ಅಥವಾ

ಒಟ್ಟು 144 ಕಡೆಗಳಲ್ಲಿ , 40 ವಚನಕಾರರು , 120 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ ಪೂಜೆಗೆ ಕಿಂಚಿತ್ತು ಫಲಪದವಿಯ ಕೊಟ್ಟು ಭವಹೇತುಗಳ ಮಾಡುವನಯ್ಯಾ. ಇಷ್ಟಲಿಂಗದಲ್ಲಿ ನೈಷ್ಠೆ ನಟ್ಟು ಬಿಟ್ಟು ತ್ರಿವಿಧವ ಮರಳಿ ಹಿಡಿಯದೆ ವಿರಕ್ತನಾದನಯ್ಯಾ ಗುರು ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಗುಂಗುರಿಗೆ ಸುಂಡಿಲು ಹುಟ್ಟಿದೆಡೆ ಆನೆಯಾಗಬಲ್ಲುದೆ ? ನೊಣವಿಂಗೆ ಪಕ್ಕ ಹುಟ್ಟಿದೆಡೆ ಶರಭನಾಗಬಲ್ಲುದೆ ? ಕಾಗೆ ಕೋಗಿಲೆಯು ಒಂದೆಯಾದೆಡೆ ಕೋಗಿಲೆಯಂತೆ ಸ್ವರಗೆಯ್ಯಬಲ್ಲುದೆ ? ಶ್ವಾನನ ನಡು ಸಣ್ಣನಾದಡೆ ಸಿಂಹನಾಗಬಲ್ಲುದೆ ? ಅಂಗದ ಮೇಲೆ ವಿಭೂತಿ ರುದ್ರಾಕ್ಷಿ ಶಿವಲಿಂಗವಿದ್ದಡೇನು ನಿಮ್ಮ ನಂಬಿದ ಸತ್ಯದಾಚಾರವುಳ್ಳ ಏಕಲಿಂಗನಿಷ್ಠಾವಂತರಿಗೆ ಸರಿಯೆನ್ನಬಹುದೆ ಅಯ್ಯಾ ? ಇಂಥ ಗುರುಲಿಂಗಜಂಗಮವ ನೆರೆ ನಂಬದೆ, ಪಾದತೀರ್ಥ ಪ್ರಸಾದದಿರವನರಿಯದೆ, ಬರಿದೆ ಭಕ್ತರೆಂದು ಬೊಗಳುವ ದುರಾಚಾರಿಯ ತೋರದಿರಯ್ಯಾ ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು ? ಸಕಳೇಶ್ವರದೇವಾ, ನೀನೆ ಬಲ್ಲೆ.
--------------
ಸಕಳೇಶ ಮಾದರಸ
ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ಲಿಂಗ ಹೊರತೆಯಾಗಿ, ವಿಭೂತಿ ರುದ್ರಾಕ್ಷಿಯ ಕೊಟ್ಟು, ಗುರುವಾಗಬಹುದೆ ಅಯ್ಯಾ? ಬೀಜವಿಲ್ಲದೆ ಅಂಕುರವಾಗಬಲ್ಲುದೆ? ಗಂಡನಿಲ್ಲದ ಮುಂಡೆಗೆ ಗರ್ಭನಿಂದಡೆ ಅವಳಾರಿಗೆ ಯೋಗ್ಯ? ಉಭಯವು ಕೇಡಾಯಿತ್ತು. ಇದನರಿತು ಮಾಡಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
`ಓಂ' ಎಂದು ವೇದವನೋದುವ ಮಾದಿಗಂಗೆ ಸಾಧ್ಯವಾಗದು ವಿಭೂತಿ. ಪುರಾಣವನೋದುವ ಪುಂಡರಿಗೆ ಸಾಧ್ಯವಗದು ವಿಭೂತಿ ಶಾಸ್ತ್ರವನೋದುವ ಸಂತೆಯ ಸೂಳೆಮಕ್ಕಳಿಗೆ ಸಾಧ್ಯವಾಗದು ವಿಭೂತಿ ಅಂಗಲಿಂಗಸಂಬಂಧವನರಿದ ಶಿವಜ್ಞಾನಿಗಳಿಗಲ್ಲದೆ ಸಾಧ್ಯವಾಗದು ವಿಭೂತಿ. ಅಂಗೈಯೊಳಗೆ ವಿಭೂತಿಯನಿರಿಸಿಕೊಂಡು, ಅಗ್ಘಣಿಯ ನೀಡಿ ಗುಣಮರ್ದನೆಯ ಮಾಡಿ ಲಿಂಗ ಉಚ್ಛಿಷ್ಟನಂಗೈದು ? ಲಿಂಗ ಸಮರ್ಪಣಂಗೈದು, ಷಡಕ್ಷರಿಯ ಸ್ಮರಣೆಯಂಗೈದು ಭಾಳದೊಳು ಪಟ್ಟವಂ ಕಟ್ಟಿ, ವಿಭೂತಿಯ ಧಾರಣಂಗೈದು ಹಸ್ತವ ಪ್ರಕ್ಷಾಲಿಸುವವ ಗುರುದ್ರೋಹಿ ಲಿಂಗದ್ರೋಹಿ ಜಂಗಮದ್ರೋಹಿ. ಶ್ರೀವಿಭೂತಿಯ ಲಲಾಟಕ್ಕೆ ಧರಿಸಿ ಹಸ್ತವ ತೊಳೆವ ಪಾತಕರ ಮುಖವ ನೋಡಲಾಗದು. ಶ್ರೀವಿಭೂತಿಯನು ಶಿವನೆಂದು ಧರಿಸುವುದು, ಪರಶಿವನು ತಾನೆಂದು ಧರಿಸುವುದು. ಸಾಕ್ಷಿ:ಕೃತ್ವೇವ ಜಲಮಿಶ್ರಂತು ಸಮುಧೃತ್ಯಷಡಕ್ಷರಿ ಧಾರಯೇತ್ ತ್ರಿಪುಂಡ್ರಂತು ಮಂತ್ರೇಣ ಮಂತ್ರಿತಂ'' ಶ್ರೀವಿಭೂತಿಯ ಧರಿಸಿ ಹಸ್ತವ ತೊಳದಾತಂಗೆ ದೇವಲೋಕ ಮತ್ರ್ಯಲೋಕಕ್ಕೆ ಸಲ್ಲದೆಂದುದಾಗಿ ನಿಮ್ಮಾಣೆ ನಿಮ್ಮ ಪ್ರಮಥರಾಣೆ, ನಮ್ಮ ಗುಹೇಶ್ವರಲಿಂಗವು ತಾನಾದ ವಿಭೂತಿ ಕಾಣಾ ಸಂಗನಬಸವಣ್ಣ.
--------------
ಅಲ್ಲಮಪ್ರಭುದೇವರು
ಜ್ಞಾನಚಕ್ರ: ಪರಮ ತತ್ವ ಪರಮಜ್ಞಾನ ಪರಮಾರ್ಥ ಪರಾಪರ ವಾಙ್ಮನಕ್ಕಗೋಚರ ಶಬ್ದಗಂಭೀರ ಉಪಮಾತೀತ, ಉನ್ನತ ಪರಶಿವ, ಜ್ಞಾನಜ್ಯೋತಿ ಸುಜ್ಞಾನದ ಪ್ರಭೆಯ ಬೆಳಗಿನೊಳಗೆ ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ, ಶಿವಜ್ಞಾನವೆ ಶೃಂಗಾರ, ಮಹಾಬೆಳಗೆ ವಿಭೂತಿ, ಪಂಚಬ್ರಹ್ಮವೆ ದರ್ಶನ ಗಗನಸ್ಥಾನವೆ ಕಂಥೆ, ಆಕಾಶವೆ ಟೊಪ್ಪರ, ಅಜಾಂಡ_ಬ್ರಹ್ಮಾಂಡವೆ ಕರ್ಣಕುಂಡಲ, ಆದಿ ಆಧಾರವೆ ಕಕ್ಷಪಾಳ ಅನಾಹತವೆ ಒಡ್ಯಾಣ, ಅದ್ವೈತವೆ ಯೋಗವಟ್ಟಿಗೆ, ಅಗಮ್ಯವೆ ಯೋಗವಾವುಗೆ, ಅಚಳಿತವೆ ಖರ್ಪರ, ಅಪ್ರಾಮಣವೆ ಲಾಕುಳ, ಅವಿಚಾರವೆ ಸುಳುಹು, ಅಕಲ್ಪಿತವೆ ಭಿಕ್ಷೆ, ಕೊಂಡುದೆ ಗಮನ, ನಿಂದುದೆ ನಿವಾಸ,_ ನಿಶ್ಚಿಂತವೆಂಬ ಆಶ್ರಮದಲ್ಲಿ ನಿರಾಕುಳವೆಂಬ ಸಿಂಹಾಸನವನಿಕ್ಕಿ; ಗಗನಗಂಭೀರದ ಬಾವಿಯೊಳಗೆ ಅಗೋಚರದ ಅಗ್ಘಣಿಯ ತಂದು ಮಹಾಘನಪ್ರಾಣಲಿಂಗಕ್ಕೆ ಮಂಗಳದ ಬೆಳಗಿನಲ್ಲಿ ಮಜ್ಜನಕ್ಕೆರೆದು; ಬಿಂದ್ವಾಕಾಶವೆ ಗಂಧ, ಮಹದಾಕಾಶವೆ ಅಕ್ಷತೆ, ಪರಾಪರವೆ ಪತ್ರೆಪುಷ್ಪ, ನಿರ್ಮಳವೆ ಲಿಂಗಾರ್ಚನೆ, ಮಹಾಪ್ರಕಾಶವೆ ಪೂಜೆ, ನಿತ್ಯನಿರಂಜನವೆ ಧೂಪದೀಪಾರತಿ, ಸಕಲ ಭುವನಾದಿಭುವನಂಗಳೆ ಸಯದಾನ, ಆಚಾರವೆ ಅರ್ಪಿತ, ಮಹತ್ವವೆ ಸಿತಾಳ, ಅಖಂಡಿತವೆ ಅಡಕೆ, ಏಕೋಭಾವವೆ ಎಲೆ, ಶುದ್ಧಶಿವಾಚಾರವೆ ಸುಣ್ಣ_ ವಿವೇಕ ವಿಚಾರದಿಂದ ವೀಳೆಯವನವಧರಿಸೂದು. ಮಹಾಲಿಂಗದ ಪರಿಣಾಮವೆ ಪ್ರಸಾದ, ಸಮ್ಯಕ್ ಜ್ಞಾನವೆ ಸಂತೋಷ. ಸಹಜ ನಿರಾಭಾರಿಗಳ ಮೇಳದಿಂದ, ನಿಸ್ಸೀಮದ ನಿಭ್ರಾಂತಿನ ಸುಸಂಗದಲ್ಲಿ_ ನಿರಾಶಾಪದವೆ ಅನುಕೂಲ, ನಿಶ್ಶಬ್ದವೆ ಅನುಭಾವ, ಅನುಪಮದ ನಿಶ್ಶೂನ್ಯವೆ ವಿಶ್ರಾಮ, ನಿರಾಕಾರವೆ ಗಮನ. ನಿರಂತರ ಪಾತಾಳ ಊಧ್ರ್ವದ ಪವನ;_ತ್ರಿಭುವನಗಿರಿಯೆಂಬ ಪರ್ವತವನೇರಿ, ಕಾಯವೆಂಬ ಕದಳಿಯ ಹೊಕ್ಕು ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ; ಇಹಲೋಕವೇನು ? ಪರಲೋಕವೇನು ?_ ಅಲ್ಲಿಂದತ್ತ ಆಗಮ್ಯ ನಿರಾಳ ಪರಮಜ್ಞಾನದ ಸಿದ್ಧಿ ಮಹಾಲಿಂಗದ ಬೆಳಗು, ಗುಹೇಶ್ವರಾ, ನಿಮ್ಮ ನಿಜವನರಿದ ಮಹಾಮಹಿಮ ಶರಣಂಗೆ, ನಮೋ ನಮೋ ಎಂಬೆನು.
--------------
ಅಲ್ಲಮಪ್ರಭುದೇವರು
ವೇಷವ ಹೊತ್ತು , ಆಶೆ ರೋಷವ ಬಿಡದೆ, ದೇಶವ ತಿರುಗಿ, ಹೊರವೇಷದ ವಿಭೂತಿ ರುದ್ರಾಕ್ಷಿ ಕಾವಿ ಕಾಷಾಯಾಂಬರವ ಧರಿಸಿ ಫಲವೇನು? ಕಾಮ ಕೆಡದು, ಕ್ರೋಧ ಬಿಡದು, ಲೋಭ ಹಿಂಗದು, ಮೋಹ ನಿಲ್ಲದು, ಮದ ಹೆರೆಸಾರದು, ಮತ್ಸರ ಬೆಂದುಹೋಗದು. ಇವೆಲ್ಲ ಸಹಿತ ಜಂಗಮಭಕ್ತರೆಂದು ಸುಳಿವವರ ಕಂಡು ನಾಚಿತ್ತು ಎನ್ನ ಮನ. ಭಕ್ತಜಂಗಮ ಘನವನೇನೆಂದು ಉಪಮಿಸುವೆ ? ರೂಪಿನ ಹಾಗೆ, ನೆಳಲಿನ ಹಾಗೆ, ದೇಹದ ಹಾಗೆ, ಪ್ರಾಣದ ಹಾಗೆ, ಭಾವದ ಹಾಗೆ, ನಿರ್ಭಾವದ ಹಾಗೆ, ಉರಿಯ ಹಾಗೆ, ಕರ್ಪುರದ ಹಾಗೆ, ಆವಿಯ ಹಾಗೆ, ನೀರ ಹಾಗೆ, ಎರಡೊಂದಾದರೆ ತೆರಹಿಲ್ಲ. ಆ ನಿಲುವಿಂಗೆ ನಮೋ ನಮೋ ಎನುತಿರ್ದೆ ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಶಿವಶಿವಾ, ಈ ಲೋಕದ ಮಾನವರನೇನೆಂಬೆನಯ್ಯಾ. ಅದೆಂತೆಂದಡೆ: ನಾವು ಗುರುಗಳು, ನಾವು ಲಿಂಗಾಂಗಿಗಳು, ನಾವು ಜಂಗಮಲಿಂಗಿಗಳು, ನಾವು ಸದಾಚಾರಸದ್ಭಕ್ತರು ಎಂಬರಯ್ಯ. ಇಂತಿವರ ನಡತೆ ಆಚರಣೆಯೆಂತಾಯಿತೆಂದಡೆ: ಒಬ್ಬಾನೊಬ್ಬ ಜಾತಿಹಾಸ್ಯಗಾರನು ವೇಷವ ಧರಿಸಿಕೊಂಡು ಪುರಜನರ ಮೆಚ್ಚಿಸಿ, ತನ್ನ ಒಡಲಹೊರವಂತೆ, ವಿಭೂತಿ ರುದ್ರಾಕ್ಷಿ ಕಾವಿ ಕಾಷಾಂಬರ ಮುಂತಾಗಿ ವೇಷವ ಧರಿಸಿ, ಗುರು-ಹಿರಿಯರು ಜಂಗಮಲಿಂಗಿಗಳೆಂದು ನಾಮವ ತಾಳಿ, ಭಕ್ತರಿಗೆ ಸದಾಚಾರಮಾರ್ಗವ ಹೇಳೇವು, ಸದಮಲದ ಬೆಳಗ ತೋರೇವು ಎಂದು ಧನಿಕರಿದ್ದೆಡೆಗೆ ಬಂದು, ನಿಮಗೆ ಉಪದೇಶವ ಹೇಳಿ, ಲಿಂಗಾಂಗಸಮರಸವ ತೋರಿ, ಮಾಂಸಪಿಂಡವಳಿದು ಮಂತ್ರಪಿಂಡವ ಮಾಡೇವು ಎಂದು ಹೇಳಿ, ಆ ಭಕ್ತರ ಕೈಯಲ್ಲಿ ಅನ್ನ ಹಚ್ಚಡ ಹೊನ್ನು ವಸ್ತ್ರವ ತೆಗೆದುಕೊಂಡು ಆ ಜಾತಿಕಾರನ ಹಾಗೆ ಇವರು ತಮ್ಮ ಉದರಾಗ್ನಿ ಅಡಗಿಸಿಕೊಂಬುವರಲ್ಲದೆ ಇಂತಪ್ಪ ಗುರು-ಶಿಷ್ಯರ, ದೇವ-ಭಕ್ತರೆಂಬುಭಯರ ಆಚರಣೆಯೆಂತಾಯಿತ್ತೆಂದೊಡೆ- ಹಂದಿಯ ಬಾಯೊಳಗಿನ ತುತ್ತ ನಾಯಿ ಬಂದು ಕಚ್ಚಿದಂತೆ. ಅದೆಂತೆಂದೊಡೆ: ಜೀವನಬುದ್ಭಿಯುಳ್ಳ ಗುರುವೆಂದಾತ ಹಂದಿ, ಕರಣಬುದ್ಧಿಯುಳ್ಳ ಶಿಷ್ಯನೆಂಬಾತ ನಾಯಿ. ಇಂತಪ್ಪ ಗುರು-ಶಿಷ್ಯರ ಸಮ್ಮೇಲನವು ಹುಟ್ಟುಗುರುಡನ ಕೈಯ ಕಟ್ಟಿ ಲೊಟ್ಟಿಗಣ್ಣವ ಪಿಡಿದು ಕಾಣದೆ ಕಮ್ಮರಿಬಿದ್ದಂತಾಯಿತಯ್ಯ. ಅದೇನು ಕಾರಣವೆಂದಡೆ, ಗುರುವಿನಂತ ಶಿಷ್ಯನರಿಯ, ಶಿಷ್ಯನಂತ ಗುರುವರಿಯ, ಜಂಗಮನಂತ ಭಕ್ತನರಿಯ, ಭಕ್ತನಂತ ಜಂಗಮವರಿಯದ ಕಾರಣ. ಉಪಾದ್ಥಿಯುಳ್ಳವರು ಗುರುವಲ್ಲ ಶಿಷ್ಯರಲ್ಲ. ಉಪಾದ್ಥಿಯುಳ್ಳವರಲ್ಲಿ ಉಪದೇಶವ ಹಡಿಯಬೇಕೆಂಬವರ, ಉಪಾದ್ಥಿಯುಳ್ಳವರಿಗೆ ಉಪದೇಶವ ಹೇಳಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಸೂರ್ಯಚಂದ್ರರು ಅಳಿದುಹೋಗುವ ಪರಿಯಂತರವು ಹಂದಿ ನಾಯಿಯ ನರಕದಲ್ಲಿಕ್ಕದೆ ಬಿಡನೆಂದಾತ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನು ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬ ಪಂಚ ವಿಭೂತಿ ಉತ್ಪತ್ಯವೆಂತೆಂದಡೆ : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಮುಖದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಉತ್ಪತ್ಯವಾಯಿತ್ತು. ಆ ಪೃಥ್ವಿಯಪ್ಪುತೇಜವಾಯುವಾಕಾಶದಿಂದಲ್ಲಿ ನಿವೃತ್ತಿ ಪ್ರತಿಷ್ಠೆ ವಿದ್ಯಾ ಶಾಂತಿ ಶಾಂತ್ಯಾತೀತಯೆಂಬ ಪಂಚಕಲೆಗಳುತ್ಪತ್ಯವಾಯಿತ್ತು. ಆ ಪಂಚಕಲೆಗಳಿಂದ ನಂದೆ ಭದ್ರೆ ಸುರಬ್ಥಿ ಸುಶೀಲೆ ಸುಮನೆಯೆಂಬ ಪಂಚಗೋವುಗಳುತ್ಪತ್ಯವಾಯಿತ್ತು. ಆ ಪಂಚಗೋವುಗಳ ಗೋಮಯದಲ್ಲಿ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆಯೆಂಬ ಪಂಚವಿಭೂತಿ ಉತ್ಪತ್ಯವಾಯಿತ್ತು. ಇದಕ್ಕೆ ಜಾಬಾಲೋಪನಿಷತ್ : ``ಸದ್ಯೋಜಾತಾತ್ ಪೃಥಿವೀ ತಸ್ಯಾ ನಿವೃತ್ತಿಃ ತಸ್ಯಾಃ ಕಪಿಲವರ್ಣಾ ನಂದಾ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷ್ಠಾ ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಬ್ಥೀ ತಸ್ಯಾಃ ಗೋಮಯೇನ ಭಸ್ಮ ಜಾತಂ || ತತ್ಪುರುಷಾತ್ ವಾಯುಃ ತಸ್ಮಾತ್ ಶಾಂತಿ ಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ || ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಃ ಚಿತ್ರವರ್ಣಾ ಸುಮನಾಃ ತಸ್ಯಾಃ ಗೋಮಯೇನ ರಕ್ಷಾ ಜಾತಾ ||'' ``ಐಶ್ವರ್ಯಕಾರಣಾತ್ ಭೂತಿಃ, ಭಾಸನಾತ್ ಭಸಿತಂ, ಸರ್ವಾಘಭಕ್ಷಣಾತ್ ಭಸ್ಮಂ, ಅಪದಾಂ ಕ್ಷರಣಾತ್ ಕ್ಷಾರಂ, ಭೂತಪ್ರೇತಪಿಶಾಚಬ್ರಹ್ಮರಾಕ್ಷಸಾಪಸ್ಮಾರ ಭವಬ್ಥೀತಿಭ್ಯೋsಬ್ಥಿರಕ್ಷಣಾತ್ ರಕ್ಷೇತಿ ||'' ಇಂತೆಂದುದು ಶ್ರುತಿ. ಇದಕ್ಕೆ ಕ್ರಿಯಾಸಾರೇ : ``ವಿಭೂತಿರ್ಭಸಿತಂ ಭಸ್ಮ ಕ್ಷಾರಂ ರಕ್ಷೇತಿ ಭಸ್ಮನಃ | ಭವಂತಿ ಪಂಚ ನಾಮಾನಿ ಹೇತು ರಕ್ಷಣಾದ್ರಕ್ಷೇತಿ ||'' ಇಂತೆಂದುದು ಶ್ರುತಿ. ``ಪಂಚಬ್ಥಿಃಬೃಷಂ ಐಶ್ವರ್ಯಕಾರಣಾದ್ಭೂತಿ, ಭಸ್ಮ ಸರ್ವಾಘಭಕ್ಷಣಾತ್, ಭಾಸನಾತ್ ಭಸಿತಂ, ತತ್ವಾ ಕ್ಷರಣಾತ್‍ಕ್ಷಾರಮಾಪದಂ, ಭೂತಪ್ರೇತಪಿಶಾಚೇಭ್ಯೋ ಸ್ವರ್ಗಹೇತುಭ್ಯೋಬ್ಥಿರಕ್ಷಣಾತ್ ರಕ್ಷಾ ಸ್ಯಾತ್ ಕ್ರೂರಸರ್ಪೇಭ್ಯೋ ವ್ಯಾಘ್ರಾದಿಭ್ಯಶ್ಚ ಸರ್ವದಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಹೊರವೇಷದ ವಿಭೂತಿ ರುದ್ರಾಕ್ಷಿಯನು ಧರಿಸಿಕೊಂಡು ವೇದ ಶಾಸ್ತ್ರ ಪುರಾಣ ಆಗಮದ ಬಹುಪಾಠಿಗಳು; ಅನ್ನ ಹೊನ್ನು ವಸ್ತ್ರವ ಕೊಡುವವನ ಬಾಗಿಲ ಕಾಯುವ ಮಣ್ಣ ಪುತ್ಥಳಿಯಂತಹ ನಿತ್ಯನಿಯಮದ ಹಿರಿಯರುಗಳು. ಅದೆಂತೆಂದಡೆ: ``ವೇದವೃದ್ಧಾ ಅಯೋವೃದ್ಧಾಃ ಶಾಸ್ತ್ರವೃದ್ಧಾ ಬಹುಶ್ರುತಾಃ ಇತ್ಯೇತೇ ಧನವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ಎಲ್ಲ ಹಿರಿಯರು ಲಕ್ಷ್ಮಿಯ ದ್ವಾರಪಾಲಕರು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪರಶಿವನ ಜ್ಞಾನಚಕ್ಷುವಿನಲ್ಲಿ ಉದಯವಾದ ರುದ್ರಾಕ್ಷೆಯ ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ ಧರಿಸಿದ ಶಿವಶರಣನೇ ರುದ್ರನು. ಆ ರುದ್ರಾಕ್ಷೆಯ ಜಪಿಸಿದಾತನೇ ಸದ್ಯೋನ್ಮುಕ್ತನು. ಇದು ಕಾರಣ, ಅಜ ಹರ ಸುರ ಮನು ಮುನೀಶ್ವರರು ಶ್ರೀವಿಭೂತಿ ರುದ್ರಾಕ್ಷೆಯನೆ ಧರಿಸಿ ಶಿವಲಿಂಗಾರ್ಚನೆಯ ಮಾಡುತ್ತಿಪ್ಪರು. ಪ್ರಮಥಗಣ ರುದ್ರಗಣ ಮುಖ್ಯವಾದ ಗಣಾದ್ಥೀಶ್ವರರು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಪ್ರಣವ ಪಂಚಾಕ್ಷರಿಯನೆ ಜಪಿಸಿ, ಪ್ರಣವ ಸ್ವರೂಪಿಗಳಾಗುತ್ತಿಪ್ಪರು. ನೋಡಿದವರು ಮುಟ್ಟಿದವರು ಧರಿಸಿದವರು ಜಪಿಸಿದವರೆಲ್ಲ ಸಕಲ ಪ್ರಪಂಚನಳಿದು ಪರಶಿವ ಸ್ವರೂಪರಪ್ಪುದು ತಪ್ಪದು ನೋಡಾ. ಇದು ಕಾರಣ, ನಾನು ವಿಭೂತಿ ರುದ್ರಾಕ್ಷೆಯನೆ ಧರಿಸಿ, ಶಿವಲಿಂಗಾರ್ಚನೆಯನೆ ಮಾಡಿ ಪ್ರಣವ ಪಂಚಾಕ್ಷರಿಯನೆ ಜಪಿಸುತ್ತಿದ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಹಲವು ಲೀಲೆಯೊಳಗೆ ಗುರುಶಿಷ್ಯ ಎರಡಾದ ವಿನೋದವೇನೆಂಬೆ ? ಎನ್ನ ಶ್ರೀಗುರು ಬಸವೇಶ್ವರನು ಎನ್ನ ಶಿಕ್ಷಿಸಿ ದೀಕ್ಷೆಯನೆಸಗಿ ಮೋಕ್ಷದಖಣಿಯಮೂರ್ತಿಯತಂದು, ತನ್ನ ಗುರು ತನ್ನ ಗುರ್ತವ ತೋರಿದಾ. ಆ ಗುರ್ತವ ಎನ್ನ ಕೈಯಲ್ಲಿಟ್ಟು ಈ ಮಹಾಂತನ ಪೂಜಿಸಿ ಮುಕ್ತಿಯ ಪಡಿಯೆಂದು ನಿರೂಪಿಸಲು, ಆ ಗುರುನಿರೂಪವ ಕೈಕೊಂಡು ಮಹಾಂತನ ಮುಂದಿಟ್ಟುಕೊಂಡು ಈ ಮಹಾಂತ ಎನ್ನ ಗುರುವಿನಗುರು ಎನಗೆ ಪರಮಾರಾಧ್ಯ ತಾ ಲಿಂಗವಾಗಿ ಬಂದಕಾರಣವೇನೆಂದು ತನ್ನೊಳಗೆ ತಾನೆ ವಿಚಾರಿಸಲು, ಅಲ್ಲಿ ಹೊಳೆದುದು ನೀನು ನನಗೆ ಪರಮಾರಾಧ್ಯ, ಒಂದೇ ಲಿಂಗವೇ ಹಲವರಾಗಿ ತೋರಿದಿರಿ. ಅದೆಂತೆಂದಡೆ : ಗುರು ಲಿಂಗ ಜಂಗಮ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿಯಮಂತ್ರ ಮತ್ತು ಶಿಕ್ಷಾಗುರು ದೀಕ್ಷಾಗುರು ಮೋಕ್ಷಾಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಮಹಾಂತದೇವರ ದೇವ ನೀನೇ ಆದಿ. ನೀವು ಹೀಂಗಾದ ಪರಿಯೆಂತೆಂದಡೆ : ಮೊದಲೇ ಶಿಕ್ಷಾಗುರು ಶಿಖಾಮಣಿಸ್ವಾಮಿಯೆನಿಸಿದಿರಿ, ದೀಕ್ಷಾಗುರು ಗುರುಬಸವಸ್ವಾಮಿಯೆನಿಸಿದಿರಿ, ಮೋಕ್ಷಾಗುರು ಶ್ರೀಮನ್‍ಮಹಾಮುರಘೆಯಸ್ವಾಮಿಗಳ ಚರಮೂರ್ತಿ ಸಿರಿವಾಸ ಚನ್ನಬಸವೇಶ್ವರರೆನಿಸಿದಿರಿ. ಗುರುವಿನಗುರು ಹಳಪ್ಯಾಟಿ ಬಸವಯ್ಯನೆನಿಸಿದಿರಿ. ಪರಮಗುರು ಭಂಗೀಪರ್ವತದೇವರೆನಿಸಿದಿರಿ. ಪರಮಾರಾಧ್ಯ ಗೊಬ್ಬೂರ ಸದಾಶಿವದೇವರೆನಿಸಿದಿರಿ. ಸರ್ವದೇವರು ಮಹೇಶ್ವರರು ಎನಗೆ ಮಹಾಮಹಾಂತನೆನಿಸಿದಿರಿ. ಎನ್ನ ದೇವರದೇವ ಸರ್ವವು ನೀನೇ ಆಗಿರ್ದು, ನೀನು ಒಂದೇ ಪರಮಾರಾಧ್ಯರೆನಲುಂಟೆ ? ಒಂದೇ ನೀ ಎನಗೆ ಲಿಂಗವಾದನೆನಲುಂಟೆ ? ಲಿಂಗವಾದಾತನು ನೀನೆ, ಪರಮಾರಾಧ್ಯನಾದಾತನು ನೀನೆ, ಗುರುವಾದಾತನು ನೀನೆ, ಅರುವಾದಾತನು ನೀನೆ, ನೀನಲ್ಲದೆ ಮತ್ತೊಂದು ಬ್ಯಾರೆ ಭಾವಿಸಲುಂಟೆ ? ಎನ್ನ ಹುಟ್ಟಿಸಿದ ಮಹಾಂತನು ನೀನೆ, ಎನ್ನ ಬೆಳಸಿದ ಶರಣಬಸವಪ್ಪನು ನೀನೆ ಎನ್ನ ಮನ್ನಿಸಿದ ಘನಸಿದ್ದಪ್ಪನು ನೀನೆ, ಎನ್ನ ನಿಂದಿಸಿದ ಹಳಪ್ಯಾಟಿ ಬಸಯ್ಯನು ನೀನೆ, ಉಣಿಸುವ ಉಡಿಸುವ ಹಾಸುವ ಹೊಚ್ಚುವ ಮುಚ್ಚುವ ಚುಚ್ಚುವ ಹಳಿವ ಮುಳಿವ ಸರ್ವವೂ ಎನಗೆ ನೀನಲ್ಲದೆ ಮತ್ತೊಬ್ಬರಿಲ್ಲ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->