್ರಿಯ ಕೂಡಲಚೆನ್ನ ಬಸವಣ್ಣಾ , ನಾ ಹೋದ ಹಾದಿಯ ನೀವೆ ಬಲ್ಲಿರಿ.
--------------
ಹಡಪದ ಅಪ್ಪಣ್ಣ
ಅಣುರೇಣು ಮಹಾತ್ಮನೆಂದೆಂಬರು. ಅಣುರೇಣು ತೃಣಕಾಷ*ದೊಳಗಿರ್ಪನೆಂಬರು. ಅಮ್ಮೆನಯ್ಯಾ, ನಾನೆನಲಮ್ಮೆನಯ್ಯಾ. ಶರಣಸನ್ನಹಿತನು, ಭಕ್ತಕಾಯ ಮಮಕಾಯನು, ದಾಸೋಹ ಪರಿಪೂರ್ಣನು, ಸದುಹೃದಯದಲ್ಲಿ ಸಿಂಹಾಸನವಾಗಿ ಅಗಲದಿರ್ಪನು ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಸುನಾದ ಮಹಾನಾದಂಗಳು ಸದ್ಭಾವದಲ್ಲಿ ಪ್ರಕಾಶಿಸಲು ನೈ, ವೈ, ಎಂಬ ದಶನಾದಲಕ್ಷಣವ ಅನುಭೂತ ಭಾವದಿಂದರಿತು, ಹಂಸನಾದ ದಾಸೋಹಂ ಎಂಬುದ ಮರದು ಸೋಹಂ ಸೋಹಂ ಸೋಹಂ ಎಂದು ಕೂಗುವ ಕೂಗನಾಲಿಸಿ ಆ ಕೂಗಿನ ಕಡೆಯಲ್ಲಿ ಹವಣಿಲ್ಲದೆ ರೂಹಳಿಯದ ಐಕ್ಯ ತಾನೆ ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ವಿಭೂತಿ ರುದ್ರಾಕ್ಷಿಯ ಧರಿಸಿ ಷಡಕ್ಷರಿಯಂ ಜಪಿಸಿ ಗುರು ಲಿಂಗ ಜಂಗಮದ ಆದ್ಯಂತವನರಿಯದೆ ಏನೆಂದು ಪೂಜಿಸುವಿರಿ, ಆರಾಧಿಸುವಿರಿ? ಅದೆಂತೆಂದಡೆ: ನೆಲದ ಮೇಲಣ ಶಿಲೆಯ ಕಲ್ಲುಕುಟಿಕ ಕಡಿದು ಖಂಡಿಸಿ ಹರದನ ಕೈಯಲ್ಲಿ ಕೊಟ್ಟು ಮಾರಿಸಿಕೊಂಡುದು ಲಿಂಗವಾದ ಪರಿ ಹೇಂಗೆ? ಸಕಲ ವ್ಯಾಪಾರ ಅಳುವಿಂಗೆ ಒಳಗಾಗಿ ತೊಡಿಸಿ ಬರೆಸಿಕೊಂಡುದು ಮಂತ್ರವಾದ ಪರಿ ಹೇಂಗೆ? ಅಜ್ಞಾನಿ ಮೃಗ ಪಶುವಿನ ಸಗಣಿಯ ಸುಟ್ಟುದು ವಿಭೂತಿಯಾದ ಪರಿ ಹೇಂಗೆ? ಪಂಚಭೂತಿಕದಿಂದ ಜನಿಸಿದ ವೃಕ್ಷದ ಫಲ ರುದ್ರಾಕ್ಷಿಯಾದ ಪರಿ ಹೇಂಗೆ? ಸಕಲ ಜೀವವೆರಸಿ ಕರಗಿದ ಆಸಿಯ ಜಲ ತೀರ್ಥವಾದ ಪರಿ ಹೇಂಗೆ? ಸಕಲ ಪ್ರಾಣಿಗಳಾಹಾರ ಹದಿನೆಂಟು ಧಾನ್ಯ ಕ್ಷುಧಾಗ್ನಿಯಲ್ಲಿ ಜನಿಸಿ ಪಚನವಾದುದು ಪ್ರಸಾದವಾದ ಪರಿ ಹೇಂಗೆ? ಅದೆಂತೆಂಡೆ: ನಿಗಮ ಶಾಸ್ತ್ರಕ್ಕೆ ಅಗಣಿತವಾದ ನಾದಬಿಂದುವಿಗೆ ನಿಲುಕದ ನಿತ್ಯತೃಪ್ತ ಪರಂಜ್ಯೋತಿಲಿಂಗದ ವೈಭವಕ್ಕೆ ಅಂಗವಾದುದು ಈ ಗುರುವಲ್ಲಾ ಎಂದು ಅರಿದು ಆ ಲಿಂಗದ ಚೈತನ್ಯ ಈ ಲಿಂಗವಲ್ಲಾ ಎಂದು ಅರಿದು ಮಾಡೂದು ತನು ಮನ ಧನ ವಂಚನೆಯಳಿದು. ಗುರುಭಕ್ತಿ ಸನ್ನಿಹಿತವಾಗಿ ಆ ಲಿಂಗದ ವದನ ಈ ಜಂಗಮವಲಾ ಎಂದರಿದು ಮಾಡೂದು ಆ ತನು ಮನ ಧನ ವಂಚನೆಯಳಿದು. ಜಂಗಮಭಕ್ತಿ ಸನ್ನಿಹಿತವಾಗಿ ಆ ಲಿಂಗದ ಕಾಯಕಾಂತಿಯ ಬೆಳಗಿನ ಐಶ್ವರಿಯಲ್ಲ ಎಂದರಿದು ಧರಿಸೂದು ಶ್ರೀ ವಿಭೂತಿಯ. ಆ ಲಿಂಗದ ಶೃಂಗಾರದ ಹರಭರಣವಲಾ ಎಂದರಿದು ಅಳವಡಿಸೂದು ರುದ್ರಾಕ್ಷಿಯನು. ಆ ಲಿಂಗದ ಉತ್ತುಂಗ ಕಿರಣಚರಣಾಂಬುಜವಲಾ ಎಂದು ಧರಿಸೂದು, ಕೊಂಬುದು ಪಾದೋದಕವನು. ಆ ಲಿಂಗದ ನಿತ್ಯಪದ ಸಂಯೋಗ ಶೇಷವ ತಾ ಎಂದರಿದು ಕೊಂಬುದು ಪ್ರಸಾದವನು. ಇಂತಿವೆಲ್ಲವನರಿದುದಕ್ಕೆ ಸಂತೋಷವಾಗಿ ಚರಿಸುವಾತನೆ ಸದ್ಭಕ್ತ. ಆತನ ಕಾಯ ಕರಣ ಪ್ರಾಣ ಭಾವಾದಿಗಳು ಸೋಂಕಿದೆಲ್ಲವೂ ಲಿಂಗದ ಸೋಂಕು, ಲಿಂಗದ ಕ್ರೀ, ಲಿಂಗದ ದಾಸೋಹ. ಇಂತೀ ತ್ರಿವಿಧವ ಸವೆದು ಅಳಿದುಳಿದ ಸದ್ಭಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನು ಕಾಣಾ, ಬಸವಣ್ಣಪ್ರಿಯ ನಿಃಕಳಂಕ ಸೋಮೇಶ್ವರನೆ.
--------------
ನಿಃಕಳಂಕ ಚೆನ್ನಸೋಮೇಶ್ವರ
ಶಬ್ದ ಸ್ಪರ್ಶ ರೂಪು ರಸ ಗಂಧ ಪಂಚವಿಷಯ ಸಂಗತವಾವುದೆಂದಡೆ: ಶಬ್ದಗುರು, ಸ್ಪರ್ಶಲಿಂಗ, ರೂಪುಜಂಗಮ, ರಸಪ್ರಸಾದ, ಗಂಧ ಅನುಭಾವ. ಇಂತೀ ಪಂಚವಿಂಶತಿಯವನಲ್ಲವೆನಬಲ್ಲನಾಗಿ ಬಸವಣ್ಣನು. ಮನ ಬುದ್ಧಿ ಚಿತ್ತ ಅಹಂಕಾರ ಚತುರ್ವಿಧ ಸ್ಥೂಲವಾವುದೆಂದಡೆ: ಮನ ಧ್ಯಾನ ಬುದ್ಧಿ ವಂಚನೆ ಇಲ್ಲದುದು. ಚಿತ್ತ ದಾಸೋಹ ಅಹಂಕಾರ ಜ್ಞಾನ ಇವರಲ್ಲಿ ಮಾಡಬಲ್ಲನಾಗಿ ಬಸವಣ್ಣನು. ಸತ್ವ ರಜ ತಮವೆಂಬೀ ತ್ರಿಕರಣವಾವುದೆಂದಡೆ: ಸತ್ವಶುದ್ಧ ರಜಸಿದ್ಧ ತಮಪ್ರಸಿದ್ಧ. ಇಂತೀ ತ್ರಿವಿಧ ಸನ್ನಹಿತನಾಗಿ ಬಸವಣ್ಣನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವಾವುದೆಂದಡೆ: ಕಾಮ ಪೂಜೆ, ಕ್ರೋಧ ಅನಿಮಿಷ, ಲೋಭ ಭಕ್ತಿ, ಮೋಹ ಅಷ್ಟವಿಧಾರ್ಚನೆ, ಮದ ಷೋಡಶೋಪಚಾರ ಮತ್ಸರ ಭವಂ ನಾಸ್ತಿ ಎಂದೆನಬಲ್ಲನಾಗಿ ಬಸವಣ್ಣನು, ಮಹಾದೇವನು ಬಸವಣ್ಣನು, ಮಹಾಲಿಂಗವು ಬಸವಣ್ಣಂಗೆ ಮತ್ತೇನು ಅಪ್ರತಿಮ ಕಾಣಾ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಬೆಳಕಿನ ಕಳೆಯಲ್ಲಿ. ನಾಗವಾಯುವ ನಿಲಿಸಿದರು ಸುಚಿತ್ತ ಸುಬುದ್ಧಿ ಸುಗೋಷಿ*ಯ ಸುಜ್ಞಾನದ ಬೆಳಗಿನ ಕಳೆಯೊಡನೆ ಸುಳಿದಾಡುವ ಮಹಾಲಿಂಗವಂತರ ಅನುಭಾವದಲ್ಲಿ. ಕೂರ್ಮವಾಯುವ ನಿಲಿಸಿದರು, ಶಿವಶ್ರುತಿ ಶಿವಮಂತ್ರ ಷಡಕ್ಷರಿ ಬೀಜಂಗಳ ಜಪಿಸುವಲ್ಲಿ. ಕೃಕರ ವಾಯುವ ನಿಲಿಸಿದರು ಚತುರ್ವಿಧ ಪುರುಷಾರ್ಥಂಗಳ ಕಳೆದು ಷಡ್ವಿಧ ದಾಸೋಹ ಭಕ್ತರತಿಯಾನಂದ ಸೂಕ್ಷ್ಮಸಂಬಂಧದ ಕೂಟದಲ್ಲಿ ತೆರಹಿಲ್ಲದ ತನ್ನ ತಾನರಿವಲ್ಲಿ. ದೇವದತ್ತವಾಯುವ ನಿಲಿಸಿದರು ಶಿವಲಿಂಗವೆ ಲಿಂಗ ಶಿವಭಕ್ತರೆ ಕುಲಜರು, ಶಿವಾಗಮವೆ ಆಗಮ, ಶಿವಾಚಾರವೆ ಆಚಾರವೆಂಬ ಏಕೋಭಾವದ ನಿಷೆ*ಯಿಂದ ಭಾಷೆಯ ನುಡಿದು ದೃಢವಿಡಿದು ಅನ್ಯವ ಜರಿವಲ್ಲಿ. ಧನಂಜಯ ವಾಯುವ ನಿಲಿಸಿದರು, ಅನಂತ ಪರಿಯಲ್ಲಿ ಧಾವತಿಗೊಂಡು ಕಾಯಕ್ಲೇಶದಿಂದ ತನು ಮನ ಬಳಲಿ ಗಳಿಸಿದಂತಹ ಧನವ ಅನರ್ಥವ ಮಾಡಿ ಕೆಡಿಸದೆ, ಲಿಂಗಾರ್ಚನೆಯ ಮಾಡಿ ಗುರುಲಿಂಗಜಂಗಮವೆಂಬ ತ್ರಿವಿಧ ದಾಸೋಹದ ಪರಿಣಾಮದಲ್ಲಿ, ಈ ದಶವಾಯುಗಳ ಪ್ರಯತ್ನಕ್ಕೆ ಧ್ಯಾನ ಗಮನ ಸಂಗ ಸುಬುದ್ಧಿ ನಿರ್ಗುಣ ತಮಂಧ ಕೋಪ ಚಿಂತೆ ಎಂಬಿವನರಿದು, ದುಶ್ಚಿತ್ತವ ಮುರಿದು, ಅಹಂಕಾರವಳಿದು, ದಶವಾಯುಗಳ ದಶಸ್ಥಾನದಲ್ಲಿ ನಿಲಿಸಿ ಭಕ್ತರಾಗಬೇಕು ಕಾಣಿರೆ, ಎಲೆ ಅಣ್ಣಗಳಿರಾ ! ಅಲ್ಲಲ್ಲಿ ಇವರ ಓತು, ಭರವ ಕೆಡಿಸಿ ತಗ್ಗಲೊತ್ತಿ, ಮೇಲೆ ತಲೆಯೆತ್ತಲೀಯದೆ ದಶವಾಯುಗಳ ದಶಸ್ಥಾನದಲ್ಲಿ [ನಿಲಿಸಿ] ದಶಾವಸ್ಥೆಯಿಂದ ಲಿಂಗವನೊಲಿಸಿದ ಮಹಾಮಹಿಮನ ಮಸ್ತಕವೆ ಶ್ರೀಪರ್ವತ, ಲಲಾಟವೆ ಕೇತಾರವೆನಿಸುವುದು. ಆತನ ಹೃದಯದಲ್ಲಿ ಅಷ್ಟಷಷ್ಟಿ ತೀರ್ಥಂಗಳಿಪ್ಪವು. ಆತನ ಶ್ರೀಪಾದ ವಾರಣಾಸಿ ಅವಿಮುಕ್ತಕ್ಷೇತ್ರದಿಂದ ವಿಶೇಷ. ಆತನ ಪಾದಾಂಗುಷ*ಕ್ಕೆ ಸಮಸ್ತ ತೀರ್ಥಕ್ಷೇತ್ರ ಸಪ್ತಸಮುದ್ರಂಗಳ ತಿರುಗಿ ಮಿಂದ ಒಂದು ಕೋಟಿ ಫಲ ಸರಿಯಲ್ಲ. ಆತನು ಸತ್ಯವೆಂಬ ವೃಕ್ಷವನೇರಿ, ನಿಷೆ*ಯೆಂಬ ಕೊನೆಯ ಹಿಡಿದು ಪರಬ್ರಹ್ಮವೆಂಬ ಫಲವ ಸುವಿವೇಕದಿಂದ ಸವಿದು ಸುಖಿಯಾಗಿರ್ಪನಾಗಿ, ಆತನು ಪುಣ್ಯಪಾಪವೆಂಬೆರಡರ ಸುಖದುಃಖದವನಲ್ಲ; ಗತಿ ಅವಗತಿಯೆಂಬೆರಡರ ಮತಿಗೇಡಿಯಲ್ಲ; ಧರ್ಮ ಕರ್ಮವೆಂಬೆರಡರ ಭ್ರಮೆಯವನಲ್ಲ; ಆತನ ನಿಲವು ಪುಷ್ಪ ನುಂಗಿದ ಪರಿಮಳದಂತೆ, ಆಲಿಕಲ್ಲು ನುಂಗಿದ ಅಪ್ಪುವಿನಂತೆ, ಅಗ್ನಿ ಆಹುತಿಗೊಂಡ ಘೃತದಂತೆ, ಕಬ್ಬುನವುಂಡ ನೀರಿನಂತೆ, ಉರಿಯುಂಡ ಕರ್ಪುರದಂತೆ ! ಆತಂಗೆ ತೋರಲೊಂದು ಪ್ರತಿಯಿಲ್ಲ, ಎಣೆಯಿಲ್ಲ. ಆತ ನಿತ್ಯ ನಿರಂಜನ ಚಿನ್ಮಯ ಚಿದ್ರೂಪ ನಿಶ್ಚಿಂತ ನಿರಾಳನಯ್ಯಾ. ಕೂಡಲಚೆನ್ನಸಂಗಮದೇವಾ, ನಿಮ್ಮ ಪ್ರಾಣಲಿಂಗ ಸಂಬಂಧಿಯ ನಿಲವು ಮಹವ ನುಂಗಿದ ಬಯಲೊ !
--------------
ಮಾರುಡಿಗೆಯ ನಾಚಯ್ಯ
ದೀಕ್ಷಾಮೂರ್ತಿರ್ಗುರುರ್ಲಿಂಗಂ ಪೂಜಾಮೂರ್ತಿಃ ಪರಶ್ಶಿವಃ | ದೀಕ್ಷಾಂ ಪೂಜಾಂ ಚ ಶಿಕ್ಷಾಂ ಚ ಸರ್ವಕರ್ತಾ ಚ ಜಂಗಮಃ || ಎಂದುದಾಗಿ, ಪಂಚಭೂತ ಅರಿಷಡ್ವರ್ಗದುರವಣೆಯ ನಿಲಿಸಿ, ಭೀತಿ ಪ್ರೀತಿ ಪ್ರೇಮ ಕಾಲೋಚಿತವನರಿದು, ಕಿಂಕಿಲನಾಗಿ, ನಿರುಪಾಧಿಕನಾಗಿ ದಾಸೋಹ ಮಾಡುವಲ್ಲಿ ಭಕ್ತನು. ಅನ್ಯದೈವ ಪರವಧು ಪರಧನವಂ ಬಿಟ್ಟು, ಇಹಪರದಲ್ಲಿಯ ಭೂಕ್ತಿ ಮುಕ್ತಿಗಳಾಶೆಇಲ್ಲದೆ, ಏಕೋನಿಷೆ* ಗಟ್ಟಿಗೊಂಡು ಮಾಹೇಶ್ವರನಾಗಿರಬೇಕು. ಕಾಯದ ಮರದಲ್ಲಿ ಇಷ್ಟಲಿಂಗಾರ್ಪಿತ. ಮನ ಮೊದಲಾದ ಕರಣಂಗಳನು ಒಂದೆ ಮುಖದಲ್ಲಿ ನಿಲಿಸಿ, ಅವಧಾನವಳವಟ್ಟ ರುಚಿಯನು ಜಿಹ್ವೆಯ ಕರದಿಂದಲರ್ಪಿಸುವಲ್ಲಿ ಪ್ರಾಣಲಿಂಗಾರ್ಪಿತ. ತಟ್ಟುವ ಮುಟ್ಟುವ ನಿರೂಪವಹ ಸರ್ವವನು ಜಾನುಮುಖದಲ್ಲಿ ಭಾವದ ಕರದಿಂದ ಲಿಂಗ ಮುಂದು ಭಾವ ಹಿಂದಾಗಿ, ತೃಪ್ತಿಲಿಂಗಕ್ಕರ್ಪಿಸುವಲ್ಲಿ ಭಾವಲಿಂಗಾರ್ಪಿತ. ಇಂತೀ ಅರ್ಪಿತತ್ರಯದ ಅನುಭಾವ ವತ್ಸಲನಾಗಿ, ಅರ್ಪಿತವನರಿತು ಅನರ್ಪಿತ ನಷ್ಟವಾದಲ್ಲಿ ಪ್ರಸಾದಿ. ಮನ ಬದ್ಧಿ ಚಿತ್ತ ಅಹಂಕಾರದ ಗುಣವಳಿದು, ಪ್ರಾಣಚೈತನ್ಯದೊಳು ವಾಯುವಿನೊಳಡಗಿದ ಪರಿಮಳದಂತೆ, ಲಿಂಗಚೈತನ್ಯ ನೆಲೆಗೊಂಡಿಪ್ಪಲ್ಲಿ ಪ್ರಾಣಲಿಂಗಿ. ಪಂಚೇಂದ್ರಿಯಂಗಳ ಸಂಚವ ನಿಲಿಸಿ, ಲಿಂಗೇಂದ್ರಿಯವೆನಿಸಿತ್ತು. ಸಪ್ತಧಾತುವಿನ ಉರವಣೆಯಂ ಮೆಟ್ಟಿ, ಪ್ರಸನ್ನ ಲಿಂಗದ ಪರಮಸುಖಕ್ಕೆ ರತಿಭೋಗದಲ್ಲಿ ಸತಿಯಾಗಿರಲು ಶರಣ. ಕಾಯಜೀವ, ಪುಣ್ಯಪಾಪ, ಇಹಪರವೆಂಬ ಭ್ರಮೆಯಳಿದು, ಮಹಾಲಿಂಗದಲ್ಲಿ ಅವಿರಳಸಂಬಂಧವಾದಲ್ಲಿ ಲಿಂಗೈಕ್ಯನು. ಈ ಷಡುಸ್ಥಲದ ಆದಿಕುಳವು ಆರಿಗೆಯೂ ಅಳವಡದು. ಘನಕ್ಕೆ ಘನವು, ಲೋಕ ಲೌಕಿಕರಿಗಸಾಧ್ಯ. ನಿಮ್ಮ ಶರಣರಿಗೆ ಸುಲಭ ಕಾಣಾ, ಮಹಾಲಿಂಗ ಕಲ್ಲೇಶ್ವರಾ. ಈ ಷಡುಸ್ಥಲಕ್ಕೆ ಒಡಲಾಗಿ, ಭಕ್ತಿಭಂಡಾರಿ ಬಸವಣ್ಣಂಗೆ ಅಳವಡಿಸಿ ಮರೆದಿರಿ.
--------------
ಹಾವಿನಹಾಳ ಕಲ್ಲಯ್ಯ
ಎನ್ನಂಗದ ಸತ್ಕಿ ್ರೀ ಸಂಗನಬಸವಣ್ಣನು ಎನ್ನ ಲಿಂಗದ ಸತ್ಕಿ ್ರೀ ಚನ್ನಬಸವಣ್ಣನು. ಎನ್ನ ಅರುಹಿನ ಸತ್ಕಿ ್ರೀ ಪ್ರಭುವೆ ನೀವು ನೋಡಾ! ಎನ್ನ ದಾಸೋಹದ ನೈಷೆ*ಯೇ ಮಡಿವಾಳಯ್ಯನು! ಇಂತೀ ಅಂಗ ಲಿಂಗ ಜ್ಞಾನ ದಾಸೋಹ ಇವು ಮುಂತಾದವೆಲ್ಲವೂ ನಿಮ್ಮ ಪುರಾತನರಾದ ಕಾರಣ ಚಂದೇಶ್ವರಲಿಂಗದಲ್ಲಿ ಚನ್ನಬಸವಣ್ಣನ ಕೃಪೆಯಿಂದ ನಿಮ್ಮ ಶ್ರೀಪಾದವ ಬೆರಸಿದೆನಯ್ಯಾ ಪ್ರಭುವೇ!
--------------
ನುಲಿಯ ಚಂದಯ್ಯ
ಇನ್ನಷ್ಟು ... -->