ಅಥವಾ

ಒಟ್ಟು 177 ಕಡೆಗಳಲ್ಲಿ , 24 ವಚನಕಾರರು , 173 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣಲಿಂಗಸಂಬಂದ್ಥಿಯಾದ ಮಹಾತ್ಮನು ಅರಿಷಡ್ವರ್ಗಂಗಳರಿಯ, ಕ್ಷುತ್ತು ಪಿಪಾಸು ಶೋಕ ಮೋಹ ಜರೆ ಮರಣ ಗುಣತ್ರಯದೊಳೊಂದಿ ನಿಲ್ಲ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚದಶ ಮಾಯಾಪಟಲ ಹರಿದು ಮರೆದು ಮಹಾಘನ ಬೆಳಗಿನ ಸುಖವ ಸುಗ್ಗಿಯೊಳಿರ್ದು ಪ್ರಾಣಲಿಂಗವನರ್ಚಿಸುತ್ತಿಹನು ಭಕ್ತಿತ್ರಯಗೂಡಿ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇಂದ್ರಲೋಕದವರೆಲ್ಲರೂ ಸೂತಕಲಾಸಂಹಾರಿ ಬಸವ ಎಂದೆಂಬರು. ಚಂದ್ರಲೋಕದವರೆಲ್ಲರೂ ಷೋಡಶಕಲಾ ಪರಿಪೂರ್ಣ ಬಸವಾ ಎಂದೆಂಬರು. ಯುಗಕೋಟಿಬ್ರಹ್ಮರೆಲ್ಲರೂ ಪರಶಿವ ಬಸವಾ ಎಂದೆಂಬರು. ಹರಿವಿರಿಂಚಿಗಳೆಲ್ಲರೂ ಗುರುಲಿಂಗ ಬಸವಾ ಎಂದೆಂಬರು. ಅಷ್ಟದಿಕ್ಪಾಲಕರೆಲ್ಲರೂ ಪರಶಿವ ಬಸವಾ ಎಂದೆಂಬರು. ಸುರಪಡೆಯಲ್ಲಾ ಅಮೃತಸಾಗರ ಬಸವಾ ಎಂದೆಂಬರು. ನವನಾಥಸಿದ್ಧರೆಲ್ಲರೂ ಪರಮಘುಟಿಕೆ ಬಸವಾ ಎಂದೆಂಬರು. ಲಂಬೋದರ ಕುಂಭೋದರ ದಾರುಕ ರೇಣುಕ ಗೌರೀಸುತ ತಾಂಡವರೆಲ್ಲರೂ ಸಕಲಜೀವಚೈತನ್ಯ ಮಾತ್ರ ಬಸವಾ ಎಂದೆಂಬರು. ಓತವರೆಲ್ಲರೂ ಮಾತಾಪಿತ ಬಸವಾ ಎಂದೆಂಬರು. ಒಲಿದವರೆಲ್ಲರೂ ಪ್ರಾಣ ಪರಿಣಾಮಿ ಬಸವಾ ಎಂದೆಂಬರು. ಆನೇನೆಂಬೆನು, ಉಪಮಿಸಬಾರದ ಮಹಾಘನ ಮಹಿಮನ.
--------------
ಮಡಿವಾಳ ಮಾಚಿದೇವ
ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು, ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ನಿಷ್ಕಳಂಕಾತ್ಮನು ನಿಜಪ್ರಕೃತಿವಶದಿಂ ಮನ ನೆನಹು ಭಾವದೆ ತ್ರಿವಿಧಸ್ವರೂಪವಾಯಿತ್ತು. ಆ ಮನವೊಗ್ದಿದುದೆ ನೆನಹಿಗೆ ಬಂದಿತ್ತು. ಅದೇ ಭಾವದಲ್ಲಿ ತೋರಿತ್ತು ; ಅದೇ ಪ್ರಾಣವಾಯಿತ್ತು ; ಅದೇ ಚೈತನ್ಯಸ್ವರೂಪಮಾಗಿ ತನುವನೆಳದಾಡಿತ್ತು. ಅದಕ್ಕೆ ವಾಯುವೇ ಅಂಗವಾಗಿ ಕರ್ಮಾದ್ಥೀನಮೆನಿಸಿ, ತಾನೆಂಬಹಂಕಾರದಿಂ ತನ್ನ ತಾ ಮರೆತು ತೊಳಲಿಬಳಲುತ್ತಿರಲು, ಅನೇಕಜನ್ಮ ಸಂಚಿತಕರ್ಮ ಸಮೆದು, ಗುರುಕರುಣ ನೆಲೆಗೊಂಡಲ್ಲಿ ಗಗನಾಂಗಿಯಾಗಿ, ಆ ಮನಕ್ಕೆ ತಾನೇ ಆಧಾರಮಾಗಿ, ತಾನೇ ಪರಮನಾಗಿ, ತಾನೇ ಪ್ರಸನ್ನಮಾಗಿರ್ದ ಮಹಾಜಾÕನಶಕ್ತಿಯಂ ಕಂಡದರೊಳಗೆ ಕೂಡಿ, ಸಾಧಕಕ್ಕೊಳಗಾದ ಮನವೇ ಘನವಾಯಿತ್ತು. ಆ ಘನವೇ ಲಿಂಗವಾಯಿತ್ತು, ಆ ಲಿಂಗವೇ ಪ್ರಾಣವಾಯಿತ್ತು, ಆ ಪ್ರಾಣವೇ ಪರಮಾತ್ಮಸ್ವರೂಪಮಾಗಿ ತತ್ತ್ವಮಸಿಪದದಿಂದತ್ತತ್ತ ಹಮ್ಮನಳಿದು ಸುಮ್ಮನೆಯಾದುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯ ಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶ್ರೀಗುರುವಿನಿಂದದ್ಥಿಕರು ಆವ ಲೋಕದೊಳಗಿಲ್ಲವಯ್ಯಾ. ಶ್ರೀಗುರುವಿನಂತೆ ಪರೋಪಕಾರಿಗಳ ಮತ್ತಾರನೂ ಕಾಣೆನಯ್ಯಾ. ಅದೆಂತೆಂದೊಡೆ : ಎನ್ನ ಕಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕಿವಿಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ನಾಸಿಕ ನಾಲಗೆಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕರಚರಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ತನುಮನಪ್ರಾಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಸಕಲಕರಣೇಂದ್ರಿಯಂಗಳ ಭಕ್ತರ ಮಾಡಿದನಯ್ಯ ಶ್ರೀಗುರು ಪರಮಶಿವಲಿಂಗಕ್ಕೆ. ಇಂತಿವು ಮೊದಲಾಗಿ ಎನ್ನ ಸರ್ವ ಅವಯವಂಗಳನೆಲ್ಲ ಸದ್ಭಕ್ತರ ಮಾಡಿ ಲಿಂಗಾರ್ಪಿತಕ್ಕೆ ಅನುಗೊಳಿಸಿದ ಶ್ರೀಗುರುವಿನ ಮಹಾಘನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಗುರುವೇ, ನೀನು ನನ್ನ ಲಿಂಗಕ್ಕೆ ಮಂಗಳಸೂತ್ರವಂ ಕಟ್ಟಿ ಕೊಟ್ಟಂದಿಂದ ಅನ್ಯವನರಿಯದೆ, ಆ ಲಿಂಗದಲ್ಲೇ ನಡೆವುತ್ತಿರ್ಪೆನು, ಆ ಲಿಂಗದಲ್ಲೇ ನುಡಿವುತ್ತಿರ್ಪೆನು, ಆ ಲಿಂಗದ ನಟನೆಯಂ ನೆನವುತ್ತಿರ್ಪೆನು, ಆ ಲಿಂಗದ ಮಹಿಮೆಯನೆ ಪಾಡುತ್ತಿರ್ಪೆನು, ಆ ಲಿಂಗವನೆ ಬೇಡುತ್ತಿರ್ಪೆನು, ಆ ಲಿಂಗವನೆ ಕಾಡುತ್ತಿರ್ಪೆನು, ಆ ಲಿಂಗವನೆ ಕೊಸರುತ್ತಿರ್ಪೆನು, ಆ ಲಿಂಗವನೆ ಅರಸುತ್ತಿರ್ಪೆನು, ಆ ಲಿಂಗವನೆ ಬೆರಸುತ್ತಿರ್ಪೆನು, ಆ ಲಿಂಗವಲ್ಲದೆ ಮತ್ತಾರನೂ ಕಾಣೆನು, ಮತ್ತಾರಮಾತನೂ ಕೇಳೆನು, ಮತ್ತಾರನೂ ಮುಟ್ಟೆನು, ಮತ್ತಾರನೂ ತಟ್ಟೆನು. ಲಿಂಗವು ನಾನು ಇಬ್ಬರೂ ಇಲ್ಲದ ಕಾರಣ ಎಲ್ಲವೂ ನನಗೆ ಏಕಾಂತಸ್ಥಾನವಾಯಿತ್ತು. ಎಲ್ಲೆಲ್ಲಿಯೂ ಯಾವಾಗಲೂ ಎಡೆವಿಡದೆ ಲಿಂಗದಲ್ಲೇ ರಮಿಸುತಿರ್ದೆನು. ಲಿಂಗದಲ್ಲೇ ಕಾಲವ ಕ್ರಮಿಸುತ್ತಿರ್ದೆನು ಲಿಂಗದಲ್ಲೇ ಎನ್ನಂಗಗುಣಂಗಳಂ ಕ್ಷಮಿಸುತ್ತಿರ್ದೆನು ಲಿಂಗದೊಳಗೆ ನನ್ನ, ನನ್ನೊಳು ಲಿಂಗದ ಚಲ್ಲಾಟವಲ್ಲದೆ, ಬೇರೊಂದು ವಸ್ತುವೆನಗೆ ತೋರಲಿಲ್ಲ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಏನೂ ಏನೂ ಎನಲಿಲ್ಲದಂದು ಮಹಾಘನಕ್ಕೆ ಘನವಾದ ಮಹಾಘನ ನಿರಂಜನಾತೀತಪ್ರಣವದ ನೆನಹು ಮಾತ್ರದಲ್ಲಿ ನಿರಂಜನಪ್ರಣವ ಉತ್ಪತ್ಯವಾಯಿತ್ತು. ಆ ನಿರಂಜನಪ್ರಣವದ ನಿರ್ದೇಶ ಸ್ಥಲದ ವಚನವೆಂತೆಂದಡೆ : ಅವಾಚ್ಯಪ್ರಣವ ಕಲಾಪ್ರಣವ ಉತ್ಪತ್ಯವಾಗದತ್ತತ್ತ , ಪ್ರಣವನಾದ ಪ್ರಣವಬಿಂದು ಪ್ರಣವಕಲೆಗಳುತ್ಪತ್ಯವಾಗದತ್ತತ್ತ , ನಿರಂಜನಪ್ರಣವವಾಗಿದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅನಂತಸಾಧಕಂಗಳ ಕಲಿತ ಆಯಗಾರನು, ಅಭ್ಯಾಸಿಗಳಿಗೆ ಸಾಧಕವ ಕಲಿಸುವನಲ್ಲದೆ ತಾ ಮರಳಿ ಅಭ್ಯಾಸವ ಮಾಡುವನೆ ಅಯ್ಯಾ ? ಅಖಂಡಪರಿಪೂರ್ಣಬ್ರಹ್ಮವನೊಡಗೂಡಿದ ಮಹಾಘನ ಪರಮ ಶಿವಶರಣನು, ಸತ್‍ಕ್ರಿಯವನಾಚರಿಸಿದಡೂ ಲೋಕೋಪಕಾರವಾಗಿ ಆಚರಿಸುವನಲ್ಲದೆ ಮರಳಿ ತಾನು ಫಲಪದದ ಮುಕ್ತಿಯ ಪಡೆವೆನೆಂದು ಆಚರಿಸುವನೆ ಅಯ್ಯಾ ? ಇದು ಕಾರಣ, ನಿಮ್ಮ ಶರಣನು ಎಷ್ಟು ಸತ್ಕ್ರಿಯವನಾಚರಿಸಿದಡು ಘೃತಸೋಂಕಿದ ರಸನೆಯಂತೆ, ಕಾಡಿಗೆ ಹತ್ತಿದ ಆಲಿಯಂತೆ, ಹುಡಿ ಹತ್ತದ ಗಾಳಿಯಂತೆ ನಿರ್ಲೆಪನಾಗಿರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮೂರುಕಾಲ ಮಣಿಯನೇರಿ ಹತ್ತಿಯನರೆವ ಹೆಂಗಳೆಯ ಚಿತ್ತ ಕಾಲವಿಡಿದು, ಕಾಳವಿಸರ್ಜಿಸಿ ಅರಳೆಯ ತನ್ನತ್ತಲೆಳಹುವದು. ಕ್ರಿಯಾಪಾದ ಜ್ಞಾನಪಾದ ಚರ್ಯಾಪಾದವೆಂಬ ಪಾದತ್ರಯದಮೇಲಿರ್ದ ಶರಣನ ಚಿತ್ತ, ಸೂಕ್ಷ್ಮಸುವಿಚಾರವಿಡಿದು ಕರಣೇಂದ್ರಿಯ ವಿಷಯಕಾಠಿಣ್ಯ ಪ್ರಕೃತಿಯ ದೂಡುತ್ತ ಸ್ವಚ್ಫ ಸೂಕ್ಷ್ಮತರಭಾವವೇದಿ ಮಹಾಘನ ಪ್ರಕಾಶವ ನೆರೆಯಲೆಳಹುವುದು ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಜಂಗಮಫಲವೆಲ್ಲವೂ ದೇವತೆಗಳಾಹಾರವು; ಸ್ಥಾವರಫಲವೆಲ್ಲವೂ ಮನುಷ್ಯರಾಹಾರವು. ಅದೆಂತೆಂದೊಡೆ : ದೇವತಾಬಿಂದುವಿನಲ್ಲಿ ಮನುಷ್ಯಕೃತ್ಯದಿಂದುದ್ಭವಿಸುವುದೆಲ್ಲ ಸ್ಥಾವರವು; ಮನುಷ್ಯ ಬಿಂದುವಿನಲ್ಲಿ ದೇವತಾ ಕೃತ್ಯದಿಂದುದ್ಭವಿಸುವುದೆಲ್ಲ ಜಂಗಮವು. ಮನುಷ್ಯರು ಶೂದ್ರಮುಖದಿಂ ಕೊಂಬುತಿರ್ಪರು. ದೇವತೆಗಳು ಬ್ರಾಹ್ಮಣಮುಖದಿಂ ಕೊಂಬುತಿರ್ಪರು. ಪೃಥ್ವಿಯಲ್ಲಿ ಎಂಬತ್ತುನಾಲ್ಕುಲಕ್ಷವಿಧ ಜಂಗಮಗಳು ಹೇಗೋ ದೇವತೆಗಳಲ್ಲಿಯೂ ಹಾಗೆ. ದೇವತೆಗಳು ತಮ್ಮ ಕರ್ಮಫಲವು ತೀರಿದೊಡೆ, ತದ್ಧೋಷ ಕರ್ಮಾನುಸಾರಮಾಗಿ ಪಂಚಾಶಲ್ಲಕ್ಷ ದೇಹಗಳೊಂದಂ ಹೊಂದಿ ಆಯಾ ಆಹಾರಂಗಳಂ ಭುಂಜಿಸುತ್ತಾ. ತದಾನುಗುಣ್ಯಮಾಗಿ ಕ್ರೀಡಿಸುತ್ತರ್ಪಂದದಿ, ಮನುಷ್ಯನು ಇಹಲೋಕಕರ್ಮವು ತೀರಿದಲ್ಲಿ ಆ ಕರ್ಮಫಲಕ್ಕೆ ತಕ್ಕ ಮರಣವಂ ಹೊಂದಿ, ದೇವತಾ ಪಿಶಾಚಾಂತಮಾದ ದೇಹಗಳೊಳೊಂದು ದೇಹವನ್ನೆತ್ತಿ, ಸುಖದುಃಖಗಳನನುಭವಿಸುತ್ತಾ ತನ್ನ ಅದ್ಥಿಕಾರಕ್ಕೆ ದೇವತೆಯನ್ನು ಗ್ರಹಿಸಿ, ಆ ದೇವತಾಮುಖದಿಂ ಆಹಾರಂಗಳಂ ಗ್ರಹಿಸುವಂತೆ, ಆ ದೇವತೆಗಳು ತಮ್ಮ ಅದ್ಥಿಕಾರಕ್ಕನುಗುಣವಾಗಿ ಮನುಷ್ಯರಂ ಗ್ರಹಿಸಿ, ಆ ಮನುಷ್ಯಮುಖದಿಂ ಆಹಾರಂಗಳಂ ಕೊಂಬುತಿರ್ಪರು. ದೇವೆತಗಳಿಗೆ ಮಂತ್ರದಿಂದಾವಾಹನೋಚ್ಚಾಟನೆಗಳು, ಮನುಷ್ಯರಿಗೆ ತಂತ್ರದಿಂದಾವಾಹನೋಚ್ಚಾಟನೆಗಳು. ಮನುಷ್ಯರಿಗೆ ತಂತ್ರದಿಂ ಕೂಡಿದ ಮಂತ್ರವು, ದೇವತೆಗಳಿಗೆ ಮಂತ್ರದಿಂ ಕೂಡಿದ ತಂತ್ರವು, ಇಂತು ಮನುಷ್ಯರೂಪದಿಂದ ಸತ್ತು. ದೇವತಾರೂಪದಿಂ ಹುಟ್ಟುತ್ತಿರ್ಪ ದಂದುಗವಂ ಬಿಡಿಸಿ, ನಿನ್ನಲ್ಲಿ ಸತ್ತು ಹುಟ್ಟುತ್ತಿರ್ಪ ನಿಜಸುಖವಂ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಏನು ಏನೂ ಎನಲಿಲ್ಲದ ಮಹಾಘನ ನಿರಂಜನಾತೀತದ ನೆನಹುಮಾತ್ರದಲ್ಲಿಯೆ ನವಪದ್ಮ ನವಶಕ್ತಿಗಳುತ್ಪತ್ಯ ಲಯವು. ನಿಶ್ಶಬ್ದವೆಂಬ ಪರಬ್ರಹ್ಮದ ನೆನಹುಮಾತ್ರದಲ್ಲಿಯೆ ಏಕಾಕ್ಷರ ತ್ರಯಾಕ್ಷರ ಸಹಸ್ರಾಕ್ಷರ ಅಷ್ಟನಾದ ಉತ್ಪತ್ಯ ಲಯವು. ದಶಚಕ್ರ ಮೊದಲಾಗಿ, ಚತುರ್ವೇದ ಗಾಯತ್ರಿ ಅಜಪೆ ಕಡೆಯಾಗಿ, ಸಮಸ್ತವು ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದಲ್ಲಿ ಉತ್ಪತ್ಯ ಲಯವೆಂದು ಬೋದ್ಥಿಸಿ ಕೃತಾರ್ಥನ ಮಾಡಿದ ಮಹಾಗುರುವಿನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮಹಾಘನ ಅಪರಂಪರ ಅಗಮ್ಯ ಅಗೋಚರ ಅಪ್ರಮಾಣ ನಿಶ್ಚಿಂತ ನಿರಾಕುಳ ನಿರ್ಭರಿತ ನಿರಂಜನ ನಿರಪೇಕ್ಷ ನಿರಾಮಯ ನಿಃಶೂನ್ಯ ನಿರಾಧಾರ ನಿಷ್ಪತಿ ನಿರಾಳ ನಿಷ್ಕಲಲಿಂಗ ತಾನೇ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪ್ರಣವಸ್ವರೂಪಮಾದ ಪರಬ್ರಹ್ಮವೇ ತಾನು ತನ್ನ ನಿಜಲೀಲಾನಿಮಿತ್ತ ತ್ರಿವರ್ಣರೂಪಕಮಾಗಿ, ಅದೇ ಹರಿಹರಬ್ರಹ್ಮಸ್ವರೂಪಮಾಗಿ, ಹರಿಯೇ ಶರೀರಮಾಗಿ, ಹರನೇ ಜೀವಮಾಗಿ, ಬ್ರಹ್ಮನೇ ಮನಸ್ಸಾಗಿ, ಆ ಬ್ರಹ್ಮಸ್ವರೂಪಮಾದ ಕಲೆಯೇ ಶರೀರಕ್ಕೆ ಶಕ್ತಿಯಾಗಿ, ಆ ಶರೀರಸ್ವರೂಪಮಾದ ಬಿಂದುವೇ ಪ್ರಾಣಕ್ಕೆ ಶಕ್ತಿಯಾಗಿ, ಆ ಪ್ರಾಣಸ್ವರೂಪಮಾದ ನಾದವೇ ಮನಶ್ಶಕ್ತಿಯಾಗಿ, ಆ ಪ್ರಾಣಕ್ಕೆ ನಾಸಿಕವೇ ಸ್ಥಾನಮಾಗಿ, ಮನಸ್ಸಿಗೆ ಜಿಹ್ವೆಯೇ ಸ್ಥಾನಮಾಗಿ, ಶರೀರಕ್ಕೆ ನೇತ್ರವೇ ಸ್ಥಾನಮಾಗಿ, ತನು ಸ್ಪರುಶನಸ್ವರೂಪು, ಮನಸ್ಸು ಶಬ್ದಸ್ವರೂಪು, ಪ್ರಾಣ ಆತ್ಮಸ್ವರೂಪು. ಈ ತನು ಮನಃಪ್ರಾಣಂಗಳಿಂದೊಗೆದ ಆತ್ಮಾದಿ ಷಡ್ಭೂತಂಗಳಿಗೆ ಆತ್ಮಾದಿ ಷಡ್ಭೂತವೇ ಕಾರಣಮಾಗಿ, ಜೀವನದಲ್ಲಿ ಹುಟ್ಟಿದ ಸತ್ವಗುಣವು ಶರೀರವನಾವರಿಸಿ, ಆ ಜೀವನಿಗೆ ತಾನೇ ಸ್ಥಿತಿಕರ್ತೃವಾಯಿತ್ತು. ಶರೀರದಲ್ಲಿ ಹುಟ್ಟಿದ ತಮೋಗುಣವು ಜೀವನನಾವರಿಸಿ, ಆ ಶರೀರಕ್ಕೆ ತಾನೇ ಸಂಹಾರಕರ್ತೃವಾಯಿತ್ತು. ಆ ಶರೀರ ಜೀವಸಂಗದಿಂದೊಗೆದ ಅಹಂಕಾರಸ್ವರೂಪಮಾದ ರಜೋಗುಣವು ಮನಮನಾವರಿಸಿ, ಈ ಎರಡಕ್ಕೂ ತಾನೇ ಸೃಷ್ಟಿಕರ್ತೃವಾಯಿತ್ತು. ಆ ನಾದವೇ ವಾಗ್ದೇವಿಯಾಗಿ, ಬಿಂದುವೇ ಮಹಾದೇವಿಯಾಗಿ, ಕಳೆಯೇ ಮಹಾಲಕ್ಷ್ಮಿಯಾಗಿ, ಈ ತನು ಮನಃಪ್ರಾಣಂಗಳನು ಮರುಳುಮಾಡಿತ್ತು. ಜಾಗ್ರತ್ಸ್ವಪ್ನಸುಷುಪ್ತ್ಯಾದ್ಯವಸ್ಥೆಗಳೊಳಗೆ ಹೊಂದಿಸಿ, ಮುಂದುಗಾಣಲೀಯದೆ, ಸೃಷ್ಟಿಸ್ಥಿತಿಸಂಹಾರಂಗಳಲ್ಲಿ ತೊಳಲಿಬಳಲಿಸುತ್ತಿರಲು, ಆ ಕಳೆಯಲ್ಲಿ ಕೂಡಿ ಶರೀರವು ಉಬ್ಬುತ್ತಾ, ಆ ನಾದದಲ್ಲಿ ಕೂಡಿ ಮನಸ್ಸು ಕೊಬ್ಬುತ್ತಾ, ಆ ಶಕ್ತಿಯಲ್ಲಿ ಕೂಡಿ ಪ್ರಾಣ ಬೆಬ್ಬನೆ ಬೆರೆವುತ್ತಾ, ಭವಭವದೊಳು ತೊಳಲುತ್ತಿರಲು, ಗುರುಕಟಾಕ್ಷದಿಂ ಕರ್ಮವು ಸಮೆದು ಧರ್ಮವು ನೆಲೆಗೊಳ್ಳಲು, ಆ ಮೇಲೆ ಮಹಾಜ್ಞಾನಶಕ್ತಿಯಾಯಿತ್ತು ಆ ಬಿಂದುವೇ ಆನಂದಶಕ್ತಿಯಾಯಿತ್ತು ಆ ಕಳೆಯೇ ನಿಜಶಕ್ತಿಯಾಯಿತ್ತು ಇಂತು ಸತ್ಯಜ್ಞಾನಾನಂದಸ್ವರೂಪಮಾದ ಶಕ್ತಿಮಹಿಮೆಯಿಂದ ಶರೀರವೇ ವಿಷ್ಣುವಾಗಲು, ಅಲ್ಲಿ ಶ್ರೀಗುರುಸ್ವರೂಪಮಾದ ಇಷ್ಟಲಿಂಗವು ಸಾಧ್ಯಮಾಯಿತ್ತು. ಆ ಪ್ರಾಣವೇ ರುದ್ರಸ್ವರೂಪವಾಗಲು, ಜಂಗಮಮೂರ್ತಿಯಾದ ಪ್ರಾಣಲಿಂಗವು ಸಾಧ್ಯವಾಯಿತ್ತು. ಮನಸ್ಸೇ ಬ್ರಹ್ಮಸ್ವರೂಪವಾಗಲು, ಲಿಂಗಾಕಾರಮಾದ ಭಾವಲಿಂಗವು ಸಾಧ್ಯಮಾಯಿತ್ತು. ಆ ಲಿಂಗಗಳೇ ಆತ್ಮಾದಿ ಷಡ್ಭೂತಂಗಳಲ್ಲಿ ಆಚಾರಾದಿ ಮಹಾಲಿಂಗಂಗಳಾದವು. ಆ ಶಕ್ತಿಗಳೇ ಕ್ರಿಯಾದಿ ಶಕ್ತಿಯರಾದರು. ಆ ಶಕ್ತಿಮುಖದಲ್ಲಿ ತಮ್ಮಲ್ಲಿ ಹುಟ್ಟಿದ ನಾನಾವಿಷಯ ಪದಾರ್ಥಂಗಳನ್ನು ಆಯಾ ಲಿಂಗಂಗಳಿಗರ್ಪಿಸಿ, ತತ್ಸುಖಾನುಭವದೊಳೋಲಾಡುತ್ತಿರಲು, ಆ ಶಕ್ತಿಗಳೇ ಲಿಂಗಶಕ್ತಿಗಳಾಗಿ, ತಾವೇ ಆಯಾ ಲಿಂಗಸ್ವರೂಪ ಶರೀರ ಪ್ರಾಣ ಮನೋಭಾವಂಗಳಳಿದು, ಲಿಂಗಭಾವ ನೆಲೆಗೊಂಡಲ್ಲಿ, ಸತ್ವರಜಸ್ತಮೋಗುಣಗಳು ಜ್ಯೋತಿಯೊಳಗಡಗಿದ ಕತ್ತಲೆಯಂತೆ, ತಮ್ಮ ನಿಜದಲ್ಲಿ ತಾವೇ ಲೀನವಾದವು. ಬಿಂದು, ಶರೀರದೊಳಗೆ ನಿಂದು ಆನಂದರೂಪಮಾಯಿತ್ತು. ನಾದವು ಪ್ರಾಣದೊಳಗೆ ಬೆರೆದು ನಿಶ್ಶಬ್ದನಿರೂಪಮಾದ ಜ್ಞಾನಮಾಯಿತ್ತು. ಕಳೆ ಮನದೊಳಗೆ ಬೆರದು, ಪರಬ್ರಹ್ಮ ಸ್ವರೂಪಮಾಗಿ ನಿಜಮಾಯಿತ್ತು . ಆ ಆನಂದವೇ ಇಷ್ಟಲಿಂಗರೂಪಮಾಗಿ, ಜ್ಞಾನವೇ ಪ್ರಾಣಲಿಂಗಸ್ವರೂಪಮಾಗಿ, ಆ ನಿಜವೇ ಭಾವಲಿಂಗಮೂರ್ತಿಯಾಗಲು, ಆ ಕರ್ಮ ಧರ್ಮ ವರ್ಮಂಗಳಡಗಿದವು. ಆತ್ಮಾದಿ ಷಡ್ಭೂತಂಗಳು ಆಚಾರಾದಿ ಮಹಾಲಿಂಗಂಗಳೊಳಗೆ ಲೀನಮಾಗಲು, ಆ ಆರುಲಿಂಗಂಗಳೇ ಈ ಮೂರುಲಿಂಗಂಗಳೊಳಗೆ ಬೆರೆದು, ಇಷ್ಟವೇ ಪ್ರಾಣಮಾಗಿ, ಭಾವಸಂಗದೊಳಗೆ ಪರವಶಮಾಗಿ, ತಾನುತಾನೆಯಾಗಿ, ತನ್ನಿಂದನ್ಯವೇನೂ ಇಲ್ಲದೆ ನಿಬ್ಬೆರಗಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಎನ್ನ ತನು ಬಸವಣ್ಣನಲ್ಲಿ ಅಡಗಿತ್ತು. ಎನ್ನ ಮನ ಚೆನ್ನಬಸವಣ್ಣನಲ್ಲಿ ಅಡಗಿತ್ತು. ಎನ್ನ ಪ್ರಾಣ ಪ್ರಭುದೇವರಲ್ಲಿ ಅಡಗಿತ್ತು. ಎನ್ನ ಸರ್ವಾಂಗದ ಸಕಲಕರಣಂಗಳೆಲ್ಲವು ನಿಮ್ಮ ಶರಣರ ಶ್ರೀಪಾದದಲ್ಲಿ ಅಡಗಿದವು ಮಹಾಘನ ಶಾಂತಮಲ್ಲಿಕಾರ್ಜುನ.
--------------
ವೀರಣ್ಣದೇವರು (ಕರಸ್ಥಲದ ವೀರಣ್ಣೊಡೆಯರು)
ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ, ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ; ಬಿಂದುಮಯವಾದ ಶರೀರದಲ್ಲಿ ರೂಪು ನಾದಮಯಮಾದ ಪ್ರಾಣದಲ್ಲಿ ನಾಮ ಕಳಾಮಯಮಾದ ಮನದಲ್ಲಿ ಕ್ರಿಯೆ ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ, ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು, ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು. ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು . ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು. ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು . ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ, ಆ ಬಿಂದುವೇ ಆದಿಶಕ್ತಿಮಯಮಾಯಿತ್ತು. ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ, ಆ ನಾದವೇ ಪರಾಶಕ್ತಿಯಾಯಿತ್ತು. ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ, ಆ ಕಳೆಯೇ ಜ್ಞಾನಶಕ್ತಿಯಾಯಿತ್ತು. ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ, ಪ್ರಾಣವು ಗುರುವಿನಿಂದ ಪವಿತ್ರಮಾಗಿ, ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇನ್ನಷ್ಟು ... -->