ಅಥವಾ

ಒಟ್ಟು 92 ಕಡೆಗಳಲ್ಲಿ , 31 ವಚನಕಾರರು , 77 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದವನೋದಿ ವೇದಾಧ್ಯಯನವ ಮಾಡಿದಡೇನು, ಬ್ರಾಹ್ಮಣನಾಗಬಲ್ಲನೆ? ಬ್ರಹ್ಮವೇತ್ತುಗಳ ಶುಕ್ಲಶೋಣಿತಂದ ಜನಿಸಿದಡೇನು, ಬ್ರಾಹ್ಮಣನಾಗಬಲ್ಲನೆ? ಯಜನಾ[ದಿಇ] ಷ್ಟ ಷಟ್ಕರ್ಮಂಗಳ ಬಿಡದೆ ಮಾಡಿದಡೇನು, ಬ್ರಾಹ್ಮಣನಾಗಬಲ್ಲನೆ? `ಬ್ರಹ್ಮ ಜಾನಾತಿ ಇತಿ ಬ್ರಾಹ್ಮಣಃ' ಎಂಬ ವೇದವಾಕ್ಯವನರಿದು, ಬ್ರಹ್ಮಭೂತನಾದಾತನೆ ಬ್ರಾಹ್ಮಣ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ವೇಷವ ಹೊತ್ತು , ಆಶೆ ರೋಷವ ಬಿಡದೆ, ದೇಶವ ತಿರುಗಿ, ಹೊರವೇಷದ ವಿಭೂತಿ ರುದ್ರಾಕ್ಷಿ ಕಾವಿ ಕಾಷಾಯಾಂಬರವ ಧರಿಸಿ ಫಲವೇನು? ಕಾಮ ಕೆಡದು, ಕ್ರೋಧ ಬಿಡದು, ಲೋಭ ಹಿಂಗದು, ಮೋಹ ನಿಲ್ಲದು, ಮದ ಹೆರೆಸಾರದು, ಮತ್ಸರ ಬೆಂದುಹೋಗದು. ಇವೆಲ್ಲ ಸಹಿತ ಜಂಗಮಭಕ್ತರೆಂದು ಸುಳಿವವರ ಕಂಡು ನಾಚಿತ್ತು ಎನ್ನ ಮನ. ಭಕ್ತಜಂಗಮ ಘನವನೇನೆಂದು ಉಪಮಿಸುವೆ ? ರೂಪಿನ ಹಾಗೆ, ನೆಳಲಿನ ಹಾಗೆ, ದೇಹದ ಹಾಗೆ, ಪ್ರಾಣದ ಹಾಗೆ, ಭಾವದ ಹಾಗೆ, ನಿರ್ಭಾವದ ಹಾಗೆ, ಉರಿಯ ಹಾಗೆ, ಕರ್ಪುರದ ಹಾಗೆ, ಆವಿಯ ಹಾಗೆ, ನೀರ ಹಾಗೆ, ಎರಡೊಂದಾದರೆ ತೆರಹಿಲ್ಲ. ಆ ನಿಲುವಿಂಗೆ ನಮೋ ನಮೋ ಎನುತಿರ್ದೆ ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಕೋಣನ ಹತ್ತಿ ನಡೆವ ಕರಿಯಸತ್ತಿಗೆಯ ಹಿರಿಯರು ನೀವು ಕೇಳಿರೊ, ನಿಮ್ಮ ದಾರಿ ಡೊಂಕು ಬಹಳ, ಹೊತ್ತುಳ್ಳಲ್ಲಿ ಹೋಗುವ ಪರಿಯಿನ್ನೆಂತೊ ? ಕೋಣನ ಉರುಹಿ, ಕೊಂಬು ಕಿತ್ತೊಗೆದು, ಸತ್ತಿಗೆಯ ಸುಟ್ಟು, ಹಾರುವನ ತಲೆಯ ಬೋಳಿಸಿ, ಊರ ದೇವತೆಯ ಕಡಿದು ನಿಂತುನೋಡಲು ನೆಲ ಒಣಗಿ, ಬಿಳಿಯ ದಾರಿ ಕಾಣಬಹುದು. ಮೆಲ್ಲಮೆಲ್ಲನೆ ದಾರಿಯ ಬಿಡದೆ ನಡೆದರೆ ಗುರುನಿರಂಜನ ಚನ್ನಬಸವಲಿಂಗದಲ್ಲಿ ಎರಡನೆಯವತಾರವೊಪ್ಪಿತ್ತು.
--------------
ದೇಶಿಕೇಂದ್ರ ಸಂಗನಬಸವಯ್ಯ
ಕನ್ನವನ್ನಿಕ್ಕಿ ಚಿನ್ನವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಹಾದರವಮಾಡಿ ಹಾಗವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಗಾಣವ ಹಾಕಿ ಮೀನ ಹಿಡಿದು ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಇಂತಿವರೆಲ್ಲರು ಶಿವಯುಕ್ತವಾದ ಅನಾಚಾರ ಹಿಡಿದು ಬಿಡದೆ ಸದಾಚಾರಕ್ಕೊಳಗಾಗಿ ಮುಕ್ತಿವಡೆದರು. ಮೋಕ್ಷಾಪೇಕ್ಷಿತರಾಗಿ ಪಂಚಾಚಾರಕ್ಕೊಪ್ಪುವ ವ್ರತನೇಮಗಳ ಹಿಡಿದು ಬಿಟ್ಟವಂಗೆ ಮುಂದು ಹಿಂದಾಯಿತು, ಆತ ವ್ರತಗೇಡಿ. ಅದು ಹೇಗೆಂದೊಡೆ ಹಿಡಿದ ನೈಷ್ಠೆಯ ಬಿಟ್ಟಲ್ಲಿಯೇ ಕರ್ಮತ್ರಯಂಗಳು ಬೆನ್ನ ಬಿಡವೆಂದು ಶರಣರ ವಚನಂಗಳು ಸಾರುತ್ತಿವೆ. || ಗ್ರಂಥ || `ಸ್ಥಾವರಂ ಬ್ಥಿನ್ನದೋಷೇಣ ವ್ರತಭ್ರಷ್ಟೇನ ಜಂಗಮಂ| ಉಭಯೋಬ್ರ್ಥಿನ್ನಭಾವೇನ ನಾರ್ಚನಂ ನ ಚ ವಂದನಂ||' ಇಂತೆಂದುದಾಗಿ ಹಿಡಿದು ಬಿಡುವಲ್ಲಿ ಕಮ್ಮಾರನ ಕೈಯ್ಯ ಇಕ್ಕುಳವೇ ಶರಣ? ಹಿಡಿದು ಬಿಡುವಲ್ಲಿ ಚಂದ್ರಸೂರ್ಯರುಗಳ ಗ್ರಹಣವೇ ಶರಣ? ಹಿಡಿದು ಬಿಡುವಲ್ಲಿ ಸಲ್ಲದ ನಾಣ್ಯವೇ ಶರಣ? ಹಿಡಿದು ಬಿಡುವಲ್ಲಿ ಬಾಲಗ್ರಹವೇ ಶರಣ? ಅಲ್ಲಲ್ಲ. ಉರಿ ಕರ್ಪೂರವ ಹಿಡಿದಂತೆ ಹಿಡಿದ ವ್ರತನೇಮಂಗಳ ಬಿಡದಿಪ್ಪುದೀಗ ಶರಣಸ್ಥಲದ ಮತವಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಹುಟ್ಟಿದ ಮನೆಯ ಸುಟ್ಟು ನೆರಮನೆಯ ಸುಟ್ಟು ಹೋಗುವಾಹುತಿ ಹೋತ್ರನಂತೆ, ದೇಹಾಬ್ಥಿಮಾನವಿಡಿದು ಉಪದೇಶವಾಗಿ ತನುವಿಕಾರ ಬಿಡದೆ ಗುರುಭಕ್ತಿ ದಹನಮಾಡಿ, ಜಂಗಮಲಿಂಗವ ಕಂಡು ನಿಂದಿಸಿ ಜಂಗಮಭಕ್ತಿಯ ದಗ್ಧಮಾಡಿ ದುರ್ಗತಿಯಕೂಡಿ ಹೋಗುವ ನರಕಜೀವಿಗಳಿಗೆಂತು ಭಕ್ತಿನೆಲೆಗೊಂಬುವುದಯ್ಯಾ? ನಿತ್ಯಾನಂದ ನಿಲುವಿಗೆ ಸತ್ಯವಾಗಿತ್ತಡೆ ಕರ್ತುವಿಗೆ ಭಕ್ತಿ ನಿಜವೆಂಬೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಭೂಮಿ ನಷ್ಟವಾದರೆ ಜಲಕ್ಕಿಂಬಿಲ್ಲ, ಜಲ ನಷ್ಟವಾದರೆ ಇಂದ್ರಿಯಕ್ಕಿಂಬಿಲ್ಲ, ಇಂದ್ರಿಯ ನಷ್ಟವಾದರೆ ಜಂಗಮಕ್ಕಿಂಬಿಲ್ಲ, ಜಂಗಮ ನಷ್ಟವಾದರೆ ಲಿಂಗಕ್ಕಿಂಬಿಲ್ಲ. ಇದು ಕಾರಣ ಕರಣಾದಿಗಳಂ ಬಿಡದೆ ಆನು ವ್ರತಿಯೆಂಬವರ ತೋರಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಜಪಿಸಿರೊ ಜಪಿಸಿರೊ ಶ್ರೀ ಪಂಚಾಕ್ಷರಿಯ. ಜಪದಿಂದ ರುದ್ರನಪ್ಪುದು ತಪ್ಪದು ನೋಡಾ ! ಶ್ರೀ ಪಂಚಾಕ್ಷರಿಯನಿಂಬುಗೊಳದವನ ಅಂಗ ಹಾಳು. ಶ್ರೀ ಪಂಚಾಕ್ಷರಿಯ ನೆನೆಯದವ ಜಿಹ್ವೆ ಹೇಳು. ಶ್ರೀ ಪಂಚಾಕ್ಷರಿಯ ಕೇಳದವನ ಕರ್ಣ ಹಾಳು. ನಡೆವೆಡೆಯಲ್ಲಿ ನುಡಿವೆಡೆಯಲ್ಲಿ ಕೊಡುವೆಡೆಯಲ್ಲಿ ಕೊಂಬೆಡೆಯಲ್ಲಿ ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ಬಿಡದೆ ಪಂಚಾಕ್ಷರಿಯೆಂಬ ಮಂತ್ರವನೆ `ನಮಃ ಶಿವಾಯ' `ನಮಃ ಶಿವಾಯ' `ನಮಃ ಶಿವಾಯ'ಯೆಂದು ಜಪಿಸಿ, ಒಡಲ ದುಗುರ್ಣವ ಕೆಡಿಸಿ, ಮೃಡ ನಿಮ್ಮ ನೆನೆದು ನಾ ಬದುಕಿದೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಲೌಕಿಕದಲ್ಲಿ ಒಬ್ಬ ಪುರುಷಂಗೆ ಸ್ತ್ರೀಯರು ಒಬ್ಬರು, ಇಬ್ಬರು, ಮೂವರು, ನಾಲ್ವರು, ಐವರು ಪರಿಯಂತರ ಸತಿಯರುಂಟು. ಒಬ್ಬ ಸ್ತ್ರೀಯಳಿಗೆ ಐವರು ಪುರುಷರುಂಟೆ? ಇಲ್ಲೆಂಬ ಹಾಗೆ, ಎನಗೆ ಎನ್ನ ತಾಯಿತಂದೆಗಳು ಮೂರಾರು ಗಂಡರ ಮದುವೆ ಮಾಡಿ ಒಗತನ ಮಾಡೆಂದು ಸಕಲಗಣಂಗಳ ಸಾಕ್ಷಿಯಾಗಿ ಎನಗೆ ಕೊಟ್ಟರು. ಆ ನಿರೂಪವ ಕೈಕೊಂಡು ಗಂಡನ ಸಂಗವ ಮಾಡದೆ ಅವರ ಸಂಗವ ಬಿಡದೆ ರಂಗಮಂಟಪದಲ್ಲಿ ಒಬ್ಬನ ಕುಳ್ಳಿರಿಸಿ, ನಡುಮನೆಯಲ್ಲಿ ಒಬ್ಬನ ಕುಳ್ಳಿರಿಸಿ, ಒಬ್ಬನ ಹಿರಿಮನೆಯಲ್ಲಿ ಕುಳ್ಳಿರಿಸಿ, ಷಡ್ವಿಧಸ್ಥಾನಗಳಲ್ಲಿ ಷಡ್ವಿಧರ ಕುಳ್ಳಿರಿಸಿ, ಇಂತೀ ಪುರುಷರ ಕೂಡಿ ಒಗತನವ ಮಾಡಿ, ಇವರಿಗೆ ಸಿಕ್ಕದೆ ಹೊಲೆಯನ ಕೂಡಿ ಕುಲಗೆಟ್ಟು ನಾಯೆತ್ತ ಹೋದೆನೆಂದರಿಯನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಎನ್ನ ದೇಹವ ದಗ್ಧವ ಮಾಡಯ್ಯಾ. ಎನ್ನ ಕಾಯದಲಿಪ್ಪ ಕರ್ಮವ ತೊಡೆಯಯ್ಯಾ. ಎನ್ನ ಭಾವದಲಿಪ್ಪ ಭ್ರಮೆಯ ಜರಿಯಯ್ಯಾ. ನಾ ಹಿಡಿದ ಛಲವ ಬಿಡದೆ ನಡೆಸಯ್ಯಾ ಅಮುಗೇಶ್ವರಲಿಂಗವೆ.
--------------
ಅಮುಗೆ ರಾಯಮ್ಮ
ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ || ಗುರೂಣಾ ದತ್ತಲಿಂಗಂಚ ನಾಸ್ತಿ ದೈವಂ ಮಹೀತಲೇ' ಇತಿ ಭಾವಾನುಸಂಧಾನೋ ಲಿಂಗಾಚಾರಸ್ಸಮುಚ್ಯತೇ || ಧರ್ಮಾರ್ಜಿತವಿತ್ತೇನ ತೃಪ್ತಿಶ್ಚ ಕ್ರಿಯತೇ ಸದಾ ಗುರುಜಂಗಮಲಿಂಗಾನಾಂ ಸದಾಚಾರಃ ಪ್ರಕೀರ್ತಿತಃ || ಅವಿಚಾರೇಷು ಭಕ್ತೇಷು ಜಾತಿಧರ್ಮಾದಿ ಸೂತಕಾನ್ ೀ ತದ್ಗøಹೇಷ್ವನ್ನಪಾನಾದಿ ಭೋಜನಂ ಕ್ರಿಯತೇ ಸದಾ || ತಚ್ಫಿವಾಚಾರಮಿತ್ಯಾಹುರ್ವೀರಶೈವಪರಾಯಣಾ ಶಿವಭಕ್ತಜನಾ ಸರ್ವೇ ವರಿಷ್ಠಾಃ ಪೃಥಿವೀತಲೇ || ತೇಷಾಂ ಭೃತ್ಯೋಹಮಿತ್ಯೇತದ್ಭೃತ್ಯಾಚಾರಸ್ಸ ಉಚ್ಯತೇ ೀ ಗುರುಲಿಂಗ ಜಂಗಮಶ್ಚೈವ ಪಾದತೀರ್ಥಃ ಪ್ರಸಾದತಃ ೀ ಇತಿ ಪಂಚಸ್ವರೂಪೋ[s]ಯಹಂ ಗಣಾಚಾರಃ ಪ್ರಕೀರ್ತಿತಃ ||ú ಎಂದುದಾಗಿ, ಇಂತಪ್ಪ ಶಿವಾಚಾರದ ಆಚಾರವನರಿಯದೆ ನಾ ಶಿವಭಕ್ತ ನಾ ಶಿವಭಕ್ತೆ ನಾ ಶಿವಾಚಾರಿ ಎಂದು ಕೊಂಬ ಶೀಲವಂತರ ನೋಡಿ ಎನ್ನ ಮನ ನಾಚಿ ನಿಮ್ಮಡಿಮುಖವಾಯಿತ್ತಯ್ಯ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಯ್ಯ.
--------------
ಅಕ್ಕಮಹಾದೇವಿ
ಮದ ಮತ್ಸರ ಬಿಡದು, ಮನದ ಕನಲು ನಿಲ್ಲದು, ಒಡಲಗುಣ ಹಿಂಗದು. ಇವ ಮೂರನು ಬಿಡದೆ ನಡಸುವನ್ನಕ್ಕ ಘನವ ಕಾಣಬಾರದು. ಘನವ ಕಾಂಬುದಕ್ಕೆ ಮದಮತ್ಸರವನೆ ಬಿಟ್ಟು, ಮನದ ಕನಲನೆ ನಿಲಿಸಿ, ಒಡಲಗುಣ ಹಿಂಗಿ, ತಾ ಮೃಡರೂಪಾದಲ್ಲದೆ ಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಂಗದ ಮೇಲೆ ಇಷ್ಟಲಿಂಗವ ಧರಿಸಿ ಪೂಜೋಪಚಾರವ ಮಾಡುವವರು ಲಿಂಗಪ್ರಾಣಿಗಳಲ್ಲ. ಎನ್ನ ಗುರುವೆಂದು ಭಾವಿಸಿ ಶರಣೆಂದು ನಮಸ್ಕಾರ ಮಾಡುವವರು ಲಿಂಗಪ್ರಾಣಿಗಳಲ್ಲ. ಜಂಗಮವೆಂದು ನಂಬಿ, ವಿಶ್ವಾಸ ಬಲಿದು, ಪಾದಪೂಜೆಯ ಮಾಡಿ ಪಾದೋದಕ ಪ್ರಸಾದವ ಕೊಂಬುವವರು ಲಿಂಗಪ್ರಾಣಿಗಳಲ್ಲ. ಇಂತೀ ತ್ರಿಮೂರ್ತಿಗಳ ಪೂಜೆಯನ್ನು ಬಿಟ್ಟು ಬಿಡದೆ ಪಿಡಿದು ಪೂಜಿಸುವವರು ಪ್ರಾಣಲಿಂಗಿಗಳೆಂಬೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನುಡಿದ ನುಡಿಗೆ ನಡೆ ಇಲ್ಲದಿದ್ದರೆ, ಮೃಡನ ಶರಣರು ಕಡೆನುಡಿದಲ್ಲದೆ ಮಾಣರು. ಎಮ್ಮ ಶರಣರು ಮತ್ತೆ ಹೊಡೆಗೆಡೆದು ಎನ್ನ ನುಡಿದು, ಹೊಡೆದು, ರಕ್ಷಿಸಿದಿರಲ್ಲ. ಎನ್ನ ಒಡೆಯರು ನೀವಹುದೆಂದು ಬಿಡದೆ ಅವರ ಬೇಡಿಕೊಂಬೆ. ಇದೀಗ ನಮ್ಮ ಶರಣರ ನಡೆನುಡಿ. ಅದಂತಿರಲಿ. ಅದಕೆ ನಮೋ ನಮೋ ಎಂಬೆ. ಈ ಪೊಡವಿಯೊಳು ಹುಟ್ಟಿದ ಮನುಜರೆಲ್ಲರು ಒಡೆಯರೆಂದು ಪೂಜೆಯಮಾಡಿ,ತುಡುಗುಣಿನಾಯಿಯಂತೆ ಒಕ್ಕುದ ಮಿಕ್ಕುದ ನೆಕ್ಕಿ, ತಮ್ಮ ಇಚ್ಛೆಗೆ ನುಡಿದರೆ ಒಳ್ಳಿದನೆಂಬರು. ಸತ್ಯವ ನುಡಿದರೆ ಸಾಯಲವನೆಲ್ಲಿಯ ಶರಣ ? ಇವನೆಲ್ಲಿಯ ಜಂಗಮ? ಇವರ ಕೂಡಿದ ಮನೆ ಹಾಳೆಂದು, ಕಂಡ ಕಂಡವರ ಕೂಡ ಹೇಳಿಯಾಡುವ, ಈ ಕಾಳುಮನುಜರನು ಲಿಂಗ ಜಂಗಮವೆಂದು ನುಡಿದು ಕೂಡಿಕೊಂಡು ಹೋದರೆ, ತನ್ನ ತನ್ನ ಪದಾರ್ಥವ ಹಿಡಿದರೆ, ಒಡೆಯನೆ ಬದುಕಿದೆ, ತ್ರಾಹಿ ಎಂಬ ಮೃಡಶರಣನು ಈ ಅಡ[ಗು] ಕಚ್ಚಿಕೊಂಡಿರುವ, ಹಡಿಕಿಮನುಜರನು ಸರಿಗಂಡಡೆ, ನಾಯಕ ನರಕದಲ್ಲಿಕ್ಕುವ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಮೃಡನನೊಂದು ದೈವಕ್ಕೆ ಪಡಿಗಟ್ಟಿ ನುಡಿವನ ಬಾಯಲ್ಲಿ, ಬಿಡದೆ ನೆಟ್ಟುವೆನೈದಾರು ಗೆಜ್ಜೆಯ ಗೂಟಗಳನು. ಭೂಮಂಡಲದೊಳಗೆ ಕಲಿದೇವಂಗೆ ಹುಲುದೈವವ ಸರಿಯೆಂದು ನುಡಿವನ ಬಾಯ, ಎಡದ ಕಾಲ ಕೆರಹಿಂದ ಬಡಿಯೆಂದ, ಮಡಿವಾಳ ಮಾಚಯ್ಯ.
--------------
ಮಡಿವಾಳ ಮಾಚಿದೇವ
ಇನ್ನಷ್ಟು ... -->