ಅಥವಾ

ಒಟ್ಟು 957 ಕಡೆಗಳಲ್ಲಿ , 80 ವಚನಕಾರರು , 722 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭಾವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ನೋಡುವರುಳ್ಳಡೆ ಮಾಡುವೆ ದೇಹಾರವ. ಎನಗೊಂದು ನಿಜವಿಲ್ಲ, ಎನಗೊಂದು ನಿಷ್ಪತ್ತಿುಲ್ಲ. ಲಿಂಗವ ತೋರಿ ಉದರವ ಹೊರೆವ ಭಂಗಗಾರ ನಾನು, ಕೂಡಲಸಂಗಮದೇವಾ. 307
--------------
ಬಸವಣ್ಣ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆರುಸ್ಥಲದಲ್ಲಿ ಅರಿತಿಹೆನೆಂದು ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ ! ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ, ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ ! ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು ! ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ ! ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಭಕ್ತ ಭಕ್ತನೆಂಬರು, ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ, ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ತೇಜದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,_ ಭಕ್ತರೆಂದು ಲಿಂಗವ ಪೂಜಿಸುವವರ ಕಂಡು ನಾನು ಬೆರಗಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ದಿಟ್ಟ ಲಿಂಗವ ತನ್ನ ಇಷ್ಟ ಕರಸ್ಥಳದಲ್ಲಿಟ್ಟು ಬಟ್ಟೆಗಟ್ಟಿದನೆರಡು ದೆಸೆದೆಸೆಗಾಗಿ, ಅವ್ವ ನೀನೊಳಗಾಗಿ ಸೀಮೆ ಸಾಯುಜ್ಯದಲ್ಲಿ ಸೊಲ್ಲನಿಟ್ಟಾತ ಗುರುವವ್ವಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕಾಲದಗಂಡ, ಕರ್ಮದಗಂಡ, ವಿದ್ಥಿಯಗಂಡ, ವಿಶಸನದಗಂಡ, ಇಹದಗಂಡ, ಪರದಗಂಡ, ಅಂಗದ ಮೇಲೆ ಲಿಂಗವ ಧರಿಸಿ ಸಾವಿಗಂಜುವರೆ ? ಸಂದೇಹಿಯಗಂಡ, ಸಂದೇಹ ನಿರ್ಲೇಪಕ್ಕೆ ಶರಣೈಕ್ಯ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಶಬ್ದಿಯಾದಾತ ತರುಗಳ ಹೋತ, ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ, ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ, ಅರಿಯೆನೆಂಬಾತ ಪಶುವ ಹೋತ. ಇದು ಕಾರಣ_ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.
--------------
ಅಲ್ಲಮಪ್ರಭುದೇವರು
ಇನ್ನು ಇಷ್ಟಲಿಂಗದ ಸಿಂಹಾಸನ ಗದ್ದಿಗಿ ಉದ್ದರಣೆ: ಕರಕಮಲದೊಳಗೆ ಷಟ್ಕೋಣೆಯಂ ಬರದು ಇಪ್ಪತ್ತು ಮೂರು ಪ್ರಣಮಮಂ ವಿಭೂತಿಯಲ್ಲಿ ಬರದು ಲಿಂಗವ ಮೂರ್ತವ ಮಾಡಿಸಿ, ತ್ರಿಕಾಲದಲ್ಲಿ ಅರ್ಚಿಸಿ ಪೂಜಿಸಿದವರಿಗೆ ರಾಜಭಯ, ಚೋರಭಯ, ಮೃತ್ಯುಭಯ, ಸಿಡಿಲುಭಯ, ಗ್ರಹ ಭಯ, ಕುಟಿಲ ಭಯ, ವ್ಯಾದ್ಥಿ ಭಯ, ಉರಗ ಭಯ, ವೃಶ್ಚಿಕ ಭಯ, ಮೃಗಭಯ, ನೂರೆಂಟು ವ್ಯಾಧಿ ಭಯ, ಸರ್ವವ್ಯಾದ್ಥಿ ಮೊದಲಾದ ಎಲ್ಲವನು ಪರಿಹರವಪ್ಪುದು ತಪ್ಪದು ಎಂದಾತ ನಮ್ಮ ಶಾಂತಕೂಡಲಸಂಗಮದೇವ
--------------
ಗಣದಾಸಿ ವೀರಣ್ಣ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಗುರುಮುಖದಿಂದ ಪರಮಲಿಂಗವು ತನ್ನ ಕರವ ಸೇರಿದ ಬಳಿಕ ಆ ಲಿಂಗದಲ್ಲಿ ಸ್ನೇಹ ಮೋಹವ ಬಲಿದು, ಲಿಂಗಪ್ರೇಮಿಯಾಗಿ, ಲಿಂಗಭಾವದಲ್ಲಿ ತನ್ನ ಭಾವವ ಬಲಿದ ಬಳಿಕ ಅನ್ಯವಿಷಯವ್ಯಾಪ್ತಿಯ ವ್ಯವಹಾರದ ಭ್ರಾಂತಿಯಿಲ್ಲದಿರಬೇಕು ನೋಡಾ. ಇದೇ ಏಕಚತ್ತಮನೋಭಾವಿಯ ಗುಣ; ಇದೇ ಲಿಂಗಗ್ರಾಹಕನ ನಿರುತ. ಲಿಂಗವ ಮುಟ್ಟಿ ಮತ್ತೇನನೂ ಮುಟ್ಟದ ನಿಃಕಳಂಕನ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸರ್ವಾಂಗಲಿಂಗಿಯಾದ ಶರಣನ ಲಿಂಗ ಬ್ಥಿನ್ನವಾಗಿ ಹೋಗಲು ಆ ಲಿಂಗದೊಡನೆ ತನ್ನ ಪ್ರಾಣವ ಬಿಡುವದು. ಇದಲ್ಲದೆ ಜೀವಕಾಸೆ ಮಾಡಿ ಪುನಃ ಲಿಂಗವ ಧರಿಸಿದನಾದಡೆ ಶುನಿಯ ಬಸುರಲ್ಲಿ ಬಂದು ಅನೇಕಕಾಲ ನಾಯಕನರಕದಲ್ಲಿರ್ಪನಯ್ಯಾ ನೀ ಸಾಕ್ಷಿಯಾಗಿ ಅಮರಗುಂಡದ ಮಲ್ಲಿಕಾರ್ಜುನಾ.
--------------
ಪುರದ ನಾಗಣ್ಣ
ಇನ್ನಷ್ಟು ... -->