ಅಥವಾ

ಒಟ್ಟು 146 ಕಡೆಗಳಲ್ಲಿ , 40 ವಚನಕಾರರು , 130 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೆರಹಿಲ್ಲದ ನಡೆ, ತೆರಹಿಲ್ಲದ ನುಡಿ ತೆರಹಿಲ್ಲದ ಸಂಭಾಷಣೆ ಸುಖವು. ತೆರಹಿಲ್ಲದೆ ನಂಬಿದೆ, ಸ್ವಾನುಭಾವ ಸುಖವು, ತೆರಹಿಲ್ಲದ ಮಹಿಮೆ, ತೆರಹಿಲ್ಲದ ವಿಚಾರ ಕೂಡಲಸಂಗಮದೇವಾ, ನಿಮ್ಮ ಶರಣಂಗೆ !
--------------
ಬಸವಣ್ಣ
ನೋಡುವಲ್ಲಿ ನೆರೆ ಶೃಂಗಾರವಲ್ಲದೆ, ಕೂಡುವಲ್ಲಿ ಉಂಟೆ ? ನುಡಿವಲ್ಲಿ ಮಾತಿನ ಬಲುಮೆಯಲ್ಲದೆ, ಸಂಸಾರವ ಸಾಧನವ ಮಾಡುವಲ್ಲಿ ಮುಟ್ಟದಿಪ್ಪುದುಂಟೆ ? ನಡೆ ನುಡಿ ಸಿದ್ಧಾಂತವಾದ ಶರಣಂಗೆ ಪಡಿಪುಚ್ಚವಿಲ್ಲ, ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗದಲ್ಲಿ ಐಕ್ಯವಾದ ಶರಣಂಗೆ.
--------------
ಮನುಮುನಿ ಗುಮ್ಮಟದೇವ
ಹರಹರ ಶಿವಶಿವ ಜಯಜಯ ಹರಗಣಂಗಳಾಚರಿಸಿದ ಸತ್ಕಾಯಕದಿಂದ ಬಹುಜನ್ಮದ ದೋಷ ತೊಲಗುವುದಯ್ಯ. ಸತ್ಕಿøಯದಿಂದ ಕಾಲಕಾಮರ ಭಯ ಹರಿವುದಯ್ಯ. ಸಮ್ಯಜ್ಞಾನದಿಂದ ಮಾಯಾಪಾಶ ಹಿಂದಾಗುವುದಯ್ಯ. ಸದ್ಭಕ್ತಿಯಿಂದ ಪಾವನಸ್ವರೂಪರಾಗುವುರಯ್ಯ. ಲಿಂಗಾಚಾರದಿಂದ ತನು ಶುದ್ಧವಾಗುವುದಯ್ಯ. ಸದಾಚಾರದಿಂದ ಮನ ಸಿದ್ಧವಾಗುವುದಯ್ಯ. ಶಿವಾಚಾರದಿಂದ ಧನ ಪ್ರಸಿದ್ಧವಾಗುವುದಯ್ಯ. ಗಣಾಚಾರದಿಂದ ನಡೆ ಪರುಷವಾಗುವುದಯ್ಯ. ಭೃತ್ಯಾಚಾರದಿಂದ ನುಡಿ ಪರುಷವಾಗುವುದಯ್ಯ. ಕ್ರಿಯಾಚಾರದಿಂದ ಕರ್ಮೇಂದ್ರಿಯಂಗಳು ಪವಿತ್ರವಾಗುವವಯ್ಯ. ಜ್ಞಾನಾಚಾರದಿಂದ ಜ್ಞಾನೇಂದ್ರಿಯಂಗಳು ಪಾವನವಾಗುವವಯ್ಯ. ಭಾವಾಚಾರದಿಂದ ಕರಣಂಗಳು ನಿಜಸ್ವರೂಪವಾಗುವವಯ್ಯ. ಸತ್ಯಾಚಾರದಿಂದ ವಿಷಯಂಗಳು ಲಿಂಗಮುಖವಾಗುವವಯ್ಯ. ನಿತ್ಯಾಚಾರದಿಂದ ವಾಯುಗಳು ಮಹಾಪ್ರಸಾದವಾಗುವವಯ್ಯ. ಧರ್ಮಾಚಾರದಿಂದ ಲಿಂಗಾಂಗ ಏಕವಾಗುವುದಯ್ಯ. ಸರ್ವಾಚಾರದಿಂದ ಸರ್ವಾಂಗ ಜ್ಞಾನಜ್ಯೋತಿಯಪ್ಪುದು ತಪ್ಪದು ನೋಡ. ಸತ್ಕಾಯಕ ಮೊದಲಾದ ಷೋಡಶ ಕಲೆನೆಲೆಗಳೆ ಸದ್ಗುರುಮುಖದಿಂ ಚಿದಂಗವ ಮಾಡಿಕೊಂಡು, ಷೋಡಶವರ್ಣವೆ ಸದ್ಗುರುಮುಖದಿಂ ಚಿದ್ಘನಲಿಂಗವ ಮಾಡಿಕೊಂಡು ಸದ್ಗುರುಮುಖದಿಂ ಎರಡಳಿದು ಏಕಸ್ವರೂಪದಿಂದ ಜ್ಯೋತಿಜ್ಯೋತಿ ಬೆರದಂತೆ ಬಸವ ಮೊದಲಾದ ಪ್ರಮಥಗಣಂಗಳೆಲ್ಲ ಬಯಲೊಳಗೆ ಮಹಾಬಯಲಾದರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಕಾಣಬಾರದ ಲಿಂಗ ಕೈಗೆ ಬಂದಿತ್ತಾಗಿ ಮಾಡಬಾರದ ಭಕ್ತಿಯ ಮಾಡುತಲಿರ್ದೆನು. ನಡೆಯಬಾರದ ನಡೆಯ ನಡೆವೆ, ಮತ್ತೊಂದನರಿಯೆ, ನೋಡಬಾರದ ನಡೆ ಕಣ್ಣಮುಂದೆ ಬಂದಿತ್ತಾಗಿ ಅದ್ವೈತನಡೆಯ ಕಾಣಲಿಲ್ಲ. ಗುರುನಿರಂಜನ ಚನ್ನಬಸವಲಿಂಗದಲ್ಲಿ ಕಷ್ಟಕರ್ಮದ ಬಟ್ಟೆಯ ಬೆಳಗಿನೊಳಗಿರ್ಪ ಹೊಟ್ಟೆಹೊರಕರ ಮಾತನೆಣಿಸಲಿಲ್ಲ.
--------------
ದೇಶಿಕೇಂದ್ರ ಸಂಗನಬಸವಯ್ಯ
`ನೀನು' `ನಾನು' ಎಂಬ ಉಭಯಸಂಗವಳಿದು ತಾನು ತಾನಾದ ತ್ರಿಕೂಟವೆಂಬ ಮಹಾಗಿರಿಯ ತುಟ್ಟತುದಿಯ ಮೆಟ್ಟಿ ನೋಡಲು, ಬಟ್ಟಬಯಲು ಕಾಣಬಹುದು ನೋಡಾ ! ಆ ಬಯಲ ಬೆರಸುವಡೆ_ತ್ರಿಕೂಟಗಿರಿಯೊಳಗೊಂದು ಕದಳಿಯುಂಟು ನೋಡಾ ! ಆ ಕದಳಿಯ ತಿಳಿದು ಅಲ್ಲಿ ಒಳಹೊಕ್ಕು ನೋಡಲು ತೊಳಗಿ ಬೆಳಗುವ ಜ್ಯೋತಿಯುಂಟು ಕೇಳಾ ! ನಡೆ ಅಲ್ಲಿಗೆ ತಾಯೆ, ಗುಹೇಶ್ವರಲಿಂಗದಲ್ಲಿ ಪರಮಪದವಿ ನಿನಗೆ ಸಯವಪ್ಪುದು ನೋಡಾ
--------------
ಅಲ್ಲಮಪ್ರಭುದೇವರು
ಕುಲ ಜಾತಿ ವರ್ಗದ ಶಿಶುಗಳಿಗೆ ಹಲವು ಭೇದದ ಹಾಲು. ನಲವಿಂದ ತಮ್ಮ ತಮ್ಮ ಮೊಲೆಗಳ ಉಂಡಲ್ಲದೆ ಬೆಳವಣಿಗೆಯಿಲ್ಲ. ಹಾಲು ದೇಹ ಹಲವಾದಡೆ, ಅಳಿವು ಉಳಿವು ಎರಡೇ ಭೇದ. ಏನನರಿತಡೂ ಜೀವನ ನೋವನರಿಯಬೇಕು. ನುಡಿ ನಡೆ ಎರಡಿಲ್ಲದೆ ದೃಢವಾಗಿ ಇರಬೇಕು. ಬಿರುದು ಹಿರಿಯರೆಂದಡೆ ಬಿಡಬೇಕಲ್ಲದೆ, ಕಡಿಯಬಹುದೆ ಅಯ್ಯಾ ? ಮಾತಿನಲ್ಲಿ ಬಲ್ಲವರಾದಡೆ, ನೀತಿಯಲ್ಲಿ ಮರೆದಡೆ ಕೊಡನೊಡೆದ ಏತದ ಕಣೆಯಂತೆ, ಶರೀರದ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
ಸತ್ವಕ್ಕೆ ತಕ್ಕ ಹೊರೆಯಲ್ಲದೆ, ಮತ್ತುಳಿದ ಮಾತಂಗವ ಹೊರಬಹುದೆ ? ಸತ್ವಕ್ಕೆ ತಕ್ಕ ನುಡಿಯಲ್ಲದಿರ್ದಡೆ, ಆತನ ಒಚ್ಚತಗೊಂಬರೆ ಹರಶರಣರು? ನಡೆ ನುಡಿ ಸಿದ್ಧಾಂತವಲ್ಲದೆ, ಹುಡಿಗರ ಮಾತ ಸುಡು. ಎನ್ನೊಡೆಯ ಕರೆಯಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ನಮ್ಮ ಆದಿಪುರಾತನರು ಪ್ರಸಾದಕ್ಕೆ ತಪ್ಪದೆ ನಡೆದರು, ನಡೆ ತಪ್ಪದೆ ನುಡಿದರು. ಇಂತಪ್ಪ ಪುರಾತನರ ವಚನಂಗಳ ಎರಡಿಲ್ಲದೆ ಕೊಂಡಾಡಿ ತನು ಮನ ಧನವ ಎರಡಿಲ್ಲದೆ ಸಮರ್ಪಿಸುವ, ಭಕ್ತರ ಭಕ್ತ ನಾನು, ಆಳಿನಾಳಯ್ಯಾ ನಾನು, ಕೂಡಲಚೆನ್ನಸಂಗನ ಶರಣರು ಸಾಕ್ಷಿಯಾಗಿ
--------------
ಚನ್ನಬಸವಣ್ಣ
ಎಲೆ ತಂಗಿ, ಶರಣಸತಿ ಲಿಂಗಪತಿಯಾದ ಪತಿವ್ರತಾಭಾವದ ಚಿಹ್ನೆ, ನಿನ್ನ ನಡೆ ನುಡಿಯಲ್ಲಿ, ಹೊಗರುದೋರುತ್ತಿದೆ, ನಿನ್ನ ಪೂರ್ವಾಪರವಾವುದಮ್ಮ?. ಸುತ್ತೂರು ಸಿಂಹಾಸನದ ಪರ್ವತದೇವರ ಶಿಷ್ಯರು, ಭಂಡಾರಿ ಬಸವಪ್ಪೊಡೆಯದೇವರು. ಆ ಭಂಡಾರಿ ಬಸವಪ್ಪೊಡೆಯದೇವರ ಶಿಷ್ಯರು. ಕೂಗಲೂರು ನಂಜಯ್ಯದೇವರು. ಆ ನಂಜಯ್ಯದೇವರ ಕರಕಮಲದಲ್ಲಿ, ಉದಯವಾದ ಶರಣವೆಣ್ಣಯ್ಯಾ ನಾನು. ಎನ್ನ ಗುರುವಿನ ಗುರು ಪರಮಗುರು, ಪರಮಾರಾಧ್ಯ ತೋಂಟದಾರ್ಯನಿಗೆ ಗುರುಭಕ್ತಿಯಿಂದೆನ್ನ ಶರಣುಮಾಡಿದರು. ಆ ತೋಂಟದಾರ್ಯನು, ತನ್ನ ಕೃಪೆಯೆಂಬ ತೊಟ್ಟಿಲೊಳಗೆನ್ನಂ ಮಲಗಿಸಿ, ಪ್ರಮಥಗಣಂಗಳ ವಚನಸ್ವರೂಪತತ್ವಾರ್ಥವೆಂಬ, ಹಾಲು ತುಪ್ಪಮಂ ಸದಾ ದಣಿಯಲೆರೆದು, ಅಕ್ಕರಿಂದ ರಕ್ಷಣೆಯಂ ಮಾಡಿ, ``ಘನಲಿಂಗಿ' ಎಂಬ ನಾಮಕರಣಮಂ ಕೊಟ್ಟು, ಪ್ರಾಯಸಮರ್ಥೆಯಂ ಮಾಡಿ, ಸತ್ಯಸದಾಚಾರ, ಜ್ಞಾನಕ್ರಿಯೆಗಳೆಂಬ, ದಿವ್ಯಾಭರಣಂಗಳಂ ತೊಡಿಸಿ, ಅರುಹೆಂಬ ಬಣ್ಣವ ನಿರಿವಿಡಿದುಡಿಸಿ, ಅರ್ತಿಯ ಮಾಡುತ್ತಿಪ್ಪ ಸಮಯದಲ್ಲಿ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನ, ತನಗೆ ನಾನಾಗಬೇಕೆಂದು ಬೇಡಿಕಳುಹಲು, ಎಮ್ಮವರು ಅವಂಗೆ ಮಾತನಿಕ್ಕಿದರಮ್ಮಾ.
--------------
ಘನಲಿಂಗಿದೇವ
ನಡೆ ನೋಡುವ ಸುಖದ ಸುಗ್ಗಿ ನೀನೆ ಅಯ್ಯಾ, ಕಾಯ ಜೀವದ ಗುಣ ನೀನೆ ಅಯ್ಯಾ, ಕಪಿಲಸಿದ್ಧಮಲ್ಲಿನಾಥಯ್ಯಾ. ||
--------------
ಸಿದ್ಧರಾಮೇಶ್ವರ
ಹಸಿವಿಲ್ಲದೆ ಉಣಬಲ್ಲಡೆ, ಉಪಾಧಿಯಿಲ್ಲದೆ ಬೇಡಬಲ್ಲಡೆ, ಅದು ವರ್ಮ, ಅದು ಸಂಬಂಧ. ಗಮನವಿಲ್ಲದೆ ಸುಳಿಯಬಲ್ಲಡೆ, ನಿರ್ಗಮನಿಯಾಗಿ ನಿಲಬಲ್ಲಡೆ ಅದು ವರ್ಮ, ಅದು ಸಂಬಂಧ. ಅವರ ನಡೆ ಪಾವನ, ಅವರ ನುಡಿ ತತ್ವ, ಅವರು(ರ?) ಜಗದಾರಾಧ್ಯರೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಸಪ್ತಕಮಲದ ಮಧ್ಯದಲ್ಲಿ ಉತ್ಪತ್ತಿಯಾದ ಪರಂಜ್ಯೋತಿ ತತ್ವ ಬ್ರಹ್ಮಾಂಡದಿಂದತ್ತತ್ತಲಾದ ಘನಕೆ ಘನ ಪರಕೆ ಪರವಾದ ಪರಾಪರವು ತಾನೆ ನೋಡಾ. ಆ ಪರಾಪರವು ತಾನೆ ತತ್ವ ಬ್ರಹ್ಮಾಂಡದೊಳಹೊರಗೆ ಸರ್ವವ್ಯಾಪಕನಾಗಿ, ಪರಿಪೂರ್ಣನಾಗಿ, ಸರ್ವವನು ಹೊದ್ದಿಯೂ ಹೊದ್ಧದ, ಮುಟ್ಟಿಯೂ ಮುಟ್ಟದ ಅಕಳಂಕನು ನೋಡಾ. ಸಪ್ತಕಮಲದ ಎಸುಳುಗಳೊಳಗೆ ಆಕ್ಷರಾತ್ಮಕ ಲಿಂಗವಾಗಿ ಅದ್ವಯನು ನೋಡಾ. ನವಚಕ್ರಾಂಬುಜಗಳ ದಳ ಕುಳ ವರ್ಣಾದಿ ದೇವತೆಗಳ ತೋರಿಕೆಯೇನುಯೇನೂ ಇಲ್ಲದ ನಿತ್ಯ ನಿರಂಜನ ನಿರಾಮಯನಾದ ಶರಣಂಗೆ ನಮೋ ನಮೋಯೆಂಬೆನು. ಆ ನಿರಾಮಯ ವಸ್ತುವೆ ಸಂಗನಬಸವಣ್ಣನು ನೋಡಾ. ಆ ಚಿದದ್ವಯವಾದ ಬಸವಣ್ಣನೇ ಎನ್ನ ಅಂಗಲಿಂಗ, ಎನ್ನ ಪ್ರಾಣಲಿಂಗ, ಎನ್ನ ಭಾವಲಿಂಗ, ಎನ್ನ ಸರ್ವಾಂಗಲಿಂಗವು ಕಾಣಾ. ಎನ್ನ ಷಡಾಧಾರದಲ್ಲಿ ಸಂಬಂಧವಾದ ಷಡಕ್ಷರ ಮಂತ್ರವು ಬಸವಣ್ಣನಾದ ಕಾರಣ, `ಬಸವಲಿಂಗ ಬಸವಲಿಂಗ ಬಸವಲಿಂಗಾ'ಯೆಂದು ಜಪಿಸಿ ಭವಾರ್ಣವ ದಾಂಟಿದೆನು ಕಾಣಾ. ಬಸವಣ್ಣನೇ ಪತಿಯಾಗಿ, ನಾನೇ ಸತಿಯಾಗಿ ಶರಣನಾದೆನು ಕಾಣಾ. ಬಸವನೇ ಲಿಂಗವಾದ ಕಾರಣ ನಾನಂಗವಾದೆನು. ಕರ್ತೃವೇ ಬಸವಣ್ಣ, ಭೃತ್ಯನೇ ನಾನು. ಒಡೆಯನೇ ಬಸವಣ್ಣ, ಬಂಟನೇ ನಾನಾದಕಾರಣ ದೇಹವೇ ನಾನು, ದೇಹಿಯೇ ಬಸವಣ್ಣನಯ್ಯ. ಇದು ಕಾರಣ, ಎನ್ನ ನಡೆವ ಚೇತನ, ಎನ್ನ ನುಡಿವ ಚೇತನ, ಎನ್ನ ನಡೆ ನುಡಿಯೊಳಗಿಪ್ಪ ಸರ್ವ ಚೈತನ್ಯಾತ್ಮಕ ಬಸವಣ್ಣನಯ್ಯ. ಇಂತಪ್ಪ ಬಸವಣ್ಣನ ಶ್ರೀಪಾದದಲ್ಲಿ ಅಡಗಿ ನಾನು ಶರಣನಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕಾಲಿಲ್ಲದ ನಡೆ, ಕೈಯಿಲ್ಲದ ಮುಟ್ಟು, ಕಣ್ಣಿಲ್ಲದ ನೋಟ, ಕರ್ಣವಿಲ್ಲದ ಕೇಳುವಿಕೆ, ನಾಸಿಕವಿಲ್ಲದ ವಾಸನೆ, ನಾಲಿಗೆಯಿಲ್ಲದ ನುಡಿ, ತಾನಿಲ್ಲದ ಸುಖ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣಲಿಂಗೈಕ್ಯವು.
--------------
ದೇಶಿಕೇಂದ್ರ ಸಂಗನಬಸವಯ್ಯ
ಆಚಾರವನರಿಯದ ನಡೆ ದುರ್ನಡೆ. ಆಚಾರವನರಿಯದ ನೋಟ ಭವದಕೂಟ. ಆಚಾರವನರಿಯದ ಅಂಗ ವಿಚಾರಭಂಗ. ಆಚಾರವನರಿಯದ ಅನುಭಾವ ಅಪ್ರಮಾಣ ದುರ್ಭಾವ. ಇದು ಕಾರಣ ಗಣಕೂಟಕೆ ಆಚಾರವೇಬೇಕು ಕಾಣಾ ಚನ್ನ ಕಾಯಮನಭಾವಪ್ರಿಯ ಮಹಾಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->