ಸಾಣಿಯ ಮೇಲೆ ಶ್ರೀಗಂಧವನಿಟ್ಟು,
ಗಂಧ ಗಂಧವೆಂದಡೆ ಗಂಧವ ಕೊಡಬಲ್ಲುದೆ ?
ಜಡಚಕ್ರದೊಳಗೆ ಧಾನ್ಯವ ನೀಡಿ
ಹಿಟ್ಟೆಂದಡೆ ಹಿಟ್ಟಾಗಬಲ್ಲುದೆ ?
ಗಾಣಕ್ಕೆ ಎಳ್ಳು ನೀಡಿ,
ಎಣ್ಣೆ ಎಣ್ಣೆ ಎಂದಡೆ ಎಣ್ಣೆ ಬೀಳಬಲ್ಲುದೆ ?
ಪಂಚಾಮೃತವ ಪಾಕವ ಮಾಡಿ ಎಡೆಯ ಬಡಿಸಿ
ಮುಂದಿಟ್ಟುಕೊಂಡು, ಹೊಟ್ಟೆ ತುಂಬು ತುಂಬು ಎಂದಡೆ
ಹೊಟ್ಟೆ ತುಂಬಿ ಹಸುವಡಗಬಲ್ಲುದೆ ?
ಹಾಗೆ ಜಡರೂಪವಾದ ಲಿಂಗವ
ಜಡಮತಿಗಳಾದ ಗುರುಮುಖದಿಂ ಪಡಕೊಂಡು
ಅಂಗದ ಮೇಲೆ
ಇಷ್ಟಲಿಂಗವೆಂದು ಧರಿಸಿ
ಆ ಲಿಂಗಕ್ಕೆ ಮುಕ್ತಿಯ ಕೊಡು ಕೊಡು ಎಂದಡೆ,
ಆ ಲಿಂಗವು ಮುಕ್ತಿಯ ಕೊಡಲರಿಯದು.
ಅದೆಂತೆಂದೊಡೆ :
ಚಂದನ, ಧಾನ್ಯ, ತಿಲಪಂಚಪಾಕವನು
'ಮರ್ದನಂ ಗುಣವರ್ಧನಂ' ಎಂದುದಾಗಿ,
ಇಂತೀ ಎಲ್ಲವು ಮರ್ದನವಿಲ್ಲದೆ
ಸ್ವಧರ್ಮಗುಣ ತೋರಲರಿಯವು.
ಹಾಗೆ ಅಂತಪ್ಪ ಜಡಸ್ವರೂಪನಾದ ಲಿಂಗವನು
ಜ್ಞಾನಗುರುಮುಖದಿಂ ಶಿಲಾಲಿಖಿತವ ಕಳೆದು,
ಕಳಾಭೇದವ ತಿಳಿದು, ಆ ಲಿಂಗವೇ ಘನಮಹಾ ಇಷ್ಟಲಿಂಗವೆಂಬ
ವಿಶ್ವಾಸ ಬಲಿದು ತುಂಬಿ
ಅಂತಪ್ಪ ಇಷ್ಟಬ್ರಹ್ಮದಲ್ಲಿ ಅವಿರಳಸಂಬಂದ್ಥಿಯಾಗಿ
ಆ ಇಷ್ಟಲಿಂಗದ ಸತ್ಕ್ರಿಯಾಚಾರದಲ್ಲಿ
ಸರ್ವಾಂಗವನು ದಹಿಸಿದಲ್ಲದೆ ಭವಹಿಂಗದು, ಮುಕ್ತಿದೋರದು,
ಮುಕ್ತಿಯ ಪಡೆಯಲರಿಯದೆ ಪ್ರಾಣಲಿಂಗಿಯಾಗಲರಿಯನು ನೋಡಾ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.