ಅಥವಾ

ಒಟ್ಟು 23 ಕಡೆಗಳಲ್ಲಿ , 11 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ ಧಾನ್ಯ ಅಷ್ಟಮಹದೈಶ್ವರ್ಯದೊಳು ಮನ ಹೀನನಾಗಿ ಮಾರ್ಗತಪ್ಪಿತು. ಬೆನಕನ ಮದುವೆಯಂತೆಯಾಯಿತು. ಇಂದು ನಾಳೆಯೆಂಬ ಸಂದೇಹಮಾತ್ರದಿಂದ ವನಿತೆ ಸುತ ಮಿತ್ರ ಕಳತ್ರಯದಿಂದ ಅನಾಚಾರ ಹೊಂದಿತು. ಮುನಿವ ವೈರಿಯ ಕೈಯ ಚಂದ್ರಾಯುಧದ ಮೊನೆಗೆ ಇದಿರು ಆದಂತಾಯಿತು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುಪ್ರೇಮಿಯಾದಡೆ ಚತುರ್ವಿಧಭಕ್ತಿಯಿಂದ ತನುವ ದಂಡಿಸಲಾಗದು. ಲಿಂಗಪ್ರೇಮಿಗಳಾದಡೆ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಮನವ ಬಳಲಿಸಲಾಗದು. ಜಂಗಮಪ್ರೇಮಿಗಳಾದಡೆ ಅನ್ನ ವಸ್ತ್ರ ಹದಿನೆಂಟು ಜೀನಸಿನ ಧಾನ್ಯ ಮೊದಲಾದ ಷೋಡಶಭಕ್ತಿಯಿಂದ ಆತ್ಮನ ಬಳಲಿಸಲಾಗದು. ಇಂತಪ್ಪ ಭಕ್ತರಿಗೆ ಭವ ಹಿಂಗದು ; ಮುಕ್ತಿಯು ತೋರದು. ಅದೇನು ಕಾರಣವೆಂದಡೆ : ತಮ್ಮ ನಿಜವ ಮರೆದು ಕರ್ಮಕಾಂಡಿಗಳಾದ ಕಾರಣ. ಇಂತಪ್ಪವರ ಬ್ಥಿನ್ನಕ್ರಿಯಾಚಾರವನು ಸುಜ್ಞಾನೋದಯವಾದ ಜ್ಞಾನಕಲಾತ್ಮನು ತನ್ನ ಪರಮಜ್ಞಾನದಿಂ ನಷ್ಟವ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಂಬಂದ್ಥಿಯಾಗಿ, ಸರ್ವಾಂಗಲಿಂಗಮಯ ತಾನೆಂದು ತಿಳಿದು, ವಿಚಾರಿಸಿಕೊಂಡು ಪರಶಿವಪರಮೂರ್ತಿಗಳಾದ ಗುರುಲಿಂಗಜಂಗಮವನ್ನು ತನ್ನ ತನುಮನದಲ್ಲಿ ಸ್ವಾಯತವಮಾಡಿದ ಶಿವಶರಣಂಗೆ ಭವ ಹಿಂಗಿ, ಮುಕ್ತಿ ಎಂಬುದು ಕರತಳಾಮಳಕವಾಗಿ ತೋರುವದು ಕಾಣೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸಾಣಿಯ ಮೇಲೆ ಶ್ರೀಗಂಧವನಿಟ್ಟು, ಗಂಧ ಗಂಧವೆಂದಡೆ ಗಂಧವ ಕೊಡಬಲ್ಲುದೆ ? ಜಡಚಕ್ರದೊಳಗೆ ಧಾನ್ಯವ ನೀಡಿ ಹಿಟ್ಟೆಂದಡೆ ಹಿಟ್ಟಾಗಬಲ್ಲುದೆ ? ಗಾಣಕ್ಕೆ ಎಳ್ಳು ನೀಡಿ, ಎಣ್ಣೆ ಎಣ್ಣೆ ಎಂದಡೆ ಎಣ್ಣೆ ಬೀಳಬಲ್ಲುದೆ ? ಪಂಚಾಮೃತವ ಪಾಕವ ಮಾಡಿ ಎಡೆಯ ಬಡಿಸಿ ಮುಂದಿಟ್ಟುಕೊಂಡು, ಹೊಟ್ಟೆ ತುಂಬು ತುಂಬು ಎಂದಡೆ ಹೊಟ್ಟೆ ತುಂಬಿ ಹಸುವಡಗಬಲ್ಲುದೆ ? ಹಾಗೆ ಜಡರೂಪವಾದ ಲಿಂಗವ ಜಡಮತಿಗಳಾದ ಗುರುಮುಖದಿಂ ಪಡಕೊಂಡು ಅಂಗದ ಮೇಲೆ ಇಷ್ಟಲಿಂಗವೆಂದು ಧರಿಸಿ ಆ ಲಿಂಗಕ್ಕೆ ಮುಕ್ತಿಯ ಕೊಡು ಕೊಡು ಎಂದಡೆ, ಆ ಲಿಂಗವು ಮುಕ್ತಿಯ ಕೊಡಲರಿಯದು. ಅದೆಂತೆಂದೊಡೆ : ಚಂದನ, ಧಾನ್ಯ, ತಿಲಪಂಚಪಾಕವನು 'ಮರ್ದನಂ ಗುಣವರ್ಧನಂ' ಎಂದುದಾಗಿ, ಇಂತೀ ಎಲ್ಲವು ಮರ್ದನವಿಲ್ಲದೆ ಸ್ವಧರ್ಮಗುಣ ತೋರಲರಿಯವು. ಹಾಗೆ ಅಂತಪ್ಪ ಜಡಸ್ವರೂಪನಾದ ಲಿಂಗವನು ಜ್ಞಾನಗುರುಮುಖದಿಂ ಶಿಲಾಲಿಖಿತವ ಕಳೆದು, ಕಳಾಭೇದವ ತಿಳಿದು, ಆ ಲಿಂಗವೇ ಘನಮಹಾ ಇಷ್ಟಲಿಂಗವೆಂಬ ವಿಶ್ವಾಸ ಬಲಿದು ತುಂಬಿ ಅಂತಪ್ಪ ಇಷ್ಟಬ್ರಹ್ಮದಲ್ಲಿ ಅವಿರಳಸಂಬಂದ್ಥಿಯಾಗಿ ಆ ಇಷ್ಟಲಿಂಗದ ಸತ್ಕ್ರಿಯಾಚಾರದಲ್ಲಿ ಸರ್ವಾಂಗವನು ದಹಿಸಿದಲ್ಲದೆ ಭವಹಿಂಗದು, ಮುಕ್ತಿದೋರದು, ಮುಕ್ತಿಯ ಪಡೆಯಲರಿಯದೆ ಪ್ರಾಣಲಿಂಗಿಯಾಗಲರಿಯನು ನೋಡಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯ ! ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯು ಪ್ರಾಣಗುಣಂಗಳ ನಷ್ಟವ ಮಾಡಿ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾನ್ಯ, ಧಾರಣ, ಸಮಾಧಿಯೆಂಬ ಹಠಯೋಗ ಜಡಶೈವಮಾರ್ಗವನುಳಿದು, ನಿಭ್ರ್ರಾಂತ, ನಿಶ್ಚಿಂತ, ನಿರ್ಗುಣಾನಂದಲೀಲೆಯನರಿದು, ಹಿಂದೆ ಹೇಳಿದ ಸದ್ಭಕ್ತ_ಮಹೇಶ_ಪ್ರಸಾದಿಸ್ಥಲವ ಅಂಗವ ಮಾಡಿಕೊಂಡು ಸರ್ವಾಂಗಲೋಚನಮೂರ್ತಿಯಾಗಿ ಪ್ರಭಾವಿಸುವ ನಿಜಪ್ರಾಣಲಿಂಗಿಯಂತರಂಗದಲ್ಲಿ ಚಿನ್ಮಯ ಸ್ವರೂಪಲೀಲೆಯಿಂ ಸಮಸ್ತ ತತ್ತ್ವಾನುಭಾವವನೊಳಗು ಮಾಡಿಕೊಂಡು ಹದಿನಾಲ್ಕು ಸ್ಥಲಂಗಳ ಗರ್ಭೀಕರಿಸಿಕೊಂಡು ಐದು ಸಾವಿರದ ನೂರ ಎಂಬತ್ತುನಾಲ್ಕು ಮಂತ್ರಮಾಲೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ, ಬಂಗಾರ ಲೋಹವನೊಳಕೊಂಡಂತೆ, ತನ್ನ ಸೋಂಕಿದವರೆಲ್ಲ ತನ್ನಂತೆಯೆಂಬ ಗುರುವಚನೋಕ್ತಿಪ್ರಮಾಣದಿಂದೆ ಶಬ್ದದೊಳಗೆ ನಿಃಶಬ್ದವಡಗಿರ್ಪ ಹಾಂಗೆ ಏಕಸ್ವರೂಪಿನಿಂದೆ ಯಜನಸ್ವರೂಪಮೂರ್ತಿ ಜಂಗಮಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಛಲಭ್ರಮೆ ಜಾತಿಭ್ರಮೆ, ನಾಮ ವರ್ಣ ಆಶ್ರಮ ಮತ ಶಾಸ್ತ್ರಭ್ರಮೆ, ತರ್ಕಭ್ರಮೆ ರಾಜ್ಯಭ್ರಮೆ, ಧನ ಧಾನ್ಯ ಪುತ್ರ ಮಿತ್ರಭ್ರಮೆ, ಐಶ್ವರ್ಯ ತ್ಯಾಗ ಭೋಗ ಯೋಗಭ್ರಮೆ, ಕಾಯ ಕರಣ ವಿಷಯಭ್ರಮೆ, ವಾಯು ಮನ ಭಾವ ಜೀವ ಮೋಹಭ್ರಮೆ, ನಾಹಂ ಕೋಹಂ ಸೋಹಂ ಮಾಯಾಭ್ರಮೆ ಮೊದಲಾದ ಬತ್ತೀಸ ಪಾಶಭ್ರಮಿತರಾಗಿ ತೊಳಲುವ ವೇಷಧಾರಿಗಳ ಕಂಡು ಶಿವಶಕ್ತಿ ಶಿವಭಕ್ತ ಶಿವಪ್ರಸಾದಿ ಶಿವಶರಣ ಶಿವೈಕ್ಯ ಶಿವಜಂಗಮವೆಂದು ನುಡಿಯಲಾರದೆ ಎನ್ನ ಮನ ನಾಚಿ ನಿಮ್ಮಡಿಗಬ್ಥಿಮುಖವಾಯಿತ್ತಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಬನ್ನಿ ಕರಣಿಕರು, ನೀವು ಲೆಕ್ಕವ ಹೇಳಿ, ಧಾನ್ಯ ಧಾನ್ಯಂಗಳ ಸಂಚವನು. ಹೊಸಜೋಳ ಅರುವತ್ತುಲಕ್ಷ ಖಂಡುಗ, ಶಾಲಿಧಾನ್ಯ ಮೂವತ್ತುಲಕ್ಷ ಖಂಡುಗ, ಗೋದಿ ಹನ್ನೆರಡುಲಕ್ಷ ಖಂಡುಗ, ಕಡಲೆ ಬತ್ತೀಸ ಖಂಡುಗ, ಹೆಸರು ಮೂವತ್ತಾರುಲಕ್ಷ ಖಂಡುಗ, ನವಣೆ ಹಾರಕ ಬರಗು ಸಾವೆ ದೂಸಿಗಳೆಂಬ ಧಾನ್ಯ ಐವತ್ತುಲಕ್ಷ ಖಂಡುಗ. ಹೊಸಸುಗ್ಗಿಯ ವೇಳೆಗೆ ಬಹ ಭತ್ತ ಅಗಣಿತ. ಮಹಾದಾನಿ ಸೊಡ್ಡಳನ ಆರೋಗಣೆಯ ಅವಸರಕ್ಕೆ ಅಳವಟ್ಟ ಸಯದಾನ ಇನಿತನವಧರಿಸಯ್ಯಾ, ಸಂಗನಬಸವಣ್ಣಾ.
--------------
ಸೊಡ್ಡಳ ಬಾಚರಸ
ಮಠವೇಕೋ ಪರ್ವತವೇಕೋ ಜನವೇಕೋ ನಿರ್ಜನವೇಕೋ ಚಿತ್ತ ಸಮಾಧಾನವುಳ್ಳ ಶರಣಂಗೆ ? ಮತ್ತೆ_ಹೊರಗಣ ಚಿಂತೆ ಧಾನ್ಯ ಮೌನ ಜಪತಪವೇಕೊ; ತನ್ನ ತಾನರಿದ ಶರಣಂಗೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ವಿಭೂತಿ ರುದ್ರಾಕ್ಷಿಯ ಧರಿಸಿ ಷಡಕ್ಷರಿಯಂ ಜಪಿಸಿ ಗುರು ಲಿಂಗ ಜಂಗಮದ ಆದ್ಯಂತವನರಿಯದೆ ಏನೆಂದು ಪೂಜಿಸುವಿರಿ, ಆರಾಧಿಸುವಿರಿ? ಅದೆಂತೆಂದಡೆ: ನೆಲದ ಮೇಲಣ ಶಿಲೆಯ ಕಲ್ಲುಕುಟಿಕ ಕಡಿದು ಖಂಡಿಸಿ ಹರದನ ಕೈಯಲ್ಲಿ ಕೊಟ್ಟು ಮಾರಿಸಿಕೊಂಡುದು ಲಿಂಗವಾದ ಪರಿ ಹೇಂಗೆ? ಸಕಲ ವ್ಯಾಪಾರ ಅಳುವಿಂಗೆ ಒಳಗಾಗಿ ತೊಡಿಸಿ ಬರೆಸಿಕೊಂಡುದು ಮಂತ್ರವಾದ ಪರಿ ಹೇಂಗೆ? ಅಜ್ಞಾನಿ ಮೃಗ ಪಶುವಿನ ಸಗಣಿಯ ಸುಟ್ಟುದು ವಿಭೂತಿಯಾದ ಪರಿ ಹೇಂಗೆ? ಪಂಚಭೂತಿಕದಿಂದ ಜನಿಸಿದ ವೃಕ್ಷದ ಫಲ ರುದ್ರಾಕ್ಷಿಯಾದ ಪರಿ ಹೇಂಗೆ? ಸಕಲ ಜೀವವೆರಸಿ ಕರಗಿದ ಆಸಿಯ ಜಲ ತೀರ್ಥವಾದ ಪರಿ ಹೇಂಗೆ? ಸಕಲ ಪ್ರಾಣಿಗಳಾಹಾರ ಹದಿನೆಂಟು ಧಾನ್ಯ ಕ್ಷುಧಾಗ್ನಿಯಲ್ಲಿ ಜನಿಸಿ ಪಚನವಾದುದು ಪ್ರಸಾದವಾದ ಪರಿ ಹೇಂಗೆ? ಅದೆಂತೆಂಡೆ: ನಿಗಮ ಶಾಸ್ತ್ರಕ್ಕೆ ಅಗಣಿತವಾದ ನಾದಬಿಂದುವಿಗೆ ನಿಲುಕದ ನಿತ್ಯತೃಪ್ತ ಪರಂಜ್ಯೋತಿಲಿಂಗದ ವೈಭವಕ್ಕೆ ಅಂಗವಾದುದು ಈ ಗುರುವಲ್ಲಾ ಎಂದು ಅರಿದು ಆ ಲಿಂಗದ ಚೈತನ್ಯ ಈ ಲಿಂಗವಲ್ಲಾ ಎಂದು ಅರಿದು ಮಾಡೂದು ತನು ಮನ ಧನ ವಂಚನೆಯಳಿದು. ಗುರುಭಕ್ತಿ ಸನ್ನಿಹಿತವಾಗಿ ಆ ಲಿಂಗದ ವದನ ಈ ಜಂಗಮವಲಾ ಎಂದರಿದು ಮಾಡೂದು ಆ ತನು ಮನ ಧನ ವಂಚನೆಯಳಿದು. ಜಂಗಮಭಕ್ತಿ ಸನ್ನಿಹಿತವಾಗಿ ಆ ಲಿಂಗದ ಕಾಯಕಾಂತಿಯ ಬೆಳಗಿನ ಐಶ್ವರಿಯಲ್ಲ ಎಂದರಿದು ಧರಿಸೂದು ಶ್ರೀ ವಿಭೂತಿಯ. ಆ ಲಿಂಗದ ಶೃಂಗಾರದ ಹರಭರಣವಲಾ ಎಂದರಿದು ಅಳವಡಿಸೂದು ರುದ್ರಾಕ್ಷಿಯನು. ಆ ಲಿಂಗದ ಉತ್ತುಂಗ ಕಿರಣಚರಣಾಂಬುಜವಲಾ ಎಂದು ಧರಿಸೂದು, ಕೊಂಬುದು ಪಾದೋದಕವನು. ಆ ಲಿಂಗದ ನಿತ್ಯಪದ ಸಂಯೋಗ ಶೇಷವ ತಾ ಎಂದರಿದು ಕೊಂಬುದು ಪ್ರಸಾದವನು. ಇಂತಿವೆಲ್ಲವನರಿದುದಕ್ಕೆ ಸಂತೋಷವಾಗಿ ಚರಿಸುವಾತನೆ ಸದ್ಭಕ್ತ. ಆತನ ಕಾಯ ಕರಣ ಪ್ರಾಣ ಭಾವಾದಿಗಳು ಸೋಂಕಿದೆಲ್ಲವೂ ಲಿಂಗದ ಸೋಂಕು, ಲಿಂಗದ ಕ್ರೀ, ಲಿಂಗದ ದಾಸೋಹ. ಇಂತೀ ತ್ರಿವಿಧವ ಸವೆದು ಅಳಿದುಳಿದ ಸದ್ಭಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನು ಕಾಣಾ, ಬಸವಣ್ಣಪ್ರಿಯ ನಿಃಕಳಂಕ ಸೋಮೇಶ್ವರನೆ.
--------------
ನಿಃಕಳಂಕ ಚೆನ್ನಸೋಮೇಶ್ವರ
ಅಂದಿನವರಿಗೆ ಪರುಷವಿಪ್ಪುದು ಇಂದಿನವರಿಗೆ ಪರುಷವೇಕಿಲ್ಲ ? ದಯದಿಂದ ಕರುಣಿಸಿ ಸ್ವಾಮಿ. ಕೇಳಯ್ಯ ಮಗನೆ : ಲಾಂಛನಧಾರಿಗಳು ಸ್ವಯಪಾಕ ಭಿಕ್ಷಕ್ಕೆ ಬಂದ ವೇಳೆಯಲ್ಲಿ ಗೋದಿಯ ಬೀಸುವಗೆ ಆ ಹಿಟ್ಟು ಬಿಟ್ಟು ಕಡೆಯಲಿದ್ದ ಹಿಟ್ಟು ನೀಡುವವರಿಗೆ ಎಲ್ಲಿಹುದೊ ಪರುಷ ? ಲಾಂಛನಧಾರಿಗಳು ಧಾನ್ಯ ಭಿಕ್ಷಕ್ಕೆ ಬಂದಡೆ ಘನವ ಮಾಡಿಕೊಳ್ಳಿರಿ ಎಂಬವರಿಗೆ ಎಲ್ಲಿಹುದೊ ಪರುಷ ? ಶಿವಯೋಗಿ ಲಿಂಗಾರ್ಪಿತ ಭಿಕ್ಷಕ್ಕೆ ಬಂದಡೆ ಸುಮ್ಮನಿಹರು. ಇದು ಭಿಕ್ಷವೇಳೆಯೆ ? ಎಂಬವರಿಗೆ ಎಲ್ಲಿಹುದೊ ಪರುಷ ? ಮತ್ತಂ, ಹಬ್ಬವ ಮಾಡುವಾಗ ಭಿಕ್ಷಕ್ಕೆ ಬಂದಡೆ ತಂಗಳ ನೀಡಿ ಕಳಿಸುವವರಿಗೆ ಎಲ್ಲಿಹುದೊ ಪರುಷ ? ಪರುಷ ಎಲ್ಲಿಹುದು ಎಂದಡೆ : ಜಂಗಮವು ಮನೆಗೆ ಬಂದಡೆ ಬಂದ ಬರವ, ನಿಂದ ನಿಲವ ಅರಿತವರಿಗೆ ಅದೇ ಪರುಷ. ಯಾವ ವೇಳೆಯಾಗಲಿ, ಯಾವ ಹೊತ್ತಾಗಲಿ ಜಂಗಮವು ಭಿಕ್ಷಕ್ಕೆ ಬರಲು ಹಿಂದಕ್ಕೆ ತಿರುಗಗೊಡ[ದ]ವರನ್ನೆಲ್ಲ ಸುಖವಬಡಿಸುವುದೇ ಪರುಷ. ಸಮಸ್ತ ಒಡವೆಯೆಲ್ಲವನು ಎನ್ನ ಒಡವೆಯಲ್ಲವೆಂದವರಲ್ಲಿ ಅದೇ ಪರುಷ. ತನ್ನ ಪ್ರಪಂಚಿನ ಪುತ್ರ ಮಿತ್ರ ಕಳತ್ರರಿಗೆ ಮಾಡುವ ಹಾಗೆ ಗುರು-ಲಿಂಗ-ಜಂಗಮಕ್ಕೆ, ಕೇವಲ ಸದ್ಭಕ್ತಿಗೆ ಭಕ್ತಿಯ ಮಾಡಿದವರಿಗೆ ಅದೇ ಪರುಷ. ಹೀಗೆ ಮಾಡಿದವರಿಗೆ ಅಂದೇನು ಇಂದೇನು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ
--------------
ಗಣದಾಸಿ ವೀರಣ್ಣ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಇಂತೀ ಕ್ರಮದಲ್ಲಿ ಗುರು-ಲಿಂಗ-ಜಂಗಮಕ್ಕೆ ತನು-ಮನ-ಧನ ನೀಡಿದ ಭಕ್ತಗಣಂಗಳಿಗೆ ಮೋಕ್ಷವೆಂಬುದು ಕರತಳಾಮಳಕವಾಗಿರ್ಪುದು. ಇಂತಪ್ಪ ವಿಚಾರವ ತಿಳಿಯದೆ ಮೂಢಮತಿಯಿಂದ ಗುರು-ಲಿಂಗ-ಜಂಗಮಕ್ಕೆ ತನು-ಮನ-ಧನವ ನೀಡಿದಾತನೇ ಭಕ್ತನೆಂದು ವೇದಾಗಮಶ್ರುತಿ ಪ್ರಮಾಣವಾಕ್ಯಂಗಳು ಸಾರುತ್ತಿರ್ಪವು. ಆ ಶ್ರುತಿ ಸಾರಿದ ವಾಕ್ಯಗಳು ಪ್ರಮಾಣ. ಅದೆಂತೆಂದಡೆ: ಅಂತಪ್ಪ ಶ್ರುತಿವಾಕ್ಯಂಗಳ ಕೇಳಿ ಸ್ವಾನುಭಾವಗುರುಮುಖದಿಂದ ವಿಚಾರಿಸಿಕೊಳ್ಳಲರಿಯದೆ, ತಮ್ಮಲ್ಲಿ ಸ್ವಯಂಜ್ಞಾನೋದಯವಾಗಿ ತಾವು ತಿಳಿಯದೆ ಮೂಢಮತಿಯಿಂದ ಅಜ್ಞಾನ ಎಡೆಗೊಂಡು ಗುರುವಿಗೆ ತನುವ ನೀಡಬೇಕೆಂದು, ಆ ಗುರುವಿನ ಸೇವಾವೃತ್ತಿಯಿಂದ ತನುವ ದಂಡನೆಯ ಮಾಡುವರು. ಅದೇನು ಕಾರಣವೆಂದಡೆ: ಗುರುವಿನ ನಿಲುಕಡೆಯನರಿಯದ ಕಾರಣ. ಲಿಂಗಕ್ಕೆ ಮನವ ನೀಡಬೇಕೆಂದು ಧೂಪ-ದೀಪ-ನೈವೇದ್ಯ-ತಾಂಬೂಲ ಮೊದಲಾದ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ ಮಾಡಿ, ಹಸ್ತದಲ್ಲಿರುವ ಇಷ್ಟಲಿಂಗದಲ್ಲಿ ಮನವ ನಿಲ್ಲಿಸಬೇಕೆಂದು ಎವೆಗೆ ಎವೆ ಹೊಡೆಯದೆ ಸತ್ತ ಮಲದ ಕಣ್ಣಿನಂತೆ ಕಣ್ಣು ತೆರೆದು ನೋಡಿದಡೆ ಆ ಕಲ್ಲಲಿಂಗದಲ್ಲಿ ಮನವು ನಿಲ್ಲಬಲ್ಲುದೆ ? ನಿಲ್ಲಲರಿಯದು. ಅದೇನು ಕಾರಣವೆಂದಡೆ : ಆ ಇಷ್ಟಬ್ರಹ್ಮದ ನಿಜನಿಲುಕಡೆಯ ಸ್ವರೂಪ ತಾವೆಂದರಿಯದ ಕಾರಣ. ಇಂತೀ ಪರಿಯಲ್ಲಿ ಮನವ ಬಳಲಿಸುವರು. ಜಂಗಮಕ್ಕೆ ಧನವ ನೀಡಬೇಕೆಂದು ಅನ್ನ-ವಸ್ತ್ರ ಮೊದಲಾದ ಹದಿನೆಂಟು ಧಾನ್ಯ ಜೀನಸು ಸಹವಾಗಿ ನಾನಾ ಧಾವತಿಯಿಂದ ಗಳಿಸಿ ಸಕಲ ಪದಾರ್ಥವನು ಜಂಗಮಕ್ಕೆ ನೀಡಿ, ಆತ್ಮನ ಬಳಲಿಸುವರು. ಅದೇನು ಕಾರಣವೆಂದಡೆ, ಆ ಜಂಗಮದ ನಿಜನಿಲುಕಡೆಯ ಸ್ವರೂಪ ತಾವೆಂದರಿಯದ ಕಾರಣ. ಇಂತಿವೆಲ್ಲವು ಹೊರಗಣ ಉಪಚಾರ. ಈ ಹೊರಗಣ ಉಪಚಾರವ ಮಾಡಿದವರಿಗೆ ಪುಣ್ಯಫಲಪ್ರಾಪ್ತಿ ದೊರಕೊಂಬುವದು. ಆ ಪುಣ್ಯಫಲ ತೀರಿದ ಮೇಲೆ ಮರಳಿ ಭವಬಂಧನವೇ ಪ್ರಾಪ್ತಿ. ಅದೆಂತೆಂದಡೆ : ಪುಣ್ಯವೇ ತೈಲ, ಫಲವೇ ಜ್ಯೋತಿ. ತೈಲವು ತೀರಿದ ಹಾಗೆ ಆ ಜ್ಯೋತಿಯ ಪ್ರಕಾಶ ಅಡಗುವದು. ಪುಣ್ಯ ತೀರಿದ ಮೇಲೆ ಫಲಪದ ನಾಶವಾಗುವದು ನೋಡೆಂದ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶ್ರೀಗುರುಕರಜಾತರೆನಿಸಿ, ನಿಜಮೋಕ್ಷಾಪೇಕ್ಷನೆನಿಸಿ, ಸ್ವಯಚರಪರ ಭಕ್ತಗಣಾರಾಧ್ಯರ ಅರ್ಚನೆ ಪೂಜನೆ ಮಾಡಿ, ದಾಸೋಹಂಭಾವದಿಂದ ಪರತರಬ್ರಹ್ಮಪರಿಪೂರ್ಣಾನಂದವಸ್ತುವೆಂದು ಸಮರಸಾಚರಣೆಯಿಂದ ಹತ್ತುಹನ್ನೊಂದು ಕೊಟ್ಟು ಕೊಂಡ ಮೇಲೆ, ಸಂಕಲ್ಪಭಾವ ತಥ್ಯಮಿಥ್ಯಗಳಿಂದ ಆಸೆ ಆಮಿಷದ ಪಾಶಬದ್ಧ ಜಡಜೀವಿಗಳ ಹುಸಿಮಾತನಾಲಿಸಿ, ವಿವೇಕತಪ್ಪಿ, ನಸುಗುನ್ನಿಕಾಯಂತೆ ಮೋರೆಯಾಗಿ, ತುಮುರೆಕಾಷ*ದಂತೆ ನುಡಿಯಾಗಿ, ವಾರೆನೋಟಗಳಿಂದ ಸಮರಸವನುಳಿದು, ಭಿನ್ನಭಾವದಿಂದ ಕುಂದುನಿಂದ್ಯವ ನುಡಿವುದೊಂದು ದುರಾಚಾರ. ನುಡಿಸೂಸಿದ ಮೇಲೆ ಒಬ್ಬರೊಬ್ಬರು ಅವಿಚಾರಿಗಳಾಗಿ, ಬಾಜಾರಕ್ಕೆ ನಿಂತು, ತನಗಿಂದ ಸ್ವಲ್ಪ ಮನುಷ್ಯರನಾಶ್ರಯಿಸಿ, ಪಂಥಪರಾಕ್ರಮಿಗಳಿಂದ ತಥ್ಯಮಿಥ್ಯವ ನುಡಿದು, ಅರ್ಚನಾರ್ಪಣಗಳ ತೊರೆದು, ದೋಷಾರ್ಥಿಯಾಗಿ ವರ್ತಿಸುವುದೊಂದು ದುರಾಚಾರ. ಭಕ್ತಗಣಂಗಳು ವಾರಬಡ್ಡಿಗಳ ಕೊಟ್ಟು ಕೊಂಡು ವ್ಯವಹರಿಸಿ, ಈಷಣತ್ರಯದ ಅಂಗವಿಷಯದಿಂದ ದ್ರವ್ಯವ್ಯಾಪಾರಿಯಾಗಿ, ದುರಾತ್ಮರಂತೆ ಬಾಜಾರಕ್ಕೆ ಬಿದ್ದು ಕಠಿಣನುಡಿಗಳ ಬಳಸುವುದೊಂದು ದುರಾಚಾರ. ಹೊನ್ನು ಹೆಣ್ಣು ಮಣ್ಣು ಧಾನ್ಯ ವಸ್ತ್ರಗಳಿಗೆ ಹೊಣೆ ಜಾವಿೂನುಗಳಾಗಿ ಅಸನ ವಸನದಿಚ್ಛೆಗೆ ಮಿತಿದಪ್ಪಿದಲ್ಲಿ , ಸಾಕ್ಷಿ ವಾದಕ್ಕೆ ನಿಂತು, ಆಡಬಾರದ ಮಾತನಾಡುವುದೊಂದು ದುರಾಚಾರ. ಗುರುಹಿರಿಯ ಪಿತ-ಮಾತೆಗಳಿಗೆ ತಾ ಗಳಿಸಿದ ದ್ರವ್ಯವ ವಂಚಿಸಿ, ಇದ್ದೂ ಇಲ್ಲಯೆಂದು ಹುಸಿನುಡಿಯ ನುಡಿವುದೊಂದು ದುರಾಚಾರ. ಗುರುಚರಲಿಂಗಮೂರ್ತಿಗಳು ಹಸಿವಿಗನ್ನ, ಶೀತಕ್ಕೆ ವಸ್ತ್ರ, ಪಾದಕ್ಕೆ ವಾಹನವಾದುದ ಬೇಡಿದಲ್ಲಿ ತನಗೆ ತ್ರಾಣಿದ್ದು ಅವರಿಗೆ ಈಗ ದೊರೆಯದೆಂದು ಪ್ರಪಂಚನುಡಿಯ ನುಡಿವುದೊಂದು ದುರಾಚಾರ. ಈ ದುರಾಚಾರ ಹುಸಿನುಡಿಗಳನಳಿದುಳಿದು, ಭ್ರಾಂತುಭ್ರಮೆಗಳ ನೀಗಿ, ತನ್ನ ನಡೆನುಡಿಗಳು ತನಗೆ ಪ್ರಮಾಣವಾಗಿ, ನಿರ್ವಂಚಕತನದಿಂದ ಶ್ರುತಿಗುರುಸ್ವಾನುಭಾವವಿಡಿದು, ತಥ್ಯಮಿಥ್ಯವನಡಿಮೆಟ್ಟಿ, ಕಿಂಕರಭಾವದೊಳು ಗುರುಹಿರಿಯರ ಪ್ರಮಾದವಶದಿಂದ ಪ್ರಮಥಗಣಮಾರ್ಗವ ಬಿಟ್ಟಾಚರಿಸುವದ ಪರಶಿವಲಿಂಗಮೂರ್ತಿ ಹರಗಣಸಾಕ್ಷಿಯಾಗಿ ತಾನು ಕಂಡಲ್ಲಿ , ಅವರನಾಚರಿಸದಾಚಾರದ ಸ್ಥೂಲಸೂಕ್ಷ್ಮವಾದೊಡೆ ಹರಗಣಂಗಳೊಡನೆ ಅವರಿಗೆ ಶರಣುಹೊಕ್ಕು, ಹರಗುರುವಾಕ್ಯಪ್ರಮಾಣವಾಗಿ ಮೃದುತರ ನುಡಿಗಳಿಂದ ತಾವು ಅವರೊಡನೆ ಏಕಭಾವದಿಂದ ಕ್ರಿಯಾಲೀಲೆಯ ಸಮಾಪ್ತವ ಮಾಡುವುದು. ಇದಕ್ಕೆ ಮೀರಿ ಸ್ಥೂಲವಾದೊಡೆ ಮೌನಧ್ಯಾನದಿಂದ ಪರಶಿವಲಿಂಗಸಾಕ್ಷಿಯಾಗಿ, ಹರಗಣಕ್ಕೊಪ್ಪಿಸಿ, ಹತ್ತು ಹನ್ನೊಂದರ ಸಮರಸಾನುಭಾವವ ತ್ಯಜಿಸಿ, ಆಪ್ಯಾಯನಕ್ಕನ್ನ, ಸೀತಕ್ಕೆ ವಸ್ತ್ರ, ಲಾಂಛನಕ್ಕೆ ಶರಣೆಂದು ಬಯಲಿಗೆ ಬೀಳದೆ ಸುಮ್ಮನಿರ್ಪುದೆ ಪ್ರಮಥಗಣಮಾರ್ಗವು. ಈ ಸನ್ಮಾರ್ಗವನುಳಿದು ಕಿರಾತರಂತೆ ಹುಸಿಶಬ್ದ, ಹೊಲೆಶಬ್ದ , ಹೇಸಿಕೆಶಬ್ದ, ವಾಕರಿಕೆಶಬ್ದ, ಬಾಂಡಿಕಶಬ್ದ, ನೀಚರನುಡಿ, ಷಂಡರಮಾತು, ಕಳ್ಳರನುಡಿ, ಜಾರರನುಡಿ, ಜೂಜುಗಾರರನುಡಿ, ಆಟಕಾರರನುಡಿ, ಬೇಟೆಗಾರರನುಡಿ, ಕುಲಛಲಗಾರರನುಡಿ, ಲಾಹರಿಗಾರರನುಡಿ, ಅಶನಘಾತಕರನುಡಿ, ಲಂಚಗಾರರನುಡಿ, ರಿಣಪಾತಕರನುಡಿ, ಮೋಸಗಾರರನುಡಿ, ಭ್ರಾಂತರನುಡಿ, ಕೋಪಿಗರನುಡಿ, ಆಚಾರಹೀನ ನಡೆಗೆಟ್ಟರನುಡಿ, ಬಳ್ಳದತುದಿಹೀನ ಶಬ್ದದಂತೆ ತುಂಟ ತುಡುಗುಣಿ ಹಲವು ಮಾತುಗಳ ಬಳಕೆಯುಳ್ಳುದೆ ಚತುರ್ಥಪಾತಕವು. ಇದಕ್ಕೆ ಹರವಾಕ್ಯ ಸಾಕ್ಷಿ : ``ಕುಶಬ್ದಂ ಹೀನಶಬ್ದಂ ಚ ಚಾಂಡಾಲಃ ಶ್ವಪಚೋýಪಿ ವಾ | ಹೀನಶಬ್ದಸ್ಯ ಪಾಪಾಚ್ಚ ನರಕೇ ಕಾಲಮಕ್ಷಯಂ || ಅನೃತಂ ಚಾಪಶಬ್ದಂ ಚ ನಿಂದಕೋ ಗುರುತಲ್ಪಗಃ | ಗಣಾದಿವಾದದೂಷ್ಯಶ್ಚ ವೇಶ್ಯಾಪುತ್ರಸ್ತಥೈವ ಚ || ಪರನಿಂದಾವಂದನಾಶ್ಚ ಲಿಂಗಸಂಗಿವಿವರ್ಜಿತಂ | ಪ್ರಮಾದಂ ಕುರುತೇ ವಾಣ್ಯಾ ಮೋಕ್ಷೋ ನಾಸ್ತಿ ಮಹೇಶ್ವರಿ || ಅನ್ಯದೋಷೇಣ ನಿಂದ್ಯಮಾಸ್ತು ಸ್ವದೋಷಗುಪ್ತಪಾತಕಃ | ಗುರುಭ್ರಷ್ಟಸ್ಯ ಚಾಂಡಾಲೋ ರೌರವಂ ನರಕಂ ವ್ರಜೇತ್ ||'' ಇಂತೆಂದುದಾಗಿ, ಪರಮಾರಾಧ್ಯ ಶ್ರೀಗುರುಕಟಾಕ್ಷೆಯಿಂದ ತನ್ನ ತಾನರಿದು, ಈ ಲಿಂಗಾಂಗಸಂಗಸಂಬಂಧದಾಚರಣೆಯ ಸುಖವು ಏನು ತಪಸ್ಸಿನ ಫಲವೋಯೆಂದರಿದು ಮರೆದರೆ ಇನ್ನೀ ನಿಜಮೋಕ್ಷವು ದೊರೆಯದೆಂದು ಗುರುಹಿಯರ ನಡೆನುಡಿಗಳಾಲಿಸಿ, ನಡೆನುಡಿಭಿನ್ನವಾಗದಂತೆ ಚತುರ್ಥಪರಮದ್ರೋಹದ ಪಾತಕಮಂ ನಿರಸನಂಗೈದು ನಿಜಪರಶಿವಘನಕ್ಕೆ ಘನವೆನಿಸಿರ್ಪುದು ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅಯ್ಯಾ ಪಾದಪೂಜೆಯೆಂಬುದು ಅಗಮ್ಯ ಅಗೋಚರ ಅಪ್ರಮಾಣ ಅಸಾಧ್ಯ. ಶ್ರೀಗುರು ಬಸವೇಶ್ವರದೇವರು ತಮ್ಮ ಅಂತರಂಗದೊಳಗಣ ಪಾದಪೂಜೆಯಿಂದಾದ ತೀರ್ಥಪ್ರಸಾದವ `ಗಣಸಮೂಹಕ್ಕೆ ಸಲ್ಲಲಿ' ಎಂದು ನಿರ್ಮಿಸಿ, ಭಕ್ತಿಯ ತೊಟ್ಟು ಮೆರೆದರು. ಇಂತಪ್ಪ ತೀರ್ಥಪ್ರಸಾದವ ಸೇವಿಸುವ ಕ್ರಮವೆಂತೆಂದಡೆ; ಗ್ರಾಮಸೇವಾದಿಸಂರಂಭನೃತ್ಯಗೀತಾದಿ ವರ್ಜಿತಃ ಅನಾಚಾರವಿಹೀನೋ ಯೋ ತಸ್ಯ ತೀರ್ಥಂ ಪಿಬೇತ್ ಸದಾ ಇಂತೆಂದುದಾಗಿ, ತಂಬೂರಿ ಕಿನ್ನರಿವಿಡಿದು ಮನೆಮನೆಯ ಬೇಡುವಾತ ಹಲವು ವೇಷವ ತೊಟ್ಟು ಆಡುವಾತ, ನಗಾರಿ ಸಮ್ಮೇಳ ಕರಣೆ ಕಹಳೆ ಶಂಖ ಬಾರಿಸುವಾತ ಅಷ್ಟಾವರಣ ಪಂಚಾಚಾರದಲ್ಲಿ ಅಹಂಕರಿಸುವಾತ ಅನಾಚಾರಿ. ಪರ್ವತದ ಕಂಬಿ ಮಹಾಧ್ವಜವ ಹೊರುವಾತ ರಾಜಾರ್ಥದಲ್ಲಿ ಅಹುದ ಅಲ್ಲವ ಮಾಡಿ, ಅಲ್ಲವ ಅಹುದ ಮಾಡುವಾತ ಅನಾಚಾರವ ಹೇಳುವಾತ ಸದಾಚಾರದಲ್ಲಿ ತಪ್ಪುವಾತ ಭಕ್ತಗಣಂಗಳ ನಿಂದೆಯ ಮಾಡುವಾತ ಸದಾಚಾರಸದ್ಭಕ್ತಗಣಂಗಳ ಕಂಡಡೆ ಗರ್ವಿಸುವಾತ ಧಾನ್ಯ ಅರಿವೆ ಬೆಳ್ಳಿ ಬಂಗಾರಂಗಳ ಕ್ರಯವಿಕ್ರಯದಲ್ಲಿ ವಂಚಿಸುವಾತ ಗುರುಹಿರಿಯರಲ್ಲಿ ಹಾಸ್ಯರಹಸ್ಯವ ಮಾಡುವಾತ ಪರದೈವ ಪರಧನ ಪರಸ್ತ್ರೀ ಗಮಿಸುವಾತ ಸೂಳೆ ಬಸವಿಯರ ಗೃಹದಲ್ಲಿ ಇರುವಾತ ಆಚಾರಭ್ರಷ್ಟ ಮಾನಹೀನರ ಸಂಗವ ಮಾಡುವಾತ, ದುರುಳು ಮಂಕು. ಅವರ ಗುರುಲಿಂಗಜಂಗಮವೆಂದು ನುಡಿಯಲಾಗದು. ಅದೆಂತೆಂದಡೆ : ಖೇಟಕೋ ದಂಡಚಕ್ರಾಸಿಗದಾತೋಮರಧಾರಿಣಃ ಜಂಗಮಾ ನಾನುಮಂತವ್ಯಾಃ ಸ್ವೀಯಲಕ್ಷಣಸಂಯುತಾಃ ಆಶಾತೋ ವೇಷಧಾರೀ ಚ ವೇಷಸ್ಯ ಗ್ರಾಸತೋಷಕಃ ಗ್ರಾಸಶ್ಚ ದೋಷವಾಹೀ ಚ ಇತಿ ಭೇದೋ ವರಾನನೇ ಅನಾಚಾರವಿಭಾವೇನ ಸದಾಚಾರಂ ನ ವರ್ಜಯೇತ್ ಸದಾಚಾರೀ ಸುಭಕ್ತಾನಾಂ ಪಾದತೀರ್ಥಪ್ರಸಾದಕಃ ಮಹಾಭೋಗಿ ಮಹಾತ್ಯಾಗೀ ಲೋಲುಪೋ ವಿಷಯಾತುರಃ ಯಸ್ತ್ವಂಗವಿಹೀನಃ ಸ್ಯಾತ್ತಸ್ಯ (ಪಾದ) ತೀರ್ಥಂ[ನ]ಸೇವಯೇತ್ ಕುಷಿ*ೀ ಕರಣಹೀನಶ್ಚ ಬಧಿರಃ ಕಲಹಪ್ರಿಯಃ ವ್ಯಾಧಿಭಿಸ್ತ್ವಂಗಹೀನೈಶ್ಚತೈರ್ನ ವಾಸಂ ಚ ಕಾರಯೇತ್ ಇಂತೀ ದುರ್ಮಾರ್ಗ ನಡತೆಗಳಿಲ್ಲದೆ, ಅಯೋಗ್ಯವಾದ ಜಂಗಮವನುಳಿದು, ಯೋಗ್ಯಜಂಗಮವ ವಿಚಾರಿಸಿ ತನು ಮನ ಧನ ವಂಚನೆಯಿಲ್ಲದೆ ಸಮರ್ಪಿಸಿ ಅವರ ತೀರ್ಥಪ್ರಸಾದವ ಕೈಕೊಳ್ಳಬೇಕಲ್ಲದೆ ದುರ್ಮಾರ್ಗದಲ್ಲಿ ಆಚರಿಸುವಾತನಲ್ಲಿ ತ್ರಿಣೇತ್ರವಿದ್ದಡೆಯೂ ತೀರ್ಥಪ್ರಸಾದ ಉಪದೇಶವ ಕೊಳಲಾಗದು ಕಾಣಾ. ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ ಗುರುವಚನವ ತಿಳಿದು ನೋಡಾ ಸಂಗನಬಸವಣ್ಣಾ.
--------------
ಚನ್ನಬಸವಣ್ಣ
ಭವಿ ನಿರೀಕ್ಷಣೆಯಾದ ದ್ರವ್ಯಂಗಳ ಮುಟ್ಟೆನೆಂಬಲ್ಲಿ ಮುಟ್ಟಿದ ಭೇದವಾವುದು ಹೇಳಿರಣ್ಣಾ. ಧಾನ್ಯ ವಿದಳಫಲ ಪಂಫಲಾದಿಗಳಲ್ಲಿ ಆಯತಕ್ಕೆ ಮುನ್ನವೊ ಆಯತದೊಳಗಾದಲ್ಲಿಯೊ? ಆ ನಿರೀಕ್ಷಣೆ ವ್ರತಕ್ಕೆ ದ್ರವ್ಯ ಮೊದಲಾದ ದ್ರವ್ಯಕ್ಕೆ ವ್ರತ ಮೊದಲೊ, ಅಲ್ಲ, ತಾ ಮಾಡಿಕೊಂಡ ನೇಮವೆ ಮೊದಲೊ? ಇದ ನಾನರಿಯೆ; ನೀವು ಹೇಳಿರಯ್ಯಾ. ಭಾಷೆಗೆ ತಪ್ಪಿದ ಬಂಟ, ಲೇಸಿಗೆ ಒದಗದ ಸ್ತ್ರೀ, ವ್ರತದ ದೆಸೆಯನರಿಯದ ಆಚಾರರ, ಕೂಸಿನವರವ್ವೆ ಹಣದಾಸೆಗೆ ಕರೆದು ತಾ ಘಾಸಿಯಾದಂತಾಯಿತ್ತು. ವ್ರತಾಚಾರದ ಹೊಲಬು ನಿಹಿತವಾದುದಿಲ್ಲ. ಏತದ ತುದಿಯಲ್ಲಿ ತೂತು ಮಡಕೆಯ ಕಟ್ಟಿದಲ್ಲಿ ಬಾವಿಯ ಘಾತಕ್ಕೆಸರಿ. ತೂತಿನ ನೀರಿನ ನಿಹಿತವನರಿಯದವನಂತೆ ವ್ರತಾಚಾರ ಸಲ್ಲದು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ನೇಮಘಾತಕರುಗಳಿಗಿದಸಾಧ್ಯ.
--------------
ಅಕ್ಕಮ್ಮ
ಇನ್ನಷ್ಟು ... -->