ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಚ್ಚಬರಿಯ ಬಯಲೊಳಗೊಂದು ಅಚ್ಚ ಅಂಕುರ ಹುಟ್ಟಿ ಅಣುಚಕ್ರವೆನಿಸಿತ್ತು. ಆ ಅಣುಚಕ್ರದಿಂದಾಯಿತ್ತು ಪಶ್ಚಿಮಚಕ್ರ. ಆ ಪಶ್ಚಿಮಚಕ್ರದಿಂದಾಯಿತ್ತು ಶಿಖಾಚಕ್ರ. ಆ ಶಿಖಾಚಕ್ರದಿಂದಾಯಿತ್ತು ಬ್ರಹ್ಮಚಕ್ರ. ಆ ಬ್ರಹ್ಮಚಕ್ರದಿಂದಾಯಿತ್ತು ಆಜ್ಞಾಚಕ್ರ. ಆ ಆಜ್ಞಾಚಕ್ರದಿಂದಾಯಿತ್ತು ವಿಶುದ್ಧಿಚಕ್ರ. ಆ ವಿಶುದ್ಧಿಚಕ್ರದಿಂದಾಯಿತ್ತು ಅನಾಹತಚಕ್ರ. ಆ ಅನಾಹತಚಕ್ರದಿಂದಾಯಿತ್ತು ಮಣಿಪೂರಕಚಕ್ರ. ಆ ಮಣಿಪೂರಕಚಕ್ರದಿಂದಾಯಿತ್ತು ಸ್ವಾದ್ಥಿಷ್ಠಾನಚಕ್ರ. ಆ ಸ್ವಾದ್ಥಿಷ್ಠಾನಚಕ್ರದಿಂದಾಯಿತ್ತು ಆಧಾರಚಕ್ರ. ಆ ಆಧಾರಚಕ್ರಕ್ಕೆ ಚತುರ್ದಳ. ಆ ಚತುರ್ದಳದಲ್ಲಿ ಚತುರಕ್ಷರಂಗಳು. ಆ ಚತುರಕ್ಷರಂಗಳ ಮಧ್ಯ ಬೀಜಾಕ್ಷರವೇ ನಕಾರಪ್ರಣವ. ಆ ನಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಆಚಾರಲಿಂಗ. ಅದರಿಂದ ಮೇಲೆ ಸ್ವಾದ್ಥಿಷ್ಠಾನಚಕ್ರವಿರ್ಪುದು. ಆ ಚಕ್ರಕ್ಕೆ ಷಡುದಳ. ಆ ಷಡುದಳಂಗಳಲ್ಲಿ ಷಡಕ್ಷರಂಗಳು. ಆ ಷಡಕ್ಷರಂಗಳ ಮಧ್ಯ ಬೀಜಾಕ್ಷರವೇ ಮಕಾರಪ್ರಣವ. ಆ ಮಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಗುರುಲಿಂಗ. ಅದರಿಂದ ಮೇಲೆ ಮಣಿಪೂರಕಚಕ್ರವಿರ್ಪುದು. ಆ ಚಕ್ರಕ್ಕೆ ದಶದಳ. ಆ ದಶದಳಂಗಳಲ್ಲಿ ದಶಾಕ್ಷರಂಗಳು. ಆ ದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶಿಕಾರಪ್ರಣವ. ಆ ಶಿಕಾರ ಪ್ರಣವ ಪೀಠದ ಮೇಲೆ ಬೆಳಗುತಿರ್ಪುದು ಶಿವಲಿಂಗ. ಅದರಿಂದ ಮೇಲೆ ಅನಾಹತಚಕ್ರವಿರ್ಪುದು. ಆ ಚಕ್ರಕ್ಕೆ ದ್ವಾದಶದಳ. ಆ ದ್ವಾದಶದಳಂಗಳಲ್ಲಿ ದ್ವಾದಶಾಕ್ಷರಂಗಳು. ಆ ದ್ವಾದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ವಕಾರಪ್ರಣವ. ಆ ವಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಜಂಗಮಲಿಂಗ. ಅದರಿಂದ ಮೇಲೆ ವಿಶುದ್ಧಿಚಕ್ರವಿರ್ಪುದು. ಆ ಚಕ್ರಕ್ಕೆ ಷೋಡಶದಳ. ಆ ಷೋಡಶದಳಂಗಳಲ್ಲಿ ಷೋಡಶಾಕ್ಷರಂಗಳು. ಆ ಷೋಡಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಯಕಾರಪ್ರಣವ. ಆ ಯಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಪ್ರಸಾದಲಿಂಗ. ಅದರಿಂದ ಮೇಲೆ ಆಜ್ಞಾಚಕ್ರವಿರ್ಪುದು. ಆ ಚಕ್ರಕ್ಕೆ ದ್ವಿದಳ. ಆ ದ್ವಿದಳಂಗಳಲ್ಲಿ ದ್ವಯಾಕ್ಷರಂಗಳು. ಆ ದ್ವಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಒಂಕಾರಪ್ರಣವ. ಆ ಓಂಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಮಹಾಲಿಂಗ. ಅದರಿಂದ ಮೇಲೆ ಬ್ರಹ್ಮಚಕ್ರವಿರ್ಪುದು. ಆ ಚಕ್ರಕ್ಕೆ ಸಹಸ್ರದಳ. ಆ ಸಹಸ್ರದಳಂಗಳಲ್ಲಿ ಸಹಸ್ರಾಕ್ಷರಂಗಳು. ಆ ಸಹಸ್ರಾಕ್ಷರಂಗಳ ಮಧ್ಯ ಬೀಜಾಕ್ಷರವೇ ನಿಷ್ಕಲಪ್ರಣವ. ಆ ನಿಷ್ಕಲಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿಷ್ಕಲಲಿಂಗ. ಅದರಿಂದ ಮೇಲೆ ಶಿಖಾಚಕ್ರವಿರ್ಪುದು. ಆ ಚಕ್ರಕ್ಕೆ ತ್ರಿದಳ. ಆ ತ್ರಿದಳಂಗಳಲ್ಲಿ ತ್ರಯಾಕ್ಷರಂಗಳು. ಆ ತ್ರಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶೂನ್ಯಪ್ರಣವ. ಆ ಶೂನ್ಯಪ್ರಣವಪೀಠದ ಮೇಲೆ ಬೆಳಗುತಿರ್ಪುದು ಶೂನ್ಯಲಿಂಗ. ಅದರಿಂದ ಮೇಲೆ ಪಶ್ಚಿಮಚಕ್ರವಿರ್ಪುದು. ಆ ಚಕ್ರಕ್ಕೆ ಏಕದಳ. ಆ ಏಕದಳದಲ್ಲಿ ಸರ್ವರಂಜನೆಯನೊಳಕೊಂಡು ವಾಚಾತೀತವೆನಿಸುವ ನಿರಂಜನಪ್ರಣವ. ಆ ನಿರಂಜನ ಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿರಂಜನಲಿಂಗ. ಇಂತೀ ತರುವಾಯದಿಂದೆ ಆಧಾರ ಸ್ವಾದ್ಥಿಷ್ಠಾನದಲ್ಲಿ ಲಯ, ಆ ಸ್ವಾದ್ಥಿಷ್ಠಾನ ಮಣಿಪೂರಕದಲ್ಲಿ ಲಯ. ಆ ಮಣಿಪೂರಕ ಅನಾಹತದಲ್ಲಿ ಲಯ. ಆ ಅನಾಹತ ವಿಶುದ್ಧಿಯಲ್ಲಿ ಲಯ. ಆ ವಿಶುದ್ಧಿ ಆಜ್ಞೆಯಲ್ಲಿ ಲಯ. ಆ ಆಜ್ಞೆ ಬ್ರಹ್ಮಚಕ್ರದಲ್ಲಿ ಲಯ. ಆ ಬ್ರಹ್ಮಚಕ್ರ ಶಿಖಾಚಕ್ರದಲ್ಲಿ ಲಯ. ಆ ಶಿಖಾಚಕ್ರ ಪಶ್ಚಿಮಚಕ್ರದಲ್ಲಿ ಲಯ. ಆ ಪಶ್ಚಿಮಚಕ್ರ ಅಣುಚಕ್ರದಲ್ಲಿ ಲಯ. ಆ ಅಣುಚಕ್ರ ನಿರವಯಲಲ್ಲಿ ಲಯ. ಆ ನಿರವಯಲು ನಿಜವ ಕೂಡಿ ಸಹಜವಾದಲ್ಲಿ ಅಖಂಡೇಶ್ವರನೆಂಬ ಶಬ್ದ ಮುಗ್ಧವಾಯಿತ್ತು.
--------------
ಷಣ್ಮುಖಸ್ವಾಮಿ
ಇಂತೆಂಬ ಭಕ್ತ ಜಂಗಮಸ್ಥಲದ ಆದಿ ಅನಾದಿಯನರಿದು, ಮಾಯಾಭೋಗ ಮರೆದು, ಜಂಗಮಾರಾಧನೆಯಂ ಮಾಡಿ, ಘನಪಾದತೀರ್ಥವ ಪಡಕೊಂಬುವ ಶಿವಶರಣನು ಅನಿಮಿಷಾವಲೋಕನ ಪೂರ್ಣದೃಷ್ಟಿಯಿಂದ ಚಿತ್ಸೂರ್ಯ ಜ್ಯೋತಿರ್ಮಂಡಲಸಂಬಂಧವಾದ ಬಲದಂಗುಷ*ದ ಮೇಲೆ ಚತುರಂಗುಲಿಪ್ರಮಾಣದಿಂದ ಬಿಂದು ಬಿಂದುಗಳದುರಿದಂತೆ ನೀಡುವಾಗ, ಆ ಸ್ಥಾನದಲ್ಲಿ ತನ್ನ ದೀಕ್ಷಾಗುರು ಇಷ್ಟಲಿಂಗಮೂರ್ತಿಯ ಧ್ಯಾನಿಸುವುದು. ಅಲ್ಲಿ ನಾದಬಿಂದುಕಳೆ ಚಿನ್ನಾದಬಿಂದುಕಳೆಗಳ ದೀರ್ಘಬಿಂದುಗಳು ಕೂಡಿದಲ್ಲಿ ಮೂಲಷಡಕ್ಷರವೆನಿಸುವುದು. ಆ ಷಡಕ್ಷರಂಗಳ ಆರುವೇಳೆ ಘನಮನಮಂತ್ರವಾಗಿ ಅಲ್ಲಿಂದ ಚಿಚ್ಚಂದ್ರ ಅಖಂಡ ಜ್ಯೋತಿರ್ಮಂಡಲಸಂಬಂಧವಾದ ಎಡದಂಗುಷ*ದಮೇಲೆ ಮೊದಲಂತೆ ನೀಡುವಾಗ, ಆ ಸ್ಥಾನದಲ್ಲಿ ತನ್ನ ಶಿಕ್ಷಾಗುರು ಪ್ರಾಣಲಿಂಗಮೂರ್ತಿಯ ಧ್ಯಾನಿಸುವುದು. ಅಲ್ಲಿ ಸತ್ತುಚಿತ್ತಾನಂದನಿತ್ಯಪರಿಪೂರ್ಣವೆಂಬ ಪಂಚಾಕ್ಷರದೊಳು ದೀರ್ಘಬಿಂದು ಕೂಡಲಾಗಿ ಪರಮಪಂಚಾಕ್ಷರವೆನಿಸುವುದು. ಆ ಪರಮಪಂಚಾಕ್ಷರವು ಐದು ವೇಳೆ ಮನಮಂತ್ರಧ್ಯಾನವಾಗಿ ಅಲ್ಲಿಂದಚಿದಗ್ನಿ ಅಖಂಡಮಹಾಪರಿಪೂರ್ಣಜ್ಯೋತಿರ್ಮಂಡಲಸಂಬಂಧವಾದ ಉಭಯಾಂಗುಷ*ಮಧ್ಯದಲ್ಲಿ ನೀಡುವಂತೆ ನೀಡುವಾಗ್ಗೆ , ಆ ಸ್ಥಾನದಲ್ಲಿ ತನ್ನ ಮೋಕ್ಷಗುರು ಅನಾದಿಭಾವಲಿಂಗಮೂರ್ತಿಯ ಧ್ಯಾನಿಸುವುದು. ಅವಿರಳಮೂರ್ತಿ ಪರಾತ್ಪರ ಜ್ಯೋತಿರ್ಮಯ ಅಖಂಡಜ್ಯೋತಿರ್ಮಯ ಅಖಂಡ ಮಹಾಜ್ಯೋತಿರ್ಮಯ ನಿತ್ಯತೃಪ್ತ ನಿಃಕಳಂಕ ನಿಶ್ಶೂನ್ಯ ನಿರಾತಂಕವೆಂಬ ನವಮಾಕ್ಷರದೊಳಗೆ ದೀರ್ಘಬಿಂದು ಕೂಡಲಾಗಿ, ಅನಾದಿಮೂಲದೊಡೆಯ ನವಪ್ರಣಮಮಂತ್ರವೆನಿಸುವುದು. ಆ ಪ್ರಣಮಂಗಳಂ ಒಂದೆವೇಳೆ ಪರಿಪೂರ್ಣ ನಿಜದೃಷ್ಟಿಯಿಂದ ಉನ್ಮನಘನಮಂತ್ರವೆ ಧ್ಯಾನವಾಗಿ ಅಲ್ಲಿಂದ ಮಿಳ್ಳಿಯ ಮುಚ್ಚಿಟ್ಟು ದ್ರವವನಾರಿಸಿ, ನಿರವಯತೀರ್ಥವ ನಿರವಯಲಿಂಗಜಂಗಮಕ್ಕೆ ಸ್ಪರಿಶನತೃಪ್ತಿಯ ಸಮರ್ಪಿಸಿದ ಪರಿಣಾಮತೃಪ್ತರೆ ನಿರವಯಪ್ರಭು ಮಹಾಂತರೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ತನ್ನ ವಾಮಕರದಂಗುಲಮಧ್ಯದಲ್ಲಿ ಷಡಕ್ಷರಂಗಳ ಲಿಖಿತಂಗೈದು, ಸೂಕ್ಷ್ಮದಿಂದರ್ಚಿಸಿ, ತನ್ಮ ಹೃನ್ಮಂದಿರಾಲಯದಲ್ಲಿ ನೆಲೆಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗಮಂ ನಿರೀಕ್ಷಿಸಿ, ಆ ಪರಮಜಂಗಮಲಿಂಗದೇವನ ಚರಣಾಂಗುಷ*ಗಳ ತನ್ನ ವಾಮಕರಸ್ಥಲದಲ್ಲಿ ಸತ್ತುಚಿತ್ತಾನಂದನಿತ್ಯಪರಿಪೂರ್ಣ ಅವಿರಳಪರಂಜ್ಯೋತಿಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ, ಪರಮಾನಂದಾಬ್ಧಿಕರಣಜಲದಿಂ ಗಂಧಾಕ್ಷತೆ ಪುಷ್ಪ ಪತ್ರಿ ಮೊದಲಾದ ಉಪಚಾರ ಮಾಡಬೇಕಾದರೆ ಲಿಂಗಕ್ಕೆ ತೋರಿ ತೋರಿ ಪಾದಕ್ಕೆ ಅರ್ಪಿಸಲಾಗದು, ಅದೇನುಕಾರಣವೆಂದರೆ : ಆ ಪಾದವೆ ನಿರಂಜನಜಂಗಮವಾದ ಕಾರಣ, ಆ ಭಕ್ತನು ಜಂಗಮಪ್ರಸಾದವ ಶೂನ್ಯಲಿಂಗದ ಇಷ್ಟಬ್ರಹ್ಮಮೂರ್ತಿಗೆ ಸಮರ್ಪಿಸಿ, ಆ ಇಷ್ಟಬ್ರಹ್ಮದಿಂದುಳುಮೆಯಾದ ಲಿಂಗಪ್ರಸಾದವನ್ನು ನಿಃಕಳಂಕಗುರುದೇವನಾದ ಪ್ರಾಣಕಳಾಚೈತನ್ಯ ಅನಿಮಿಷಾರಾಧ್ಯ ಶ್ರೀಗುರುಮೂರ್ತಿಗೆ ಸಮರ್ಪಿಸಿ, ಆ ನಿರಂಜನ ಜಂಗಮಲಿಂಗ ಆ ನಿಶ್ಶೂನ್ಯ ಜಂಗಮಲಿಂಗದಿಂದಾದುಳುಮೆಯಾದ ಪರಮಾನಂದಪ್ರಸಾದವ, ಆ ಶೂನ್ಯಲಿಂಗವ ಕರಸ್ಥಲದಲ್ಲಿ , ಆ ನಿರಂಜನಜಂಗಮವ ಕಂಗಳಾಲಯದಲ್ಲಿ, ಮಿಶ್ರಮಿಶ್ರಂಗಳೊಡನೆ ಸಂಬಂಧಾಚರಣೆಗಳಿಂದ, ಚಿದ್ರೂಪ ಚಿದ್ರುಚಿಗಳ ಸಂತೃಪ್ತಿಗಳೊಳ್ ಲೋಲುಪ್ತನಾದ ನಿಃಕಲಬ್ರಹ್ಮ ಪರಮಗುರುಲಿಂಗಸ್ವಾಮಿಗೆ ಸಮರ್ಪಿಸಿ, ಆ ನಿರಂಜನ ನಿಶ್ಶೂನ್ಯ ನಿಃಕಳಂಕ ಗುರುಲಿಂಗಜಂಗಮದ ನಿಜಚಿನ್ಮಯ ಚಿತ್ಕಲಾಪ್ರಸಾದವೆ ಒಬ್ಬುಳಿಯಾಗಿ ಶರಣಸತಿ ಲಿಂಗಪತಿಯೆಂಬ ಉಭಯವೇಕಸಮರಸದಿಂದ ಪರಿಣಾಮಕ್ಕೆ ಪರಿಪೂರ್ಣಪ್ರಸಾದಕ್ಕೆ ಪರಿಪೂರ್ಣಪ್ರಸಾದವ ಜಂಗಮಲಿಂಗ ಲಿಂಗಶರಣನೆಂಬ ಸ್ವಾನುಭಾವಸೂತ್ರವಿಡಿದು, ತನ್ನ ತಾನರ್ಚಿಸಿ, ತ್ರಿವಿಧಲಿಂಗದೊಳಗೆ ನವಲಿಂಗವ ಹುದುಗಿಸಿ, ಇದೆ ನಿಶ್ಶೂನ್ಯ ಚಿದ್ರೂಪ ಘನಲಿಂಗಮೂರ್ತಿ ಪ್ರಾಣಲಿಂಗಾರ್ಚನೆಯೆಂದು ಪರಿಪೂರ್ಣಾನುಭಾವಭರಿತವಾಗಿ, ಸುಟ್ಟ ಸರವೆಯಂತೆ ಜೀವನವರ್ತನೆಗಳಿಲ್ಲದೆ ಮಂಗಳಾರತಿಗಳೆತ್ತಿ , ಘನಸಮ್ಮೇಳವೆಲ್ಲ ಸ್ತೋತ್ರಗಳಿಂದ ನಾದ ಘೋಷಂಗೈದು ತ್ರಿವಿಧಜಪಮಂ ಮಾಡಿ, ಪುಷ್ಪಾಂಜಳಿಗಳಿಂದ ಪ್ರದಕ್ಷಣದೊಳ್ ನಮಸ್ಕಾರವಂ ಮಾಡಿ ಚಿದ್ಬೆಳಗಿನೊಳ್ ಮಹಾಬೆಳಗಗೂಡಿ ಎರಡಳಿದೊಂದಾಗಿರಬಲ್ಲರೆ ನಿರವಯಪ್ರಭು ಮಹಾಂತರು ತಾವೇ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಷಟ್‍ಸ್ಥಲವೆಂಬ ಷಣ್ಮುಖಮುದ್ರೆಯೊಳು, ನವವಿಧಭಕ್ತಿ ಎಂಬ ನವನಾದ ಕೇಳದವ ಶರಣನೆ ಅಯ್ಯಾ? ಷಟ್‍ಸ್ಥಲವೆಂಬ ಷಣ್ಮುಖಮುದ್ರೆಯೊಳು, ಷಡಕ್ಷರವೆಂಬ ಮಂತ್ರವ ಜಪಿಸಿ, ಷಡ್ವಿಧಂಗವ ಪೂಜಿಸದವ ಶರಣನೆ ಅಯ್ಯಾ? ಷಟ್‍ಸ್ಥಲವೆಂಬ ಷಣ್ಮುಖಮುದ್ರೆಯೊಳು, ಬೀಜಾಕ್ಷರತ್ರಯಂಗಳನೋ ಷಡಕ್ಷರಂಗಳ ಸಾಧಿಸಿ, ಷಣ್ಮುಖಶಿವನಾಗದವ ನಿಮ್ಮ ಶರಣನೆ ಅಯ್ಯಾ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
-->