ಅಥವಾ

ಒಟ್ಟು 25 ಕಡೆಗಳಲ್ಲಿ , 16 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗತ್ಪ್ರಪಂಚ ಮಾಡಿ, ಆ ಜಗದಲ್ಲಿ ಜೀವರೂಪಿಂದ ಬಳಿಸಂದನೆಂದು ಹೇಳುವ ಶ್ರುತಿಯಂತಿರಲಿ, ಜೀವನೆ ಶಿವನಾದಡೆ ಶೋಕ ಮೋಹ ಋಣ ರೋಗ ಪುಣ್ಯ ಪಾಪ ಕಾಲ ಕಲ್ಪಿತ ಪ್ರಳಯ ಪ್ರಕೃತಿ ಸಂಸಾರಪಾಶಬದ್ಧವುಂಟೆ? ಇವೆಲ್ಲವೂ ಜೀವಂಗಲ್ಲದೆ ಶಿವಂಗಿಲ್ಲವಾಗಿ ತ್ರಿಗುಣರಹಿತ ಸೌರಾಷ್ಟ್ರ ಸೋಮೇಶ್ವರನು.
--------------
ಆದಯ್ಯ
ಶಿವತಂತ್ರದಿಂದ ಸುಖದುಃಖಗಳು ಬರುತಿಹವೆಂದರಿಯದೆ ನರಗುರಿಗಳಿಗೆ, ರೋಗ ದಾರಿದ್ರ್ಯ ಅಪಜಯಂಗಳು ಬರುತ್ತಿರಲು ವಿಪ್ರಗೆ ಕೈಮುಗಿದು ಕಾಣಿಕೆಯನಿಕ್ಕಿ ತನ್ನ ಹೆಸರ ಹೇಳಿ ಸೂರ್ಯಬಲ ಚಂದ್ರಬಲ ಬೃಹಸ್ಪತಿಬಲ ನವಗ್ರಹಬಲವ ಕೇಳುವವರಿಗೆ ಎಲ್ಲಿಯದೋ ಶಿವಭಕ್ತಿ ? ಸೂರ್ಯನು ಜ್ಞಾನವುಳ್ಳ್ಳವನಾದಡೆ ಗೌತಮಮುನೀಶ್ವರನ ಹೆಂಡತಿ ಅಹಲ್ಯಾದೇವಿಗೆ ಮೋಹಿಸಿ ಮುನಿಯ ಶಾಪದಿಂದ ಕುಷ್ಟದೊಳಗಿಹನೆ ? ಳ ಅಲ್ಲದೆ ದಕ್ಷನ ಯಾಗದಲ್ಲಿ ಹಲ್ಲ ಹೋಗಲಾಡಿಸಿಕೊಂಬನೆ ? ಚಂದ್ರನು ಜ್ಞಾನವುಳ್ಳವನಾದಡೆ ಗುರುವಿನ ಹೆಂಡತಿಗೆ ಅಳುಪಿ ಕೊಂಡೊಯ್ದು ಜಾತಜ್ವರದಲ್ಲಿ ಅಳಲುತಿಹನೆ ? ಬೃಹಸ್ಪತಿ ಜ್ಞಾನವುಳ್ಳವನಾದಡೆ ಸಕಲ ಜ್ಯೋತಿಷ್ಯಗಳ ನೋಡಿ ವಿವಾಹವಾದ ಹೆಂಡತಿ ರೋಹಿಣೀದೇವಿಯ ಚಂದ್ರನೆತ್ತಿಕೊಂಡು ಹೋಹಾಗ ಸುಮ್ಮನಿದ್ದುದು ಏನು ಜ್ಞಾನ ? ಶನಿ ಜ್ಞಾನವಳ್ಳವನಾದಡೆ ಕುಂಟನಾಗಿ ಸಂಕೋಲೆ ಬೀಳ್ವನೆ ? ಅದು ಕಾರಣ_ ತಮಗೆ ಮುಂಬಹ ಸುಖದುಃಖಂಗಳನರಿಯದವರು ಮತ್ತೊಬ್ಬರ ಸುಖದುಃಖಂಗಳ ಮೊದಲೆ ಅರಿಯರು. ಬೃಹಸ್ಪತಿಯ ಮತದಿಂದೆ ದಕ್ಷ, ಯಾಗವನಿಕ್ಕೆ ಕುರಿದಲೆಯಾಯಿತ್ತು. ಬೃಹಸ್ಪತಿಯ ಮತದಿಂದೆ ದ್ವಾರಾವತ ನೀರಲ್ಲಿ ನೆರೆದು ಕೃಷ್ಣನ ಹದಿನಾರುಸಾವಿರ ಸ್ತ್ರೀಯರ ಹೊಲೆಬೇಡರು ಸೆರೆಯನೊಯ್ದರು, ಶ್ರೀರಾಮನ ಹೆಂಡತಿ ಸೀತಾಂಗನೆ ಸೆರೆಯಾದಳು. ಇಂತೀ ತಮತಮಗೆ ಮುಂದೆ ಬಹ ಅಪಜಯಂಗಳನರಿಯದ ಕಾರಣ, ಆ ಬೃಹಸ್ಪತಿ ಜ್ಞಾನಿಯ ಮತದಿಂದೆ, ಅಭಾಷ ಜೋಯಿಸರ ಮಾತ ಕೇಳಿ ಹುಣ್ಣಿಮೆ ಅಮವಾಸೆಯಲ್ಲಿ ಉಪವಾಸವಿದ್ದು, ಗ್ರಹಬಲವುಳ್ಳ ಶುಭಮುಹೂರ್ತದಲ್ಲಿ, ಅರಳಿಯ ಮರಕ್ಕೆ ನೀರ ಹೊಯ್ದು ನೂಲ ಸುತ್ತಿ ವಿಪ್ರಜೋಯಿಸರ್ಗೆ ಹೊನ್ನು ಹಣವ ಕೊಟ್ಟಡೆ, ಹೋದೀತೆಂಬ ಅನಾಚಾರಿಯ ಮಾತ ಕೇಳಲಾಗದು. `ವಸಿಷ್ಠೇನ ಕೃತೇ ಲಗ್ನೇ ವನೇ ರಾಮೇಣ ವಾಸಿತೇ ಕರ್ಮಮೂಲೇ ಪ್ರಧಾನೇ ತು ಕಿಂ ಕರೋತಿ ಶುಭಗ್ರಹಃ ' ಇಂತೆಂದುದಾಗಿ ಬಹ ಕಂಟಕವ ಹೊನ್ನು ಹೆಣ್ಣು ಶುಭ ಲಗ್ನದಿಂದೆ ಪರಿಹರಿಸೇನೆಂದಡೆ ಹೋಗಲರಿಯದು. ಹಸಿವಿಲ್ಲದ ಮದ್ದು ಕೊಟ್ಟೇನು, ಅಶನವ ನೀಡೆಂಬಂತೆ, ಖೇಚರದ ಮದ್ದು ಕೊಟ್ಟೇನು ತೊರೆಯ ದಾಂಟಿಸೆಂಬಂತೆ, ಕುರುಡನ ಕೈಯ ಕುರುಡ ಹಿಡಿದು ಹಾದಿಯ ತೋರುವಂತೆ, ಲಜ್ಜೆ ನಾಚಿಕೆ ಇಲ್ಲದೆ ವಿಪ್ರರ ಕೈಯೆ ಲಗ್ನವ ಕೇಳಲಾಗದು. ಸದ್ಭಕ್ತರಾದವರಿಗೆ ನಿಮ್ಮ ಬಲವೇ ಬಲವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಬೇಗ ಬೇಗನೆ ಗತಿಪಥದ ಜ್ಞಾನವ ಮಾಡಿಕೊಂಡು ನೀಗಿರೊ ನಿಮ್ಮ ಭವಬಂಧನದ ಸಾಗರವನು. ಪ್ರಾಣತ್ಯಾಗವು ಈಗಲೋ ಆಗಲೋ ಯಾವಾಗಲೋ ಎಂದರಿಯಬಾರದು. ರೋಗ ರುಜೆಗಳಿಗೆ ಅಗರವು ನಿಮ್ಮ ಒಡಲು. ತನು-ಮನ-ಪ್ರಾಣವ ನೆಚ್ಚದಿರು, ನಾಗಭೂಷಣನ ಪಾದಪೂಜೆಯ ಮಾಡಿ, ಶಿವಯೋಗದಲಿ ಲಿಂಗವನೊಡಗೂಡಿ ಸಾಗಿ ಹೋಗುವವರನು ಭವಗೇಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಸವುಳಭೂಮಿಯ ಉಳ್ಳಿ ಮೂಲಂಗಿ ಬಳ್ಳೊಳ್ಳಿ ಸಬ್ಬಸಗಿ ನಾರುಗಡ್ಡೆಯ ತಿಂದವರಿಗೆ ರೋಗ ಪ್ರಾಪ್ತಿಯಾಗುವದು. ಕೆಂಪುಭೂಮಿಯ ಉಳ್ಳಿ ಮೂಲಂಗಿ ಬಳ್ಳೊಳ್ಳಿ ಸಬ್ಬಸಗಿ ನಾರುಗಡ್ಡೆಯ ತಿಂಬವರಿಗೆ ರೋಗ ಪರಿಹಾರವಾಗುವದು ನೋಡೆಂದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ ವ್ಯಾದ್ಥಿಯ ಚಿಕಿತ್ಸೆಯನಾರು ಅರಿಯರಲ್ಲಾ ! ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ , ಆತ್ಮಂಗೆ ಆಣವ, ಮಾಯಾ, ಕಾರ್ಮಿಕ. ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ, ಬಂಧನದಲ್ಲಿ ಸಾವುತ್ತಿದೆ ಅಂಗ. ಈ ರೋಗ ನಿರೋಗವಹುದಕ್ಕೆ ನಾ ಮೂರು ಬೇರ ತಂದೆ. ಒಂದ ಅಂಗದಲ್ಲಿ ಮರ್ದಿಸಿ, ಒಂದು ಆತ್ಮನಲ್ಲಿ ಮಥನಿಸಿ, ಒಂದ ಅರಿವಿನಲ್ಲಿ ಪಾನವ ಮಾಡಿ, ಈ ರೋಗ ಹರಿವುದು. ಇದಕ್ಕನುಪಾನ ಇದಿರೆಡೆಯಿಲ್ಲ , ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಕಣ್ಣು ಕಳೆದ ಮತ್ತೆ ಅಂಜನಕ್ಕೆ ತಿಳಿವುದೆ ? ಆತ್ಮನಿದ್ದಲ್ಲಿ ಅರಿಯದೆ ಹಸು ಸತ್ತ ಮತ್ತೆ ಮೋಕ್ಷವನರಸಲುಂಟೆ ? ಎಚ್ಚರಿಕೆ ತನಗಿದ್ದಲ್ಲಿ ನಾನೊಂದು ನಿಶ್ಚಯದ ಮದ್ದ ತಂದೆ. ಆ ಮದ್ದಿನ ಭೇದ ಘಟಕ್ಕೆ ಕೇಡಿಲ್ಲ. ಆತ್ಮಂಗೆ ಭವವಿಲ್ಲ. ಅರಿವಿಂಗೆ ತುದಿಮೊದಲಿಲ್ಲ. ಇದು ನಿರಿಗೆ ಕೊಳಬಲ್ಲಡೆ, ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನ. ರೋಗ ಹೋಯಿತ್ತು, ಬೇಗ ಅರಿದುಕೊಳ್ಳಿ, ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಆ ಪರಶಿವನ ಮಾಯಾಸ್ವರೂಪವಾದ ಈ ಲೋಕದ ಜನರಿಗೆ ಪೂರ್ವಪುಣ್ಯವೊದಗಿ, ಸಂಸಾರ ಹೇಯವಾಗಿ, ಗುರುಕಾರುಣ್ಯವ ಪಡೆದು, ಆತ್ಮಜ್ಞಾನ ತಿಳಿಯಲಿಕ್ಕೆ, ಮನಗೊಟ್ಟು, ತತ್ವವ ಶೋಧಿಸಿ, ಪುರಾತನ ವಚನ ಹಾಡಿಕೊಂಡು ಅನುಭವಿಯಾಗಿ, ನಾನೇ ಅನುಭಾವಿ ನಾನೇ ಪ್ರಭು, ನಾನೇ ಪರಬ್ರಹ್ಮವ ಬಲ್ಲ ಪರಮಜ್ಞಾನಿಯೆಂದು, ಬಸವಾದಿ ಪೂರ್ವಪ್ರಮಥರ ಪುರಾತರ ಮಹಾಗಣಂಗಳ ಜರಿದು, ಈ ಭುವನದಲ್ಲಿ ಇನ್ನಾ ್ಯರು ನಿಜವನರಿತವರಿಲ್ಲೆಂದು ಅಹಂಕರಿಸಿ, ನಾವು ಮಹಾಜ್ಞಾನಿಗಳು, ನಾವು ಕೇವಲ ಶಿವಾಂಶಿಕರು, ನಮ್ಮನ್ನಾರು ಅರಿಯರು, ನಮ್ಮ ಬಲ್ಲವರು ಪುಣ್ಯವಂತರು, ನಮ್ಮನ್ನರಿಯದವರು ಪಾಪಿಷ*ರು. ನಾವು ಮಹತ್ವ ಉಳ್ಳವರು, ನಾವು ಮಕ್ಕಳ ಕೊಡುವೆವು, ರೋಗ ಕಳೆಯುವೆವು, ಬ್ರಹ್ಮಹತ್ಯಾದಿ ಪಿಶಾಚಿಯ ಸೋಂಕು ಬಿಡಿಸುವೆವು ಎಂದು ವಿಭೂತಿ ಮಂತ್ರಿಸಿಕೊಟ್ಟು, ಅವರ ಮನೆಯಲ್ಲಿ ಶಿವಪೂಜೆಯ ಪಸಾರವನಿಳಿಯಿಟ್ಟು, ಆ ರೋಗದವರನ್ನು ಮುಂದೆ ಕೂಡ್ರಿಸಿಕೊಂಡು, ತಾ ಕೂತು ಕಣ್ಣು ಮುಚ್ಚಿ, ಒಳಗೆ ಬೆಳಗವ ಕಂಡು, ಕಣ್ದೆರೆದು, ಬಿರಿಗಣ್ಣಿನಿಂದ ನೋಡ್ತ ಹಡ್ತ ಹುಡ್ತ ಮಾಡಿ ಪರಿಣಾಮವಾಗಲೆಂದು ಹೇಳಲು, ಅದು ರಿಣಾ ತೀರಿಹೋದರೆ, ನಮ್ಮ ಮಹತ್ವ ಎಂಥಾದ್ದು, ಹಿಂದೆ ಇಂಥಾ ಮಹತ್ವ ಬಳಹ ಮಾಡೀವಿಯೆಂದು ಅಲ್ಲಲ್ಲಿ ಹೆಸರು ಹೇಳಿಕೊಳ್ಳಬೇಕು. ಅದು ಹೋಗದಿದ್ದರೆ- ಇವರ ವಿಶ್ವಾಸ ಘಟ್ಟಿಲ್ಲೆಂದು, ಏನರೆ ನೆವ ಕೊಳ್ಳಬೇಕು. ಕೊಟ್ಟರೆ ಹೊಗಳಬೇಕು, ಕೊಡದಿದ್ದರೆ ಬೊಗಳಬೇಕು. ಅವರಿಂದ ಆ ಹಣವು ತನಗೆ ಬಾರದಿದ್ದರೆ ಅವರ ಅರ್ಥವ ಕಳೆಯಬೇಕೆಂಬ ಯೋಚನೆಬೇಕು. ಅಥವಾ ಫಣ್ಯಾಚಾರದಲ್ಲಿ ಅವರಿಂದ ಅರ್ಥವ ಸೆಳೆತಂದು ಹಿಂದೆ ತಾ ಬಿಟ್ಟು ಪೂರ್ವಪ್ರಪಂಚದವರಿಗೆ ಕೊಟ್ಟು ಈ ವಿಷಯಾತುರಕ್ಕೆ ವಾಯು ತಪ್ಪಿ ನಡೆದು ಇದು ಪ್ರಭುವಿನಪ್ಪಣೆಯೆಂದು ಹಾಡಿದ್ದೇ ಹಾಡುವ ಕಿಸಬಾಯಿದಾಸನ್ಹಾಂಗೆ ಹಾದಿಡ್ದೇ ಹಾಡಿಕೊಳ್ಳುತ್ತ, ಕ್ರೀಯ ನಿಃಕ್ರಿಯವಾಗಿ ಸತ್ತ ಕತ್ತಿಯ ಎಲವು ತಂದು ತಿಪ್ಪಿಯಲ್ಲಿ ಬಚ್ಚಿಟ್ಟು ಸುತ್ತುವ ತಲೆಹುಳುಕ ಹುಚ್ಚುನಾಯಿಯಂತೆ, ಉಚ್ಚಿಯಾ ಪುಚ್ಚಿಗೆ ಮೆಚ್ಚನಿಟ್ಟ ನಿಚ್ಚ ಕಚ್ಚಿಗಡಕರಿಗೆ ತಮ್ಮ ನಿಜದೆಚ್ಚರ ಇನ್ನೆಲ್ಲಿಹದೋ ? ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಮದ್ದ ನಂಬಿಕೊಂಡಡೆ ರೋಗ ಮಾಣದಿಪ್ಪುದೆ ? ಸಜ್ಜನಿಕೆಯುಳ್ಳಡೆ ಪ್ರಸಾದಕಾಯ ಕೆಡುವುದೆ ? ಪ್ರಾಣ, ಲಿಂಗವಾದಡೆ ಪ್ರಾಣ ಬೇರಪ್ಪುದೆ ? ಪ್ರಾಣಲಿಂಗ ಪ್ರಸಾದವನು ತಿಳಿದು ನೀವು ನೋಡಿರೆ, ನಾದ ಬಿಂದು ಸೂಸದ ಮುನ್ನ, ಆದಿಯ ಪ್ರಸಾದವ ಭೇದಿಸಿಕೊಂಡರು_ ಗುಹೇಶ್ವರಾ ನಿಮ್ಮ ಶರಣರು.
--------------
ಅಲ್ಲಮಪ್ರಭುದೇವರು
ಯಾವಾದರೂ ತೀರ್ಗಡೆಯಂತ್ಯದಲ್ಲಿ ಜಪ ತಪ ಶಿವಾರಾಧನೆ ಫಲಪದವು. ತೇರ್ಗಡೆಯಾ[ಗ]ದಲ್ಲಿ ಫಸದು ಫಸದು ಪುಣ್ಯಪಾಪಗಳವು. ದೇಹಶುದ್ಧವಾದವಂಗೆ ರಸಸಿದ್ಧಿ ರಸಸ್ಧಿಯಾದವಂಗೆ ದೇಹಶ್ಧುದ್ಧಿ ದೇಹಶುದ್ಧವಿಲ್ಲದವಂಗೆ ರಸಸಿದ್ಧಿಯಾಗದು; ರೋಗ ಪರಿಹಾರ[ವಾಗದು] ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಆವ ಬಗೆ ಭಾವ ಬಲ್ಲತನ ಅಳವಟ್ಟಲ್ಲಿ ರಾಗವಿರಾಗವೆಂಬುದಿಲ್ಲ. ಸುಖ ಸುಮ್ಮಾನ ರುಜೆ ರೋಗ ತಾಗು ನಿರೋಧ ಬಂದಲ್ಲಿ ಶೋಕ ಮೋಹಾದಿಗಳು ವರ್ತಿಸಿದಲ್ಲಿ ಜ್ಯೋತಿಯ ಬುಡದಂತೆ; ರಜ್ಜು ತೈಲ ಅಗ್ನಿ ಉಳ್ಳನ್ನಕ್ಕ ಉರಿದು ಆ ಬುಡ ಹೊದ್ದದಂತೆ. ಈ ಸಂಸಾರದ ಬುಡದಲ್ಲಿ ನಾನಾ ವಿಕಾರತ್ರಯದ ಗುಣದಲ್ಲಿ ನೀರಿನೊಳಗಿರ್ದು ಈಸುವನಂತೆ ಬಂಧ ಮೋಕ್ಷ ಕರ್ಮಂಗಳಲ್ಲಿ ದ್ವಂದ್ವಿತನಲ್ಲದೆ, ನಿಂದ ನಿಜೈಕ್ಯಂಗೆ ಹಿಂದು ಮುಂದೆಂಬ ಬಂಧವಿಲ್ಲ. ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥ-ಲಿಂಗವಾದವಂಗೆ.
--------------
ಗೋರಕ್ಷ / ಗೋರಖನಾಥ
ಎಲಾ, ಪರಮ ಪಾವನಚರಿತ ಪಾರ್ವತೀಶ ಪಾಪನಾಶ ಪರಮೇಶ ಈಶ. ಇಂತಪ್ಪ ಈಶನು ಭಕ್ತನಾ ಕರಸ್ಥಲದಲ್ಲಿ ಬಂದ ಬಳಿಕ ಭಕ್ತನೇ ದೊಡ್ಡಿತ್ತು ಕಾಣೆಲಾ ! ಇಂತಪ್ಪ ಭಕ್ತನಾ ಶರೀರಕ್ಕೆ ರೋಗ ಬಂದರೆ, ಬಳಿಕ ವೈದ್ಯನಾ ಕರೆಸಿ, ಮಹಾವೈದ್ಯವಾ ಮಾಡಿಸಿ, ವೈದ್ಯ ಭಾಗವ ತೆಗೆದು, ವೈದ್ಯ ಸೇವಿಸಿ, ಮಿಕ್ಕ ಎಂಜಲ ತಿಂದು ಬದುಕೇನೆಂಬೋ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ !
--------------
ಕೂಡಲಸಂಗಮೇಶ್ವರ
ತುಷವ ಕಳೆದ ತಂಡುಲವನಡಬೇಕು. ಸಿಪ್ಪೆಯ ಕಳೆದ ಹಣ್ಣ ಮೆಲಬೇಕು. ಕ್ರೀಯನರಿತು ಆಚಾರವನರಿಯಬೇಕು. ಆಚಾರವನರಿತು ವ್ರತಕ್ಕೆ ಓಸರಿಸದಿರಬೇಕು. ಮನ ವಸ್ತುವಾಗಿ, ವಸ್ತು ತಾನಾಗಿ, ಉಭಯ ಭಿನ್ನಭಾವವಿಲ್ಲದೆ ನಿಂದವಂಗೆ ಸಹಭೋಜನದಂಗ. ಶೋಕ, ರೋಗ, ಜನನಮರಣಾದಿಗಳಲ್ಲಿ ಆಕರಣೆಗೊಳಗಾಗುತ್ತ ಆರು ಸಹಭೋಜನಕ್ಕೆ ಘಾತಕತನವಲ್ಲವೆ ? ಇಂತೀ ಜಗದ ವರ್ತಕರು ಮೆಚ್ಚಬೇಕೆಂಬ ಕೃತ್ಯವ ಸದ್ಭಕ್ತರು ನೀವೆ ಬಲ್ಲಿರಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಾ ಈ ಭಾವವ ನೀನೆ ಬಲ್ಲೆ.
--------------
ಅಕ್ಕಮ್ಮ
ತೊತ್ತು ಶೃಂಗಾರವಾದಡೇನೋ ಪುರುಷನುಳ್ಳ ಮುತ್ತೈದೆಯ ಸರಿಯಹಳೆ? ಭಕ್ತರ ನುಡಿಗಡಣ ಸಂಗದಲ್ಲಿರಬೇಕೆಂದು ಗುರುಸಾಹಿತ್ಯಸಂಬಂಧವ ಮಾಡಿದಡೆ, ಅವರೆಲ್ಲರೂ ಭಕ್ತರಾಗಬಲ್ಲರೆ ? ಆಗಲರಿಯರು. ಅದೇನು ಕಾರಣವೆಂದಡೆ: ಸತ್ಯಸದಾಚಾರ ಭಕ್ತಿನಿಷೆ*ಯ ನಂಬುಗೆ ಇಲ್ಲವಾದ ಕಾರಣ. ಅಂಥ ಭಕ್ತಿನಿಷೆ* ನಂಬುಗೆಹೀನನ ಗೃಹದಲ್ಲಿರುವ ಸತಿ ಸುತ ಪಿತ ಮಾತೆ ಸಹೋದರ ಬಂಧುಜನ ಭೃತ್ಯದಾಸಿಯರೊಳಗಾಗಿ ಯಾವನಾನೊಬ್ಬಂಗೆ ಶಿವಾಜ್ಞೆಯಿಂದೆಡರಾಪತ್ತಿಟ್ಟಡೆ, ಬಂಧನ ರುಜೆ ರೋಗ ಮುಂತಾದವರ ತೆರದಿಂದಾದಡೆಯೂ ಶಿವಲಿಖಿತ ತುಂಬಿ ಲಿಂಗದೊಳಗಾದಡೆ, ಪೂರ್ವದ ಶಿವಲಿಂಗವೆಂದು ತಿಳಿವ ನಂಬುಗೆಯಿಲ್ಲದೆ, ಹಂಬಲಿಸಿ ಹಿಡಿಗೊಂಡು ಭ್ರಮಿಸುತ್ತ, ತಾವು ಭಕ್ತರಾಗಿ ಕೆಟ್ಟೆವು, ಮನೆದೈವ ಮುನಿದವು, ಧನಹಾನಿಯಾಯಿತ್ತು, ದರಿದ್ರಎಡೆಗೊಂಡಿತ್ತು, ಭಕ್ತರಾಗಿ ಕೆಟ್ಟೆವಿನ್ನು, ಹೇಗೆಂಬ ಭ್ರಷ್ಟರ ಮೆಟ್ಟುವ ನರಕದಲ್ಲಿ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಮಂತ್ರವ ಜಪಿಸಿ ಫಲವೇನಯ್ಯಾ ಮಂತ್ರಮ್ರ್ಕೂ ಕಾಣದನ್ನಕ್ಕ? ಯಂತ್ರವ ಧರಿಸಿ ಫಲವೇನಯ್ಯಾ ಅಂತರ ರೋಗ ಪರಿಹಾರವಾಗದನ್ನಕ್ಕ? ತಂತ್ರವನೋ ಫಲವೇನಯ್ಯಾ, ಅದರಂತರ ಮೈಗೂಡದನ್ನಕ್ಕ? ಶರಣನಾಗಿ ಫಲವೇನಯ್ಯಾ, ಂಗ ಜಂಗಮವ ಪೂಜಿಸಿ ಮೋಕ್ಷವಡೆಯದನ್ನಕ್ಕ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->