ಅಥವಾ

ಒಟ್ಟು 260 ಕಡೆಗಳಲ್ಲಿ , 43 ವಚನಕಾರರು , 218 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಭಕ್ತಿವಿಡಿದು ಮೆಲ್ಲಮೆಲ್ಲನೆ ಸಾದ್ಥಿಸಿ ಕೈಗೊಟ್ಟ ಪರಿಯ ನೋಡಾ ! ಹಾದಿ ಬಟ್ಟೆಯ ಸಾಧಕರತ್ತ ಸವೆಯದೆ ಮೂದೇವರ ಮಾಟದೊಳಗಿರ್ದು ಕೂಟಕೈದಿದ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾಯವೆಂಬ ವನಿತೆಗೆ ಆತ್ಮನೆಂಬ ಪುರುಷನು ನೋಡಾ. ಈ ದೇಹದ ಆತ್ಮನ ಸಂಪರ್ಕದಿಂದ ಹುಟ್ಟಿದ ಸಕಲ ಕರಣೇಂದ್ರಿಯಂಗಳೆ ಮಕ್ಕಳು ನೋಡಾ. ಇದೇ ಸಂಸಾರವೆಂಬುದನರಿಯದೆ ಬಹಿರಂಗದಲ್ಲಿ, ನಾನು ಹೊನ್ನು ಹೆಣ್ಣು ಮಣ್ಣು ಬಿಟ್ಟು ವಿರಕ್ತನಾದೆನೆಂಬ ಅಜಾÕನಿಯ ಪರಿಯ ನೋಡಾ. ಇದು ವಿರಕ್ತಿಯೇ? ಅಲ್ಲ. ದೇಹೇಂದ್ರಿಯ ಮನಃಪ್ರಾಣಾದಿಗಳ ಮಹದಲ್ಲಿ ಒಡಗೂಡಿದಾತನೇ ಪರಮ ವಿರಕ್ತನು. ಆತಂಗೆ ನಮೋ ನಮೋಯೆಂಬೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸಿರಿಯಾಳನ ಮಗನ ಬಾಣಸವ ಮಾಡಿಸಿ ಉಣಲೊಲ್ಲದೆ, ಕಾಡಿದೆ. ಚೋಳನ ಮನೆಯಲು ಉಣಲೊಲ್ಲದೆ, ಚೆನ್ನನ ಮನೆಯಲುಂಡೆ. ಒಬ್ಬರಿಗೊಂದು ಪರಿಯ ಮಾಡಿದೆ, ಕೂಡಲಸಂಗಮದೇವಾ.
--------------
ಬಸವಣ್ಣ
ಹೃದಯದ ಬಾವಿಯ ತಡಿಯಲ್ಲಿ ಒಂದು ಬಾಳೆ ಹುಟ್ಟಿತ್ತು ! ಆ ಬಾಳೆಯ ಹಣ್ಣ ಮೆಲಬಂದ ಸರ್ಪನ ಪರಿಯ ನೋಡಾ. ಬಾಳೆ ಬೀಗಿ ಸರ್ಪನೆದ್ದೆಡೆ_ನಿರಾಳವು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಹೆಂಡಿರು_ಮಕ್ಕಳಿಗೆ ಕುಲದೈವ ಮನೆದೈವವಲ್ಲದೆ ಎನಗೆ ಕುಲದೈವ ಮನೆದೈವವಿಲ್ಲೆಂಬ ಭಂಡನ ಭಕ್ತಿಯ ಪರಿಯ ನೋಡಾ. [ಆ] ಯುಕ್ತಿಶೂನ್ಯಂಗೆ ಮುಂದೆ ದೃಷ್ಟವ ಹೇಳಿಹೆನು: ತನ್ನ ಹೆಂಡತಿ ಮತ್ತೊಬ್ಬನ ಮೆಚ್ಚಿಕೊಂಡು ಹೋಗುತ್ತಿರೆ, ಹೋದರೆ ಹೋಗಲಿ ಎಂದು ಸೈರಿಸಬಲ್ಲಡೆ ತಾನವರೊಳಗಲ್ಲ. ಅಕಟಕಟಾ ಲೌಕಿಕಕ್ಕೆ ಆಜ್ಞೆಯುಂಟು ಪಾರಮಾರ್ಥಕ್ಕೆ ಆಜ್ಞೆಯಿಲ್ಲವೆ ! ಇದು ಕಾರಣ_ಕೂಡಲಚೆನ್ನಸಂಗಯ್ಯಾ ಭಕ್ತನಾಗಿ ಭವಿಯ ಬೆರಸುವ ಅನಾಚಾರಿಯ ತೋರದಿರಯ್ಯಾ.
--------------
ಚನ್ನಬಸವಣ್ಣ
ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಬ್ಥಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : 'ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||' ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಬ್ಥಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!
--------------
ಗಣದಾಸಿ ವೀರಣ್ಣ
ಜಗವನಾಡಿಸುವನು, ಜಗವನೇಡಿಸುವನು. ಜಗದ ನಟನಾಟಕನ ಪರಿಯ ನೋಡಯ್ಯಾ! ಜಗವ ರಂಜಿಸುವನು, ಜಗವ ಭುಜಿಸುವನು. ಜಗದೊಳಗಿಪ್ಪನು, ಜಗದ ಹೊರಗಿಪ್ಪನು. ಜಗಕೆ ತೋರಿಯೂ ತೋರದಂತಿಪ್ಪನು. ದರ್ಪಣದೊಳಗಣ ಪ್ರತಿಬಿಂಬದಂತಿಪ್ಪನು. ಉದಕ-ಪದ್ಮಪತ್ರದಂತಿಪ್ಪನು. ನಿಜಗುರುವೆ, ಸ್ವತಂತ್ರ ಕಪಿಲಸಿದ್ಧಮಲ್ಲೇಶ್ವರನೆ, ನೋಟ ತೀರಲೊಡನೆ ಜಗದಾಟ ತೀರಿತು.
--------------
ಸಿದ್ಧರಾಮೇಶ್ವರ
ನಲ್ಲನ ನೋಟದ ಬೇಟದ ಕೂಟದ ಪರಿಯ ನಾನೇನೆಂದು ಹೇಳುವೆ? ವಿಪರೀತ ಕೆಳದಿ. ಕೂಟದ ಸುಖದಲ್ಲಿ ನೋಟ ಕಂಬೆಳಗಾದಡೆ ಬೇಟ ಬೇರುಂಟೆ? ಹೇಳು ಅವ್ವಾ. ನೋಡಿದ ದೃಷ್ಟಿ ಎವೆಗುಂದದೆ? ಮೋಹದ ಪರಿ ಎಂತುಂಟು? ಹೇಳಾ ಅವ್ವಾ. ನೋಟ ಬೇಟ ಕೂಟ ಸಮಸುಖ ಸಮರತಿಯಾದಡೆ ಕಪಿಲಸಿದ್ಧಮಲ್ಲಿನಾಥಯ್ಯಾ ಬೇರಿಲ್ಲವವ್ವಾ.
--------------
ಸಿದ್ಧರಾಮೇಶ್ವರ
ಆಯತವಾದ ಆರು ಗ್ರಾಮಕ್ಕೆ ಅರುವರು ತಳವಾರನಿಕ್ಕಿದ ನಮ್ಮರಸು. ಆ ಅರಸಿಂಗೆ ಕಟ್ಟಿತ್ತು ತೊಟ್ಟಿಯ ಮುಖಸಾಲೆಯ ಮಂಟಪ. ಆ ತಳವಾರರಿಗೆ ಕಟ್ಟಿತ್ತು ಕೈಸಾಲೆಯ ಮಂಟಪ. ಆ ಒಬ್ಬೊಬ್ಬ ತಳವಾರಂಗೆ ಆರಾರು ಗೆಣೆಯರ ಕೂಡಿಸಿ ಕೊಡಲು, ಆ ಗೆಣೆಯರು ತಮಗೊಬ್ಬೊಬ್ಬರಿಗೆ ಆರಾರು ಸಖರ ಕೂಡಿಕೊಂಡ ಪರಿಯ ನೋಡಾ. ಆ ಸಖರು ಆ ಗೆಣೆಯರೊಳಡಗಿ, ಆ ಗೆಣೆಯರು ಆ ತಳವಾರರೊಳಡಗಿ, ಆ ತಳವಾರರ ಕಂಡು ಅರಸು ತನ್ನ ಹೆಂಡತಿಯ ತಬ್ಬಿಕೊಂಡು ಉರಿಯ ಪೊಗಲಾಗಿ, ಎನ್ನ ಗಂಡ ಕಪಿಲಸಿದ್ಧಮಲ್ಲಿಕಾರ್ಜುನನ ನಾ ಕೇಳಲು ಬಯಲ ಬಿತ್ತಿ ಎಂದನು
--------------
ಸಿದ್ಧರಾಮೇಶ್ವರ
ಶರೀರವೇ ಹೇಯದಮೊಟ್ಟೆ ದುರ್ಗಂಧವೇ ನೈಜ, ಸುಗಂಧವೆಲ್ಲಾ ಆರೋಪಿತವಲ್ಲದೆ ನಿಜವಲ್ಲವಾಗಿ ಹೇಯವೇ ನೈಜ. ಮನಸ್ಸೇ ದುಃಖದಮೊಟ್ಟೆ, ಆ ದುಃಖವೇ ನೈಜ, ಸುಖವೇ ಆರೋಪಿತ, ಶರೀರದಲ್ಲಿರ್ಪ ಹೇಯವು ಪ್ರಬಲಗಳಾದ ವ್ಯಾದ್ಥಿಪೀಡೆಗಳನನುಭವಿಸುತ್ತಿರಲು, ಅದೇ ಜೀವನಿಗಿಹಲೋಕದಯಾತನೆಯಾಯಿತ್ತು. ದುಃಖದಮೊಟ್ಟೆಯಾಗಿರ್ಪ ಮನಸ್ಸನ್ನು ದುರ್ಗುಣಂಗಳು ಬಂದು ಅನುಭವಿಸುತ್ತಿರಲ್ಲದೇ ಜೀವನಿಗೆ ಪರಲೋಕಮಾಯಿತ್ತು. ಇಂತಪ್ಪ ಶರೀರದಲ್ಲಿ ಬಿಂದುವನ್ನೂ ಮನದಲ್ಲಿ ನಾದವನ್ನೂ ಇಹಪರಕೃತ್ಯಂಗಳಿಗೆ ಸಾಧಕಭೂತಮಾಗಿ ಪರಮಾತ್ಮನಿಟ್ಟಿರ್ಪನು. ಅಂತಪ್ಪ ಬಿಂದುವೇ ಆನಂದಸ್ವರೂಪು, ನಾದವೇ ಜ್ಞಾನಸ್ವರೂಪು, ಆ ಆನಂದಬಿಂದುವು ಶರೀರಕ್ಕೆ ಕಾರಣಮಾಗಿಹುದು, ಈ ನಾದಬಿಂದುಗಳ ಉತ್ತರಮಾರ್ಗವೇ ಮನಶ್ಶರೀರಗಳಿಗೆ ಸುಖ, ನಿಜಪ್ರಕಟವಂ ಮಾಡುತ್ತಿರ್ಪುದು. ದಕ್ಷಿಣಮಾರ್ಗವೇ ದುಃಖ, ಮಿಥ್ಯಾಪ್ರಕಟವಂ ಮಾಡುತ್ತಿಹುದು. ಇವೆರಡರ ಸಂಬಂಧವಿಲ್ಲದ ವಸ್ತುವಿಗೆ ಕೋಟಲೆಗೊಂಡು ಕುದಿವುತ್ತಿರ್ಪ ಜೀವನ ಪರಿಯ ನೋಡಾ! ಜೀವನಿಗೆ ನಿಜವೇ ಭಾವ. ಆ ಭಾವದಲ್ಲಿರ್ಪುದು ಕಳಾಪದಾರ್ಥವು, ಆ ಕಳಾಮಯವಾಗಿರ್ಪುದು ಸತ್ಯವು. ಅಂತಪ್ಪ ಸತ್ಯವಂ ಹಿಡಿದು ಈ ಮಿಥ್ಯಾರೂಪಮಾದ ಸ್ಥೂಲ ಸೂಕ್ಷ್ಮಂಗಳಂ ಬಿಟ್ಟಲ್ಲಿ, ಜೀವನೇ ಪರಮನಪ್ಪನು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುಹಿರಿಯರ ಪಾದಸೇವೆಯ ನೆರೆ ಮಾಡುವ ಪರಿಯ ಕೇಳಿರೊ ಭಕ್ತರು. ಮಾಡಿ ನೀಡುವಲ್ಲಿ ಸೊರಗಿ ಸೊಕ್ಕಿ ಕೆಕ್ಕಸಗೆಲವುತ್ತ ಮಾಡಲಾಗದು. ಸಲೆ ಪಂಕ್ತಿಯಲ್ಲಿ ಸಂಚು ವಂಚನೆ ಸನ್ನೆ ಸಟೆ ಮೈಸಂಜ್ಞೆಯಲುಂಬುದ ಬಿಟ್ಟು ಪನ್ನಗಧರನ ಶರಣರಿಗೆ ಬಿನ್ನಹವಮಾಡಿ ಬಿಜಯಂಗೆಯಿಸಿ ತಂದು ಪರಮಾನ್ನ ಪರಿಮಳದಗ್ಘಣಿಯ ನೀಡುವ ಭಕ್ತರಿಗೆ ಮುಕ್ತಿ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಸ್ವಪ್ನದ ಸುಖದಣ್ಣಗಳು ಜಾಗ್ರದ ಸುಖವನರಿಯರು, ಮೂರು ಬಣ್ಣದ ಮನೆಯೊಳಿಪ್ಪ ನಾರಿಯ ಸಂಗವ ತೊರೆದು ಮೂರುಪರ್ವತವ ಹಿಡಿದಾಡುವ ಕರಿಯ ಪರಿಯ ಮೋಹದಲ್ಲೆಸೆವರು ನೋಡಾ! ಕಾಲಸಂದಿನ ಬಾಲೆಯೊಳು ಸಿಲ್ಕಿ ಮೇಲು ಕಾಸಾರ ಪದ್ಮಪ್ರಭೆಯೊಳಿರ್ದೆನೆಂಬ ಶಬ್ದಜಾಲಿಗಳನೊದ್ದು ಕೆಡಹುವರು ಕಾಲನವರು, ಗುರುನಿರಂಜನ ಚನ್ನಬಸವಲಿಂಗದತ್ತ ಬರಗೊಡದೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ತನುಗುಣನಾಸ್ತಿ ಮನಗುಣನಾಸ್ತಿ ಧನಗುಣನಾಸ್ತಿಯಾದಡೇನು ? ಭಾವನಾಸ್ತಿಯಾಗಿರಬೇಕು. ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು. ಅರಿವು ನೆಲೆಗೊಂಡಲ್ಲಿ ಕುರುಹಿಂಗೆ ಹೊರಗು ಕುರುಹಳಿದು ಕೂಡುವ ಪರಮಸುಖವು, ಗುಹೇಶ್ವರಲಿಂಗದಲ್ಲಿ ನಿನಗೆ ಸಾಧ್ಯವಾದ ಪರಿಯ ಹೇಳಾ ಮಡಿವಾಳ ಮಾಚಯ್ಯಾ ?
--------------
ಅಲ್ಲಮಪ್ರಭುದೇವರು
ಲಿಂಗವಂತ ಲಿಂಗಭಕ್ತ ಲಿಂಗಾಚಾರಿಯೆನಿಸಿಕೊಂಡ ಬಳಿಕ, ಲಿಂಗದ ನಚ್ಚು, ಲಿಂಗದ ಮಚ್ಚು, ಲಿಂಗವೇ ಪ್ರಾಣವಾಗಿರಬೇಕಲ್ಲದೆ, ಮತ್ತೆ ತಪ್ಪಿ ನಡೆದು, ತಪ್ಪಿ ನುಡಿದು, ಪರಧನ ಪರಸ್ತ್ರೀಯರ ಸಂಗವ ಮಾಡಿ, ದುರ್ಗುಣ ದುರಾಚಾರದಲ್ಲಿ ನಡೆದು, ಮತ್ತೆ ತಾವು ಲಿಂಗವಂತರೆನಿಸಿಕೊಂಬ ಪರಿಯ ನೋಡಾ. ಇದು ಲಿಂಗದ ನಡೆಯಲ್ಲ, ಲಿಂಗದ ನುಡಿಯಲ್ಲ. ಇದ ನಮ್ಮ ಶಿವಶರಣರು ಮೆಚ್ಚರು. ಲಿಂಗವಂತನ ಪರಿ ಬೇರೆ ಕಾಣಿರೆ. ಲಿಂಗಕ್ಕೆ ಲಿಂಗವೆ ಪ್ರಾಣವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಭೋಗವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಸಂಗವಾಗಿ[ರಲು]ಬಲ್ಲ, ಇಂತಪ್ಪ ಲಿಂಗವಂತನ ಸದಾಚಾರಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಾಂಗಲಿಂಗಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಕರಣ ನಿರ್ಮುಕ್ತನ ಸರ್ವನಿರ್ವಾಣಿಕಾಯೆಂಬೆನು. ಇಂತಪ್ಪ ಮಹಾಮಹಿಮನ ನಿಲವು ಎಲಗಳೆದ ವೃಕ್ಷದಂತೆ, ಉಲುಹಡಗಿಪ್ಪ ಶರಣನ ಪರಿಯ ನೀವೇ ಬಲ್ಲಿರಲ್ಲದೆ, ಮತ್ತೆ ಉಳಿದಾದ ಅಜ್ಞಾನ ಸಂದೇಹಿಮಾನವರೆತ್ತ ಬಲ್ಲರಯ್ಯಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಲಿಂಗಾವಧಾನಿಯ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಇನ್ನಷ್ಟು ... -->