ಅಥವಾ

ಒಟ್ಟು 57 ಕಡೆಗಳಲ್ಲಿ , 21 ವಚನಕಾರರು , 51 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
`ದೇಹೇ ಪ್ರಾಣಂ ಸಮಾಯೋಜ್ಯ ಪ್ರಾಣಲಿಂಗೇ ಪ್ರಕಲ್ಪಯೇತ್ | ಅವಿನಾಭಾವ ಸಂಯೋಗಾತ್ತಸ್ಮಾದೈಕ್ಯಂ ಪ್ರಕಲ್ಪಯೇತ್' | ಎಂದುದಾಗಿ, ಈ ಪ್ರಕಾರದಿಂ ವೀರಶೈವ ದೀಕ್ಷಿತನಾದ ವೀರಮಾಹೇಶ್ವರನು ದೇಹಪ್ರಾಣಂಗಳ ವರ್ತನೆ ಬೇರಾಗದ ಹಾಂಗೆ, ಏಕವಾಗಿ ಕೂಡಿ ತನ್ನ ಪ್ರಾಣಲಿಂಗದಲ್ಲಿ ಕಲ್ಪಿಸೂದ. ಆ ಅಗಲಿಕೆಯಿಂದ ಭಾವದ ಕೂಟದ ದೆಸೆಯಿಂದ ಪ್ರಾಣ ಲಿಂಗವೆಂಬೆರಡನೂ ಏಕವನು ಮಾಡುವುದಯ್ಯಾ ಶಾಂತ ವೀರೇಶ್ವರಾ.
--------------
ಶಾಂತವೀರೇಶ್ವರ
ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ವೇದಾಂತ ಸಿದ್ಧಾಂತವಪ್ಪ ತರ್ಕಮರ್ಕಟ ವಿದ್ಥಿಯ ದರ್ಶನವಾದಿಗಳ ಪರಿ ವರ್ತನೆಯಲ್ಲ; ಶರಣನ ವರ್ತನೆ ಬೇರೆ. ವೀರಶೈವ ಸಿದ್ಧಾಂತ ನಿರ್ಣಯ ನಿಜಭಕ್ತಿ. ನಿಜ ಶಿವಜ್ಞಾನ, ಪರಮ ವೈರಾಗ್ಯವನುಳ್ಳ ಸರ್ವಾಚಾರ ಸಂಪನ್ನ ಶರಣ. ಲಿಂಗಾತ್ಮಕ, ಲಿಂಗೇಂದ್ರಿಯ, ಲಿಂಗಾಂಗಸಂಗಿ, ಘನಲಿಂಗಯೋಗಿ. ಪ್ರಾಣಮುಕ್ತ, ಮನೋಮುಕ್ತ, ಶರೀರಮುಕ್ತ. ಅನಾದಿ ಕೇವಲ ಮುಕ್ತರಯ್ಯಾ ನಿಮ್ಮ ಶರಣರು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇಷ್ಟಲಿಂಗದ ವೀರಶೈವ, ಪ್ರಾಣಲಿಂಗದ ವೀರಶೈವ, ಭಾವಲಿಂಗದ ವೀರಶೈವ. ತ್ರಿವಿಧ ಲಿಂಗದಲ್ಲಿ ನೈಷ್ಠೆವರಿಯಾದ ಶರಣನ ನೀವು ನೋಡಣ್ಣ. ಇಷ್ಟಲಿಂಗವ ಕಾಯಕರದಲ್ಲಿ ಹಿಡಿದ ಮೇಲೆ ಅನ್ಯದೈವಕೆ ತಲೆವಾಗದ ವೀರಶೈವಬೇಕು ಭಕ್ತಂಗೆ, ಮನದ ಕೈಯಲ್ಲಿ ಪ್ರಾಣಲಿಂಗವ ಹಿಡಿದ ಮೇಲೆ ಮಾಯಾ [ಮೋಹನಿರಸನೆಯಾಗಿ]ರುವ ವೀರಶೈವಬೇಕು ಭಕ್ತಂಗೆ. ಭಾವದ ಕೈಯಲ್ಲಿ ಭಾವಲಿಂಗವ ಹಿಡಿದ ಮೇಲೆ ಪರಧನ ಪರವಧು ಪರಾನ್ನವ ಬಯಸದ ವೀರಶೈವಬೇಕು ಭಕ್ತಂಗೆ. ಇಂತೀ ತ್ರಿವಿಧಲಿಂಗದ ವೀರಶೈವದೊಳಿಂಬುಗೊಂಡ ತ್ರಿಕರಣಶುದ್ಧವಾದ ತ್ರಿವಿಧಸಂಪನ್ನ ಶರಣಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಪರಶಿವತತ್ವದ ಸ್ವರೂಪವ ಬಲ್ಲೆವೆಂಬಿರಿ, ನಿಮ್ಮ ಬಲ್ಲತನವ ಪೇಳಿರಯ್ಯಾ. ಆಗಮ ಪುರುಷರಿರಾ, ನಿಮ್ಮಾಗಮಂಗಳು ನಮ್ಮ ಶಿವನ ನಿಲುಕಡೆಯನರಿಯದೆ, ಅರಸಿ ಅರಸಿ ಆಸತ್ತು ಬಳಲಿ ಹೋದವು ಕೇಳಿರಯ್ಯಾ. ವೇದಪುರುಷರಿರಾ, ನಿಮ್ಮ ವೇದಂಗಳು ವೇದಿಸಲರಿಯದೆ ನಾಯಾಗಿ ಬೊಗಳಿ, ಬೆಂಡಾಗಿ ಹೋದವು ಕೇಳಿರಯ್ಯಾ. ಪುರಾಣಪುರುಷರಿರಾ, ನಿಮ್ಮ ಪುರಾಣಂಗಳು ಪೂರೈಸಿ ಪರಶಿವನ ಕಾಣದೆ ವೀರಶೈವ ಪುಂಡ್ರಮಸ್ತಕದಿಂದ ಮಥನಿಸಿ ಹೋದವು ಕೇಳಿರಯ್ಯಾ. ಶಾಸ್ತ್ರಸಂದ್ಥಿಗಳರಿರಾನಿಮ್ಮಶಾಸ್ತ್ರ ಸಾದ್ಥಿಸಿ ನಮ್ಮ ಪರಶಿವನ ನಿಲುಕಡೆಯ ಕಾಣದೆ ಒರಲಿ ಒರಲಿ ಹೋದವು ಕೇಳಿರಯ್ಯಾ. ತರ್ಕ ತಂತ್ರಗಳ ಕಲಿತು ಹೇಳುವರೆಲ್ಲ ಟಗರು, ಕೋಣ, ಹುಂಜಿನಂತೆ ಹೋರಾಡಿ ಮಥನದಿಂದ ಹೊಡೆದಾಡಿ ಪರಶಿವನ ಕಾಣದೆ ಸತ್ತು ಹೋದರಲ್ಲಾ ! ಇಂತೀ ವೇದ ಶಾಸ್ತ್ರಗಮ ಪುರಾಣ ತರ್ಕ ತಂತ್ರಗಳು ಶಿವನ ನಿಲುಕಡೆಯನೆಂದಿಗೂ ಅರಿಯವು. ಇಂತಿವನೆಲ್ಲವನು ನೋಡಿ ಶಿವನ ಕೂಡಬೇಕೆಂಬಣ್ಣಗಳು ಮುನ್ನವೆ ಅರಿಯರು, ಅದೇನು ಕಾರಣವೆಂದಡೆ- ಪ್ರಸೂತವಾಗದ ಮುನ್ನ ಶಿಶು ಬಯಸಿದರುಂಟೆ ? ಹಸಿಯಿಲ್ಲದ ಭೂಮಿಯಲ್ಲಿ ಬೀಜವ ಬಿತ್ತಿ ಫಲವ ಬಯಸಿದರುಂಟೆ ? ಈ ದೃಷ್ಟಾಂತದಂತೆ ತಿಳಿದು ಇಂತೀ ಎಲ್ಲವನು ವಿಸರ್ಜಿಸಿ ಕಳೆವುದು ಶಿವಜ್ಞಾನ. ಅಂತಪ್ಪ ಶಿವಜ್ಞಾನದ ನಿಲವು ಕರಸ್ಥಳದ ಇಷ್ಟಲಿಂಗ. ಆ ಇಷ್ಟಲಿಂಗಬ್ರಹ್ಮದ ನಿಜವು ತಾನೆಂದು ತಿಳಿದು ಶಿಶುಕಂಡ ಕನಸಿನಂತೆ, ಮೂಕ ಸಕ್ಕರಿಮೆದ್ದಂತೆ ಇರ್ದರಯ್ಯಾ ನಿಮ್ಮ ಶರಣರು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಎಲಾ, ಶೈವ ವೀರಶೈವ ಎಂಬುವವು ಉಭಯ ಮತಗಳುಂಟು. ಅವು ಎಂತೆಂದಡೆ, ಸ್ಥಾಪ್ಯಲಿಂಗವ ಪೂಜೆಮಾಡುವುದೇ ಶೈವ; ಗುರುವು ಕೊಟ್ಟ ಇಷ್ಟಲಿಂಗವ ಪೂಜೆಮಾಡುವುದೇ ವೀರಶೈವ. ಅದರೊಳಗೆ ಲಿಪ್ತವಾಗಿರ್ಪರೇ ಭಕ್ತರು, ನೀವು ಕೇಳಿರಯ್ಯಾ : ಸ್ಥಾಪ್ಯಲಿಂಗವ ಪೂಜಿಸಿದ ಕರ ಪೋಗಿ ಪರಸ್ತ್ರೀಯರ ಕುಚಂಗಳ ಪಿಡಿಯಬಹುದೆ ? ಈಗ ಯತಿಯ ನುಡಿದ ಜಿಹ್ವೆ ಪೋಗಿ ಪರಸ್ತ್ರೀಯರ ಅಧರಪಾನ ಮಾಡಬಹುದೆ ? ಮಹಾಮಂತ್ರವ ಕೇಳಿದ ಕರ್ಣ ಪೋಗಿ ಪರತಂತ್ರವ ಕೇಳಬಹುದೆ ? ಲಿಂಗಪೂಜಕರ ಅಂಗ ಪೋಗಿ ಪರರಂಗವನಪ್ಪಬಹುದೆ ? ಇವನು ಶೈವ ಭಕ್ತನಲ್ಲಾ ! ಶೈವನಾಗಲಿ ವೀರಶೈವನಾಗಲಿ ಏಕಲಿಂಗನಿಷ್ಠಾಪರನಾಗಿ, ಅಷ್ಟಮದಂಗಳೊಳ್ದಳಗೊಂಡು ಸಂಹರಿಸಿ, ಪಂಚಕ್ಲೇಶ ದುರಿತ ದುರ್ಗುಣಗಳ ಕಳೆದುಳಿದು, ಆರು ಚಕ್ರವ ಹತ್ತಿ ಮೀರಿದ ಸ್ಥಲದೊಳಗಿಪ್ಪ ಲಿಂಗಮಂ ಪೂಜಿಸಿ, ಮೋಕ್ಷಮಂ ಪಡೆದಡೆ, ವೀರಶೈವನೆಂದು ನಮೋ ಎಂಬುವೆನಯ್ಯಾ ಬರಿದೆ ವೀರಶೈವನೆಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
`ನಿರಾಭಾರೀತಿ ವಿಜ್ಞೇಯಃ ಸ ಏವ ಪರಮಶ್ಶಿವಃ | ವೀರಶೈವಕ್ರಮಃ ಪ್ರೋಕ್ತಃ ಪ್ರಾಯಶ್ಚಿತ್ತವಿವರ್ಜಿತಃ || ಎಂದು, ಇವು ಮೊದಲಾದ ಜಂಗಮಸ್ಥಲ ಪ್ರವರ್ತನೆ ಯುಳ್ಳಾತನು ನಿರಾಭಾರಿ ವೀರಶೈವನೆಂದರಿಯಲ್ತಕ್ಕತನು, ಆ ನಿರಾಭಾರಿ ವೀರಶೈವನೆ ಉತ್ಕøಷ್ಟವಾದ ಶಿವನು ತಾನೆ. ಈ ಪ್ರಕಾರದಿಂದ ನಿರೂಪಿಸಲ್ಪಟ್ಟ ವೀರಶೈವ ಕ್ರಮವು ಪ್ರಾಯಶ್ಚಿತ್ತವಿಲ್ಲದೆ ಇದಂಥದು ಎಂದು ಅರಿಯಲ್ತಕ್ಕುದಯ್ಯ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಕಿರುಕುಳ ದೈವದ ಹರಕೆ ಹಲ್ಲಣೆಯ ಮಾಡುವ ಕಿವಿಹರಕುಮುರಿಕೆಯ ಮನೆಯ ಅನ್ನ ನರಕದಾಯೆಡೆಗೆಂದು ಅರಿತು ಭುಂಜಿಸದೆ ನಿರುತ ವೀರಶೈವ ಭಕ್ತರನು ಬೆರೆತು ಬೆರೆತು ಬಾಳುವರು ದೇವರ್ಕಚಂದ್ರನುಳ್ಳನಕ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಗುರುಲಿಂಗ ಪ್ರಸಾದವನು ಸೇವಿಸುವಲ್ಲಿ ಏಕರತಿಯಾಗಿರಬೇಕು. ಇಷ್ಟಲಿಂಗ ಪ್ರಸಾದವನು ಸೇವಿಸುವಲ್ಲಿ ಏಕರತಿಯಾಗಿರಬೇಕು. ಜಂಗಮಲಿಂಗ ಪ್ರಸಾದವನು ಸೇವಿಸುವಲ್ಲಿ ಏಕರತಿಯಾಗಿರಬೇಕು. ಗುರು ಲಿಂಗ ಜಂಗಮದ ಈ ತ್ರಿವಿಧಪ್ರಸಾದವ ಸೇವಿಸುವಲ್ಲಿ ಏಕರತಿಯಾಗಿರಬೇಕು. ಅಂತಲ್ಲದೆ, ಅನ್ಯಲಿಂಗ ಪ್ರಸಾದವ ಕೊಳಲಾಗದು. ಅದೇನು ಕಾರಣವೆಂದಡೆ: ವೀರಶೈವ ತನ್ನ ಇಷ್ಟಲಿಂಗಕ್ಕೆ ಕೊಟ್ಟು ಕೊಂಬ ಕ್ರಿಯೆಗೆ ಬಾರದಾಗಿ. ಭಕ್ತಾಂಗಕೋಟಿಗಳಲ್ಲಿ ಬೇರೆ ಬೇರೆ ಲಿಂಗ ತೋರಿತ್ತೆಂದಡೆ ಅದು ಬೇರಾಗಬಲ್ಲುದೆ? ಹಲವು ಘಟ ಜಲಗಳಲ್ಲಿ ಚಂದ್ರನೊಬ್ಬ ತೋರಿದಂತೆ ಇಂತೀ ಪರಿಯಲ್ಲಿ ಎಸೆವುದು. ಬಹುಲಿಂಗಭಾವಂಗಳೆಂದಡೆ ಬೇರಾಗಬಲ್ಲುದೆ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಅಂಗ ಹಲವಾದಡೇನು ಅಲ್ಲಿ ತೋರುವುದೊಂದೇ ವಸ್ತು.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗನಿಷೆ*ಯುಳ್ಳ ವೀರಶೈವ ಮಹೇಶ್ವರರು ಸಕಲಪದಾರ್ಥವ ಲಿಂಗಕ್ಕೆ ಕೊಡದೆ, ಎನ್ನಂಗಕ್ಕೆ ಕೊಂಡಡೆ ವ್ರತಕ್ಕೆ ಭಂಗವೆಂದೆಂಬಿರಯ್ಯಾ ಉದಯಕಾಲದಲ್ಲಿ ಶೌಚಾಚಮನವ ಮಾಡಿ ಅಗ್ಗಣಿಯ ಬಳಸುವಿರಿ, ಆವಾಗ ಅವ ಲಿಂಗಕ್ಕೆ ಕೊಡುವಿರಿ. ಆ ಮೇಲೆ ಹಳ್ಳ ಕೊಳ್ಳ ಕೆರೆ ಬಾವಿ ನದಿಗಳಿಗೆ ಹೋಗಿ, ಮೃತ್ತಿಕಾದಿಂದ ಹಸ್ತಪಾದಕ್ಕೆ ಮೂರು ವೇಳೆ ಪೂಸಿ ಮೂರು ವೇಳೆ ತೊಳೆವಿರಿ. ಆವಾಗ ಅವ ಲಿಂಗಕ್ಕೆ ಕೊಡುವಿರಿ. ಆ ಮೇಲೆ ಶೌಚಕ್ಕೆ ಒಯ್ದ ಪಾತ್ರೆಯ ಮೃತ್ತಿಕಾದಿಂದ ತೊಳೆದು, ತಾ ಉಟ್ಟು ತೊಟ್ಟ ಪಾವಡಪಂಕಿಗಳ ನೀರಿನಲ್ಲಿ ಸೆಳೆದು ಗಾಳಿ ಬಿಸಲಾಗ ಹಾಕುವಿರಿ. ಆವಾಗ ಅವ ಲಿಂಗಕ್ಕೆ ಕೊಡುವಿರಿ. ಇಂತೀ ಎಲ್ಲವನು ಶುಚಿ ಮಾಡಿ ಜ್ಯಾಲಿ ಬೊಬ್ಬಲಿ ಉತ್ರಾಣಿಕಡ್ಡಿ ಮೊದಲಾದ ಕಡ್ಡಿಗಳ ತಂದು ಆವಾಗ ತಮ್ಮ ಅಂಗದ ಮೇಲಣ ಲಿಂಗವ ತೆಗೆದು ಅಂಗೈಯಲ್ಲಿ ಪಿಡಿದು, ಆ ಲಿಂಗಕ್ಕೆ ಮಜ್ಜನ ಮಾಡಿ, ಮರಳಿ ತಾ ಮುಖಮಜ್ಜನವ ಮಾಡಿ, ಆ ಮೇಲೆ ತಮ್ಮ ಅಂಗೈಯೊಳಗಿನ ಇಷ್ಟಲಿಂಗಕ್ಕೆ ಆ ಕಡ್ಡಿಯ ತೋರಿ, ತೋರಿದಂಥ ಧಾವನೆಯ ಮಾಡುವರು. ಲಿಂಗದ ಗೊತ್ತು ತಮಗಿ¯್ಲ ; ತಮ್ಮ ಅಂಗದ ಗೊತ್ತು ಲಿಂಗಕ್ಕಿಲ್ಲ . ಇಂತಪ್ಪ ಭಿನ್ನವಿಚಾರವನುಳ್ಳ ಮಂಗಮನುಜರಿಗೆ ಲಿಂಗನೈಷೆ*ಯುಳ್ಳ ವೀರಮಹೇಶ್ವರರೆಂದಡೆ ನಿಮ್ಮ ಶಿವಶರಣರು ಮುಖವೆತ್ತಿ ನೋಡರು. ಮನದೆರೆದು ಮಾತನಾಡರು, ತಮ್ಮೊಳಗೆ ತಾವೇ ಮುಗುಳುನಗೆಯ ನಕ್ಕು ಸುಮ್ಮನಿರುವರು ನೋಡಾ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕೈವಲ್ಯ ವೈಕುಂಠ ಮೋಕ್ಷಗಾಮಿನಿಗಳಪ್ಪ ತೆರನ ತಿಳಿವುದಕ್ಕೆ ಶೈವ ವೈಷ್ಣವ ಅಧ್ಯಾತ್ಮ ತ್ರಿವಿಧಕರ್ಮಂಗಳಲ್ಲಿ ಷಡ್ದರ್ಶನ ಸಂಪದವಾಯಿತ್ತು. ಈ ಭೇದ ವಿಭೇದವಾದಲ್ಲಿ ಶಕ್ತಿರೂಪು ವೈಷ್ಣವ ಅಸ್ತಿಭೇದ ಶಿವಾಧಿಕ್ಯ, ಉಭಯಚೇತನ ವಸ್ತುವಾಗಿ ಘಟ ಬುಡಂಗಳಲ್ಲಿ ಚರಸ್ಥಾವರಂಗಳಲ್ಲಿ ಖಲ್ವಿದಂ ಬ್ರಹ್ಮ ವಸ್ತುಮೂರ್ತಿ ಅಳಿವು ಉಳುಮೆಗೆ ತೆರಪಿಲ್ಲದ ಸಂಗ ವೀರಶೈವ. ವಿ ಎಂಬ ಯುಕ್ತಿ, ರ ಎಂಬ ರಜಸ್ಸು, ವ ಎಂಬ ಬಿಂದುವಿನ ಶಾಖೆ ನಿಂದಲ್ಲಿ ಲೀಯಲ್ಪಟ್ಟುದು ಕೂಟಸ್ಥ ಗೋಳಕಾಕಾರ. ಅದು ಪಂಚಾಕ್ಷರೀ ಪ್ರಣಮ, ಷಡಕ್ಷರದ ಸದನ. ಏಕಾಕ್ಷರದ ಲೇಖನವಳಿದ ಅಲೇಖ. ಅಯಿವತ್ತೆರಡನೆಯ ಸರಹರಿದ ಸಂಬಂಧ. ಇದು ಸ್ವಯ ಚರ ಪರದ ಸುಮುದ್ರೆ. ಶ್ರುತಿಸ್ಮೃತಿತತ್ವದ ಶೋಧನೆ. ಆ ಗುಣ ಪ್ರಸನ್ನವಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದ ಲೀಲಾಭಾವ.
--------------
ಪ್ರಸಾದಿ ಭೋಗಣ್ಣ
ಪತ್ರೆಯ ತಿಂದಾಡು ಮುಕ್ತವಾದುದೆಂಬುದ ಬಲ್ಲಡೆ ಹೇಳಿರಯ್ಯಾ. ಲಿಂಗವ ಪೂಜಿಸಿದ ವರ್ಣಿಕ ಲಿಂಗವಾದನೆಂಬುದ ಬಲ್ಲಡೆ ಹೇಳಿರಯ್ಯಾ. ಜಂಗಮವ ಸಂತೃಪ್ತಿ ಬಡಿಸಿದ ಭಕ್ತ ಭವವಿರಹಿತನಾದುದ ಬಲ್ಲಡೆ ಹೇಳಿರಯ್ಯಾ. ಇವೆಲ್ಲ ಚತುರ್ವಿಧ ಪದಕ್ಕೆ ಒಳಗು! ತನ್ನ ತಾ ತಿಳಿದ ವೀರಶೈವ ಭವಕ್ಕೆ ಬಂದನೆಂಬ ದ್ವಿರುಕ್ತಿಯನು ಬಲ್ಲಡೆ ಹೇಳಿರಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ ಸಾಕ್ಷಿಯಾಗಿ.
--------------
ಸಿದ್ಧರಾಮೇಶ್ವರ
ಶೈವವಾರು, ವೀರಶೈವ ಮೂರು, ಗುರುಸ್ಥಲವೈದು, ಆಚಾರ್ಯನಂಗ ನಾಲ್ಕು, ಆಚಾರಕ್ಕೆ ಅಂಗವಾರು. ಆತ್ಮಂಗೆ ಅರಿವು ಮೂರು. ಮತ್ತಿವರೊಳಗಾದ ಷಡ್ದರುಶನಭೇದ. ಆಚರಣೆ ಆಶ್ರಯಂಗಳು ವಿಶ್ವತೋಮುಖವಾಗಿಹವು. ಚೀರದ ಬಾಯಿದಾರದಂತೆ ಕಟ್ಟುವುದು ಒಂದೆ ಭೇದ, ಬಿಡುವುದು ಒಂದೆ ಭೇದ. ಇಂತೀ ಸ್ಥಳಕುಳಂಗಳಲ್ಲಿ ಭೇದಂಗಳನರಿವುದು ಆಚಾರ್ಯನಿರವು. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗ ವಿಭೇದವಾದಭೇದ.
--------------
ಪ್ರಸಾದಿ ಭೋಗಣ್ಣ
ಇನ್ನಷ್ಟು ... -->