ಅಥವಾ

ಒಟ್ಟು 659 ಕಡೆಗಳಲ್ಲಿ , 80 ವಚನಕಾರರು , 516 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423
--------------
ಬಸವಣ್ಣ
ಅಭ್ಯಾಸವೆನ್ನ ವರ್ತಿಸಿತ್ತಯ್ಯಾ, ಭಕ್ತಿ ಸಾಧ್ಯವಾಗದು, ನಾನೇವೆನಯ್ಯಾ ಅನು ನಿಮ್ಮ ಮನಂಬೊಗುವನ್ನಕ್ಕ ನೀವೆನ್ನ ಮನಂಬೊಗುವನ್ನಕ್ಕ ಕಾಯಗುಣಂಗಳ ಕಳೆದವರಿಗೆ ಶರಣೆಂಬೆ ಕೂಡಲಸಂಗಮದೇವಾ. 511
--------------
ಬಸವಣ್ಣ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಊರ ಮಾಡುವನ ಭಕ್ತಿ ದೂರದ ಹೊಲನಂತೆ ದೂರದಿಂ ಬಂದು ಅದು ನಿಂದು ಮುಂದೆ ಸಾಗರವಾಗಲರಿಯದು, ರಾಮನಾಥ.
--------------
ಜೇಡರ ದಾಸಿಮಯ್ಯ
ಆಸುವಳಿದ ಕಾಯದಂತೆ ದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ. ಅದೇನು ಕಾರಣವೆಂದಡೆ: ಪಶುಪತಿಯ ಭಕ್ತಿ ವಿಶ್ವಾಸವಿಲ್ಲದೆ ವಿಷಯಾತುರನಾಗಿರ್ದೆನಯ್ಯ. ಇದು ಕಾರಣ, ಎನ್ನ ಸಂಸಾರವಿಷಯಂಗಳ ಮಾಣಿಸಿ ಭಕ್ತನೆಂದೆನಿಸಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯಾ ಸತ್ಯಸದಾಚಾರವ. ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯಾ ಭಕ್ತಿ ಜಾÕನ ವೈರಾಗ್ಯವ. ಸಚ್ಚಿದಾನಂದ ಸದ್‍ಗುರು ತೋರಿದರೆ ಕಂಡೆನಯ್ಯ ನಿತ್ಯಲಿಂಗಾಂಗಸಂಗಸಮರಸವ. ಸಚ್ಚಿದಾನಂದ ಸದ್‍ಗುರು ತೋರಿಸಿದರೆ ಕಂಡೆನಯ್ಯಾ ಅಖಂಡೇಶ್ವರಾ ನಿಮ್ಮ ಶ್ರೀಚರಣಕಮಲವ.
--------------
ಷಣ್ಮುಖಸ್ವಾಮಿ
ಮರುತನ ಸಂಗದಿಂದ ಪರಿಮಳ ಬೀಸರವಾಯಿತ್ತು, ನುಡಿಯ ಗಡಣದಿಂದ ಅನುಭಾವ ಬೀಸರವಾಯಿತ್ತು, ಮಾಟದ ಸಂಭ್ರಮದಿಂದ ಭಕ್ತಿ ಬೀಸರವಾಯಿತ್ತು. ಕೂಟದ ಬೆರಕೆಯ ಸಂಭ್ರಮದಿಂದ ಅರಿವು ಬೀಸರವಾಯಿತ್ತು. ಸೂಕ್ಷ್ಮ ಶಿವಪಥವು ಸಾಮಾನ್ಯಂಗಳವೆರಿ ಕೂಡಲಚೆನ್ನಸಂಗನ ಶರಣರಿಗಲ್ಲದಿಲ್ಲ.
--------------
ಚನ್ನಬಸವಣ್ಣ
ಅಂತರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು, ಬಹಿರಂಗದಲ್ಲಿ ಹಳಿದಾಡುವರೇನಯ್ಯ ? ಬಹಿರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು ಅಂತರಂಗದಲ್ಲಿ ಹಳಿದಾಡುವರೇನಯ್ಯ ? ಅಂತರಂಗ ಬಹಿರಂಗದಲ್ಲಿ ಸಂಶಯವಿಲ್ಲದೆ ಬಹಿರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಇಷ್ಟಲಿಂಗಕ್ಕೆ ಅರ್ಪಿಸಿ, ಪ್ರಾಣಲಿಂಗದಲ್ಲಿ ಕೂಡಿದ್ದೇ ಭಕ್ತಿಯೆಂಬೆನಯ್ಯ. ಅಂತರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಭಾವಲಿಂಗದಲ್ಲಿ ಕೂಡಿದ್ದೇ ಸದ್ಭಕ್ತಿಯೆಂಬೆನಯ್ಯ. ಭಕ್ತಿ ಸದ್ಭಕ್ತಿಯೆಂಬ ಭೇದವನು ಅರಿತಾತನೇ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ವಂಚಿಸುವ ಸತಿ ಸುತ ಬಂಧು ಮೊದಲಾದ ಲೋಕವ ನಂಬಿ, ನಿರ್ವಂಚಕರಪ್ಪ ಗುರು ಲಿಂಗ ಜಂಗಮರ ವಂಚಿಸಿ ನರಕಕ್ಕಿಳಿವರನೇನೆಂಬೆನಯ್ಯಾ ? ಅಕಟಕಟಾ, ಈ ಹೀಂಗೆ ಶಿವಾಚಾರ ? ಈ ಹೀಂಗೆ ಭೃತ್ಯಾಚಾರ ? ಭಕ್ತಿ ಮುಕ್ತಿಯನರಿಯದೆ ಹೋದರು. ತನು ಮನ ಧನ ಕೆಟ್ಟುಹೋಹುದೆಂಬ ಯುಕ್ತಿಯನರಿಯಿರಿ. ಇದನರಿದು, ವಂಚಿಸುವವರನೆ ವಂಚಿಸಿ ನಿರ್ವಂಚಕರಾಗಿ ಗುರು ಲಿಂಗ ಜಂಗಮಕ್ಕೆ ದಾಸೋಹವ ಮಾಡಲು ತನು ಕೆಡದು, ಮನ ಕೆಡದು, ಧನ ಕೆಡದು. ಮುಕ್ತಿಯುಂಟು ಭಕ್ತಿಯುಂಟು, ಇದು ಸತ್ಯ ಶಿವ ಬಲ್ಲ, ಶಿವನಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾುತ್ತೆನ್ನ ಭಕ್ತಿ. ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾುತ್ತೆನ್ನ ಭಕ್ತಿ. ಕೂಡಲಸಂಗಮದೇವಾ, ಆನು ಮಾಡದೆನೆಂಬ ಕಿಚ್ಚು ಸಾಲದೆ 384
--------------
ಬಸವಣ್ಣ
ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಮಾಟವಿಲ್ಲದ ಕೂಟವದೇಕೋಳ ಕೂಟವಿಲ್ಲದ ಮಾಟವದೇಕೋ? ಮಾಟಕೂಟವೆರಡರನುವರಿಯಬೇಕು. ಸಟೆಯಿಲ್ಲದೆ ದಿಟ ಘಟಿಸಿ ಸಯವಾಗಬೇಕು. ಕೂಟಮಾಟವೆರಡರ ಅನುಮತದಿಂದವೆ ಭಕ್ತಿ. ಇದೇ [ಕೂಟ] ಕೂಡಲಚೆನ್ನಸಂಗಯ್ಯಾ ನಿಮ್ಮಲ್ಲಿ.
--------------
ಚನ್ನಬಸವಣ್ಣ
ಮೂಗಿಲ್ಲದವಂಗೆ ಕನ್ನಡಿಯ ತೋರಲೇಕೆ ? ಕೈಯಿಲ್ಲದವಂಗೆ ಕುದುರೆಯನೇರಲೇಕೆ ? ಕಾಲಿಲ್ಲದವಂಗೆ ನಿಚ್ಚಣಿಗೆಯನೇರಲೇಕೆ ? ಭಕ್ತಿ ಜ್ಞಾನ ವೈರಾಗ್ಯವಿಲ್ಲದವಂಗೆ ಇಷ್ಟಲಿಂಗವೇಕೆ ಅಮುಗೇಶ್ವರಾ ?
--------------
ಅಮುಗೆ ರಾಯಮ್ಮ
ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ; ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಇನ್ನಷ್ಟು ... -->