ಅಥವಾ

ಒಟ್ಟು 292 ಕಡೆಗಳಲ್ಲಿ , 44 ವಚನಕಾರರು , 242 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧ್ಯ ಸಾಧಕರಿಲ್ಲದಂದು, ಪೂಜ್ಯ ಪೂಜಕರಿಲ್ಲದಂದು, ದೇವ ಭಕ್ತನೆಂಬ ನಾಮ ತಲೆದೋರದಂದು, ಉಪಾಸ್ಯ ಉಪಾಸಕರಿಲ್ಲದಂದು, ಅಂಗಸ್ಥಲ ಲಿಂಗಸ್ಥಲವಾಗದಂದು, ನಿನ್ನ, ನಿಃಕಲ ಶಿವತತ್ವವೆಂದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮಿಂಚುಬುಳು ಒಮ್ಮೆ ಪ್ರಚಂಡ ತೇಜೋಮಯ ಸೂರ್ಯಂಗೆ ಸರಿಯಾದಂದು, ಹರಿ ಹರಂಗೆ ಸರಿಯಹನು. ಕಹಿಬೇವಿನ ಕೊರಡು ಬಾವನ್ನ ಶ್ರೀಗಂಧಕ್ಕೆ ಸರಿಯಾದಂದು, ವಿರಿಂಚಿ ಗಿರೀಶಂಗೆ ಸರಿಯಹನು. ಅಜ್ಞಾನ ಸುಜ್ಞಾನಕ್ಕೆ ಸರಿಯಾದಂದು, ವಜ್ರಪಾಣಿ ಮೊದಲಾದ ದೇವ ದಾನವ ಮಾನವರು ಶೂಲಪಾಣಿಗೆ ಸರಿಯಹರು. ಏನ ಹೇಳುವೆ, ಅಜ್ಞಾನಿ ಜನರ ಅಜ್ಞಾನಪ್ರಬಲ ಚೇಷ್ಟೆಯನು ? ಅದೆಂತೆಂದಡೆ: ಖದ್ಯೋತೋಯದಿ ಚಂಡಭಾನು ಸದೃಶಸ್ತುತ್ಯೋ ಹರಿಃ ಶಂಭುನಾ ಕಿಂ ಕಾಷ್ಠಂ ಹರಿಚಂದನೇನ ಸದೃಶಂ ತುಲ್ಯೋಹಮೀಶೇನ ಚ | ಅಜ್ಞಾನಂ ಯದಿ ವೇದನೇನ ಸದೃಶಂ ದೇವೇನ ತುಲ್ಯೋ ಜನಾ ಕಿಂ ವಕ್ಷ್ಯೇ ಸುರಪುಂಗವಾ ಅಹಮಹೋಮೋಹಸ್ಯದುಶ್ಚೇಷ್ಟಿತಂ ನಿಮಗೆ ಸರಿಯೆಂಬವರಿಗೆ ನರಕವೆ ಗತಿಯಯ್ಯಾ, ಬಸವಪ್ರಿಯ ಕೂಡಲಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಕಾಶಿಯಲ್ಲಿಪ್ಪ ಈಶನನರಿಯದ ಮೂವರ ಕೊರಳು ಕೈಗಳು ಮುರಿದು ಬಿದ್ದವು. ಕೈಲಾಸದಲ್ಲಿಪ್ಪ ಈಶನನರಿಯದ ಮೂವರ ದೇಹ ಕಾಲು ಕೈಗಳು ಮುರಿದುಬಿದ್ದವು. ಶ್ರೀಶೈಲದಲ್ಲಿಪ್ಪ ಈಶನನರಿಯದ ಮೂವರ ದೇಹ ಕರುಳು ತೊಗಲುಗಳು ಉದುರಿಬಿದ್ದವು. ಸಮುದ್ರದಲ್ಲಿಪ್ಪ ಈಶನನರಿಯದಿಬ್ಬರು ಒಬ್ಬರ ಹೊಟ್ಟೆಯ ಒಬ್ಬರು ಹೊಕ್ಕು ಬಿದ್ದರು. ಇಂತೀ ದೇವ ದಾನವ ಮಾನವರು ಮೊದಲಾದ ಸಕಲರೂ ಮಹಾದಾನಿ ಸೊಡ್ಡಳನನರಿಯದೆ ತರ್ಕಿಸಿ, ಕೆಟ್ಟುಹೋದರು.
--------------
ಸೊಡ್ಡಳ ಬಾಚರಸ
ಶಿವನ ಕಾಯವೇ ಭಕ್ತ, ಭಕ್ತನ ಕಾಯವೇ ಶಿವ. ಶಿವನ ಚೈತನ್ಯವೇ ಭಕ್ತ, ಭಕ್ತನ ಚೈತನ್ಯವೇ ಶಿವನು ನೋಡಾ. ಭಕ್ತನ ಮನ ಭಾವ ಕರಣಂಗಳೇ ಭಕ್ತನು ನೋಡಾ. ಇದು ಕಾರಣ. ಶಿವನೇ ಭಕ್ತನು; ಭಕ್ತನೇ ಶಿವನು. ದೇವ ಭಕ್ತನೆಂಬ ಅಂತರವೆಲ್ಲಿಯದೋ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದೇವ ದೇವ ಮಹಾಪ್ರಸಾದ ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ ಬ್ಥಿನ್ನಭಾವವುಂಟೆ ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ, ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು, ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ದೇವರಾಜ್ಯದಲ್ಲಿ, ಧಾರೆಯ ಭೋಜನ ಅರಮನೆಯ ಓಲಗದೊಳಗೆ ಹೊಂಪುಳಿವರಿವುತ್ತ ನಾಲ್ಕೂದಿಕ್ಕಿನಲ್ಲಿ ನಾಲ್ವರ ಫಣಿಯ ಬೆಳಗು. ಜಾಣಭಾಷೆಯಲ್ಲಿ ಮಧ್ಯದಲೊಬ್ಬಳು, ಆಣತಿಯ ಸರವು. ಮಹಾದೇವಿ ಗಾಂಧಾರಿಯನು ತೋರಿ, ಒದವಿಸಿದ ಮಧುಮಾಧವಿಯನು ಭೋಜ ಗದ್ಯವನೋದಲು, ಶಿವನು ಕೇಳುತ್ತಿರೆ ಬಾಣಸಿಗ ಹಡಪದವನೆ ಬಲ್ಲನು ಕಾಣಾ. ಕೊಂಕಿಲ್ಲದೆ ಶಬುದ ರಸಭೇದವನು ರಾಣಿ ಬಲ್ಲಳು. ಕುಮುದ ಪಾತ್ರವಿಧಾಂತ ಮಾವಟಿಗ ಭೇದವನು ಮೇಲೆ ಅಂಗರಿಕನು ದೀವಟಿಗೆ ಧಾರೆವಟ್ಟದ ಜಾಣನು ಅಲ್ಲಿ ಚಂಬಕನ ಕಹಳೆ ಭೋರೆಂದು ಬಾರಿಸಿ ಪ್ರತಾಪದ ಕದಳಿಗೆ ಎದೆ ದಲ್ಲಣ. ಆರುಬಣ್ಣದ ವಸ್ತುವ ಮೂರು ಬಣ್ಣಕ್ಕೆ ತಂದು, ಕೇವಣಿಸಿದನು ಕಮಠ ಸುರಥ ಕವಾಹಾರದಾರದ ಖೂಳರ ನಾಲ್ವರ ಬಯಕೆಯನು, ದೇವ ಬಳ್ಳೇಶ್ವರನ ಕನ್ನಡ ವಿಪರೀತ.
--------------
ಬಳ್ಳೇಶ ಮಲ್ಲಯ್ಯ
ಕಲ್ಲದೇವರು ದೇವರಲ್ಲ, ಮಣ್ಣದೇವರು ದೇವರಲ್ಲ , ಮರದೇವರು ದೇವರಲ್ಲ, ಪಂಚಲೋಹದಲ್ಲಿ ಮಾಡಿದ ದೇವರು ದೇವರಲ್ಲ, ಸೇತುರಾಮೇಶ್ವರ, ಗೋಕರ್ಣ, ಕಾಶಿ, ಕೇದಾರ ಮೊದಲಾಗಿ ಅಷ್ಟಾಷಷ್ಠಿಕೋಟಿ ಪುಣ್ಯಕ್ಷೇತ್ರಂಗಳಲ್ಲಿಹ ದೇವರು ದೇವರಲ್ಲ. ತನ್ನ ತಾನರಿದು ತಾನಾರೆಂದು ತಿಳಿದಡೆ ತಾನೇ ದೇವ ನೋಡಾ, ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗಸಂಗದಲ್ಲಿ ಲಿಂಗಸಂಗಿಯಾದೆನು. ಲಿಂಗಸಂಗದಲ್ಲಿ ಅಂಗಸಂಗಿಯಾದೆನು. ಉಭಯಸಂಗವನೂ ಅರಿಯದೆ ಪರಿಣಾಮಿಯಾದೆನು. ನುಡಿಯ ಗಡಣವ ಮರೆದು ತೆರಹಿಲ್ಲದಿದ್ದೆನು. ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಬೆರಸಿದ ಬಳಿಕ ಎನ್ನ ನಾನು ಏನೆಂದೂ ಅರಿಯೆನಯ್ಯಾ.
--------------
ಅಕ್ಕಮಹಾದೇವಿ
ತುಂಬಿ ಬಂದಡೆ ಪರಿಮಳ ಓಡಿತ್ತ ಕಂಡೆ ! ಇದೇನು ಸೋಜಿಗ ಹೇಳಾ ? ಮನ ಬಂದಡೆ ಬುದ್ಧಿ ಓಡಿತ್ತ ಕಂಡೆ, ದೇವ ಬಂದಡೆ ದೇಗುಲ ಓಡಿತ್ತ ಕಂಡೆ_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ದೇವರ ನಿರೂಪದಿಂದ ದೇವಿಯ ಸಂಗವ ಮಾಡಿ ಸದಮಲ ಬೆಳಗಿನೊಳು ನಿಂದು, ದೇವಿ ದೇವ ಅನಾದಿ ಪ್ರಸಿದ್ಧನ ಆಚರಿಸುತಿಪ್ಪ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಜಯಜಯ ಪರಮೇಶ ಪರಬ್ರಹ್ಮ ಜಯಜಯ ನಿತ್ಯಾನಂದ ಪದ : ಹರಿಯಜಸುರರೊಂದ್ಯ ಜಯಜಯ ಗಿರಿಸುತೆಪ್ರಾಣೇಶ ಜಯಜಯ ಪರಮುನಿಗಳಾತ್ಮ ಜಯಜಯ ಪರಂಜ್ಯೋತಿರ್ಲಿಂಗ ಜಯಜಯ ತರಣಿಕೋಟಿತೇಜ ಜಯಜಯ ಉರಗಾಭರಣಭವ ಜಯಜಯ ಕರುಣರಸಸಿಂಧು ಜಯಜಯ ಮುರಹರ ಮೃತರಹಿತ ಜಯಜಯ || 1 || ತ್ರಿಪುರಸಂಹರ ನಿತ್ಯ ಜಯಜಯ ಅಪರಂಪಾರಮೂರ್ತಿ ಜಯಜಯ ಕೃಪತ್ರೈಲೋಕೇಶ ಜಯಜಯ ಉಪಮೆರಹಿತಪುಣ್ಯ ಜಯಜಯ ಜಪತಪಕೊಲಿವಾತ ಜಯಜಯ ಅಪಹರಿ ಶಿಖೆಯೊಳಿಟ್ಟ ಜಯಜಯ ವಿಪಿನಕಾಷ್ಠಾರಿನೇತ್ರ ಜಯಜಯ ನಿಪುಣ ನಿರ್ಗುಣ ಶಂಭು ಜಯಜಯ || 2 || ಮಾರಾರಿ ಮದಚರ್ಮ ಜಯಜಯ ಮೂರುನೇತ್ರದ ಭವ ಜಯಜಯ ಈರೇಳು ಭುವನಾತ್ಮಜ ಜಯಜಯ ವಾರಿಜ ಅರಿಭೂಷ ಜಯಜಯ ಮೇರುವಿಗಣಪೂಜ್ಯ ಜಯಜಯ ಪೂರಿತ ಪುಣ್ಯಾಂಗ ಜಯಜಯ ಧಾರುಣಿ ದಯಪಾಲ ಜಯಜಯ ಕರುಣಿ ಚಿನ್ಮಯ ಜಯಜಯ || 3 || ನಂದಿವಾಹನ ನಿತ್ಯ ಜಯಜಯ ಅಂಧಕಾಸುರವೈರಿ ಜಯಜಯ ಕಂದುಗೊರಳ ಶಿವನೆ ಜಯಜಯ ಸಂದ ಕುಣಪಶೂಲ ಜಯಜಯ ಕಂದಗೆ ವರವಿತ್ತ ಜಯಜಯ ಗಂಧರ್ವರಿಗೊಲಿದೆ ಜಯಜಯ ಇಂದ್ರಪೂಜಿತಲಿಂಗ ಜಯಜಯ ತಂದೆತಾಯಿಲ್ಲದ ಮೋನ ಜಯಜಯ || 4 || ಭವರೋಗಕ್ಕೆ ವೈದ್ಯ ಜಯಜಯ ಶಿವ ವಿಶ್ವಕುಟುಂಬಿ ಜಯಜಯ ಜವನ ಸಂಹರ ಅಮಲ ಜಯಜಯ ಪವಿತ್ರಸ್ವರೂಪಕಾಯ ಜಯಜಯ ಭುವನ ಸರ್ವಕೆ ದೇವ ಜಯಜಯ ಕುವರ ಹಂಪನ ಪ್ರಾಣ ಜಯಜಯ ದೇವ ಗುರುಸಿದ್ಧಮಲ್ಲ ಜಯಜಯ ಕವಿವ ದುರಿತಹರ ಜಯಜಯ
--------------
ಹೇಮಗಲ್ಲ ಹಂಪ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಹಲವು ಲೀಲೆಯೊಳಗೆ ಗುರುಶಿಷ್ಯ ಎರಡಾದ ವಿನೋದವೇನೆಂಬೆ ? ಎನ್ನ ಶ್ರೀಗುರು ಬಸವೇಶ್ವರನು ಎನ್ನ ಶಿಕ್ಷಿಸಿ ದೀಕ್ಷೆಯನೆಸಗಿ ಮೋಕ್ಷದಖಣಿಯಮೂರ್ತಿಯತಂದು, ತನ್ನ ಗುರು ತನ್ನ ಗುರ್ತವ ತೋರಿದಾ. ಆ ಗುರ್ತವ ಎನ್ನ ಕೈಯಲ್ಲಿಟ್ಟು ಈ ಮಹಾಂತನ ಪೂಜಿಸಿ ಮುಕ್ತಿಯ ಪಡಿಯೆಂದು ನಿರೂಪಿಸಲು, ಆ ಗುರುನಿರೂಪವ ಕೈಕೊಂಡು ಮಹಾಂತನ ಮುಂದಿಟ್ಟುಕೊಂಡು ಈ ಮಹಾಂತ ಎನ್ನ ಗುರುವಿನಗುರು ಎನಗೆ ಪರಮಾರಾಧ್ಯ ತಾ ಲಿಂಗವಾಗಿ ಬಂದಕಾರಣವೇನೆಂದು ತನ್ನೊಳಗೆ ತಾನೆ ವಿಚಾರಿಸಲು, ಅಲ್ಲಿ ಹೊಳೆದುದು ನೀನು ನನಗೆ ಪರಮಾರಾಧ್ಯ, ಒಂದೇ ಲಿಂಗವೇ ಹಲವರಾಗಿ ತೋರಿದಿರಿ. ಅದೆಂತೆಂದಡೆ : ಗುರು ಲಿಂಗ ಜಂಗಮ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿಯಮಂತ್ರ ಮತ್ತು ಶಿಕ್ಷಾಗುರು ದೀಕ್ಷಾಗುರು ಮೋಕ್ಷಾಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಮಹಾಂತದೇವರ ದೇವ ನೀನೇ ಆದಿ. ನೀವು ಹೀಂಗಾದ ಪರಿಯೆಂತೆಂದಡೆ : ಮೊದಲೇ ಶಿಕ್ಷಾಗುರು ಶಿಖಾಮಣಿಸ್ವಾಮಿಯೆನಿಸಿದಿರಿ, ದೀಕ್ಷಾಗುರು ಗುರುಬಸವಸ್ವಾಮಿಯೆನಿಸಿದಿರಿ, ಮೋಕ್ಷಾಗುರು ಶ್ರೀಮನ್‍ಮಹಾಮುರಘೆಯಸ್ವಾಮಿಗಳ ಚರಮೂರ್ತಿ ಸಿರಿವಾಸ ಚನ್ನಬಸವೇಶ್ವರರೆನಿಸಿದಿರಿ. ಗುರುವಿನಗುರು ಹಳಪ್ಯಾಟಿ ಬಸವಯ್ಯನೆನಿಸಿದಿರಿ. ಪರಮಗುರು ಭಂಗೀಪರ್ವತದೇವರೆನಿಸಿದಿರಿ. ಪರಮಾರಾಧ್ಯ ಗೊಬ್ಬೂರ ಸದಾಶಿವದೇವರೆನಿಸಿದಿರಿ. ಸರ್ವದೇವರು ಮಹೇಶ್ವರರು ಎನಗೆ ಮಹಾಮಹಾಂತನೆನಿಸಿದಿರಿ. ಎನ್ನ ದೇವರದೇವ ಸರ್ವವು ನೀನೇ ಆಗಿರ್ದು, ನೀನು ಒಂದೇ ಪರಮಾರಾಧ್ಯರೆನಲುಂಟೆ ? ಒಂದೇ ನೀ ಎನಗೆ ಲಿಂಗವಾದನೆನಲುಂಟೆ ? ಲಿಂಗವಾದಾತನು ನೀನೆ, ಪರಮಾರಾಧ್ಯನಾದಾತನು ನೀನೆ, ಗುರುವಾದಾತನು ನೀನೆ, ಅರುವಾದಾತನು ನೀನೆ, ನೀನಲ್ಲದೆ ಮತ್ತೊಂದು ಬ್ಯಾರೆ ಭಾವಿಸಲುಂಟೆ ? ಎನ್ನ ಹುಟ್ಟಿಸಿದ ಮಹಾಂತನು ನೀನೆ, ಎನ್ನ ಬೆಳಸಿದ ಶರಣಬಸವಪ್ಪನು ನೀನೆ ಎನ್ನ ಮನ್ನಿಸಿದ ಘನಸಿದ್ದಪ್ಪನು ನೀನೆ, ಎನ್ನ ನಿಂದಿಸಿದ ಹಳಪ್ಯಾಟಿ ಬಸಯ್ಯನು ನೀನೆ, ಉಣಿಸುವ ಉಡಿಸುವ ಹಾಸುವ ಹೊಚ್ಚುವ ಮುಚ್ಚುವ ಚುಚ್ಚುವ ಹಳಿವ ಮುಳಿವ ಸರ್ವವೂ ಎನಗೆ ನೀನಲ್ಲದೆ ಮತ್ತೊಬ್ಬರಿಲ್ಲ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->