ಅಥವಾ

ಒಟ್ಟು 27 ಕಡೆಗಳಲ್ಲಿ , 15 ವಚನಕಾರರು , 25 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಮಸ್ತಕದಲ್ಲಿ ಹಕಾರವಾಗಿದ್ದಾತ ಪ್ರಭುದೇವ. ಎನ್ನ ಲಲಾಟದಲ್ಲಿ ಓಂಕಾರವಾಗಿದ್ದಾತ ಚೆನ್ನಬಸವ. ಎನ್ನ ಘ್ರಾಣದಲ್ಲಿ ನಕಾರವಾಗಿದ್ದಾತ ಮಡಿವಾಳಯ್ಯ. ಎನ್ನ ಬಾಯಿಯಲ್ಲಿ ಮಕಾರವಾಗಿದ್ದಾತ ಮರುಳು ಶಂಕರಯ್ಯ. ಎನ್ನ ನೇತ್ರದಲ್ಲಿ ಶಿಕಾರವಾಗಿದ್ದಾತ ಬಸವ. ಎನ್ನ ಕಪೋಲದಲ್ಲಿ ವಕಾರವಾಗಿದ್ದಾತ ಪಡಿಹಾರಿ ಬಸವಯ್ಯ. ಎನ್ನ ಶ್ರೋತ್ರದಲ್ಲಿ ಯಕಾರವಾಗಿದ್ದಾತ ಹಡಪದಪ್ಪಣ್ಣ. ಎನ್ನ ಜಿಹ್ವೆಯಲ್ಲಿ ಹ್ರೀಂಕಾರವಾಗಿದ್ದಾಕೆ ಅಕ್ಕನಾಗಮ್ಮ. ಎನ್ನ ಸರ್ವಾಂಗದಲ್ಲಿ ಸಕಲ ಪ್ರಣವರೂಪಾಗಿದ್ದಾತ ಗುರುವಿನ ಗುರು ಚೆನ್ನಬಸವ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಬಸವಣ್ಣನ ಶೃಂಗದಲ್ಲಿ ತುಂಬುರ ನಾರದರು, ಬಸವಣ್ಣನ ಲಲಾಟದಲ್ಲಿ ವೀರಗಣಂಗಳು, ಬಸವಣ್ಣನ ನಯನದಲ್ಲಿ ಸೂರ್ಯಚಂದ್ರರು, ಬಸವಣ್ಣನ ಕರ್ಣದಲ್ಲಿ ಗಂಗೆವಾಳುಕಸಮರುದ್ರರು, ಬಸವಣ್ಣನ ನಾಸಿಕದಲ್ಲಿ ವಾಯು, ಬಸವಣ್ಣನ ದಂತದಲ್ಲಿ ಭೃಂಗೀಶ್ವರದೇವರು, ಬಸವಣ್ಣನ ಕೊರಳಲ್ಲಿ ಈರೇಳು ಭುವನಂಗಳು, ಬಸವಣ್ಣನ ಅಂಡದಲ್ಲಿ ಅಷ್ಟಷಷ್ಟಿ ತೀರ್ಥಂಗಳು, ಬಸವಣ್ಣನ ಬಲದೊಡೆಯಲ್ಲಿ ಅಜ, ಹರಿ, ಸರಸ್ವತಿ, ಪಂಚನದಿ, ಮಹಾಗಂಗೆ, ಬಸವಣ್ಣನ ಮಣಿಪಾದದಲ್ಲಿ ದೇವಲೋಕದ ದೇವಗಣಂಗಳು, ಬಸವಣ್ಣನ ಕಿರುಗೊಳಗಿನಲ್ಲಿ ಸಮಸ್ತಸಮುದ್ರಂಗಳು. ಈ ಸಪ್ತಸಮುದ್ರಂಗಳೊಳಗಿಹ ಸಕಲಪ್ರಾಣಿಗಳಿಗೆ ಸಂಕೀರ್ಣತೆಯಾದೀತೆಂದು, ಬಾಲದಂಡದಲೆತ್ತಿ ತಡಿಗೆ ಸೇರಿಸಿದನು ನಮ್ಮ ಬಸವಣ್ಣನು-ಇದು ಕಾರಣ, ನಾಗಲೋಕದ ನಾಗಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳ ಕೊಂಬುದು ಬಸವಣ್ಣನ ಪ್ರಸಾದ. ರುದ್ರಲೋಕದ ರುದ್ರಗಣಂಗಳು ಕೊಂಬುದು ಬಸವಣ್ಣನ ಪ್ರಸಾದ.- ಇಂತು ನಮ್ಮ ಬಸವಣ್ಣನ ಪ್ರಸಾದವನುಂಡುಟ್ಟು ಕೊಂಡು ಕೊಟ್ಟು ಅನ್ಯದೈವಂಗಳ ಹೊಗಳುವ ಕುನ್ನಿಗಳನೇನೆಂಬೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಶೀಲವಂತರು ಶೀಲವಂತರು ಎಂದು ಶೀಲದಲ್ಲಿ ಆಚರಿಸುವ ಅಣ್ಣಗ[ಳೇ] ನಿಮ್ಮ ಶೀಲವಾವುದು ಹೇಳಿರೋ, ಅರಿಯದಿದ್ದರೆ ಕೇಳಿರೋ: ಶಿರಸ್ಸಿನಲ್ಲಿ ಶಿವನಿಪ್ಪ, ಕಟಿಯಲ್ಲಿ ವಿಷ್ಣುವಿಪ್ಪ, ಆಧಾರದಲ್ಲಿ ಬ್ರಹ್ಮನಿಪ್ಪ, ಲಲಾಟದಲ್ಲಿ ವಿಭೂತಿರುದ್ರಾಕ್ಷಿ, ಜಿಹ್ವೆಯಲ್ಲಿ ಪಂಚಾಕ್ಷರಿಯು. ಇಂತಪ್ಪ ಅಷ್ಟಾವರಣದಲ್ಲಿ ಸವೆಯದೆ, ಸಂಸಾರವೆಂಬ ಶರದ್ಥಿಯಲ್ಲಿ ಮುಳುಗೇಳುವರು ಶೀಲವಂತರಲ್ಲ. ಬರಿದೆ ನಾವು ಶೀಲವಂತರೆಂಬುವ ಮನುಜ ಕೇಳು: ಕಣ್ಣೇ ಕಂಚುಗಾರ, ಕರ್ಣವೇ ಬಣಜಿಗ, ಮೂಗೇ ಈಳಿಗ, ಕೊರಳೇ ಕುಂಬಾರ, ತುಟಿಯೇ ಹೆಂಡಗಾರ, ಹಲ್ಲೆ ಕಲ್ಲುಕುಟಿಗ, ತಲೆಯೇ ಮೋಪುಗಾರ, ಬೆನ್ನೇ ಜೇಡ, ಅಂಗೈಯೇ ಅಕ್ಕಸಾಲಿಗ, ಮುಂಗೈಯೇ ಬಡಿಗ, ಕರವೇ ಕೋಮಟಿಗ, ಕಣಕಾಲೇ ಕಾಳಿಂಗ, ಕುಂಡಿಯೇ ಕುಡುವೊಕ್ಕಲಿಗ, ಒಳದೊಡೆಯೇ ಸಮಗಾರ, ಹೊರದೊಡೆಯೇ ಮಚ್ಚಿಗ, ಮೇಗಾಡಿ ಹೊಲೆಯ, ಬುದ್ಧಿಯೇ ಬಯಲಗಂಬಾರ. -ಇಂತಪ್ಪ ಕುಲ ಹದಿನೆಂಟು ಜಾತಿ ಎಲು ಮಾಂಸವನು ತುಂಬಿಟ್ಟುಕೊಂಡು ನನ್ನ ಕುಲ ಹೆಚ್ಚು, ನಿನ್ನ ಕುಲ ಕಡಿಮೆ ಎಂದು ಹೊಡೆದಾಡುವಂತಹ ಅಣ್ಣಗಳನ್ನು ಹಿಡಿತಂದು ಮೂಗನೆ ಸವರಿ ಮೆಣಸಿನ ಹಿಟ್ಟು ತುಪ್ಪವ ತುಂಬಿ ನಮ್ಮ ಪಡಿಹಾರಿ ಉತ್ತಣ್ಣನ ವಾಮಪಾದುಕೆಯಿಂದ ಪಡಪಡನೆ ಹೊಡಿ ಎಂದಾತ, ನಮ್ಮಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಶ್ರೀಗುರು ಶಿವಗಣಂಗಳ ಮಧ್ಯದಲ್ಲಿ ಎನಗೆ ಉಪದೇಶಿಸುವಲ್ಲಿ ಪರಮೇಶ್ವರನ ಪಂಚಮುಖವನೆ ಪಂಚಕಳಶವಾಗಿ ಮೂರ್ತಿಗೊಳಿಸಿ, ಗಣಂಗಳು ಸಾಕ್ಷಿಯಾಗಿ ಕರಸ್ಥಲಕ್ಕೆ ಶಿವಲಿಂಗವ ಕೊಟ್ಟು `ಈ ಲಿಂಗವೆ ಗಂಡ, ನೀನೇ ಹೆಂಡತಿ'ಯೆಂದು ಹೇಳಿ, ಲಲಾಟದಲ್ಲಿ ವಿಭೂತಿಯ ಪಟ್ಟವ ಕಟ್ಟಿ ಹಸ್ತದಲ್ಲಿ ಕಂಕಣವ ಕಟ್ಟಿ, ಪಾದೋದಕ ಪ್ರಸಾದವನಿತ್ತು ಎಂದೆಂದಿಗೂ ಸತಿಪತಿಭಾವ ತಪ್ಪದಿರಲಿಯೆಂದು ನಿರೂಪಿಸಿದದನಯ್ಯ ಶ್ರೀಗುರು. ಆ ನಿರೂಪವ ಮಹಾಪ್ರಸಾದವೆಂದು ಕೈಕೊಂಡೆನಯ್ಯ. ಇದು ಕಾರಣ, ಎನ್ನ ಪತಿಯಲ್ಲದೆ ಅನ್ಯವನರಿಯೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಎನ್ನ ಕಕ್ಷೆಯಲ್ಲಿ ಸ್ವಾಯತವಾದನಯ್ಯಾ ಶಂಕರದಾಸಿಮಯ್ಯನು. ಎನ್ನ ಕರಸ್ಥಲದಲ್ಲಿ ಸ್ವಾಯತವಾದನಯ್ಯಾ ಉರಿಲಿಂಗಪೆದ್ದಯ್ಯನು. ಎನ್ನ ಉರಸೆಜ್ಜೆಯಲ್ಲಿ ಸ್ವಾಯತವಾದನಯ್ಯ ಘಟ್ಟಿವಾಳ ಮದ್ದಯ್ಯನು. ಎನ್ನ ಅಮಳೋಕ್ಯದಲ್ಲಿ ಸ್ವಾಯತವಾದನಯ್ಯಾ ಅಜಗಣಯ್ಯನು. ಎನ್ನ ಮುಖಸೆಜ್ಜೆಯಲ್ಲಿ ಸ್ವಾಯತವಾದನಯ್ಯಾ ನಿಜಗುಣದೇವರು. ಎನ್ನ ಶಿಖೆಯಲ್ಲಿ ಸ್ವಾಯತವಾದನಯ್ಯಾ ಅನಿಮಿಷದೇವರು. ಎನ್ನ ಘ್ರಾಣದಲ್ಲಿ ಸ್ವಾಯತವಾದನಯ್ಯಾ ಏಕೋರಾಮಿತಂದೆಗಳು. ಎನ್ನ ಜಿಹ್ವೆಯಲ್ಲಿ ಸ್ವಾಯತವಾದನಯ್ಯಾ ಪಂಡಿತಾರಾಧ್ಯರು. ಎನ್ನ ನೇತ್ರದಲ್ಲಿ ಸ್ವಾಯತವಾದನಯ್ಯಾ ರೇವಣಸಿದ್ದೇಶ್ವರದೇವರು. ಎನ್ನ ತ್ವಕ್ಕಿನಲ್ಲಿ ಸ್ವಾಯತವಾದನಯ್ಯಾ ಸಿದ್ಧರಾಮೇಶ್ವರದೇರು. ಎನ್ನ ಶ್ರೋತ್ರದಲ್ಲಿ ಸ್ವಾಯತವಾದನಯ್ಯಾ ಮರುಳಸಿದ್ಧೇಶ್ವರದೇವರು. ಎನ್ನ ಹೃದಯದಲ್ಲಿ ಸ್ವಾಯತವಾದನಯ್ಯಾ ಪ್ರಭುದೇವರು. ಎನ್ನ ಭ್ರೂಮಧ್ಯದಲ್ಲಿ ಸ್ವಾಯತವಾದನಯ್ಯಾ ಚೆನ್ನಬಸವಣ್ಣನು. ಎನ್ನ ಬ್ರಹ್ಮರಂಧ್ರದಲ್ಲಿ ಸ್ವಾಯತವಾದನಯ್ಯಾ ಸಂಗನಬಸವಣ್ಣನು. ಎನ್ನ ಉತ್ತಮಾಂಗದಲ್ಲಿ ಸ್ವಾಯತವಾದನಯ್ಯಾ ಮಡಿವಾಳಯ್ಯನು. ಎನ್ನ ಲಲಾಟದಲ್ಲಿ ಸ್ವಾಯತವಾದನಯ್ಯಾ ಸೊಡ್ಡಳ ಬಾಚರಸರು. ಎನ್ನ ಪಶ್ಚಿಮದಲ್ಲಿ ಸ್ವಾಯತವಾದನಯ್ಯಾ ಕಿನ್ನರ ಬ್ರಹ್ಮಯ್ಯನು. ಎನ್ನ ಸರ್ವಾಂಗದಲ್ಲಿ ಸ್ವಾಯತವಾದನಯ್ಯಾ ಗಣಂಗಳು. ಮಹಾಲಿಂಗ ಕಲ್ಲೇಶ್ವರಾ, ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಹಾವಿನಹಾಳ ಕಲ್ಲಯ್ಯ
ಮುನ್ನ ಮಾಡಿದ ಪಾಪವೆಂತು ಹೋಹುದೆಂದು ಚಿಂತಿಸಬೇಡ. ಕಹಿ ಸೋರೆಯ ಕಾಯ ತಂದು ವಿಭೂತಿಯ ತುಂಬಿದಡೆ ಸಿಹಿಯಾಗದೆ ಮೂರು ದಿವಸಕ್ಕಯ್ಯಾ ಹಲವು ಕಾಲ ಕೊಂದ ಸೂನೆಗಾರನ ಕತ್ತಿಯಾದಡೇನು ಪರುಷ ಮುಟ್ಟಲಿಕೆ ಹೊನ್ನಾಗದೆ ಅಯ್ಯಾ ಲಲಾಟದಲ್ಲಿ ವಿಭೂತಿ ಬರೆಯಲಿಕೆ ಪಾಪ ಪಲ್ಲಟವಾಗದೆ ಕೂಡಲಸಂಗಮದೇವಾ 73
--------------
ಬಸವಣ್ಣ
ಸಪ್ತಧಾತುಗಳಿಂದ ದೇಹವಾಗಿ ಬೆಳೆದ ಪಿಂಡ ಅಪಾದಮಸ್ತಕವೆಲ್ಲ ಬ್ರಹ್ಮಾಂಡಸಂಗ್ರಹಮಾಗಿ ತೋರ್ಪುದದೆಂತೆಂದಡೆ : ಪಾದತಳದಲ್ಲಿ ಅತಳಲೋಕ, ಪಾದೋಧ್ರ್ವದಲ್ಲಿ ವಿತಳಲೋಕ, ಜಂಘೆಯಲ್ಲಿ ಸುತಳಲೋಕ, ಜಾನುವಿನಲ್ಲಿ ನಿತಳಲೋಕ, ಊರುದ್ವಯದಲ್ಲಿ ತಳಾತಳಲೋಕ, ಗುಹ್ಯಸ್ಥಾನದಲ್ಲಿ ರಸಾತಳಲೋಕ, ಕಟಿಯಲ್ಲಿ ಪಾತಾಳಲೋಕ. ಆ ಕಟಿಸ್ಥಾನದ ಪಾತಾಳಲೋಕದ ಮೇಲೆ ಅಧೋಬ್ರಹ್ಮರಂಧ್ರ ವಳಯಾಕೃತವಾಗಿಹುದು. ಆ ಅಧೋಬ್ರಹ್ಮರಂಧ್ರದ ವಳಯಾಕೃತದೊಳು ಅಮೃತವೆಂಬ ಮಹಾಜಲವಿಹುದು. ಅಮೃತವೆಂಬ ಮಹಾಜಲದಮೇಲೆ ಅಧೋಜ್ಯೋತಿಪ್ರಣಮಲಿಂಗವೆಂಬ ಮಹಾಕಮಠನಿಹುದು. ಆ ಮಹಾಕಮಠನ ಮೇಲೆ ಅಧೋಕುಂಡಲಿಯ ಸರ್ಪನೆಂಬ ಮಹಾವಾಸುಗಿ ಇಹುದು. ಸಂಸ್ಥಿತ, ತೃಣೀಕೃತ, ವರ್ತಿನಿ, ಕ್ರೋಧಿನಿ, ಮೋಹಿನಿ, ಅತಿಚಾರಿಣಿ, ಗಂಧಚಾರಿಣಿ, ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳೆಂಬ ಅಷ್ಟದಿಕ್‍ಮಹಾಗಜಂಗಳ ಮೇಲೆ ಭೂಲೋಕವಿಹುದು. ಆ ಭೂಲೋಕ ನಾಭಿಸ್ಥಾನಂಗಳಲ್ಲಿಹುದು. ಕುಕ್ಷಿಯಲ್ಲಿ ಭುವರ್ಲೋಕವಿಹುದು. ಹೃದಯಸ್ಥಾನದಲ್ಲಿ ಸ್ವರ್ಲೋಕವಿಹುದು. ವಕ್ಷದಲ್ಲಿ ಮಹರ್ಲೋಕವಿಹುದು. ಕಂಠಸ್ಥಾನದಲ್ಲಿ ಜನರ್ಲೋಕವಿಹುದು. ಲಲಾಟದಲ್ಲಿ ತಪರ್ಲೋಕವಿಹುದು. ಶಿರಸ್ಥಾನದಲ್ಲಿ ಸತ್ಯರ್ಲೋಕವಿಹುದು. ಬ್ರಹ್ಮರಂಧ್ರದಲ್ಲಿ ಮಹಾಪ್ರಳಯಜಲವಿಹುದು. ಶಿಖಾಚಕ್ರದಲ್ಲಿ ಶಿವಾಂಡವಿಹುದು. ಪಶ್ಚಿಮಚಕ್ರದಲ್ಲಿ ಚಿದ್ಬ್ರಹ್ಮಾಂಡವಿಹುದು. ಇದಕ್ಕೆ ಶ್ರೀ ಮಹಾದೇವ ಉವಾಚ : ``ಪಾದಸ್ವತಲಂ ವಿದ್ಯಾತ್ ಪಾದೋಧ್ರ್ವಂ ವಿತಲಂ ಭವೇತ್ | ಸುತಲಂ ಜಂಘದೇಶೇಷು ನಿತಲಂ ಜಾನುನೋದಯೇ || ತಲಾತಲಂ ಚ ಉಭ್ಯಾಗಂ ಗುಹ್ಯಸ್ಥಾನೇ ರಸಾತಲಂ | ಪಾತಾಲಂ ಕಟಿರಿತ್ಯುಕ್ತಂ ಸಪ್ತಮಂ ಪರಿಕೀರ್ತಿತಂ || ಭೂಲೋಕಂ ನಾಭಿಮಧ್ಯಸ್ಥಂ ಭುವರ್ಲೋಕಂತು ಕುಕ್ಷಿಗಂ | ಹೃದಿಸ್ಥಂ ಸ್ವರ್ಲೋಕಂತು ಮಹರ್ಲೋಕಂತು ವಕ್ಷಸಿ || ಕಂಠಸ್ಥಂ ಜನರ್ಲೋಕಂತು ತಪರ್ಲೋಕಂ ಲಲಾಟಕೇ | ಸತ್ಯರ್ಲೋಕಮೂದ್ರ್ಧನ್ಯಸ್ತಿಂ ಭುವನಾನಿ ಚತುರ್ದಶ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬ್ರಹ್ಮರಂಧ್ರದಲ್ಲಿ ಅನಾದಿಗಣೇಶ್ವರನೆನಿಸಿ, ಸರ್ವತೋಮುಖ[ವಾ]ಗಿಪ್ಪಿರಯ್ಯ. ಲಲಾಟದಲ್ಲಿ ಆದಿಗಣೇಶ್ವರನೆನಿಸಿಪ್ಪಿರಯ್ಯ. ಬಲದ ಕರ್ಣದಲ್ಲಿ ಆತ್ಮಗಣೇಶ್ವರನೆನಿಸಿಪ್ಪಿರಯ್ಯ. ಎಡದ ಕರ್ಣದಲ್ಲಿ ಆಧ್ಯಾತ್ಮಗಣೇಶ್ವರನೆನಿಸಿಪ್ಪಿರಯ್ಯ. ಬಲದ ನಯನದಲ್ಲಿ ನಿರ್ಮಾಯನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ನಯನದಲ್ಲಿ ನಿರ್ಮಲನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ನಾಸಿಕದಲ್ಲಿ ನಿರ್ಭಯನೆಂಬ ಗಣೇಶ್ವರನೆನೆಸಿಪ್ಪಿರಯ್ಯ. ಜಿಹ್ವೆಯಲ್ಲಿ ನಿರ್ಭಾವನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬೆನ್ನಿನಲ್ಲಿ ಪಂಚವದನನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಕಂಠದಲ್ಲಿ ಜ್ಞಾನಾನಂದನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಭುಜದಲ್ಲಿ ಅಕ್ಷಯನೆಂಬ ಗಣೇಶ್ವರನೆಸಿಪ್ಪಿರಯ್ಯ. ಎಡದ ಭುಜದಲ್ಲಿ ವ್ಯೋಮಸಿದ್ಧನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ತೋಳಿನಲ್ಲಿ ಸದಾಶಿವನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ತೋಳಿನಲ್ಲಿ ಶೂಲಪಾಣಿಯೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಮುಂಗೈಯಲ್ಲಿ ಭಾಳಲೋಚನನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಮುಂಗೈಯಲ್ಲಿ ಪಶುಪತಿಯೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಬರಿಯಲ್ಲಿ ಭವಹರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಬರಿಯಲ್ಲಿ ಮೃಡನೆಂಬ ಗಣೇಶ್ವರನೆನಿಸಿಪ್ಪಿರಯ್ಯ ಹೃದಯದಲ್ಲಿ ಓಂಕಾರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ನಾಭಿಯಲ್ಲಿ ಶಂಕರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಕಟಿಯಲ್ಲಿ ಮೃತ್ಯುಂಜಯನೆಂಬ ಗಣೇಶ್ವರನೆನಿಸಿಪ್ಪಿರಯ್ಯ ಗುಹ್ಯದಲ್ಲಿ ಕಾಮಾಂತಕನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಗುಧಸ್ಥಾನದಲ್ಲಿ ಕಾಲಾಂತಕನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ತೊಡೆಯಲ್ಲಿ ಪ್ರಮಥನಾಥನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ತೊಡೆಯಲ್ಲಿ ಮಹಾಮಹೇಶ್ವರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಮಣಿಪಾದದಲ್ಲಿ ಪಟ್ಟವರ್ಧನನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಮಣಿಪಾದದಲ್ಲಿ ಚಂದ್ರಶೇಖರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಕಣಪಾದದಲ್ಲಿ ಅಖಂಡಿತನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಕಣಪಾದದಲ್ಲಿ ವ್ಯೋಮಕೇಶನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಹರಡಿನಲ್ಲಿ ಜನನ ವಿರಹಿತನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಹರಡಿನಲ್ಲಿ ವಿಶ್ವೇಶ್ವರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಮೇಗಾಲಲ್ಲಿ ಮೇಘವಾಹನನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಮೇಗಾಲಲ್ಲಿ ಈಶಾನ್ಯನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಉಂಗುಷ*ದಲ್ಲಿ ಮಣಿಭೂಷಣನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಉಂಗುಷ*ದಲ್ಲಿ ವಿರೂಪಕ್ಷನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಬಲದ ಆರೆಪಾದದಲ್ಲಿ ಊಧ್ರ್ವಮುಖನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಎಡದ ಅರೆಪಾದದಲ್ಲಿ ಸಚರಾಚರನೆಂಬ ಗಣೇಶ್ವರನೆನಿಸಿಪ್ಪಿರಯ್ಯ. ಆಧಾರಸ್ಥಾನದಲ್ಲಿ ಆಚಾರಲಿಂಗವೆನಿಸಿಪ್ಪಿರಯ್ಯ. ಸ್ವಾಧಿಷಾ*ನದಲ್ಲಿ ಗುರುಲಿಂಗವೆನಿಸಿಪ್ಪಿರಯ್ಯ. ಮಣಿಪೂರಕದಲ್ಲಿ ಶಿವಲಿಂಗವೆನಿಸಿಪ್ಪಿರಯ್ಯ. ಅನಾಹತದಲ್ಲಿ ಜಂಗಮಲಿಂಗವೆನಿಸಿಪ್ಪಿರಯ್ಯ. ವಿಶುದ್ಧಿಯಲ್ಲಿ ಪ್ರಸಾದಲಿಂಗವೆನಿಸಿಪ್ಪರಯ್ಯ. ಆಜ್ಞಾಯಲ್ಲಿ ಮಹಾಲಿಂಗವೆನಿಸಿಪ್ಪಿರಯ್ಯ. ಇಂತಿವೆಲ್ಲಾ ನಾಮಂಗಳನೊಳಕೊಂಡು, `ಓಂ ನಮಃ ಶಿವಾಯ ಇತಿಮಂತ್ರಂ ಸರ್ವಮಂತ್ರಾನ್ ಸ್ಥಾಪಯೇತ್. ಮಂತ್ರಮೂರ್ತಿ ಮಹಾರುದ್ರಂ, ಓಂ ಇತಿ ಜ್ಯೋತಿರೂಪಕಂ' ಎನಿಸಿಕೊಂಡು ಬಾಹ್ಯಾಭ್ಯಂತರದೊಳು ಪರಿಪೂರ್ಣವಾಗಿ ಪ್ರಕಾಶಿಸುತ್ತಿಪ್ಪಿರಿಯಾಗಿ ಸರ್ವಾಂಗವು ಲಿಂಗಮಯವೆಂದರಿದು ಅಡಿಗಡಿಗೆ ಶ್ರೀ ವಿಭೂತಿಯನೆ ಧರಿಸುತಿಪ್ಪೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸದ್‍ಭಕ್ತನ ಸತ್ಕ್ರಿಯವೆ ಗುರುವೆನಿಸಿ, ಮಂಗಳ ಅಂಗಪೀಠದ ಮುಹೂರ್ತಗೊಂಡ ಹರರೂಪವೇ ಲಿಂಗವೆನಿಸಿ, ಲಿಂಗನ ಪೂಜಿಸುವ ಸದಾಚಾರವೇ ಜಂಗಮವೆನಿಸಿ, ಪಾದ್ಯದಲ್ಲಿ ಪಾದೋದಕವಾಗಿ, ಜಿಹ್ವೆಯಲ್ಲಿ ಪ್ರಸಾದವಾಗಿ, ಲಲಾಟದಲ್ಲಿ ವಿಭೂತಿಧಾರಣವಾಗಿ, ಉರ, ಸಿರ, ಕಂಠದಲ್ಲಿ ಶಿವಾಕ್ಷಿಮಣಿಯೆನಿಸಿ, ಶ್ರೋತ್ರದಲ್ಲಿ ಮಂತ್ರವಾಗಿ ಇಂತು ಇವು ಬಾಹ್ಯ ಅಷ್ಟಾವರಣದ ಕ್ರಮವೆನಿಸಿತ್ತು. ಇನ್ನು ಅಂತರಂಗದಿ ಆತ್ಮನ ಅರುವೆ ಗುರುವೆನಿಸಿತ್ತು. ಪ್ರಾಣವೆ ಲಿಂಗವಾಗಿ ತೋರಿತ್ತು. ಪರಿಪೂರ್ಣ ಪರವಸ್ತುವಿನ ಜ್ಞಾನವೆ ಜಂಗಮವೆನಿಸಿತ್ತು. ಜಿಹ್ವಾಗ್ರವೇ ಪಾದೋದಕವಾಗಿ, ನಾಶಿಕವೆ ಪ್ರಸಾದವಾಗಿ, ತ್ವಕ್ಕಿನಲ್ಲಿ ಶ್ರೀವಿಭೂತಿ, ನೇತ್ರದಲ್ಲಿ ಪರಾಕ್ಷಮಣಿ, ಕರ್ಣದ್ವಾರದೊಳು ಮೊಳಗುವ ಮಂತ್ರದಿಂದೆ ಕೂಡಿಕೊಂಡ ಈ ಪರಿಯೇ ಅಂತರಾತ್ಮಷ್ಟಾವರಣವೆನಿಸಿತು. ನೀನೊಂದು ಇದ್ದು ಇಂತುಪರಿಯಲ್ಲಿ ಪೂಜೆ ಪೂಜಕ ಪೂಜ್ಯನೆನಿಸಿ ಮೆರೆದಿಯಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಶ್ರೀಗುರುವಿನ ಕರಗರ್ಭದಲ್ಲಿ ಉದಯವಾದ ಶರಣಸತಿ ನಾನು. ಶ್ರೀಗುರುವಿನ ಹೃದಯಗರ್ಭದಲ್ಲಿ ಉದಯವಾದ ಲಿಂಗಪತಿಗೆ ಎನ್ನ ಮದುವೆಯ ಮಾಡುವ ಕಾಲದಲ್ಲಿ ಸಹಸ್ರದಳಕಮಲವೆಂಬ ಸಾವಿರಕಂಬದ ಮಂಟಪವ ರಚಿಸಿ, ಆ ಮಂಟಪದ ಮಧ್ಯದಲ್ಲಿ ಪಂಚಪಾತ್ರವೆಂಬ ಪಂಚಮುದ್ರೆಯ ರಂಗವಲ್ಲಿಯ ತುಂಬಿ, ಆ ಪಂಚಮುದ್ರೆಯಲ್ಲಿ ಪಂಚಪ್ರಣವೆಂಬ ಪಂಚಕಲಶವ ಹೂಡಿ, ಆ ಪಂಚಕಲಶಂಗಳಿಗೆ ಸ್ವಾನುಭಾವಜ್ಞಾನವೆಂಬ ಸುರಗಿಯ ಸುತ್ತಿ, ಆ ಮಧ್ಯದಲ್ಲಿ ಎನಗೆ ಶೃಂಗಾರವ ಮಾಡಿದರೆಂತೆನಲು, ಸರ್ವಾಚಾರಸಂಪತ್ತೆಂಬ ಸೀರೆಯನುಡಿಸಿ, ಸುಜ್ಞಾನವೆಂಬ ಕುಪ್ಪಸವ ತೊಡಿಸಿ, ಸದ್ಭಕ್ತಿಯೆಂಬ ಬಳೆಯನಿಡಿಸಿ, ಏಕಭಾವದ ನಿಷೆ*ಯೆಂಬ ತಾಳಿಯ ಕಟ್ಟಿ, ನಿಜಮುಕ್ತಿಯೆಂಬ ಮೂಗುತಿಯನಿಟ್ಟು ಶಿವಮಂತ್ರವೆಂಬ ಕರ್ಣಾಭರಣವ ಧರಿಸಿ, ಸತ್ಕ್ರಿಯೆಯೆಂಬ ಪಾದಾಭರಣವ ಧರಿಸಿ, ಪರಮೇಶ್ವರನ ಚಿತ್‍ಪ್ರಕಾಶವೆಂಬ ಚಿದ್‍ವಿಭೂತಿಯನೆ ತಂದು, ಎನ್ನ ಲಲಾಟದಲ್ಲಿ ಪಟ್ಟವ ಕಟ್ಟಿ, ಸತಿಸಂಗವಗಲಬೇಡವೆಂದು ಎನ್ನ ಪತಿಯ ಸೆರಗ ತಂದು ಎನ್ನ ಸೆರಗಿಗೆ ಕೂಡಿಸಿ, ಷಟ್‍ಸ್ಥಲಬ್ರಹ್ಮಗಂಟನಿಕ್ಕಿ, ಪತಿಭಕ್ತಿಯಗಲದಿರೆಂದು ಎನ್ನ ಮುಂಗೈಯಲ್ಲಿ ಸಕಲಗಣಂಗಳ ಸಾಕ್ಷಿಯಾಗಿ ಬಿರುದಿನ ವೀರಕಂಕಣವ ಕಟ್ಟಿ, ಜಂಗಮದ ಪಾದತೀರ್ಥ ಪ್ರಸಾದವೆಂಬ ಭೂಮವನುಣಿಸಿ, ಮದುವೆಯ ಮಾಡಿದರಂದು. ಇಂದು ಎನಗೆ ಯೌವನವಾಯಿತ್ತು. ಏಳುನೆಲೆಯ ಮೇಲುಪ್ಪರಿಗೆಯ ಮೇಲೆ ಲೀಲೆಯಿಂದ ಕೂಡಿ ಸುಖಿಸಯ್ಯಾ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಂಗದ ಮೇಲೆ ಶಿವಲಿಂಗವ ನೆಲೆಗೊಂಡು, ಲಲಾಟದಲ್ಲಿ ಶ್ರೀ ವಿಭೂತಿಯಂ ಧರಿಸಿ, ಗರಳದಲ್ಲಿ ರುದ್ರಾಕ್ಷಿಯ ಧರಿಸಿ, ಓಂ ನಮೋ ಶಿವಾಯವೆಂಬ ಮಂತ್ರ ಅಷ್ಟಾವರಣಯುಕ್ತನಾಗಿ ಇರಬಲ್ಲವನೆ ನಿಮ್ಮ ಶರಣ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಎನ್ನಂಗದಲ್ಲಿ ನಿನಗೆ ಮಜ್ಜನ, ಎನ್ನ ಲಲಾಟದಲ್ಲಿ ನಿನಗೆ ಗಂಧಾಕ್ಷತೆ, ಎನ್ನ ತುರುಬಿನಲ್ಲಿ ನಿನಗೆ ಕುಸುಮಪೂಜೆ. ಎನ್ನ ನೇತ್ರದಲ್ಲಿ ನಿನಗೆ ನಾನಾರೂಪು ವಿಚಿತ್ರವಿನೋದ, ಎನ್ನ ಶ್ರೋತ್ರದಲ್ಲಿ ನಿನಗೆ ಪಂಚಮಹಾವಾದ್ಯ ಕೇಳಿಕೆ, ಎನ್ನ ನಾಸಿಕದಲ್ಲಿ ನಿನಗೆ ಸುಗಂಧ, ಧೂಪಪರಿಮಳ, ಎನ್ನ ಜಿಹ್ವೆಯಲ್ಲಿ ನಿನಗೆ ಷಡ್ರಸಾನ್ನನೈವೇದ್ಯ, ಎನ್ನ ತ್ವಕ್ಕಿನಲ್ಲಿ ನಿನಗೆ ವಸ್ತ್ರಾಭರಣಾಲಂಕಾರಪೂಜೆ, ಎನ್ನ ಸಚ್ಚಿದಾನಂದ ಸಜ್ಜೆಗೃಹದಲ್ಲಿ ನೀನು ಸ್ಪರ್ಶನಂಗೆಯ್ದು ನೆರೆದಿಪ್ಪೆಯಾಗಿ ನೀ ನಾನೆಂಬೆರಡಳಿದು ತಾನು ತಾನಾದ ಘನವನೇನೆಂಬೆನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಲಲಾಟದಲ್ಲಿ ವಿಭೂತಿ, ಕೊರಳಲ್ಲಿ ರುದ್ರಾಕ್ಷೆಯ ಮಾಲೆ ಮುಖದಲ್ಲಿ ಶಿವಮಂತ್ರ, ಅಂಗದ ಮೇಲೆ ಶಿವಲಿಂಗ ಧಾರಣವುಳ್ಳ ಶಿವಭಕ್ತನೆ ಸಾಕ್ಷಾತ್ ಶಿವ ತಾನೆ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮಹಾಜ್ಞಾನ ಗುರುವಿನಲ್ಲಿ ಸ್ವಾಯತವಾಯಿತ್ತು, ಸುಜ್ಞಾನ ಶಿಷ್ಯನಲ್ಲಿ ಸ್ವಾಯತವಾಯಿತ್ತು; ಜ್ಞಾನ ಲಿಂಗದಲ್ಲಿ ಸ್ವಾಯತವಾಯಿತ್ತು.- ಇಂತು ಜ್ಞಾನ ಸುಜ್ಞಾನ ಮಹಾಜ್ಞಾನವೆಂಬವು, ಜಂಗಮ ಲಿಂಗದಲ್ಲಿ ಸ್ವಾಯತವಾಗಿಪ್ಪುವಾಗಿ! - ಅದು ಕಾರಣ, ಲಿಂಗಕ್ಕೆ ಮಜ್ಜನಕ್ಕೆರೆಯಲಾಗದು; ಅದೇನು ಕಾರಣವೆಂದಡೆ- ಗಮನಿಸಿ ಬಂದ ಜಂಗಮಲಿಂಗವು ಪಾದಾರ್ಚನೆಯ ಮಾಡಿ[ಕೊಂಬು]ದಾಗಿ. ಲಿಂಗಕ್ಕೆ ವಸ್ತ್ರವ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ವಸ್ತ್ರಾಲಂಕಾರವ ಮಾಡಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಗಂಧವ ಪೂಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಗಂಧವ ಲೇಪಿಸಿಕೊಳ್ಳ[ಬಲ್ಲು]ದಾಗಿ ಲಿಂಗಕ್ಕೆ ಅಕ್ಷತೆಯ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮವು ಲಲಾಟದಲ್ಲಿ ಧರಿಸಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಪುಷ್ಪವ ಕೊಡಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು, ತಮ್ಮ ಸಿರಿಮುಡಿಯಲ್ಲಿ ತುರುಬಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಧೂಪಾರತಿಯ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ನಾಸಿಕದಲ್ಲಿ ಪರಮಳವ ಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ದೀಪಾರತಿಯ ಬೆಳಗಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು, ದೃಷ್ಟಿಯಲ್ಲಿ ನೋಡಿ ಪರಿಣಾಮಿಸ[ಬಲ್ಲು]ದಾಗಿ. ಲಿಂಗಕ್ಕೆ ನೈವೇದ್ಯವ ಕೊಡಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು ಜಿಹ್ವೆಯಲ್ಲಿ ಸಕಲರುಚಿಗಳ ರುಚಿಸ[ಬಲ್ಲು]ದಾಗಿ. ಲಿಂಗಕ್ಕೆ ಹಸ್ತಮಜ್ಜನಕ್ಕೆ ಸಿತಾಳವ ನೀಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ಹಸ್ತಮಜ್ಜನವ ಮಾಡಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ತಾಂಬೂಲವನರ್ಪಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ಶ್ರೀಮುಖದಲ್ಲಿ ತಾಂಬೂಲವನರ್ಪಿಸಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಸುಖಾಸನವನಿಕ್ಕಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಸುಖಾಸನದಲ್ಲಿ ಕುಳ್ಳಿರ[ಬಲ್ಲು]ದಾಗಿ. ಲಿಂಗಕ್ಕೆ ಸ್ತೋತ್ರ, ಮಂತ್ರ, ಗೀತ, ವಾದ್ಯ, ನೃತ್ಯಂಗಳನಾಗಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ನೇತ್ರ ಶ್ರೋತ್ರ ಹಸ್ತಂಗಳಿಂದ ಸ್ತೋತ್ರ ಮಂತ್ರ ವಾದ್ಯ ನೃತ್ಯಂಗಳ ಕೇಳಿ ನೋಡಿ ತಣಿದು ಪರಿಣಾಮಿಸ[ಬಲ್ಲು]ದಾಗಿ. ಲಿಂಗಕ್ಕೆ ಭೂಷಣಲಂಕಾರವ ಮಾಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಕರ ಶಿರ ಚರಣಾದ್ಯವಯವಂಗಳಲ್ಲಿ ಆಭರಣಂಗಳನಲಂಕರಿಸ[ಬಲ್ಲು]ದಾಗಿ. ಲಿಂಗಕ್ಕೆ ವಾಹನಂಗಳನರ್ಪಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ವಾಹನಂಗಳ ಮೇಲೆ ಕುಳಿತು ಚಲಿಸ[ಬಲ್ಲು]ದಾಗಿ. ಇಂತೀ ಹದಿನಾರು ತೆರದ ಭಕ್ತಿಯನು ಚರಲಿಂಗವೆಂಬ ಜಂಗಮಲಿಂಗಕ್ಕೆ ದಾಸೋಹವ ಮಾಡಿ ಪ್ರಸಾದವ ಕೊಂಬ ಭಕ್ತಂಗೆ ಗುರುವುಂಟು, ಲಿಂಗವುಂಟು ಜಂಗಮವುಂಟು, ಪಾದೋದಕ ಪ್ರಸಾದವುಂಟು. ಆಚಾರವುಂಟು ಸದ್ಭಕ್ತಿಯುಂಟು. ಇಂತೀ ಎಲ್ಲವನು ಜಂಗಮಕ್ಕೆ ದಾಸೋಹವ ಮಾಡದೆ ತನ್ನ ಗುರುವಿಗೂ ಲಿಂಗಕ್ಕೂ ಆರು ಕೆಲಂಬರು ಭಕ್ತಿಯ ಮಾಡುವರು ಅವರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕ ಪ್ರಸಾದವಿಲ್ಲ. ಇಂತೀ ಪಂಚಾಚಾರವಿಲ್ಲವಾಗಿ ಅವರು ವ್ರತಗೇಡಿಗಳು. ಅವರ ಮುಖವ ನೋಡಲಾಗದು, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->