ಅಥವಾ

ಒಟ್ಟು 139 ಕಡೆಗಳಲ್ಲಿ , 10 ವಚನಕಾರರು , 50 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಜಂಗಮ, ಜಂಗಮ ಲಿಂಗವೆಂಬುದ ತೋರಿ, ನಿಜೈಕ್ಯನಾದೆಯಲ್ಲಾ ನಿಜಗುರು ಬಸವಣ್ಣಾ ! ಪ್ರಸಾದ ಕಾಯ, ಕಾಯ ಪ್ರಸಾದವೆಂಬುದ ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ, ಎನ್ನನಾಗು ಮಾಡಿ ಮುಂದುವರಿದೆಯಲ್ಲಾ ಬಸವಣ್ಣಾ ! ಲಿಂಗ ಪ್ರಾಣ, ಪ್ರಾಣ ಲಿಂಗವೆಂಬುದ ಎನ್ನಂತರಂಗದಲ್ಲಿ ಸ್ಥಾಪ್ಯವ ಮಾಡಿ ಎನ್ನ ನಿನ್ನಂತೆ ಮಾಡಿ ನಿಜಲಿಂಗದೊಳಗೆ ನಿರವಯವಾದೆಯಲ್ಲಾ ಬಸವಣ್ಣಾ ! ಎನ್ನ ಮನವ ಮಹಾಸ್ಥಲದಲ್ಲಿ ಲಯವ ಮಾಡಿ, ನಿರ್ವಯಲಾಗಿ ಹೋದೆಯಲ್ಲಾ ನಿಜಲಿಂಗೈಕ್ಯ ಬಸವಣ್ಣಾ ! ನಿನ್ನ ಒಕ್ಕುಮಿಕ್ಕ ಶೇಷವನಿಕ್ಕಿ ಆಗು ಮಾಡಿ ನಿನ್ನಂತರಂಗದಲ್ಲಿ ಅವ್ವೆ ನಾಗಾಯಿಯ ಇಂಬುಗೊಂಡಡೆ, ಎನ್ನ ಮನ ನಿಮ್ಮ ಪಾದದಲ್ಲಿ ಕರಗಿ ಕೊರಗಿತ್ತಯ್ಯಾ, ಸಂಗನಬಸವಣ್ಣಾ ! ಕೂಡಲಚೆನ್ನಸಂಗಯ್ಯಂಗೆ ಸುಜ್ಞಾನವಾಹನವಾಗಬೇಕೆಂದು ನಿರವಯವಾದೆಯಲ್ಲಾ ಸಂಗನಬಸವಣ್ಣಾ !
--------------
ಚನ್ನಬಸವಣ್ಣ
ಪಾವನವಾದೆನು ಬಸವಣ್ಣಾ, ನಿಮ್ಮ ಪಾವನಮೂರ್ತಿಯ ಕಂಡು. ಪರತತ್ವವನೈದಿದೆ ಬಸವಣ್ಣಾ, ನಿಮ್ಮ ಪರಮಸೀಮೆಯ ಕಂಡು. ಪದ ನಾಲ್ಕು ಮೀರಿದೆ ಬಸವಣ್ಣಾ, ನಿಮ್ಮ ಪರುಷಪಾದವ ಕಂಡು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿದೆ; ಬಸವಣ್ಣಾ, ಬಸವಣ್ಣಾ, ಬಸವಣ್ಣಾ, ನೀನು ಗುರುವಾದೆಯಾಗಿ.
--------------
ಸಿದ್ಧರಾಮೇಶ್ವರ
ಒಂದ ಮಾಡಹೋದಡೆ ಮತ್ತೊಂದಾಯಿತ್ತೆಂಬುದು, ಎನಗಾಯಿತ್ತು ನೋಡಾ ಬಸವಣ್ಣಾ ಮಡಿವಾಳನ ಪೂರ್ವಾಪರವನೊರೆದು ನೋಡಿದಡೆ ನಿನ್ನ ಪೂರ್ವಾಪರ ಎನಗೆ ಅರಿಯ ಬಂದಿತ್ತು ನೋಡಾ ಬಸವಣ್ಣಾ. ನಿನ್ನ ಪೂರ್ವಾಪರಸಂಗವ ಮಾಡಬಂದಡೆ ಎನ್ನ ಪೂರ್ವಾಪರ ಎನಗೆ ಅರಿಯ ಬಂದಿತ್ತು ನೋಡಾ ಬಸವಣ್ಣಾ. ಮಹಾಜ್ಞಾನಿಗಳ ಸಂಗದಿಂದ ಉಭಯ ಸಂಗಸಿದ್ಧಿಯೆಂಬುದು ದಿಟವಾಯಿತ್ತು ನೋಡಾ ಬಸವಣ್ಣಾ. ಗುಹೇಶ್ವರನ ಶರಣ ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಅನಾದಿಪುರುಷ ಬಸವಣ್ಣಾ, ಕಾಲ ಮಾಯೆಗಳೆರಡೂ ನಿಮ್ಮ ಮುಂದಿರ್ದು, ನಿಮ್ಮ ಕಾಣೆವೆನುತ್ತಿಹವು. ಆದಿಪುರುಷ ಬಸವಣ್ಣಾ; ಸುರಾಸುರರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ನಾದಪುರುಷ ಬಸವಣ್ಣಾ, ನಾದ ಮಂತ್ರಗಳು ಪಂಚಮಹಾವಾದ್ಯಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ವೇದಪುರುಷ ಬಸವಣ್ಣಾ, ವೇದಶಾಸ್ತ್ರಾಗಮ ಪುರಾಣಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ಆಗಮ್ಯಪುರುಷ ಬಸವಣ್ಣಾ, ಅಂಗಾಲ ಕಣ್ಣವರು ಮೈಯೆಲ್ಲ ಕಣ್ಣವರು ನಂದಿವಾಹನರು ಗಂಗೆವಾಳುಕರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಗೋಚರಪುರುಷ ಬಸವಣ್ಣಾ, ಈ ಗೋಚರಿಸಿದ ಮನುಮುನಿ ದೇವದಾನವ ಮಾನವರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಪ್ರಮಾಣಪುರುಷ ಬಸವಣ್ಣ, ಈ ಪ್ರಮಾಣರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಸರ್ವಜ್ಞಪುರುಷ ಬಸವಣ್ಣಾ, ಈ ಸರ್ವರು ನಿಮ್ಮ ಬಳಸಿರ್ದು ನಿಮ್ಮ ಕಾಣೆವೆನುತ್ತಿಹರು. ಇಂತೀ ಸರ್ವಪ್ರಕಾರದವರೆಲ್ಲರೂ ನಿಮ್ಮ ಸಾಧಿಸಿ ಭೇದಿಸಿ ಪೂಜಿಸಿ ತರ್ಕಿಸಿ ಹೊಗಳಿ ಕಾಣದೆ ನಿಮ್ಮಿಂದವೆ ಉತ್ಪತ್ತಿ ಸ್ಥಿತಿಲಯಂಗಳಾಗುತ್ತಿಹರು. ಅದು ಕಾರಣ,_ನಮ್ಮ ಗುಹೇಶ್ವರಲಿಂಗದಲ್ಲಿ ಭಕ್ತಿವಡೆದ ಅನಂತ ಭಕ್ತರೆಲ್ಲ ಬಸವಣ್ಣ ಬಸವಣ್ಣ ಬಸವಣ್ಣ ಎನುತ್ತ ಬದುಕಿದರಯ್ಯಾ.
--------------
ಅಲ್ಲಮಪ್ರಭುದೇವರು
ಕೆಳಗೇಳು ಲೋಕಂಗಳಿಲ್ಲದ ಮುನ್ನ, ಮೇಲೇಳು ಲೋಕಂಗಳಿಲ್ಲದ ಮುನ್ನ ಸಹಸ್ರ (ಸಮಸ್ತ ?) ಬ್ರಹ್ಮಾಂಡಗಳಿಲ್ಲದ ಮುನ್ನ, ಅಲ್ಲಿಂದತ್ತತ್ತ; ಬಸವಣ್ಣಾ ನೀನು ಲಿಂಗಭಕ್ತ, ಜಂಗಮಪ್ರಾಣಿ ! ಶಶಿಧರನ ಶರಣಂಗೆ ವೃಷಧರ ಸ್ವಾಯತವಾಗಿ, ನಮ್ಮ ಗುಹೇಶ್ವರಲಿಂಗಕ್ಕೆ ಸಂಗನಬಸವಣ್ಣನೆ ಭಕ್ತನೆಂದರಿದು ನಾನು ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾದಾತ ಬಸವಣ್ಣ. ಎನ್ನ ದೃಕ್ಕಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಮನಕ್ಕೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಭಾವಕ್ಕೆ ತೃಪ್ತಿಲಿಂಗವಾದಾತ ಬಸವಣ್ಣ. ಎನ್ನ ನಾಸಿಕಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಜಿಹ್ವೆಗೆ ಗುರುಲಿಂಗವಾದಾತ ಬಸವಣ್ಣ. ಎನ್ನ ನೇತ್ರಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ತ್ವಕ್ಕಿಂಗೆ ಜಂಗುರುಲಿಂಗವಾದಾತ ಬಸವಣ್ಣ. ಎನ್ನ ಶ್ರೋತ್ರಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಹೃದಯಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಸುಚಿತ್ತವೆಂಬ ಹಸ್ತಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸುಬುದ್ಧಿಯೆಂಬ ಹಸ್ತಕ್ಕೆ ಗುರುಲಿಂಗವಾದಾತ ಬಸವಣ್ಣ. ಎನ್ನ ನಿರಹಂಕಾರವೆಂಬ ಹಸ್ತಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ಸುಮನವೆಂಬ ಹಸ್ತಕ್ಕೆ ಜಂಗಮಲಿಂಗವಾದಾತ ಬಸವಣ್ಣ. ಎನ್ನ ಸುಜ್ಞಾನವೆಂಬ ಹಸ್ತಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಸದ್ಭಾವವೆಂಬ ಹಸ್ತಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಸ್ವಾದಿಷ್ಠಾನಚಕ್ರದಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಮಣಿಪೂರಕಚಕ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಅನಾಹತಚಕ್ರದಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವಿಶುದ್ಧಿ ಚಕ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಆಜ್ಞಾಚಕ್ರದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಬ್ರಹ್ಮರಂಧ್ರದಲ್ಲಿ ನಿಃಕಲಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಶಿಖಾಚಕ್ರದಲ್ಲಿ ಶೂನ್ಯಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಪಶ್ಚಿಮಚಕ್ರದಲ್ಲಿ ನಿರಂಜನಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವದನಕ್ಕೆ ಓಂಕಾರವಾದಾತ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾದಾತ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಒಡಲಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಬಲದ ಪಾದಕ್ಕೆ ವಕಾರವಾದಾತ ಬಸವಣ್ಣ. ಎನ್ನ ಎಡದ ಪಾದಕ್ಕೆ ಯಕಾರವಾದಾತ ಬಸವಣ್ಣ. ಎನ್ನಾ ಆಪಾದಮಸ್ತಕ ಪರಿಯಂತರ ಮಂತ್ರರೂಪಕಸಂಬಂಧವಾದಾತ ಬಸವಣ್ಣ. ಎನ್ನ ನಾದಕ್ಕೆ ಆಕಾರವಾದಾತ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾದಾತ ಬಸವಣ್ಣ. ಎನ್ನ ಕಳೆಗೆ ಮಕಾರವಾದಾತ ಬಸವಣ್ಣ. ಎನ್ನ ರುದ್ಥಿರಕ್ಕೆ ನಕಾರವಾದಾತ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಮೇಧಸ್ಸಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಅಸ್ಥಿಗೆ ವಕಾರವಾದಾತ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾದಾತ ಬಸವಣ್ಣ. ಎನ್ನ ಸರ್ವಾಂಗಕ್ಕೆ ಓಂಕಾರವಾದಾತ ಬಸವಣ್ಣ. ಇಂತು ಬಸವಣ್ಣನೆ ಪರಿಪೂರ್ಣನಾಗಿ, ಬಸವಣ್ಣನೆ ಪ್ರಾಣವಾಗಿ, ಬಸವಣ್ಣನೆ ಅಂಗವಾಗಿ, ಬಸವಣ್ಣನೆ ಲಿಂಗವಾದ ಕಾರಣ, ನಾನು ಬಸವಣ್ಣಾ ಬಸವಣ್ಣಾ ಬಸವಣ್ಣಾ ಎಂದು ಬಯಲಾದೆನು ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಭಕ್ತನಾದರು ಆಗಲಿ, ಗುರುವಾದರು ಆಗಲಿ, ಲಿಂಗವಾದರು ಆಗಲಿ, ಜಂಗಮವಾದರು ಆಗಲಿ, ಈ ಮತ್ರ್ಯದಲ್ಲಿ ಒಡಲುವಿಡಿದು ಹುಟ್ಟಿದ ಮೇಲೆ, ಮಾಯೆಯ ಗೆದ್ದೆ[ಹೆ]ನೆಂದರೆ ಸಾಧ್ಯವಲ್ಲ ಕೇಳಿರಣ್ಣಾ ! ಗೆಲ್ಲಬಹುದು ಮತ್ತೊಂದು ಭೇದದಲ್ಲಿ. ಅದೆಂತೆಂದರೆ:ಭಕ್ತನಾದರೆ ತನುವ ಗುರುವಿಂಗಿತ್ತು, ಮನವ ಲಿಂಗಕ್ಕಿತ್ತು, ಧನವ ಜಂಗಮಕ್ಕಿತ್ತು ಬೆರೆದರೆ, ಮಾಯಾಪಾಶ ಹರಿಯಿತ್ತು. ಇದರ ಗೊತ್ತು ಹಿಡಿವನೆಂದರೆ ಆತನ ಭಕ್ತನೆಂಬೆ. ಗುರುವಾದರೆ ಸಕಲ ಆಗಮಂಗಳನರಿದು, ತತ್ವಮಸಿ ಎಂದು ನಿತ್ಯವ ನೆಮ್ಮಿ, ತನ್ನ ಒತ್ತುವಿಡಿದ ಶಿಷ್ಯಂಗೆ ಪರತತ್ವವ ತೋರಿ, ಪ್ರಾಣಲಿಂಗವ ಕರದಲ್ಲಿ ಕೊಟ್ಟು, ಆ ಲಿಂಗ ಅಂಗವೆಂಬ ಉಭಯದೊಳಗೆ ತಾನಡಗಿ, ತನ್ನೊಳಗೆ ಶಿಷ್ಯನಡಗಿ, ನಾನು ನೀನು ಎಂಬ ಉಭಯ ಎರಡಳಿದರೆ, ಆತನ ಗುರುವೆಂಬೆ. ಜಂಗಮವಾದರೆ ಬಾಯಿಲೆಕ್ಕಕ್ಕೆ ಬಾರದೆ, ಬಂದು ಆಶ್ರಿತವೆನಿಸಿಕೊಳ್ಳದೆ ಆಸೆಯಳಿದು ಲಿಂಗಜಂಗಮವಾಗಿ ನಿರ್ಗಮನಿಯಾಗಿ, ಭರ್ಗೋ ದೇವಸ್ಯ ಎಂಬ, ಏಕೋದೇವ ನ ದ್ವಿತೀಯವೆಂಬ ಶ್ರುತಿಗೆ ತಂದು ತಾ ಪರಮಾನಂದದಲ್ಲಿ ನಿಂದು, ಪರಿಪೂರ್ಣನೆನಿಸಿಕೊಂಡು, ಅಣುವಿಂಗಣು, ಮಹತ್ತಿಂಗೆ ಮಹತ್ತು, ಘನಕ್ಕೆ ಘನವೆಂಬ ವಾಕ್ಯಕ್ಕೆ ಸಂದು, ತಾ ನಿಂದು ಜಗವನೆಲ್ಲವ ಆಡಿಸುವ ಅಂತರಾತ್ಮಕನಾಗಿ ಅಡಗಿದರೆ ಜಂಗಮವೆಂಬೆ. ಅಂತಾದರೆ ಈ ತ್ರಿವಿಧವು ಏಕವಾದುದನರಿದು, ಈ ಲೋಕದ ಕಾಕುಬಳಕೆಗೆ ಸಿಲ್ಕದೆ, ಇಲ್ಲಿ ಹುಟ್ಟಿದವರೆಲ್ಲ ಇವರೊಳಗೆ ಆದರು. ನಾನು ತ್ರಿವಿಧದ ನೆಲೆಯ ಹಿಡಿದುಕೊಂಡು ಇವೆಲ್ಲಕ್ಕೂ, ಹೊರಗಾಗಿ ಹೋದನಯ್ಯಾ, ಬಸವಪ್ರಿಯ ಕೂಡಲಚೆನ್ನ ಬಸವಣ್ಣಾ.
--------------
ಹಡಪದ ಅಪ್ಪಣ್ಣ
ತಾ ಬಾಳಲಾರೆ ವಿಧಿಯ ಬೈದನೆಂಬ ನಾಣ್ಣುಡಿ ದಿಟವಾಯಿತ್ತಲ್ಲಾ ಬಸವಣ್ಣಾ. ಅವಧಾನ ತಪ್ಪಿ ಆಚಾರಗೆಟ್ಟು ನಡೆದು ಶಿವನಾಧೀನವೆಂದಡೆ ಹೋಹುದೆ ? ಗುಹೇಶ್ವರಲಿಂಗದಲ್ಲಿ ಈ ಬಣ್ಣಿಗೆಯ ಮಾತು ಸಲ್ಲದು ಕೇಳಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಬಸವಣ್ಣ ಬಸವಣ್ಣ ಭಕ್ತಿ ಬೀಜ ನಷ್ಟ. ಬಸವಣ್ಣ ಬಸವಣ್ಣ ಬಸವಣ್ಣ ಮುಕ್ತಿಬೀಜ ನಷ್ಟ. ಬಸವಣ್ಣ ಮೋಕ್ಷವೆಂಬುದು ಮುನ್ನವೆ ಅಡಗಿತ್ತು. ಬಸವಣ್ಣ ತೋರದೆ ಬೀರದೆ ಹೋದೆಹೆನೆಂಬೆ, ಮಹಾಜ್ಞಾನಿ ಬಸವಣ್ಣಾ, ನೀನೆಲ್ಲಿಯಡಗಿದೆಯೊ ಕಪಿಲಸಿದ್ಧಮಲ್ಲಿನಾಥ ಬಸವಾ?
--------------
ಸಿದ್ಧರಾಮೇಶ್ವರ
ಮಹವನೊಡಗೂಡಿದ ತನು ನಿನ್ನಕ್ಷರತ್ರಯವು ಬಸವಣ್ಣಾ ; ಕರುಣಾಮೃತಸಹಿತ ಇರುತಿಪ್ಪವಯ್ಯಾ ; ಕರಣ ಕಾನನದೊಳಗೆ ಬೆಳಗುತಿಹವಯ್ಯಾ ; ಸಮತೆ ಸಾಯುಜ್ಯದ ಅನಿಮಿಷಾಕ್ಷರದಿಂದ ಬಸವಾಕ್ಷರತ್ರಯ ಮಧುರ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ತನು ಶುದ್ಧವಾಯಿತ್ತು ಬಸವಾ ಇಂದೆನ್ನ. ಮನ ಶುದ್ಧವಾಯಿತ್ತು ಬಸವಾ ಇಂದೆನ್ನ. ಭಕ್ತಿ ಯುಕ್ತಿ ಮುಕ್ತಿ ಶುದ್ಧವಾಯಿತ್ತು ಬಸವಾ ಇಂದೆನ್ನ. ಇಂತೀ ಸರ್ವವೂ ಶುದ್ಧವಾಯಿತ್ತು ಬಸವಾ ಇಂದೆನ್ನ. ನಮ್ಮ ಗುಹೇಶ್ವರಲಿಂಗಕ್ಕೆ ಆದಿಯಾಧಾರವಾದೆಯೆಲ್ಲಾ ಬಸವಣ್ಣಾ ನೀನಿಂದು.
--------------
ಅಲ್ಲಮಪ್ರಭುದೇವರು
ಹಿಂದೆ ಪರೀಕ್ಷಿಸಿ ತಿಳಿದು ನೋಡುವಡೆ, ಪರಿಯಾಯ ಪರಿಯಾಯದಿಂದ ಬಂದಂಗವ ನೀ ಬಲ್ಲೆ ಬಸವಣ್ಣಾ. ನಾ ನೊಂದ ನೋವನು ನೀ ಬಲ್ಲೆ ಬಸವಣ್ಣಾ. ನಾನಂದು ಕಾಲನ ಕಮ್ಮಟಕ್ಕೆ ಗುರಿಯಾಗಿ ಇಪ್ಪಂದು ನೀನು ಶೂನ್ಯರುದ್ರನು ಬಸವಣ್ಣಾ. ನಾನಂದು ಹಲವು ಪರಿಯ ಬಹುರೂಪನಾಡುವಲ್ಲಿ ನೀನು ವಿಚಿತ್ರವಿನೋದನೆಂಬ ಗಣೇಶ್ವರನು ಬಸವಣ್ಣಾ, ಎನ್ನಾದ್ಯಂತವ ನೀ ಬಲ್ಲೆ. ಬಲ್ಲ ಕಾರಣ ಎನ್ನ ಪಾಲಿಸಿದೆ ಬಸವಣ್ಣಾ. ನೀ ಪಾಲಿಸಿದ ಗುಣದಿಂದ ಪಾವನನಾದೆನು ಬಸವಣ್ಣಾ; ಶುದ್ಧ ಸಿದ್ಧ ಪ್ರಸಿದ್ಧವನರಿದೆ ಬಸವಣ್ಣಾ. ಎಲೆ ಗುರುವೆ ಬಸವಣ್ಣಾ, ನೀ ಪಾಸಿದ ಗುಣದಿಂದ ಜೀವನ್ಮುಕ್ತನಾದೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿ, ನಿನ್ನವರಿಗೆಯೂ ನಿನಗೆಯೂ ಯೋಗ್ಯನಾದೆ ಬಸವಣ್ಣಾ.
--------------
ಸಿದ್ಧರಾಮೇಶ್ವರ
ನಿತ್ಯ ಅನಿತ್ಯವೆಂಬುದ ತೋರಿದಿರಿ, ಸತ್ಯ ಅಸತ್ಯವೆಂಬುದ ತೋರಿದಿರಿ. ಆಚಾರ ವಿಚಾರವೆಂಬುದ ತೋರಿದಿರಿ. ಅಯ್ಯಾ ಸೋಹಂ ದಾಸೋಹಂ ಎಂಬುದ ತೋರಿದಿರಿ. ಇದು ಎಂಬುದ ತೋರಿದಿರಿ. ಅಯ್ಯಾ ಮುಕ್ತಿ ಎಂಬುದ ತೋರಿದಿರಿ. ಅಂಗ ಲಿಂಗವೆಂಬುದ ತೋರಿದಿರಿ, ಪ್ರಾಣವೇ ಜಂಗಮವೆಂಬುದ ತೋರಿದಿರಿ. ಪ್ರಸಾದವೇ ಪರವೆಂದು ತೋರಿದಿರಿ. ಇಂತಿವರ ಭೇದಾದಿ ಭೇದವನೆಲ್ಲ ತೋರಿದಿರಿ. ನಿಮ್ಮ ಹಾದಿಯ ಹತ್ತಿಸಿದಿರಿ. ಮೂದೇವರೊಡೆಯ ಚೆನ್ನಮಲ್ಲೇಶ್ವರಾ, ನಿಮ್ಮ ಹಾದಿಗೊಂಡು ಹೋಗುತ್ತಿರ್ದು, ನಾನೆತ್ತ ಹೋದೆನೆಂದರಿಯನಯ್ಯಾ. ಬಸವಪ್ರಿಯ ಕೂಡಲಚೆನ್ನ ಬಸವಣ್ಣಾ , ನಾ ಹೋದ ಹಾದಿಯ ನೀವೆ ಬಲ್ಲಿರಿ.
--------------
ಹಡಪದ ಅಪ್ಪಣ್ಣ
ಅಯ್ಯಾ, ಘನಗಂಭೀರವಪ್ಪ ಸಮುದ್ರದೊಳಗೊಂದು ರತ್ನ ಹುಟ್ಟಿದಡೆ, ಆ ಸಮುದ್ರದೊಳಗಡಗಿರ್ಪುದಲ್ಲದೆ ಘನವಾಗಿ ತೋರಬಲ್ಲುದೆ ? ನಿಮ್ಮ ಕರುಣಕಟಾಕ್ಷದಿಂದುದಯಿಸಿ, ಅನಂತ ಪುರಾಣವೆಲ್ಲವು ನಿಮ್ಮ ಕೃಪೆಯಿಂದ ಸಾಧ್ಯವಾಯಿತ್ತೆನಗೆ. ಆದಿಯನಾದಿ ಇಲ್ಲದಂದು ನೀನೊಬ್ಬನೆ ಪ್ರಸಾದಿ. ಉಮೆಯ ಕಲ್ಯಾಣವಿಲ್ಲದಂದು ನೀನೊಬ್ಬನೆ ಪ್ರಸಾದಿ. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಬಸವಣ್ಣಾ, ನಿಮ್ಮ ತೊತ್ತಿನ ತೊತ್ತಿನ ಮರುದೊತ್ತಿನ ಮಗ ನಾನಯ್ಯಾ.
--------------
ಚನ್ನಬಸವಣ್ಣ
ಕಾಯದೊಳಗೆ ಕಾಯವಾಗಿ, ಪ್ರಾಣದೊಳಗೆ ಪ್ರಾಣವಾಗಿ, ಮನದೊಳಗೆ ಮನವಾಗಿ ಭಾವದೊಳಗೆ ಭಾವವಾಗಿ ಅರಿವಿನೊಳಗೆ ಅರಿವಿನ ತಿರುಳಾಗಿ,_ಮರಹು ಮಾರಡೆಯಿಲ್ಲದೆ. ನಿಜಪದವು ಸಾಧ್ಯವಾದ ಬಳಿಕ ಆವುದು ವರ್ಮ, ಆವುದು ಕರ್ಮ ? ಆವುದು ಬೋಧೆ, ಆವುದು ಸಂಬಂಧ ? ನಾ ಹೇಳಲಿಲ್ಲ ನೀ ಕೇಳಲಿಲ್ಲ ! ಅದೇನು ಕಾರಣವೆಂದಡೆ ಬೆಸಗೊಂಬಡೆ ತೆರಹಿಲ್ಲವಾಗಿ ! ಗುಹೇಶ್ವರಲಿಂಗದಲ್ಲಿ ತೆರೆಮರೆ ಆವುದು ಹೇಳಯ್ಯಾ ಬಸವಣ್ಣಾ ?
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->