ಅಥವಾ

ಒಟ್ಟು 317 ಕಡೆಗಳಲ್ಲಿ , 39 ವಚನಕಾರರು , 196 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗದೇವನೆ ಕರ್ತ, ಶಿವಭಕ್ತನೆ ಶ್ರೇಷ್ಠ. ಕೊಲ್ಲದಿರ್ಪುದೆ ಧರ್ಮ. ಅಧರ್ಮದಿಂದ ಬಂದುದನೊಲ್ಲದಿರ್ಪುದೆ ನೇಮ. ಅಳುಪಿಲ್ಲದಿರ್ಪುದೆ ವ್ರತ. ಇದೇ ಸತ್ಪಥ, ಉಳಿದುದೆಲ್ಲ ಮಿಥ್ಯವೆಂದೆ ಕಾಣಾ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಲಿಂಗವು ಜ್ಞಾನಸಂಸಾರಿ, ಜಂಗಮವು ವೈರಾಗ್ಯಸಂಸಾರಿ. ಈ ಸಂಸಾರದ ಸಂದನುರುಹಿ ನಿಃಸಂಸಾರಿಯಾದ ನಿರುಪಮಾನಂದೈಕ್ಯನ ಪದವ ತೋರಿಸಾ ನಿಮ್ಮ ಧರ್ಮ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆಶೆ ಇಚ್ಛೆಗೆನ್ನ ಗಾಸಿ ಮಾಡದಿರಯ್ಯಾ, ದಾಸೋಹಿಯಾಗಿರ್ಪ ದಾಸನಾಗಿರಿಸೆನ್ನ ಕೂಡಲಸಂಗಮದೇವಾ, ನಿಮ್ಮ ಧರ್ಮ.
--------------
ಬಸವಣ್ಣ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು, ನಿಂದಲ್ಲಿ ನಿಲಲೀಯದೆನ್ನ ಮನವು, ಹೊಂದಿದಲ್ಲಿ ಹೊಂದಲೀಯದೆನ್ನ ಮನವು ಕೂಡಲಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ. 32
--------------
ಬಸವಣ್ಣ
ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆ ಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟು ಬೇಕಾದ ಹಾಂಗೆಯಾದೆ. ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿ ಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ. ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.
--------------
ಸಿದ್ಧರಾಮೇಶ್ವರ
ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ.
--------------
ಬಸವಣ್ಣ
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಭಕ್ತಿಯ ಕುಳವನು ಬಸವಣ್ಣನೇ ಬಲ್ಲನು. ಪ್ರಸಾದದ ನೆಲೆಯನು ಬಸವಣ್ಣನೇ ಬಲ್ಲನು. ಬಸವಣ್ಣ ನಡೆದುದೇ ಮಾರ್ಗ, ಅಖಿಳಗಣಂಗಳಿಗೆ, ಬಸವಣ್ಣ ನುಡಿದುದೇ ವೇದ, ಮಹಾಪುರುಷರಿಗೆ, ಬಸವಣ್ಣನನಾದಿ, ಲಿಂಗವಾದಿ ಎಂದರಿದೆನಾಗಿ, ಬಸವಣ್ಣನ ನೆನೆವುತಿರ್ದೆನಯ್ಯಾ. ಬಸವಣ್ಣನ ಪಾದವಿಡಿದೆನಾಗಿ, ಲಿಂಗವೇದಿಯಾದೆನು. ಬಸವಣ್ಣನ ಬಾಗಿಲ ಕಾಯ್ದೆನಾಗಿ, ಪ್ರಸಾದ ಸಾಧ್ಯವಾಯಿತ್ತು. ಬಸವಣ್ಣನ ಕರುಣದಿಂದ ಪ್ರಭುದೇವರ ನಿಲವ ಕಂಡೆನು. ಬಸವಣ್ಣನ ಬೋಧೆಯಿಂದ ಜಂಗಮವೇ ಲಿಂಗವೆಂದರಿದೆನು. ಆ ಜಂಗಮ ಮುಖದಿಂದಲ್ಲದೆ ಲಿಂಗತೃಪ್ತಿಯಾಗದು. ಪ್ರಸಾದಸಿದ್ಧಿಯಾದಲ್ಲದೆ ಭವಂ ನಾಸ್ತಿಯಾಗದು. ಇದು ಕಾರಣ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಶರಣ ಬಸವಣ್ಣನ ನಂಬಿ, ನಾನು ಕೆಟ್ಟು, ಬಟ್ಟಬಯಲಾಗಿ ಹೋದೆನೆಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಶ್ರೀಗುರು ಲಿಂಗ ಜಂಗಮ ಪ್ರಸಾದ ಒಂದೇ ಪರಶಿವಮೂರ್ತಿ ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿಸಿ, ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಈ ಚತುರ್ವಿಧ ಪದವಿಯನೂ ಕೂಡುವರೆ, ಗುರು ಲಿಂಗ ಜಂಗಮ ಪ್ರಸಾದವ ನಂಬುವುದು. ಇದು ಸತ್ಯ, ಶಿವನಾಣೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.
--------------
ಬಸವಣ್ಣ
ನಿಷ್ಠೆಯ ಮರೆದರೇನಯ್ಯಾ ? ಲೋಕದ ಮನುಜರ ದೃಷ್ಟಿಗೆ ಸಿಲ್ಕಿ ಭ್ರಷ್ಟೆದ್ದುಹೋದರು. ತನು ಕಷ್ಟಮಾಡಿದರೇನಯ್ಯಾ ಮನ ನಿಷ್ಠವಾಗದನ್ನಕ್ಕ ? ತನು ಮನವೆರಡು ನಷ್ಟವಾಗಿ, ಘನವ ನೆಮ್ಮಿ, ನಿಮ್ಮ ನೆನಹು ನಿಷ್ಪತ್ತಿಯಾದ ಶರಣರ ಎನಗೊಮ್ಮೆ ತೋರಯ್ಯ, ನಿಮ್ಮ ಧರ್ಮ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ. ಇಂತೀ ನಾಲ್ಕರ ಮಧ್ಯದ ಮನೆಗೆ ಅಸ್ಥಿಯ ಗಳು, ನರದ ಕಟ್ಟು, ಮಜ್ಜೆಯ ಸಾರ, ಮಾಂಸದ ಗೋಡೆ, ಚರ್ಮದ ಹೊದಿಕೆ, ಶ್ರೋಣಿತದ ಸಾರದ, ಕುಂಭದಿಂದಿಪ್ಪುದೊಂದು ಚಿತ್ರದ ಮನೆ ನೋಡಯ್ಯಾ. ಆ ಮನೆಗೊಂಬತ್ತು ಬಾಗಿಲು, ಇಡಾ ಪಿಂಗಳವೆಂಬ ಗಾಳಿಯ ಬಾದಳ, ಮೃದು ಕಠಿಣವೆಂಬವೆರಡು ಅಗುಳಿಯ ಭೇದ ನೋಡಾ, ಇತ್ತಲೆಯ ಮೇಲಿಪ್ಪ ಸುಷುಮ್ನಾನಾಳವ ಮುಚ್ಚಿ, ದಿವಾರಾತ್ರಿಯೆಂಬ ಅರುಹು ಮರಹಿನ ಉಭಯವ ಕದಕಿತ್ತು ನೋಡಯ್ಯಾ. ಮನೆ ನಷ್ಟವಾಗಿ ಹೋದಡೆಯೂ ಮನೆಯೊಡೆಯ ಮರಳಿ ಮತ್ತೊಂದು ಮನೆಗೆ ಒಪ್ಪುದು ತಪ್ಪದು ನೋಡಯ್ಯಾ ಇಂತಪ್ಪ ಮನೆಗೆನ್ನ ಮರಳಿ ಬಾರದಂತೆ ಮಾಡಯ್ಯಾ, ಕಾಮಬ್ಥೀಮ ಜೀವಧನದೊಡೆಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಒಕ್ಕಲಿಗ ಮುದ್ದಣ್ಣ
ಪುಣ್ಯಪಾಪಂಗಳನರಿಯದ ಮುನ್ನ ಅನೇಕ ಭವಂಗಳಲ್ಲಿ ಬಂದು ನಿಮ್ಮ ನಿಲುವನರಿಯದೆ ಕೆಟ್ಟನಯ್ಯಾ. ಇನ್ನು ನಿಮ್ಮ ಶರಣುವೊಕ್ಕೆನಾಗಿ, ನಾ ನಿಮ್ಮನೆಂದೂ ಅಗಲದಂತೆ ಮಾಡಾ ಅಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ! ನಿಮ್ಮಲ್ಲಿ ಒಂದು ಬೇಡುವೆ; ಎನ್ನ ಕರ್ಮಬಂಧನ ಬಿಡಿವಂತೆ ಮಾಡಾ ಅಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಎನ್ನ ಪಂಚಾಕ್ಷರವ ಇಷ್ಟಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಸಪ್ತದಶಾಕ್ಷರವ ಪ್ರಾಣಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ತ್ರಿವಿಧಾಕ್ಷರವ ಭಾವಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಷಡಿಂದ್ರಿಯಂಗಳ ಷಡ್ವಿಧಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ನವಚಕ್ರಂಗಳ ನವವಿಧಲಿಂಗಕ್ಷೇತ್ರ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಅನ್ನಮಯವ ಪ್ರಸಾದ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಪ್ರಾಣಮಯವ ಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಮನೋಮಯವ ಶಿವಧ್ಯಾನ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ವಿಜ್ಞಾನಮಯವ ಜ್ಞಾನ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಆನಂದಮಯವ ಶಿವಾನಂದಮಯವಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಷಡ್‍ಧಾತುಗಳ ಷಡಕ್ಷರ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೇ ಎನ್ನ ಅಂಗ ಮನ ಪ್ರಾಣೇಂದ್ರಿಯಂಗಳಲ್ಲಿ ಪರಿಪೂರ್ಣನಾಗಿ ಬಸವಣ್ಣನೇ ಇಷ್ಟವಾಗಿ ತೊಳಗಿ ಬೆಳಗುತ್ತಿಪ್ಪ ಭೇದವನು ಬೋಳಬಸವೇಶ್ವರನೆನಗೆ ಅರುಹಿಕೊಟ್ಟು ಸಿದ್ಧೇಶ್ವರನೆಂಬ ಚಿದಬ್ಧಿಯೊಳಗೆ ಮುಳುಗಿಸಿದ ಕಾರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಉಭಯಭಾವವನರಿಯದೆ ಶಿವಶಿವ ಎನುತಿರ್ದೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಇನ್ನಷ್ಟು ... -->