ಅಥವಾ

ಒಟ್ಟು 56 ಕಡೆಗಳಲ್ಲಿ , 1 ವಚನಕಾರರು , 56 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೇ, ನೀನು ನನ್ನ ಲಿಂಗಕ್ಕೆ ಮಂಗಳಸೂತ್ರವಂ ಕಟ್ಟಿ ಕೊಟ್ಟಂದಿಂದ ಅನ್ಯವನರಿಯದೆ, ಆ ಲಿಂಗದಲ್ಲೇ ನಡೆವುತ್ತಿರ್ಪೆನು, ಆ ಲಿಂಗದಲ್ಲೇ ನುಡಿವುತ್ತಿರ್ಪೆನು, ಆ ಲಿಂಗದ ನಟನೆಯಂ ನೆನವುತ್ತಿರ್ಪೆನು, ಆ ಲಿಂಗದ ಮಹಿಮೆಯನೆ ಪಾಡುತ್ತಿರ್ಪೆನು, ಆ ಲಿಂಗವನೆ ಬೇಡುತ್ತಿರ್ಪೆನು, ಆ ಲಿಂಗವನೆ ಕಾಡುತ್ತಿರ್ಪೆನು, ಆ ಲಿಂಗವನೆ ಕೊಸರುತ್ತಿರ್ಪೆನು, ಆ ಲಿಂಗವನೆ ಅರಸುತ್ತಿರ್ಪೆನು, ಆ ಲಿಂಗವನೆ ಬೆರಸುತ್ತಿರ್ಪೆನು, ಆ ಲಿಂಗವಲ್ಲದೆ ಮತ್ತಾರನೂ ಕಾಣೆನು, ಮತ್ತಾರಮಾತನೂ ಕೇಳೆನು, ಮತ್ತಾರನೂ ಮುಟ್ಟೆನು, ಮತ್ತಾರನೂ ತಟ್ಟೆನು. ಲಿಂಗವು ನಾನು ಇಬ್ಬರೂ ಇಲ್ಲದ ಕಾರಣ ಎಲ್ಲವೂ ನನಗೆ ಏಕಾಂತಸ್ಥಾನವಾಯಿತ್ತು. ಎಲ್ಲೆಲ್ಲಿಯೂ ಯಾವಾಗಲೂ ಎಡೆವಿಡದೆ ಲಿಂಗದಲ್ಲೇ ರಮಿಸುತಿರ್ದೆನು. ಲಿಂಗದಲ್ಲೇ ಕಾಲವ ಕ್ರಮಿಸುತ್ತಿರ್ದೆನು ಲಿಂಗದಲ್ಲೇ ಎನ್ನಂಗಗುಣಂಗಳಂ ಕ್ಷಮಿಸುತ್ತಿರ್ದೆನು ಲಿಂಗದೊಳಗೆ ನನ್ನ, ನನ್ನೊಳು ಲಿಂಗದ ಚಲ್ಲಾಟವಲ್ಲದೆ, ಬೇರೊಂದು ವಸ್ತುವೆನಗೆ ತೋರಲಿಲ್ಲ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಜಂಗಮಫಲವೆಲ್ಲವೂ ದೇವತೆಗಳಾಹಾರವು; ಸ್ಥಾವರಫಲವೆಲ್ಲವೂ ಮನುಷ್ಯರಾಹಾರವು. ಅದೆಂತೆಂದೊಡೆ : ದೇವತಾಬಿಂದುವಿನಲ್ಲಿ ಮನುಷ್ಯಕೃತ್ಯದಿಂದುದ್ಭವಿಸುವುದೆಲ್ಲ ಸ್ಥಾವರವು; ಮನುಷ್ಯ ಬಿಂದುವಿನಲ್ಲಿ ದೇವತಾ ಕೃತ್ಯದಿಂದುದ್ಭವಿಸುವುದೆಲ್ಲ ಜಂಗಮವು. ಮನುಷ್ಯರು ಶೂದ್ರಮುಖದಿಂ ಕೊಂಬುತಿರ್ಪರು. ದೇವತೆಗಳು ಬ್ರಾಹ್ಮಣಮುಖದಿಂ ಕೊಂಬುತಿರ್ಪರು. ಪೃಥ್ವಿಯಲ್ಲಿ ಎಂಬತ್ತುನಾಲ್ಕುಲಕ್ಷವಿಧ ಜಂಗಮಗಳು ಹೇಗೋ ದೇವತೆಗಳಲ್ಲಿಯೂ ಹಾಗೆ. ದೇವತೆಗಳು ತಮ್ಮ ಕರ್ಮಫಲವು ತೀರಿದೊಡೆ, ತದ್ಧೋಷ ಕರ್ಮಾನುಸಾರಮಾಗಿ ಪಂಚಾಶಲ್ಲಕ್ಷ ದೇಹಗಳೊಂದಂ ಹೊಂದಿ ಆಯಾ ಆಹಾರಂಗಳಂ ಭುಂಜಿಸುತ್ತಾ. ತದಾನುಗುಣ್ಯಮಾಗಿ ಕ್ರೀಡಿಸುತ್ತರ್ಪಂದದಿ, ಮನುಷ್ಯನು ಇಹಲೋಕಕರ್ಮವು ತೀರಿದಲ್ಲಿ ಆ ಕರ್ಮಫಲಕ್ಕೆ ತಕ್ಕ ಮರಣವಂ ಹೊಂದಿ, ದೇವತಾ ಪಿಶಾಚಾಂತಮಾದ ದೇಹಗಳೊಳೊಂದು ದೇಹವನ್ನೆತ್ತಿ, ಸುಖದುಃಖಗಳನನುಭವಿಸುತ್ತಾ ತನ್ನ ಅದ್ಥಿಕಾರಕ್ಕೆ ದೇವತೆಯನ್ನು ಗ್ರಹಿಸಿ, ಆ ದೇವತಾಮುಖದಿಂ ಆಹಾರಂಗಳಂ ಗ್ರಹಿಸುವಂತೆ, ಆ ದೇವತೆಗಳು ತಮ್ಮ ಅದ್ಥಿಕಾರಕ್ಕನುಗುಣವಾಗಿ ಮನುಷ್ಯರಂ ಗ್ರಹಿಸಿ, ಆ ಮನುಷ್ಯಮುಖದಿಂ ಆಹಾರಂಗಳಂ ಕೊಂಬುತಿರ್ಪರು. ದೇವೆತಗಳಿಗೆ ಮಂತ್ರದಿಂದಾವಾಹನೋಚ್ಚಾಟನೆಗಳು, ಮನುಷ್ಯರಿಗೆ ತಂತ್ರದಿಂದಾವಾಹನೋಚ್ಚಾಟನೆಗಳು. ಮನುಷ್ಯರಿಗೆ ತಂತ್ರದಿಂ ಕೂಡಿದ ಮಂತ್ರವು, ದೇವತೆಗಳಿಗೆ ಮಂತ್ರದಿಂ ಕೂಡಿದ ತಂತ್ರವು, ಇಂತು ಮನುಷ್ಯರೂಪದಿಂದ ಸತ್ತು. ದೇವತಾರೂಪದಿಂ ಹುಟ್ಟುತ್ತಿರ್ಪ ದಂದುಗವಂ ಬಿಡಿಸಿ, ನಿನ್ನಲ್ಲಿ ಸತ್ತು ಹುಟ್ಟುತ್ತಿರ್ಪ ನಿಜಸುಖವಂ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪ್ರಣವಸ್ವರೂಪಮಾದ ಪರಬ್ರಹ್ಮವೇ ತಾನು ತನ್ನ ನಿಜಲೀಲಾನಿಮಿತ್ತ ತ್ರಿವರ್ಣರೂಪಕಮಾಗಿ, ಅದೇ ಹರಿಹರಬ್ರಹ್ಮಸ್ವರೂಪಮಾಗಿ, ಹರಿಯೇ ಶರೀರಮಾಗಿ, ಹರನೇ ಜೀವಮಾಗಿ, ಬ್ರಹ್ಮನೇ ಮನಸ್ಸಾಗಿ, ಆ ಬ್ರಹ್ಮಸ್ವರೂಪಮಾದ ಕಲೆಯೇ ಶರೀರಕ್ಕೆ ಶಕ್ತಿಯಾಗಿ, ಆ ಶರೀರಸ್ವರೂಪಮಾದ ಬಿಂದುವೇ ಪ್ರಾಣಕ್ಕೆ ಶಕ್ತಿಯಾಗಿ, ಆ ಪ್ರಾಣಸ್ವರೂಪಮಾದ ನಾದವೇ ಮನಶ್ಶಕ್ತಿಯಾಗಿ, ಆ ಪ್ರಾಣಕ್ಕೆ ನಾಸಿಕವೇ ಸ್ಥಾನಮಾಗಿ, ಮನಸ್ಸಿಗೆ ಜಿಹ್ವೆಯೇ ಸ್ಥಾನಮಾಗಿ, ಶರೀರಕ್ಕೆ ನೇತ್ರವೇ ಸ್ಥಾನಮಾಗಿ, ತನು ಸ್ಪರುಶನಸ್ವರೂಪು, ಮನಸ್ಸು ಶಬ್ದಸ್ವರೂಪು, ಪ್ರಾಣ ಆತ್ಮಸ್ವರೂಪು. ಈ ತನು ಮನಃಪ್ರಾಣಂಗಳಿಂದೊಗೆದ ಆತ್ಮಾದಿ ಷಡ್ಭೂತಂಗಳಿಗೆ ಆತ್ಮಾದಿ ಷಡ್ಭೂತವೇ ಕಾರಣಮಾಗಿ, ಜೀವನದಲ್ಲಿ ಹುಟ್ಟಿದ ಸತ್ವಗುಣವು ಶರೀರವನಾವರಿಸಿ, ಆ ಜೀವನಿಗೆ ತಾನೇ ಸ್ಥಿತಿಕರ್ತೃವಾಯಿತ್ತು. ಶರೀರದಲ್ಲಿ ಹುಟ್ಟಿದ ತಮೋಗುಣವು ಜೀವನನಾವರಿಸಿ, ಆ ಶರೀರಕ್ಕೆ ತಾನೇ ಸಂಹಾರಕರ್ತೃವಾಯಿತ್ತು. ಆ ಶರೀರ ಜೀವಸಂಗದಿಂದೊಗೆದ ಅಹಂಕಾರಸ್ವರೂಪಮಾದ ರಜೋಗುಣವು ಮನಮನಾವರಿಸಿ, ಈ ಎರಡಕ್ಕೂ ತಾನೇ ಸೃಷ್ಟಿಕರ್ತೃವಾಯಿತ್ತು. ಆ ನಾದವೇ ವಾಗ್ದೇವಿಯಾಗಿ, ಬಿಂದುವೇ ಮಹಾದೇವಿಯಾಗಿ, ಕಳೆಯೇ ಮಹಾಲಕ್ಷ್ಮಿಯಾಗಿ, ಈ ತನು ಮನಃಪ್ರಾಣಂಗಳನು ಮರುಳುಮಾಡಿತ್ತು. ಜಾಗ್ರತ್ಸ್ವಪ್ನಸುಷುಪ್ತ್ಯಾದ್ಯವಸ್ಥೆಗಳೊಳಗೆ ಹೊಂದಿಸಿ, ಮುಂದುಗಾಣಲೀಯದೆ, ಸೃಷ್ಟಿಸ್ಥಿತಿಸಂಹಾರಂಗಳಲ್ಲಿ ತೊಳಲಿಬಳಲಿಸುತ್ತಿರಲು, ಆ ಕಳೆಯಲ್ಲಿ ಕೂಡಿ ಶರೀರವು ಉಬ್ಬುತ್ತಾ, ಆ ನಾದದಲ್ಲಿ ಕೂಡಿ ಮನಸ್ಸು ಕೊಬ್ಬುತ್ತಾ, ಆ ಶಕ್ತಿಯಲ್ಲಿ ಕೂಡಿ ಪ್ರಾಣ ಬೆಬ್ಬನೆ ಬೆರೆವುತ್ತಾ, ಭವಭವದೊಳು ತೊಳಲುತ್ತಿರಲು, ಗುರುಕಟಾಕ್ಷದಿಂ ಕರ್ಮವು ಸಮೆದು ಧರ್ಮವು ನೆಲೆಗೊಳ್ಳಲು, ಆ ಮೇಲೆ ಮಹಾಜ್ಞಾನಶಕ್ತಿಯಾಯಿತ್ತು ಆ ಬಿಂದುವೇ ಆನಂದಶಕ್ತಿಯಾಯಿತ್ತು ಆ ಕಳೆಯೇ ನಿಜಶಕ್ತಿಯಾಯಿತ್ತು ಇಂತು ಸತ್ಯಜ್ಞಾನಾನಂದಸ್ವರೂಪಮಾದ ಶಕ್ತಿಮಹಿಮೆಯಿಂದ ಶರೀರವೇ ವಿಷ್ಣುವಾಗಲು, ಅಲ್ಲಿ ಶ್ರೀಗುರುಸ್ವರೂಪಮಾದ ಇಷ್ಟಲಿಂಗವು ಸಾಧ್ಯಮಾಯಿತ್ತು. ಆ ಪ್ರಾಣವೇ ರುದ್ರಸ್ವರೂಪವಾಗಲು, ಜಂಗಮಮೂರ್ತಿಯಾದ ಪ್ರಾಣಲಿಂಗವು ಸಾಧ್ಯವಾಯಿತ್ತು. ಮನಸ್ಸೇ ಬ್ರಹ್ಮಸ್ವರೂಪವಾಗಲು, ಲಿಂಗಾಕಾರಮಾದ ಭಾವಲಿಂಗವು ಸಾಧ್ಯಮಾಯಿತ್ತು. ಆ ಲಿಂಗಗಳೇ ಆತ್ಮಾದಿ ಷಡ್ಭೂತಂಗಳಲ್ಲಿ ಆಚಾರಾದಿ ಮಹಾಲಿಂಗಂಗಳಾದವು. ಆ ಶಕ್ತಿಗಳೇ ಕ್ರಿಯಾದಿ ಶಕ್ತಿಯರಾದರು. ಆ ಶಕ್ತಿಮುಖದಲ್ಲಿ ತಮ್ಮಲ್ಲಿ ಹುಟ್ಟಿದ ನಾನಾವಿಷಯ ಪದಾರ್ಥಂಗಳನ್ನು ಆಯಾ ಲಿಂಗಂಗಳಿಗರ್ಪಿಸಿ, ತತ್ಸುಖಾನುಭವದೊಳೋಲಾಡುತ್ತಿರಲು, ಆ ಶಕ್ತಿಗಳೇ ಲಿಂಗಶಕ್ತಿಗಳಾಗಿ, ತಾವೇ ಆಯಾ ಲಿಂಗಸ್ವರೂಪ ಶರೀರ ಪ್ರಾಣ ಮನೋಭಾವಂಗಳಳಿದು, ಲಿಂಗಭಾವ ನೆಲೆಗೊಂಡಲ್ಲಿ, ಸತ್ವರಜಸ್ತಮೋಗುಣಗಳು ಜ್ಯೋತಿಯೊಳಗಡಗಿದ ಕತ್ತಲೆಯಂತೆ, ತಮ್ಮ ನಿಜದಲ್ಲಿ ತಾವೇ ಲೀನವಾದವು. ಬಿಂದು, ಶರೀರದೊಳಗೆ ನಿಂದು ಆನಂದರೂಪಮಾಯಿತ್ತು. ನಾದವು ಪ್ರಾಣದೊಳಗೆ ಬೆರೆದು ನಿಶ್ಶಬ್ದನಿರೂಪಮಾದ ಜ್ಞಾನಮಾಯಿತ್ತು. ಕಳೆ ಮನದೊಳಗೆ ಬೆರದು, ಪರಬ್ರಹ್ಮ ಸ್ವರೂಪಮಾಗಿ ನಿಜಮಾಯಿತ್ತು . ಆ ಆನಂದವೇ ಇಷ್ಟಲಿಂಗರೂಪಮಾಗಿ, ಜ್ಞಾನವೇ ಪ್ರಾಣಲಿಂಗಸ್ವರೂಪಮಾಗಿ, ಆ ನಿಜವೇ ಭಾವಲಿಂಗಮೂರ್ತಿಯಾಗಲು, ಆ ಕರ್ಮ ಧರ್ಮ ವರ್ಮಂಗಳಡಗಿದವು. ಆತ್ಮಾದಿ ಷಡ್ಭೂತಂಗಳು ಆಚಾರಾದಿ ಮಹಾಲಿಂಗಂಗಳೊಳಗೆ ಲೀನಮಾಗಲು, ಆ ಆರುಲಿಂಗಂಗಳೇ ಈ ಮೂರುಲಿಂಗಂಗಳೊಳಗೆ ಬೆರೆದು, ಇಷ್ಟವೇ ಪ್ರಾಣಮಾಗಿ, ಭಾವಸಂಗದೊಳಗೆ ಪರವಶಮಾಗಿ, ತಾನುತಾನೆಯಾಗಿ, ತನ್ನಿಂದನ್ಯವೇನೂ ಇಲ್ಲದೆ ನಿಬ್ಬೆರಗಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ, ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ; ಬಿಂದುಮಯವಾದ ಶರೀರದಲ್ಲಿ ರೂಪು ನಾದಮಯಮಾದ ಪ್ರಾಣದಲ್ಲಿ ನಾಮ ಕಳಾಮಯಮಾದ ಮನದಲ್ಲಿ ಕ್ರಿಯೆ ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ, ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು, ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು. ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು . ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು. ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು . ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ, ಆ ಬಿಂದುವೇ ಆದಿಶಕ್ತಿಮಯಮಾಯಿತ್ತು. ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ, ಆ ನಾದವೇ ಪರಾಶಕ್ತಿಯಾಯಿತ್ತು. ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ, ಆ ಕಳೆಯೇ ಜ್ಞಾನಶಕ್ತಿಯಾಯಿತ್ತು. ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ, ಪ್ರಾಣವು ಗುರುವಿನಿಂದ ಪವಿತ್ರಮಾಗಿ, ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶರೀರವೇ ಹೇಯದಮೊಟ್ಟೆ ದುರ್ಗಂಧವೇ ನೈಜ, ಸುಗಂಧವೆಲ್ಲಾ ಆರೋಪಿತವಲ್ಲದೆ ನಿಜವಲ್ಲವಾಗಿ ಹೇಯವೇ ನೈಜ. ಮನಸ್ಸೇ ದುಃಖದಮೊಟ್ಟೆ, ಆ ದುಃಖವೇ ನೈಜ, ಸುಖವೇ ಆರೋಪಿತ, ಶರೀರದಲ್ಲಿರ್ಪ ಹೇಯವು ಪ್ರಬಲಗಳಾದ ವ್ಯಾದ್ಥಿಪೀಡೆಗಳನನುಭವಿಸುತ್ತಿರಲು, ಅದೇ ಜೀವನಿಗಿಹಲೋಕದಯಾತನೆಯಾಯಿತ್ತು. ದುಃಖದಮೊಟ್ಟೆಯಾಗಿರ್ಪ ಮನಸ್ಸನ್ನು ದುರ್ಗುಣಂಗಳು ಬಂದು ಅನುಭವಿಸುತ್ತಿರಲ್ಲದೇ ಜೀವನಿಗೆ ಪರಲೋಕಮಾಯಿತ್ತು. ಇಂತಪ್ಪ ಶರೀರದಲ್ಲಿ ಬಿಂದುವನ್ನೂ ಮನದಲ್ಲಿ ನಾದವನ್ನೂ ಇಹಪರಕೃತ್ಯಂಗಳಿಗೆ ಸಾಧಕಭೂತಮಾಗಿ ಪರಮಾತ್ಮನಿಟ್ಟಿರ್ಪನು. ಅಂತಪ್ಪ ಬಿಂದುವೇ ಆನಂದಸ್ವರೂಪು, ನಾದವೇ ಜ್ಞಾನಸ್ವರೂಪು, ಆ ಆನಂದಬಿಂದುವು ಶರೀರಕ್ಕೆ ಕಾರಣಮಾಗಿಹುದು, ಈ ನಾದಬಿಂದುಗಳ ಉತ್ತರಮಾರ್ಗವೇ ಮನಶ್ಶರೀರಗಳಿಗೆ ಸುಖ, ನಿಜಪ್ರಕಟವಂ ಮಾಡುತ್ತಿರ್ಪುದು. ದಕ್ಷಿಣಮಾರ್ಗವೇ ದುಃಖ, ಮಿಥ್ಯಾಪ್ರಕಟವಂ ಮಾಡುತ್ತಿಹುದು. ಇವೆರಡರ ಸಂಬಂಧವಿಲ್ಲದ ವಸ್ತುವಿಗೆ ಕೋಟಲೆಗೊಂಡು ಕುದಿವುತ್ತಿರ್ಪ ಜೀವನ ಪರಿಯ ನೋಡಾ! ಜೀವನಿಗೆ ನಿಜವೇ ಭಾವ. ಆ ಭಾವದಲ್ಲಿರ್ಪುದು ಕಳಾಪದಾರ್ಥವು, ಆ ಕಳಾಮಯವಾಗಿರ್ಪುದು ಸತ್ಯವು. ಅಂತಪ್ಪ ಸತ್ಯವಂ ಹಿಡಿದು ಈ ಮಿಥ್ಯಾರೂಪಮಾದ ಸ್ಥೂಲ ಸೂಕ್ಷ್ಮಂಗಳಂ ಬಿಟ್ಟಲ್ಲಿ, ಜೀವನೇ ಪರಮನಪ್ಪನು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶಬ್ದಮಧ್ಯದಲ್ಲಿರ್ಪ ಅರ್ಥವೇ ಜೀವನು, ತಮೋರೂಪಮಾಗಿಹನು. ಜ್ಞಾನಮಧ್ಯದಲ್ಲಿರ್ಪ ಅರ್ಥವೇ ಪರಮನು, ಸತ್ವರೂಪಮಾಗಿಹನು. ಜ್ಞಾನಶರೀರದಲ್ಲಿರ್ಪ ಪರಮಾರ್ಥಭಾವವೆಂಬ ಹಸ್ತದಲ್ಲಿ ಬುದ್ಧಿಯೆಂಬ ತ್ರಿಗುಣಾತ್ಮಕಮಪ್ಪ ಮುನ್ಮೊನೆಯಲಗಂ ಪಿಡಿದು, ಆ ಶಬ್ದಶರೀರಂ ಭೇದಿಸಿ, ತನ್ಮಧ್ಯದಲ್ಲಿರ್ಪ ಅರ್ಥವನ್ನು ಆ ಜ್ಞಾನವು ಗ್ರಹಿಸಿದಲ್ಲಿ, ಜ್ಞಾನಾರ್ಥದೊಳಗೆ ಬೆರೆದು, ಎರಡೂ ಒಂದಾಗಿ, ಆ ಅರ್ಥವೇ ಸತ್ಯವಾಗಿ ಆನಂದಮಯಮಪ್ಪುದು. ಜ್ಞಾನವು ಗ್ರಹಿಸದೇ ಬಿಟ್ಟರೆ ಶಬ್ಧಾರ್ಥವೇ ದುರರ್ಥವಾಗಿ, ಸೃಷ್ಟಿಸ್ಥತಿಸಂಹಾತಂಗಳಲ್ಲಿ ಕೋಟಲೆಗೊಳ್ಳುತ್ತಿರ್ಪುದೇ ಜೀವನು, ಅದೇ ಪರಮನು. ತತ್ಪರಿಗ್ರಹವೇ ಐಕ್ಯಮಾದಲ್ಲಿ ಎರಡೂ ಒಂದೇ ಆಗಿರ್ಪುದೇ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಹಗಲಿದ್ದಲ್ಲಿ ಕತ್ತಲೆಯಿರ್ಪುದೆ ? ಕತ್ತಲೆಯಿದ್ದಲ್ಲಿ ಹಗಲಿರ್ಪುದೆ ? ಜಾಗ್ರವಿದ್ದಲ್ಲಿ ಸ್ವಪ್ನವಿರ್ಪುದೆ ? ದುಃಖವಿದ್ದಲ್ಲಿ ಆನಂದವಿರ್ಪುದೆ ? ನೀನು ಪ್ರಸನ್ನಮಾದಲ್ಲಿ ನಾನಿರ್ಪೆನೆ ? ನಾನು ಪ್ರಸನ್ನಮಾದಲ್ಲಿ ನೀನಿರ್ಪೆಯಾ ? ನೀನಿದ್ದಲ್ಲಿ ನಾನಿಲ್ಲ ನಾನಿದ್ದಲ್ಲಿ ನೀನಿಲ್ಲ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುವೇ, ನಿನ್ನ ಕರದಲ್ಲೆನ್ನಂ ಪುಟ್ಟಿಸಿ, ಮಂತ್ರವೆಂಬ ಜನನಿಯ ವಿವೇಕವೆಂಬ ಸ್ತನಗಳೊಳ್ ತುಂಬಿರ್ಪ ಅನುಭವಾಮೃತರಸವನೆರೆದು, ಆಚಾರಕ್ಷೇತ್ರದಲ್ಲಿ ಬೆಳೆಸುತ್ತಿರಲು, ಅನೇಕ ಕಳೆಗಳಿಂ ಕೂಡಿದ ದಿವ್ಯಜ್ಞಾನವೆಂಬ ಯೌವನಂ ಪ್ರಾದುರ್ಭವಿಸಿ, ಸತ್ಕರ್ಮವಾಸನೆಯಿಂ ಪೋಷಿತನಾಗಿರ್ಪೆನಗೆ ಮಹಾಲಿಂಗಮೊಲಿದು, ನಿನ್ನ ಭಾವದಲ್ಲಿ ಬಂದು, ಹೃದಯದಲ್ಲಿ ನಿಂದು ಕೇಳಲು, ನೀನು ಆ ಲಿಂಗಕ್ಕೆ ಮಂಗಳಸೂತ್ರಮಂ ಕಟ್ಟಿ, ಕಲಶಕನ್ನಡಿಗಳನ್ನಿಕ್ಕಿ ಪಾಣಿಗ್ರಹಣಮಂ ಮಾಡಿ ಕೊಟ್ಟಬಳಿಕ, ರತಿಯನನುಭವಿಸಿ, ಲಿಂಗಸುಖವಂ ತನಗೀವುತ್ತಿರ್ಪನಯ್ಯಾ. ಆ ಮೇಲೆ ತನ್ನ ಮನದ ಹೆದರಿಕೆಯಂ ಬಿಡಿಸಿ, ಅಂತರಂಗಕ್ಕೆ ಕರೆದುಕೊಂಡುಬಂದು, ನಿಜಪ್ರಸಾದ ರಸದಂಬುಲವಿತ್ತು, ತನ್ನೊಡನೆ ಕೂಡುವ ಚಾತುರ್ಯಮಾರ್ಗಂಗಳಂ ಕಲಿಸುತ್ತ, ಆ ಲಿಂಗಂ ತಾನೇ ತನಗೆ ಗುರುವಾದನಯ್ಯಾ. ಆ ಮೇಲೆ ಭಾವದಲ್ಲಿ ನನ್ನ ಕೂಡಣ ಚಲ್ಲಾಟದಿಂದ ಸಂಚರಿಸುತ್ತಾ, ತಾನೇ ಜಂಗಮವಾದನಯ್ಯಾ. ತನ್ನ ಭಾವದಲ್ಲಿರ್ಪ ಇಂದ್ರಿಯವಿಷಯಂಗಳೆಲ್ಲಾ ಪುಣ್ಯಕ್ಷೇತ್ರಂಗಳಾದವಯ್ಯಾ. ಶರೀರವೇ ವಿಶ್ವವಾಯಿತ್ತಯ್ಯಾ, ತಾನೇ ವಿಶ್ವನಾಥನಯ್ಯಾ. ಪಂಚಭೂತಂಗಳೇ ಪಂಚಕೋಶವಾಯಿತ್ತಯ್ಯಾ. ಆ ಲಿಂಗಾನಂದವೇ ಭಾಗೀರಥಿಯಾಯಿತ್ತಯ್ಯಾ. ಆ ಲಿಂಗದೊಳಗಣ ವಿನಯವೇ ಸರಸ್ವತಿಯಾಗಿ, ಆ ಲಿಂಗದ ಕರುಣವೇ ಯಮುನೆಯಾಗಿ, ತನ್ನ ಶರೀರವೆಂಬ ದಿವ್ಯ ಕಾಶೀಕ್ಷೇತ್ರದಲ್ಲಿ ಹೃದಯವೆಂಬ ತ್ರಿವೇಣೀ ಮಣಿಕರ್ಣಿಕಾಸ್ಥಾನದಲ್ಲಿ ನೆಲಸಿ, ಸಕಲ ಗುಣಂಗಳೆಂಬ ಪುರುಷ ಋಷಿಗಳಿಂದ ಅರ್ಚಿಸಿಕೊಳ್ಳುತ್ತಾ ನಮ್ಮೊಳಗೆ ನಲಿದಾಡುತ್ತಿರ್ದನಯ್ಯಾ. ತನ್ನ ನಿಜಮತದಿಂ ವಿಶ್ವಸ್ವರೂಪ ಕಾಶೀಕ್ಷೇತ್ರವನು ರಕ್ಷಿಸುತಿರ್ಪ ಅನ್ನಪೂರ್ಣಾಭವಾನಿಗೂ ತನಗೂ ಮತ್ಸರಮಂ ಬಿಡಿಸಿ, ತನಗೆ ಅನ್ನಪೂರ್ಣಭವಾನಿಯೇ ಆಸ್ಪದಮಾಗಿ, ಆ ಅನ್ನಪೂರ್ಣೆಗೆ ತಾನೇ ಆಸ್ಪದಮಾಗಿರ್ಪಂತನುಕೂಲವಿಟ್ಟು ನಡಿಸಿದನಯ್ಯಾ. ಇಂತಪ್ಪ ದಿವ್ಯಕ್ಷೇತ್ರದಲ್ಲಿ ನಿಶ್ಚಿಂತಮಾಗಿ ಆ ಪರಮನೊಳಗೆ ಅಂತರಂಗದರಮನೆಯಲ್ಲಿ ನಿರ್ವಾಣರತಿಸುಖವನನುಭವಿಸುತ್ತಾ ಆ ಲಿಂಗದಲ್ಲಿ ಲೀನಮಾಗಿ ಪುನರಾವೃತ್ತಿರಹಿತ ಶಾಶ್ವತ ಪರಮಾನಂದರತಿಸುಖದೊಳೋಲಾಡುತ್ತಿರ್ದೆನಯ್ಯಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಸತ್ಯವೇ ಪರಮನು, ಜ್ಞಾನನವೇ ಜೀವನು, ಆನಂದವೇ ಶರೀರವು. ಅದೆಂತೆಂದೊಡೆ: ಶರೀರಾದಿ ಸಕಲಪ್ರಪಂಚಕ್ಕೂ ಜ್ಞಾನವೇ ಮೂಲವಾಗಿರ್ಪುದು. ಆನಂದಮುಖದೊಳ್ ಬಿಂದು ಜನಿಸಿ, ಆ ಬಿಂದುವೇ ಪೃಥ್ವೀರೂಪದಲ್ಲಿ ಘನೀಭವಿಸಿ, ಪಿಂಡಾಕಾರಮಾಗಿ ಶರೀರಮಪ್ಪಂತೆ, ಜ್ಞಾನಮುಖದಲ್ಲಿ ವಾಯುವು ಜನಿಸಿ, ತೇಜೋರೂಪದಲ್ಲಿ ಘನೀಭವಿಸಿ, ಜೀವನಾರ್ಪುದು. ನಿಜದಲ್ಲಾತ್ಮನು ಜನಿಸಿ, ಆಕಾಶರೂಪದಲ್ಲಿ ಘನೀಭವಿಸಿ ಪರಮನಾಗಿರ್ಪನು. ಆನಂದಬಿಂದುಮುಖದಿಂದ ಅಹಂಕಾರವು ಜನಿಸಿ, ಜ್ಞಾನವಾಯುಗಳ ಸಂಗದಿಂ ಮನವು ಪುಟ್ಟಿತ್ತು. ನಿಜಾತ್ಮಗಳ ಸಂಗದಿಂ ಭಾವವು ಹುಟ್ಟಿತ್ತು. ತತ್ಸಾಧ್ಯಕ್ಕವೇ ಸಾಧನಗಳಾಗಿರ್ಪುದರಿಂ ಇವೇ ಕರಣಂಗಳಾಗಿ, ಅವೇ ಕರಣಂಗಳಾಗಿರ್ಪವು. ಪೃಥ್ವವೀಬೀಜಗಳಸಂಗದಿಂದ ಬೀಜಮಧ್ಯದಲ್ಲಿ ವೃಕ್ಷವು ಜನಿಸಿತ್ತು. ವೃಕ್ಷವು ಬಲಿದಲ್ಲಿ ಬೀಜವು ನಷ್ಟಮಾಗಿ, ತದಗ್ರದಲ್ಲಿರ್ಪ ಫಲಮಧ್ಯದಲ್ಲಿ ಅನೇಕಮುಖಮಾಗಿ ತೋರುತ್ತರ್ಪಂತೆ, ಜ್ಞಾನವಾಯುಗಳಸಂಗದಿಂ ಜ್ಞಾನಮಧ್ಯದಲ್ಲಿ ಮನಸ್ಸು ಹುಟ್ಟಿ, ಅದು ಬಲಿದಲ್ಲಿ. ಆ ಮೂಲಜ್ಞಾನವಳಿದು, ತತ್ಫಲರೂಪಮಾದ ಇಂದ್ರಿಯಮಧ್ಯದಲ್ಲಿ ತೋರುತ್ತಿರ್ಪುದು. ಜಲವು ಆ ಬೀಜವಂ ಭೇದಿಸಿ, ತನ್ಮಧ್ಯದಲ್ಲಿ ವೃಕ್ಷವಂ ನಿರ್ಮಿಸುವಂತೆ, ಮನಸ್ಸೇ ಜಾಗ್ರತ್ಸ್ವರೂಪದಲ್ಲಿ ಜ್ಞಾನಬ್ಥಿನ್ನವಂ ಮಾಡಿ, ತನ್ಮಧ್ಯದಲ್ಲಾನಂದವಂ ನಿರ್ಮಿಸುತ್ತಿರ್ಪುದು. ಆನಂದವೂ ನಿರಾಕಾರವೂ ಬಿಂದುವು ಸಾಕಾರವೂ ಆದುದರಿಂದ ಆನಂದವಂ ಬಿಂದುವು ಬಂದ್ಥಿಸಿರ್ಪಂತೆ, ವಾಯುವು ಜ್ಞಾನವಂ ಬಂದ್ಥಿಸಿರ್ಪುದು. ಆನಂದವು ಜ್ಞಾನದೊಳ್ಬೆರೆದಲ್ಲಿ ಶರೀರವು ಜೀವನಳೈಕ್ಯಮಾಯಿತ್ತು. ಆ ಜ್ಞಾನವು ನಿಜದೊಳ್ಬೆರೆದಲ್ಲಿಜೀವನು ಪರಮನೊಳೈಕ್ಯಮಾಯಿತ್ತು. ನಿಜಾನಂದ ಶಿವಶಕ್ತಿಗಳೇಕಮಾದಲ್ಲಿ ಜ್ಞಾನವದೊರಲಗೆ ಬೆರೆದು, ಭೇದವಡಗಿ ಅವರೆಡರ ಸಂಯೋಗ ವಿಯೋಗಕ್ಕೆ ತಾನೇ ಕಾರಣಮಾಗಿ, ನಿಜಾನಂದವೇ ತೋರುತ್ತಾ, ತಾನೊಪ್ಪುತ್ತಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ರುಚಿಯಲ್ಲಿ ಸಂಹಾರ, ಸ್ಪರುಶನದಲ್ಲಿ ಸೃಷ್ಟಿ, ರೂಪಿನಲ್ಲಿ ಸ್ಥಿತಿ, ಇಂತು ಸಂಹಾರಕ್ಕೆ ನಾದವೇ ಮೂಲವು, ಸೃಷ್ಟಿಗೆ ಬಿಂದುವೇ ಮೂಲವು, ಸ್ಥಿತಿಗೆ ಕಳೆಯೇ ಮೂಲವು. ಸೃಷ್ಟಿಗೆ ಪೃಥ್ವಿಯೇ ಆಧಾರಮಾಯಿತ್ತು ; ಸ್ಥಿತಿಗೆ ಆತ್ಮನೇ ಆಧಾರಮಾಯಿತ್ತು. ಸೃಷ್ಟಿಮೂಲಮಪ್ಪ ಸ್ಪರುಶನದಲ್ಲಿ ಆನಂದವೂ ಸಂಹಾರಮೂಲಮಪ್ಪ ರುಚಿಯಲ್ಲಿ ಜ್ಞಾನವೂ ಸ್ಥಿತಿಮೂಲಮಪ್ಪ ರೂಪಿನಲ್ಲಿ ನಿಜವೂ ನೆಲೆಗೊಂಡು, ಸೃಷ್ಟಿಯೆ ಸ್ಥಿತಿಹೇತುವಾಗಿ, ಸ್ಥಿತಿಯೇ ಸಂಹಾರಹೇತುವಾಗಿ, ಸಂಹಾರವೇ ಸೃಷ್ಟಿಹೇತುವಾಗಿ, ರುಚಿಗೆ ಅಗ್ನಿಯೂ, ಸ್ಪರುಶನಕ್ಕೆ ಜಲವೂ, ರೂಪಿಗೆ ಪೃಥ್ವಿಯೂ ಕಾರಣಮಾಗಿ, ಇಂತು ಅವಸ್ತ್ರಮಾಗಿ ತಿರುಗುತ್ತಿರ್ಪ ಪರಶಿವನಾಜ್ಞಾಚಕ್ರವನ್ನು ಗುರುಮುಖದಿಂದ ವಿಚಾರಿಸಿ ತಿಳಿದ ಮಹಾಪುರುಷನು ಈ ಚಕ್ರಕ್ಕೆ ತಗಲಿರ್ಪ ಮನವೆಂಬ ಕೀಲನ್ನು ಗುರುವಿತ್ತ ಲಿಂಗವೆಂಬ ಪರಶುವಿನಿಂ ಭಾವವೆಂಬ ಹಸ್ತದಲ್ಲಿ ಪಿಡಿದು ಖಂಡಿಸಲು, ಆ ಚಕ್ರದ ಚಲನೆ ನಿಂದಿತ್ತು. ಸ್ಪರ್ಶನದಲ್ಲಿರ್ಪ ಆನಂದರಸಮಂಗದಲ್ಲಿ ಕೂಡಿ, ಸಂಹಾರಾಗ್ನಿಯಂ ನಂದಿಸಿತ್ತು. ಆ ಸಂಹಾರದೊಳಗಿರ್ಪ ಜ್ಞಾನಾಗ್ನಿಯು ಲಿಂಗದೊಳಗೆ ಬೆರದು, ಸೃಷ್ಟಿಸ್ಥಿತಿರೂಪಮಾದ ಪೃಥ್ವಿ ಅಪ್ಪುಗಳಂ ಸಂಹರಿಸಿತ್ತು. ಸ್ಥಿತಿಯಲ್ಲಿರ್ಪ ನಿಜಲಿಂಗದಲ್ಲಿ ನಿಜಮಾಯಿತ್ತು. ಇಂತು ಆ ಚಕ್ರವಳಿಯೆ, ಆತ್ಮಭ್ರಮೆಯಳಿದು, ಆತ್ಮವೇ ಲಿಂಗಮಾಗಿ, ಆಕಾಶವೇ ಅಂಗವಾಗಿ, ವಾಯುವೇ ಆ ಎರಡರ ಸಂಗದಲ್ಲಿ ಬೆರದು ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇಂದ್ರಿಯಗಳಲ್ಲಿ ಸುಷುಪ್ತಿಜ್ಞಾನವು, ಮನದಲ್ಲಿ ಸ್ವಪ್ನಜ್ಞಾನವು, ಭಾವದಲ್ಲಿ ಜಾಗ್ರಜ್ಞಾನವು. ಸುಷುಪ್ತಿಯಂ ಹೊಂದಿದಲ್ಲಿ ಜಾಗ್ರವು ಸ್ವಪ್ನವಾಗಿರ್ಪಂತೆ, ಜ್ಞಾನೇಂದ್ರಿಯಂಗಳಂ ಹೊಂದಿದಲ್ಲಿ ಭಾವವೇ ಮನಸ್ಸಾಗಿರ್ಪುದು. ಜಾಗ್ರವಂ ಹೊಂದಿದಲ್ಲಿ ಸ್ವಪ್ನಸುಷುಪ್ತಿಗಳಿಲ್ಲದಿರ್ಪಂತೆ, ಭಾವಜ್ಞಾನಮುದಯಮಾದಲ್ಲಿ ಮನಸ್ಸಿನಿಂದಿಂದ್ರಿಯಂಗಳಳಿದು, ನಿಶ್ಚಿಂತಮಾಗಿರ್ಪುದೇ ಕಾರಣವು. ಇಂತಪ್ಪ ಜಾಗ್ರತ್ಸ್ವಪ್ನ ಸುಷುಪ್ತಿಜ್ಞಾನಂಗಳನ್ನು ಹೊಂದಿ ಮಹಾಲಿಂಗವು ತಾಂ ತ್ರಿಮೂರ್ತಿಸ್ವರೂಪಮಂ ಧರಿಸಿ ಕ್ರೀಡಿಸುತ್ತಿರ್ಪುದು, ಜಾಗ್ರದಲ್ಲಿ ನಡೆಸುತ್ತಿರ್ಪುದೇ ರುದ್ರಮೂರ್ತಿಯು, ಸುಷುಪ್ತಿಯೋಗದಲ್ಲಿ ಆನಂದಿಸುತ್ತಿರ್ಪುದೇ ವಿಷ್ಣುಮೂರ್ತಿಯು, ಸ್ವಪ್ನದಲ್ಲಿ ಪ್ರಪಂಚಮಂ ಸೃಷ್ಟಿಸುತ್ತಿರ್ಪುದೇ ಬ್ರಹ್ಮಮೂರ್ತಿಯು. ಆ ಸ್ವಪ್ನವಂ ರಕ್ಷಿಸುತ್ತಿರ್ಪುದೇ ಸುಷುಪ್ತಿಯು, ಆ ಸ್ವಪ್ನವಂ ಸಂಹರಿಸುತ್ತಿರ್ಪುದೇ ಜಾಗ್ರವು, ಆ ಸ್ವಪ್ನವಂ ಸೃಷ್ಟಿಸುವುದೇ ಸ್ವಪ್ನವು. ಸ್ವಪ್ನದಲ್ಲಿರ್ಪವರಿಗೆ ಜಾಗ್ರವು ತಿಳಿಯದಿರ್ಪಂತೆ, ಪ್ರಪಂಚದಲ್ಲಿರ್ಪವರಿಗೆ ಪರಮನು ತಿಳಿಯದಿರ್ಪನು. ಸ್ವಪ್ನ ಸುಷುಪ್ತಿಗಳ್ತನ್ನಧೀನಮಾಗಿರ್ಪವು. ಜಾಗ್ರವು ತನ್ನಂ ಮೀರಿರುವಿದರಿಂ ಮರಣದಲ್ಲಿ ಸ್ವಾತಂತ್ರ್ಯಮಿಲ್ಲಮಾಯಿತ್ತು. ಇಂತಪ್ಪ ಅವಸ್ಥಾತ್ರಯಂಗಳಲ್ಲಿ ಹೊಂದಿರ್ಪ ಜ್ಞಾನತ್ರಯಂಗಳಂ ಮೀರಿ, ಜ್ಞಾನ ತೂರ್ಯಾವಸ್ಥೆಯಂ ಹೊಂದಿದಲ್ಲಿ, ಮಹಾಲಿಂಗನಾದ ನೀನೊಬ್ಬನಲ್ಲದೆ ಮತ್ತಾರೂ ಇಲ್ಲದೆ, ನೀನೇ ನೀನಾಗಿರ್ಪ ನಿಜಸುಖವಮೆನಗಿತ್ತು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅಗ್ನಿಯಲ್ಲಿ ಕಾಣಿಸುವ ಛಾಯೆಯು ನಿರಾಕಾರ ತಮೋರೂಪುಳ್ಳದ್ದು, ಜಲದಲ್ಲಿ ಕಾಣಿಸುವ ಛಾಯೆಯು ಸಾಕಾರಸತ್ವಸ್ವರೂಪುಳ್ಳದ್ದು. ಅಗ್ನಿಯಲ್ಲಿ ರೂಪುಮಾತ್ರವೇ, ಜಲದಲ್ಲಿ ರೂಪುರುಚಿಗಳೆರಡೂ ಪ್ರತ್ಯಕ್ಷಮಾಗಿಹವು. ಸಾಕಾರಛಾಯೆ ನಿಜಮಾಗಿ, ಹಾವಭಾವವಿಲಾಸವಿಭ್ರಮ ಕಾರಣಮಾಗಿಹುದು. ನಿರಾಕಾರಛಾಯೆ ಜಡಮಾಗಿ ವೈರಭಿನ್ನಮಾಗಿಹುದು. ಗುರುದತ್ತಲಿಂಗದಿಂದ ತನ್ನ ನಿಜಭಾವಮಂ ತಿಳಿದು, ಲಿಂಗವೂ ತಾನೂ ಏಕಮೆಂಬ ಭಾವವು ಬಲಿದು ಭಿನ್ನಭ್ರಮೆಯಳಿದು ಮನಂಗೊಂಡಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಘ್ರಾಣಜಿಹ್ವಾತ್ವಕ್ಫ್ರೋತ್ರಮಾನಸಾದಿ ವಿಷಯೇಂದ್ರಿಗಳಲ್ಲಿ ಪೃಥ್ವಿವ್ಯಪ್ತೇಜೋವಾಯ್ವಾಕಾಶಾತ್ಮಾದಿ ಷಡ್ಭೂತಂಗಳು ವಿಪರೀತಸಂಬಂಧಂಗಳಾಗಿ ತೋರುತ್ತಿರ್ಪವೆಂತೆಂದೊಡೆ: ಮನಸ್ಸಿನ ವಿಷಯದಲ್ಲಿ ಪೃಥ್ವಿಯು ಸೃಷ್ಟಿಕಾರಣಮಾಗಿಹುದು. ಶ್ರೋತ್ರವಿಷಯದಲ್ಲಿ ಜಲವು ಸಂರಕ್ಷಣಕಾರಣಮಾಗಿ ಶುಚಿಯಾಗಿಹುದು. ತ್ವಗ್ವಿಷಯದಲ್ಲಗ್ನಿಯು ಸಂಹಾರಕಾರಣಮಾಗಿಹುದು. ನೇತ್ರವಿಷಯದಲ್ಲಿ ವಾಯುವು ಚಂಚಲಕಾರಣಮಾಗಿಹುದು. ಜಿಹ್ವಾವಿಷಯದಲ್ಲಾಕಾಶವು ಶಬ್ದಕಾರಣಮಾಗಿಹುದು. ನಾಸಿಕ ವಿಷಯದಲ್ಲಾತ್ಮನು ಚೈತನ್ಯಕಾರಣಮಾಗಿಹನು. ವಾಯುವಿನೊಳಗೆ ಬೆರೆದ ಆತ್ಮನೇ ಜೀವನು ; ಆತ್ಮನೊಳಗೆ ಬೆರೆದ ವಾಯುವೆ ಮನಸ್ಸು. ಪಂಚಭೂತರೂಪಮಾದ ಶರೀರಕ್ಕೆ ಜೀವನು ಕರ್ತನಾದಂದದಿ ಪಂಚಭೂತಗುಣಗ್ರಾಹಿಗಳಾದ ಇಂದ್ರಿಯಂಗಳಿಗೆ ಮನಸ್ಸೇ ಕರ್ತೃವಾಗಿ, ಆ ಇಂದ್ರಿಯಂಗಳು ಹೋದಲ್ಲಿಗೆ ಶರೀರವು ಹೋಗುವಂದದಿ, ಆ ಮನಸ್ಸೇ ಜೀವನಾಗಿ, ಆ ಮನಸ್ಸು ಹೋದಲ್ಲಿಗೆ ಜೀವನು ಹೋಗುತ್ತಿಹನು. ಅಂತಪ್ಪ ನಿಜಸ್ವರೂಪಮಾದ ಪರಮಾತ್ಮನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇನ್ನಷ್ಟು ... -->