ಅಥವಾ

ಒಟ್ಟು 155 ಕಡೆಗಳಲ್ಲಿ , 44 ವಚನಕಾರರು , 149 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಹ್ಯದಲ್ಲಿ ಶ್ರದ್ಧೆಭಾವ, ಭಾವದಲ್ಲಿ ಬಳಕೆ ನಾಸ್ತಿಯಾಗಿ, ಅಮಳಕಫಲ ಕರದಲ್ಲಿದ್ದಂತೆ ಕಲೆದೋರದಿರು, ಅರ್ಕೇಶ್ವರಲಿಂಗವನರಿವುದಕ್ಕೆ.
--------------
ಮಧುವಯ್ಯ
ನಿಮ್ಮ ನೆನೆವುತ್ತಿದ್ದಿತ್ತು_ನೆನೆವ ಮುಖವಾವುದೆಂದರಿಯದೆ, ಪೂಜೆಯ ಪೂಜಿಸುತ್ತಿದ್ದಿತ್ತು_ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು_ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ, ಜೀವದಲ್ಲಿಇಲ್ಲ, ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ !
--------------
ಅಲ್ಲಮಪ್ರಭುದೇವರು
ನಿಷ್ಕಳಂಕಾತ್ಮನು ನಿಜಪ್ರಕೃತಿವಶದಿಂ ಮನ ನೆನಹು ಭಾವದೆ ತ್ರಿವಿಧಸ್ವರೂಪವಾಯಿತ್ತು. ಆ ಮನವೊಗ್ದಿದುದೆ ನೆನಹಿಗೆ ಬಂದಿತ್ತು. ಅದೇ ಭಾವದಲ್ಲಿ ತೋರಿತ್ತು ; ಅದೇ ಪ್ರಾಣವಾಯಿತ್ತು ; ಅದೇ ಚೈತನ್ಯಸ್ವರೂಪಮಾಗಿ ತನುವನೆಳದಾಡಿತ್ತು. ಅದಕ್ಕೆ ವಾಯುವೇ ಅಂಗವಾಗಿ ಕರ್ಮಾದ್ಥೀನಮೆನಿಸಿ, ತಾನೆಂಬಹಂಕಾರದಿಂ ತನ್ನ ತಾ ಮರೆತು ತೊಳಲಿಬಳಲುತ್ತಿರಲು, ಅನೇಕಜನ್ಮ ಸಂಚಿತಕರ್ಮ ಸಮೆದು, ಗುರುಕರುಣ ನೆಲೆಗೊಂಡಲ್ಲಿ ಗಗನಾಂಗಿಯಾಗಿ, ಆ ಮನಕ್ಕೆ ತಾನೇ ಆಧಾರಮಾಗಿ, ತಾನೇ ಪರಮನಾಗಿ, ತಾನೇ ಪ್ರಸನ್ನಮಾಗಿರ್ದ ಮಹಾಜಾÕನಶಕ್ತಿಯಂ ಕಂಡದರೊಳಗೆ ಕೂಡಿ, ಸಾಧಕಕ್ಕೊಳಗಾದ ಮನವೇ ಘನವಾಯಿತ್ತು. ಆ ಘನವೇ ಲಿಂಗವಾಯಿತ್ತು, ಆ ಲಿಂಗವೇ ಪ್ರಾಣವಾಯಿತ್ತು, ಆ ಪ್ರಾಣವೇ ಪರಮಾತ್ಮಸ್ವರೂಪಮಾಗಿ ತತ್ತ್ವಮಸಿಪದದಿಂದತ್ತತ್ತ ಹಮ್ಮನಳಿದು ಸುಮ್ಮನೆಯಾದುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯ ಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಸುಜ್ಞಾನವೆಂಬ ಭಾವವು ಗುರುವಿನಲ್ಲಿ ಸಾಹಿತ್ಯವು. ಜ್ಞಾನವೆಂಬ ಭಾವವು ಶಿಷ್ಯನಲ್ಲಿ ಸಾಹಿತ್ಯವು. ಮನವೆಂಬ ಭಾವವು ಲಿಂಗದಲ್ಲಿ ಸಾಹಿತ್ಯವು. ಲಿಂಗಕ್ಕೆ ಮಜ್ಜನ ಮಾಡಲಾಗದು, ಅದೇನು ಕಾರಣ ? ಮನವೆಂಬ ಲಿಂಗವು ಭಾವದಲ್ಲಿ ಸಾಹಿತ್ಯವಾದ ಕಾರಣ. ಲಿಂಗಕ್ಕೆ ಗಂಧ ಧೂಪ ನಿವಾಳಿಯ ಕುಡಲಾಗದು, ಅದೇನು ಕಾರಣ ?
--------------
ಚನ್ನಬಸವಣ್ಣ
ಪ್ರಾಣವು ಲಿಂಗವ ನುಂಗಿತ್ತೋ, ಲಿಂಗವು ಪ್ರಾಣವ ನುಂಗಿತ್ತೋ ಎಂದರಿಯೆನಯ್ಯ. ಭಾವವು ಲಿಂಗದಲ್ಲಿ ತುಂಬಿತ್ತೋ, ಲಿಂಗವು ಭಾವದಲ್ಲಿ ತುಂಬಿತ್ತೋ ಎಂದರಿಯೆನಯ್ಯ. ಮನವು ಲಿಂಗದಲ್ಲಿ ಮುಳುಗಿತ್ತೊ , ಲಿಂಗವು ಮನದಲ್ಲಿ ಮುಳುಗಿತ್ತೋ ಎಂದರಿಯೆನಯ್ಯ. ಅಖಂಡೇಶ್ವರಾ, ನಿಮ್ಮ ಕೂಡುವ ವಿಕಳಾವಸ್ಥೆಯಲ್ಲಿ ಏನೇನೂ ಅರಿಯದಿರ್ದೆನಯ್ಯ.
--------------
ಷಣ್ಮುಖಸ್ವಾಮಿ
ಪರ್ಣದ ಮರೆಯ ಫಲದಂತೆ, ಬಣ್ಣದ ಮರೆಯ ಬಂಗಾರದಂತೆ, ತಂತು ಚರ್ಮಂಗಳಲ್ಲಿ ತೋರುವವನ ಗತಿಯಂತೆ. ಕಾಯದಲ್ಲಿ ಸುಳುಹುದೋರುತ್ತ. ಭಾವದಲ್ಲಿ ಪರವನಾಚರಿಸುತ್ತ ಕಾಯದ ಮರೆಯಲ್ಲಿ ತಿರುಗಾಡುವ ಭಾವಶುದ್ಧಾತ್ಮ ಉಭಯಕ್ಕೆ ಕಾಲಾಂತಕ ಬ್ಥೀಮೇಶ್ವರಲಿಂಗವು ಅವರ ಬಾಗಿಲಲ್ಲಿಬಳಸಾಡುತಿಪ್ಪನು.
--------------
ಡಕ್ಕೆಯ ಬೊಮ್ಮಣ್ಣ
ನೆಳಲ ಹೂಳಿಹೆನೆಂದು ಬಳಲುತ್ತಿದೆ ಜಗವೆಲ್ಲಾ. ನೆಳಲು ಸಾಯಬಲ್ಲುದೆ ಅಂಗಪ್ರಾಣಿಗಳಿಗೆ ? ಸಮುದ್ರದಾಚೆಯ ತಡಿಯಲ್ಲಿ ಕಳ್ಳನ ಕಂಡು, ಇಲ್ಲಿಂದ ಮುನಿದು ಬೈದಡೆ, ಅವ ಸಾಯಬಲ್ಲನೆ ? ಭಾವದಲ್ಲಿ ಹೊಲಿದ ಹೊಲಿಗೆಯ ಭೇದವನರಿಯರು, ಕಾಮಿಸಿದಡುಂಟೆ ನಮ್ಮ ಗುಹೇಶ್ವರಲಿಂಗವು ?
--------------
ಅಲ್ಲಮಪ್ರಭುದೇವರು
ಸಕಲ ನಿಃಕಲದಲ್ಲಿ , ಬ್ರಹ್ಮಾಂಡತತ್ತ್ವದಲ್ಲಿ ಕರ್ಮದ ಸೊಮ್ಮಿನ ಸೀಮೆಯನತಿಗಲೆದು ಅದ ಲಿಂಗವೆಂದು ತೋರಬಲ್ಲಾತ ಗುರು. ತನುಗುಣ ಸಂಬಂಧವ ತಾನೆಂದು ತೋರಲೀಯದೆ, ನಿಶ್ಚಯವ ಮಾಡಿ ತಾತ್ಪರ್ಯಕಲೆಯನಿರಿಸಿ, ಸಕಲದಲ್ಲಿ ನಿಃಕಲದಲ್ಲಿ , ರೂಪಿನಲ್ಲಿ ಅರೂಪಿನಲ್ಲಿ , ಭಾವದಲ್ಲಿ ನಿಭಾವದಲ್ಲಿ ಅವೆ ಅವಾಗಿ ತೋರಬಲ್ಲಾತ ಗುರು . ಈ ಪರಿಯಲ್ಲಿ ಎನ್ನ ಭವವ ತಪ್ಪಿಸಿದ ಕಪಿಲಸಿದ್ಧಮಲ್ಲಕಾರ್ಜುನಯ್ಯನೆಂಬ ಪರಮಗುರು.
--------------
ಸಿದ್ಧರಾಮೇಶ್ವರ
ಶುದ್ಧ ನಿರ್ಮಾಯ ನಿರ್ಮಲವೆಂಬ ಅಂಗತ್ರಯದಲ್ಲಿ ಸದ್ಗತಿ ಸತ್ಕ್ರಿಯೆ ಸದ್ಧರ್ಮವೆಂಬ ಪೀಠತ್ರಯದ ಮೇಲೆ ವಿಚಾರಗುರು ವಿನಯಗುರು ಕೃಪಾಗುರುವೆಂಬ ಗುರುತ್ರಯವ ಧರಿಸಿ ಘನಭಕ್ತಿಯ ಕುರುಹಬಲ್ಲರೆ ಆತ ಸತ್ಯಭಕ್ತನೆಂಬೆ. ಸುಬುದ್ಧಿ ನಿಃಕಾಮ ಅನುಕೂಲೆಯೆಂಬ ಮನತ್ರಯದ ವಿಶೇಷಗತಿ ಸುಜ್ಞಾನ ವಿಮಲಜ್ಞಾನವೆಂಬ ಪೀಠತ್ರಯದಮೇಲೆ ಸಗುಣಲಿಂಗ ನಿರ್ಗುಣಲಿಂಗ ನಿರ್ಭೇದ ಲಿಂಗವೆಂಬ ಲಿಂಗತ್ರಯವ ಧರಿಸಿ, ಚಿನ್ಮಯಭಕ್ತಿಯ ಕುರುಹ ಬಲ್ಲರೆ ಆತ ನಿತ್ಯಭಕ್ತನೆಂಬೆ. ಸಂವಿತ್‍ಕಳಾ ಸಂಧಾನಕಳಾ ಸಮರಸಕಳಾಯೆಂಬ ಭಾವತ್ರಯದಲ್ಲಿ, ಮತಿಗಮನ, ರತಿಗಮನ, ಮಹಾರತಿಗಮನವೆಂಬ ಭಾವತ್ರಯದ ಸತ್ಪ್ರೇಮ ಸುಖಮಯ ಆನಂದವೆಂಬ ಪೀಠತ್ರಯದ ಮೇಲೆ ಜ್ಞಾನಜಂಗಮ, ಮಹಾಜ್ಞಾನಜಂಗಮ, ಪರಮಜ್ಞಾನಜಂಗಮವೆಂಬ ಜಂಗಮತ್ರಯವ ಧರಿಸಿ, ಪರಿಪೂರ್ಣಭಕ್ತಿಯ ಕುರುಹ ಬಲ್ಲರೆ ಆತ ನಿಜಭಕ್ತನೆಂಬೆ. ಈ ಭೇದವನರಿಯದೆ ಬರಿಯ ಕಾಯ ಮನ ಭಾವದಲ್ಲಿ ಹುಸಿನೆರವಿಯ ತುಂಬಿ ಹುಸಿಯ ಡಂಬ್ಥಿನ ಭಕ್ತಿಯ ಕಿಸುಕುಳತ್ವಕ್ಕೆ ಬಿಸಿಯನಿಟ್ಟು, ತಪ್ಪಿಸಿ ತೋರುತಿರ್ದನು ಗಂಬ್ಥೀರ ಭಕ್ತಿಯ ನೆರೆದು ಚೆಲುವಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಳ್ಳಿ ಮರನ ಸುತ್ತಿ, ಅದು ಸಾಲದೆ ಮತ್ತೊಂದಕ್ಕೆ ಅಲ್ಲಾಡುವಂತೆ, ನಿಲ್ಲದು ಮನ ಕ್ರೀಯಲ್ಲಿ, ಸಲ್ಲದು ಮನ ನಿಶ್ಚಯದಲ್ಲಿ. ಬೆಲ್ಲವ ಮೆಲಿದ ಕೋಡಗದಂತೆ, ಕಲ್ಲಿನೊಳಗಾದ ಮತ್ಸ್ಯದಂತೆ, ಅಲ್ಲಿಗೆ ಹೊಲಬು ಕಾಣದೆ, ಇಲ್ಲಿಗೆ ನೆಲೆಯ ಕಾಣದೆ, ತಲ್ಲಣಗೊಳ್ಳುತ್ತಿದ್ದೇನೆ. ಎನ್ನ ಭಾವದಲ್ಲಿ ನೀನಿರು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹರಹರಾ, ಎನ್ನ ಬಡಮನದ ಅಳಿಯಾಸೆಯ ನೋಡಾ ! ಸುರಧೇನುವಿದ್ದು ಬರಡಾಕಳಿಗೆ ಆಸೆಮಾಡುವಂತೆ, ಕಲ್ಪವೃಕ್ಷವಿದ್ದು ಕಾಡಮರಕ್ಕೆ ಕೈಯಾನುವಂತೆ, ಚಿಂತಾಮಣಿಯಿದ್ದು ಗಾಜಿನಮಣಿಯ ಬಯಸುವಂತೆ, ಎನ್ನ ಕರ ಮನ ಭಾವದಲ್ಲಿ ನೀವು ಭರಿತರಾಗಿರ್ದುದ ಮರೆತು ನರರಿಗಾಸೆಯ ಮಾಡಿ ಕೆಟ್ಟೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆವಾವ ಪರಿಯಲ್ಲಿ ಆವಾವ ಭಾವದಲ್ಲಿ ಗುರುಲಿಂಗಜಂಗಮಕ್ಕೆ ದಾಸೋಹವ ಮಾಡಿಹೆನೆಂಬ, ಕೂಡಿಹೆನೆಂಬ ಸದ್ಭಕ್ತರ ಬಾಗಿಲ ತೋರಿ ಬದುಕಿಸಯ್ಯಾ. ಎಲ್ಲವನೊಪ್ಪಿ `ಲಿಂಗಜಂಗಮವೆನ್ನ ಪ್ರಾಣೇಶ್ವರ' ಎಂಬ ಮಹಾಪುರಾತನರ ಪಾದರಕ್ಷೆಯ ಹೊತ್ತಿರಿಸೆನ್ನನು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಷ್ಟವಿಧಾರ್ಚನೆ ಷೋಡಶೋಪಚಾರವಲ್ಲದೆ ನಿಮ್ಮ ಮುಟ್ಟಲರಿಯದರ ಕಂಡಡೆ, ಅಯ್ಯ ಎಂತೆಂಬೆನವರ ಆವ ಭಾವದಲ್ಲಿ, ಆವ ಜ್ಞಾನದಲ್ಲಿ, ಆವ ಮುಖದಲ್ಲಿ ಅರಿವವರದಾರಯ್ಯಾ ಏನೆಂಬೆ ನಿಮ್ಮಲ್ಲಿ ಸಮ್ಯಕ್ಕರಾದ ಸತ್ಯಶರಣರ ಕಂಡು, ಕೂಡಲಸಂಗಮದೇವಾ, ಅವರನಯ್ಯ ಎಂಬೆನು.
--------------
ಬಸವಣ್ಣ
ಇನ್ನಷ್ಟು ... -->