ಅಥವಾ

ಒಟ್ಟು 311 ಕಡೆಗಳಲ್ಲಿ , 35 ವಚನಕಾರರು , 280 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರವೆಯ ತಮವ ಕಳೆಯಯ್ಯ. ಅರುಹಿನ ಜ್ಯೋತಿಯ ಬೆಳಗಯ್ಯ. ಅರುಹಿನ ಜ್ಯೋತಿಯ ಬೆಳಗಿ, ನಿಮ್ಮ ಕುರುಹ ಕಂಡು ಕೂಡುವ ತುರ್ಯಾವಸ್ಥೆಯ ಸುಖವನೆ ಕೊಡು ಕಂಡ ಮಹಾಲಿಂಗ ತಂದೆ. ಕೊಡದಿರ್ದಡೆ ನಿನಗೆ ಪ್ರಮಥರಾಣೆ, ಬಸವಣ್ಣನಾಣೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಹುಟ್ಟಿತ್ತಲ್ಲಾ ಉಂಟೆನಿಸಿತ್ತಲ್ಲಾ. ಕರುವಿಟ್ಟಿತ್ತಲ್ಲಾ ರೂಪಾಯಿತ್ತಲ್ಲಾ. ನೋಡ ನೋಡ ವಾಯುಗುಂದಿತ್ತಲ್ಲಾ. ನೋಡ ನೋಡ ಭಾವಗುಂದಿತ್ತಲ್ಲಾ. ಅರಿವು ವಿಕಾರದಲ್ಲಿ ಆಯಿತ್ತು, ಹೋಯಿತ್ತು, ಮಹಾಲಿಂಗ ತ್ರಿಪುರಾಂತಕಾ, ನಿಮಗೆರಗದ ತನು.
--------------
ಕಿನ್ನರಿ ಬ್ರಹ್ಮಯ್ಯ
ಹೊಸ ಮದುವೆ ಹಸೆಯುಡುಗದ ಮುನ್ನ, ಹೂಸಿದ ಅರಿಸಿನ ಬಿಸಿಲಿಂಗೆ ಹರಿಯದ ಮುನ್ನ, ತನು ಸಂಚಲವಡಗಿ ಮನವು ಗುರುಕಾರುಣ್ಯವ ಪಡೆದು ಹುಸಿಯಿಲ್ಲದಿರ್ದಡೆ ಭಕ್ತನೆಂಬೆ! ಹಿಡಿಹಿಂಗಿಲ್ಲದಿರ್ದಡೆ ಮಾಹೇಶ್ವರನೆಂಬೆ! ತನುವಿಲ್ಲದಿರ್ದಡೆ ಪ್ರಸಾದಿಯೆಂಬೆ! ಜೀವವಿಲ್ಲದಿರ್ದಡೆ ಪ್ರಾಣಲಿಂಗಿಯೆಂಬೆ! ಆಶೆಯಿಲ್ಲದಿರ್ದಡೆ ಶರಣನೆಂಬೆ! ಈ ಐದರ ಸಂಪರ್ಕ ನಿರ್ಭೋಗವಾದಡೆ ಐಕ್ಯನೆಂಬೆ! ಐಕ್ಯದ ಸಂತೋಷ ಹಿಂಗಿದಡೆ ಜ್ಯೋತಿರ್ಮಯನೆಂಬೆ! ಈ ಹೀಂಗಾದ ದೇಹವನಿರಿದಡರಿಯದು ತರಿದಡರಿಯದು. ಬೈದಡರಿಯದು; ಹೊಯ್ದಡರಿಯದು. ನಿಂದಿಸಿದಡರಿಯದು; ಸ್ತುತಿಸಿದಡರಿಯದು. ಸುಖವನರಿಯದು; ದುಃಖವನರಿಯದು. ಇಂತಿವರ ತಾಗು ನಿರೋಧವನರಿಯದಿರ್ದಡೆ ಅವರ ಮಹಾಲಿಂಗ ಗಜೇಶ್ವರನೆಂಬೆ.
--------------
ಗಜೇಶ ಮಸಣಯ್ಯ
ಹೊನ್ನು ಪ್ರಾಣನಾಯಕ, ಹೆಣ್ಣು ಜೀವರತ್ನ, ಮಣ್ಣು ಮೈಸಿರಿಯ ಕೇಡು. ಈ ಮೂರು, ಮಹಾಲಿಂಗ ಚೆನ್ನರಾಮಯ್ಯಂಗೆ ಸಲ್ಲಲಿತವಲ್ಲ.
--------------
ಮೈದುನ ರಾಮಯ್ಯ
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು ? ಸಕಳೇಶ್ವರದೇವಾ, ನೀನೆ ಬಲ್ಲೆ.
--------------
ಸಕಳೇಶ ಮಾದರಸ
ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಶ್ರೀರುದ್ರಾಕ್ಷಿಯ ಹಸ್ತ ತೋಳು ಉರ ಕಂಠ ಮೊದಲಾದ ಸ್ಥಾನಂಗಳಲ್ಲಿ ಧರಿಸಿ, ಶಿವಾರ್ಚನೆಯ ಮಾಡುವುದು ಸದಾಚಾರ, ಅದೇ ಸದ್ಯೋನ್ಮುಕ್ತಿ. ಅದು ಕಾರಣ, ಆ ಮಹಾರುದ್ರಾಕ್ಷಿಯ ಧರಿಸಿ, ಎನ್ನ ಭವಂ ನಾಸ್ತಿಯಾತಿತ್ತು. ಮಹಾಲಿಂಗ ಕಲ್ಲೇಶ್ವರಾ, ರುದ್ರಾಕ್ಷಿಯಿಂದೆ ಕೃತಾರ್ಥನಾದೆನು.
--------------
ಹಾವಿನಹಾಳ ಕಲ್ಲಯ್ಯ
ಗುರುಕರುಣಾಮೃತವಿಲ್ಲದ ಭಕ್ತಿಯ ಅನು, ಮನದಲನುಕರಿಸುವ ಜೀವಿಗಿನ್ನೆಲ್ಲಿಯದೊ ? ಸತ್ಕ್ರಿಯೆ ಸತ್ಪಥವಿನ್ನೆಲ್ಲಿಯದೊ ? ಇದು ಕಾರಣ, ಮಹಾಲಿಂಗ ಕಲ್ಲೇಶ್ವರದೇವ ಲಿಂಗ ಜಂಗಮ ಕರುಣವಿಲ್ಲದ ಜಡಮತಿಗಿನ್ನೆಲ್ಲಿಯದೊ ?
--------------
ಹಾವಿನಹಾಳ ಕಲ್ಲಯ್ಯ
ಕಲ್ಲೊಳಗಣ ಕಿಚ್ಚು ಉರಿಯದ ಪರಿಯಂತೆ, ಬೀಜದೊಳಗಣ ವೃಕ್ಷ ಉಲಿಯದ ಪರಿಯಂತೆ, ಪುಷ್ಪದ ಕಂಪು ನನೆಯಲ್ಲಿ ತೋರದಂತೆ, ಚಂದ್ರಕಾಂತದ ಉದಕ ಒಸರದ ಪರಿಯಂತೆ, ಮಹಾಲಿಂಗ ಕಲ್ಲೇಶ್ವರನಲ್ಲಿ ಲಿಂಗೈಕ್ಯ. ಇಹವೆನ್ನ ಪರವೆನ್ನ ಸಹಜವೆನ್ನ ತಾನೆನ್ನ.
--------------
ಹಾವಿನಹಾಳ ಕಲ್ಲಯ್ಯ
ಹಗಲು ಮನಸಿಂಗಂಜಿ ಇರುಳು ಕನಸಿಂಗಂಜಿ ಧ್ಯಾನ ಮೋನಿಯಾಗಿರ್ದಳವ್ವೆ. ಸಖಿ ಬಂದು ಬೆಸಗೊಂಡಡೆ, ಏನೆಂದು ಹೇಳುವಳವ್ವೆ ಏನೆಂದು ನುಡಿವಳವ್ವೆ? ಸಾಕಾರದಲ್ಲಿ ಸವೆಸವೆದು ನಿರಾಕಾರದಲರ್ಪಿಸಿದಡೆ ಮಹಾಲಿಂಗ ಗಜೇಶ್ವರನುಮೇಶ್ವರನಾಗಿರ್ದನವ್ವೆ.
--------------
ಗಜೇಶ ಮಸಣಯ್ಯ
ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು, ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ, ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ, ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ, ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ, ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ ?
--------------
ಹಾವಿನಹಾಳ ಕಲ್ಲಯ್ಯ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಬ್ಥಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : 'ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||' ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಬ್ಥಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!
--------------
ಗಣದಾಸಿ ವೀರಣ್ಣ
ಮಾಗಿಯ ಹುಲ್ಲಿನ ಸೋಂಕಿನಂತೆ ತನು ಪುಳಕಿತಳಾದಳವ್ವೆ. ನುಡಿ ತೊದಳು ಆತನ ಒಲವೆ ಆಧಾರವಾಗಿದ್ದಳವ್ವೆ. ಬಿಳಿಯ ತುಂಬಿ ಕುಂಕುಮ ರಸದಲ್ಲಿ ಬಂಡುಂಡಂತೆ. ಮಹಾಲಿಂಗ ಗಜೇಶ್ವರನಲ್ಲಿ ತನ್ನಲ್ಲಿ ತಾನೆ ರತಿಯಾಗಿರ್ದಳವ್ವೆ
--------------
ಗಜೇಶ ಮಸಣಯ್ಯ
ಇನ್ನಷ್ಟು ... -->