ಅಥವಾ

ಒಟ್ಟು 37 ಕಡೆಗಳಲ್ಲಿ , 20 ವಚನಕಾರರು , 34 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೆರಹಿಲ್ಲದ ನಡೆ, ತೆರಹಿಲ್ಲದ ನುಡಿ ತೆರಹಿಲ್ಲದ ಸಂಭಾಷಣೆ ಸುಖವು. ತೆರಹಿಲ್ಲದೆ ನಂಬಿದೆ, ಸ್ವಾನುಭಾವ ಸುಖವು, ತೆರಹಿಲ್ಲದ ಮಹಿಮೆ, ತೆರಹಿಲ್ಲದ ವಿಚಾರ ಕೂಡಲಸಂಗಮದೇವಾ, ನಿಮ್ಮ ಶರಣಂಗೆ !
--------------
ಬಸವಣ್ಣ
ಬಹುಜನ್ಮಭಾರಿಗಳ ಕರತಂದು ಹಿರಿಯತನದಾಸೆಗೆ ಹರಿದು ಉಪದೇಶವ ಕೊಟ್ಟರೆ ಗುರುಶಿಷ್ಯಭಾವ ಸರಿಯಪ್ಪುದೆ ? ಕಣ್ಣಿಲ್ಲದ ಗುರು, ಕುರುಡ ಶಿಷ್ಯ, ಅವರಿಗಾಚಾರ ವಿಚಾರ ಸಮಯಾಚಾರಸಂಬಂಧವೆಂತಪ್ಪುದಯ್ಯಾ, ಭೂತ ಅದ್ಭೂತ ಅವಿಚಾರ ಘಟಿತರಿಗೆ ಗುರುನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಕ್ರೀಯಲ್ಲಿ ಮಗ್ನವಾದ ಬಳಿಕ ಐಕ್ಯದ ವಿಚಾರ ಬೇಕಿಲ್ಲ ; ಗುರುವಿನ ಗದ್ದುಗೆ ಬೇಕಿಲ್ಲ ; ಗಣಸಮ್ಮೇಳನದ ಪೂಜೆ ಮೊದಲೆ ಬೇಕಿಲ್ಲ ; ಕಪಿಲಸಿದ್ಧಮಲ್ಲಿಕಾರ್ಜುನಂಗೆ ನಿನಗೆ ಭೇದವಿಲ್ಲೆಂಬುವುದು ಈಗಳೆ ಬೇಕಿಲ್ಲ, ಕೇಳಾ ಪ್ರಭುವೆ.
--------------
ಸಿದ್ಧರಾಮೇಶ್ವರ
ಪ್ರಸಾದ ಪ್ರಸಾದವೆಂದು ಒಪ್ಪಕ್ಕೆ ಕೊಂಬ ಬೊಪ್ಪಗಳು ನೀವು ಕೇಳಿರೊ. ಕಾಯಪ್ರಸಾದವನರಿದು, ಕರಣಪ್ರಸಾದವನರಿದು, ಜೀವಪ್ರಸಾದವನರಿದು, ನಿಜಪ್ರಸಾದವನರಿದು ಕೊಳಬಲ್ಲರೆ ಪ್ರಸಾದಿ. ಕೊಂಬವರ ಕಂಡು ಪ್ರಸಾದವ ಕೈಕೊಂಡರೆ ಕಂಡವರ ಕಂಡು ಕೌದಿಯ ಹೊಲಿಯ ಹೋದರೆ ಕುಂಟೆಳೆ ಬಿದ್ದಂತೆ. ನವಿಲು ಕುಣಿಯಿತ್ತೆಂದು ಶಾಬಕ ಕುಣಿದು ಪುಚ್ಚವ ಕಳಕೊಂಡಂತೆ. ಸಿಂಹ ಲೆಂಘಣಿಸಿತ್ತೆಂದು ಸೀಳನಾಯಿ [ಲೆಂಘಣಿಸಿ] ಸೊಂಟವ ಕಳಕೊಂಡಂತೆ. ಸದ್ಭಕ್ತರ ಕಂಡು ನಾನು ಸದ್ಭಕ್ತನೆಂದು ಓಗರವ ನೀಡಿಸಿಕೊಂಡು ಅಯ್ಯಾ, ಹಸಾದ, ಮಹಾಪ್ರಸಾದವ ಪಾಲಿಸಿರೆಂದು ತನ್ನಾದಿ ಕ್ರಿಯಾದೀಕ್ಷೆ, ತನ್ನ ಮಧ್ಯೆ ಜ್ಞಾನದೀಕ್ಷೆ, ತನ್ನವಸಾನ ಮಹಾಜ್ಞಾನ ದೀಕ್ಷೆಯ ತಿಳಿಯದೆ ತನ್ನ ಪೂರ್ವಾಪರ, ತನ್ನ ಉದಯಾಸ್ತಮಾನವರಿಯದೆ, ಅರ್ಪಿತಾವಧಾನಭಕ್ತಿಯನರಿಯದೆ, ಗುರು ಲಿಂಗ ಜಂಗಮದ ನಿಲುಕಡೆಯನರಿಯದೆ, ಕಾಂಚನವ ಕೊಟ್ಟು, ಕೈಯಾಂತು ಪಡಕೊಂಬ ಭಕ್ತನ ಅಂಗವಿಕಾರವು ಮುನ್ನಿನಂತೆ. ಆ ಭಕ್ತನ ಆಚಾರ ವಿಚಾರ ನಡೆ ನುಡಿ ದೀಕ್ಷಾತ್ರಯಂಗಳ ವಿಚಾರಿಸದೆ ಪ್ರಸಾದವ ಕೊಟ್ಟ ಗುರುವಿನ ವಿಚಾರವು ಮುನ್ನಿನಂತೆ. ಈ ಉಭಯತರು, ಬಟ್ಟೆಗುರುಡನ ಕೈಯ ಬಟ್ಟೆಗುರುಡ ಹಿಡಿದು ಹಳ್ಳವ ಬಿದ್ದಂತೆ ಕಾಣಾ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಜ್ಞಾನವಿಲ್ಲದವಂಗೆ ಆಚಾರವಿಲ್ಲ. ಆಚಾರವಿಲ್ಲದವಂಗೆ ಭಕ್ತಿಯಲ್ಲ. ಭಕ್ತಿಯಿಲ್ಲದವಂಗೆ ವಿರಕ್ತಿಯಿಲ್ಲ. ವಿರಕ್ತಿಯಿಲ್ಲದವಂಗೆ ಮುಕ್ತಿಯಿಲ್ಲ. ಇದು ಕಾರಣ, ಜ್ಞಾನ ವಿಚಾರ ಭಕ್ತಿ ವಿರಕ್ತಿ ಉಳ್ಳವಂಗೆ ಮುಕ್ತಿಯುಂಟು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಆಚಾರ ಕಪ್ಪರವೊಂದು, ವಿಚಾರ ಕಪ್ಪರವೊಂದು, ಅವಿಚಾರ ಕಪ್ಪರವೊಂದು. ಇಂತು ಮೂರು ಕಪ್ಪರವೊಳವು. ಆಚಾರ ಕಪ್ಪರವ ಜಾಡ್ಯವೆಂಬೆ, ವಿಚಾರ ಕಪ್ಪರವ ಹೆಳವನೆಂಬೆ, ಅವಿಚಾರ ಕಪ್ಪರ ಸೊಮ್ಮುಸಂಬಂಧವ ತೋರಿ ಬೇಡದಾಗಿ (ಬೇಡುವುದಾಗಿ) ನಿರುಪಾಧಿಕವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಆಚಾರ ಕಪ್ಪರ ಸೊಮ್ಮುಸಂಬಂಧವ ತೋರಿ ಬೇಡುವುದು. ವಿಚಾರ ಕಪ್ಪರ ಲಾಂಛನವ ತೋರಿ ಬೇಡುವುದು. ಅವಿಚಾರ ಕಪ್ಪರ ಸೊಮ್ಮುಸಂಬಂಧವ, ನೇಮಶೀಲವ ಮೀರಿ ಬೇಡುವುದಾಗಿ ನಿರುಪಾಧಿಕವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ದಾತ ಗುಣ ವರ್ತಕ ಮಾಟ, ಅರಿವ ಗುಣ ವಿಚಾರ ಮಾಟ. ಇಂತೀ ದ್ವಯವನರಿತು, ಕ್ರೀಗೆ ಪದವಾಗಿ ಅರಿವಿಂಗೆ ಆಶ್ರಯವಾಗಿ ಮಾಡುವ ಭಕ್ತನ ಅಂಗ ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಇಷ್ಟಲಿಂಗ ಪ್ರಾಣಲಿಂಗವೆಂಬ ಭೇದವನಾರು ಬಲ್ಲರು ಹೇಳಾ ? ಅಂತರಂಗವೆಂಬ ಶಬ್ದಕ್ಕೆ ಬಹಿರಂಗ ಮುಂದುಗೊಂಡಿಪ್ಪುದು. ಬಹಿರಂಗವೆಂಬ ಶಬ್ದಕ್ಕೆ ಅಂತರಂಗ ಮುಂದುಗೊಂಡಿಪ್ಪುದು. ಮನವನೆಡೆಗೊಂಡ ಲಿಂಗದ ಅರಿವು, ವಿಚಾರ ವ್ಯಾಕುಲಕ್ಕೊಳಗಾಗಬಾರದೆಂದು ಮನ ಭಾವ ಜ್ಞಾನ ನೋಟಕ್ಕೆ ತಂದು, ಕರಸ್ಥಲದಲ್ಲಿ ನಿಕ್ಷೇಪಿಸಿ ಅಂತರಂಗ ಬಹಿರಂಗವೆಂದರಿಯದೆ, ಅನಿಮಿಷನಾಗಿಪ್ಪನು ಶರಣನು. ಪ್ರಾಣಲಿಂಗದ ಪ್ರಸನ್ನಮುಖವ ನೋಡಿ ಪರಿಣಾಮಿಸಲೋಸುಗ ತೇಜ (ಜಂಗಮ?)ವೆಂಬ ದರ್ಪಣವ ಹಿಡಿದಿಪ್ಪ ನೋಡಯ್ಯಾ. ಗುಹೇಶ್ವರಲಿಂಗದಲ್ಲಿ ನಿಜವನೆಯ್ದಿಹೆನೆಂದಡೆ, ಕುರುಹುವಿಡಿದು ಕುರುಹುಗೆಡಬೇಕು ನೋಡಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಸಹಜವುಳ್ಳ ಭಕ್ತರಿಗೆ ಕಾಮುಕರಾಗಿ ಕೆಡಬೇಡೆಂದು ಅಜ್ಞಾನಕ್ಕೆ ಗುರಿಯಾದಿರಿ. ಮುಂದೆ ಜ್ಞಾನವೆಂಬುದೆಲ್ಲವಾಗಿ ಗುರುಪಾದವ ಹಿಡಿದು ಜ್ಞಾನಮುಕ್ತನಾಗಿ ಮೋಕ್ಷಾರ್ಥವ ಹಾರೈಸಿಕೊಂಡು ತನುವ ಗುರುವಿಗೆ ಅರ್ಪಿಸಬೇಕು, ಮನವ ಲಿಂಗಕ್ಕೆ ಅರ್ಪಿಸಬೇಕು, ಧನವ ಜಂಗಮಕ್ಕೆ ಅರ್ಪಿಸಬೇಕು. ತಮ್ಮ ಭಾವದಿಂದ ಬೋಧಿಸಿ ನುಡಿಯಲ್ಕೆ ಶಿಷ್ಯ ಸುಬುದ್ಧಿಯಿಂದ 'ಗುರುವೇ ನೀನು ಅಧಿಕಾರನು ನಿನ್ನ ಪಾದ ಸೋಂಕಿತೆಂದು' ನುಡಿಯಲಾಗಿ, ಆ ಶಿಷ್ಯಂಗೆ ಮನಮುಖ್ಯವಾದ ಬೋಧೆಯ ಬೋಧಿಸಿ ಆತಂಗೆ ಕಟ್ಟಳೆಯ ಮಾಡಿ ಹೆಣ್ಣು ಹೊನ್ನು ಮಣ್ಣು ಮೂರು ಗುರುವಿಗೆ ಅರ್ಪಿತ ಮಾಡಬೇಕೆಂದು ನುಡಿಯಲಾಗಿ, ಅವನು ವಿಕಾರಿಯಾಗಿ 'ಸ್ವಾಮಿ, ಹೆಣ್ಣು ಹೊನ್ನು ಮಣ್ಣು ಸರ್ವವೂ ನಿಮಗೆ ಸಮರ್ಪಣವೆಂದು' ನುಡಿಯಲಾಗಿ, ಬೋಧಿಸುವ ಆ ಗುರುವಿಂಗೆ ಒಂದು ವಿಕಾರ ಹೋಗಿ ಐದು ವಿಕಾರಗಳಾಗಿ ಪಂಚಭೂತ ಮದಂಗಳೇರಿ ತನುವಿಕಾರಿಯಾಗಿ ಮನವಿಕಾರಿಯಾಗಿ ಆಚಾರ ವಿಚಾರ ಬಿಟ್ಟು ಅನಾಚಾರಿಯಾಗಿ ಕಚ್ಚಡಕನಾಗಿ ಕೊಳ್ಳದ ಆಹಾರಂಗಳ ಕೊಂಡು ಕೆಟ್ಟ ವೇಷಡಂಭಕರ ತೋರದಿರಯ್ಯಾ. ಇಂಥ ತೊಟ್ಟೆ ಕುಡಿಯುವ ಮೆಚ್ಚು ಮಾರಿಗೆ ಎತ್ತಣ ಸ್ವಯಂಭು ಎತ್ತಣ ನಿಜವು. ತೊತ್ತು ದೊರೆಯಾಗುವುದೇನಯ್ಯಾ ? ನಿತ್ಯವನರಿಯದ ಮೃತ್ಯುಮಾರಿಗಳಿಗೆ ಎತ್ತಣ ಬ್ರಹ್ಮವು ? ಬ್ರಹ್ಮವೆತ್ತ, ತಾನೆತ್ತ, ಹೋಗತ್ತ. ಇಂಥ ಭ್ರಾಂತುಯೋಗಿಗಳು ಕೆಟ್ಟ ಕೇಡಿಂಗೆ ಕಡೆಯಿಲ್ಲ. ವಿದೇಹಿ ತಾನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಶಿವಭಕ್ತಿರಿಗೆ ಭವಿ ಸರಿಯೆಂಬ ಭ್ರಷ್ಟ ಭಂಡರು ನೀವು ಕೇಳಿರೊ. ಅದೇನು ಕಾರಣವೆಂದರೆ ಕತ್ತೆಗೆ ಕುದುರೆ ಸರಿಯೆ ? ಗರತಿಗೆ ತೊತ್ತು ಸರಿಯೆ ? ಭಿತ್ತಿಗೆ ಕೇರು ಸರಿಯೆ ? ವಿರಕ್ತಿಗೆ ಪಿರಿತಿ ಸರಿಯೆ ? ಕತ್ತಲೆಗೆ ಬೆಳಗು ಸರಿಯೆ ? ಕರ್ತಗೆ ಭೃತ್ಯ ಸರಿಯೆಂಬ ದುರುಕ್ತಿಯ ದುರಾಚಾರಿ ದೂಷಕ ಹೊಲೆಯರಿಗೆ ಭಕ್ತಿ ಮುಕ್ತಿಯೆಲ್ಲಿಯದೊ ? ವಿರಕ್ತಿ ವೀರಶೈವ ವಿಚಾರ ಅವನಿಗೆಲ್ಲಿಯದೊ ? ಇಲ್ಲ, ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಶಿವಶಿವಾ, ಈ ಸಂಸಾರದಂದುಗ ದುಃಖ ನಾನೆಂತು ಪೇಳ್ವೆ. ಹೊನ್ನಿನ ವ್ಯಾಪಾರವ ಮಾಡಿ, ಧಾವತಿಯಿಂದ ಗಳಿಸುವದು ದುಃಖ. ಆ ಹೊನ್ನು ಜೋಕೆಮಾಡುವದು ದುಃಖ. ಆ ಹೊನ್ನು ಹೋದಮೇಲೆ ಅನೇಕ ದುಃಖ. ಹೆಣ್ಣು ತರುವದು ದುಃಖ; ಆ ಹೆಣ್ಣು ಆಳುವದು ದುಃಖ. ಹೆಣ್ಣು ಸತ್ತುಹೋದಮೇಲೆ ಅನೇಕ ದುಃಖ. ಮಣ್ಣು ದೊರಕಿಸುವದು ದುಃಖ. ಆ ಮಣ್ಣಿನ ಧಾವತಿ ಹೋರಾಟ ಮಾಡುವದು ದುಃಖ. ಆ ಮಣ್ಣು ನಾಶವಾದ ಮೇಲೆ ಅನೇಕ ದುಃಖ. ಇಂತೀ ತ್ರಿವಿಧವು ಮಲಸಮಾನವೆಂದರಿಯದೆ, ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು ಎಂಬಿರಿ. ಎಲೆ ಹುಚ್ಚು ಮರುಳು ಮಾನವರಿರಾ, ನೀವು ಮರಣವಾದ ಮೇಲೆ ಅವು ನಿಮ್ಮ ಕೂಡ ಬರ್ಪವೆ? ಬರ್ಪುದಿಲ್ಲ ಕೇಳಾ, ಎಲೆ ಹುಚ್ಚ ಮರುಳ ಮಾನವರಿರಾ, ಅವು ಆರ ಒಡವೆ ಎಂದರೆ ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಹೊನ್ನು ರಾಜನದು, ಹೆಣ್ಣು ಅನ್ಯರದು, ಮಣ್ಣು ಬಲ್ಲಿದರದು. ಇಂತೀ ತ್ರಿವಿಧವು ಅನಿತ್ಯವೆಂದು ತನ್ನ ಸ್ವಾತ್ಮಜ್ಞಾನದಿಂದ ತಿಳಿದೆಚ್ಚತ್ತು ವಿಸರ್ಜಿಸಿ, ಗುರುಕಾರುಣ್ಯಮಂ ಪಡೆದು, ಲಿಂಗಾಂಗಸಂಬಂಧಿಯಾಗಿ, ಗುರೂಪಾವಸ್ತೆಯಂ ಮಾಡಿ, ಮುಂದೆ ಮೋಕ್ಷವ ಹಡೆಯಬೇಕೆಂಬ ಯುಕ್ತಿ ವಿವೇಕ ವಿಚಾರ ಬುದ್ಧಿಯನರಿಯದೆ ಅಶನಕ್ಕಾಗಿ ಮಣ್ಣ ಮೆಚ್ಚಿ, ವ್ಯಸನಕ್ಕಾಗಿ ಹೆಣ್ಣ ಮೆಚ್ಚಿ, ಅಂಗಸುಖಕ್ಕಾಗಿ ಹೊನ್ನ ಮೆಚ್ಚಿ- ಇಂತೀ ತ್ರಿವಿಧ ಆಶೆ ಆಮಿಷ ಮಮಕಾರದಿಂದ ಮನಮಗ್ನರಾಗಿ, ಮತಿಗೆಟ್ಟು ಮುಂದುಗಾಣದೆ, ಸಟೆಯ ಸಂಸಾರದಲ್ಲಿ ಹೊಡದಾಡಿ ಹೊತ್ತುಗಳೆದು ವ್ಯರ್ಥ ಸತ್ತುಹೋಗುವ ಕತ್ತೆಸೂಳೆಮಕ್ಕಳ ಬಾಳ್ವೆ ಶುನಿ ಸೂಕರ ಕುಕ್ಕುಟನ ಬಾಳ್ವೆಗಿಂದತ್ತತ್ತಯೆಂದಾತ ನಿಮ್ಮ ಶರಣ ವೀರಾಧಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶ್ರೀಗುರು ಶಿಷ್ಯಂಗೆ ಉಪದೇಶವ ಮಾಡುವಲ್ಲಿ, ಲಿಂಗಕ್ಕೆ ಅರ್ಚನೆ ಪೂಜೆಗಳನು ಮಾಡಿ, ಲಿಂಗಾರ್ಪಿತದಲ್ಲಿ ಅವಧಾನಪ್ರಸಾದ, ಭೋಗದಲ್ಲಿ ಸುಯಿಧಾನ, ಗುರುವಿನಲ್ಲಿ ಜ್ಞಾನಸಿದ್ಧಿ, ಜಂಗಮದಲ್ಲಿ ನಿರ್ವಂಚನೆ, ಪ್ರೀತಿ ಪ್ರೇಮ ಪರಧನ ಪರಸ್ತ್ರೀ ಪರದೈವಕ್ಕೆರಗದೆ, ನಿತ್ಯಲಿಂಗಾರ್ಚನೆಯು ಮಾಡೆಂದು ಉಪದೇಶಮಂ ಕೊಟ್ಟನಲ್ಲದೆ, ಪಾದತೀರ್ಥದಲ್ಲಿ ಲಿಂಗಮಜ್ಜನಕ್ಕೆರೆದು ಪ್ರಸಾದವನರ್ಪಿಸ ಹೇಳಿಕೊಟ್ಟನೆ, ಇಲ್ಲ. ಆ ಭಕ್ತನು ತನು ಮನ ಧನವನು ಗುರುಲಿಂಗಜಂಗಮಕ್ಕೆ ಸವೆಸಿ, ತನು ಸವೆಸಿ ಮನಲೀಯವಾಗಿ ಧನಲೋಭವಿಲ್ಲದೆ ಸಂದು ನಿಂದ, ಪರಮವೈರಾಗ್ಯ ಉರವಣಿಸಿ ಈಷಣತ್ರಯದ ಆಸೆಯಳಿದು, ಸೋಹಂ ಎಂದು ನಿಂದು ಹರಗಣಂಗಳಂ ನೆರಪಿ, ಆಚಾರ ಕರ್ಪರ, ವಿಚಾರ ಕರ್ಪರ, ಅವಿಚಾರ ಕರ್ಪರ ವೇಷಮಂ ತಾಳಿ, ಭಕ್ತ ಭಿಕ್ಷಾಂದೇಹಿ ಎಂದು ಭಕ್ತರ ಮಠದಲ್ಲಿ ಹೊಕ್ಕು, ಲಿಂಗಾರ್ಚನೆಯಂ ಮಾಡಿ, ಲಿಂಗಪ್ರಸಾದಮಂ ಭೋಗಿಸಿ, ಶಿವಕ್ಷೇತ್ರ ತೀರ್ಥಂಗಳಂ ಚರಿಸಿ, ಲಿಂಗಧ್ಯಾನ ನಿರತನಾಗಿ ಇರಹೇಳಿದರಲ್ಲದೆ, ಲಿಂಗಕ್ಕೆ ಪಾದತೀರ್ಥವ ಕೊಟ್ಟು, ಪ್ರಸಾದವನಿಕ್ಕ ಹೇಳೆ ಮಾಡಿದ ನಿರ್ವಾಣದೀಕ್ಷೆಯುಂಟೆ ? ಸಲಿಂಗೀ ಪ್ರಾಣಮುಕ್ತಶ್ಚ ಮನೋಮುಕ್ತಶ್ಚ ಜಂಗಮಃ | ಪ್ರಸಾದೀ ಕಾಯಮುಕ್ತಶ್ಚ ತ್ರಿವಿಧಸ್ತತ್ವನಿರ್ಣಯಃ || ಇಂತೆಂದುದಾಗಿ, ಈ ನಿರ್ಣಯ ವಚನವನರಿಯಬಲ್ಲಡೆ ಜಂಗಮ, ಅಲ್ಲದಿದ್ದಡೆ ಭವಭಾರಿಯೆಂಬೆ, ಮಹಾಲಿಂಗ ಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ವರ್ಷಾಕಾಲದಿ ಭೂಮಿ ಬೆದೆಗೊಂಡಲ್ಲಿ ಬಿತ್ತುವರು. ಅಂಕುರಿಸಿ ಬಂದಲ್ಲಿ ಪರ್ಣವಾಗುವ ವಿಚಾರ ಮುಂದುಗೊಂಡಿಪ್ಪುದು. ಪರ್ಣಗಂಡ ಮತ್ತೆ, ಹೊಡೆ ಕುಸುಮ ದೃಷ್ಟದಾಗಿಂಗೆ ವಿಚಾರ ಮುಂದುಗೊಂಡಿಪ್ಪುದು, ಹೊಡೆಕುಸುಮಗಂಡ ಮತ್ತೆ ಮೊದಲೆಂಬ ವಿಚಾರ ಮುಂದುಗೊಂಡಿಪ್ಪುದು. ಮೊದಲಗಂಡ ಮತ್ತೆ ಏನುವನರಿಯದೆ ತಾನಾಗಿರ್ದ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮಂತೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->