ಅಥವಾ

ಒಟ್ಟು 392 ಕಡೆಗಳಲ್ಲಿ , 44 ವಚನಕಾರರು , 253 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ. ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.
--------------
ಅಕ್ಕಮಹಾದೇವಿ
ಎಂಟು ಹದಿನಾರೆಂಬ ಬಲೆಯನೊಡ್ಡಿ ಚೆನ್ನಮೃಗವೆಂಬ ಕಂಗಳ ಬೇಟೆ ಎಸುವೆನಯ್ಯಾ. ವಿಂಧ್ಯವನದೊಳಗೆ ಓ ಓ ಎಂದೆನುತಲಯಿದರೆ ಎಸುವೆನಯ್ಯಾ. ಎಯ್ದೆ ಬಾಣಕ್ಕೆ ಎಯ್ದೆ ಗುರಿಯಾಗದ ಮುನ್ನ ಎಯ್ದುವೆ ದಶಮುಖ ರಾಮತಂದೆ ಎಸುವೆನಯ್ಯಾ
--------------
ಸಿದ್ಧರಾಮೇಶ್ವರ
ಪರುಷದ ಪುತ್ಥಳಿಯ ಬಸುರಲ್ಲಿ ಅವಲೋಹ ಹುಟ್ಟುವುದೆ ಅಯ್ಯಾ ? ಮರಳಿ ಮರಳಿ ಪರುಷ ಮುಟ್ಟಿ ಸುವರ್ಣವಹರೆ, ಮುನ್ನ ಮುಟ್ಟಿತ್ತೆಲ್ಲಾ ಹುಸಿಯೇ ? ಇದು ಕಾರಣ ಕೂಡಲಚೆನ್ನಸಂಗಯ್ಯ ಮೆಚ್ಚ, ಭವಿಯ ಕಳೆದು ಸಂಬಂಧಿಗೆ ಸಂಗವಾದರೆ.
--------------
ಚನ್ನಬಸವಣ್ಣ
ಕಾರ್ಯಪ್ರಯೋಜನವೆಂದಡೆಯೂ ಆರಿಗಾರಿಗೆಯೂ ಹೋಗಬಾರದು. ಬಟ್ಟವಕ್ಕದ ಸಂಸಾರ ಹೋಗಿ ಬರಬಾರದು. ಜವನ ಗಾರುಪಟ್ಟಿಗೊಳಗಾಗದ ಮುನ್ನ, ಶರಣೆಂದಡೆ ಕಾವನಮ್ಮ, ಶ್ರೀಮಲ್ಲಿಕಾರ್ಜುನಯ್ಯನು.
--------------
ಮಲ್ಲಿಕಾರ್ಜುನ ಪಂಡಿತಾರಾಧ್ಯ
ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭಾವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹೃದಯಕಮಲಕರ್ಣಿಕಾವಾಸದಲ್ಲಿ ದಿಟಪುಟಜಾÕನ ಉದಯವಾಗಿ ದ್ಥಿಕ್ಕರಿಸಲಾಗಿ, ಸಟೆ ದೂರವಾಗಿ ವಿವರ್ಜಿತವಾದವು ನೋಡಾ. ಕುಟಿಲ ಕುಹಕ ಆಟಮಟ ಅಭ್ರಚ್ಛಾಯವಳಿದು ಹೋಗದ ಮುನ್ನ, ಸ್ಫಟಿಕ ಪ್ರಜ್ವಲಾಕಾರವಾಯಿತ್ತು ನೋಡಾ. ಆ ಶಿವಜಾÕನಪ್ರಭೆಯೊಳಗೆ ನಿಟಿಲಲೋಚನನೆಂಬ ನಿತ್ಯನ ಕಂಡು, ಅದೇ ಎನ್ನ ನಿಜವೆಂದು ಬೆರಸಿ ಅಬ್ಥಿನ್ನಸುಖಿಯಾಗಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭಗಧ್ಯಾನವೆಂಬುವ ಬಂದಿಕಾನವ ಹೊಕ್ಕು, ಸತಿಯರ ಸವಿನುಡಿಯೆಂಬ ಶಸ್ತ್ರವ ಹಾಯ್ದು, ಅಂಗನೆಯರ ಶೃಂಗಾರವೆಂಬ ಕತ್ತಲೆಗವಿದು, ಕಂಗಳು ಕೆಟ್ಟು, ಲಿಂಗನೆನಹೆಂಬ ಜ್ಯೋತಿ ನಂದಿತ್ತು ನೋಡಾ. ಆ ಸ್ವಯಂ ಜ್ಯೋತಿ ಕೆಡದ ಮುನ್ನ, ಅಂಗವಿಕಾರವೆಂಬ ಅರಸು ಅನಂತ ಹಿರಿಯರ ನುಂಗುವದ ಕಂಡು, ಮಹಾಜ್ಞಾನಿಗಳು ಹೇಸಿ ಕಡೆಗೆ ತೊಲಗಿದರು ನೋಡಾ ನಿಮ್ಮ ಪ್ರಮಥರು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕುಲಗೆಟ್ಟಡೆ ಕೆಡಬಹುದಲ್ಲದೆ ಛಲಗೆಡಬಾರದು, ಛಲಗೆಟ್ಟಡೆ ಕೆಡಬಹುದಲ್ಲದೆ ಭಕ್ತಿಯ ಅನು ಕೆಡಬಾರದು, ಭಕ್ತಿಯ ಅನು ಕೆಟ್ಟಡೆ ಕೆಡಬಹುದಲ್ಲದೆ ಆಯತ ಕೆಡಬಾರದಯ್ಯಾ, ಆಯತ ಕೆಟ್ಟಡೆ ಕೆಡಬಹುದಲ್ಲದೆ ಸ್ವಾಯತ ಕೆಡಬಾರದಯ್ಯಾ. ಎಲೆ ಕೂಡಲಸಂಗಮದೇವಯ್ಯಾ, ಮುನ್ನ ಮುಟ್ಟಿತ್ತೆ ಮುಟ್ಟಿತ್ತು, ಇನ್ನು ಮುಟ್ಟಿದೆನಾದಡೆ ನಿಮ್ಮ ರಾಣಿವಾಸದಾಣೆ.
--------------
ಬಸವಣ್ಣ
ಹೊಸ ಮದುವೆ ಹಸೆಯುಡುಗದ ಮುನ್ನ, ಹೂಸಿದ ಅರಿಸಿನ ಬಿಸಿಲಿಂಗೆ ಹರಿಯದ ಮುನ್ನ, ತನು ಸಂಚಲವಡಗಿ ಮನವು ಗುರುಕಾರುಣ್ಯವ ಪಡೆದು ಹುಸಿಯಿಲ್ಲದಿರ್ದಡೆ ಭಕ್ತನೆಂಬೆ! ಹಿಡಿಹಿಂಗಿಲ್ಲದಿರ್ದಡೆ ಮಾಹೇಶ್ವರನೆಂಬೆ! ತನುವಿಲ್ಲದಿರ್ದಡೆ ಪ್ರಸಾದಿಯೆಂಬೆ! ಜೀವವಿಲ್ಲದಿರ್ದಡೆ ಪ್ರಾಣಲಿಂಗಿಯೆಂಬೆ! ಆಶೆಯಿಲ್ಲದಿರ್ದಡೆ ಶರಣನೆಂಬೆ! ಈ ಐದರ ಸಂಪರ್ಕ ನಿರ್ಭೋಗವಾದಡೆ ಐಕ್ಯನೆಂಬೆ! ಐಕ್ಯದ ಸಂತೋಷ ಹಿಂಗಿದಡೆ ಜ್ಯೋತಿರ್ಮಯನೆಂಬೆ! ಈ ಹೀಂಗಾದ ದೇಹವನಿರಿದಡರಿಯದು ತರಿದಡರಿಯದು. ಬೈದಡರಿಯದು; ಹೊಯ್ದಡರಿಯದು. ನಿಂದಿಸಿದಡರಿಯದು; ಸ್ತುತಿಸಿದಡರಿಯದು. ಸುಖವನರಿಯದು; ದುಃಖವನರಿಯದು. ಇಂತಿವರ ತಾಗು ನಿರೋಧವನರಿಯದಿರ್ದಡೆ ಅವರ ಮಹಾಲಿಂಗ ಗಜೇಶ್ವರನೆಂಬೆ.
--------------
ಗಜೇಶ ಮಸಣಯ್ಯ
ಐವತ್ತೆರಡೆಸಳಿನ ಸ್ಥಾವರಗದ್ದುಗೆಯ ಮೇಲೆ ಪರಂಜ್ಯೋತಿಲಿಂಗವ ಕಂಡೆನಯ್ಯ. ಆ ಲಿಂಗದೊಳಗೆ ಅನಂತಕೋಟಿ ನೋಮಸೂರ್ಯರ ಬೆಳಗು ನೋಡಾ. ಆ ಬೆಳಗ ನೋಡಹೋಗದ ಮುನ್ನ, ಅದು ಎನ್ನ ನುಂಗಿ, ಬೆಳಗು ತನ್ಮಯವಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಲೆಯ ಮನೆಯೊಳಗಣ ಕಿಚ್ಚು ಅಲೆದಾಡದ ಮುನ್ನ, ಊರ ಮುಂದೆ ನಾಲ್ವರು ಸತ್ತು ಒಳಗೆ ಬೇವುದ ಕಂಡೆ. ಊರು ಬೆಂದು, ಕಿಚ್ಚಿನ ಊನ್ಯವ ಕೇಳಬಂದ ರಕ್ಷಿ, ಹುಲಿಯನೇರಿಕೊಂಡು ಕಳೆದುಳಿದುದಕ್ಕೆ ತಾನೊಡತಿಯಾಗಿ ಊರುಂಬಳಿಯನುಂಬುದ ಕಂಡೆ. ಅತ್ತುದೊಂದಲ್ಲದೆ ಹೆಣ ಬಂದು ಕಚ್ಚದಿದೇನು ಚೋದ್ಯದ ದುಃಖ ಹೇಳಾ ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಆವಾವ ದ್ರವ್ಯಪದಾರ್ಥಂಗಳನು ಶಿವಲಿಂಗಕ್ಕರ್ಪಿಸಿ ಪ್ರಸಾದವಾದಲ್ಲದೆ ಕೊಳ್ಳೆವೆಂಬ ಪ್ರಸಾದಿಗಳಿರಾ ನೀವು ಅರ್ಪಿಸಿದ ಪರಿಯೆಂತು ? ಪ್ರಸಾದವ ಕೊಂಡ ಪರಿಯೆಂತು ಹೇಳಿರೆ ? ರೂಪಾರ್ಪಿತವಾಯಿತ್ತು ನೇತ್ರದಿಂದ, ಮೃದು, ಕಠಿಣ, ಶೀತೋಷ್ಣಂಗಳು ಅರ್ಪಿತವಾದವು ಸ್ಪರ್ಶನದಿಂದ. ನೇತ್ರ ಹಸ್ತವೆರಡಿಂದ್ರಿಯಂಗಳಿಂದವೂ ರೂಪು ಸ್ಪರ್ಶನವೆಂಬೆರಡೆ ವಿಷಯಂಗಳರ್ಪಿತವಾದವು. ನೀವಾಗಳೇ ಪ್ರಸಾದವಾಯಿತ್ತೆಂದು ಭೋಗಿಸತೊಡಗಿದಿರಿ. ಇಂತು ದ್ರವ್ಯಂಗಳ ರಸವನೂ, ಗಂಧವನೂ, ಶಬ್ದವನೂ, ಶ್ರೋತೃ, ಘ್ರಾಣ, ಜಿಹ್ವೆಗಳಿಂದ ಮೂರು ವಿಷಯಂಗಳನೂ ಅರ್ಪಿಸದ ಮುನ್ನ ಪ್ರಸಾದವಾದ ಪರಿ ಎಂತೊ ? ಅರ್ಪಿತವೆಂದನರ್ಪಿತವ ಕೊಂಬ ಪರಿ ಎಂತೊ ? ಪ್ರಸಾದಿಗಳಾದ ಪರಿ ಎಂತೊ ಶಿವ ಶಿವಾ. ಪಂಚೇಂದ್ರಿಯಂಗಳಿಂದವೂ, ಶಿವಲಿಂಗಪಂಚೇಂದ್ರಿಯ ಮುಖಕ್ಕೆ ಪಂಚವಿಷಯಂಗಳನೂ ಅರ್ಪಿಸಬೇಕು. ಅರ್ಪಿಸಿ ಪ್ರಸಾದವ ಕೊಂಡಡೆ ಪ್ರಸಾದಿ. ಅಲ್ಲದಿರ್ದಡೆ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯೆ ಅಲ್ಲ. ಪ್ರಸಾದಿಯಲ್ಲ, ಭಕ್ತಿಯ ಪರಿಯೂ ಅಲ್ಲ. ಪೂಜಕರೆಂಬೆನೆ ಪೂಜೆಯ ಒಪ್ಪವಲ್ಲ. ಸಾಧಾರಣ ಪೂಜಕರಪ್ಪರು ಕೇಳಿರಣ್ಣಾ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಸಾವಧಾನಾರ್ಪಿತದಲ್ಲಿ ಸ್ವಯವಾಗರಯ್ಯ.
--------------
ಉರಿಲಿಂಗಪೆದ್ದಿ
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ರಾಜಂಗೆ ಮಂತ್ರಿ ಮುಖ್ಯವಾದಂತೆ ಬಾಹ್ಯಪ್ರಾಣಕ್ಕೆ ಮನವೆ ಮುಖ್ಯ ನೋಡಾ. ಮನ ಮುಖ್ಯವಾಗಿ ಸರ್ವಪಾಪ ಅನ್ಯಾಯವ ಗಳಿಸಿ, ಕಾಲಂಗೆ ಗುರಿಮಾಡಿ, ಜನನ ಮರಣಕ್ಕೆ ತರಿಸಿ, ಮುನ್ನ ಕಾಡುತ್ತಿದೆ. ಮನವ ನಿರಸನವ ಮಾಡುವರೆನ್ನಳವೆ ? ನಿನ್ನಳವ ಎನ್ನೊಳಿತ್ತು ಮನ್ನಿಸಿ ಕಾಯಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->