ಅಥವಾ

ಒಟ್ಟು 37 ಕಡೆಗಳಲ್ಲಿ , 13 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಶ್ರೀಗುರುಲಿಂಗಜಂಗಮ ಕರುಣ ಕಟಾಕ್ಷೆಯಿಂದ ಶ್ರುತಿ ಗುರು ಶ್ವಾನುಭಾವವಿಡಿದು ಹಿಡಿದಂಥ ಸನ್ಮಾರ್ಗಾಚಾರಕ್ರಿಯೆಗಳ ಅಪಮೃತ್ಯು ಬಂದು ತಟ್ಟಿ ಪ್ರಾಣತ್ಯಾಗವ ಮಾಡಿದಡು ಅಂಜಿ ಅಳುಕದೆ, ಪರಮ ಪತಿವ್ರತತ್ವದಿಂದ ಹಿಂದು ಮುಂದಣ ಪುಣ್ಯಪಾಪವನೆಣಿಸದೆ, ಇಂತು ಶ್ರೀಗುರುವಾಕ್ಯವ ನಿಜನೈಷ್ಠಯಿಂದರಿದು, ನಿಜವೀರಶೈವ ಸದ್ಭಕ್ತಾಚಾರಲಿಂಗಮುಖದಿಂದ ಬಂದ ಸ್ವಪಾಕವಾದಡು ಸರಿಯೆ, ಷಣ್ಮತದಿಂದ ಧನ-ಧಾನ್ಯರೂಪಿನಿಂದ ಬಂದ ಪದಾರ್ಥವಾದಡು ಸರಿಯೆ, ಭಕ್ತಾಶ್ರಯದಲ್ಲಿ ಸ್ವಪಾಕವ ಮಾಡಿ, ಸಂಬಂಧಾಚರಣೆಗಳಿಂದ ಪವಿತ್ರಸ್ವರೂಪ ಪಾದೋದಕ ಪ್ರಸಾದವೆನಿಸಿ, ನಿರ್ವಂಚಕತ್ವದಿಂದ ಸಂಚಲಚಿತ್ತವನಳಿದು, ಮಂತ್ರಸ್ಮರಣೆಯಿಂದ ಸರ್ವಾಚಾರ ಸಂಪತ್ತಿನಾಚರಣೆಯನೊಳಕೊಂಡು, ಸಮಸ್ತಲೋಕ ಪಾವನಮೂರ್ತಿ ನಿಷ್ಕಲ ಪರಶಿವಲಿಂಗಜಂಗಮಕ್ಕೆ ಕೊಟ್ಟುಕೊಂಬ ಸದ್ಭಕ್ತ ಜಂಗಮದ ಚರಣಕಮಲಧೂಳನವೆ ದ್ವಿತೀಯ ಕೈಲಾಸ ಶಿವಮಂದಿರವೆಂದು ಹಿಂದು-ಮುಂದಣ ಆಶೆ-ಆಮಿಷದ ಭ್ರಾಂತು-ಭ್ರಮೆಗಳನುಳಿದು, ಧ್ಯಾನ-ಮೌನ-ನೇಮ-ನಿತ್ಯ-ಸತ್ಯ-ಸದ್ಭಾವವೆಂಬ ಷಡ್ಗುಣೈಶ್ವರ ಸಂಪದವ ನಿಷ್ಕಲಪರತತ್ವಲಿಂಗದಿಂ ಪಡದು, ಆ ಲಿಂಗದೊಡನೆ ಭೋಗಿಸಿ, ನಿಷ್ಕಲ ಪರತತ್ವಮೂರ್ತಿ ತಾನಾದ ನಿಜಮೋಕ್ಷದಿರವೆ ಸದ್ಯೋನ್ಮುಕ್ತಿದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು, ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ರೂಪು ಕುರೂಪುಗಳನು, ಲಿಂಗ ನೋಡಿದಡೆ ನೋಡುವನು, ಲಿಂಗ ನೂಕಿದಡೆ ತಾ ನೂಕುವನು. ಶಬ್ದಾಪಶಬ್ದಂಗಳನು ಲಿಂಗ ಕೇಳಿದಡೆ ಕೇಳುವನು, ಲಿಂಗ ತಾ ನೂಕಿದಡೆ ನೂಕುವನು. ಸುರಸ ಕುರಸಂಗಳನು ಲಿಂಗ ಸವಿದಡೆ ಸವಿವನು, ಲಿಂಗ ನೂಕಿದಡೆ ತಾ ನೂಕುವನು. ಗಂಧ ದುರ್ಗಂಧಗಳನು ಲಿಂಗ ವಾಸಿಸಿದಡೆ ವಾಸಿಸುವ, ಲಿಂಗ ನೂಕಿದಡೆ ತಾ ನೂಕುವನು. ಮೃದು ಕಠಿಣ ಶೀತೋಷ್ಣಂಗಳನು ಲಿಂಗ ಸೋಂಕಿದಡೆ ಸೋಂಕುವನು. ಲಿಂಗ ನೂಕಿದಡೆ ತಾ ನೂಕುವನು. ಲಿಂಗಮಧ್ಯಪ್ರಸಾದಿಯಾದ ಕಾರಣ ಲಿಂಗದೊಡನೆ ಕೂಡಿ ಅರಿದು ಭೋಗಿಸಿ ಸುಖಿಸುವನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಪ್ರಸಾದಿ.
--------------
ಸ್ವತಂತ್ರ ಸಿದ್ಧಲಿಂಗ
ಸರ್ವಾಂಗಲಿಂಗಿಯಾದ ಶರಣನ ಲಿಂಗ ಬ್ಥಿನ್ನವಾಗಿ ಹೋಗಲು ಆ ಲಿಂಗದೊಡನೆ ತನ್ನ ಪ್ರಾಣವ ಬಿಡುವದು. ಇದಲ್ಲದೆ ಜೀವಕಾಸೆ ಮಾಡಿ ಪುನಃ ಲಿಂಗವ ಧರಿಸಿದನಾದಡೆ ಶುನಿಯ ಬಸುರಲ್ಲಿ ಬಂದು ಅನೇಕಕಾಲ ನಾಯಕನರಕದಲ್ಲಿರ್ಪನಯ್ಯಾ ನೀ ಸಾಕ್ಷಿಯಾಗಿ ಅಮರಗುಂಡದ ಮಲ್ಲಿಕಾರ್ಜುನಾ.
--------------
ಪುರದ ನಾಗಣ್ಣ
ಗುರುವಿನೊಡನೆ ಸಹಭೋಜನ ಮಾಡಬೇಕಾದಡೆ, ಚತುರ್ವಿಧಭಕ್ತಿಯಿಂದೆ ಗುರುವಿನೊಳಗೆ ತನುವಡಗಿರಬೇಕು. ಲಿಂಗದೊಡನೆ ಸಹಭೋಜನ ಮಾಡಬೇಕಾದಡೆ, ಸಂಕಲ್ಪ ವಿಕಲ್ಪ ಸೂತಕ ಪಾತಂಕಗಳಳಿದು ಲಿಂಗದೊಳಗೆ ಮನವಡಗಿರಬೇಕು. ಜಂಗಮದೊಡನೆ ಸಹಭೋಜನ ಮಾಡಬೇಕಾದಡೆ, ಮಜ್ಜನ ಭೋಜನ ಕುಸುಮ ಗಂಧಾನುಲೇಪನ ಅನ್ನ ವಸ್ತ್ರ ಮಣಿ ರತ್ನಾಭರಣ ಗೀತ ವಾದ್ಯ ನೃತ್ಯ ಹಾಸುಮಂಚ ಸ್ತ್ರೀಭೋಗ ಮೊದಲಾದ ಅನೇಕ ಭಕ್ತಿಯಿಂದೆ ಜಂಗಮಕ್ಕೆ ಧನವ ಸಮರ್ಪಿಸಬೇಕು. ಇಂತೀ ತ್ರಿವಿಧ ಭಕ್ತಿಯ ನಿರ್ಣಯವನರಿಯದೆ, ತನು ಮನ ಧನಂಗಳ ಹಿಂದಿಟ್ಟುಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ನೀತಿಹೀನರು ಸಹಭೋಜನ ಕವಳ ಪ್ರಸಾದವ ಕೊಟ್ಟು ಕೊಂಡಡೆ ಹುಳುವಿನ ಕೊಂಡದಲ್ಲಿ ಮುಳುಗಿಸಿಬಿಡುವನು ನೋಡಾ ನಮ್ಮ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ, ಸಂಸಾರದೊಳಗಿರ್ದ ಭಕ್ತನು, ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ '' ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ ''_ ಇಂತೆಂಬ ಶಿವನವಾಕ್ಯವನರಿಯದೆ, ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ, ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?
--------------
ಚನ್ನಬಸವಣ್ಣ
ಅಷ್ಟಾವರಣಗಳು ಯಾರಿಗೆ ಸಾಧ್ಯವಾಯಿತ್ತೆಂದಡೆ ಹೇಳಿಹೆ ಕೇಳಿರಣ್ಣ : ಗುರು ಸಾಧ್ಯವಾಯಿತ್ತು ಗುರುಭಕ್ತಂಗೆ ; ಲಿಂಗ ಸಾಧ್ಯವಾಯಿತ್ತು ನೀಲಲೋಚನೆತಾಯಿಗೆ ; ಜಂಗಮವು ಸಾಧ್ಯವಾಯಿತ್ತು ಬಸವೇಶ್ವರದೇವರಿಗೆ ; ಪಾದೋದಕ ಸಾಧ್ಯವಾಯಿತ್ತು ವೇಮನಾರಾಧ್ಯಂಗೆ ; ಪ್ರಸಾದ ಸಾಧ್ಯವಾಯಿತ್ತು ಬಿಬ್ಬಿಬಾಚಯ್ಯಂಗೆ ; ವಿಭೂತಿ ಸಾಧ್ಯವಾಯಿತ್ತು ಓಹಿಲಯ್ಯಗಳಿಗೆ ; ರುದ್ರಾಕ್ಷಿ ಸಾಧ್ಯವಾಯಿತ್ತು ಚೇರಮರಾಯಗೆ ; ಪಂಚಾಕ್ಷರಿ ಸಾಧ್ಯವಾಯಿತ್ತು ಅಜಗಣ್ಣಂಗೆ. ಇನ್ನು ಷಟ್‍ಸ್ಥಲದ ನಿರ್ಣಯವ ಕೇಳಿ : ಭಕ್ತಸ್ಥಲ ಬಸವಣ್ಣಂಗಾಯಿತ್ತು ; ಮಾಹೇಶ್ವರಸ್ಥಲ ಮಡಿವಾಳಯ್ಯಂಗಾಯಿತ್ತು ; ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು ; ಪ್ರಾಣಲಿಂಗಿಸ್ಥಲ ಸಿದ್ಭರಾಮಯ್ಯಂಗಾಯಿತ್ತು ; ಶರಣಸ್ಥಲ ಪ್ರಭುದೇವರಿಗಾಯಿತ್ತು; ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಇನ್ನು ಷಡುಸ್ಥಲದ ವಿವರವಂ ಪೇಳ್ವೆನು.- ಭಕ್ತಸ್ಥಲದ ವಿವರವು : ಗುರುಲಿಂಗಜಂಗಮವು ಒಂದೆಯೆಂದು ಕಂಡು ಸದಾಚಾರದಲ್ಲಿ ನಡೆವನು, ತ್ರಿಕಾಲ ಮಜ್ಜನವ ನೀಡುವನು, ಲಾಂಛನಧಾರಿಗಳ ಕಂಡಡೆ ವಂದನೆಯ ಮಾಡುವನು, ಆಪ್ಯಾಯನಕ್ಕೆ ಅನ್ನವ ನೀಡುವನು, ಜಂಗಮಕ್ಕೆ ಪ್ರತಿ ಉತ್ತರವ ಕೊಡನು. ಪೃಥ್ವಿ ಅಂಗವಾಗಿಪ್ಪುದೆ ಭಕ್ತಿಸ್ಥಲವು. ಸಾಕ್ಷಿ : 'ಮಜ್ಜನಂ ತು ತ್ರಿಕಾಲೇಷು ಶುಚಿಪಾಕಸಮರ್ಪಿತಂ | ಭವಿಸಂಗಪರಿತ್ಯಾಗಂ ಇತ್ಯೇತೇ ಭಕ್ತಿಕಾರಣಂ || ಸದಾಚಾರೇ ಶಿವಭಕ್ತಿಃ ಲಿಂಗಜಂಗಮೇಕಾದ್ಥಿಕಂ | ಲಾಂಛನೇನ ಶರಣ್ಯಂ ಚ ಭಕ್ತಿಸ್ಥಲಂ ಮಹೋತ್ತಮಂ ||' ಇನ್ನು ಮಾಹೇಶ್ವರಸ್ಥಲದ ವಿವರವು : ಪರಸ್ತ್ರೀ ಪರನಿಂದೆ ಪರದ್ರವ್ಯ ಪರಹಿಂಸೆ ಅನೃತ ಇವು ಪಂಚಮಹಾಪಾತಕವು, ಇವ ಬಿಟ್ಟು ಲಿಂಗನಿಷ್ಠೆಯಲ್ಲಿ ಇರ್ದು ಜಲವೆ ಅಂಗವಾಗಿಪ್ಪುದೆ ಮಾಹೇಶ್ವರಸ್ಥಲವು. ಸಾಕ್ಷಿ : 'ಪರಸ್ತ್ರೀಯಂ ಪರಾರ್ಥಂ ಚ ವರ್ಜಿತೋ ಭಾವಶುದ್ಧಿಮಾನ್ | ಲಿಂಗನಿಸ್ಸಂಗಿಯುಕ್ತಾತ್ಮಾ ಮಹೇಶಸ್ಥಲಮುತ್ತಮಂ ||' ಇನ್ನು ಪ್ರಸಾದಿಸ್ಥಲದ ವಿವರ : ಲಿಂಗಕ್ಕೆ ಅರ್ಪಿಸಿದುದ ಲಿಂಗನೆನಹಿನಿಂದೆ ಸ್ವೀಕರಿಸುವುದು, ಅನರ್ಪಿತವ ವರ್ಜಿಸುವುದು, ಲಿಂಗದೊಡನೆ ಉಂಬುವುದು, ಅಗ್ನಿಯೆ ಅಂಗವಾಗಿಪ್ಪುದೆ ಪ್ರಸಾದಿಸ್ಥಲ. ಇನ್ನು ಪ್ರಾಣಲಿಂಗಿಸ್ಥಲದ ವಿವರವು : ಸುಗುಣ ದುರ್ಗುಣ ಉಭಯವನತಿಗಳೆದು ಸುಖ ದುಃಖ ಸ್ತುತಿ ನಿಂದೆ ಶತ್ರು ಮಿತ್ರಾದಿಗಳೆಲ್ಲರಂ ಸಮಾನಂಗಂಡು ವಾಯುವೆ ಅಂಗವಾಗಿಪ್ಪುದೆ ಪ್ರಾಣಲಿಂಗಿಸ್ಥಲ. ಇನ್ನು ಶರಣಸ್ಥಲದ ವಿವರವು : ಸತಿಪತಿಭಾವ ಅಂಗಲಿಂಗವಾಗಿಪ್ಪುದು, ಪಂಚೇಂದ್ರಿಯಸುಖ ನಾಸ್ತಿಯಾಗಿಪ್ಪುದು, ಆಕಾಶವೆ ಅಂಗವಾಗಿಪ್ಪುದು, ಇದು ಶರಣಸ್ಥಲವು. ಸಾಕ್ಷಿ : 'ಪತಿರ್ಲಿಂಗಂ ಸತೀ ಚಾsಹಂ ಇತಿ ಯುಕ್ತಂ ಸನಾತನಃ | ಪಂಚೇಂದ್ರಿಯಸುಖಂ ನಾಸ್ತಿ ಶರಣಸ್ಥಲಮುತ್ತಮಂ ||' ಇನ್ನು ಐಕ್ಯಸ್ಥಲದ ವಿವರವು : ಅರಿಷಡ್ವರ್ಗಂಗಳಿಲ್ಲದಿಹರು, ನಿರ್ಭಾವದಲ್ಲಿಹರು, ಷಡೂರ್ಮಿಗಳಿಲ್ಲದಿಹರು, ಅಷ್ಟವಿಧಾರ್ಚನೆ ಇಲ್ಲದಿಹರು, ಉರಿಯುಂಡ ಕರ್ಪುರದ ಹಾಗೆ ಇಹರು, ಆತ್ಮನೆ ಅಂಗವಾಗಿಪ್ಪುದು ಐಕ್ಯಸ್ಥಲವು. ಸಾಕ್ಷಿ : 'ಷಡೂರ್ಮಿಯೋಗಷಡ್ವರ್ಗಂ ನಾಸ್ತಿ ಚಾಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಸಯೋಗವತ್||' ಹೀಗೆ ಗಣಂಗಳು ನಡೆದ ಮಾರ್ಗದಲ್ಲಿ ನಡೆದಡೆ ಅಂದೇನೊ ಇಂದೇನೊ ? ಇಂತೀ ಅಷ್ಟಾವರಣಗಳ, ಷಡುಸ್ಥಲದ ಮಾರ್ಗವನು ಎನ್ನೊಳು ಅರುಹಿದಾತ, ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಕಾಮವು ಲಿಂಗಮುಖವಾಗಿ, ಕ್ರೋಧವು ಲಿಂಗಮುಖವಾಗಿ, ಲೋಭವು ಲಿಂಗಮುಖವಾಗಿ, ಮೋಹವು ಲಿಂಗಮುಖವಾಗಿ, ಮದವು ಲಿಂಗಮುಖವಾಗಿ, ಮತ್ಸರವು ಲಿಂಗಮುಖವಾಗಿ ಇಪ್ಪಾತನೆ ನಿರ್ಮೋಹಿ. ಅದು ಎಂತೆಂದೊಡೆ : ಪರಧನ ಪರಸ್ತ್ರೀಯ ಕಾಮಿಸುವಂತೆ ಲಿಂಗವ ಕಾಮಿಸುವುದೆ ಕಾಮ. ಪರರೊಳು ಕ್ರೋದ್ಥಿಸುವಂತೆ ಕರ್ಮವಿರಹಿತನಾದರೆ ಕ್ರೋಧ. ಅರ್ಥ ಸ್ತ್ರೀಯರ ಮೇಲೆ ಲೋಭವಿಡುವಂತೆ ಲಿಂಗದೊಡನೆ ಲೋಭವಿಟ್ಟು ಲಿಂಗವ ಕೂಡಬಲ್ಲರೆ ಲೋಭ. ಅನ್ಯರ ಮೋಹಿಸುವಂತೆ ಲಿಂಗವ ಮೋಹಿಸಬಲ್ಲರೆ ಮೋಹ. ಅನ್ನಮದ ಪ್ರಾಯಮದ ತಲೆಗೇರುವಂದದಿ ಲಿಂಗಮದನಾಗಿರಬಲ್ಲರೆ ಮದ. ಅನ್ಯರೊಡನೆ ಮತ್ಸರಿಸುವಂತೆ ಲಿಂಗದೊಡನೆ ಮತ್ಸರಿಸಿ ಶರಣಕೃಪೆಯ ಪಡೆಯಬಲ್ಲರೆ ಮತ್ಸರ. ಇಂತಪ್ಪ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದಲ್ಲಿ ಲಿಂಗಮುಖವಾಗಿಪ್ಪ ಶರಣರ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಲಿಂಗದೇಹಿ ಶಿವಾತ್ಮಕನು ಲಿಂಗದಾಚಾರದಲ್ಲಿಯೇ ನಡೆವನಯ್ಯ. ಲೋಕವರ್ತಕನಲ್ಲ. ಲೋಕಚಾತುರಿಕೆ, ಲೋಕವ್ಯವಹರಣೆಯನನುಕರಿಸಿ ನಡೆವವನಲ್ಲ. ಶಿವಜ್ಞಾನ ಶಿವಕ್ರಿಯಾಪ್ರಕಾಶವ ಸಂಬಂಧಿಸಿಕೊಂಡು ಸರ್ವಾಂಗವೂ ಲಿಂಗರೂಪಾಗಿ ಸಮರ್ಪಿಸಿಕೊಂಡು ಲಿಂಗದೊಡನೆ ಭುಂಜಿಸುತ್ತಿಪ್ಪನಯ್ಯ. ಶಿವಸ್ಮರಣೆಯಿಂದ ಸ್ವೀಕರಿಸುತ್ತಿಪ್ಪುದೇ ಸಹಭೋಜನವೆನಿಸಿಕೊಂಡಿತ್ತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಲಿಂಗದೊಡನೆ ಸಹಭೋಜನ ಮಾಡುವ ಲಿಂಗವಂತರೆಲ್ಲ ನೀವು ಕೇಳಿರೊ ! ನಿಮ್ಮ ತನು ಸಂಸಾರವಿಷಯಪ್ರಪಂಚಿನಲ್ಲಿ ಮುಳುಗಿರ್ಪುದು. ನಿಮ್ಮ ಮನ ಮಾಯಾ ಮಲತ್ರಯಂಗಳಲ್ಲಿ ಸುತ್ತಿರ್ಪುದು. ನಿಮ್ಮ ಜೀವ ಭವಭವದಲ್ಲಿ ತೊಳಲುತಿರ್ಪುದು. ನೀವಿಂತು ಮಲಮಾಯಾಸ್ವರೂಪರಾಗಿರ್ದು ಭಯವಿಲ್ಲದೆ ಅಮಲಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರ ನರಕದಲ್ಲಿಕ್ಕದೆ ಮಾಣ್ಬನೆ ನಮ್ಮ ಅಖಂಡೇಶ್ವರನು ?
--------------
ಷಣ್ಮುಖಸ್ವಾಮಿ
ಅಂಗವಿಕಾರಿಗೇಕೊ ಲಿಂಗದೊಡನೆ ಏಕಭಾಜನ ? ಆತ್ಮಸುಖಿಗೇಕೊ ಲಿಂಗದೊಡನೆ ಏಕಭಾಜನ ? ಹುಸಿ ಡಂಭಕಗೇಕೊ ಲಿಂಗದೊಡನೆ ಏಕಭಾಜನ ? ಜಾರಚೋರಂಗೇಕೊ ಲಿಂಗದೊಡನೆ ಏಕಭಾಜನ ? ನಮ್ಮ ಅಖಂಡೇಶ್ವರನ ನಿಜವನರಿಯದವರಿಗೇಕೊ ಪರಮ ಶಿವಲಿಂಗದೊಡನೆ ಏಕಭಾಜನ ?
--------------
ಷಣ್ಮುಖಸ್ವಾಮಿ
ಲಿಂಗದೊಡನೆ ಸಹಭೋಜನ ಮಾಡುವ ಸದ್ಭಕ್ತನ ಆಚರಣೆ ಕ್ರಿಯೆಗಳೆಂತುಂಟಯ್ಯಾ ಎಂದಡೆ; ಲಿಂಗ ಜಂಗಮದ ಕುಂದು ನಿಂದೆಯಂ ಕೇಳಲಾಗದು, ಕೇಳಿದಡೆ ಆ ನಿಂದಕನಂ ಕೊಲುವುದು, ಕೊಲಲಾರದಿರ್ದಡೆ ತನ್ನ ತಾನಿರಿದುಕೊಂಡು ಸಾವುದು, ಸಾಯಲಾರದಿರ್ದಡೆ ಅವನ ಬಯ್ವದು. ತನ್ನ ಅರ್ಥಪ್ರಾಣಾಭಿಮಾನವು ಶಿವಾರ್ಪಣವಾಯಿತ್ತೆಂದು ಮನದಲ್ಲಿ ಸಂತೋಷವ ತಾಳಿದಡೆ ಪ್ರಸಾದವುಂಟು. ಇಂತಲ್ಲದೆ ಮನದಲ್ಲಿ ನೋವ ತಾಳಿದಡೆ ಆಚಾರಭ್ರಷ್ಟನು. ಎನ್ನ ಮನೆ, ಎನ್ನ ಧನ, ಎನ್ನ ಸತಿಯೆಂಬನ್ನಕ್ಕರ ಅವನು ಭವಿಯ ಸಮಾನ. ಭಕ್ತನಲ್ಲ, ಪ್ರಸಾದಿಯಲ್ಲ, ಶೀಲವಂತನಲ್ಲ. ಅವನಿಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದತೀರ್ಥವಿಲ್ಲ, ಪ್ರಸಾದ ಮುನ್ನವೇ ಇಲ್ಲ. ಅವನಿಗೆ ಕುಂಭೀಪಾತಕನಾಯಕನರಕ ತಪ್ಪದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂಗದಲ್ಲಿ ಲಿಂಗ ಬೆರೆದು, ಲಿಂಗದಲ್ಲಿ ಅಂಗ ಬೆರೆದು ಅಂಗ ಲಿಂಗ ಸಂಗದಿಂದ ಸಹವರ್ತಿಯಾದ ಲಿಂಗಪ್ರಸಾದಿಯ ಇಂಗಿತವನೇನೆಂದು ಹೇಳಬಹುದು? ಲಿಂಗ ನಡೆಯಲು ಒಡನೆ ಪ್ರಸಾದಿ ನಡೆವ ಲಿಂಗ ನೋಡಲು ಒಡನೆ ಪ್ರಸಾದಿ ನೋಡುವ ಲಿಂಗ ಕೇಳಲು ಒಡನೆ ಪ್ರಸಾದಿ ಕೇಳುವ ಲಿಂಗ ಮುಟ್ಟಲು ಒಡನೆ ಪ್ರಸಾದಿ ಮುಟ್ಟುವ ಲಿಂಗ ರುಚಿಸಲು ಒಡನೆ ಪ್ರಸಾದಿ ರುಚಿಸುವ. ಲಿಂಗ ಘ್ರಾಣಿಸಲು ಒಡನೆ ಪ್ರಸಾದಿ ಘ್ರಾಣಿಸುವ. ಇಂತು ಸರ್ವಭೋಗವ ಲಿಂಗದೊಡನೆ ಕೂಡಿ ಭೋಗಿಸಬಲ್ಲ, ನಿಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಚೆನ್ನಬಸವಣ್ಣನು.
--------------
ಸ್ವತಂತ್ರ ಸಿದ್ಧಲಿಂಗ
ಸದ್ಭಕ್ತನು ತನು ಮನ ಧನ ಪ್ರಾಣಾದಿಗಳನರ್ಪಿಸಿ, ಸಕಲ ಸಾಕಾರ ದ್ರವ್ಯಾದಿಗಳೆಲ್ಲವೂ ಶಿವನ ಸೊಮ್ಮಾಗಿ, ಅದೆಂತೆಂದಡೆ ಋಗ್ವೇದ, ಶಿವೋ ದಾತಾ ಶಿವೋ ಭೋಕ್ತಾ ಶಿವಸ್ಸರ್ವಮಿದಂ ಜಗತ್ ಶಿವೋ ಯಜತಿ ಸರ್ವತ್ರ ಯಶ್ಶಿವಸ್ಸೋ[s]ಹಮೇವ ಚ ಎಂದುದಾಗಿ, ಇದನರಿದು ದಾತೃ ಭೋಕ್ತೃ ಶಿವನೆಂದು, ಅಹಂ ಮಮತೆಗಳಡಗಿ, ಸ್ವಾನುಭಾವವಳವಟ್ಟು, ಬಾಗಿಲುಗಾಹಿಯಾಗಿ ದಾಸೋಹಮಂ ಮಾಡುವುದು, ಇದು ಉತ್ತಮ ಕ್ರಿಯೆಯು. ಇದು ಲಿಂಗದೊಡನೆ ಹುಟ್ಟಿ, ಲಿಂಗದೊಡನೆ ಬೆಳೆದು, ಲಿಂಗದೊಡನೆ ಲೀಯವಹ ಮಹಾಲಿಂಗಾಂಗಿಗಲ್ಲದೆ ಸಾಧ್ಯವಾಗದು. ಇದು ಅಳವಡದಿರ್ದಡೆ ಸದ್ಭಕ್ತನು ತನು, ಮನ, ಧನ, ಪ್ರಾಣ ಮುಂತಾಗಿ ವಂಚನೆ ಇಲ್ಲದೆ ಸದ್ಭಕ್ತಿಯಿಂ ದಾಸೋಹಮಂ ಮಾಡುವುದು. ಇದು ಮಧ್ಯಮ ಕ್ರಿಯೆಯು. ಇದು ಸಾಮಾನ್ಯರಿಗಳವಡದು. ಇದು ಅಸಾಧ್ಯವು. ಇದು ಅಳವಡದಿರ್ದಡೆ, ಸದ್ಭಕ್ತನು ತನ್ನ ತನು ಮನ ಪ್ರಾಣಂಗಳ ಬಳಲಿಸಿ ತನಗೆ ಪ್ರಿಯವಾದ ಪುತ್ರ ಮಿತ್ರ ಕಳತ್ರಾದಿಗಳಿಗೆ ಹೇಗೆ ಸಕಲ ದ್ರವ್ಯಂಗಳಂ ಕೊಡುವನೋ ಹಾಗೆ ಸ್ನೇಹದಿಂದ ದಾಸೋಹವ ಮಾಡುವುದು, ಇದು ಕನಿಷ*ಕ್ರಿಯೆಯು. ಇದು ಮಹಾಜ್ಞಾನಿಪುರುಷರಿಗಲ್ಲದೆ ಅಳವಡದು. ಇದು ಅಳವಡದಿರ್ದಡೆ, ಶಕ್ತ್ಯಾನುಸಾರದಿಂ ಮಾಡುವುದು. ಇದು ನಿಕೃಷ್ಟಕ್ರಿಯೆಯು. ಅದೆಂತೆಂದಡೆ: ಶ್ರೂಯತಾಂ ಧರ್ಮಸರ್ವಸ್ವಂ ಶ್ರುತ್ವಾ ಚೈವಾವಧಾರ್ಯತಾಂ ಆತ್ಮನಃ ಪ್ರತಿಕೂಲಂ ಚ ಪರೇಷಾಂ ನ ಸಮಾಚರೇತ್ ಎಂದುದಾಗಿ ಇದನರಿತು ತನ್ನಂತೆ ಭಾವಿಸಿಯಾದಡೂ ದಾಸೋಹವ ಮಾಡಿ ಪ್ರಸನ್ನತೆಯ ಪಡೆವುದೇ ಸದ್ಭಕ್ತನ ಪಥವು ನೋಡಾ. ಇಂತಪ್ಪ ಉತ್ತಮ ಮಧ್ಯಮ ಕನಿಷ* ನಿಕೃಷ್ಟವೆಂಬ ಈ ನಾಲ್ಕು ಪರ್ಯಾಯದಲ್ಲಾದಡೆಯೂ, ಒಂದು ಪರ್ಯಾಯದಲ್ಲಿ ಭಾವಿಸಿಕೊಂಡು, ತನುಮನಧನವನಿತ್ತು ಸ್ನೇಹದಿಂದ ದಾಸೋಹವ ಮಾಡಿ ಪ್ರಸಾದವ ಪಡೆದು ಭೋಗಿಸಿ, ಭಕ್ತರಾಗಬೇಕು. ಈ ಪ್ರಕಾರದಿಂದಲ್ಲದೆ, ಮುಕ್ತಿ ಇಲ್ಲ. ಈ ಚತುರ್ವಿಧ ಕ್ರಿಯೆಗಳೊಳಗೆ ಆವುದನು ಮಾಡದೆ, ದುಷ್ಕ್ರಿಯೆಯಲ್ಲಿ ವರ್ತಿಸುತ್ತ ದಾಸೋಹವವಿಲ್ಲದೆ, ತನ್ನೊಡಲನೆ ಹೊರೆದಡೆ ಅವನು ಸದ್ಭಕ್ತರೊಳಗೆ ಸಲ್ಲ, ಅವಂಗೆ ಪ್ರಸಾದವಿಲ್ಲ. ಪ್ರಸಾದವಿಲ್ಲಾಗಿ ಮುಕ್ತಿ ಇಲ್ಲ, ಅವನು ಉಭಯಭ್ರಷ್ಟ. ಇದನರಿತು ತನ್ನಂತೆ ಭಾವಿಸಿ, ವಿಶ್ವಾಸದಿಂ ದಾಸೋಹವಂ ಮಾಡಲು, ಇಹಸಿದ್ಧಿ, ಪರಸಿದ್ಧಿ, ಸರ್ವಸಿದ್ಧಿಯಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->