ಅಥವಾ

ಒಟ್ಟು 55 ಕಡೆಗಳಲ್ಲಿ , 26 ವಚನಕಾರರು , 50 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಶಿವಾ, ಈ ಲೋಕದ ಮಾನವರನೇನೆಂಬೆನಯ್ಯಾ. ಅದೆಂತೆಂದಡೆ: ನಾವು ಗುರುಗಳು, ನಾವು ಲಿಂಗಾಂಗಿಗಳು, ನಾವು ಜಂಗಮಲಿಂಗಿಗಳು, ನಾವು ಸದಾಚಾರಸದ್ಭಕ್ತರು ಎಂಬರಯ್ಯ. ಇಂತಿವರ ನಡತೆ ಆಚರಣೆಯೆಂತಾಯಿತೆಂದಡೆ: ಒಬ್ಬಾನೊಬ್ಬ ಜಾತಿಹಾಸ್ಯಗಾರನು ವೇಷವ ಧರಿಸಿಕೊಂಡು ಪುರಜನರ ಮೆಚ್ಚಿಸಿ, ತನ್ನ ಒಡಲಹೊರವಂತೆ, ವಿಭೂತಿ ರುದ್ರಾಕ್ಷಿ ಕಾವಿ ಕಾಷಾಂಬರ ಮುಂತಾಗಿ ವೇಷವ ಧರಿಸಿ, ಗುರು-ಹಿರಿಯರು ಜಂಗಮಲಿಂಗಿಗಳೆಂದು ನಾಮವ ತಾಳಿ, ಭಕ್ತರಿಗೆ ಸದಾಚಾರಮಾರ್ಗವ ಹೇಳೇವು, ಸದಮಲದ ಬೆಳಗ ತೋರೇವು ಎಂದು ಧನಿಕರಿದ್ದೆಡೆಗೆ ಬಂದು, ನಿಮಗೆ ಉಪದೇಶವ ಹೇಳಿ, ಲಿಂಗಾಂಗಸಮರಸವ ತೋರಿ, ಮಾಂಸಪಿಂಡವಳಿದು ಮಂತ್ರಪಿಂಡವ ಮಾಡೇವು ಎಂದು ಹೇಳಿ, ಆ ಭಕ್ತರ ಕೈಯಲ್ಲಿ ಅನ್ನ ಹಚ್ಚಡ ಹೊನ್ನು ವಸ್ತ್ರವ ತೆಗೆದುಕೊಂಡು ಆ ಜಾತಿಕಾರನ ಹಾಗೆ ಇವರು ತಮ್ಮ ಉದರಾಗ್ನಿ ಅಡಗಿಸಿಕೊಂಬುವರಲ್ಲದೆ ಇಂತಪ್ಪ ಗುರು-ಶಿಷ್ಯರ, ದೇವ-ಭಕ್ತರೆಂಬುಭಯರ ಆಚರಣೆಯೆಂತಾಯಿತ್ತೆಂದೊಡೆ- ಹಂದಿಯ ಬಾಯೊಳಗಿನ ತುತ್ತ ನಾಯಿ ಬಂದು ಕಚ್ಚಿದಂತೆ. ಅದೆಂತೆಂದೊಡೆ: ಜೀವನಬುದ್ಭಿಯುಳ್ಳ ಗುರುವೆಂದಾತ ಹಂದಿ, ಕರಣಬುದ್ಧಿಯುಳ್ಳ ಶಿಷ್ಯನೆಂಬಾತ ನಾಯಿ. ಇಂತಪ್ಪ ಗುರು-ಶಿಷ್ಯರ ಸಮ್ಮೇಲನವು ಹುಟ್ಟುಗುರುಡನ ಕೈಯ ಕಟ್ಟಿ ಲೊಟ್ಟಿಗಣ್ಣವ ಪಿಡಿದು ಕಾಣದೆ ಕಮ್ಮರಿಬಿದ್ದಂತಾಯಿತಯ್ಯ. ಅದೇನು ಕಾರಣವೆಂದಡೆ, ಗುರುವಿನಂತ ಶಿಷ್ಯನರಿಯ, ಶಿಷ್ಯನಂತ ಗುರುವರಿಯ, ಜಂಗಮನಂತ ಭಕ್ತನರಿಯ, ಭಕ್ತನಂತ ಜಂಗಮವರಿಯದ ಕಾರಣ. ಉಪಾದ್ಥಿಯುಳ್ಳವರು ಗುರುವಲ್ಲ ಶಿಷ್ಯರಲ್ಲ. ಉಪಾದ್ಥಿಯುಳ್ಳವರಲ್ಲಿ ಉಪದೇಶವ ಹಡಿಯಬೇಕೆಂಬವರ, ಉಪಾದ್ಥಿಯುಳ್ಳವರಿಗೆ ಉಪದೇಶವ ಹೇಳಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಸೂರ್ಯಚಂದ್ರರು ಅಳಿದುಹೋಗುವ ಪರಿಯಂತರವು ಹಂದಿ ನಾಯಿಯ ನರಕದಲ್ಲಿಕ್ಕದೆ ಬಿಡನೆಂದಾತ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗಿರಿಗಳೆಲ್ಲ ಕೂಡಿ ಮೇರುಗಿರಿಗೆ ಸರಿಯಾಗಬಲ್ಲವೆ? ತರುಗಳೆಲ್ಲ ಕೂಡಿ ಕಲ್ಪತರುವಿಗೆ ಸರಿಯಾಗಬಲ್ಲವೆ? ಸರಿಯಿಲ್ಲ ನೋಡಾ ನಮ್ಮ ಭಕ್ತರಿಗೆ ನರರು ಸುರರು ಸರಿಯಲ್ಲ ನೋಡಾ! ಪರುಷಕ್ಕೆ ಪಾಷಾಣ ಸರಿಯೆ? ಮರುಜವಣಿಗೆ ಔಷಧ ಸರಿಯೇ? ಇದು ಕಾರಣ, ಶಿವಭಕ್ತರ್ಗೆ ಲೋಕದವರು ಸರಿಯೆಂದರೆ ನರಕ ತಪ್ಪದಯ್ಯಾ, ರಾಮಾನಾಥ.
--------------
ಜೇಡರ ದಾಸಿಮಯ್ಯ
ತಿರಿದುಕೊಂಡು ಬಂದಾದರೆಯೂ ನಿಮ್ಮ ಭಕ್ತರಿಗೆ ಆನು ಬೆಸಕೆಯ್ವ ಭಾಗ್ಯವನು, ಮಾಡು ಕಂಡಯ್ಯಾ. ಮನ ವಚನ ಕಾಯದಲ್ಲಿ ನಿಮ್ಮ ಶರಣರಿಗೆ ಆನು ತೊತ್ತಾಗಿಪ್ಪುದು, ಮಾಡು ಕಂಡಯ್ಯಾ. ಹಲವು ಮಾತೇನು ಲಿಂಗಜಂಗಮಕ್ಕೆ ಈವುದನೆ ಮಾಡು ಕಂಡಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಾ.
--------------
ಸಂಗಮೇಶ್ವರದ ಅಪ್ಪಣ್ಣ
ಗುರುಹಿರಿಯರ ಪಾದಸೇವೆಯ ನೆರೆ ಮಾಡುವ ಪರಿಯ ಕೇಳಿರೊ ಭಕ್ತರು. ಮಾಡಿ ನೀಡುವಲ್ಲಿ ಸೊರಗಿ ಸೊಕ್ಕಿ ಕೆಕ್ಕಸಗೆಲವುತ್ತ ಮಾಡಲಾಗದು. ಸಲೆ ಪಂಕ್ತಿಯಲ್ಲಿ ಸಂಚು ವಂಚನೆ ಸನ್ನೆ ಸಟೆ ಮೈಸಂಜ್ಞೆಯಲುಂಬುದ ಬಿಟ್ಟು ಪನ್ನಗಧರನ ಶರಣರಿಗೆ ಬಿನ್ನಹವಮಾಡಿ ಬಿಜಯಂಗೆಯಿಸಿ ತಂದು ಪರಮಾನ್ನ ಪರಿಮಳದಗ್ಘಣಿಯ ನೀಡುವ ಭಕ್ತರಿಗೆ ಮುಕ್ತಿ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಫಲಪದಾದಿಗಳ ಭಕ್ತರಿಗೆ ಕೊಟ್ಟೆನೆಂದೆಂಬೆ; ಅವರವನೊಲ್ಲರು! ಅವರು ನಿನಗೆ ನಿನ್ನ ರೂಪಿಂಗೆ ತನುಮನಧನಾದಿಗಳ ಕೊಡುವರು. ಎಲೆ ವಂಚಕನಾದ ಶಿವನೆ, ನಿರ್ವಂಚಕರೆಮ್ಮವರು! ನಿನ್ನನೇನ ಬೇಡುವರವರು? ನೀನೇನನವರಿಗೆ ಕೊಡುವೆ? ನಿನ್ನ ಕೊಡನೆಮ್ಮವರೊಲ್ಲರು ಕಾಣಾ, ಕೊಡು, ಕೊಡದೆ ಹೋಗು, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಗುರುಪ್ರೇಮಿಯಾದಡೆ ಚತುರ್ವಿಧಭಕ್ತಿಯಿಂದ ತನುವ ದಂಡಿಸಲಾಗದು. ಲಿಂಗಪ್ರೇಮಿಗಳಾದಡೆ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಮನವ ಬಳಲಿಸಲಾಗದು. ಜಂಗಮಪ್ರೇಮಿಗಳಾದಡೆ ಅನ್ನ ವಸ್ತ್ರ ಹದಿನೆಂಟು ಜೀನಸಿನ ಧಾನ್ಯ ಮೊದಲಾದ ಷೋಡಶಭಕ್ತಿಯಿಂದ ಆತ್ಮನ ಬಳಲಿಸಲಾಗದು. ಇಂತಪ್ಪ ಭಕ್ತರಿಗೆ ಭವ ಹಿಂಗದು ; ಮುಕ್ತಿಯು ತೋರದು. ಅದೇನು ಕಾರಣವೆಂದಡೆ : ತಮ್ಮ ನಿಜವ ಮರೆದು ಕರ್ಮಕಾಂಡಿಗಳಾದ ಕಾರಣ. ಇಂತಪ್ಪವರ ಬ್ಥಿನ್ನಕ್ರಿಯಾಚಾರವನು ಸುಜ್ಞಾನೋದಯವಾದ ಜ್ಞಾನಕಲಾತ್ಮನು ತನ್ನ ಪರಮಜ್ಞಾನದಿಂ ನಷ್ಟವ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಂಬಂದ್ಥಿಯಾಗಿ, ಸರ್ವಾಂಗಲಿಂಗಮಯ ತಾನೆಂದು ತಿಳಿದು, ವಿಚಾರಿಸಿಕೊಂಡು ಪರಶಿವಪರಮೂರ್ತಿಗಳಾದ ಗುರುಲಿಂಗಜಂಗಮವನ್ನು ತನ್ನ ತನುಮನದಲ್ಲಿ ಸ್ವಾಯತವಮಾಡಿದ ಶಿವಶರಣಂಗೆ ಭವ ಹಿಂಗಿ, ಮುಕ್ತಿ ಎಂಬುದು ಕರತಳಾಮಳಕವಾಗಿ ತೋರುವದು ಕಾಣೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅದ್ವೈತವ ಹೇಳುವ ಹಿರಿಯರೆಲ್ಲರೂ ದ್ವೈತಕ್ಕೊಳಗಾದರು. ನಿಸ್ಸಂಸಾರವ ಹೇಳುವ ಹಿರಿಯರೆಲ್ಲರೂ ಸಂಸಾರದ ಸಾರವ ಚಪ್ಪಿರಿದು ಕೆಟ್ಟರು. ಭಕ್ತರಿಗೆ ನಿತ್ಯವಲ್ಲೆಂದು ಹೇಳಿ, ತಾವು ಅನಿತ್ಯವ ಹಿಡಿದು, ಪಾಶಕ್ಕೆ ಸಿಕ್ಕಿ ಸತ್ತುದನರಿಯದೆ, ನಾವು ಮುಕ್ತರಾದೆವೆಂಬ ಭ್ರಷ್ಟರ ನೋಡಾ. ನನಗಿನ್ನೆತ್ತಣ ಮುಕ್ತಿ ಎಂದಂಜಿದೆ, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ ? ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ ? ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ ? ನಿತ್ಯ ಅನಿತ್ಯವ ತಿಳಿದು, ಮತ್ರ್ಯ ಕೈಲಾಸವೆಂಬುದು ಭಕ್ತರಿಗೆ ಯುಕ್ತಿಯಲ್ಲ. ನಿಶ್ಚಯವ ತಾನರಿತು ಅತ್ತಣ ಇತ್ತಣ ಗೊತ್ತು ನಿಶ್ಚಯವಾಗಿ ನಿಂದಲ್ಲಿ, ಆ ಬಚ್ಚಬಯಲ ಬೆಳಗ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ
--------------
ಮೋಳಿಗೆ ಮಹಾದೇವಿ
ಒಡೆಯರು ಭಕ್ತರಿಗೆ ಸಲುವ ಸಹಪಙô್ತಯಲ್ಲಿ, ಗುರು ಅರಸೆಂದು, ತನ್ನ ಪರಿಸ್ಪಂದವೆಂದು ರಸದ್ರವ್ಯವ ಎಸಕದಿಂದ ಇಕ್ಕಿದಡೆ, ಅದು ತಾನರಿದು ಕೊಂಡಡೆ ಕಿಸುಕುಳದ ಪಾಕುಳ. ಅಲ್ಪ ಜಿಹ್ವೆಲಂಪಟಕ್ಕೆ ಸಿಕ್ಕಿ ಸಾವ ಮತ್ಸ್ಯದಂತೆಯಾಗದೆ- ಈ ಗುಣವ ನಿಶ್ಚಯಿಸಿದಲ್ಲಿ ಏಲೇಶ್ವರಲಿಂಗವನರಿಯಬಲ್ಲ.
--------------
ಏಲೇಶ್ವರ ಕೇತಯ್ಯ
ಪಂಚಮಹಾಪಾತಕವಾವುದೆಂದರಿಯರು _ ಭವಿಯ ತಂದು ಭಕ್ತನ ಮಾಡೂದು ಪ್ರಥಮ ಪಾತಕ. ಭಕ್ತರಿಗೆ ಶರಣೆಂಬುದು ದ್ವಿತೀಯ ಪಾತಕ, ಗುರುವೆಂಬುದು ತೃತೀಯ ಪಾತಕ. ಗುರು ಲಿಂಗ ಜಂಗಮದ ಪ್ರಸಾದವ ಕೊಂಡಡೆ ನಾಲ್ಕನೆಯ ಪಾತಕ. ಗುಹೇಶ್ವರಲಿಂಗದಲ್ಲಿ ಹಿರಿದು ಭಕ್ತಿಯ ಮಾಡೂದು ಪಂಚಮ ಪಾತಕ !
--------------
ಅಲ್ಲಮಪ್ರಭುದೇವರು
ಒಡೆಯರು ಭಕ್ತರಿಗೆ ಸಲುವ ಸಹಪ:ಕ್ತಿಯಲ್ಲಿ ಗುರುವೆಂದು, ಅರಸೆಂದು, ತನ್ನ ಪರಿಸ್ಪಂದದವರೆಂದು, ರಸದ್ರವ್ಯವನೆಸಕದಿಂದ ನೀಡಿದೊಡೆ, ಅದ ನಾನರಿದು ಕೈಕೊಂಡಡೆ ಕಿಸುಕುಳದ ಪಾಕುಳಕಿಚ್ಚೈಸಿದಂತೆ ; ಅಲ್ಪ ಜಿಹ್ವಾಲಂಪಟಕ್ಕೆ ಸಿಕ್ಕಿದ ಮತ್ಸ್ಯ ಬಂಧನದಿ ಸತ್ತಂತೆ. ಇದನರಿದು ಭಕ್ತನಾಗಲಿ, ಗುರುವಾಗಲಿ, ಜಂಗಮವಾಗಲಿ, ಶಿವಗಣಪ:ಕ್ತಿಯ ನಡುವೆ ತಾ ಕುಳ್ಳಿರ್ದು ಮಿಗಿಲಾಗಿ ಷಡುರಸಾನ್ನವಾದಿಯಾದ ಸುಪದಾರ್ಥಂಗಳನಿಕ್ಕಿಸಿಕೊಂಡು ತಿಂದನಾದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ಶಿವಶಿವಾ, ಮತ್ತೊಂದು ಪರಿಯ ಪೇಳ್ವೆ. ಅದೆಂತೆಂದಡೆ: ಈ ಲೋಕದೊಳಗೆ ಗುರುವೆಂಬಾತನು ಭಕ್ತರಿಗೆ ದೀಕ್ಷೆಯ ಮಾಡಿ ಪೂರ್ವಜನ್ಮವಳಿದು ಪುನರ್ಜಾತನ ಮಾಡಿದೆವೆಂಬರು. ಜಂಗಮಲಿಂಗಿಗಳಿಗೆ ಚರಂತಿಹಿರಿಯರು ಗುರುವೆಂಬಾತನು ಉಭಯರು ಕೂಡಿ, ಅಯ್ಯತನ ಮಾಡಿದೆವು ಎಂಬರು. ಅವರೇನು ಪೂರ್ವದಲ್ಲಿ ಕಪ್ಪಾಗಿದ್ದರೆ ? ಈಗೇನು ಕೆಂಪಗಾದರೆ ? ಅವರೇನು ಪೂರ್ವದಲ್ಲಿ ಬಿಳುಪಾಗಿದ್ದರೆ ? ಈಗೇನು ಕಪ್ಪಾದರೆ ? ಎಲಾ ದಡ್ಡಪ್ರಾಣಿಗಳಿರಾ, ಇದೇನು ವೀರಶೈವಮಾರ್ಗವಲ್ಲ; ಇದು ಶೈವಮಾರ್ಗ. ಇನ್ನು ವೀರಶೈವಮಾರ್ಗದಾಚಾರವ ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಆರೂರವರ ಉಲುಹ ಮಾಣಿಸಿ, ಮೂರೂರವರ ಮೂಲಿಗೆ ಹಾಕಿ, ಬೇರೊಂದೂರವರ ತೋರಬಲ್ಲರೆ ವೀರಶೈವರೆಂಬೆ. ಆರು ಮಂದಿಯನಟ್ಟಿ, ಮೂರು ಮಂದಿಯ ಕುಟ್ಟಿ, ಬಟ್ಟಬಯಲಿನ ಘಟ್ಟಿಯ ತೋರಬಲ್ಲರೆ ವೀರಶೈವರೆಂಬೆ. ಆರು ಬಟ್ಟೆಯನೇ ಮೆಟ್ಟಿ, ಮೂರು ಬಟ್ಟೆಯನೇ ದಾಂಟಿ, ಮೇಲುಬಟ್ಟೆಯಲ್ಲಿ ನಿಂದು ನಿಟಿಲಲೋಚನನ ತೋರಬಲ್ಲರೆ ವೀರಶೈವರೆಂಬೆ. ಆರು ಬಾಗಿಲ ಹಾಕಿ, ಮೂರು ಬಾಗಿಲ ಮುಚ್ಚಿ, ಇನ್ನೊಂದು ಕದವ ತೆಗೆದು ತೋರಬಲ್ಲರೆ ವೀರಶೈವರೆಂಬೆ. ಇಂತೀ ಕ್ರಮವನರಿದು ದೀಕ್ಷೆಯ ಮಾಡಬಲ್ಲರೆ ಗುರುವೆಂಬೆ, ಇಲ್ಲದಿದ್ದರೆ ನರಗುರಿಗಳೆಂಬೆ. ಈ ಭೇದವ ತಿಳಿದು ಅಯ್ಯತನ ಮಾಡಬಲ್ಲರೆ ಚರಮೂರ್ತಿಗಳೆಂಬೆ. ಇಲ್ಲದಿದ್ದರೆ ಮತಿಭ್ರಷ್ಟ ಮರುಳಮಾನವರೆಂಬೆ. ಇಂತೀ ವಿಚಾರವನು ಅರಿಯದೆ ದೀಕ್ಷೆಯ ಮಾಡಬೇಕೆಂಬವರ, ಇಂತೀ ಭೇದವ ತಿಳಿಯದೆ ದೀಕ್ಷೆ ಪಡೆಯಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಅಘೋರನರಕದಲ್ಲಿಕ್ಕೆಂದ ಕಾಣಾ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸದ್ಯೋಜಾತ ವಾಮದೇವ ತತ್ಪುರುಷ ಅಘೋರ ಈಶಾನ್ಯವೆಂಬ ಪಂಚಬ್ರಹ್ಮವೇ ಮೊದಲಾದ ಪಂಚಮುಖದ ರುದ್ರಾಕ್ಷಿ. ಆ ರುದ್ರಾಕ್ಷಿಯ ಹಸ್ತ ತೋಳು ಕರ್ಣ ಕಂಠ ಮಸ್ತಕದಲ್ಲಿ ಧರಿಸಿಪ್ಪ ಶಿವಭಕ್ತನೇ ರುದ್ರನು. ಆತನ ದರ್ಶನದಿಂದ ಭವರೋಗ ದುರಿತ ಇರಲಮ್ಮವು ನೋಡಾ. `ಓಂ ಅತ ಏವ ರುದ್ರಾಕ್ಷಧಾರಣಾತ್ ರುದ್ರಃ' ಎಂದುದಾಗಿ ರುದ್ರಪದವಿಯನೀವ ರುದ್ರಾಕ್ಷಿಯಂ ಧರಿಸಿಪ್ಪ ಭಕ್ತರಿಗೆ ಶರಣೆಂಬೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಭಕ್ತರಿಗೆ ಅಕ್ಕೆ ಶೋಕ ದುಃಖವುಂಟೆ ಅಯ್ಯಾ ? ಅತ್ತು ಕಳೆವ ನೋವ ಹಾಡಿ ಕಳೆಯಲೇಕಯ್ಯಾ ? ಈ ಮುಕ್ತಾಯಕ್ಕಗಳ ಕಕ್ಕುಲತೆಯ ಶಂಭುಜಕ್ಕೇಶ್ವರನ ಶರಣರೊಪ್ಪರಯ್ಯಾ.
--------------
ಸತ್ಯಕ್ಕ
ಭಕ್ತಭಕ್ತನೆಂದು ಯುಕ್ತಿಗೆಟ್ಟು ನುಡಿವಿರಿ, ಭಕ್ತಿಸ್ಥಲವೆಲ್ಲರಿಗೆಲ್ಲಿಯದೊ ? ಹಾಗದಾಸೆ, ಹಣವಿನಾಸೆಯುಳ್ಳನ್ನಕ್ಕ ಭಕ್ತನೆ ? ಅಯ್ಯಾ, ಅರ್ಥಪ್ರಾಣಾಭಿಮಾನ ವಂಚನೆಯುಳ್ಳನ್ನಕ್ಕ ಭಕ್ತನೆ ? ಹೊನ್ನು ಹೆಣ್ಣು ಮಣ್ಣು ಹಣಿದವಾಡದದನ್ನಕ್ಕ ಭಕ್ತನೆ ? ಭಕ್ತರಿಗೆ ನಾವು ಹೇಳಿದಡೆ ದುಗುಡ ದುಮ್ಮಾನ, ನೀನೊಮ್ಮೆ ಹೇಳಾ, ಪ್ರಳಯಕಾಲದ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಇನ್ನಷ್ಟು ... -->