ಅಥವಾ

ಒಟ್ಟು 46 ಕಡೆಗಳಲ್ಲಿ , 23 ವಚನಕಾರರು , 44 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಕಂಗಳೇಕೆ `ನೋಡಬೇಡಾ' ಎಂದರೆ ಮಾಣವು ? ಶ್ರೋತ್ರಂಗಳೇಕೆ `ಆಲಿಸಬೇಡಾ' ಎಂದರೆ ಮಾಣವು ? ಜಿಹ್ವೆ ಏಕೆ `ರುಚಿಸಬೇಡಾ' ಎಂದರೆ ಮಾಣವು (ದು ?) ನಾಸಿಕವೇಕೆ `ವಾಸಿಸಬೇಡಾ' ಎಂದರೆ ಮಾಣವು ? (ದು ?) ತ್ವಕ್ಕು ಏಕೆ `ಸೋಂಕಬೇಡಾ' ಎಂದರೆ ಮಾಣವು ? (ದು ?)_ ಈ ಭೇದವನರಿದು ನುಡಿಯಲು ಸಮಧಾತುವಾಯಿತ್ತು! ಗುಹೇಶ್ವರಲಿಂಗಕ್ಕೆ ಒಲಿದ ಕಾರಣ, ಅಭಿಮಾನ ಲಜ್ಜೆ ಬೇಸತ್ತು ಹೋಯಿತ್ತು.
--------------
ಅಲ್ಲಮಪ್ರಭುದೇವರು
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಟ್ಟಬಯಲ ತುಟ್ಟತುದಿಯ ನಟ್ಟನಡುವಣ, ಕಟ್ಟಕಡೆಯ ಮೆಟ್ಟಿ ನೋಡಿ, ಉಟ್ಟುದನಳಿದು ಒಟ್ಟಬತ್ತಲೆಯಾದೆ. ಇನ್ನು ಬಿಟ್ಟುದ ಹಿಡಿಯಬಾರದು, ಶಿಡಿದುದ ಬಿಡಬಾರದು. ಇದಕ್ಕೆ ಒಡೆಯನಾವನೆಂದು ನೋಡಲಾಗಿ ನೋಡಿಹೆನೆಂದರೆ ನೋಟಕ್ಕಿಲ್ಲ. ಕೂಡಿಹೆನೆಂದರೆ ಕೂಟಕ್ಕಿಲ್ಲ, ಹಿಡಿದಿಹೆನೆಂದರೆ ಹಿಡಿಹಿಗಿಲ್ಲ. ಪೂಜಿಸಿಹೆನೆಂದರೆ ಪೂಜೆಗಿಲ್ಲ. ಇದ ಮೆಲ್ಲಗೆ ಓಜೆಯಿಂದ ನೋಡಿಲಾಗಿ, ನೋಡುವ ನೋಟವು ತಾನೆ, ಕೂಡುವ ಕೂಟವು ತಾನೆ, ಹಿಡಿವುದು ಆ ಹಿಡಿಗೆ ಸಿಕ್ಕಿಕೊಂಬುದು ತಾನೆ, ಪೂಜಿಸುವುದು ಪೂಜೆಗೊಂಬುದು ತಾನೆ. ನಾನಿದರ ಭೇದವನರಿದು ಆದಿ ಅನಾದಿಯನು ಏಕವ ಮಾಡಿ, ನಾನಲ್ಲೇ ಐಕ್ಯನಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಚಿತ್ರವನರಿಯದವರು ಕೋಟಲೆಯಗೊಂಡು ಬರುವರು. ಚಿತ್ರವನರಿದು ನುಂಗಿದವರು ಕೋಟಲೆಯನಳಿದು ಬಾರದೆ ಪೋದರು. ಈ ಉಭಯದ ಭೇದವನರಿದು ನುಂಗಿದವರು ಹಾಂಗಾದರು ನೋಡೆಂದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಂಗಮವೆ ತನ್ನ ಪ್ರಾಣಲಿಂಗವೆಂದರಿದ ಸದ್ಭಕ್ತಂಗೆ ಜಂಗಮದ ಪ್ರಸಾದವಿಲ್ಲದೆ ಲಿಂಗಪ್ರಸಾದವ ಕೊಳಲಾಗದು, ಜಂಗಮದ ಪ್ರಸಾದವು ಲಿಂಗಕ್ಕೆ ಸಲ್ಲದೆಂದು ಶಂಕಿಸಲಾಗದು. ಅದೆಂತೆಂದಡೆ, ವೀರಾಗಮದಲ್ಲಿ; ಜಂಗಮಾದಿಗುರೂಣಾಂ ಚ ಅನಾದಿ ಸ್ವಯಲಿಂಗವತ್ ಆದಿಪ್ರಸಾದವಿರೋಧೇ ಇಷ್ಟೋಚ್ಛಿಷ್ಟಂ ತು ಕಿಲ್ಬಿಷಂ± ಎಂದುದಾಗಿ ಪ್ರಾಣ ಭಾವದಲ್ಲಿ ಸಂಬಂಧವಾಗಿ ಇಷ್ಟಕ್ಕೂ ಸಂದಿತ್ತು. ಈ ಭೇದವನರಿದು ಜಂಗಮದ ಪ್ರಸಾದವಿಲ್ಲದೆ ಲಿಂಗದ ಪ್ರಸಾದವ ಕೊಳಲಾಗದು ವೀರಮಾಹೇಶ್ವರರು, ಕೂಡಲಸಂಗಮದೇವಾ.
--------------
ಬಸವಣ್ಣ
ನಾರೀಕೇಳ ಹುಟ್ಟಿದ ಸುಜಲವ ಅಲ್ಲಿಗೆ ಎಯ್ದಿಸಿ ಎರೆದವರಿಲ್ಲ ಅದು ಬಲಿದು ಅಲ್ಲಿಯೇ ಅರತಾಗ ಬೇರೊಂದು ಕೊಂಡುದಿಲ್ಲ. ಅಪ್ಪುವರತು ತುಪ್ಪ ತನ್ನಲ್ಲಿಯೆ ಒದಗಿದಂತೆ ನಿಶ್ಚೆ ೈಸಿದ ಮನ ವಸ್ತುವಿನಲ್ಲಿ ಕೂಡಿ ಕಾಯದ ಕರಂಡದಲ್ಲಿ ಕರಣಂಗಳರತು ಜೀವ ಕೆಟ್ಟು ಪರಮನಾದಂತೆ. ಈ ಭೇದವನರಿದು ಕಾಲನ ಗೆದ್ದು ಕಾಲಾಂತಕ ಬ್ಥೀಮೇಶ್ವರಲಿಂಗವು ತಾನಾದನು.
--------------
ಡಕ್ಕೆಯ ಬೊಮ್ಮಣ್ಣ
ತ್ರಿಪುರಂಗಳ ಸಂಹಾರವ ಮಾಡಿ, ಉದಯಕ್ಕೆ ಹುಟ್ಟಿದಾತನೆ ದಿವ್ಯಯೋಗಿ. ಅಸ್ತಮಾನಕ್ಕೆ ಅಳಿದಾತನೆ ಪರಮಯೋಗಿ. ಈ ಎರಡರ ಭೇದವನರಿದು ಅನುಭಾವಿಸಬಲ್ಲಾತನೆ ಪರಮಾನಂದಯೋಗಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕೈ ಬಾಯಾಡುವಲ್ಲಿ ಕುರುಹಿನ ಭೇದವನರಿದು ಒಡಗೂಡಬೇಕು. ಆ ಗುಣವಡಗೆ, ಬೇರೊಂದಿದಿರೆಡೆಯಿಲ್ಲದಿರೆ ಏನೂ ಎನಲಿಲ್ಲ. ಕುರುಹಿಂಗೆ ಕುರುಹ ತೋರಿ, ಅರಿವಿಂಗೆ ಅರಿವ ಕೊಟ್ಟು ನಿಜವೆ ತಾನಾಗಿದ್ದಲ್ಲಿ ಉಭಯನಾಮವಡಗಿತ್ತು ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಗುರುಭಕ್ತಿಯ ಮಾಡಿದರೆ ಮಾಡಬಹುದು ; ಲಿಂಗಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಲಿಂಗಭಕ್ತಿಯ ಮಾಡಿದರೆ ಮಾಡಬಹುದು ; ಜಂಗಮಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಜಂಗಮಭಕ್ತಿಯ ಮಾಡಿದರೆ ಮಾಡಬಹುದು, ಪ್ರಸಾದಭಕ್ತಿಯ ಮಾಡಬಾರದಯ್ಯ ಆರಿಗೆಯೂ. ಇಂತೀ ಚತುರ್ವಿಧ ಭಕ್ತಿಯ ಭೇದವನರಿದು ಇಂಬುಗೊಂಡ ಸಂಗನಬಸವಣ್ಣನೆಂಬ ಸದ್‍ಭಕ್ತಂಗೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಸ್ವಯಪ್ರಸಾದಿ ಗುರುಪ್ರಸಾದವನೊಲ್ಲ, ಲಿಂಗಪ್ರಸಾದವ ಕೊಂಬ. ಜ್ಞಾನಪ್ರಸಾದಿ ಜಂಗಮಪ್ರಸಾದವ ಕೊಂಬ, ಲಿಂಗಪ್ರಸಾದವನೊಲ್ಲ. ಮಹಾಪ್ರಸಾದಿ ಪ್ರಸನ್ನಪ್ರಸಾದವ ಕೊಂಬ, ಜಂಗಮಪ್ರಸಾದವನೊಲ್ಲ. ಇಂತೀ ತ್ರಿವಿಧಪ್ರಸಾದದ ಭೇದವನರಿದು, ಒಂದನೊಡಗೂಡಿ ಒಂದನರ್ಪಿಸಬೇಕು. ಆ ಉಭಯಪ್ರಸನ್ನಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಬಲ್ಲ ಮಹಾಪ್ರಸಾದಿಗೆ ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥ[ಸಾಕ್ಷಿಯಾಗಿ] ನಮೋ ನಮೋ ಎನುತಿದ್ದೆನು.
--------------
ಹೊಡೆಹುಲ್ಲ ಬಂಕಣ್ಣ
ಅತ್ತಲಿಂದ ಒಂದು ಪಶುವು ಬಂದು, ಇತ್ತಲಿಂದ ಒಂದು ಪಶುವು ಬಂದು, ಒಂದರ ಮೋರೆಯನೊಂದು ಮೂಸಿ ನೋಡಿದಂತೆ, ಗುರುವು ಗುರುವಿನೊಳಗೆ ಸಂಬಂಧವಿಲ್ಲ ಶಿಷ್ಯರು ಶಿಷ್ಯರೊಳಗೆ ಸಂಬಂಧವಿಲ್ಲ, ಭಕ್ತರಲಿ ಭಕ್ತರಲಿ ಸಂಬಂಧವಿಲ್ಲ. ಈ ಕಲಿಯುಗದೊಳಗುಪದೇಶವ ಮಾಡುವ ಹಂದಿಗಳಿರಾ ನೀವು ಕೇಳಿರೊ, ಗಂಡಗೆ ಗುರುವಾದಡೆ ಹೆಂಡತಿಗೆ ಮಾವನೆ ? ಹೆಂಡತಿಗೆ ಗುರುವಾದಡೆ ಗಂಡಂಗೆ ಮಾವನೆ ? ಗಂಡ ಹೆಂಡತಿಗೆ ಗುರುವಾದಡೆ ಇವರಿಬ್ಬರೇನು ಒಡಹುಟ್ಟಿದರೆ ? ಈ ಭೇದವನರಿಯದೆ ದೀಕ್ಷೆ ಕಾರಣವ ಮಾಡುವಾತ ಗುರುವಲ್ಲ. ಈ ಕಳೆಯ ಕುಲವನರಿಯದಾತ ಶಿಷ್ಯನಲ್ಲ. ಈ ಭೇದವನರಿದು ಕಾರಣವ ಮಾಡುವ ಗುರುಶಿಷ್ಯ ಸಂಬಂಧವೆಲ್ಲ ಉರಿ ಕರ್ಪುರ ಸಂಯೋಗದಂತಹುದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಾದೋದಕ ಪಾದೋದಕವೆಂದು ಒಪ್ಪವಿಟ್ಟು ನುಡಿವಿರಿ. ಪಾದೋದಕದ ಭೇದವ ಬಲ್ಲರೆ ಹೇಳಿರಿ, ಅರಿಯದಿರ್ದರೆ ಕೇಳಿರಿ. ಪಾದೋದಕವೆ ಪರಾತ್ಪರಾನಂದವು. ಆ ಆನಂದವೆ ಚಿದ್ಬಿಂದು; ಆ ಚಿದ್ಬಿಂದುವೆ ಪಾದೋದಕ. ಆ ಪಾದೋದಕವ ಶ್ರೀಗುರು ಲಿಂಗ ಜಂಗಮದ ದ್ವಿಪಾದದ ಭ್ರೂಮಧ್ಯಸ್ಥಾನದಲ್ಲಿರ್ದುದನರಿದರ್ಚಿಸಿದ ಪರಿಣಾಮವೆ ಚಿದಾನಂದಬಿಂದು ತೊಟ್ಟಿಟ್ಟುದೆ ಪಾದೋದಕವು. ಈ ಭೇದವನರಿದು ಕೊಳಬಲ್ಲರೆ ಪಾದೋದಕವೆನಬಹುದು. ಇದನರಿಯದೆ ಕೆರೆ ಬಾವಿ ಹಳ್ಳ ಹೊಳೆ ಚಿಲುಮೆ ನೀರ ತಂದು ಮನೆಗೆ ಬಂದಲ್ಲಿ ಅಗ್ಗಣಿಯೆಂಬಿರಿ. ಜಂಗಮದ ಪಾದದ ಮೇಲೆರದರೆ ತೀರ್ಥವೆಂಬಿರಿ. ತೀರ್ಥವೆಂದುಕೊಂಡು ತೃಷೆಯನಡಗಿಸಿ, ಕಡೆಯಲ್ಲಿ ಮೂತ್ರವ ಬಿಟ್ಟುಬಂದೆವು ಹೊರಗಗ್ಗಣಿಯ ತನ್ನಿ ಎಂಬ ಜಲವು ತೀರ್ಥವಲ್ಲ. ಕೊಟ್ಟಾತ ಗುರುವಲ್ಲ, ಕೊಂಡಾತ ಭಕ್ತನಲ್ಲ. ಇವರಿಬ್ಬರ ನಡತೆ ಎಂತಾಯಿತ್ತೆಂದಡೆ: ಎಕ್ಕಲ ಅಮೇಧ್ಯವ ತಿಂದು ಒಂದರ ಮೋರಿಯ ಒಂದು ಮೂಸಿ ನೋಡಿದಂತಾಯಿತ್ತೆಂದಾತ, ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ವೃಕ್ಷ ಎಲೆಗಳೆವುದಲ್ಲದೆ ತರುವಿನ ಸಲೆ ನೆಲೆ ಸಾರಗಳದು ಫಲಿಸುವುದುಂಟೆ ? ಅಂಗದಲ್ಲಿ ಸೋಂಕಿದ ಮರವೆಯ ಕಳೆಯಬಹುದಲ್ಲದೆ ಮನ ವಚನ ಕಾಯ ತ್ರಿಕರಣದಲ್ಲಿ ವೇಧಿಸಿದ ಮರವೆಯ ಹರಿವ ಪರಿಯಿನ್ನೆಂತೊ ? ಉರಿ ವೇಧಿಸಿದ ತರುವಿನಂತೆ ಅದಕ್ಕೆ ಪರಿಹರವಿಲ್ಲ. ಅರಿದು ಮಾಡುವ ದೋಷಕ್ಕೆ ಪಡಿಪುಚ್ಚವಿಲ್ಲ. ಆ ಭೇದವನರಿದು ಹರಿಯಬೇಕು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ನೀತಿಗೆ ನೀತಿ, ಜಾತಿಗೆ ಜಾತಿ ಭೇದವನರಿದು, ಕೂಟಕ್ಕೆ ಕೂಟ, ಕ್ಷೀರಕ್ಕೆ ಕ್ಷೀರ ಕೂಡಿದಂತಿರಬೇಕು. ವಾರಿಯ ವಾರಿ ಕೂಡಿದಂತಿರಬೇಕು. ಇದು ಜ್ಞಾನಿಗಳ ಮಹಾಪ್ರಕಾಶದ ಕೂಟದ ಸುಖ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->