ಅಥವಾ

ಒಟ್ಟು 152 ಕಡೆಗಳಲ್ಲಿ , 47 ವಚನಕಾರರು , 141 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀವು ನಿಮ್ಮ ಸ್ವಲೀಲೆಯಿಂದೆ ಜಗದಲೀಲಾ ವೈಭವಂಗಳ ನಟಿಸಬೇಕೆಂದು ನಿಮ್ಮಲ್ಲಿ ನೆನಹುದೋರಲು, ಆ ನೆನಹು ನಿರ್ಧರಿಸಿ, ಚಿತ್ತೆನಿಸಿತ್ತು. ಆ ಚಿತ್ತಿನಿಂದೆ ಚಿನ್ನಾದ ಚಿದ್ಬಿಂದು ಚಿತ್ಕಳೆಗಳೊಗೆದವು. ಆ ಚಿನ್ನಾದ ಚಿದ್ಬಿಂದು ಚಿತ್ಕಳೆ ಆ ಮೂಲಚಿತ್ತು ಸಹವಾಗಿ ಗಟ್ಟಿಗೊಂಡು ಅಖಂಡ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗವಾಯಿತ್ತು. ಆ ಮಹಾಲಿಂಗವೇ ಪಂಚಮುಖವನೈದಿಹ ಸದಾಶಿವನೆಂದೆನಿಸಿತ್ತು. ಆ ಸದಾಶಿವನಿಂದೆ ಬ್ರಹ್ಮ-ವಿಷ್ಣು-ರುದ್ರರೆಂಬ ತ್ರೈಮೂರ್ತಿಗಳುದಿಸಿದರು. ಆ ತ್ರೈಮೂರ್ತಿಗಳಿಂದೆ ಸ್ವರ್ಗ-ಮತ್ರ್ಯ-ಪಾತಾಳಂಗಳೆಂಬ ತ್ರೈಲೋಕಂಗಳು ಜನಿಸಿದವು. ಆ ತ್ರೈಲೋಕಂಗಳ ಮಧ್ಯದಲ್ಲಿ ಸಚರಾಚರ ಹೆಣ್ಣುಗಂಡು ನಾಮ ರೂಪ ಕ್ರಿಯಾದಿ ಸಕಲ ವಿಸ್ತಾರವಾಯಿತ್ತು. ಇಂತಿವೆಲ್ಲವೂ ನಿಮ್ಮ ನೆನಹುಮಾತ್ರದಿಂದಾದವಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಸಾಧ್ಯ ಸಾಧಕರಿಲ್ಲದಂದು, ಪೂಜ್ಯ ಪೂಜಕರಿಲ್ಲದಂದು, ದೇವ ಭಕ್ತನೆಂಬ ನಾಮ ತಲೆದೋರದಂದು, ಉಪಾಸ್ಯ ಉಪಾಸಕರಿಲ್ಲದಂದು, ಅಂಗಸ್ಥಲ ಲಿಂಗಸ್ಥಲವಾಗದಂದು, ನಿನ್ನ, ನಿಃಕಲ ಶಿವತತ್ವವೆಂದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪ್ರಥಮದಲ್ಲಿ ಸ್ಪರ್ಶವೆಂಬ ಸ್ಪರ್ಶನಗುಣದಿಂದ ಪಾದೋದಕ, ದ್ವಿತೀಯದಲ್ಲಿ ಅಂಗಗುಣವಳಿಯಿತ್ತಾಗಿ ಲಿಂಗಮುಖದಿಂದ ಬಂದುದು ಲಿಂಗೋದಕ, ತೃತೀಯದಲ್ಲಿ ಮಹಾಗಣಂಗಳ ಬರವಿನಿಂದ (ಬಂದುದಾಗಿ) ಮಜ್ಜನೋದಕ, ಚತುರ್ಥದಲ್ಲಿ ಚತುರ್ದಳಪದ್ಮ ವಿಕಸಿತವಾಗಿ ಪುಷ್ಪೋದಕ, ಪಂಚಮದಲ್ಲಿ ಲಿಂಗಕ್ಕೆ ಪರಮ ಪರಿಯಾಣ (ಪರಿಣಾಮರಿ) ಇಕ್ಕುವಲ್ಲಿ ಅವಧಾನೋದಕ, ಷಷ್ಠಮದಲ್ಲಿಲಿಂಗಾರೋಗಣೆಯ ಅಪ್ಯಾಯನೋದಕ, ಸಪ್ತಮದಲ್ಲಿ ಲಿಂಗಕ್ಕೆ ಹಸ್ತೋದಕ ಅಷ್ಟಮದಲ್ಲಿ ಅಷ್ಟಾಂಗಯೋಗ ಪರಮಪರಿಣಾಮೋದಕ, ನವಮದಲ್ಲಿ ನಾಮ ಸೀಮೆ ಇಲ್ಲವಾಗಿ ನಿರ್ನಾಮೋದಕ, ದಶಮದಲ್ಲಿ ಹೆಸರಿಲ್ಲವಾಗಿ ನಿತ್ಯೋದಕ,-ಇಂತು ದಶವಿಧೋದಕ. ಇನ್ನು ಏಕಾದಶಪ್ರಸಾದ: ಪ್ರಥಮದಲ್ಲಿ ಮಹಾದೇವಂಗೆ ಮನವರ್ಪಿತ, ದ್ವಿತೀಯದಲ್ಲಿ ಮಾಹೇಶ್ವರಂಗೆ ವೀರಾರ್ಪಿತ, ತೃತೀಯದಲ್ಲಿ ಶಂಕರಂಗೆ ಸಮಾಧಾನಾರ್ಪಿತ, ಚತುರ್ಥದಲ್ಲಿ ನಿರ್ವಿಷಯಾರ್ಪಿತ, ಪಂಚಮದಲ್ಲಿ ಪಂಚವಸ್ತ್ರಾರ್ಪಿತ, ಷಷ್ಠಮದಲ್ಲಿ ನಷ್ಟರೂಪ ನಿರೂಪಾರ್ಪಿತ, ಸಪ್ತಮದಲ್ಲಿ ಆತ್ಮಾರ್ಪಿತ, ಅಷ್ಟಮದಲ್ಲಿ ತನ್ನ ಮರೆದ ಮರಹಾರ್ಪಿತ, ನವಮದಲ್ಲಿ ಅಸಮಸಹಸ್ರನಾಳದಿಂದ ತೃಪ್ತ್ಯಾರ್ಪಿತ, ದಶಮದಲ್ಲಿ ಚಿತ್ತಸುಯಿಧಾನಿಯಾಗಿ ಸುಷುಮ್ನಾನಾಳದಿಂದ ಅಮೃತಾರ್ಪಿತ, ಏಕಾದಶದಲ್ಲಿ ಏಕಪ್ರಸಾದ ನೋಡಹೋದರೆ ತನ್ನ ನುಂಗಿತ್ತಯ್ಯಾ. ಹೇಳಬಾರದ ಘನವು ಕಾಣಬಾರದಾಗಿ ಕೂಡಲಚೆನ್ನಸಂಗನಲ್ಲಿ ಉಪಮಿಸಬಾರದ ಮಹಾಘನವು
--------------
ಚನ್ನಬಸವಣ್ಣ
ಲಿಂಗ ಬೇರೆ, ಶರಣ ಬೇರೆಂದು ಹಂಗಿಸಿ ನುಡಿಯಲಾಗದು. ಲಿಂಗ ಬೇರೆ, ಶರಣ ಬೇರೆಯೇ? ಶಿವಶಿವ ಒಂದೇ ಕಾಣಿರಣ್ಣ. ಸುವರ್ಣ ಆಭರಣವಾಯಿತ್ತೆಂದಡೆ, ಅದು ನಾಮ ರೂಪಭೇದವಲ್ಲದೆ ವಸ್ತುಭೇದವಲ್ಲ. ಭಕ್ತಿಯ ವೈಭವದಿಂದ ಶರಣ ಸಕಾಯನಾಗಿ ಅವತರಿಸಿದೆನೆಂದಡೆ ಬೇರಾಗಬಲ್ಲನೇ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೆಂಬ ಲಿಂಗವೆಂದಡೂ ಶರಣನೆಂದಡೂ ಒಂದೇ ಕಾಣಿರಣ್ಣಾ.
--------------
ಸ್ವತಂತ್ರ ಸಿದ್ಧಲಿಂಗ
ಜ್ಞಾನದ ಉಬ್ಬು ಕೊಬ್ಬಿನಲ್ಲಿ ನುಡಿವುತ್ತಿಪ್ಪರೆಲ್ಲರ (ಉಲಿವುತ್ತಿಪ್ಪರೆಲ್ಲರ ?); ನಾಮ ನಾಸ್ತಿಯಾಗದು, ತನುಗುಣ ನಾಸ್ತಿಯಾಗದು, ಕರಣಾದಿಗುಣಂಗಳು ನಾಸ್ತಿಯಾಗವು, ಕರಸ್ಥಲವು ನಾಸ್ತಿಯಾಗದು. ಇದೆತ್ತಣ ಉಲುಹೊ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ, ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ; ಬಿಂದುಮಯವಾದ ಶರೀರದಲ್ಲಿ ರೂಪು ನಾದಮಯಮಾದ ಪ್ರಾಣದಲ್ಲಿ ನಾಮ ಕಳಾಮಯಮಾದ ಮನದಲ್ಲಿ ಕ್ರಿಯೆ ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ, ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು, ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು. ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು . ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು. ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು . ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ, ಆ ಬಿಂದುವೇ ಆದಿಶಕ್ತಿಮಯಮಾಯಿತ್ತು. ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ, ಆ ನಾದವೇ ಪರಾಶಕ್ತಿಯಾಯಿತ್ತು. ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ, ಆ ಕಳೆಯೇ ಜ್ಞಾನಶಕ್ತಿಯಾಯಿತ್ತು. ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ, ಪ್ರಾಣವು ಗುರುವಿನಿಂದ ಪವಿತ್ರಮಾಗಿ, ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪಂಚಾಕ್ಷರವೆಂದಡೆ ಪರಬ್ರಹ್ಮ. ಪಂಚಾಕ್ಷರವೆಂದಡೆ ಪರಶಿವ. ಪಂಚಾಕ್ಷರವೆಂದಡೆ ಪರವಸ್ತುವಿನ ನಾಮ. ಪಂಚಾಕ್ಷರವೆಂದಡೆ ಭವದುರಿತ ಬಿಟ್ಟೋಡುವುದು. ಪಂಚಾಕ್ಷರವೆಂದಡೆ ಬಹುಜನ್ಮದ ದೋಷ ಪರಿಹಾರವಾಗುವುದು. ಪಂಚಾಕ್ಷರವೆಂದಡೆ ಸಕಲ ತೀರ್ಥಕ್ಷೇತ್ರಯಾತ್ರೆಯಾದ ಪುಣ್ಯಫಲಪ್ರಾಪ್ತಿಯಾಗುವುದು. ಪಂಚಾಕ್ಷರವೆಂದಡೆ ಅಷ್ಟಮಹಾಸಿದ್ಧಿ ನವಮಹಾಸಿದ್ಧಿ ಅಷ್ಟಾಂಗಯೋಗದ ಫಲ ಅಷ್ಟೈಶ್ವರ್ಯಸಂಪತ್ತು ದೊರಕೊಳ್ಳುವುದು ನೋಡಾ. ಇಂತಪ್ಪ ಪಂಚಾಕ್ಷರೀಮಂತ್ರದ ಮಹತ್ವವ ಕಂಡು ಮನ ಕರಗಿ ತನು ಉಬ್ಬಿ, ಪಂಚಾಕ್ಷರಿ, ಪಂಚಾಕ್ಷರಿಯೆಂದು ನೆನೆನೆನೆದು ಭವಹರಿದು ಪರಶಿವಲಿಂಗವ ಕೂಡಿ ಸುಖಿಯಾಗಿರ್ದೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಉಂಟಾದುದುಂಟೆ? ಉಂಟಾದುದನಿಲ್ಲವೆಂಬುದು ಮಿಥ್ಯೆ. ಅದು ತಾ ನಾಮ ರೂಪು ಕ್ರಿಯೆ ಇಲ್ಲವಾಗಿ ಇಲ್ಲ, ಇಲ್ಲವಾದುದನುಂಟೆಂದಡೆ ಘಟಿಸದು. ಉಂಟು ಇಲ್ಲವೆಂಬ ಉಳುಮೆಯಿಲ್ಲದೆ ನಿಜ ತಾನೆ, ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಹೆಸರಿಡಬಾದ ಲಿಂಗವ ಹೆಸರಿಟ್ಟು ಎನ್ನ ಕರಸ್ಥಲಕ್ಕೆ ತಂದು ಕರತಳಾಮಳಕದಂತೆ ಮಾಡಿ ಎನ್ನ ಕರಸ್ಥಲಕ್ಕೆ ಕ್ರಿಯಾಲಿಂಗವ ಕೊಟ್ಟ. ಶ್ರೀಗುರು ಚೆನ್ನ ಬಸವಣ್ಣ ಹೆಸರಿಟ್ಟ ಲಿಂಗದ ಹೆಸರ ಹೇಳುವೆ ಕೇಳಯ್ಯಾ. ಕಂಜಕರ್ಣಿಕೆಯ ಹಣೆಯಲ್ಲಿ ವಿಹತ್ತವಸವೆಂದು ಬರೆದ ಐದಕ್ಷರವೆ ಆತನ ಪ್ರಣವನಾಮ. ಅವ್ಯಯ ಕರದೊಳಿಪ್ಪ ಆರಕ್ಷರ ಆತನ ದ್ವಿತೀಯ ನಾಮ. ಅವ್ಯಯ ಆನಂದ ಮಸ್ತಕದೊಳಿಪ್ಪ ಅಕ್ಷರವೆ ಆತನ ಆಚಾರ್ಯನಾಮ. ಎಂತೀ ನಾಮತ್ರಯಂಗಳನರಿದು ಧ್ಯಾರೂಢನಾಗಿ ಮಾಡುವರು ಎತ್ತಾನಿಕೊಬ್ಬರು. ಈ ಬಸವಣ್ಣ ಮೊದಲಾದ ಪುರಾತರು ಆ ಅವ್ಯಯ ಅನುಮತದಿಂದ ಲಿಂಗಾರ್ಚನೆಯ ಮಾಡಿ ನಿತ್ಯ ನಿಜನಿವಾಸಿಗಲಾದರು. ಆ ಶರಣರ ಅನುಮತದರಿವಿನ ಉಪದೇಶವ ಕೇಳಿ, ಎನಗಿನ್ನಾವುದು ಹದನವಯ್ಯಾ ಎಂಬ ಚಿಂತೆಯ ಬಿಟ್ಟು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೈಯಲ್ಲಿ ಪಿಡಿದೆನು.
--------------
ಸಿದ್ಧರಾಮೇಶ್ವರ
ಕುರುಹಿಲ್ಲದಠಾವಿನಲ್ಲಿ ತೆರಹಿಲ್ಲದಾತ್ಮಂಗೆ ಬರಿಯ ನಾಮವ ಸೈತಿಟ್ಟು ಕುರುಹದೇನು ಹೇಳಾ? ನಾಮವುಳ್ಳೆಡೆಯಲ್ಲಿ ಸೀಮೆ, ಸೀಮೆಯುಳ್ಳೆಡೆಯಲ್ಲಿ ನಾಮ ಹೋಹೋ, ತಿಳಿದು ನೋಡಿರೇ. ಹಮ್ಮು ಜಡನರಿವು ಮರವೆಯನೆಯ್ದಿಪ್ಪುದು ಮನ. ತನು, ಮನ, ಕರಣ, ಭಾವಕ್ಕಾಧಾರವಾಗಿಪ್ಪುದಾತ್ಮ. ಇನಕಿರಣ ಇನನಪ್ಪುದೆ? ವಾಯು ತಾನೇ ಆಕಾಶವೇ? ಧೂಮ್ರ ತಾನೇ ಅಗ್ನಿಯೆ? ನೆನೆವ ಮನವು ತಾನೇ ಜೀವನೆ? ಇಂತಲ್ಲ ನೋಡಾ, ಸೌರಾಷ್ಟ್ರ ಸೋಮೇಶ್ವರಲಿಂಗದಲ್ಲಿ ಮನವೇ ಆತ್ಮನಲ್ಲವಯ್ಯಾ ಮಲ್ಲಿಕಾರ್ಜುನ.
--------------
ಆದಯ್ಯ
ಅಯ್ಯ, ಇಂತು ಕಲ್ಯಾಣಪಟ್ಟಣದ ಅನುಭಾವಮಂಟಪದ ಶೂನ್ಯಸಿಂಹಾಸನದಲ್ಲಿ ಪ್ರಭುಸ್ವಾಮಿಗಳು ಬಸವರಾಜೇಂದ್ರ ಮುಖ್ಯವಾದ ಸಕಲಪ್ರಮಥಗಣಂಗಳು ಕೂಡಿ, ಚಿಕ್ಕದಂಡನಾಯಕ ಮುಖವಚನದಿಂದೆ ಶಿವಯೋಗಿ ಸಿದ್ಧರಾಮೇಶ್ವರನ ಉಪದೇಶಕಾರಣಾರ್ಥವಾಗಿ, ನವರತ್ನ ಖಚಿತ ಮಂಟಪವ ರಚಿಸಿ, ಶುಚಿ, ರುಚಿ, ಪರುಷ, ನಿಜ, ಸದ್ಭಕ್ತಿ, ಜ್ಞಾನ, ವೈರಾಗ್ಯ, ಸತ್ಕ್ರಿಯಾಚಾರ ಷಟ್ಸ್ಥಲಮಾರ್ಗವ ಚೆನ್ನಬಸವಣ್ಣನ ಮುಖವಚನದಿಂದೆ ಸಿದ್ಧರಾಮದೇಶಿಕೇಂದ್ರನಿಗೆ ಬೋದ್ಥಿಸಿದ ನಿಲುಕಡೆಯ ಸೂತ್ರವದೆಂತೆಂದಡೆ : ಅಯ್ಯ, ಮೂವತ್ತಾರು ತತ್ವಂಗಳಲ್ಲಿ ಸಂಬಂಧವಾದ ಅಷ್ಟಾವರಣಂಗಳ ಕೂಡಿ ನಾಲ್ವತ್ತುನಾಲ್ಕು ಚಿದಂಗತತ್ವಂಗಳೆಂದೆನಿಸಿ, ಅಯ್ಯ, ಇಷ್ಟಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಪ್ರಾಣಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಭಾವಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು ಕೂಡಲಾಗಿ ಐವತ್ತೇಳು ಮಹಾಪ್ರಣಮಂಗಳೆ ಚಿದ್ಛನಲಿಂಗಸ್ಥಲಂಗಳಾಗಿ ಶೋಬ್ಥಿಸುವಂಥ ಚಿದಂಗ-ಚಿದ್ಘನಲಿಂಗವ ಉಭಯಭಾವವಳಿದು ನೂರೊಂದುಸ್ಥಲವ ಸಂಬಂಧವಮಾಡಿ, ಮಾರ್ಗಾಚರಣೆಯ ಕುರುಹ ತೋರಿ, ಅಂತರಂಗದಲ್ಲಿ ಶೋಬ್ಥಿಸುವ ಲೋಮವಿಲೋಮದಳಂಗಳೆ ನೂರೆಂಟು ತೆರದ ಚಿದಂಗಂಗಳಾಗಿ, ಆ ದಳಂಗಳಲ್ಲಿ ಝಗಝಗಾಯಮಾನವಾಗಿ ಪ್ರಕಾಶಿಸುವ ಪ್ರಣಮಂಗಳೆ ನೂರೆಂಟು ತೆರದ ಚಿದ್ಘನಲಿಂಗಂಗಳಾಗಿ, ಒಳಗು-ಹೊರಗು ಎಂಬ ಉಭಯ ನಾಮ ರೂಪು ಕ್ರಿಯವನಳಿದು ಇನ್ನೂರ ಹದಿನಾರು ಸ್ಥಲವ ಸಂಬಂಧವ ಮಾಡಿ ಮೀರಿದ ಕ್ರಿಯಾಚರಣೆಯ ಕುರುಹ ತೋರಿ ಅನಾದ್ಥಿಗುರು ಬಸವರಾಜೇಂದ್ರನ ಪ್ರಸಿದ್ಧಪ್ರಸಾದನೆ ಮಾರ್ಗಕ್ರಿಯಾರೂಪವಾದ ನೂರೊಂದು ಸ್ಥಲಂಗಳಾಗಿ, ಅನಾದಿಜಂಗಮ ಪ್ರಭುರಾಜೇಂದ್ರನ ಶುದ್ಧಪ್ರಸಾದವೆ ಮೀರಿದ ಕ್ರಿಯಾರೂಪವಾದ ಇನ್ನೂರ ಹದಿನಾರುಸ್ಥಲಂಗಳಾಗಿ, ಇವರಿಬ್ಬರ ಮಹಾಪ್ರಸಾದವೆ ಘಟ್ಟಿಗೊಂಡು ಅನಾದಿಶರಣರೂಪವ ತಾಳಿ ಚೆನ್ನಬಸವಣ್ಣನೆಂಬಬ್ಥಿಧಾನದಿಂದ ಮಾರ್ಗಕ್ರಿಯಾಸ್ವರೂಪ ನೂರೊಂದುಸ್ಥಲವೆ ಆಚರಣೆಯಾಗಿ ಮೀರಿದ ಕ್ರಿಯಾಸ್ವರೂಪ ಇನ್ನೂರ ಹದಿನಾರುಸ್ಥಲವೆ ಸಂಬಂಧವಾಗಿ ಅನಾದಿಪರಶಿವರೂಪ ಶಿವಯೋಗಿಸಿದ್ಧರಾಮನ ಕರ-ಮನ-ಭಾವಂಗಳಲ್ಲಿ ಮಿಶ್ರಾಮಿಶ್ರಂಗಳೊಡನೆ ಅಗಣಿತ ಸೂರ್ಯಚಂದ್ರಾಗ್ನಿ ಪ್ರಕಾಶಕ್ಕೆ ಮಿಗಿಲಾಗಿ ತ್ಯಾಗ-ಭೋಗ-ಯೋಗಾನುಸಂಧಾನದಿಂದ ಸಿದ್ಧರಾಮನ ಕರಸ್ಥಲದಲ್ಲಿ ಶುದ್ಧಪ್ರಸಾದ-ಇಷ್ಟಲಿಂಗವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಮನಸ್ಥಲದಲ್ಲಿ ಸಿದ್ಧಪ್ರಸಾದ-ಪ್ರಾಣಲಿಂಗವಾಗಿ ಮಂತ್ರ-ಧ್ಯಾನ-ಜಪ-ಸ್ತೋತ್ರಂಗಳ ಕೈಕೊಂಡು ಒಪ್ಪುತ್ತಿರ್ಪರು ನೋಡ. ಭಾವಸ್ಥಲದಲ್ಲಿ ಪ್ರಸಿದ್ಧಪ್ರಸಾದ-ಭಾವಲಿಂಗವಾಗಿ ಮನೋರ್ಲಯ ನಿರಂಜನ ಪೂಜಾಕ್ರಿಯಾನಂದ ಕೂಟವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಇಂತು ಸಂಬಂಧಾಚರಣೆಯ ಸ್ಥಲಕುಳಂಗಳ ಚಿದ್ಬೆಳಗಿನಲ್ಲಿ ಶೋಬ್ಥಿಸುವ ಬಸವಣ್ಣ, ಚೆನ್ನಬಸವಣ್ಣ, ಪ್ರಭು, ಸಿದ್ಧರಾಮ ಪ್ರಮಥಗಣಂಗಳ ಮಹಾಪ್ರಸಾದ ಬೆಳಗಿಗೆ ಯೋಗ್ಯರಾಗಿ ದಗ್ಧಪಟನ್ಯಾಯ, ಉರಿವುಂಡ ಕರ್ಪೂರದಂತಾದೆವು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಭೂತ ಚಿದ್ಭೂತವಾಗಿ ಚಿಲ್ಲಿಂಗದಲ್ಲಡಗಿತ್ತು ಚಿದ್ಬಯಲಾಗಿ. ಇಂದ್ರಿಯ ಚಿದೇಂದ್ರಿಯವಾಗಿ ಚಿಲ್ಲಿಂಗದಲ್ಲಡಗಿತ್ತು ಚಿದ್ಬಯಲಾಗಿ. ಕರಣ ಚಿತ್ಕರಣವಾಗಿ ಚಿಲ್ಲಿಂಗದಲ್ಲಡಗಿತ್ತು ಚಿದ್ಬಯಲಾಗಿ. ವಿಷಯ ಚಿದ್ವಿಷಯವಾಗಿ ಚಿಲ್ಲಿಂಗದಲ್ಲಡಗಿತ್ತು ಚಿದ್ಬಯಲಾಗಿ. ವಾಯು ಚಿದ್ವಾಯುವಾಗಿ ಚಿಲ್ಲಿಂಗದಲ್ಲಡಗಿತ್ತು ಚಿದ್ಬಯಲಾಗಿ. ಸಕಲವೆಲ್ಲ ನಿಃಕಲವಾಗಿ ನಿರಂಜನದಲ್ಲಡಗಿತ್ತು ನಿರವಯವಾಗಿ, ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ನಾಮ ನಿರ್ನಾಮವಾಗಿ ನಿರ್ವಯಲಾದುದು.
--------------
ದೇಶಿಕೇಂದ್ರ ಸಂಗನಬಸವಯ್ಯ
ಮೊದಲು ರೂಪಾದ ಬಿತ್ತು, ಭೂಮಿಯಲ್ಲಿ ಬಿತ್ತಿ, ಅದು ಬೀಜ ನಾಮ ನಿಂದು, ಸಸಿಯೆಂಬ ನಾಮವಾಯಿತ್ತು. ಸಸಿ ಬಲಿದು ಬೆಳೆದು, ಉಂಡಿಗೆಯ ಬೀಜವೆಂಬ ಉಭಯನಾಮವ ತಾಳಿದುದು. ಬೀಜ ಒಂದೋ, ಎರಡೋ ? ಎಂಬುದನರಿದಲ್ಲಿ, ಕ್ರೀ ಶೂನ್ಯವೆಂಬ ಉಭಯನಾಮವಡಗಿತ್ತು. ಐಘಟದೂರ ರಾಮೇಶ್ವರಲಿಂಗ[ದ] ಉಭಯನಾಮ ನಿಂದಿತ್ತು.
--------------
ಮೆರೆಮಿಂಡಯ್ಯ
ಅಸ್ತಿ ಭಾತಿಯೆಂಬ ಬ್ಥಿತ್ತಿಯ ಮೇಲೆ, ಕ್ರೀ ನಾಮ ರೂಪವೆಂಬ ಚಿತ್ರ ಬರೆಯಿತ್ತು. ಇಲ್ಲದ ಬ್ಥಿತ್ತಿಯ ಮೇಲೆ ಉಂಟೆಂಬ ಚಿತ್ರದಂತಿರ್ದಿತ್ತು. ಅದೆಂತೆಂದಡೆ; ಅಸ್ತಿ ಭಾತಿ ಪ್ರಿಯಂ ರೂಪಂ ನಾಮ ಚೇತ್ಯಂಶಪಂಚಕಂ ಆದ್ಯತ್ರಯಂ ಬ್ರಹ್ಮರೂಪಂ ಮಾಯಾರೂಪಂ ತತೋದ್ವಯಂ ಎಂದುದಾಗಿ- ಎನಗಿದೇ ಮಾಯೆಯಾಗಿ ಕಾಡಿತ್ತು, ಕೂಡಲಸಂಗಮದೇವಾ.
--------------
ಬಸವಣ್ಣ
ಇನ್ನಷ್ಟು ... -->