ಅಥವಾ

ಒಟ್ಟು 173 ಕಡೆಗಳಲ್ಲಿ , 34 ವಚನಕಾರರು , 112 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದಪೂಜೆಯ ಮಾಡಿ, ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು, ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ತತ್ಕಾಲವನರಿವ ಕುಕ್ಕುಟನ ಬಾಯ ತುತ್ತನಿಕ್ಕಿಸಿಕೊಂಡವನಾರಯ್ಯ? ಆ ತುತ್ತು ಮುತ್ತದವರ ಮುಕ್ತಿಯ ಬಲೆಗೀಡು ಮಾಡುವುದು. ತುತ್ತ ಮುಟ್ಟದೆ ಕುಕ್ಕುಟನ ಕುಲವ ಕರೆ. ಕರೆದಲ್ಲಿ ಬಂದು ನಿಂದುಳುಮೆ, ಅದರಂಗವ ಆರೆಂದರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಕೈದು ಮೊನೆ ಏರುವದಕ್ಕೆ ಮೊದಲೇ ಕಟ್ಟಬಲ್ಲಡೆ ಕೈದೇನ ಮಾಡುವುದು ? ಹಾವು ಬಾಯಿ ಬಿಡುವುದಕ್ಕೆ ಮೊದಲೇ ಹಿಡಿದ ಮತ್ತೆ ವಿಷವೇನ ಮಾಡುವುದು ? ಮನ ವಿಕಾರಿಸುವುದಕ್ಕೆ ಮೊದಲೇ ಮಹದಲ್ಲಿ ನಿಂದ ಮತ್ತೆ ಇಂದ್ರಿಯಂಗಳೇನ ಮಾಡಲಾಪವು, ಜಾಂಬೇಶ್ವರಾ ?
--------------
ರಾಯಸದ ಮಂಚಣ್ಣ
ಗುರುಲಿಂಗಜಂಗಮಾರ್ಚನೆಯ ಕ್ರಮವ ದಯೆಯಿಂದ ಕರುಣಿಪುದು ಸ್ವಾಮಿ. ಕೇಳೈ ಮಗನೆ : ತಾನಿದ್ದ ಊರಲ್ಲಿ ಗುರುವು ಇದ್ದಡೆ ನಿತ್ಯ ತಪ್ಪದೆ ದರುಶನವ ಮಾಡುವುದು. ಗುರುಪೂಜೆಯ ಮಾಡುವಾಗ ಆ ಗುರುವಿನೊಳಗೆ ಲಿಂಗ-ಜಂಗಮವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಗುರುಪೂಜೆ. ಲಿಂಗಪೂಜೆಯ ಮಾಡುವಾಗ ಆ ಲಿಂಗದೊಳಗೆ ಜಂಗಮ-ಗುರುವುಂಟೆಂದುಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಲಿಂಗಪೂಜೆ. ಇನ್ನು ಜಂಗಮದ ಪೂಜೆ ಮಾಡುವಾಗ ಆ ಜಂಗಮದೊಳಗೆ ಗುರು-ಲಿಂಗವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಜಂಗಮಪೂಜೆ. ಈ ತ್ರಿವಿಧಮೂರ್ತಿ ಭಕ್ತನ ತ್ರಿವಿಧ ತನುವಿಗೋಸ್ಕರವಾಗಿ ಇಷ್ಟ ಪ್ರಾಣ ಭಾವಲಿಂಗಸ್ವರೂಪವಾಗಿಹರೆಂದು ನಿರೂಪಿಸಿದಿರಿ ಸ್ವಾಮಿ. ಆ ತ್ರಿವಿಧಲಿಂಗದ ಪೂಜೆಯ [ಕ್ರಮವ] ಕರುಣಿಪುದು ಎನ್ನ ಶ್ರೀಗುರುವೇ. ಕೇಳೈ ಮಗನೆ : ಇಷ್ಟಲಿಂಗದ ಪೂಜೆಯ ಮಾಡುವಾಗ ಆ ಇಷ್ಟಲಿಂಗದೊಳಗೆ ಪ್ರಾಣಲಿಂಗ ಭಾವಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಇಷ್ಟಲಿಂಗದಪೂಜೆ. ಪ್ರಾಣಲಿಂಗದ ಪೂಜೆಯ ಮಾಡುವಾಗ ಆ ಪ್ರಾಣಲಿಂಗದೊಳಗೆ ಇಷ್ಟಲಿಂಗ ಭಾವಲಿಂಗವುಂಟೆಂದು ಭಾವಿಸಿ ಭಾವ-ಮನ-ಕರದೊಳಗಿರಿಸಿ ಪೂಜಿಸುವುದು ಪ್ರಾಣಲಿಂಗದಪೂಜೆ. ಭಾವಲಿಂಗದ ಪೂಜೆಯ ಮಾಡುವಾಗ ಆ ಭಾವಲಿಂಗದೊಳಗೆ ಇಷ್ಟಲಿಂಗ ಪ್ರಾಣಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಭಾವಲಿಂಗದಪೂಜೆ. ಸಾಕ್ಷಿ : 'ಏಕಮೂರ್ತಿಸ್ತ್ರಯೋ ಭಾಗಾಃ ಗುರುರ್ಲಿಂಗಂತು ಜಂಗಮಃ | ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ||' ಎಂದುದಾಗಿ, ತ್ರಿವಿಧವು ಒಂದೇ ಎಂದರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಶ್ರೀರುದ್ರಾಕ್ಷಿಯ ಹಸ್ತ ತೋಳು ಉರ ಕಂಠ ಮೊದಲಾದ ಸ್ಥಾನಂಗಳಲ್ಲಿ ಧರಿಸಿ, ಶಿವಾರ್ಚನೆಯ ಮಾಡುವುದು ಸದಾಚಾರ, ಅದೇ ಸದ್ಯೋನ್ಮುಕ್ತಿ. ಅದು ಕಾರಣ, ಆ ಮಹಾರುದ್ರಾಕ್ಷಿಯ ಧರಿಸಿ, ಎನ್ನ ಭವಂ ನಾಸ್ತಿಯಾತಿತ್ತು. ಮಹಾಲಿಂಗ ಕಲ್ಲೇಶ್ವರಾ, ರುದ್ರಾಕ್ಷಿಯಿಂದೆ ಕೃತಾರ್ಥನಾದೆನು.
--------------
ಹಾವಿನಹಾಳ ಕಲ್ಲಯ್ಯ
ಇಷ್ಟಲಿಂಗದ ಪೂಜೆಯಾವುದು, ಪ್ರಾಣಲಿಂಗದ ಪೂಜೆಯಾವುದು, ಭಾವಲಿಂಗದ ಪೂಡೆಯಾವುದುಯೆಂದರೆ ಹೇಳಿಹೆ ಕೇಳಿರಯ್ಯ. ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡುವುದು, ಅದು ಇಷ್ಟಲಿಂಗದ ಪೂಜೆ. ಆ ಲಿಂಗವನು ಮನಸ್ಸಿನಲ್ಲಿ ಧ್ಯಾನಿಸಿ ಮನೋಮಧ್ಯದಲಿಪ್ಪ ನಿಃಕಲ ಬ್ರಹ್ಮವನು ಧ್ಯಾನವೆಂಬ ಹಸ್ತದಲ್ಲಿ ಹಿಡಿದು ಕರಸ್ಥಲದಲ್ಲಿಪ್ಪ ಲಿಂಗದ ಗೊತ್ತಿನಲ್ಲಿ ಕಟ್ಟಿ ನೆರೆವುದೀಗ ಪ್ರಾಣಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಮನಸು ಲಿಂಗದಲ್ಲಿ ತಲ್ಲೀಯವಾಗಿ ನಚ್ಚಿ ಮಚ್ಚಿ ಅಚ್ಚೊತ್ತಿ ಅಪ್ಪಿ ಅಗಲದಿಪ್ಪುದೇ ಭಾವಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಇವು ಮೂರು ಲಿಂಗದ ಅರ್ಚನೆ. ಮೂರು ಲಿಂಗದ ಉಪಚಾರ. ಶಿವಾರ್ಥಿಗಳಾದ ವೀರಶೈವರುಗಳು ಮಾಡುವ ಲಿಂಗಾರ್ಚನೆಯ ಕ್ರಮವೆಂದು ಹೇಳಲ್ಪಟ್ಟಿತ್ತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ವೀರಂಗೆ ರಣಾಗ್ರದ ಕದನ ಭೋರೆಂದು ಕಟ್ಟಿದಲ್ಲಿ ದೂರದಲ್ಲಿರ್ದೆಸೆವನೊಂದಂಬಿನಲ್ಲಿ. ಸೇರಿಬಂದರೆ ಹೊಯಿವ ಬಿಲ್ಲಿನಲ್ಲಿ. ಅವು ಮೀರಿ ಬಂದಲಿ ಇರಿವ ಕಠಾರಿಯಲ್ಲಿ. ಅದು ತಪ್ಪಿದಲ್ಲಿ ತೆಕ್ಕೆಯಲ್ಲಿ ಪಿಡಿವ, ಯುದ್ಧದಲ್ಲಿ ಬಿದ್ದಲ್ಲಿ ಕಡಿವ ಬಾಯಲ್ಲಿ. ಇಂತಿ ಅವರ ಪ್ರಾಣಕ್ಕೆ ಬಂದಲ್ಲಿ ಅವ ತನ್ನ ಧೈರ್ಯ, ವ್ರತವರತುದಿಲ್ಲ. ಹೀಂಗಿರಲಿಲ್ಲವೆ ಸದ್ಭಕ್ತನ ಗುಣ? ಹೊನ್ನು ಹೆಣ್ಣು ಮಣ್ಣುಳ್ಳ ಕಾಲದಲ್ಲಿಯೇ ಪನ್ನಗಧರನ ಶರಣರಿಗೆ ಅನ್ನೋದಕ ವಸ್ತ್ರಂಗಳಿಂದುಪಚಾರವ ಮಾಡುವುದು. ನೀಡಿ ಮಾಡುವ ಭಕ್ತರ ಮಠದ ಒಡಗೊಂಡು ಹೋಗಿ ತೋರುವುದು ಅದಕ್ಕಾಗದಿರ್ದಡೆ ಹರಶರಣರ ಕಮಂಡಲ ಕೊಂಡುಹೋಗಿ ಮಡುವಿನಲ್ಲಿ ಅಗ್ಘವಣಿಯ ತಂದು, ಪಾದವ ತೊಳುವುದು. ಅದಕ್ಕಾಗದಿರ್ದಡೆ ಶಿವಶರಣ ಕಂಡು, ಇದಿರೆದ್ದು ನಮಸ್ಕರಿಸುವುದು. ಇಷ್ಟರೊಳಗೊಂದು ಗುಣವಿಲ್ಲದಿರ್ದರೆ ಅವ ಭಕ್ತನಲ್ಲ, ಅವ ಹೊಲೆಯನೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಶ್ರೀಗುರುಕರುಣ ಕಟಾಕ್ಷಮಾತ್ರದಿಂದ ಶಿವಲಿಂಗದ ಒಲುಮೆ. ಆ ಶಿವಲಿಂಗದ ಒಲುಮೆಗೆ ಗುರುಕರುಣವೇ ಮುಖ್ಯ. ಅದು ಕಾರಣ, ಗುರುಪೂಜೆಯ ಮಾಡಿ, ಗುರು ಕೃಪೆಯನೆ ಪಡೆದಿಹುದಯ್ಯ. ಉಪಮಿಸಬಾರದ ಮಹಾದೇವನು, ಪ್ರತ್ಯಕ್ಷವಾಗಿ, ಗುರುರೂಪಿಂದ ಇಹನೆಂದರಿದು, ಗುರುಭಕ್ತಿಯನೆ ಮಾಡುವುದು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನು ನಿರ್ಮಲಾವಸ್ಥೆಯ ದರ್ಶನವ ಮಾಡುವಾಗ ಪಂಚಲಿಂಗಗಳನು ದರ್ಶನವ ಮಾಡುವುದು. ಅದೆಂತೆಂದಡೆ : ಅಣವ, ಮಾಯೆ, ಕಾರ್ಮಿಕ, ಮಹಾಮಾಯೆ, ತಿರೋಧಾನಮಲ. ಆಣವಮಲವಾವುದು ? ಶಿವನ ನೆನೆಯಲೀಸದಿಹುದು. ಮಾಯೆಯಾವುದು ? ತನು ಕರಣ ಭುವನಭೋಗಂಗಳ ಬಯಸುತ್ತಿಹುದು, ಕಾರ್ಮಿಕವಾವುದು ? ಪುಣ್ಯಪಾಪಂಗಳೆಂದು ಹೆಸರಾಗಿ ಸುಖದುಃಖಂಗಳಾಗಿಹುದು. ಮಹಾಮಾಯೆ ಯಾವುದು ? ಪಂಚಕರ್ತನು ರೂಪಾದಿ ದೇಹಾಗಿ ಪ್ರಪಂಚಗಳ ಪ್ರೇರಿಸಿಕೊಂಡಿಹುದು. ತಿರೋಧಾನಮಲವಾವುದು ? ಮರಳಿ ಮಾಯಾಭೋಗದಲ್ಲಿ ಬಿದ್ದು ಹೊರಳಾಡಿಸುತ್ತಿಹುದು. ಈ ಪ್ರಕಾರದಲ್ಲಿ ಪಂಚಮಲಂಗಳನು ಅರಿವುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಲಿಂಗವೇ ಪ್ರಾಣ, ಪ್ರಾಣವೇ ಲಿಂಗವಾದ ಪ್ರಾಣಲಿಂಗಿಯ ಪ್ರಾಣಲಿಂಗಕ್ಕೆ, ಧ್ಯಾನಾಮೃತ ಪಂಚಾಕ್ಷರಂಗಳ ಪಂಚಾಮೃತದಿಂ ಮಜ್ಜನಕ್ಕೆರೆದು, ಆ ಲಿಂಗಕ್ಕೆ ಮನವೇ ಪುಷ್ಪ, ಬುದ್ಧಿಯೆ ಗಂಧ, ಚಿತ್ತವೇ ನೈವೇದ್ಯ. ಅಹಂಕಾರವಳಿದ ನಿರಹಂಕಾರದ ಆರೋಗಣೆಯ ಮಾಡಿಸಿ, ಪರಿಣಾಮದ ವೀಳ್ಯವನಿತ್ತು, ಸ್ನೇಹದಿಂದ ವಂದನೆಯಂ ಮಾಡಿ, ಆ ಪ್ರಾಣಲಿಂಗಕ್ಕೆ ಬಹಿರಂಗದ ಪೂಜೆಯ ಪರಿಯಲಿ ಅಂತರಂಗದ ಪೂಜೆಯ ಮಾಡುವುದು. ಬಹಿರಂಗದ ಪೂಜೆಯ ಪ್ರಾಣಲಿಂಗಕ್ಕೆ ಅಂತರಂಗದ ವಸ್ತುಗಳೆಲ್ಲವನ್ನು ತಂದು, ಬಹಿರಂಗದ ವಸ್ತುವಿನಲ್ಲಿ ಕೂಡಿ, ಅಂತರ್ಬಹಿರುಭಯ ಲಿಂಗಾರ್ಚನೆಯ ಮಾಡಲು, ಅಂತರಂಗ ಬಹಿರಂಗ ಭರಿತನಾಗಿಪ್ಪನಾ ಶಿವನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ವೇದ ಯೋನಿಯ ಹಂಗು. ಶಾಸ್ತ್ರ ಯೋನಿಯ ಹಂಗು. ಪುರಾಣ ಯೋನಿಯ ಹಂಗು. ಆಗಮ ಯೋನಿಯ ಹಂಗು. ನಾದದಿಂದ ಉದಿಸಿದವು ಶ್ರೋತ್ರದ ಹಂಗು. ಹೇಳುವುದು ವೆಜ್ಜ, ಕೇಳುವುದು ವೆಜ್ಜ, ತಾ ಹಿಂದೆ ಬಂದುದು ವೆಜ್ಜ, ಈಗ ನಿಂದು ಮಾಡುವುದು ವೆಜ್ಜ. ಇಂತೀ ವೆಜ್ಜದಜ್ಜೆಯ ಗುದ್ದಿನಲ್ಲಿ ಬಿದ್ದವರಿಗೆ ನಿರ್ಧರವಿಲ್ಲ ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ನಾದ ಬಿಂದು ಸಾದಾಖ್ಯ ಈಶ್ವರ ಇಂಬಾಗಿ ನಿಂದು, ವಚನಾದಿಗಳೈದು, ಶಬ್ದಾದಿಗಳೈದು, ಕರಣ ನಾಲ್ಕು, ವಾಯು ಹತ್ತು, ಪುರುಷನೊಬ್ಬ- ಈ ಇಪ್ಪತ್ತೈದು ಕರಣಂಗಳೊಡನೆ ಕಂಠಸ್ಥಾನದಲ್ಲಿ ನಿಂದು ದರ್ಶನವಂ ಮಾಡುವುದು ಪರಮಸ್ವಪ್ನ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕಾಯವುಳ್ಳನ್ನಕ್ಕ ಮಾಡುವುದು ಲಿಂಗಪೂಜೆಯ, ಜೀವವುಳ್ಳನ್ನಕ್ಕ ಅರಿವುದು ಅಭೇದ್ಯ ವಸ್ತುವ, ಉಭಯವ ಕಡೆಗಾಣಿಸಿ ನಿಂದಲ್ಲಿ ಸದಾಶಿವಮೂರ್ತಿಲಿಂಗವೆಂದು ಕುರುಹಿಡಲಿಲ್ಲ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->