ಅಥವಾ

ಒಟ್ಟು 25 ಕಡೆಗಳಲ್ಲಿ , 16 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತನಾಗಿ ಹುಟ್ಟಿ ಮತ್ತೊಬ್ಬರಲ್ಲಿ ಬೇಡುವುದೆ ಕಷ್ಟ. ಹೊತ್ತು ಹೋರಿ ಭೂಮಿಯ ಅಗೆವಲ್ಲಿ ಮೊತ್ತದ ಜೀವಂಗಳು ಸತ್ತುದ ದೃಷ್ಟವ ಕಂಡಲ್ಲಿಯೆ ಮಾಡುವ ಮಾಟ ನಷ್ಟ. ಇದನರಿತು ವಿರಕ್ತರಾಗಿ ಹೋದಲ್ಲಿ, ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಚಿತ್ತ ಕಲಕುವದು ಕಷ್ಟ. ಈ ಹೊತ್ತ ದೇಹಕ್ಕೆ ನಗೆಯ ಚಿತ್ತದ ಕಾಯಕ, ಇದನೊಪ್ಪುಗೊ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಅಯ್ಯಾ, ಏನೂ ಇಲ್ಲದ ಬಯಲ ದೇಹಕ್ಕೆ ತಾಮಸವ ಮುಂದುಮಾಡಿ, ಹೀಗೆ ಕೆಟ್ಟಿತ್ತಲ್ಲಾ ಜಗವೆಲ್ಲ. ಅದೇನು ಕಾರಣವೆಂದಡೆ, ಸುಖದ ಮುಖ ಕಂಡಿತ್ತು; ಜಗದ ರಚನೆಯ ನೋಡಿತ್ತು; ಇಚ್ಫೆಯ ಮೆಚ್ಚಿತ್ತು; ಮನವ ನಿಶ್ಚಯವ ಮಾಡದು; ಅಂಗಸುಖವ ಬಯಸಿತ್ತು; ಕಂಗಳ ಕಾಮವನೆ ಮುಂದುಮಾಡಿತ್ತು ಇದರಿಂದ ಲಿಂಗವ ಮರೆಯಿತ್ತು; ಜಂಗಮವ ತೊರೆಯಿತ್ತು. ಇದು ಕಾರಣದಿಂದ ಜಗದ ಮನುಜರು ಭವಬಂಧನಕ್ಕೊಳಗಾದರು. ಇವೆಲ್ಲವನು ಹಿಂಗಿಸಿ, ನಮ್ಮ ಶಿವಶರಣರು ಲಿಂಗದಲ್ಲಿಯೆ ಬೆರೆದರು. ಜಂಗಮಪ್ರಾಣವೆಂದು ಪಾದೋದಕ ಪ್ರಸಾದವ ಕೊಂಡು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಇಂತಪ್ಪ ಪ್ರಣವಪಂಚಾಕ್ಷರಿ ಮಂತ್ರವನು ಸಾಯದಕಿನ್ನ ಮುನ್ನವೆ ಸುಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಹಡದು ಸರ್ವಾಂಗದಲ್ಲಿ ಪ್ರಣವ ಮಂತ್ರವನು ಸಂಬಂಧಿಸಿಕೊಳ್ಳಬೇಕಲ್ಲದೆ, ಸತ್ತ ಶವಕ್ಕೆ ಭುಜಪತ್ರದ ಮೇಲೆ ಪ್ರಣಮವ ಬರದು ಆ ದೇಹಕ್ಕೆ ಹಚ್ಚಿದರೆ ಆ ದೇಹವು ಮಂತ್ರದೇಹವಾಗಬಲ್ಲದೆ? ಆಗಲರಿಯದು. ಅದೆಂತೆಂದಡೆ: ಚಿತ್ರಕನು ಕಾಗದದ ಮೇಲೊಂದು ಚಿತ್ರವ ಬರೆದು ಗೋಡೆಗೆ ಹಚ್ಚಿದರೆ ಆ ಗೋಡೆಯು ಚಿತ್ರವಾಗಲರಿಯದು ಎಂಬ ಹಾಗೆ. ಉಭಯವು ಒಂದೇ ಆದ ಕಾರಣ; ಅಂತಪ್ಪ ಮೂಢಾತ್ಮರ ಮೇಳಾಪವ ವಿಸರ್ಜಿಸಿದ ಶಿವಶರಣನು ದೇಹದಲ್ಲಿರುವ ಪರಿಯಂತರದಲ್ಲಿ ಶ್ರೀಗುರುಕಾರುಣ್ಯವ ಹಡದು ಸರ್ವಾಂಗದಲ್ಲಿ ಪ್ರಣವಮಂತ್ರವನು ಮುಳ್ಳೂರಲಿಕ್ಕೆ ಇಂಬಿಲ್ಲದ ಹಾಗೆ ಸ್ವಾಯತವ ಮಾಡಿಕೊಂಡು ಆ ಮಂತ್ರದಲ್ಲಿ ಲೀಯವಾಗಿ ಪ್ರಪಂಚವನಾಚರಿಸುತ್ತಿರ್ದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
[ನಂಬಿಯಣ್ಣ] ಮಾಡುವ ಭಕ್ತಿ ನಾಡೆಲ್ಲ ಮಾಡಬಹುದಯ್ಯಾ, ಕುಂಬಾರ ಗುಂಡಯ್ಯ ಮಾಡುವ ಭಕ್ತಿ ಊರೆಲ್ಲ ಮಾಡಬಹುದಯ್ಯಾ, ಬಸವಣ್ಣ ಮಾಡುವ ಭಕ್ತಿ ಶಿಶುವೆಲ್ಲ ಮಾಡಬಹುದಯ್ಯಾ, ಇದೇನು ದೊಡ್ಡಿತ್ತೆಂಬರು. ಸರ್ವರಿಗೆ ವಶವಾಗದ ಭಕ್ತಿ ಅವರ ಮನ-ಜ್ಞಾನದಂತೆ ಇರಲಿ ಶರಣಾರ್ಥಿ. ಈ ಸುಧೆಯೊಳಗೆ ಶುದ್ಧಭಕ್ತಿಯನರಿತು ನಡೆದುದು ಬಟ್ಟೆಯಾಗದೆ? ನುಡಿದುದು ಸಿದ್ಧಿಯಾಗದೆ? ದೇಹಕ್ಕೆ ಕಷ್ಟ-ನಷ್ಟ, ರೋಗ-ರುಜೆಗಳು ಬಂದು ಅಟ್ಟಿ ಮುಟ್ಟಿದವಾಗಿ, ದೃಢವಾಗಿದ್ದು ಶರಣನ ಮನವು ನಿಶ್ಚಯಿಸಿ, ದೃಢಶೀಲಂಗಳಂ ಬಿಡದೆ ನಡೆವಾತ ದೊಡ್ಡ ಭಕ್ತನೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಲಿಂಗಜಂಗಮ ಒಂದೆಂದರಿಯದೆ ಲಿಂಗಜಂಗಮವ ಭಿನ್ನವಿಟ್ಟು ಅರ್ಚಿಸುವರು. ಅದೆಂತೆಂದಡೆ: ದೇಹಕ್ಕೆ ಪ್ರಾಣಕ್ಕೆ ಭೇದ ಉಂಟೆ? ಬೀಜ ವೃಕ್ಷಕ್ಕೆ ಭೇದವುಂಟೆ? ಜ್ಯೋತಿ ಪ್ರಭೆಗೆ ಭೇದ ಉಂಟೆ? ಹಾಗೆ ಲಿಂಗಜಂಗಮಕ್ಕೆ ಭೇದವಿಲ್ಲ. ಅದೇನು ಕಾರಣವೆಂದಡೆ: ಲಿಂಗವೇ ಅಂಗ, ಜಂಗಮವೇ ಪ್ರಾಣ. ಲಿಂಗವೇ ಬೀಜ, ಜಂಗಮವೇ ವೃಕ್ಷ. ಲಿಂಗವೇ ಜ್ಯೋತಿ, ಜಂಗಮವೇ ಪ್ರಕಾಶ. ಇಂತೀ ನಿರ್ಣಯವ ತಿಳಿದರೆ ಪ್ರಾಣಲಿಂಗಿ, ತಿಳಿಯದಿದ್ದರೆ ಜಡಲಿಂಗಿಗಳೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ, ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ. ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು, ಇನ್ನೆಂದಿಂಗೆ ಮೋಕ್ಷವಹುದೊ ಕೂಡಲಸಂಗಮದೇವಾ 9
--------------
ಬಸವಣ್ಣ
ಅಯ್ಯ, ಸ್ಥೂಲದೇಹದ ಸುಖದಲ್ಲಿ ಹೊದ್ದಿದವರು ಸೂಕರನ ಹಾಂಗೆ. ಸೂಕ್ಷ್ಮದೇಹದ [ಸುಖ]ದಲ್ಲಿ ಹೊದ್ದಿದವರು ಮದಗಜದಂತೆ. ಕಾರಣ ದೇಹದ ಸುಖದಲ್ಲಿ ಹೊದ್ದಿದವರು ರಾಜಹಂಸನ ಹಾಂಗೆ. ಅದೆಂತೆಂದಡೆ: ಸ್ಥೂಲದೇಹವೆಂದಡೆ ಸಪ್ತಧಾತುಯುಕ್ತವಾದ ಪಂಚವಿಂಶತಿತತ್ತ್ವ ಸ್ವರೂಪು, ಆ ದೇಹಕ್ಕೆ ಬಿಂದು ಮಾತ್ರ ಸುಖ ಪರ್ವತದಷ್ಟು ದುಃಖ ನೋಡಾ. ಸೂಕ್ಷ್ಮದೇಹವೆಂದಡೆ:ಪಂಚರಸಾಮೃತಸ್ವರೂಪವಾದ ಕರಣಂಗಳು. ಆ ದೇಹಕ್ಕೆ ಬಿಂದು ಮಾತ್ರ ದುಃಖವು, ಪರ್ವತದಷ್ಟು ಸುಖ ನೋಡಾ. ದಶವಿಧತತ್ತ್ವಸ್ವರೂಪವಾದ ಕಾರಣದೇಹವೆಂದಡೆ: ಅನಂತನಾದಸ್ವರೂಪವಾದ ಏಕತತ್ತ್ವವನ್ನುಳ್ಳ ಆತ್ಮನೆ ಕಾರಣದೇಹ, [Àಅದು] ದಿವ್ಯ ಸುಧಾರಸಾಮೃತಸ್ವರೂಪವಾದ ಮಹಾಸದ್ಗಂಧದ ಪರಿಮಳದಂತಿಪ್ಪುದು ನೋಡಾ. ಆ ದೇಹಕ್ಕೆ ಅಣುಮಾತ್ರ ದುಃಖವಿಲ್ಲದ ಸುಖವುಂಟು ನೋಡಾ, ಲಿಂಗಸಂಗಿಯಾದ ಕಾರಣ. ಇಂತಪ್ಪ ಲಿಂಗಸಂಗದಿಂದ ಅಖಂಡಸುಖಿ ತಾನಾಗಬೇಕಾದಡೆ ಪಿಂಡಾದಿ ಜ್ಞಾನಶೂನ್ಯಾಂತಮಾದ ನೂರೊಂದು ಸ್ಥಳ_ಕುಳವ ಕರತಳಾಮಳಕವಾಗಿ ತಿಳಿದು, ಮೇಲಾದ ಜ್ಞಾನಶೂನ್ಯಸ್ಥಲದಲ್ಲಿ ನಿಂದು, ಪಿಂಡಾದಿ ಜ್ಞಾನ ಗುರುಕರುಣ ಸ್ಥಲಂಗಳೆಂಬ ಮಾರ್ಗವು ತಪ್ಪದೆ ನಡೆ_ನುಡಿ ಸಂಪನ್ನರಾಗಿ ನಿಜಾಚರಣೆಯಲ್ಲಿ ನಿಂದು ಅರು ವೈರಿ ಅಷ್ಟಮದ [ಸಪ್ತ]ವ್ಯಸನವೆಂಬ ಮಾಯಾಪಾಶಪರ್ವತಕ್ಕೆ ವಜ್ರಾಯುಧವಾಗಿ ನಿಂದರು ನೋಡಾ ನಮ್ಮ ಶರಣಗಣಂಗಳು. ಇಂತು_ಕಾರಣಸ್ವರೂಪವಾದ ಚಿದ್ಘನಲಿಂಗ ನಡೆ_ನುಡಿ_ಸ್ಥಳ_ಕುಳದನುಭಾವ ಸುಖವ ಪಡೆಯದ ಶೈವ ಜಡಕರ್ಮಿಗಳೆಲ್ಲ, ಅರುವೈರಿ ಅಷ್ಟಮದ ಸಪ್ತವ್ಯಸನವೆಂಬ ಮಾಯಾಪಾಶ ಕಾಲ ಕಾಮರ ಬಾಧೆಗೊಳಗಾಗಿ ಗುಹೇಶ್ವರಲಿಂಗದ ಶರಣರ ಮಾರ್ಗವನರಿಯದೆ [ಕೆಟ್ಟರು]. ಕೆಟ್ಟಿತೀ ಲೋಕ ನೋಡಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಐದು ತತ್ತ್ವಂಗಳಿಂದಾದ ದೇಹಕ್ಕೆ ರೋಗರುಜೆಯಹುದೆ ? ಕಾಯತತ್ವಂಗಳ ಗೊತ್ತಿನಲ್ಲಿ ನಿಂದು, ಅವರವರ ಚಿಕಿತ್ಸೆಯಲ್ಲಿ ಹೊತ್ತು ನಿತ್ತರಿಸುವುದೆ ಕ್ರಮ. ಅದೆಂತೆಂದಡೆ : ಭಕ್ತಿನಿಷೆ* , ವಿಶ್ವಾಸನಿಷೆ*, ಜ್ಞಾನನಿಷೆ*. ಇಂತಿ ಸದ್ಭಾವ ನೆಲೆಗೊಳ್ಳದ ಕಾರಣ, ತನುವಿಂಗೆ ಅನುಪಾನವ ಪಾನವ ಮಾಡಬೇಕು. ಮೇಲೆ ಅರಿದಡೆ, ಮನವು ಮನದಲ್ಲಿ ನಿಲಬೇಕು. ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನೊಡಗೂಡಬೇಕು.
--------------
ವೈದ್ಯ ಸಂಗಣ್ಣ
ಅಚ್ಚಪ್ರಸಾದಿಗಳೆಂದು ಹೆಸರಿಟ್ಟುಕೊಂಡು ಪ್ರಸಾದಿಗಳ ಕಂಡರೆ ಅಗಲನೆಲ್ಲವ ನೀರಿನಿಂದ ತೊಳೆತೊಳೆದು ಮುಸುರಿಗೆ ಬಿಟ್ಟ ಎಮ್ಮಿಯಂತೆ ಕುಡಿದು, ಆಯತಮಾಡಿ ಅಗಲನೆಲ್ಲವ ನೆಕ್ಕಿ ನೀರ ತೊಂಬಲವೆಲ್ಲ ತೆಗೆವರು. ಆರೂ ಇಲ್ಲದ ವೇಳೆಯಲ್ಲಿ ರಣಬೀರರಂತೆ ಕೂಳ ತಿಂದು ಚಲ್ಲಾಡಿ, ತುದಿಹಸ್ತವ ತೊಳೆದು ಹೋಗುವವರಿಗೆ ಅಚ್ಚಪ್ರಸಾದವೆಲ್ಲಿಹುದಯ್ಯ ? ದೇಹಕ್ಕೆ ವ್ಯಾಧಿ ಸಂಘಟಿಸಿದಲ್ಲಿ ತನ್ನ ಖಬರು ತನಗೆ ವಿಸ್ಮøತಿಯಾಗಲು ಆ ವೇಳೆಯಲ್ಲಿ ಅನ್ನ ಉದಕವ ಆರು ನೀಡಿದಡೆಯೂ ಜೀವನ ಕಕಲಾತಿಗೆ ತಾ ಮಲಗಿರ್ದ ಹಾಸಿಗೆಯಲ್ಲಿ ಏಳದೆ ಮಲಗಿರ್ದಲ್ಲಿ ಅನ್ನ ಉದಕವ ತಿಂಬುವವರಿಗೆ ಎಲ್ಲಿಹುದಯ್ಯ ಅಚ್ಚಪ್ರಸಾದ ? ಇಂತಪ್ಪ ವ್ರತಭ್ರಷ್ಟ ಸೂಳೆಯಮಕ್ಕಳು ನುಚ್ಚಬಡಕರಲ್ಲದೆ ಇವರು ಅಚ್ಚಪ್ರಸಾದಿಗಳಾಗಬಲ್ಲರೆ ? ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸಮಾಧಿ ಸಮಾಧಿ ಎಂಬರಯ್ಯಾ, ಸಮಾಧಿಯ ಬಗೆಯ ಪೇಳ್ವೆ. ಅದೆಂತೆಂದಡೆ: ಪಂಚಭೂತಮಿಶ್ರವಾದ ದೇಹವೆಂಬುವುದೆ ಸಮಾಧಿ. ಅಂತಪ್ಪ ದೇಹದ ಪೃಥ್ವಿತತ್ವದಲ್ಲಿ ನಕಾರಪ್ರಣವ ಸ್ವಾಯತ. ಅಪ್ಪುತತ್ವದಲ್ಲಿ ಮಕಾರಪ್ರಣವ ಸ್ವಾಯತ. ತೇಜತತ್ವದಲ್ಲಿ ಶಿಕಾರಪ್ರಣವ ಸ್ವಾಯತ. ವಾಯುತತ್ವದಲ್ಲಿ ವಕಾರಪ್ರಣವ ಸ್ವಾಯತ. ಆಕಾಶತತ್ವದಲ್ಲಿ ಯಕಾರಪ್ರಣವ ಸ್ವಾಯತ. ಆತ್ಮದಲ್ಲಿ ಓಂಕಾರಪ್ರಣವ ಸ್ವಾಯತ. ಮತ್ತಂ, ಬಲಪಾದದಲ್ಲಿ ನಕಾರ, ಎಡಪಾದದಲ್ಲಿ ಮಕಾರ, ಮಧ್ಯನಾಭಿಸ್ಥಾನದಲ್ಲಿ ಶಿಕಾರ, ಬಲಹಸ್ತದಲ್ಲಿ ವಕಾರ, ಎಡಹಸ್ತದಲ್ಲಿ ಯಕಾರ, ಮಸ್ತಕದಲ್ಲಿ ಓಂಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೆ ಸಮಾಧಿ. ಮತ್ತಂ, ಸ್ಥೂಲತನುವಿನಲ್ಲಿ ಬಕಾರಪ್ರಣವ ಸ್ವಾಯತ. ಸೂಕ್ಷ್ಮತನುವಿನಲ್ಲಿ ನಕಾರಪ್ರಣವ ಸ್ವಾಯತ. ಕಾರಣತನುವಿನಲ್ಲಿ ವಕಾರಪ್ರಣವ ಸ್ವಾಯತ. ಮತ್ತಂ, ವಿಶ್ವನಲ್ಲಿ ಅಕಾರಪ್ರಣವಸಂಬಂಧ. ತೈಜಸನಲ್ಲಿ ಉಕಾರಪ್ರಣವಸಂಬಂಧ. ಪ್ರಾಜ್ಞದಲ್ಲಿ ಮಕಾರಪ್ರಣವಸಂಬಂಧ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಬ್ರಹ್ಮರಂಧ್ರದಲ್ಲಿ ಬಕಾರ, ಅಕಾರ, ವಕಾರ, ಶಿಖೆಯಲ್ಲಿ ಕ್ಷಕಾರ, ಉಕಾರ, ಸಕಾರ. ಪಶ್ಚಿಮದಲ್ಲಿ ಹಕಾರ, ಮಕಾರ, ವಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಬಲಭಾಗದಲ್ಲಿ ಓಂಕಾರ, ಎಡಭಾಗದಲ್ಲಿ ಮಕಾರ, ಮುಂಭಾಗದಲ್ಲಿ ಅಕಾರ, ಹಿಂಭಾಗದಲ್ಲಿ ಮಕಾರ, ಊಧ್ರ್ವಭಾಗದಲ್ಲಿ ಹಕಾರ. ಮತ್ತಂ, ಬಲಹಸ್ತದ ಮಧ್ಯದಲ್ಲಿ ಓಂಕಾರ, ಹೆಬ್ಬೆರಳಿನಲ್ಲಿ ಯಕಾರ, ಉಳಿದ ನಾಲ್ಕು ಬೆರಳಿನಲ್ಲಿ ನಾಲ್ಕು ಪ್ರಣವಗಳು. ಆ ಹಸ್ತದ ಮೇಲುಭಾಗದಲ್ಲಿ ಅಕಾರ, ಮುಂಗೈಯಲಿ ಬಕಾರ, ಮೊಳಕೈಯಲ್ಲಿ ಉಕಾರ, ರಟ್ಟೆಯಲ್ಲಿ ಸಕಾರ, ಭುಜದಲ್ಲಿ ಮಕಾರ, ಹೆಗಲಲ್ಲಿ ವಕಾರ, ಇಂತೀ ಪರಿಯಲ್ಲಿ ಉಭಯ ಹಸ್ತ ತೋಳಿನಲ್ಲಿ ಹಿಂದೆ ಹೇಳಿದ ಪಂಚಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಉಭಯ ತಳಪಾದದಲ್ಲಿ ಓಂಕಾರ, ಉಭಯ ಪಾದಾಂಗುಷ*ದಲ್ಲಿ ಯಕಾರ, ಉಭಯ ನಾಲ್ಕು ಬೆರಳಿನಲ್ಲಿ ನಾಲ್ಕು ಪ್ರಣವಂಗಳು. ಉಭಯ ಪಾದದ ಮೇಲುಭಾಗದಲ್ಲಿ ಅಕಾರ, ಉಭಯ ಪಾದದ ಬಾಹ್ಯ ಹರಡಿನಲ್ಲಿ ಉಕಾರ, ಉಭಯ ಪಾದದಂತರ ಹರಡಿನಲ್ಲಿ ಬಕಾರ. ಉಭಯ ಪಾದದ ಹಿಂಬಡದಲ್ಲಿ ಮಕಾರ, ಉಭಯ ಕಣಕಾಲಲ್ಲಿ ಸಕಾರ, ಮೊಳಕಾಲಲ್ಲಿ ಪಕಾರ, ಉಭಯ ಕಿರಿದೊಡೆಯಲ್ಲಿ ಅಕಾರ. ಹಿರಿದೊಡೆಯಲ್ಲಿ ಉಕಾರ, ಉಭಯಾಂಗದಲ್ಲಿ ಮಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೆ ಸಮಾಧಿ. ಮತ್ತಂ, ಉಭಯ ಬರಕಿಯಲ್ಲಿ ಓಂ ನಮಃಶಿವಾಯ ಎಂಬ ಮೂಲ ಷಡಕ್ಷರ. ಉಭಯ ಮೊಲೆಯಲ್ಲಿ ಓಂಕಾರ, ಉಭಯ ಬಗಲಲ್ಲಿ ಬಕಾರ, ಕಕ್ಷೆಯಲ್ಲಿ ಅಕಾರ, ಹೃದಯದಲ್ಲಿ ಉಕಾರ, ಕಂಠದಲ್ಲಿ ಮಕಾರ, ಹೆಡಕಿನಲ್ಲಿ ಸಕಾರ, ಹೆಡಕಿನ ಎಡಬಲದಲ್ಲಿ ವಕಾರ, ಉಭಯ ಕರ್ಣದ ಮಧ್ಯದಲ್ಲಿ ಓಂಕಾರ, ಹಾಲಿಯಲ್ಲಿ ಯಕಾರ, ಕಿರಿಹಾಲಿಯಲ್ಲಿ ವಕಾರ, ಕರ್ಣದ ಊಧ್ರ್ವಭಾಗದಲ್ಲಿ ಶಿಕಾರ, ಬಲ ಎಡಭಾಗದಲ್ಲಿ ಮಕಾರ, ಕರ್ಣದ ಹಿಂಭಾಗದಲ್ಲಿ ನಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಬಲಭಾಗದ ನಯನದಲ್ಲಿ ಅಕಾರ, ಬಕಾರ. ಎಡಭಾಗದ ನಯನದಲ್ಲಿ ಉಕಾರ, ಸಕಾರ, ಉಭಯ ನಯನದ ಮಧ್ಯದಲ್ಲಿ ಮಕಾರ, ವಕಾರ, ಉಭಯ ಗಲ್ಲದಲ್ಲಿ ಓಂಕಾರ. ನಾಶಿಕದ ತುದಿಯಲ್ಲಿ ಮಕಾರ. ಬಲಭಾಗದ ಹೊಳ್ಳಿಯಲ್ಲಿ ಅಕಾರ, ಎಡಭಾಗದ ಹೊಳ್ಳಿಯಲ್ಲಿ ಉಕಾರ. ಮೇಲುಭಾಗದ ತುಟಿಯಲ್ಲಿ ಬಕಾರ. ಕೆಳಭಾಗದ ತುಟಿಯಲ್ಲಿ ಸಕಾರ. ಉಭಯಮಧ್ಯದಲ್ಲಿ ವಕಾರ. ನಾಲಿಗೆಯಲ್ಲಿ ಓಂ ನಮಃಶಿವಾಯವೆಂಬ ಮೂಲ ಷಡಕ್ಷರ. ದಂತಪಂಕ್ತಿಗಳೇ ಹಂ ಕ್ಷಂ ಎಂಬ ಶೂನ್ಯಪ್ರಣಮಂಗಳು. ಚರ್ಮವೆ ವಕಾರ, ಅಸ್ತಿಯೇ ಮಕಾರ, ಮಾಂಸವೇ ಶಿಕಾರ, ಮಜ್ಜವೇ ವಕಾರ, ರಕ್ತವೇ ಯಕಾರ, ಪ್ರಾಣವೇ ಓಂಕಾರ. ರೇಚಕ ಪೂರಕ ಕುಂಭಕವೆಂಬ ಸ್ವರದಲ್ಲಿ ಅಕಾರ, ಉಕಾರ, ಮಕಾರ. ಮತ್ತಂ, ಅಪಾದಮಸ್ತಕದ ಪರಿಯಂತರವು ರೋಮನಾಳಂಗಳಲ್ಲಿ ನಿರಂಜನ ಮೂಲಪ್ರಣಮವೆಂಬ ಓಂಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣಮಸಂಬಂಧವಾದುದೇ ಸಮಾಧಿ. ಇಂತೀ ಕ್ರಮದಲ್ಲಿ ಕೀಯವಿಟ್ಟು ಬಾಹ್ಯದಲ್ಲಿ ದೇಹಕ್ಕೆ ಪ್ರಣಮಸಂಬಂಧಿಸಿದಡೆಯು ಆ ದೇಹವು ಭೂಮಿಯ ಮರೆಯಲ್ಲಿ ಒಂದು ಕ್ಷಣಕ್ಕೆ ನಿರ್ವಯಲಾಗುವುದು. ಇಂತೀ ಕ್ರಮದಲ್ಲಿ ಅಂತರಂಗದಲ್ಲಿ ಪ್ರಾಣಕ್ಕೆ ಪ್ರಣಮಸಂಬಂಧವ ಸುಜ್ಞಾನ ಕ್ರಿಯೆಗಳಿಂದ ಸಂಬಂಧಿಸಿದಡೆಯು ದೇಹದಲ್ಲಿರಲಿಕ್ಕೆಯು ಜೀವನ್ಮುಕ್ತನಾಗುವನು. ಅದೆಂತೆಂದಡೆ: ಚಿದಂಶಿಕನಾದ ಜ್ಞಾನಕಲಾತ್ಮಂಗೆ ಸುಜ್ಞಾನೋದಯವಾಗಿ ಸಕಲಪ್ರಪಂಚವ ನಿವೃತ್ತಿ ಮಾಡಿ, ಶ್ರೀಗುರುಕಾರುಣ್ಯವ ಹಡೆದು ಅಂಗದ ಮೇಲೆ ಇಷ್ಟಲಿಂಗವು ಧಾರಣವಾದಾಕ್ಷಣವೇ ಹಿಂದೆ ಹೇಳಿದ ನಿರ್ಣಯದಲ್ಲಿ ಸರ್ವಾಂಗದಲ್ಲಿ ಮೂಲಪ್ರಣಮಾದಿ ಕ್ಷಕಾರ ಪ್ರಣಮಾಂತ್ಯವಾದ ಸಕಲನಿಃಷ್ಕಲಪ್ರಣಮಂಗಳು ಬೆಲ್ಲದ ಕುಳ್ಳಿಗೆ ಇರುವೆ ಮುತ್ತಿದಂತೆ ತನ್ನಿಂದ ತಾನೆ ಸಂಬಂಧವಾಗಿ ಜೀವನ್ಮುಕ್ತನಾಗಿ ಲೀಲೆಯಲ್ಲಿರುವ ಪರಿಯಂತರದಲ್ಲಿ ಉದಕದೊಳಗೆ ಇರ್ಪ ತಾವರೆಯಂತೆ ನಿರ್ಲೇಪನಾಗಿ ಪ್ರಪಂಚವನಾಚರಿಸುವನು. ಈ ಭೇದವನು ಶಿವಜ್ಞಾನಿ ಶರಣರು ಬಲ್ಲರಲ್ಲದೆ ಈ ಲೋಕದ ಗಾದಿಮನುಜರೆತ್ತ ಬಲ್ಲರಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಲಕುಂಭಚಂದ್ರವತ್ತೆಂಬ ಯಥಾ ನ್ಯಾಯವನರುಹಿಸಿ ಕುಂಭ ಹಲವಾದಡೆ ಚಂದ್ರನೊಬ್ಬನೊ? ಇಬ್ಬರೊ? ಬಲ್ಲರೆ, ನೀವು ಹೇಳಿರೆ. ಆ ಭೂಮಿಯಲ್ಲಿ ಅಡಿಗೊಂದೊಂದು ಸ್ಥಲವಾಗಿ ಸ್ಥಲಕ್ಕೊಂದು ಬಣ್ಣವಪ್ಪ ಮೃತ್ತಿಕೆಯ ತಂದು ಘಟವಂ ಮಾಡಿ ಆ ಘಟವ, ಬಹುವಿಧಮಂ ಕೂಡಿ ದಗ್ಧವ ಮಾಡಿ ಏಕಶಾಯಿಯಂ ಮಾಡೆ, ಉಪಯೋಗಕ್ಕೆ ಸಂದುದೊ ಘಟವು? ಇಂತೀ ಪರಿಯಲ್ಲಿ ತಿಳಿದು ಕೇಳಿರೆ. ಇಂತು ಗುರುಕಾರುಣ್ಯವುಳ್ಳ ದೇಹಕ್ಕೆ ವರ್ಣಾಶ್ರಮವನತಿಗಳೆಯದಿದ್ದಡೆ ಆ ಗುರುಕಾರುಣ್ಯ ತಾನೆಂತಿಪ್ಪುದು ಹೇಳಿರೆ? ಆ ಗುರುಸ್ವಾಮಿ ಹಸ್ತಮಸ್ತಕಸಂಯೋಗವ ಮಾಡಿ, ಮಾಂಸಪಿಂಡವ ಕಳೆದು ಮಂತ್ರಪಿಂಡವಂ ಮಾಡಿ, ವಾಯುಪ್ರಾಣಿಯ ಕಳೆದು ಲಿಂಗಪ್ರಾಣಿಯ ಮಾಡಿದ. ಶಿವಜನ್ಮಕುಲಯುತರಾಗಿ ಶಿವನ ಶರಣರು ವಾಙõïಮಾನಸಾಗೋಚರರೆನ್ನದಿದ್ದಡೆ ಕುಂಭೀಪಾತಕನಾಯಕನರಕ ತಪ್ಪದು, ಸತ್ಯಸತ್ಯ ಅವರಿಗಿದೇ ಗತಿ. ಇನ್ನು ಅನಂತಕೋಟಿಬ್ರಹ್ಮಕಲ್ಪ ಉಳ್ಳನ್ನಕ್ಕರ ಇಹರು ಕಾಣಾ ನರಕದಲ್ಲಿ, ಇದಕಿನ್ನು ಶ್ರುತಿ: ಪಾತಕಂತು ಮನುಷ್ಯಾಣಾಂ ತನುಭಾವೇಷು ವರ್ಧನಂ ಜನ್ಮಕರ್ಮಾಮರಣಾಂತಂ ಅಜಕಲ್ಪಾವಧಿಂ ಭವೇತ್ ಮುಕ್ತಿ ಎಂಬುದು ಉಂಟಾದುದಕ್ಕೆ ಉಪದೃಷ್ಟವ ಹೇಳಿಹೆನು: ಹಿಂದೆ ಅರಿಯಿರೆ, ನಿಮ್ಮ ಋಷಿ ಮೂಲಾಂಕುರವನು, ಉಪದೇಶಗಮ್ಯರಾಗಿ ಅಷ್ಟಾದಶಕುಲಂಗಳನೂ ಏಕವರ್ಣವ ಮಾಡಿರೆ ಉಪದೇಶಗಮ್ಯದಿಂದಲೂ ಇನ್ನರಿದು ಹಡೆದ ಪದಫಲಾದಿಗಳ ನೋಡಿರೆ. ಜನ್ಮಕರ್ಮನಿವೃತ್ತಿಯಾಗದೆ ಒಬ್ಬ ಋಷಿಗೆ? ಜೀವನದ ಮೊದಲಲ್ಲಿ ಆವ ಬೇಡ ಕಾಣಾ. ಜ್ಞಾನದಿಂದ ಅಂತಂತು ಮಾಡಿದಡೆ, ಶಿವಭಕ್ತನಿಂದೆಯಿಂದ ಒಂದು ಬ್ರಹ್ಮಕಲ್ಪಪರಿಯಂತರ ಕುಂಭೀಪಾತಕನಾಯಕನರಕದಲ್ಲಿ ಅಯಿದಾನೆ ಎಂದುದು ಶ್ರುತಿ: ಲಿಂಗಸ್ಯಾರಾಧನೇ ವಿಘ್ನಂ ಯತ್ಕೃತಂ ಸ್ವಾರ್ಥಕಾರಣಾತ್ ನಿಮೇಷಮಪಿ ತತ್ಪಾಪಂ ಕರೋತಿ ಚ ಕುಲಕ್ಷಯಂ ಸೂಕರಃ ಕೋಟಿಜನ್ಮಾನಿ ಲಭತೇ ಶತಕೋಟಿಭಿಃ ಮೃಗಶ್ಚ ಕೋಟಿಜನ್ಮಾನಿ ಶೃಗಾಲಃ ಕೋಟಿಜನ್ಮಭಿಃ ಅಂಧಶ್ಚ ಲಕ್ಷಜನ್ಮಾನಿ ಕುಬ್ಜಸ್ಸ್ಯಾದಬ್ಜಜನ್ಮಭಿಃ ಪಂಗುಲಃ ಕೋಟಿಜನ್ಮಾನಿ ಶಿಖಂಡೀ ಜಾಯತೇ ತಥಾ ಉಲೂಕೋ ವಾಯಸೋ ಗೃಧ್ರಶ್ಸೂಕರೋ ಜಂಬುಕಸ್ತಥಾ ಮಾರ್ಜಾಲೋ ವಾನರಶ್ಚೈವ ಯುಗಕೋಟಿ ಶತ ನರಃ ಲಿಂಗಾರ್ಚನರತಂ ವಾಚಾ ಸಕೃಲ್ಲಿಂಗಂ ಚ ದೂಷಯನ್ ಯುಗಕೋಟಿಕ್ರಿಮಿರ್ಭೂತ್ವಾ ವಿಷ್ಟಾಯಾಂ ಜಾಯತೇ ಪುನಃ ಕೀಟಃ ಪತಂಗೋ ಜಾಯೇತ ಕೃತವೃಶ್ಚಿಕದರ್ದುರಃ ಜಾಯಂತೇ ಚ ಮ್ರಿಯಂತೇ ಚ ನರಾಸ್ತೇ ನಾಸ್ತಿ ವೈ ಸುಖಂ ಇಂತೆಂದುದಾಗಿ- ಅಂದೊಮ್ಮೆ ಬಂದುದು ದೂರ್ವಾಸನೆಂಬ ಋಷಿಗೆ ಮತ್ರ್ಯಲೋಕದಲ್ಲಿ ಮಹಾಪವಾದ. ಅದ ಮರಳಿ ಪರಿಹರಿಸಿಕೊಳನೆ ಮತ್ರ್ಯಲೋಕದಲ್ಲಿ ಶಿವಾರ್ಚನೆಯಂ ಮಾಡಿ? ಶಿವಭಕ್ತರಿಗೆ ಮನೋಹರವಂತಹ ಪೂಜೆಯ ಮಾಡಿ ಆ ಪರಶಿವನ ಘನಲಿಂಗವೆಂದರಿದು ಅರ್ಚಿಸಿ, ಪರಮಭಕ್ತರ ಪಾದತೀರ್ಥಪ್ರಸಾದದಿಂದ ಆ ಋಷಿ ಅಮರಕಾಯನೆಂಬ ನಾಮವ ಪಡೆಯನೆರಿ ಆಕಾರಾಧ್ಯಕ್ಷರಂಗಳಿಗೆ ನಾಯಕವಂತಹ ಅಕ್ಷರ ಪಂಚಾಕ್ಷರವೆಂಬುದನರಿದು ಶಿವನೇ ಸರ್ವದೇವರಿಗೆ ಅಧಿದೈವವೆಂದರಿದು ವೇದಶಾಸ್ತ್ರಪುರಾಣಾನಿ ಸ್ಪಷ್ಟಾ ವೇಶ್ಯಾಂಗನಾ ಇವ ಯಾ ಪುನಶ್ಯಾಂಕರೀ ವಿದ್ಯಾ ಗುಪ್ತಾ ಕುಲವಧೂರಿವ ಎಂದುದಾಗಿ: ಶಿವಾರ್ಚಕಪದದ್ವಂದ್ವಸ್ಯಾರ್ಚನಾತ್ ಸ್ಮರಣಾದಪಿ ಕೋಟಿಜನ್ಮಸು ಸೌಖ್ಯಂ ಸ್ಯಾತ್ ಸ ರುದ್ರೋ ನಾತ್ರ ಸಂಶಯಃ ಎಂಬರ್ಥವನರಿದು ಆಂಗಿರಸ, ಶಾಂಡಿಲ್ಯ, ವೇದವ್ಯಾಸ, ವಾಲ್ಮೀಕಿ, ಮಾಂಡವ್ಯ ಮೊದಲಾದ ಋಷಿಗಳೆಲ್ಲರೂ ಶಿವನಿಂದೆ, ಶಿವಭಕ್ತರ ನಿಂದೆಯ ಮಾಡಿ ಶಿವನ ಕ್ಷೇತ್ರವಹ ವೇದಾದಿಶಾಸ್ತ್ರಗಮಂಗಳಿಗೆ ಪ್ರತಿಯಿಟ್ಟು ಕರ್ಮಶಾಸ್ತ್ರಂಗಳನೆಸಗಿ ಅಕ್ಷಯನರಕವನೈದಿರಲಾಗಿ, ತ್ರ್ಯಕ್ಷನ ಶರಣ ಕೃಪಾವರದಾನಿ ಏಕನಿಷ* ಪರಮಮಾಹೇಶ್ವರ ಸಾನಂದನು ಕರುಣದಿಂದಲೆತ್ತನೆ ಅವರೆಲ್ಲರ ನರಕಲೋಕದಿಂದ? ಇಂತಿವಕ್ಕೆ ಸಾಕ್ಷಿದೃಷ್ಟಾಂತಗ್ರಂಥಗಳ ಪೇಳುವಡೆ, ಅಂತಹವು ಅನಂತ ಉಂಟು, ಆಗಮ ಪುರಾಣದಲ್ಲಿ ಅರಿವುಳ್ಳವರು ತಿಳಿದು ನೋಡುವುದು. ಶಾಪಹತರೆನಿಸುವ ಪಾಪಿಗಳು ಅವ ಮುಚ್ಚಿ ವಿತಥವ ನುಡಿವರು. ಇದನರಿದು ನಿತ್ಯಸಹಜ ಶಿವಲಿಂಗರ್ಚನೆಯಂ ಮಾಡಿ `ತತ್ವಮಸಿ' ವಾಕ್ಯಂಗಳನರಿದು ತತ್ಪದೇನೋಚ್ಯತೇ ಲಿಂಗಂ ತ್ವಂಪದೇನಾಂಗಮುಚ್ಯತೆ ಲಿಂಗಾಂಗಸಂಗೋ[s]ಸಿಪದಂ ಪರಮಾರ್ಥನಿರೂಪಣೇ ಎಂಬುದನರಿದು ನಿತ್ಯನಿರ್ಮಳಜ್ಞಾನಾನಂದ ಪ್ರಕಾಶವೆಂಬ ಮಹಾಮನೆಯಲ್ಲಿ ಪರಮಸುಖದಲ್ಲಿ ಆಕಾರಂಗಳ ಲಯವನು ತಮ್ಮಲ್ಲಿ ಎಯ್ದಿಸಿ ಮಹಾನುಭಾವರನೆನಗೆ ತೋರಯ್ಯಾ. ನಾ ನಿನ್ನನರಿದುದಕ್ಕೆ ಫಲವಿದು ನೀನೆನ್ನ ನೋಡಿದುದಕ್ಕೆ ಫಲವಿದು. ಸುಖಸಚ್ಚಿದಾನಂದಸ್ವರೂಪ ಅನಿತ್ಯವ ಮೀರಿದ ನಿತ್ಯ ನೀನಲ್ಲದೆ ಮತ್ತೊಂದುಂಟೆ? ಎನಗೆ ನಿನ್ನಂತೆ ನಿರ್ಮಲಜ್ಞಾನಾನಂದಪದವನಿತ್ತು ಎನ್ನ ನಿನ್ನಂತೆ ಮಾಡಿ ಉದ್ಧರಿಸಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶುದ್ಧಶೈವದ ನಿರ್ಧರವನರಿವ ಬುದ್ಧಿಯನನುಕರಿ[ಸೆ] ಆ ಶುದ್ಧಶೈವದ ಪರಿಯೆಂತೆಂದಡೆ: ಏಕಮೇವನದ್ವಿತೀಯಂ ಬ್ರಹ್ಮವೆಂಬು[ದ] ಶ್ರುತಿಪ್ರಮಾಣಿಂದರಿದು ಅಂತಪ್ಪ ಶಿವನಲ್ಲಿ ಏಕನಿಷೆ*ಯ ಪಡೆದು ಆ ಶಿವಂಗೆ ಅರ್ಚನೆ ಪೂಜನೆಯಂ ಮಾಡುವಲ್ಲಿ ದುರ್ಗಿ, ವಿನಾಯಕ, ಭೈರವ ಮೊದಲಾದ ಪರಿವಾರ ದೇವತೆಗಳನ್ನು ಏಕಪೀಠದಲ್ಲಿ ಪೂಜೆಯಂ ಮಾಡುವಾತನು ಅವಿವೇಕದ ಅಪರಾಧಿಯಲ್ಲದೆ ವಿವೇಕವನುಳ್ಳ ಶೈವಸಂಪನ್ನನಲ್ಲ. ಅದಕ್ಕೆ ದೃಷ್ಟಾಂತವೆಂತೆಂದಡೆ: ಅರಸು ಕುಳ್ಳಿರುವ ಸಿಂಹಾಸನದಲ್ಲಿ ಪ್ರಧಾನ ಮೊದಲಾದ ಪರಿವಾರ ಕುಳ್ಳಿರಬಹುದೆ ? ಬಾರದಾಗಿ, ಪರಿವಾರ ದೇವತೆಗಳಿಗೆ ಏಕ ಪೀಠ ಸಲ್ಲದು. ಮುನ್ನ ಅರುವತ್ತುಮೂವರು ಮೊದಲಾದ ಅಸಂಖ್ಯಾತರೆನಿಪ ಭಕ್ತರುಗಳು ಶುದ್ಧಶೈವ ವೀರಶೈವದಲ್ಲಿ ನಿಷೆ*ಯ ಆಚರಿಸುವಲ್ಲಿ ಏಕಲಿಂಗದಲ್ಲಿ ನಿಷೆ*, ಶಿವಭಕ್ತರಲ್ಲಿ ಪ್ರೇಮ, ಶಿವಲಾಂಛನವ ಧರಿಸಿಪ್ಪ ಜಂಗಮವನು ಶಿವನೆಂದು ಕಂಡು ಅವರಿಗೆ ತೃಪ್ತಿಪಡಿಸಿದವರಾಗಿ ಚತುರ್ವಿಧವನೆಯ್ದಿದರು. ಅದೆಂತೆಂದಡೆ: ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ಮಮ ತೃಪ್ತಿರುಮಾದೇವಿ ಜಂಗಮಸ್ಯಾನನಾದ್ಭವಃ ಅಸ್ಯಾರ್ಥ, ಮರಕ್ಕೆ ಬೇರು ಬಾಯಿ ಹೇಗೆಯಾಯಿತ್ತು ಹಾಂಗೆ ಲಿಂಗಕ್ಕೆ ಜಂಗಮವೆ ಬಾಯಿಯೆಂದು ಆವನಾನೊರ್ವನು ಜಂಗಮಕ್ಕೆ ತೃಪ್ತಿಪಡಿಸುತ್ತಂ ಇದ್ದಾನು, ನಾನು ತೃಪ್ತನು ಕಾಣಾ ಉಮಾದೇವಿ ಎಂದು ಶಿವನು ಹೇಳಿದನಾಗಿ ಮತ್ತಂ, ಶಿವಯೋಗಿಮುಖೇನೈವ ಸಾಕ್ಷಾದ್ಭುಂಕ್ತೇ ಸದಾಶಿವಃ ಶಿವಯೋಗಿಶರೀರಾನ್ತೇ ನಿತ್ಯಂ ಸನ್ನಿಹಿತಃ ಶಿವಃ ಆವನೊರ್ವ ಶಿವಯೋಗಿಗೆ ಆವನೊರ್ವ ಭಕ್ತನು ತೃಪ್ತಿ ಪಡಿಸುತ್ತಂ ಇದ್ದಾನು, ಅದೇ ಶಿವನ ತೃಪ್ತಿಯೆಂದು ಅರಿವುದು. ಅದು ಹೇಗೆಂದಡೆ: ಶಿವಯೋಗಿಯ ಹೃದಯಕಮಲಮಧ್ಯದಲ್ಲಿ ಶಿವನು ಆವಾಗಲೂ ತೊಲಗದಿಹನಾಗಿ, ಮತ್ತಾ ಶಿವಂಗೆ ಲಿಂಗ ಒಂದು ಮುಖ, ಜಂಗಮ ಒಂದು ಮುಖ. ಅದಕ್ಕೆ ಈಶ್ವರ ವಾಕ್ಯ: ಯಥಾ ಭೇರುಂಡಪಕ್ಷೀ ತು ದ್ವಿಮುಖಾತ್ ಪರಿಭುಂಜತೇ ತಥಾ ಭುಂಜಾಮಿ ದ್ವಿಮುಖಾಲ್ಲಿಂಗಜಂಗಮಯೋರಹಂ ಅಸ್ಯಾರ್ಥ, ಆವುದಾನೊಂದು ಭೇರುಂಡ ಪಕ್ಷಿ ಎರಡು ಮುಖದಲ್ಲಿ ಹಾರವ ಕೊಳಲು ಒಂದೇ ದೇಹಕ್ಕೆ ತೃಪ್ತಿಯಹ ಹಾಂಗೆ ಎನಗುಳ್ಳವು ಲಿಂಗ ಜಂಗಮವೆರಡು ಮುಖ. ಆ ಎರಡು ಮುಖಕ್ಕೆ ಆವನಾನೊರ್ವನು ನೈವೇದ್ಯವ ನೀಡುತ್ತಂ ಇದ್ದಾನು, ಅದು ಎನ್ನ ತೃಪ್ತಿಯೆಂದು ಶಿವನು ದೇವಿಯರಿಗೆ ಹೇಳಿದನಾಗಿ ಇಂತಪ್ಪ ಲಿಂಗಜಂಗಮವೆರಡು ಮುಖವೆ ಶಿವನ ತೃಪ್ತಿಗೆ ಕಾರಣವೆಂದರಿದು ಆಚರಿಸಿದರಾಗಿ ವೀರಶೈವಸಂಪನ್ನರುಮಪ್ಪ ಅರುವತ್ತುಮೂವರು ಅಸಂಖ್ಯಾತರು ಶಿವನಲ್ಲಿ ಚತುರ್ವಿಧ ಪದವಿಯನೆಯ್ದಿ ಸುಖಿಯಾದರು. ಇದೀಗ ಶುದ್ಧಶೈವದ ಮಾರ್ಗ. ಈ ಶೈವಸಂಪತ್ತನರಿದಾಚರಿಸಿದವರೆ ಮುಕ್ತರು ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ತಂದೆ ತಾಯಿಗಳ ವಿಕಾರದ ಶುಕ್ಲಶೋಣಿತದ ಸಂಬಂಧವಪ್ಪ ಸರ್ವಸೂತಕತನುವಿಡಿದ ಪ್ರಾಣಿಗಳಿಗೆ ಯಮನ ಸಂಹಾರವ ಕಲ್ಪಿಸಿಕೊಂಡಿಪ್ಪ ಶಿವನ ಪರಿಯಾನಾರೂ ಅರಿಯರಲ್ಲ. ಈ ಮಾಯಿಕ ಸಂಬಂಧವಾದ ದೇಹ ತಾನೆಂದೆಂಬ ಮೂಢಾತ್ಮರ ನಾನೇನೆಂಬೆನಯ್ಯ?. ಆತ್ಮ ಅನಾತ್ಮನ ವಿಚಾರಿಸಿ ತಿಳಿಯಲು ಅಚೇತನವಾದ ಅನಾತ್ಮಸ್ವರೂಪೇ ದೇಹ; ಆ ದೇಹಕ್ಕೆ ಆಶ್ರಯವಾಗಿಪ್ಪ ಚೈತನ್ಯನೇ ಆತ್ಮನು. ಇದು ಕಾರಣ, ದೇಹವೇ ಜಡ; ಆತ್ಮನೇ ಅಜಡನು. ಅದೇನುಕಾರಣ ದೇಹ ಜಡ, ಆತ್ಮನು ಅಜಡನುಯೆಂದಡೆ; ದೇಹವೇ ಮಾಯಾಕಾರ್ಯವಾದ ಕಾರಣ ಜಡ; ಇದು ಕಾರಣ, ಇಂದ್ರಿಯಂಗಳು ಜಡ; ವಿಷಯಂಗಳು ಜಡ; ಕರಣಂಗಳು ಜಡ; ವಾಯುಗಳು ಜಡ; ಆತ್ಮನೇ ಅಜಡನು. ಆತ್ಮನದೇನುಕಾರಣ ಅಜಡನೆಂದರೆ ಶಿವಾಂಶಿಕನಾದಕಾರಣ ಅಜಡನು. ಆ ಶುದ್ಧ ಚಿದ್ರೂಪನಾದ ಆತ್ಮನು ಅವಿದ್ಯಾಸಂಬಂಧವಾದ ದೇಹೇಂದ್ರಿಯದ ಸಂಗದಿಂದ ಸಂಸಾರಿಯಾಗಿಪ್ಪನು ನೋಡಾ. ಈ ಸಂಸಾರವ್ಯಾಪ್ತಿಯಹಂಥ ಜೀವನದ ಗುಣವ ಕಳೆದುಳಿದಿಹನೆಂದಡೆ ದೇವ ದಾನರ ಮಾನವರಿಗೆ ದುರ್ಲಭ ನೋಡಾ. ಈ ಮಾಯಾಪ್ರಪಂಚ ನಿವೃತ್ತಿಯಮಾಡುವ ಮಹದರುಹು ತಾನೆಂತಾದೋ ಅಂತಪ್ಪ ಅರುಹುಳ್ಳ ಶರಣರಿಗೆ ನಮೋನಮೋಯೆಂಬೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪರುಷವ ಸೋಂಕಿದ ಲೋಹಕ್ಕೆ ಮತ್ತೆ ಪರುಷದ ಹಂಗೇಕೆ ? ಸರ್ಪದಷ್ಟವಾದ ದೇಹಕ್ಕೆ ಕಟುತ್ವ ಮಧುರದ ರಸಂಗಳ ಪ್ರಮಾಣಿಸಬಲ್ಲುದೆ ? ಇಂತೀ ದೃಷ್ಟದಂತೆ ಲಿಂಗವಿದ್ದ ತನುವಿಂಗೆ ಅಷ್ಟೋತ್ತರಶತವ್ಯಾಧಿಗಳಲ್ಲಿ ಕಟ್ಟುವಡೆದು ಬಂಧನಕ್ಕೊಳಗಾಗುತ್ತ, ತಾಪತ್ರಯದಲ್ಲಿ ಸತ್ತು ಹುಟ್ಟುತ್ತ, ನಾನಾ ವಿಕಾರದಲ್ಲಿ ನಷ್ಟವಾಗುತ್ತ, ಮತ್ತೆ ಮಾತಿನ ವಾಸಿಗೆ ಮಿಟ್ಟೆಯ ಭಂಡರಂತೆ ಕಟ್ಟಿ ಹೋರುತ್ತ, ತಥ್ಯಮಿಥ್ಯದಲ್ಲಿ ಕುಕ್ಕುಳಗುದಿವುತ್ತ, ಮತ್ತೆ ಭಕ್ತವಿರಕ್ತರೆಂದು ಆತ್ಮತೇಜಕ್ಕೆ ಬಿಕ್ಕನೆ ಬಿರಿವುತ್ತ, ಇಂತೀ ಕೆಟ್ಟ ಕೇಡ ನೋಡೆ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ಅಂಜಿ ನಷ್ಟವಾಗಿ ಹೋದ.
--------------
ಬಾಚಿಕಾಯಕದ ಬಸವಣ್ಣ
ಇನ್ನಷ್ಟು ... -->