ಅಥವಾ

ಒಟ್ಟು 86 ಕಡೆಗಳಲ್ಲಿ , 31 ವಚನಕಾರರು , 79 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗಭಾಜನದಲ್ಲಿ ಸಹಭೋಜನವ ಮಾಡಿಹೆವೆಂದೆಂಬರು, ಲಿಂಗಭಾಜನದಲ್ಲಿ ಸಹಭೋಜನವ ಮಾಡುವವರ ನೋಡಿರೇ. ಲಿಂಗವಂತರೆಲ್ಲಾ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಆಸೆವುಳ್ಳನ್ನಕ್ಕ ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ? ಹಸಿವು ತೃಷೆ ನಿದ್ರೆ ಆಲಸ್ಯ ವ್ಯಸನವುಳ್ಳನ್ನಕ್ಕ, (ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ?) ಗುರುಲಿಂಗಜಂಗಮತ್ರಿವಿಧಸಂಪನ್ನತೆವುಳ್ಳನ್ನಕ್ಕ, ಲಿಂಗಭಾಜನದಲ್ಲಿ ಸಹಭೋಜನವ ಮಾಡುವಜಾÕನಿಗಳು ತಾವೇ ಲಿಂಗವೆಂಬರು, ಲಿಂಗವೇ ತಾವೆಂಬರು. ತಾವೆ ಲಿಂಗವಾದರೆ ಜನನ ಮರಣ ರುಜೆ ತಾಗು ನಿರೋಧವಿಲ್ಲದಿರಬೇಡಾ? ಮಹಾಜಾÕನವ ಬಲ್ಲೆವೆಂದು ತಮ್ಮ ಭಾಜನದಲ್ಲಿ ಲಿಂಗಕ್ಕೆ ನೀಡುವ ಪಾತಕರ ತೋರದಿರು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪರಮಗುರು ಲಿಂಗಜಂಗಮವ ನಿಜವಿಶ್ವಾಸ ನೈಷ್ಠೆಯೊಳ್ ಮೂರ್ತಿಗೊಳಿಸಿ ಅರ್ಚಿಸುವ ಸುಚಿತ್ತಕಮಲದಳಂಗಳೆಲ್ಲ ಒಂದೊಡಲಾಗಿ, ಭಕ್ತನ ಕರಕಮಲ, ಜಂಗಮದ ಚರಣಕಮಲ, ಈ ನಾಲ್ಕರಲ್ಲಿ ಸಂಬಂಧವಾದ ಪ್ರಣಮದೊಳ್ ಕೂಡಿದ ನೇತ್ರಕಮಲ ಒಂದಾದ, ಸಮರಸೈಕ್ಯವಾಗಿ ಕೂಡಿದ ತ್ರಿಕೂಟಸಂಗಮಸ್ಥಾನವಿದೆ. ಅಷ್ಟಾಷಷ್ಟಿವರಕೋಟಿ ತೀರ್ಥಸ್ಥಾನವಿದೆ. ದೇವಗಂಗೆ ನೀಲಗಂಗೆ ಶಿವಗಂಗಾ ಸರಸ್ವತಿ ಯಮುನಾಸ್ಥಾನವಿದೆ. ಚಿತ್ಸೂರ್ಯ ಚಂದ್ರಾಗ್ನಿಮಂಡಲವಿದೆ. ಜ್ಯೋತಿರ್ಮಂಡಲ ಅಖಂಡಜ್ಯೋತಿರ್ಮಂಡಲ ಅಖಂಡಮಹಾಪರಿಪೂರ್ಣಜ್ಯೋತಿರ್ಮಂಡಲ ಸ್ಥಾನವಿದೆ. ರೋಷವೆಂಬ ಕಾಲರತಿಕ್ರೀಡಾಭ್ರಾಂತೆಂಬ ಕಾಮ ಆಸೆ ಆಮಿಷ ಲೋಭ ಮೋಹ ಮದ ಮತ್ಸರವೆಂಬ ಮಾಯಾ ಸಂಸಾರಸಂಕಲ್ಪ ವಿಕಲ್ಪಂಗಳ ಹಿಂದುಳಿದು, ಆದ್ಯರು ಭೇದ್ಯರು ವೇದ್ಯರು ಸಾಧ್ಯರುಯೆಂದವತರಿಸಿ, ಜಿಹ್ವಾತುರ ಗುಹ್ಯಾತುರ ಅರ್ಥಾತುರ ತ್ಯಾಗಾತುರ ಭೋಗಾತುರ ಯೋಗಾತುರ ಕಡೆಯಾದ ಅನಂತ ಆತುರಗಳೆಂಬ ಷಡಿಂದ್ರೀಕರಣ ವಿಷಯವ್ಯಾಪಾರಂಗಳ ಜೊಳ್ಳುಮಾಡಿ ತೂರಿ, ಜಗದಾದಿ ಗಟ್ಟಿಬೀಜವಾಗಿ, ನಿಂದ ನಿಲುಕಡೆಯ ಉಳಿದ ಉಳುವೆಯ ಮಹಾಘನದುನ್ಮನಿಸ್ಥಾನವಿದೆ. ಎನ್ನ ಭಕ್ತಿ-ಜಾÕನ-ವೈರಾಗ್ಯ-ಕ್ರಿಯಾಚಾರ ಸತ್ಯಶುದ್ಧ ನಿಜನಡೆನುಡಿಗಳ ಕರುಣಿಸಿ, ಅಂಗ-ಮನ-ಪ್ರಾಣ-ಭಾವ-ಕರಣೇಂದ್ರಿಗಳ ಪಾವನವೆನಿಸಿ ಸಲಹಿದ ಪರಮಾಮೃತಸುಧೆಯಿದೆ. ಭಕ್ತಸ್ಥಲ ವಿರಕ್ತಸ್ಥಲ ಪ್ರಸಾದಿಸ್ಥಲ ಪ್ರಾಣಲಿಂಗಿಸ್ಥಲ ಶರಣಸ್ಥಲ ಐಕ್ಯಸ್ಥಲ ನಿಃಕಳಂಕಸ್ಥಲ ನಿರ್ಮಾಯಸ್ಥಲ ನಿರಾಲಂಬಸ್ಥಲ ನಿಃಪ್ರಪಂಚಸ್ಥಲ ನಿಜಾನಂದಸ್ಥಲ ನಿರೂಪಾದ್ಥಿಕಸ್ಥಲ ನಿರ್ನಾಮಕಸ್ಥಲ ನಿರ್ಗುಣಸ್ಥಲ ಸಗುಣಸ್ಥಲ ನಿತ್ಯತೃಪ್ತಸ್ಥಲ ಕಾಯಾರ್ಪಣಸ್ಥಲ ಕರಣಾರ್ಪಣಸ್ಥಲ ಭಾವಾರ್ಪಣಸ್ಥಲ ಪರಿಪೂರ್ಣಾರ್ಪಣಸ್ಥಲ ನಿರವಯಸ್ಥಲವೆ ಕಡೆಯಾದ ಏಕವಿಂಶತಿ ದೀಕ್ಷಾನುಭಾವ ಏಕವಿಂಶತಿ ಯುಗಂಗಳನೊಳಗೊಂಡು ಅಣುವಿಂಗೆ ಪರಮಾಣುವಾಗಿ, ಮಹತ್ತಿಂಗೆ ಘನಮಹತ್ತಾಗಿ, ಸೃಷ್ಟಿ ಸ್ಥಿತಿಲಯಂಗಳಿಗೆ ಕಾರಣಾರ್ಥ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಪರಮಾನಂದ ಪಂಚಪರುಷದ ಖಣಿಯಿದೆಯೆಂದು ಪೂರ್ಣಾನುಭಾವಭರಿತವಾದ ನಿರ್ದೇಹಿಗಳೆ ನಿರವಯಪ್ರಭು ಮಹಾಂತಘನವೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಕ್ಷುತ್ಪಿಪಾಸೆ ಶೋಕ ಮೋಹ ಜನನ ಮರಣ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಂ ಬಿಟ್ಟು ಅಷ್ಟವಿಧಾರ್ಚನೆ, ಷೋಡಶೋಪಚಾರವಿಲ್ಲದಿರುವ ಕ್ಷೀರದೊಳಗಣ ಘೃತದಂತೆ, ತಿಲದೊಳಗಣ ತೈಲದಂತೆ, ಪುಷ್ಪದೊಳಗಣ ಪರಿಮಳದಂತೆ, ಉಪ್ಪು ಉದಕವ ಕೂಡಿದಂತೆ, ವಾರಿಕಲ್ಲು ವಾರಿಯ ಕೂಡಿದಂತೆ, ಕರ್ಪುರವು ಜ್ಯೋತಿಯ ಕೂಡಿದಂತೆ, ಮನ ಲಿಂಗದಲ್ಲಿ ಲೀಯವಾಗಿಹುದೀಗ ಐಕ್ಯಸ್ಥಲ ನೋಡಾ, ಇದಕ್ಕೆ ಈಶ್ವರ್ದೋವಾಚ : ``ಷಡೂರ್ಮಯಶ್ಚ ಷಡ್ವರ್ಗೋ ನಾಸ್ತಿ ಅಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಯೋಗವತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಂಗಮವೆ ಗುರು, ಜಂಗಮವೆ ಲಿಂಗ, ಜಂಗಮವೆ ಪ್ರಾಣವೆಂದಡೆ, ಇಲ್ಲವೆಂಬ ಅಂಗಹೀನರಿರಾ, ನೀವು ಕೇಳಿರೊ. ಜಂಗಮವು ಗುರುವಲ್ಲದಿದ್ದಡೆ, ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವ ಹಿಂಗಿಸುವನೆ ? ಜಂಗಮವು ಲಿಂಗವಲ್ಲದಿದ್ದಡೆ, ಪ್ರಾಣಲಿಂಗವ ತೋರುವನೆ ? ಜಂಗಮವು ಪ್ರಾಣವಲ್ಲದಿದ್ದಡೆ, ಪ್ರಾಣಕ್ಕೆ ಪ್ರಸಾದವನೂಡುವನೆ ? ಇದ ಕಂಡು ಕಾಣೆನೆಂಬ ಭಂಗಿತರ ನುಡಿಯ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ವೇಷವ ಹೊತ್ತು , ಆಶೆ ರೋಷವ ಬಿಡದೆ, ದೇಶವ ತಿರುಗಿ, ಹೊರವೇಷದ ವಿಭೂತಿ ರುದ್ರಾಕ್ಷಿ ಕಾವಿ ಕಾಷಾಯಾಂಬರವ ಧರಿಸಿ ಫಲವೇನು? ಕಾಮ ಕೆಡದು, ಕ್ರೋಧ ಬಿಡದು, ಲೋಭ ಹಿಂಗದು, ಮೋಹ ನಿಲ್ಲದು, ಮದ ಹೆರೆಸಾರದು, ಮತ್ಸರ ಬೆಂದುಹೋಗದು. ಇವೆಲ್ಲ ಸಹಿತ ಜಂಗಮಭಕ್ತರೆಂದು ಸುಳಿವವರ ಕಂಡು ನಾಚಿತ್ತು ಎನ್ನ ಮನ. ಭಕ್ತಜಂಗಮ ಘನವನೇನೆಂದು ಉಪಮಿಸುವೆ ? ರೂಪಿನ ಹಾಗೆ, ನೆಳಲಿನ ಹಾಗೆ, ದೇಹದ ಹಾಗೆ, ಪ್ರಾಣದ ಹಾಗೆ, ಭಾವದ ಹಾಗೆ, ನಿರ್ಭಾವದ ಹಾಗೆ, ಉರಿಯ ಹಾಗೆ, ಕರ್ಪುರದ ಹಾಗೆ, ಆವಿಯ ಹಾಗೆ, ನೀರ ಹಾಗೆ, ಎರಡೊಂದಾದರೆ ತೆರಹಿಲ್ಲ. ಆ ನಿಲುವಿಂಗೆ ನಮೋ ನಮೋ ಎನುತಿರ್ದೆ ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಪಂಚೇಂದ್ರಿಯ ಸಪ್ತಧಾತುವನತಿಗಳೆದಲ್ಲಿ ಫಲವೇನೊ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ_ ವಿಷಯವನತಿಗಳೆದಲ್ಲಿ ಫಲವೇನೊ ? ಇವೆಲ್ಲವ ಕೊಂದ ಪಾಪ ನಿಮ್ಮ ತಾಗುವುದು_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಭಕ್ತನೆದ್ದು ಭವಿಯ ಮುಖವ ಕಂಡರೆ, gõ್ಞರವ ನರಕವೆಂಬರು. ಭಕ್ತನಾವನು ? ಭವಿಯಾವನು ? ಬಲ್ಲರೆ ಹೇಳಿ, ಅರಿಯದಿದ್ದರೆ ಕೇಳಿ. ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧ ಭವಿಯ ತಮ್ಮೆದೆಯೊಳಗೆ ಇಂಬಿಟ್ಟುಕೊಂಡು, `ನಾನು ಭವಿಯ ಮೋರೆಯ ಕಾಣಬಾರದು, ಎಂದು ಮುಖದ ಮೇಲೆ ವಸ್ತ್ರವ ಬಾಸಣಿಸಿಕೊಂಡು ತಿರುಗುವ ಕುನ್ನಿಗಳ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?
--------------
ಚನ್ನಬಸವಣ್ಣ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಕಣ್ಣಿಗೆ ಬಂದಂತೆ ಅನ್ಯದೇಶಕ್ಕೆ ಹೋಗುವ ಕುನ್ನಿಗಳಿಗೆ ಬಣ್ಣದ ಮಾತೇಕೊ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳುಳ್ಳವಂಗೆ ಮಹಾಜ್ಞಾನಿಗಳ ಮಾತೇಕೊ ? ಕತ್ತಲೆಯ ಕಳೆದು ನಿಶ್ಚಿಂತನಾದವಂಗೆ ನಚ್ಚುಮೆಚ್ಚಿನ ರಚ್ಚೆಯ ಮಾತೇಕೊ ? ಅಮುಗೇಶ್ವರಲಿಂಗವನರಿದವಂಗೆ ?
--------------
ಅಮುಗೆ ರಾಯಮ್ಮ
ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ, ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ, ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ, ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿ ಕಾದುವೆನು ನಾನು.
--------------
ಅಕ್ಕಮಹಾದೇವಿ
ಎನ್ನ ಅಷ್ಟವಿಧಾರ್ಚನೆ ಶುದ್ಧವಾಯಿತ್ತಯ್ಯಾ ನೀವು ಮೂರ್ತಿಲಿಂಗವಾದ ಕಾರಣ. ಎನ್ನ ತನು ಮನ ಶುದ್ಧವಾಯಿತ್ತಯ್ಯಾ ನೀವು ಜಂಗಮಲಿಂಗವಾದ ಕಾರಣ. ಎನ್ನ ಆಪ್ಯಾಯನ ಶುದ್ಧವಾಯಿತ್ತಯ್ಯಾ ನಿಮ್ಮ ಪ್ರಸಾದವ ಕೊಂಡೆನಾಗಿ. ಎನ್ನ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಂಗಳೆಲ್ಲಾ ಶುದ್ಧವಾದವಯ್ಯಾ ನೀವು ಜ್ಞಾನಲಿಂಗವಾದ ಕಾರಣ. ಇಂತೀ ಎನ್ನ ಸರ್ವದಲ್ಲಿ ಸನ್ನಹಿತವಾದೆಯಲ್ಲಾ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ನೆನೆವ ಜಿಹ್ವೆ[ಗೆ] ಕಾಮನ ನೆನಸಿದೆ, ನೋಡುವ ಕಂಗಳಿಗೆ ಕಾಮನ ನೋಡಿಸಿದೆ, ಕೇಳುವ ಕರ್ಣಕ್ಕೆ ಕಾಮವನೆ ಕೇಳಿಸಿದೆ, ವಾಸಿಸುವ ನಾಸಿಕಕ್ಕೆ ಕಾಮವನೆ ವಾಸಿಸಿದೆ, ಮುಟ್ಟುವ ಹಸ್ತಕ್ಕೆ ಕಾಮವನೆ ಮುಟ್ಟಿಸಿದೆ. ಅದು ಎಂತೆಂದೊಡೆ : ನೆನೆವ ಜಿಹ್ವೆ ಪರಧನ ಪರಸ್ತ್ರೀಯರ ನೆನೆವುದು, ನೋಡುವ ಕಂಗಳು ಪರಧನ ಪರಸ್ತ್ರೀಯರನೆ ನೋಡುವವು, ಕೇಳುವ ಕರ್ಣ ಪರಧನ ಪರಸ್ತ್ರೀಯರ ಪರನಿಂದ್ಯವನೆ ಕೇಳುವವು, ವಾಸಿಸುವ ನಾಸಿಕ ಪರಧನ ಪರಸ್ತ್ರೀಯರ ವಾಸಿಸುವುದು, ಮುಟ್ಟುವ ಹಸ್ತ ಪರಧನ ಪರಸ್ತ್ರೀಯರನೆ ಮುಟ್ಟುವುದು. ಇಂತೀ ಪಂಚೇಂದ್ರಿಯಮುಖದಲ್ಲಿ ಕಾಮವೆ ಮುಖ್ಯವಾಗಿಪ್ಪುದಯ್ಯ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದ ಸೀಮೆಗೆಳಸದ ನಿಸ್ಸೀಮ ಶರಣಂಗೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಭೃತ್ಯತ್ವದಿಂದ ಕಾಯ ಶುದ್ಧಮಾಗುವುದಯ್ಯ. ಭೃತ್ಯತ್ವದಿಂದ ಮನ ಸಿದ್ಧವಾಗುವುದಯ್ಯ. ಭೃತ್ಯತ್ವದಿಂದ ಭಾವ ಪ್ರಸಿದ್ಧವಾಗುವುದಯ್ಯ. ಭೃತ್ಯತ್ವದಿಂದ ಪ್ರಾಣ ಪರಬ್ರಹ್ಮವನೊಡಗೂಡುವುದಯ್ಯ. ಭೃತ್ಯತ್ವದಿಂದ ಕಾಮ ನಿಷ್ಕಾಮವಾಗುವುದಯ್ಯ. ಭೃತ್ಯತ್ವದಿಂದ ಕ್ರೋಧ ನಿಷ್ಕೋಧವಾಗುವುದಯ್ಯ. ಭೃತ್ಯತ್ವದಿಂದ ಲೋಭ ನಿರ್ಲೋಭವಾಗುವುದಯ್ಯ. ಭೃತ್ಯತ್ವದಿಂದ ಮೋಹ ನಿರ್ಮೋಹವಾಗುವುದಯ್ಯ. ಭೃತ್ಯತ್ವದಿಂದ ಮದ ನಿರ್ಮದÀವಾಗುವುದಯ್ಯ. ಭೃತ್ಯತ್ವದಿಂದ ಮತ್ಸರ ನಿರ್ಮತ್ಸರವಾಗುವುದಯ್ಯ. ಭೃತ್ಯತ್ವದಿಂದ ಆಸೆ ನಿರಾಸೆಯಾಗುವುದಯ್ಯ. ಭೃತ್ಯತ್ವದಿಂದ ಕುಚಿತ್ತ ಸುಚಿತ್ತವಾಗುವುದಯ್ಯ. ಭೃತ್ಯತ್ವದಿಂದ ಕುಬುದ್ಧಿ ಸುಬುದ್ಧಿಯಾಗುವುದಯ್ಯ. ಭೃತ್ಯತ್ವದಿಂದ ಅಹಂಕಾರ ನಿರಹಂಕಾರವಾಗುವುದಯ್ಯ. ಭೃತ್ಯತ್ವದಿಂದ ಕುಮನ ಸುಮನವಾಗುವುದಯ್ಯ. ಭೃತ್ಯತ್ವದಿಂದ ಅಜ್ಞಾನ ಸುಜ್ಞಾನವಾಗುವುದಯ್ಯ. ಭೃತ್ಯತ್ವದಿಂದ ದುರ್ಭಾವ ಸದ್ಭಾವವಾಗುವುದಯ್ಯ. ಭೃತ್ಯತ್ವದಿಂದ ನಿಜನೈಷ್ಠೆ ದೊರವುದು ನೋಡ ಗುರುಹಿರಿಯರಲ್ಲಿ ಭೃತ್ಯತ್ವವುಳ್ಳಾತನೆ ಸಾಕ್ಷಾತ್ಪರತತ್ವಲಿಂಗ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹಸಿವು ತೃಷೆ ವಿಷಯ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವಾದಿಯಾದ ತನುಗುಣಂಗಳು ದೇವ ದಾನವ ಮಾನವರಂತೆ ಆದಡೆ, ಲಿಂಗವಂತನೆಂಬ ಪರಿಯೆಂತಯ್ಯಾ? ತನುಗುಣಂಗಳು ಭೂತದೇಹಿಗಳಂತಾದಡೆ ಲಿಂಗದೇಹಿಕನೆಂಬ ಪರಿಯೆಂತಯ್ಯಾ? ಲಿಂಗಚಿಹ್ನವಿಲ್ಲದಡೆ ಲಿಂಗದೇಹಿಯೆಂಬ ಪರಿಯೆಂತಯ್ಯಾ? ಹಸಿವು ತೃಷೆ ವಿಷಯ ವ್ಯಸನವಡಗಿದಡೆ ಲಿಂಗಚಿಹ್ನೆ. ಕ್ರೋಧ ಲೋಭ ಮೋಹ ಮದ ಮತ್ಸರ ಇವಾದಿಯಾದ ದೇಹಗುಣಂಗಳಳಿದಡೆ ಲಿಂಗಚಿಹ್ನೆ. ದೇಹಗುಣಭರಿತನಾಗಿ ಲಿಂಗದೇಹಿ ಎಂದಡೆ, ಲಿಂಗವಂತರು ನಗುವರಯ್ಯಾ. ಅಂಗಗುಣವಳಿದು ಗುರುಲಿಂಗಜಂಗಮದಲ್ಲಿ ತನು ಮನ ಧನ ಲೀಯವಾದಡೆ ಆತನು ಸರ್ವಾಂಗಲಿಂಗಿಯಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->