ಅಥವಾ

ಒಟ್ಟು 48 ಕಡೆಗಳಲ್ಲಿ , 23 ವಚನಕಾರರು , 39 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಅಯ್ಯ ತನುತ್ರಯಂಗಳು, ಜೀವತ್ರಯಂಗಳು, ಆತ್ಮತ್ರಯಂಗಳು, ಅವಸ್ಥಾತ್ರಯಂಗಳು, ಗುಣತ್ರಯಂಗಳು, ಮನತ್ರಯಂಗಳು, ತಾಪತ್ರಯಂಗಳು, ಕಾಲತ್ರಯಂಗಳು, ಕರ್ಮತ್ರಯಂಗಳು, ಭಾವತ್ರಯಂಗಳು, ಮಲತ್ರಯಂಗಳು, ಕರಣತ್ರಯಂಗಳು ಮೊದಲಾದ ಪ್ರವೃತ್ತಿಮಾರ್ಗವನುಳಿದು, ಹಿಂದೆ ಹೇಳಿದ ಸದ್ಭಕ್ತ_ಮಹೇಶ್ವರಸ್ಥಲದಲ್ಲಿ ನಿಂದು_ ಅಷ್ಟಾವಧಾನ ಅವಿರಳಾನಂದಮೂರ್ತಿಯಾಗಿ ಪ್ರಕಾಶಿಸುವ ನಿಜಪ್ರಸಾದಿಯಂತರಂಗದಲ್ಲಿ ಚಿತ್ಘನ ಸ್ವರೂಪವಲೀಲೆಯಿಂ ಅಂತರಂಗದಲ್ಲಿ ಅಂಗತತ್ತ್ವ, ಲಿಂಗತತ್ತ್ವ, ಶಿವತತ್ತ್ವ, ಪರತತ್ತ್ವ ಮೊದಲಾದ ಸಮಸ್ತ ತತ್ತ್ವಂಗಳನೊಳಕೊಂಡು, ಹದಿನಾರು ಸ್ಥಲಂಗಳ ಗರ್ಭೀಕರಿಸಿಕೊಂಡು, ನಾಲ್ಕು ಸಾವಿರದ ಮುನ್ನೂರಿಪ್ಪತ್ತು ಮಂತ್ರಮಾಲಿಕೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಪಾದೋದಕ ಪ್ರಸಾದವ ಕೊಂಡ ಅಂಗ_ಮನ_ಪ್ರಾಣ_ಭಾವ_ಇಂದ್ರಿಯಂಗಳೆಲ್ಲ ಪಾದೋದಕ ಪ್ರಸಾದಮಯವೆಂಬ ಹರಗುರುವಾಕ್ಯದಿಂ ಚಿನ್ನಬಣ್ಣ ಪ್ರಕಾಶದ ಹಾಂಗೆ ಭಿನ್ನ ಭಾವವಿಲ್ಲದೆ ಏಕರೂಪಿನಿಂದ ನಿರೀಕ್ಷಣಾಮೂರ್ತಿ ಶಿವಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ನಿಜವೀರಶೈವ ಸಂಪನ್ನರು ತಮ್ಮ ಸ್ವಯಾಂಗಲಿಂಗವನರ್ಚಿಸುವಲ್ಲಿ ಭವಿಶೈವ ಭಿನ್ನ ಕರ್ಮಿಗಳಂತೆ ಅಂಗನ್ಯಾಸ ಪಂಚಮಶುದ್ಧಿ ಮೊದಲಾದ ಅಶುದ್ಧಭಾವವಪ್ಪ ಕ್ಷುದ್ರ ಕರ್ಮಂಗಳ ಹೊದ್ದಲಾಗದು. ಅದೆಂತೆಂದೊಡೆ:``ನಕಾರಮಾತ್ಮಶುದ್ಧಿಶ್ಚ ಮಕಾರಂ ಸ್ನಾನಶೋಧನಂ ಶಿಕಾರಂ ಲಿಂಗಶುದ್ಧಿಶ್ಚ ವಾಕಾರಂ ದ್ರವ್ಯಶೋಧನಂ ಯಕಾರಂ ಮಂತ್ರಶುದ್ಧಿಶ್ಚ ಪಂಚಶುದ್ಧಿಃ ಪ್ರಕೀರ್ತಿತಾಃ ಕಾಯಶುದ್ಧಿಶ್ಚಾತ್ಮಶುದ್ಧಿಶ್ಚಾಂಗನ್ಯಾಸಕರಸ್ಯ ಚ ಸರ್ವಶುದ್ಧಿರ್ಭವೇ ನಿತ್ಯಂ ಲಿಂಗಧಾರಣಮೇವ ಚ'_ ಇಂತೆಂದುದಾಗಿ. ಅವಲ್ಲದೆ ಅಘ್ರ್ಯ ಪಾದ್ಯ ಆಚಮನಂಗಳು ಮೊದಲಾದ ಉಪಪಾತ್ರಗ?ಲ್ಲಿ ಅಗಣಿತಂಗೆ ಅಳತೆಯ ನೀರನೆರೆದು ಸುಖಮುಖಾರ್ಪಿತಕ್ಕೆ ಸಲುವ ಸುರಸದ್ರವ್ಯಂಗಳಪ್ಪ ಪಂಚಾಮೃತಂಗಳ ನಿರ್ಮಲನಪ್ಪ ನಿಜಲಿಂಗದ ಮಸ್ತಕಕ್ಕೆರೆದು ಜಿಡ್ಡು ಮಾಡಿ ತೊಳೆವ ಅಜ್ಞಾನಿ ನರಕಜೀವಿಗಳ ಮುಖವ ನೋಡಲಾಗದು. ಅದೇನುಕಾರಣವೆಂದಡೆ: ``ಅಘ್ರ್ಯಂ ಪಾದ್ಯಂ ತಥಾಚಮ್ಯಂ ಸ್ನಾನಂ ಪಂಚಾಮೃತಂ ಯದಿ ಲಿಂಗದೇಹೀ ಸ್ವಲಿಂಗೇಷು ಕೃತ್ವಾಚ್ರ್ಯಂತೇ ಬಹಿರ್ನರಾಃ ತೇ ಪಾಷಂಡಾಃ ಕೃತಾಸ್ತೇನ ಕೃತಂಕರ್ಮನರಂ ನಾರಕಂ ಇಂತೆಂದುದಾಗಿ. ಇದು ಕಾರಣ ಸ್ವಯಾಂಗಲಿಂಗದೇಹಿಗಳು ತಮ್ಮ ಲಿಂಗಮಂತ್ರವಿಡಿದು ಬಂದು ಲಿಂಗೋದಕ ಪಾದೋದಕಂಗಳಲ್ಲಿ ತಮ್ಮ ಕರ ಮುಖ ಪದ ಪ್ರಕ್ಷಾಲನವ ಮಾಡಿಕೊಂಬುದೆ ? ಅಂಗಲಿಂಗಿಗಳಿಗೆ ಸ್ವರ್ಯಾಘ್ರ್ಯ ಪಾದ್ಯಾಚಮನವೆಂಬುದನರಿಯದೆ ಕೃತಕರ್ಮ ಭವಿಜೀವಿ ಶೈವಪಾಷಂಡರಂತೆ ಭಿನ್ನವಿಟ್ಟು ಮಾಡಿ ಫಲಪದಂಗಳನೈದಿಹೆನೆಂಬ ನರಕಜೀವಿಗಳನು ಕೂಡಲಚೆನ್ನಸಂಗಯ್ಯ ರವಿ ಸೋಮರುಳ್ಳನ್ನಕ್ಕ ನಾಯಕ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಇಂತಪ್ಪ ಪ್ರಣಮಮಂತ್ರಸಂಬಂಧವನು ಸ್ವಾನುಭಾವಗುರುಮೂರ್ತಿಗಳಿಂದ ವಿಚಾರಿಸಿಕೊಳ್ಳಬೇಕಲ್ಲದೆ, ಭಿನ್ನ ಜ್ಞಾನಗುರುಮೂರ್ತಿಗಳಿಂದ ವಿಚಾರಿಸಿಕೊಳ್ಳಲಾಗದು. ಅದೇನು ಕಾರಣವೆಂದಡೆ: ದ್ವಾದಶ ರುದ್ರಾಕ್ಷಿಮಾಲೆಯಂ ಮಾಡಿ, ಆ ದ್ವಾದಶ ರುದ್ರಾಕ್ಷಿಗೆ ದ್ವಾದಶಪ್ರಣಮವ ಸಂಬಂಧಿಸಿ, ಶಿಖಾರುದ್ರಾಕ್ಷಿಗೆ ನಿರಂಜನ ಅವಾಚ್ಯಪ್ರಣವವೆಂಬ ಹಕಾರ ಪ್ರಣಮವ ಸಂಬಂಧಿಸಿ, ಉದಯ ಮಧ್ಯಾಹ್ನ ಸಾಯಂಕಾಲವೆಂಬ ತ್ರಿಕಾಲದಲ್ಲಿ ಸ್ನಾನವ ಮಾಡಿ, ಏಕಾಂತಸ್ಥಾನದಲ್ಲಿ ಉತ್ತರವಾಗಲಿ ಪೂರ್ವವಾಗಲಿ ಉಭಯದೊಳಗೆ ಆವುದಾನೊಂದು ದಿಕ್ಕಿಗೆ ಮುಖವಾಗಿ ಶುಭ್ರವಸ್ತ್ರವಾಗಲಿ, ಶುಭ್ರರೋಮಶಾಖೆಯಾಗಲಿ, ಶುಭ್ರ ರೋಮಕಂಬಳಿಯಾಗಲಿ, ತೃಣದಾಸನವಾಗಲಿ, ನಾರಾಸನವಾಗಲಿ, ಇಂತೀ ಪಂಚಾಸನದೊಳಗೆ ಆವುದಾನೊಂದು ಆಸನ ಬಲಿದು, ಮೂರ್ತವ ಮಾಡಿ, ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಆ ರುದ್ರಾಕ್ಷಿಮಾಲೆಗೆ ವಿಭೂತಿ ಅಗ್ಗಣಿ ಪತ್ರಿಯ ಧರಿಸಿ, ತರ್ಜನ್ಯವಾಗಲಿ ಅನಾಮಿಕ ಬೆರಳಾಗಲಿ ಉಭಯದೊಳಗೆ ದಾವುದಾದರೇನು ಒಂದು ಬೆರಳಿಗೆ ರುದ್ರಾಕ್ಷಿಯಂ ಧರಿಸಿ ಅದರೊಳಗೆ ದೀಕ್ಷಾಗುರು ಅಧೋಮುಖವಾಗಿ ರುದ್ರಾಕ್ಷಿಮಾಲೆಯ ಜಪಿಸೆಂದು ಪೇಳ್ವನು. ಮತ್ತಂ, ಕುರುಡರೊಳಗೆ ಮೆಳ್ಳನು ಚಲುವನೆಂಬ ಹಾಗೆ ಅಜ್ಞಾನಿಗಳೊಳಗಣ ಜ್ಞಾನಿಗಳು ಊಧ್ರ್ವಮುಖವಾಗಿ ರುದ್ರಾಕ್ಷಿ ಜಪಿಸೆಂದು ಪೇಳುವರು. ಇಂತಪ್ಪ ಸಂಶಯದಲ್ಲಿ ಮುಳುಗಿ ಮೂರುಲೋಕವು ಭವಭವದಲ್ಲಿ ಎಡೆಯಾಡುವುದು ಕಂಡು, ಶಿವಜ್ಞಾನ ಶರಣನು ವಿಸರ್ಜಿಸಿ ಸ್ವಾನುಭಾವಸೂತ್ರದಿಂ, ದ್ವಾದಶಪ್ರಣಮವ ಪೋಣಿಸಿ, ಅಧೋ ಊಧ್ರ್ವವೆಂಬ ವಿಚಾರವಿಲ್ಲದೆ ದಿವಾರಾತ್ರಿಯಲ್ಲಿ ನಿಮಿಷ ನಿಮಿಷವನಗಲದೆ ಮರಿಯದೆ ಜಪಿಸಿ ಸದ್ಯೋನ್ಮುಕ್ತನಾಗಿ ಶಿವಸುಖದಲ್ಲಿ ಸುಖಿಯಾಗಿರ್ದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಭಕ್ತಿಸ್ಥಲ ಮೂರು, ಮಾಹೇಶ್ವರಸ್ಥಲ ನಾಲ್ಕು, ಪ್ರಸಾದಿಸ್ಥಲ ಐದು, ಪ್ರಾಣಲಿಂಗಿಸ್ಥಲ ಆರು, ಶರಣಸ್ಥಲವೆರಡು, ಐಕ್ಯಸ್ಥಲ ಒಂದು, ಭಕ್ತಂಗೆ ಮೂರು ಗೊತ್ತು, ಮಾಹೇಶ್ವರಂಗೆ ನಾಲ್ಕು ಗೊತ್ತು, ಪ್ರಸಾದಿಗೆ ಐದು ಗೊತ್ತು, ಪ್ರಾಣಲಿಂಗಿಗೆ ಆರು ಗೊತ್ತು, ಶರಣಂಗೆ ಎರಡು ಗೊತ್ತು, ಐಕ್ಯಂಗೆ ಒಂದು ಗೊತ್ತಾಗಿ ಸಂಬಂಧಿಸಿ ಷಡುಸ್ಥಲ ರೂಪಾದಲ್ಲಿ ಒಂದು ಸ್ಥಲಕ್ಕೆ ಆರು ಸ್ಥಲ ಹೊರೆ ಹೊರೆಯಾಗಿ ಮಿಶ್ರವಾಗಿ ಸ್ಥಲಂಗಳು ಚರಿಸುವಲ್ಲಿ ನೂರೊಂದು ಸ್ಥಲಂಗಳಲ್ಲಿ ಆರೋಪಿಸಿ ನಿಂದುದು ಮೂರೆ ಭಕ್ತಿಸ್ಥಲ, ಸಂದುದು ನಾಲ್ಕೆ ಮಾಹೇಶ್ವರಸ್ಥಲ, ಕೊಂಡುದು ಐದೆ ಪ್ರಸಾದಿಸ್ಥಲ, ಗಮನವಿಲ್ಲದೆ ನಿಜದಲ್ಲಿ ನಿಂದುದಾರೆ ಪ್ರಾಲಿಂಗಿಸ್ಥಲ, ಸ್ತುತಿ-ನಿಂದೆಗೆಡೆಯಿಲ್ಲದೆ ನಿಂದುದೆರಡೆ ಶರಣಸ್ಥಲ, ನಿರ್ನಾಮವಾಗಿ ಭಾವಕ್ಕೆ ಬ್ರಮೆಯಿಲ್ಲದುದೊಂದೆ ಐಕ್ಯಸ್ಥಲ. ಇಂತೀ ಭಿನ್ನ ವರ್ಣಂಗಳಲ್ಲಿ ವರ್ಣಸ್ವರೂಪನಾದೆಯಲ್ಲಾ, ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 67 ||
--------------
ದಾಸೋಹದ ಸಂಗಣ್ಣ
ಲಿಂಗ ಪ್ರಾಣ, ಪ್ರಾಣ ಲಿಂಗ, ಆ ಮಹಾಲಿಂಗಕ್ಕೆ ಕಾಯವೆ ಭಕ್ತನು, `ಭಕ್ತಕಾಯ ಮಮಕಾಯ' ಎಂದುದಾಗಿ ಆ ಪ್ರಾಣ ಲಿಂಗವು, ಕಾಯ ಭಕ್ತನು ಆ ಲಿಂಗಕ್ಕೆ ಆ ಭಕ್ತನು ದಾಸೋಹವ ಮಾಡಿದಡೆ ಭಿನ್ನ ಭೇದವೆ ? ಅಲ್ಲ, ಸ್ವಭಾವ ನೈಜ. ಅಂಗಕ್ರೀಯೆಲ್ಲ ಲಿಂಗಕ್ರೀ, ಲಿಂಗಕ್ರೀಯೆಲ್ಲ ಅಂಗಕ್ರೀ. ಕೈಕಲಸಿದಡೆ ಬಾಯಿಗೆ, ಹಾಂಗೆ ಸರ್ವಾಂಗ ಲಿಂಗಕ್ಕೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕಾಯದ ಮೇಲಿಹ ಲಿಂಗ ಕೈಬಿಡುವನ್ನಕ್ಕ ಕೈಗೆ ಭಿನ್ನ. ವಸ್ತ್ರವ ಬಿಟ್ಟು ನೋಡಿ ಕಾಬನ್ನಕ್ಕ ಕಂಗಳಿಗೆ ಭಿನ್ನ. ಕಂಗಳು ಕಂಡು ಮನದಲ್ಲಿ ಬೇಧಿಸುವನ್ನಕ್ಕ ರೂಪಿಂಗೆ ಭಿನ್ನ. ಉಭಯಗುಣವಳಿದು, ಎರಡರ ಅಭಿಸಂದಿಯ ಕಾಣಿಕೆ ಹಿಂಗಿ, ನಿಜವ ಕಾಣಿಸಿಕೊಂಬುದು. ತಾನಾಗಿ ಕಂಡಲ್ಲಿಯೆ ಇದಿರಿಡುವುದು, ನಾಮನಷ್ಟ. ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ತಾನು ತಾನೆ.
--------------
ಸಗರದ ಬೊಮ್ಮಣ್ಣ
ಸರ್ವಘಟಂಗಳಲ್ಲಿ ಸುಖದುಃಖ ಅನುಭವಿಸುವ ಆ ಆತ್ಮ ಒಂದೋ, ಎರಡೋ? ಸರ್ವಯೋನಿಗಳಲ್ಲಿ ಕೂಡುವ ಶಿಶ್ನೆಯ ಸುಖ ಒಂದೋ, ಎರಡೋ ? ಆತ್ಮ ಒಂದೆಂದಡೆ ಘಟಭೇದಕ್ಕೆ ಭಿನ್ನವಾಗಿಪ್ಪುದು. ಆತ್ಮ ಹಲವೆಂದಡೆ ಚೇತನ ಸ್ವಭಾವ ಏಕವಾಗಿಪ್ಪುದು. ಆ ಘಟ ಆತ್ಮನ ಕೂಟ ಎಂತೆಯಿದ್ದಿತ್ತು ಅಂತೆ ಸುಖವಿದ್ದಿತ್ತು. ಯೋನಿಯ ಘಟ ಸಾಕಾರ ಎಂತೆಯಿದ್ದಿತ್ತು ಅಂತೆಯಿದ್ದಿತ್ತು ಶಿಶ್ನೆಯ ಯೋಗ. ಆತ್ಮನ ಘಟಸಂಗ ಜಾತಿಯ ಸುಜಾತಿಯ ಕೂಟಸ್ಥ ವಿಶ್ವಾಸದ ಭ್ರಾಂತಿಯ ಭ್ರಾಮಕಯೆಂತಿದ್ದಿತ್ತು ಅಂತೆಯಿದ್ದಿತ್ತು ಆತ್ಮ. ಇಂತೀ ಘಟದ ಸಾಕಾರವಡಗಿ ತೋರುವ ಆತ್ಮನ ಪರಿ. ಭಿನ್ನ ಇಂದ್ರಿಯಂಗಳ ಹಲವು ಸಂಚಿನ ಯೋನಿ. ಅದ ಸಂಧಿಸಿ ಕೂಡಿಹೆನೆಂಬ ಅರಿಕೆಯ ತೃಷ್ಣೆಯ ಶಿಶ್ನೆ ತಲಹಗೆಟ್ಟಲ್ಲಿ, ಭ್ರಾಂತಿನ ಭ್ರಮೆಯ ಸೂತಕ ಹೋಯಿತ್ತು, ಕಾಮಧೂಮ ಧೂಳೇಶ್ವರನ ತಾನು ತಾನಾದ ಕಾರಣ.
--------------
ಮಾದಾರ ಧೂಳಯ್ಯ
ಸರ್ವವನರಿದಲ್ಲಿ ಸರ್ವಜ್ಞನಾದಲ್ಲಿ ಇದಿರೆಲ್ಲಿ ತಾನೆಲ್ಲಿ? ಅದು ತನ್ನ ಭಿನ್ನ ಭಾವ ಅನ್ಯರಲ್ಲಿ ಎಮ್ಮುವ ತೋರಿ ಆ ಗುಣ ತನ್ನನೆ ಅನ್ಯವೆನಿಸೂದು. ತನ್ನ ಶಾಂತಿ ಅನ್ಯರಲ್ಲಿ ತೋರಿ, ಅಲ್ಲಿ ಭಿನ್ನಭಾವವಿಲ್ಲದಿರೆ ಅವರನ್ಯರಲ್ಲ ಎಂಬುವುದು ತನ್ನ ಗುಣ. ಅನ್ಯವಿಲ್ಲವೆಂಬುದನರಿತು ತನ್ನೊಪ್ಪದ ದರ್ಪಣದಲ್ಲಿ ತೋರುವಂತೆ ಇದಕ್ಕೇ ಕರ್ಕಶವಿಲ್ಲ ದಸರೇಶ್ವರಲಿಂಗವನರಿವುದಕ್ಕೆ.
--------------
ದಸರಯ್ಯ
ಹೊನ್ನಿನಾಸೆ ತನುವಿನೊಳಿಂಬುಗೊಂಡು ಪನ್ನಗಧರ ನಿಮ್ಮ ಮರೆಸಿತಯ್ಯ. ಹೆಣ್ಣಿನ ವಿಷಯ ಮನದೊಳಿಂಬುಗೊಂಡು ಪನ್ನಗಧರ ನಿಮ್ಮಿಂದರಿವ ಜ್ಞಾನವ ಮರೆಸಿತಯ್ಯ. ಮಣ್ಣಿನಾಸೆ ತನು ಮನ ಬುದ್ಧಿಯೊಳಿಂಬುಗೊಂಡು ಜ್ಞಾನದಿಂದರಿವ ಪುಣ್ಯಫಲವ ಮರೆಸಿತಯ್ಯ. ಹೊನ್ನು ಹೆಣ್ಣು ಮಣ್ಣು ಮೂರೆಂಬ ಭಿನ್ನ ವಿಷಯವ ನೆಚ್ಚಿ. ಸಂಸಾರಸಾಗರದೊಳು ಮುಳುಗಿದವರು ನಿಮ್ಮನೆತ್ತ ಬಲ್ಲರಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ಕನ್ನವನಿಕ್ಕಿದ ಕಳ್ಳನಿದ್ದಂತೆ ಮಣ್ಣ ಬಂಧಿಸಬಹುದೆ? ಎನ್ನ ಅಂಗ ಪ್ರಾಣಕ್ಕೆ ಲಿಂಗವಲ್ಲದೆ ಕರಣಂಗಳಿಗೆ ಬೇರೊಂದಂಗವುಂಟೆ? ಇದಕ್ಕೆ ಅಂಜುವಡೆ, ``ಗುರೋಃ ಪಾಪಂ ಶಿಷ್ಯಸ್ಯಾಪಿ ಶಿಷ್ಯಪಾಪಂ ಗುರೋರಪಿ' ಎಂಬುದ ಹುಸಿಯಾದಡೆ ಹೇಳಿಸಿಕೊಂಬುವ ಗುರು ಹೇಳುವಾತ ಶಿಷ್ಯನೆ? ಆತ ಹೇಳೂದಕ್ಕೆ ಮುನ್ನ ತಾನರಿಯಬೇಕು. ಈ ಉಭಯಕ್ಕೆ ಭಿನ್ನ ಭಾವವಿಲ್ಲ. ಜೂಳಿಯ ಕುಂಭದಂತೆ ಏತರಲ್ಲಿ ಒದಗಿದಡೂ ಸರಿ. ಸಗುಣನೀತಿಗೆ ಮುಕ್ತಿ ಉಭಯಸ್ಥಲ ಯುಕ್ತಿ ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ನಿಮ್ಮ ನೆನವ ಮನಕ್ಕೆ ಜ್ಞಾನಸಿದ್ಧಿಯೆಂತಪ್ಪುದೆಂದರಿಯೆನಯ್ಯಾ. ಕರ್ಮದೊಳಗಣ ಬಯಲಮೋಹವೆನ್ನ ಬೆನ್ನ ಬಿಡದು. ಅನ್ಯವಿಷಯ ಭಿನ್ನ ರುಚಿಯಲೆನ್ನ ಮನವು ಹರಿವುದ ಮಾಣದನ್ನಕ್ಕರ, ನಿಮ್ಮ ನೆನೆದೆಹೆನೆಂಬ ಮನದ ಕಲಿತನವ ನೋಡಾ, ಮಹಾಲಿಂಗ ಕಲ್ಲೇಶ್ವರಾ !
--------------
ಹಾವಿನಹಾಳ ಕಲ್ಲಯ್ಯ
ಸ್ಥೂಲತನು, ಸೂಕ್ಷ್ಮತನು, ಕಾರಣತನು. ಇಂತೀ ತನುತ್ರಯದ ಭೇದವನರಿಯಬೇಕಣ್ಣಾ. ಸ್ಥೂಲತನು ಗುರುವಿಂಗೆ ಭಿನ್ನ, ಸೂಕ್ಷ್ಮತನು ಲಿಂಗಕ್ಕೆ ಭಿನ್ನ, ಭಿನ್ನಕಾರಣತನು ಜಂಗಮಕ್ಕೆ ಭಿನ್ನ. ನಾದ ಗುರುವಿನಲ್ಲಿ ಅಡಗಿತ್ತು, ಬಿಂದು ಲಿಂಗದಲ್ಲಿ ಅಡಗಿತ್ತು, ಕಳೆ ಜಂಗಮದಲ್ಲಿ ಅಡಗಿತ್ತು. ಮಹಾಘನ ವಸ್ತುವಿನಲ್ಲಿ ಲೀಯವಾಯಿತ್ತು. ಆದ ಬಳಿಕ, ಗುರುಲಿಂಗೆ ತನುವೆಂಬುದಿಲ್ಲ, ಲಿಂಗಕ್ಕೆ ಮನವೆಂಬುದಿಲ್ಲ, ಜಂಗಮಕ್ಕೆ ಘನವೆಂಬುದಿಲ್ಲ, ಪ್ರಸಾದಕ್ಕೆ ಜಿಹ್ವೆಯೆಂಬುದಿಲ್ಲ. ಅನುವರಿದು ಘನದಲ್ಲಿ ನಿಂದು, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಅರಸಿಕೊಳ್ಳಿರಣ್ಣಾ.
--------------
ಮೋಳಿಗೆ ಮಾರಯ್ಯ
ಆತ್ಮಕ್ಕೂ ಇಂದ್ರಿಯಕ್ಕೂ ಭಿನ್ನ ಉಂಟು, ಇಲ್ಲಾ ಎಂಬಲ್ಲಿ ಆ ಆತ್ಮಂಗೆ ಇಂದ್ರಿಯಂಗಳು ತುಷಕಂಬು ತಂಡುಲದಂತೆ. ಆತ್ಮದ ಇಂದ್ರಿಯದಲ್ಲಿ, ಹೊರೆ ಹೊರೆಯಲ್ಲಿ, ನಿಂದು ನೋಡಲಿಕ್ಕೆ ಆತ್ಮ ಎಂದಿನ ನಿಜ ? ತಾ ಬಂದ ಸ್ವಯದಂತೆ, ಕಾಮಧೂಮ ಧೂಳೇಶ್ವರನು.
--------------
ಮಾದಾರ ಧೂಳಯ್ಯ
ಇನ್ನಷ್ಟು ... -->