ಅಥವಾ

ಒಟ್ಟು 130 ಕಡೆಗಳಲ್ಲಿ , 44 ವಚನಕಾರರು , 110 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು, ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಗುರುಲಿಂಗಜಂಗಮಾರ್ಚನೆಯ ಕ್ರಮವ ದಯೆಯಿಂದ ಕರುಣಿಪುದು ಸ್ವಾಮಿ. ಕೇಳೈ ಮಗನೆ : ತಾನಿದ್ದ ಊರಲ್ಲಿ ಗುರುವು ಇದ್ದಡೆ ನಿತ್ಯ ತಪ್ಪದೆ ದರುಶನವ ಮಾಡುವುದು. ಗುರುಪೂಜೆಯ ಮಾಡುವಾಗ ಆ ಗುರುವಿನೊಳಗೆ ಲಿಂಗ-ಜಂಗಮವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಗುರುಪೂಜೆ. ಲಿಂಗಪೂಜೆಯ ಮಾಡುವಾಗ ಆ ಲಿಂಗದೊಳಗೆ ಜಂಗಮ-ಗುರುವುಂಟೆಂದುಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಲಿಂಗಪೂಜೆ. ಇನ್ನು ಜಂಗಮದ ಪೂಜೆ ಮಾಡುವಾಗ ಆ ಜಂಗಮದೊಳಗೆ ಗುರು-ಲಿಂಗವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಜಂಗಮಪೂಜೆ. ಈ ತ್ರಿವಿಧಮೂರ್ತಿ ಭಕ್ತನ ತ್ರಿವಿಧ ತನುವಿಗೋಸ್ಕರವಾಗಿ ಇಷ್ಟ ಪ್ರಾಣ ಭಾವಲಿಂಗಸ್ವರೂಪವಾಗಿಹರೆಂದು ನಿರೂಪಿಸಿದಿರಿ ಸ್ವಾಮಿ. ಆ ತ್ರಿವಿಧಲಿಂಗದ ಪೂಜೆಯ [ಕ್ರಮವ] ಕರುಣಿಪುದು ಎನ್ನ ಶ್ರೀಗುರುವೇ. ಕೇಳೈ ಮಗನೆ : ಇಷ್ಟಲಿಂಗದ ಪೂಜೆಯ ಮಾಡುವಾಗ ಆ ಇಷ್ಟಲಿಂಗದೊಳಗೆ ಪ್ರಾಣಲಿಂಗ ಭಾವಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಇಷ್ಟಲಿಂಗದಪೂಜೆ. ಪ್ರಾಣಲಿಂಗದ ಪೂಜೆಯ ಮಾಡುವಾಗ ಆ ಪ್ರಾಣಲಿಂಗದೊಳಗೆ ಇಷ್ಟಲಿಂಗ ಭಾವಲಿಂಗವುಂಟೆಂದು ಭಾವಿಸಿ ಭಾವ-ಮನ-ಕರದೊಳಗಿರಿಸಿ ಪೂಜಿಸುವುದು ಪ್ರಾಣಲಿಂಗದಪೂಜೆ. ಭಾವಲಿಂಗದ ಪೂಜೆಯ ಮಾಡುವಾಗ ಆ ಭಾವಲಿಂಗದೊಳಗೆ ಇಷ್ಟಲಿಂಗ ಪ್ರಾಣಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಭಾವಲಿಂಗದಪೂಜೆ. ಸಾಕ್ಷಿ : 'ಏಕಮೂರ್ತಿಸ್ತ್ರಯೋ ಭಾಗಾಃ ಗುರುರ್ಲಿಂಗಂತು ಜಂಗಮಃ | ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ||' ಎಂದುದಾಗಿ, ತ್ರಿವಿಧವು ಒಂದೇ ಎಂದರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ನಿನಗೆ ಮಜ್ಜನವ ಮಾಡುವಲ್ಲಿ, ನಾ ಮಲದೇಹಿ, ನೀ ನಿರ್ಮಲದೇಹಿ. ನಿನಗೆ ಪೂಜೆಯ ಮಾಡುವಲ್ಲಿ, ನಾ ಕರ್ಮಜೀವಿ, ನೀ ಪುಣ್ಯಜೀವಿ. ನಿನಗೆ ಗಂಧವ ಹೂಸುವಲ್ಲಿ, ನಾ ದುರ್ಗುಣ ಜೀವಿ, ನೀ ಸುಗಂಧ ಭಾವಿ. ನಿನಗೆ ಅಕ್ಷತೆಯನಿಕ್ಕುವಲ್ಲಿ, ನಾ ಲಕ್ಷಿತ, ನೀ ಅಲಕ್ಷಿತ. ನಿನಗೆ ಧೂಪವನಿಕ್ಕುವಲ್ಲಿ, ನಾ ಭಾವಿತ, ನೀ ನಿರ್ಭಾವಿತ. ನಿನಗೆ ದೀಪವನೆತ್ತುವಲ್ಲಿ, ನಾ ಜ್ಯೋತಿ, ನೀ ಬೆಳಗು. ಇಂತೀ ಭಾವಂಗಳಲ್ಲಿ ಭಾವಿಸಿ ಕಂಡೆಹೆನೆಂದಡೆ, ಭಾವಕ್ಕೆ ಅಗೋಚರನಾಗಿಪ್ಪೆ. ನಿನ್ನನರಿವುದಕ್ಕೆ ತೆರನಾವುದೆಂದಡೆ, ಗುರುವಿಂಗೆ ತನು, ನಿನಗೆ ಮನ, ಜಂಗಮಕ್ಕೆ ಧನ, ತ್ರಿವಿಧಕ್ಕೆ ತ್ರಿವಿಧವನಿತ್ತು, ದಗ್ಧಪಟದಂತೆ ರೂಪಿಗೆ ಹೊದ್ದಿಗೆಯಾಗಿ, ಕಲ್ಲಿಗೆ ಹೊದ್ದದಿಪ್ಪ ಲಿಂಗ ಸದ್ಭಕ್ತನ ಸ್ಥಲ. ಆ ಭಕ್ತನಲ್ಲಿ ತಪ್ಪದಿಪ್ಪೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಭಾವಿಸಿ ದೃಷ್ಟಿನಟ್ಟು ಸೈವೆರಗಾಗಿದ್ದುದ ಕಂಡೆ, ಕಲ್ಪಿಸಿ ದೃಷ್ಟಿನಟ್ಟು ಸೈವೆರಗಾಯಿತ್ತಯ್ಯಾ. ಗುಹೇಶ್ವರಾ, ನಿಮ್ಮಲ್ಲಿ ಸರ್ವನಿರ್ವಾಣಿ ಸಂಗನಬಸವಣ್ಣ. ಎನ್ನ ಪ್ರಾಣಲಿಂಗವೆಂದರಿದು ಕಂಡೆನಿಂದು.
--------------
ಅಲ್ಲಮಪ್ರಭುದೇವರು
ಕಾಮುಕಗೆ ದುರ್ಜನಗೆ ಕಪಟಿಗೆ ಹೇಮಚೋರಗೆ ಕಾರುಕ ಸಮ್ಮಗಾರಗೆ ಆವ ಭಾವದ ವ್ರತವ ಮಾಡಲಿಕ್ಕೆ, ಅವ ಭಾವಿಸಿ ನಡೆಯಬಲ್ಲನೆ? ಕಾಗೆಗೆ ರಸಾನ್ನ ಮುಂದಿರಲಿಕೆ, ಹರಿವ ಕೀಟಕಂಗೆ ಸರಿವುದಲ್ಲದೆ ಮತ್ತೆ ಅದು ಸವಿಯಸಾರವ ಬಲ್ಲುದೆ? ಇಂತೀ ಇವು ತಮ್ಮ ಜಾತಿಯ ಲಕ್ಷಣವ ಕೊಂದಡೂ ಬಿಡವಾಗಿ, ವ್ರತಾಚಾರವ ಸಂಬಂದ್ಥಿಸುವಲ್ಲಿ ಶರಣರೆಲ್ಲರ ಕೂಡಿ, ಈ ಗುಣ ಅಹುದು ಅಲ್ಲ ಎಂದು ಹೇಳಿ, ಜಾತಿವರ್ಗದ ಗುಣವ ನೀಕರಿಸಿ ಬಿಡಿಸಿ, ಸುಜಾತಿಯ ಅರಸಿನ ಪಟ್ಟವಂ ಕಟ್ಟಿ ಶರಣರೆಲ್ಲರು ನಿಹಿತಾಚಾರದಲ್ಲಿ ಸಹಭೋಜನವಂ ಮಾಡಿ ಇಂತೀ ಗುಣನಿಹಿತವ್ರತ ಅಜಾತನ ಒಲುಮೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನಿಹಿತದ ಶೀಲದ ನೇಮ.
--------------
ಅಕ್ಕಮ್ಮ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಗುರುಜಂಗಮದ ಪಾದತೀರ್ಥವೆ ಪವಿತ್ರವೆಂದು ತಿಳಿದು ಲಿಂಗಾಭಿಷೇಕಂಗೆಯ್ವುದಯ್ಯಾ. ಆ ಗುರುಲಿಂಗ ಜಂಗಮದಲ್ಲಿ ಭೇದವ ಕಲ್ಪಿಸಿದಡೆ ಪಾಪವು ಸಂಘಟಿಸುವುದಯ್ಯಾ. ಮನುಷ್ಯನ ಕಾಲ್ದೊಳೆದ ನೀರು ಪರಮತೀರ್ಥವೆಂದು ಭಾವಿಸಿ ಲಿಂಗಕ್ಕೆರೆವುದು ಶಾಸ್ತ್ರಾಚಾರಕ್ಕೆ ವಿರೋಧ_ ಎಂಬ ಕುಹಕಿಗಳ ಕೀಳ್ನುಡಿಯ ಕೇಳಲಾಗದಯ್ಯಾ. ಗುರುರ್ಲಿಂಗಜಂಗಮಶ್ಚ ತ್ರಿತಯಂ ಚೈಕಮೇವ ಹಿ ಅತ ಏವ ಪದೋದಾಭಿಷೇಚನಂ ಶಿವಲಿಂಗಕೇ ಕುರ್ವಂತ್ಯಭೇದದೃಷ್ಟ್ಯಾ ಚ ಭೇದಕೃತ್ಪಾಪಮಶ್ನುತೇ ಎಂದುದಾಗಿ ಇಂತಿಪ್ಪುದನಾರಯ್ಯದೆ ಗಳಹುವ ಮಂದಮತಿಗಳ ಎನ್ನತ್ತ ತೋರದಿರಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭಾವಿಸಿ ನೋಡಿದಡೆ ಅಂಗವಾಯಿತ್ತು, ಅಂಗಸಂಗವಾಗಿ ಸಂಯೋಗವ ಮರೆದು, ಲಿಂಗಸೈವೆರಗಾದೆ. ಲಿಂಗೈಕ್ಯ, ನಿಮ್ಮನಗಲದೆ ಅಂಗರುಚಿಗಳ ಮರೆದು, ಲಿಂಗರುಚಿಗಳಲ್ಲಿ ಸೈವೆರಗಾದೆ. ಲಿಂಗ ಸೈವೆರಗಾದ ಬಳಿಕ ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ.
--------------
ಅಕ್ಕಮಹಾದೇವಿ
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ಅತ್ತಲರಿವರು ಸುತ್ತ ಮೋಹಿಗಳು ; ಅತ್ತಲನುಪಮದನುವನವರರಿವರೆ ? ಇತ್ತಲರಿವರು ವಿಷಮವಿರಹಿತ ವಿಮಲಾಂಗ ಸಂಗಸುಖಿಗಳ; ಇತ್ತಲನುಭೇದ ವಿಸರ್ಜನವನಿವರರಿವರೆ ? ಇದು ಕಾರಣ, ಅತ್ತಿಲ್ಲದಿರ್ದನಿತ್ತಲನುದಿನ ಚಲುವಾಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗ ನೋಡಾ ಅರಿವರು ಭಾವಿಸಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾಮಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ. ಕಲ್ಪಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ ಭಾವಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ ರೂಪಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ ಪೂರ್ವಾಚಾರ್ಯ ಸಂಗನಬಸವಣ್ಣನ ಕಂಡು ಗುಹೇಶ್ವರಲಿಂಗವು ಅಲ್ಲಿಯೆ ಅನುಶ್ರುತವಯ್ಯಾ !
--------------
ಅಲ್ಲಮಪ್ರಭುದೇವರು
ನಾನಾ ಬಹುವರ್ಣದ ಬೊಕ್ಕಸವ ಹೊತ್ತು ಮಾಡುವಲ್ಲಿ ಭಾವದ ಬಹುಚಿತ್ತವನರಿಯಬೇಕು. ನಾನಾ ವರ್ಣದ ಆಭರಣ, ಹದಿನೆಂಟು ಆಶ್ರಯಂಗಳ ತೊಡುವಲ್ಲಿ ದ್ರವ್ಯವ ಕೊಡುವಲ್ಲಿ ಇಂದ್ರಿಯಾತ್ಮನ ಬೆಂಬಳಿಯನರಿಯಬೇಕು. ಎಂಟುರತ್ನದ ಕಾಂತಿ, ಜೀವರತ್ನದ ಕಳೆ ಭಾವಿಸಿ ಏಕವ ಮಾಡಿ ನಡೆವುದು. ನೀವು ಕೊಟ್ಟ ಕಾಯಕ ತನುವಿಂಗೆ ಕ್ರೀ, ಆತ್ಮಂಗೆ ಅರಿವು. ಆ ಅರಿವಿಂಗೆ ಮಹಾಬೆಳಕು ಒಡಗೂಡಿ ಕರಿಗೊಂಡಲ್ಲಿ ಬೊಕ್ಕಸದ ಮಣಿಹವನೊಪ್ಪಿಸಬೇಕು, ಬಸವಣ್ಣಪ್ರಿಯ ನಾಗರೇಶ್ವರಲಿಂಗಕ್ಕೆ.
--------------
ಆನಂದಯ್ಯ
ಕೈಲಾಸ ಮರ್ತ್ಯಲೋಕ ಎಂಬರು. ಕೈಲಾಸವೆಂದಡೇನೊ, ಮರ್ತ್ಯಲೋಕವೆಂದಡೇನೊ ? ಅಲ್ಲಿಯ ನಡೆಯೂ ಒಂದೆ, ಇಲ್ಲಿಯ ನಡೆಯೂ ಒಂದೆ. ಅಲ್ಲಿಯ ನುಡಿಯೂ ಒಂದೆ, ಇಲ್ಲಿಯ ನುಡಿಯೂ ಒಂದೆ ಕಾಣಿರಯ್ಯಾ ಎಂಬರು. ಕೈಲಾಸದವರೆ ದೇವರ್ಕಳೆಂಬರು; ಸುರಲೋಕದೊಳಗೆ ಸಾಸಿರಕಾಲಕ್ಕಲ್ಲದೆ ಅಳಿದಿಲ್ಲವೆಂಬರು. ನರಲೋಕದೊಳಗೆ ಸತ್ತು ಸತ್ತು ಹುಟ್ಟುತಿಹರೆಂಬರು. ಇದ ಕಂಡು ನಮ್ಮ ಶರಣರು ಸುರಲೋಕವನು ನರಲೋಕವನು ತೃಣವೆಂದು ಭಾವಿಸಿ, ಭವವ ದಾಂಟಿ ತಮ್ಮ ತಮ್ಮ ಹುಟ್ಟನರಿದು, ಮಹಾಬೆಳಗನೆ ಕೂಡಿ, ಬೆಳಗಿನಲ್ಲಿ ಬಯಲಾದರಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ಇನ್ನಷ್ಟು ... -->