ಅಥವಾ

ಒಟ್ಟು 644 ಕಡೆಗಳಲ್ಲಿ , 77 ವಚನಕಾರರು , 557 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ ಮುಟ್ಟದ ಮಜ್ಜನ ತನು ತಾಗದ ದೇಹಾರ, ಭಾವ ತಾಗದ ಪೂಜೆ, ಎದೆ ತಾಗದ ನೋಟ ವಾಯು ತಾಗದ ನಲಿಂಗದ¥sgಠ್ಞವ ತೋರಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ ? ಸತ್ಯವುಳ್ಳಾತಂಗೆ ತತ್ವವಿಚಾರದ ಹಂಗೇಕೆ ? ಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆ ? ಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆ ? ಭಾವ ಶುದ್ಧವುಳ್ಳವಂಗೆ ಹೂವಿನ ಹಂಗೇಕೆ ? ಕೂಡಲಚೆನ್ನಸಂಗಯ್ಯಾ, ನಿಮ್ಮನರಿದಾತಂಗೆ ನಿಮ್ಮ ಹಂಗೇಕೆ ?
--------------
ಚನ್ನಬಸವಣ್ಣ
ಇಷ್ಟಲಿಂಗದಲ್ಲಿ ವಿಶ್ವಾಸ ಬಲಿದರೆ ಆಯತಲಿಂಗ. ಆ ಇಷ್ಟಲಿಂಗದಲ್ಲಿ ಭಾವಮನೋವೇದ್ಯವಾದಲ್ಲಿ ಸ್ವಾಯತಲಿಂಗ. ಆ ಇಷ್ಟಲಿಂಗದ ಭಾವ ಮನೋವೇದ್ಯವಾದ ಸುಖವು ಭಿನ್ನವಾಗಿ ತೋರದೆ, ಅನುಪಮ ಪರಿಣಾಮ ಭರಿತವಾದಲ್ಲಿ ಸನ್ನಹಿತಲಿಂಗ. ಇಂತು, ಇಷ್ಟಲಿಂಗ ಪ್ರಾಣಲಿಂಗ ತೃಪ್ತಿಯ ಭಾವಲಿಂಗಂಗಳೆಂಬ ಲಿಂಗತ್ರಯಂಗಳು, ತನುತ್ರಯಂಗಳ ಮೇಲೆ ಆಯತ ಸ್ವಾಯತ ಸನ್ನಹಿತಂಗಳಾದ ಶರಣನ ಪಂಚಭೂತಂಗಳಳಿದು ಲಿಂಗ ತತ್ವಂಗಳಾಗಿ, ಆತನ ಜೀವ ಭಾವವಳಿದು ಪರಮಾತ್ಮನೆನಿಸಿದಲ್ಲಿ ಷಡಂಗಯೋಗವಾದುದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಕ್ರಿಯಾಸ್ವರೂಪವೇ ಲಿಂಗವೆಂದು, ಜಾÕನಸ್ವರೂಪವೇ ಜಂಗಮವೆಂದು, ಜಾÕನಸ್ವರೂಪವಪ್ಪ ಜಂಗಮದ ಪ್ರಸನ್ನೇತಿ ಪ್ರಸಾದ ಲಿಂಗಕ್ಕೆ ಜೀವಕಳೆಯೆಂದೆ. ಜ್ಯೋತಿ ಕರ್ಪೂರವ ನೆರೆದಂತೆ, ಅಂಗ ಲಿಂಗದಲ್ಲಡಗಿತ್ತು. ದೀಪ ದೀಪವ ಬೆರಸಿದಂತೆ ಪ್ರಾಣ ಜಂಗಮದಲ್ಲಿ ಅಡಗಿತ್ತು. ಈ ಕ್ರಿಯಾ ಜಾÕನ ಭಾವ ನಿರವಯವಾದವಾಗಿ ಲಿಂಗವೆನ್ನೆ, ಜಂಗಮವೆನ್ನೆ ಪ್ರಸಾದವೆನ್ನೆ ಇದುಕಾರಣ, ಕೊಟ್ಟೆನೆಂಬುದೂ ಇಲ್ಲ, ಕೊಂಡೆನೆಂಬುದೂ ಇಲ್ಲ. ಕೊಡುವುದು ಕೊಂಬುದು ಎರಡೂ ನಿರ್ಲೇಪವಾದ ಬಳಿಕ ನಾನೆಂಬುದೂ ನೀನೆಂಬುದೂ, ಏನು ಏನುಯೆಂಬೂದಕ್ಕೆ ತೆರಹಿಲ್ಲದೆ, ಪರಿಪೂರ್ಣ ಸರ್ವಮಯನಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಂಗಮದ ಮುಂದಿಟ್ಟು ಕೊಟ್ಟು ಕೊಂಡೆಹೆನೆಂಬ ಸರ್ವಸಮಯಾಚಾರ ಸಂಪತ್ತಿನಿರವು: ಮಜ್ಜನ ಭೋಜನ ಅಂದಳ ಛತ್ರ ಚಾಮರ ಕರಿ ತುರಗ ದರ್ಪಣ ಹಲುಕಡ್ಡಿ ನಖಚಣ ಪರಿಮಳ ಗಂಧ ಮೆಟ್ಟಡಿ ತಾಂಬೂಲ ರತ್ನಾಭರಣ ಮೆತ್ತೆ ಶಯನ ಸ್ತ್ರೀಸಂಸರ್ಗ ಒಡೆಯಂಗೆ ಆಯಿತ್ತೆಂಬುದ ಕೇಳಿ, ಆ ಒಡೆಯನ ವಾಚಾಪ್ರಸಾದದಿಂದ ಮಹಾಪ್ರಸಾದವೆಂದು ತನ್ನ ಸ್ವಸ್ತ್ರೀಗೆ ಕೂಟಸ್ಥನಾಗಬೇಕು. ಇಂತೀ ಭಾವ ಸರ್ವಸಮಯಾಚಾರ. ಈ ವರ್ತಕದಂಗ ನಿಂದಾತನ ಸಂಗ, ಏಲೇಶ್ವರದಂಗ ಉಮೇಶ್ವರಲಿಂಗವು ಆ ಭಕ್ತನಂಗ.
--------------
ಏಲೇಶ್ವರ ಕೇತಯ್ಯ
ಶುದ್ಧಪ್ರಸಾದಿಯಾದಡೆ ತನು ಸತ್ಕ್ರಿಯಾ ಸನ್ನಿಹಿತನಾಗಿ, ಅಣುಮಾತ್ರ ದ್ವೈತಿಯಾಗದೆ ಚರಿಸಬೇಕು. ಸಿದ್ಧಪ್ರಸಾದಿಯಾದಡೆ ಮನ ಜ್ಞಾನಸನ್ನಿಹಿತನಾಗಿ, ಕಿಂಚಿತ್ತು ಮಲವಿಷಯಕ್ಕೆ ಜಿನುಗದೆ ಚರಿಸಬೇಕು. ಪ್ರಸಿದ್ಧಪ್ರಸಾದಿಯಾದಡೆ ಭಾವ ಮಹಾನುಭಾವಸನ್ನಿಹಿತನಾಗಿ, ಒಂದಿನಿತು ಭ್ರಾಂತನಾಗದೆ ಚರಿಸಬೇಕು. ಈ ಭೇದವನರಿಯದೆ ಅವರವರಂತೆ, ಇವರಿವರಂತೆ, ತಾನು ತನ್ನಂತೆ ನಡೆನುಡಿ ಕೊಡುಕೊಳ್ಳಿಯುಳ್ಳರೆ ಕಡೆ ಮೊದಲಿಲ್ಲದೆ ನರಕವನೈಯ್ದುವ ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬ್ರಹ್ಮ ವಿಷ್ಣುವಿನಲ್ಲಿ ಎಯ್ದಿ, ವಿಷ್ಣು ರುದ್ರನಲ್ಲಿ ಎಯ್ದಿ, ರುದ್ರ ಈಶ್ವರನಲ್ಲಿ ಎಯ್ದಿ, ಈಶ್ವರ ಸದಾಶಿವನಲ್ಲಿ ಎಯ್ದಿ, ಸದಾಶಿವ ಪರಶಿವನಲ್ಲಿ ಎಯ್ದಿ, ಪರಶಿವ ನಿತ್ಯನಿಜದಲ್ಲಿ ಎಯ್ದಿ, ಅತ್ತತ್ತಲೆ, ನಿರಾಕುಳ ನಿರಂಜನ ನಿಷ್ಪತಿ ನಿರವಯ ತಾನೇ ನೋಡಾ. ಮನೋಲಯವಾಯಿತ್ತು, ಭಾವ ನಿಃಶೂನ್ಯವಾಯಿತ್ತು ನೆನಹು ನಿಷ್ಪತಿಯಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹೋಗುತ್ತ ಹೋಗುತ್ತ ಹೊಟ್ಟೆಯಡಿಯಾಯಿತ್ತು; ಬಟ್ಟಬಯಲಾಯಿತ್ತು. ತುಟ್ಟತುದಿಯನೇರಿ ತೂರ್ಯಾತೀತನಾಗಿ, ಇಷ್ಟ ಪ್ರಾಣ ಭಾವ ಬಯಲಾಯಿತ್ತು. ಬಯಲಲ್ಲಿ ನಿಂದುಕೊಂಡು ನೋಡುತ್ತಿರಲು, ಬ್ರಹ್ಮವೆಯಾಯಿತ್ತು, ಕರ್ಮ ಕಡೆಗೋಡಿತ್ತು. ಅರಿವರತು ಮರಹು ನಷ್ಟವಾಯಿತ್ತು. ತೆರನಳಿದು ನಿರಿಗೆ ನಿಃಪತಿಯಾಗಿ ಮಿರುಗುವ ದೃಷ್ಟಿಯಲ್ಲಿ ನೋಡುತ್ತಿರಲು, ನೋಟ ತ್ರಾಟಕವ ದಾಂಟಿ ಕೂಟದಲ್ಲಿ ಕೂಡಿ, ಬೆರಸಿ ಬೇರಾಗದಿಪ್ಪ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅರ್ಚಿಸಿ ಪೂಜಿಸುವುದಕ್ಕೆ ಅಂಗವಾಗಿ, ಮನ ನೆನೆವುದಕ್ಕೆ ಘನತರವಾಗಿ, ಪೂಜಿಸುವುದಕ್ಕೆ ಪುಣ್ಯಮೂರ್ತಿಯಾಗಿ, ಭಾವ ನೆನೆವುದಕ್ಕೆ ಭವಗೇಡಿಯಾಗಿ, ಉಭಯದಂಗವ ತಾಳಿ ನಿಂದ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಇಷ್ಟಗುಟ್ಟೆಂಬುದು, ನಿಶ್ಚಯ ವಸ್ತುವೆಂಬುದು, ಆತ್ಮನೇಕವೆಂಬುದು, ಇಂದ್ರಿಯಂಗಳು ಹಲವೆಂಬುದು, ಅರಿವು ಹಿಂಗಲಿಕೆ ಒಂದೆಂಬುದು, ಅಣೋರಣೀಯಾನ್ಮಹತೋ ಮಹೀಯಾನ್ ಎಂಬುದು, ಎಲ್ಲಾ ದೃಷ್ಟದ ಲಕ್ಷದಲ್ಲಿ ಉಂಟೆಂಬುದು, ಉಭಯಭಾವದಲ್ಲಿ ತೋರಿ ಹರಿದಾಡುವುದು, ಅದು ಚಿತ್ತೋ, ಚಿದಾದಿತ್ಯನೋ, ವಸ್ತು ಭಾವವೋ ? ಇಂತೀ ಲಕ್ಷ ಅಲಕ್ಷಂಗಳೆಂಬ ಗೊತ್ತ ಮೆಟ್ಟಿ, ಬಟ್ಟಬಯಲಾದ ಕಾಮಧೂಮ ಧೂಳೇಶ್ವರನೊಳಗಾದೆ, ಆಗೆನೆಂಬ ಭಾವ ನಿಂದಲ್ಲಿ.
--------------
ಮಾದಾರ ಧೂಳಯ್ಯ
ಬಸವಣ್ಣನ ನೆನೆದೆನ್ನ ತನು ಬಯಲಾಯಿತ್ತು. ಬಸವಣ್ಣನ ನೆನೆದೆನ್ನ ಮನ ಬಯಲಾಯಿತ್ತು. ಬಸವಣ್ಣನ ನೆನೆದೆನ್ನ ಭಾವ ಬಯಲಾಯಿತ್ತು. ಕಲಿದೇವಯ್ಯ ನಿಮ್ಮ ಶರಣ, ಮಹಾಮಹಿಮ ಸಂಗನಬಸವಣ್ಣನ ನೆನೆನೆನೆದು, ಎನ್ನ ಸರ್ವಾಂಗ ಲಿಂಗವಾಯಿತ್ತೆಂದರಿದೆನಯ್ಯಾ.
--------------
ಮಡಿವಾಳ ಮಾಚಿದೇವ
ಶಿವನ ಕಾಯವೇ ಭಕ್ತ, ಭಕ್ತನ ಕಾಯವೇ ಶಿವ. ಶಿವನ ಚೈತನ್ಯವೇ ಭಕ್ತ, ಭಕ್ತನ ಚೈತನ್ಯವೇ ಶಿವನು ನೋಡಾ. ಭಕ್ತನ ಮನ ಭಾವ ಕರಣಂಗಳೇ ಭಕ್ತನು ನೋಡಾ. ಇದು ಕಾರಣ. ಶಿವನೇ ಭಕ್ತನು; ಭಕ್ತನೇ ಶಿವನು. ದೇವ ಭಕ್ತನೆಂಬ ಅಂತರವೆಲ್ಲಿಯದೋ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ರೂಪನರ್ಪಿಸಿ ಫಲವೇನು, ರುಚಿಯನರ್ಪಿಸದನ್ನಕ್ಕ ? ರುಚಿಯನರ್ಪಿಸಿ ಫಲವೇನು ಪರಿಣಾಮವನರ್ಪಿಸದನ್ನಕ್ಕ ? ಪರಿಣಾಮವನರ್ಪಿಸಿ ಫಲವೇನು ತನ್ನನರ್ಪಿಸದನ್ನಕ್ಕ ? ತನ್ನನರ್ಪಿಸಿ ಫಲವೇನು, ಕೂಡಲಚೆನ್ನಸಂಗಯ್ಯನೆಂಬ ಭಾವ ಬರಿದಾಗದನ್ನಕ್ಕ ?
--------------
ಚನ್ನಬಸವಣ್ಣ
ಇನ್ನಷ್ಟು ... -->